ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ. ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ. ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಂಗಸೋಂಕೆಂಬುದು ಅಧಮವು. ಉರಸೆಜ್ಜೆಯೆಂಬುದು ಎದೆಯ ಗೂಂಟ. ಕಕ್ಷೆಯೆಂಬುದು ಕವುಚಿನ ತವರುಮನೆ. ಅಮಳೋಕ್ಯವೆಂಬುದು ಬಾಯ ಬಗದಳ. ಮುಖಸೆಜ್ಜೆಯೆಂಬುದು ಪಾಂಡುರೋಗ. ಕರಸ್ಥಳವೆಂಬುದು ಮರವಡದ ಕುಳಿ. ಉತ್ತಮಾಂಗವೆಂಬುದು ಸಿಂಬಿಯ ಕಪ್ಪಡ. ಎಲ್ಲರಿಗೆಯೂ ಸೋಂಕಾಯಿತ್ತು ! ಈ ಹಸಿಯ ಗೂಂಟದಲ್ಲಿ ಕಟ್ಟಿ, ಒಣಗಿದ ಗೂಂಟದಲ್ಲಿ ಬಿಡುವ ಬಾಲಭಾಷೆಯ ಭಂಡರ ನುಡಿಯ ಕೇಳಲಾಗದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅನಲನಾರಣ್ಯದೊಳಗೆ ಎದ್ದಲ್ಲಿ; ದೂ(ಧು?)ರದೆಡೆಯಲಾರನೂ ಕಾಣೆವು, ಸಂಗ್ರಾಮಧೀರರೆಲ್ಲರೂ ನೆಲೆಗೆಟ್ಟರಾಗಿ ! ಮಾಯಾಮಂಜಿನ ಕೋಟೆಗೆ, ರಂಜನೆಯ ಕೊತ್ತಳ, ಅಂಜನೆಯ ಕಟ್ಟಳೆ. ಗುಹೇಶ್ವರನು ಶರಣ ಐಕ್ಯಸ್ಥಲವ ಮೆಟ್ಟಲೊಡನೆ, ಸರ್ವವೂ ಸಾಧ್ಯವಾಯಿತ್ತು.
--------------
ಅಲ್ಲಮಪ್ರಭುದೇವರು
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ '' ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ, ಎರಡಳಿದು ನಿಂದ, ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.
--------------
ಅಲ್ಲಮಪ್ರಭುದೇವರು
ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ ಭಕ್ತಿಯನೊಳಕೊಂಡು, ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ ನಾನು, ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ, ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.
--------------
ಅಲ್ಲಮಪ್ರಭುದೇವರು
ಅಯ್ಯ, ಮಣ್ಣಿಂಗೆ ಹೊಡೆದಾಡುವಾತನ ಗುರುವೆಂಬೆನೆ? ಆತ ಗುರುವಲ್ಲ. ಹೆಣ್ಣಿಂಗೆ ಹೊಡೆದಾಡುವಂತಾ [ಗೆ?]À ಲಿಂಗವೆಂಬೆನೆ ? ಅದು ಲಿಂಗವಲ್ಲ. ಹೊನ್ನಿಂಗೆ ಹೊಡೆದಾಡುವಾತನ ಜಂಗಮವೆಂಬೆನೆ ? ಆತ ಜಂಗಮವಲ್ಲ. ಈ ತ್ರಿವಿಧಮಲಕ್ಕೆ ಹೊಡೆದಾಡುವಾತನ ಶರಣನೆಂಬೆನೆ ? ಆತ ಶರಣನಲ್ಲ ನೋಡಾ. ಈ ವಿಚಾರವನರಿದು, ಮಲತ್ರಯಂಗಳ ಸರ್ವಾವಸ್ಥೆಯಲ್ಲಿ ಹೊದ್ದಲೀಯದೆ ಗೌರವ ಬುದ್ಧಿ ಲಿಂಗಲೀಯ ಜಂಗಮಾನುಭಾವ ಸರ್ವಾಚಾರಸಂಪತ್ತಿನಾಚರಣೆಯ ಶ್ರುತಿ_ಗುರು_ಸ್ವಾನುಭಾವದಿಂದರಿದು ಆಚರಿಸಿದಡೆ, ಗುಹೇಶ್ವರಲಿಂಗದಲ್ಲಿ ಪರಾತ್ಪರಗುರುಲಿಂಗಜಂಗಮಶರಣನೆಂಬೆ ನೋಡ ಜೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಯ್ಯ ! ಕಾರ್ಯನಲ್ಲ ಕಾರಣನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಭೇದಕನಲ್ಲ ಸಾಧಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪಾತಕನಲ್ಲ ಸೂತಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದ್ವೈತನಲ್ಲ ಅದ್ವೈತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕಾಟಕನಲ್ಲ ಕೀಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಎನ್ನವನಲ್ಲ ನಿನ್ನವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಸಂಕಲ್ಪನಲ್ಲ ವಿಕಲ್ಪನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಒಮ್ಮೆ ಆಚಾರದವನಲ್ಲ ಒಮ್ಮೆ ಅನಾಚಾರದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕುಂಟಣಿಯಲ್ಲ ನೆಂಟಣಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದುಶ್ಶೀಲನಲ್ಲ ದುರ್ಮಾರ್ಗಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಜಾತಿಯವನಲ್ಲ ಅಜಾತಿಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಂದು ಉಭಯವಳಿದು ಬೆಳಗುವ ಸಂಗನಬಸವಣ್ಣನ ಉನ್ಮನಾಗ್ರದಲಿ ಹೊಳೆವಾತ ತಾನೆ ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಗ್ನಿ ಮುಟ್ಟಿದುದುವೊ, ಆಕಾಶದಲದೆವೊ ಉದಕ ಮುಟ್ಟಿದುದುವೊ, ನಿರಾಳದಲದೆವೊ ಬ್ರಹ್ಮರಂಧ್ರದಲದೆವೊ_ಭ್ರಮಿಸದೆ ನೋಡಾ ! ಆವಂಗೆಯೂ ಅಸದಳ, ಆವಂಗೆಯೂ ಅರಿಯಬಾರದು! ಇದೇನು ಮಾಯೆ ಹೇಳಾ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಅರಿವಿನೊಳಗೊಂದು ಮರವೆಯದೆ, ಮರವೆಯೊಳಗೊಂದು ಅರಿವದೆ. ಅರಿವು ಮರವೆಯೆಂಬೆರಡೂ ಅಳಿದಡೆ ನಿರ್ಣಯವದೆ (ನಿರ್ವಯಲಿದೆ?). ತಾನೆಂಬಲ್ಲಿ ನಿಷ್ಪತಿಯಿದೆ_ಇದೇನು ಹೇಳಾ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ,. ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ. ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಅಂಗವಿಲ್ಲಾಗಿ ಅನ್ಯಸಂಗವಿಲ್ಲ, ಅನ್ಯಸಂಗವಿಲ್ಲಾಗಿ ಮತ್ತೊಂದ ವಿವರಿಸಲಿಲ್ಲ. ಮತ್ತೊಂದ ವಿವರಿಸಲಿಲ್ಲಾಗಿ ನಿಸ್ಸಂಗವಾಯಿತ್ತಯ್ಯಾ. ಗುಹೇಶ್ವರಾ ನಿಮ್ಮ ನಾಮವಿಂತುಟಯ್ಯಾ
--------------
ಅಲ್ಲಮಪ್ರಭುದೇವರು
ಅಧರ ತಾಗಿದ ರುಚಿಯ, ಉದರ ತಾಗಿದ ಸುಖವ, ಲಿಂಗಾರ್ಪಿತವ ಮಾಡಿದಡೆ ಕಿಲ್ಬಿಷ ನೋಡಿರೆ. ಓಗರ ಪ್ರಸಾದವಲ್ಲ; ಪ್ರಸಾದ ಅರ್ಪಿತವಲ್ಲ. ಇದನರಿದ ಶರಣಂಗೆ ಆಚಾರವಿಲ್ಲ, ಆಚಾರವಿಲ್ಲದ ಶರಣಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ನಿಲವು; ಶಿವಸಂಪತ್ತಿನಲಾದ ಉದಯ, ವಿಪರೀತ ಸುಳುಹು ! ಪ್ರಕಟಸಂಸಾರದ ಬಳಕೆಯ ಹೊಡಕಟ್ಟಿ ಹಾಯ್ದು ನಿಬ್ಬೆರಗು ಎಸೆವುದು ಅರಿವಿನ (ಎರವಿನ?) ಘಟದಲ್ಲಿ ! ಅರ್ಪಿಸಿದ ಪ್ರಸಾದವನು ಭೇದದಿಂದ ರುಚಿಸುವನಲ್ಲ ಕೇಳಿರಯ್ಯಾ. ದಿಟವ ಬಿಟ್ಟು ಸಟೆಯಲ್ಲಿ ನಡೆಯ ನೋಡಾ. ಇಲ್ಲದ ಲಿಂಗವನುಂಟುಮಾಡಿ ಪೂಜಿಸುವ, ಬರಿಯ ಬಣ್ಣಕರೆಲ್ಲ ನೀವು ಕೇಳಿರೆ. ನೀವು ಪೂಜಕರಪ್ಪಿರಲ್ಲದೆ, ಗುಹೇಶ್ವರಲಿಂಗವಿಲ್ಲೆಂಬ ಶಬುದ ಸತ್ತು ಹುಟ್ಟುವರಿಗೆಲ್ಲಿಯದೊ ?
