ಘಟ್ಟಬೆಟ್ಟದ ನಟ್ಟನಡುವಿನ ಗಿರಿಯಲ್ಲಿ
ಹುಟ್ಟಿತೊಂದು ಸೋಜಿಗದಗ್ನಿಯ ಕಳೆ.
ಆ ಕಳೆಯ ಬೆಳಗ ಕಾಣೆನೆಂದು
ಇಬ್ಬರು ಮುಂದುಗೆಟ್ಟರು, ಮೂವರು ತಾಮಸಕ್ಕೊಳಗಾದರು,
ನಾಲ್ವರು ನಡೆಗೆಟ್ಟರು, ಐವರು ಅಂಧಕರಾದರು,
ಆರುಮಂದಿ ಹೋರಾಟಗೊಳುತಿರೆ,
ಏಳುಮಂದಿ ಕೂಪವ ಬಿದ್ದರು,
ಎಂಟುಮಂದಿ ತಂಟುಕಕ್ಕೆ ಒಳಗಾದರು.
ಒಂಬತ್ತು [ಮಂದಿ] ಕಣವಿಯ ಹರವರಿಯಲ್ಲಿ [ಹೊಕ್ಕರು.]
ಹತ್ತು ಬಗೆಯವರು ಹರಿದಾಡುತಿರೆ,
ಇದನು ಕಂಡು, ತರುಗಿರಿಯ ನಡುವೆ ಹರಿವ ಉದಕ ಗಾಳಿ ಬಂದು
ಬೆಟ್ಟವನಡರಿ, ಉರಿವ ಜ್ಯೋತಿಯ ತಾಗದ ಮುನ್ನ
ನೀರಹರಿಯನಡ್ಡಂಗಟ್ಟಿ, ಗಾಳಿಯ ಹಿಮ್ಮೆಟ್ಟಿಸಿ,
ಜ್ಞಾನಪರಬ್ರಹ್ಮದಲ್ಲಿ ನಿಂದವರಾರೆಂದರೆ :
ಪ್ರಭುದೇವರು, ಚೆನ್ನಬಸವೇಶ್ವರದೇವರು,
ಮೋಳಿಗೆಯ್ಯನವರು, ಸಂಗನಬಸವೇಶ್ವರದೇವರು,
ನೀಲಾಂಬಿಕೆ ತಾಯಿ, ಅಕ್ಕನಾಗಮ್ಮ, ಮಹಾದೇವಿಯಕ್ಕ,
ಮುಕ್ತಾಯಿ ಮುಖ್ಯವಾದ ಏಳುನೂರಾ ಎಪ್ಪತ್ತು
ಅಮರಗಣಂಗಳ ಲೆಂಕರ ಲೆಂಕನಾಗಿ
ಎನ್ನ ಆದಿಪಿಂಡಿವ ಧರಿಸಿ,
ಮತ್ರ್ಯಕ್ಕೆ ಕಳುಹಿದ ಭೇದವ ಪಿಂಡಜ್ಞಾನದಿಂದಲರಿದು
ಆಚರಿಸುತ್ತಿದ್ದೆನಯ್ಯಾ ಎನ್ನಾಳ್ದ
ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.