ಗುರುಶಿಷ್ಯ ಸಂಬಂಧವೆಂದು ನುಡಿಯುತಿರ್ಪರೆಲ್ಲರು;
ಗುರುಶಿಷ್ಯ ಸಂಬಂಧವನಾರೂ ಅರಿಯರಲ್ಲ !
ಗುರುಶಿಷ್ಯ ಸಂಬಂಧವೆಂತೆಂದೊಡೆ ಹೇಳಿಹೆವು ಕೇಳಿರೋ
ಸದ್ಭಕ್ತ ಶರಣಜನಂಗಳೆಲ್ಲರು.
ಶ್ರೀಗುರು ಶಿಷ್ಯಂಗೆ ಉಪದೇಶವ ಮಾಡುವ ಕಾಲದಲ್ಲಿ
ಆ ಶಿಷ್ಯನ ಸ್ಥೂಲತನು ಸೂಕ್ಷ್ಮತನು ಕಾರಣತನುವೆಂಬ
ತನುತ್ರಯಂಗಳಲ್ಲಿ ಮುಸುಕಿದ
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ
ಮಲತ್ರಯಂಗಳ ಕಳೆದು,
ಮಾಯಾಪ್ರಕೃತಿಕಾಯದ ಪೂರ್ವಾಶ್ರಯವನು
ಚಿದಗ್ನಿಯಿಂದೆ ಸುಟ್ಟು ಚಿತ್ಕಾಯವೆಂದೆನಿಸಿ,
ಆ ಚಿತ್ಕಾಯಸ್ವರೂಪವಾದ ಶಿಷ್ಯನ ಮಸ್ತಕದ ಮೇಲೆ
ಹಸ್ತವನಿರಿಸಿ ಮಥನವ ಮಾಡಿ,
ಶಿಷ್ಯನ ಭಾವದ ಘಟ್ಟಿಯನೆ ಕರದಲ್ಲಿ ಕೊಡುವುದು.
ಅದೆಂತೆಂದೊಡೆ :
``ಜ್ವಲತ್ಕಾಲಾನಲಾಭಾಸಾ ತಟಿತ್ಕೋಟಿ ಸಮಪ್ರಭಾ |
ತಚ್ಚೋಧ್ರ್ವಂತು ಶಿಖಾ ಸೂಕ್ಷ್ಮಾ ಚಿದ್ರೂಪಾ ಪರಮಾ ಕಳಾ ||
ಯಥಾಕಲಾಸ್ತಥಾಭಾವೋ ಯಥಾಭಾವಸ್ತಥಾ ಮನಃ |
ಯಥಾಮನಸ್ತಥಾ ದೃಷ್ಟಿಃ ಯಥಾದೃಷ್ಟಿಸ್ತಥಾ ಸ್ಥಲಂ ||
ಏವಂ ಭೇದಾಃ ಕಳಾದೇವಿ ಸದ್ಗುರುಶಿಷ್ಯಮಸ್ತಕೇ |
ಹಸ್ತಾಬ್ಜಮಥನಗ್ರಾಹ್ಯಂ ತಸ್ಯ ಭಾವಃ ಕರೋದಿತಃ ||
ಏತೇ ಗುರುಕರಾಜಾಜತಾಃ ಲಿಂಗಭಕ್ತಾ ವಿಭೇದತಃ |
ನಾದಬಿಂದುಕಳಾತೀತಂ ಗುರೂಣಾಂ ಲಿಂಗಮುದ್ಭವಂ ||''
-ಪರಮರಹಸ್ಯ
ಎಂಬ ಶಿವಾಗಮೋಕ್ತವಾಗಿ,
ಆ ಶಿಷ್ಯನ ಪಶ್ಚಿಮದಿಶೆಯಲ್ಲಿ ಬೆಳಗುತಿರ್ಪ
ನಿತ್ಯನಿರಂಜನ ಪರಮಕಳೆಯ ಧ್ಯಾನಿಸಿ ಭಾವಸ್ಥಲಕ್ಕೆ ತಂದು,
ಆ ಭಾವಸ್ಥಲದಿಂದೆ ಮನಸ್ಥಲಕ್ಕೆ ತಂದು,
ಆ ಮನಸ್ಥಲದಿಂದೆ ದೃಷ್ಟಿಸ್ಥಲಕ್ಕೆ ತಂದು,
ಆ ದೃಷ್ಟಿಸ್ಥಲದಿಂದೆ ಕರಸ್ಥಲಕ್ಕೆ ತಂದು,
ಸಾಕಾರಲಿಂಗಮೂರ್ತಿಯಲ್ಲಿ ತುಂಬಿ
ಇಷ್ಟಲಿಂಗವೆನಿಸಿ ಕರಸ್ಥಲದಲ್ಲಿ ಮೂರ್ತಿಗೊಳಿಸಿ
ಆ ಲಿಂಗಕ್ಕೆ ಜಂಗಮದ ಪಾದತೀರ್ಥ ಪ್ರಸಾದವನೆ
ಪ್ರಾಣಕಳೆಯೆಂದರ್ಪಿಸಿ,