--------------
ಅಲ್ಲಮಪ್ರಭುದೇವರು
ಅರಿವಿನೊಳಗಣ ಮರಹು, ಮರಹಿನೊಳಗಣ ಅರಿವು ! ಅರಿದು ಮರೆದು ನೆನೆದಡೆ ನೆಲೆಗೊಳ್ಳದು. ಅರಿವರಾರಯ್ಯ ಆಗಮ್ಯಲಿಂಗವನು ? ಕೊಟ್ಟು ಕೊಂಡಾಡುವ ವ್ಯವಹಾರಕ್ಕೆಲ್ಲಿಯದೊ ? ನೀರಲೊದಗಿದ ಬೆಣ್ಣೆ ಮುಗಿಲಲೊದಗಿದ ಕಿಚ್ಚು ಪವನನ ಶಬ್ದಸಂಚಕ್ಕೆ ಬಣ್ಣವುಂಟೆ ? ಗುಹೇಶ್ವರಲಿಂಗದ ನಿಲವ ತೋರಬಾರದು_ಕೇಳಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಅರಿದು ನೆನೆಯಲಿಲ್ಲ, ಮರೆದು ಪೂಜಿಸಲಿಲ್ಲ. ತೆರಹಿಲ್ಲದ ಘನಕ್ಕೆ ಕುರುಹು ಮುನ್ನಿಲ್ಲ. ತನಗೆ ಗುರುವಿಲ್ಲ, ಗುರುವಿಗೆ ತಾನಿಲ್ಲ ಗುರುವಿಗೆ ಶಿಷ್ಯನು ಹೊಡವಡುವ ಕಾರಣ ಮುನ್ನಿಲ್ಲ. ಬಯಲ ಬಿತ್ತಲಿಲ್ಲ, ಬೆಳೆಯಲಿಲ್ಲ, ಒಕ್ಕಲಿಲ್ಲ, ತೂರಲಿಲ್ಲ, ಗುಹೇಶ್ವರನೆಂಬ ಲಿಂಗಕ್ಕೆ ಕುರುಹು ಮುನ್ನಿಲ್ಲ.
--------------
ಅಲ್ಲಮಪ್ರಭುದೇವರು
ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ? ನಾನರಿದೆನೆಂಬಾತ ಇದಿರ ಕೇಳಲುಂಟೆ ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ? ಸೂತಕ ಹಿಂಗದೆ ಸಂದೇಹವಳಿಯದೆ, ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯೂಥ(ಯುತ?) ಬೆಳಗು ಗುಹೇಶ್ವರಾ ನಿಮ್ಮ ಶರಣ !
--------------
ಅಲ್ಲಮಪ್ರಭುದೇವರು
ಅಗ್ಗಣಿತಹೈಸಕ್ಕೆ ಅನಂತಯುಗಂಗಳು ಹೋಗುತ್ತಿವೆಯಯ್ಯಾ. ಪುಷ್ಪತಹೈಸಕ್ಕೆ ಅನಂತಯುಗಂಗಳು ಹೋಗುತ್ತಿವೆಯಯ್ಯಾ. ಲಿಂಗಾರ್ಚನೆ ಘನಲಿಂಗಕ್ಕೆಡೆಯಿಲ್ಲ ! ಗುಹೇಶ್ವರಾ ಸಿದ್ಧರಾಮಯ್ಯದೇವರಿಗೆ ಆರೋಗಣೆಯಿಲ್ಲ, ಶರಣರಿಗೆ ಪ್ರಸಾದವಿಲ್ಲ.
