ಶೀಲವಂತರು ಶೀಲವಂತರು ಎಂದು ಶೀಲದಲ್ಲಿ ಆಚರಿಸುವ ಅಣ್ಣಗ[ಳೇ]
ನಿಮ್ಮ ಶೀಲವಾವುದು ಹೇಳಿರೋ,
ಅರಿಯದಿದ್ದರೆ ಕೇಳಿರೋ:
ಶಿರಸ್ಸಿನಲ್ಲಿ ಶಿವನಿಪ್ಪ,
ಕಟಿಯಲ್ಲಿ ವಿಷ್ಣುವಿಪ್ಪ,
ಆಧಾರದಲ್ಲಿ ಬ್ರಹ್ಮನಿಪ್ಪ,
ಲಲಾಟದಲ್ಲಿ ವಿಭೂತಿರುದ್ರಾಕ್ಷಿ,
ಜಿಹ್ವೆಯಲ್ಲಿ ಪಂಚಾಕ್ಷರಿಯು.
ಇಂತಪ್ಪ ಅಷ್ಟಾವರಣದಲ್ಲಿ ಸವೆಯದೆ,
ಸಂಸಾರವೆಂಬ ಶರದ್ಥಿಯಲ್ಲಿ ಮುಳುಗೇಳುವರು ಶೀಲವಂತರಲ್ಲ.
ಬರಿದೆ ನಾವು ಶೀಲವಂತರೆಂಬುವ ಮನುಜ ಕೇಳು:
ಕಣ್ಣೇ ಕಂಚುಗಾರ, ಕರ್ಣವೇ ಬಣಜಿಗ, ಮೂಗೇ ಈಳಿಗ,
ಕೊರಳೇ ಕುಂಬಾರ, ತುಟಿಯೇ ಹೆಂಡಗಾರ, ಹಲ್ಲೆ ಕಲ್ಲುಕುಟಿಗ,
ತಲೆಯೇ ಮೋಪುಗಾರ, ಬೆನ್ನೇ ಜೇಡ, ಅಂಗೈಯೇ ಅಕ್ಕಸಾಲಿಗ,
ಮುಂಗೈಯೇ ಬಡಿಗ, ಕರವೇ ಕೋಮಟಿಗ,
ಕಣಕಾಲೇ ಕಾಳಿಂಗ, ಕುಂಡಿಯೇ ಕುಡುವೊಕ್ಕಲಿಗ,
ಒಳದೊಡೆಯೇ ಸಮಗಾರ, ಹೊರದೊಡೆಯೇ ಮಚ್ಚಿಗ,
ಮೇಗಾಡಿ ಹೊಲೆಯ, ಬುದ್ಧಿಯೇ ಬಯಲಗಂಬಾರ.
-ಇಂತಪ್ಪ ಕುಲ ಹದಿನೆಂಟು ಜಾತಿ
ಎಲು ಮಾಂಸವನು ತುಂಬಿಟ್ಟುಕೊಂಡು
ನನ್ನ ಕುಲ ಹೆಚ್ಚು, ನಿನ್ನ ಕುಲ ಕಡಿಮೆ ಎಂದು
ಹೊಡೆದಾಡುವಂತಹ ಅಣ್ಣಗಳನ್ನು ಹಿಡಿತಂದು
ಮೂಗನೆ ಸವರಿ ಮೆಣಸಿನ ಹಿಟ್ಟು ತುಪ್ಪವ ತುಂಬಿ
ನಮ್ಮ ಪಡಿಹಾರಿ ಉತ್ತಣ್ಣನ ವಾಮಪಾದುಕೆಯಿಂದ
ಪಡಪಡನೆ ಹೊಡಿ ಎಂದಾತ,
ನಮ್ಮಅಂಬಿಗರ ಚೌಡಯ್ಯ ನಿಜಶರಣನು.