ಮತ್ತಂ, ಆ ಇಷ್ಟಲಿಂಗವೆ
ಅನಿಷ್ಟಪಂಚಕಂಗಳೆಂಬ ಕತ್ತಲೆಯನೋಡಿಸುವುದಕ್ಕೆ
ಚಿತ್ಸೂರ್ಯನೆಂದು ನಂಬುಗೆಯನಿಂಬುಗೊಳಿಸಿ,
ಮತ್ತಮಾಲಿಂಗದಲ್ಲಿ
ವೃತ್ತ ಕಟಿ ವರ್ತುಳ ಗೋಮುಖ ನಾಳ ಗೋಳಕವೆಂಬ
ಆರು ಸ್ಥಾನಂಗಳ ತೋರಿ,
ಆ ಆರು ಸ್ಥಾನಂಗಳಲ್ಲಿ
ನಕಾರ ಮಕಾರ ಶಿಕಾರ ವಕಾರ ಯಕಾರ ಓಂಕಾರ
ಎಂಬ ಆರು ಪ್ರಣವಂಗಳನೆ ಬೋಧಿಸಿ,
ಆ ಆರು ಪ್ರಣವಂಗಳನೆ
ಆಚಾರಲಿಂಗ ಗುರುಲಿಂಗ ಶಿವಲಿಂಗ
ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ
ಎಂಬ ಆರು ಲಿಂಗಗಳೆಂದರುಹಿ,
ಆ ಆರು ಲಿಂಗಂಗಳಿಗೆ
ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯ
ಎಂಬ ಆರು ಇಂದ್ರಿಯಂಗಳನೆ ಆರು ಮುಖಗಳೆಂದು ತಿಳುಹಿ,
ಆ ಆರು ಮುಖಂಗಳಿಗೆ
ಗಂಧ ರುಚಿ ರೂಪು ಸ್ಪರ್ಶನ ಶಬ್ದ ತೃಪ್ತಿ
ಎಂಬ ಆರು ಪದಾರ್ಥಂಗಳನು
ಶ್ರದ್ಧೆ ನಿಷೆ* ಸಾವಧಾನ ಅನುಭಾವ ಆನಂದ ಸಮರಸ
ಎಂಬ ಆರು ಭಕ್ತಿಗಳಿಂದರ್ಪಿಸುವ
ಸಕೀಲದ ವಿವರವ ತೋರಬಲ್ಲಾತನೇ ಗುರು.
ಆ ಗುರುವಿನ ಕರುಣದಿಂದೆ ಪಡೆದ ಇಷ್ಟಲಿಂಗವನು
ಕರಸ್ಥಲ ಮನಸ್ಥಲ ಭಾವಸ್ಥಲಮಂಟಪದಲ್ಲಿ ಮೂರ್ತಿಗೊಳಿಸಿ,
ಸಗುಣಪೂಜೆ ನಿರ್ಗುಣಪೂಜೆ ಕೇವಲ ನಿರ್ಗುಣಪೂಜೆಯ ಮಾಡಿ,
ಆ ಲಿಂಗದ ಮಹಾಬೆಳಗಿನೊಳಗೆ ತನ್ನಂಗದ ಕಳೆಯನಡಗಿಸಿ,
ಉರಿ-ಕರ್ಪುರ ಸಂಯೋಗದಂತೆ
ಅವಿರಳ ಸಮರಸವಾಗಿರ್ಪಾತನೆ ಶಿಷ್ಯನು.
ಇಂತೀ ಅರುಹು ಆಚಾರಸನ್ನಿಹಿತ ಗುರುಶಿಷ್ಯರಿಬ್ಬರು
ಬಯಲು ಬಯಲ ಬೆರದಂತೆ
ನಿರವಯಲ ಪರಬ್ರಹ್ಮದಲ್ಲಿ ನಿಷ್ಪತ್ತಿಯನೈದಿರ್ಪರು ನೋಡಾ !
ಇಂತೀ ಅರುಹಿನ ವಿಚಾರವನರಿಯದೆ
ಮಾಡುವ ಮಾಟವೆಲ್ಲ ಅಜ್ಞಾನಗಡಣದೊಳಗು.
ಈ ಅಜ್ಞಾನಗುರುಶಿಷ್ಯರ ವಿಧಿಯೆಂತಾಯಿತ್ತೆಂದಡೆ,
ಹುಟ್ಟುಗುರುಡನ ಕೈಯ ಕೆಟ್ಟಗಣ್ಣವ ಹಿಡಿದು
ಬಟ್ಟೆಯ ಕಾಣದೆ ಕಮರಿಯ ಬಿದ್ದು ಸತ್ತಂತಾಯಿತ್ತು
ಕಾಣಾ ಅಖಂಡೇಶ್ವರಾ.