--------------
ಅಲ್ಲಮಪ್ರಭುದೇವರು
ಅಂಬುದ್ಥಿs ಉರಿಯಿತ್ತು ಅವನಿಯ ಮೇಲನರಿಯಲು. ಕೋಡೆರಡರೊಳೊಂದ ತಿಳಿದು, ವಾಯುವ ಬೈಯುತ್ತ, ತುಂಬಿ ಅಮೃತವ ಕಂಡು ಪ್ರಾಣನಾಥಂಗೆ ಅರ್ಪಿತವ ಮಾಡಿ, ಆ ಪ್ರಸಾದದಿಂದ ಸುಖಿಯಾದೆನಯ್ಯಾ_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅರಿದ ಶರಣಂಗೆ ಆಚಾರವಿಲ್ಲ, ಆಚಾರವುಳ್ಳವಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ಸುಳುಹು ಜಗಕ್ಕೆ ವಿಪರೀತ, ಚರಿತ್ರವದು ಪ್ರಕಟವಲ್ಲ ನೋಡಾ ! ಸಂಸಾರಿ ಬಳಸುವ ಬಯಕೆಯನೆಂದೂ ಹೊದ್ದನು. ಸಟೆಯ ಹಿಡಿದು ದಿಟವ ಮರೆದು, ಇಲ್ಲದ ಲಿಂಗವನು ಉಂಟೆಂದು ಪೂಜಿಸುವರಾಗಿ ಆಚಾರವುಂಟು, ಆಚಾರವುಳ್ಳವಂಗೆ ಗುರುವುಂಟು, ಗುರುವುಳ್ಳವಂಗೆ ಲಿಂಗವುಂಟು, ಲಿಂಗಪೂಜಕಂಗೆ ಭೋಗವುಂಟು. ಈ ಬರಿಯ ಬಾಯ ಬಣ್ಣಕರೆಲ್ಲರೂ ಪೂಜಕರಾದರು. ಗುಹೇಶ್ವರಲಿಂಗವು ಅಲ್ಲಿ ಇಲ್ಲವೆಂಬುದನು; ಈ ವೇಷಲಾಂಛನರೆತ್ತಬಲ್ಲರು ಹೇಳಾ ಸಂಗನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಘಟಿತ ಘಟಿತನೆ ವಿಪರೀತ ಚರಿತ್ರನೆ, ಸಾವರ ಕೈಯಲ್ಲಿ ಪೂಜೆಗೊಂಬರೆ ಲಿಂಗಯ್ಯಾ ? ಸಾವರ ನೋವರ ಕೈಯಲ್ಲಿ ಪೂಜೆಗೊಂಬುದು ಲಜ್ಜೆ ಕಾಣಾ _ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಯ್ಯ ತತ್ತ್ವ ವಿತತ್ತ್ವಗಳಿಲ್ಲದಂದು, ಪ್ರಕೃತಿ ಪುರುಷರಿಲ್ಲದಂದು, ಜೀವ_ಪರಮರೆಂಬ ಭಾವ ತಲೆದೋರದಂದು, ಏನೂ ಏನೂ ಇಲ್ಲದಂದು ಬಯಲು ಬಲಿದು ಒಂದು ಬಿಂದುವಾಯಿತ್ತು ನೋಡಾ. ಆ ಬಿಂದು ಅಕ್ಷರತ್ರಯದ ಗದ್ದುಗೆಯಲ್ಲಿ ಕುಳ್ಳಿರಲು ಓಂಕಾರ ಉತ್ಪತ್ತಿಯಾಯಿತ್ತು. ಆ [ಓಂಕಾರದ] ನಾದದಲ್ಲಿ ಮೂರ್ತಿಗೊಂಡನೊಬ್ಬ ಶರಣ. ಆ ಶರಣನಿಂದಾಯಿತ್ತು ಪ್ರಕೃತಿ, ಆ ಪ್ರಕೃತಿಯಿಂದಾಯಿತ್ತು ಲೋಕ. ಈ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ, ಗುಹೇಶ್ವರನ ಶರಣ ಚೆನ್ನಬಸವಣ್ಣನ ಘನವನು ಬಸವಣ್ಣನ ಕೃಪೆಯಿಂದಲರಿದು ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಅನಾದಿಯ ಭ್ರೂಮಧ್ಯದಲ್ಲಿ, ಐದು ಕುದುರೆಯ ಕಟ್ಟಿದ ಕಂಬ, ಮುರಿಯಿತ್ತು ! ಎಂಟಾನೆ ಬಿಟ್ಟೋಡಿದವು ! ಹದಿನಾರು ಪ್ರಜೆ ಬೊಬ್ಬಿಡುತಿರ್ದರು. ಶತಪತ್ರಕಮಲಕರ್ಣಿಕೆಯ ಮಧ್ಯದಲ್ಲಿ ಗುಹೇಶ್ವರಲಿಂಗ ಶಬ್ದ ಮುಗ್ಧವಾಗಿರ್ದನು.
--------------
ಅಲ್ಲಮಪ್ರಭುದೇವರು
ಅನಾದಿಪುರುಷ ಬಸವಣ್ಣಾ, ಕಾಲ ಮಾಯೆಗಳೆರಡೂ ನಿಮ್ಮ ಮುಂದಿರ್ದು, ನಿಮ್ಮ ಕಾಣೆವೆನುತ್ತಿಹವು. ಆದಿಪುರುಷ ಬಸವಣ್ಣಾ; ಸುರಾಸುರರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ನಾದಪುರುಷ ಬಸವಣ್ಣಾ, ನಾದ ಮಂತ್ರಗಳು ಪಂಚಮಹಾವಾದ್ಯಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ವೇದಪುರುಷ ಬಸವಣ್ಣಾ, ವೇದಶಾಸ್ತ್ರಾಗಮ ಪುರಾಣಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ಆಗಮ್ಯಪುರುಷ ಬಸವಣ್ಣಾ, ಅಂಗಾಲ ಕಣ್ಣವರು ಮೈಯೆಲ್ಲ ಕಣ್ಣವರು ನಂದಿವಾಹನರು ಗಂಗೆವಾಳುಕರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಗೋಚರಪುರುಷ ಬಸವಣ್ಣಾ, ಈ ಗೋಚರಿಸಿದ ಮನುಮುನಿ ದೇವದಾನವ ಮಾನವರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಪ್ರಮಾಣಪುರುಷ ಬಸವಣ್ಣ, ಈ ಪ್ರಮಾಣರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಸರ್ವಜ್ಞಪುರುಷ ಬಸವಣ್ಣಾ, ಈ ಸರ್ವರು ನಿಮ್ಮ ಬಳಸಿರ್ದು ನಿಮ್ಮ ಕಾಣೆವೆನುತ್ತಿಹರು. ಇಂತೀ ಸರ್ವಪ್ರಕಾರದವರೆಲ್ಲರೂ ನಿಮ್ಮ ಸಾಧಿಸಿ ಭೇದಿಸಿ ಪೂಜಿಸಿ ತರ್ಕಿಸಿ ಹೊಗಳಿ ಕಾಣದೆ ನಿಮ್ಮಿಂದವೆ ಉತ್ಪತ್ತಿ ಸ್ಥಿತಿಲಯಂಗಳಾಗುತ್ತಿಹರು. ಅದು ಕಾರಣ,_ನಮ್ಮ ಗುಹೇಶ್ವರಲಿಂಗದಲ್ಲಿ ಭಕ್ತಿವಡೆದ ಅನಂತ ಭಕ್ತರೆಲ್ಲ ಬಸವಣ್ಣ ಬಸವಣ್ಣ ಬಸವಣ್ಣ ಎನುತ್ತ ಬದುಕಿದರಯ್ಯಾ.
--------------
ಅಲ್ಲಮಪ್ರಭುದೇವರು
ಅನ್ನವನಿಕ್ಕಿ ನನ್ನಿಯ ನುಡಿದು ಅರವಟ್ಟಿಗೆಯನಿಕ್ಕಿ ಕೆರೆಯ ಕಟ್ಟಿಸಿದಡೆ ಮರಣದಿಂದ ಮೇಲೆ ಸ್ವರ್ಗ ಉಂಟಲ್ಲದೆ ಶಿವನ ನಿಜವು ಸಾಧ್ಯವಾಗದು. ಗುಹೇಶ್ವರನನರಿದ ಶರಣಂಗೆ ಆವ ಫಲವೂ ಇಲ್ಲ
--------------
ಅಲ್ಲಮಪ್ರಭುದೇವರು
ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು. ಹಿಂದೆ ಹೋದ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಬಸವಣ್ಣನು ಆದಿಯಲ್ಲಿ ಲಿಂಗಶರಣನೆಂಬುದ ಭೇದಿಸಿ ನೋಡಿ ಅರಿವರಿನ್ನಾರಯ್ಯಾ ? ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ, ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನೊಬ್ಬನೆ.
--------------
ಅಲ್ಲಮಪ್ರಭುದೇವರು
ಅರಗಿನ ದೇಗುಲದಲ್ಲಿ ಒಂದು ಉರಿಯ ಲಿಂಗವ ಕಂಡೆ. ಮತ್ತೆ ದೇವರ ಪೂಜಿಸುವರಾರೂ ಇಲ್ಲ. ಉತ್ತರಾಪಥದ ದಶನಾಡಿಗಳಿಗೆ, ಸುತ್ತಿಮುತ್ತಿದ ಮಾಯೆ ಎತ್ತಲಿಕೆ ಹೋಯಿತ್ತು ? ಮರನೊಳಗಣ ಕಿಚ್ಚು ಮರನ ಸುಟ್ಟುದ ಕಂಡೆ ! ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದಿತ್ತು
--------------
ಅಲ್ಲಮಪ್ರಭುದೇವರು

ಇನ್ನಷ್ಟು ...