ಅಥವಾ

ಒಟ್ಟು 351 ಕಡೆಗಳಲ್ಲಿ , 75 ವಚನಕಾರರು , 324 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗದ ಮೇಲೆ ಲಿಂಗಸಾಹಿತ್ಯವಾಗದಿದ್ದರೇನು, ಕಾಯವೇನು ಬರಿ ಕಾಯವೆ ? ಪ್ರಾಣದ ಮೇಲೆ ಲಿಂಗಸಾಹಿತ್ಯವಾಗದಿದ್ದರೇನು ? ಪ್ರಾಣವೇನು ವಾಯುಪ್ರಾಣವೆ ? ಅಹಂಗಲ್ಲ, ನಿಲ್ಲು. Uõ್ಞರವಂ ಕಾಯಸಂಬಂಧಂ ಪ್ರಾಣಸ್ತು ಪ್ರಾಣಸಂಯುತಃ ಕಾರಣಂ ಭಾವಸಂಬಂಧಂ ಗುರೋಃ ಶಿಷ್ಯಮನುಗ್ರಹಂ ಎಂದುದಾಗಿ ಹರರೂಪಾಗಿದ್ದುದೆ ಪ್ರಾಣಲಿಂಗ, ಗುರುರೂಪಾಗಿದ್ದುದೆ ಜಂಗಮಲಿಂಗ. ಹರರೂಪಾಗಿರ್ದ ಪ್ರಾಣಲಿಂಗವಾವ ಕೈಯಲುಂಬುದೆಂದರೆ, ಭಕ್ತನ ಜಿಹ್ವಾಗ್ರದಲುಂಬುದು. ಗುರುರೂಪಾಗಿರ್ದ ಜಂಗಮಲಿಂಗವಾವ ಕೈಯಲುಂಬುದೆಂದರೆ ಜಂಗಮ ಜಿಹ್ವಾಗ್ರದಲುಂಬುದು. ಇದು ಕಾರಣ ಹರರೂಪಾಗಿದ್ದುದೆ ಪ್ರಾಣಲಿಂಗ ಗುರುರೂಪಾಗಿದ್ದುದೆ ಜಂಗಮಲಿಂಗ. ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ ಎಂಬ ವಚನವನರಿದು ಸ್ಥಾವರವನು ಜಂಗಮವನು ಒಂದೆಂದರಿದೆನಯ್ಯಾ. ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಗುರುಕಾರುಣ್ಯವಂ ಪಡೆದು ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಭಕ್ತನಾಗಲಿ ಜಂಗಮನಾಗಲಿ ಭಕ್ತಿ ಭೃತ್ಯಾಚಾರ ಸಂಪನ್ನರಾಗಿ ಗುರುಲಿಂಗ ಜಂಗಮವನಾರಾಧಿಸಿ, ಪ್ರಸಾದವಕೊಂಡು ನಿಜಮುಕ್ತರಾಗಲರಿಯದೆ ಪರಮಪಾವನಪ್ಪ ಗುರುರೂಪ ಹೊತ್ತು ಮತ್ತೆ ತಾವು ಪರಸಮಯದಂತೆ ದೂಷಕ ನಿಂದಕ ಪರವಾದಿಗಳಾಗಿ ಭಕ್ತ ಜಂಗಮ ಪ್ರಸಾದವನೆಂಜಲೆಂದು ಅತಿಗಳೆದು ತೊತ್ತು ಸೂಳೆಯರೆಂಜಲ ತಿಂದು ಮತ್ತೆ ನಾ ಘನ ತಾ ಘನವೆಂದು ಸತ್ಯ ಸದ್ಭಕ್ತಯಕ್ತರಾದ ಭಕ್ತಜಂಗಮವ ಜರೆದು, ಅವರ ಕುಲವೆತ್ತಿ ಕೆಡೆನುಡಿದು ಹೊಲತಿ ಮಾದಿಗಿತ್ತಿಯರಿಗುರುಳಿ ಹಲವು ದೈವದೆಂಜಲತಿಂದು ಮತ್ತೆ ತಾವು ಕುಲಜರೆಂದು ಬಗುಳುವ ಹೊಲೆ ಜಂಗುಳಿಗಳೆಲ್ಲರು ಈ ಗುರು ಕೊಟ್ಟಲಿಂಗವಿರಲು ಅದನರಿಯದೆ ಶ್ರೀಶೈಲ, ಹಂಪಿ, ಕಾಶಿ, ಕೇತಾರ ಗಯಾ ಪ್ರಯಾಗ ರಾಮೇಶ್ವರ ಆದಿಯಾದ ಹೊಲೆಕ್ಷೇತ್ರಂಗಳಲ್ಲಿ ಆಸಕ್ತರಾಗಿ ಹೋಗಿ ಅಲ್ಲಲ್ಲಿಯ ಭವಿಶೈವದೈವಂಗಳ ದರ್ಶನ ಸ್ಪರುಶನ ಆರಾಧನೆಗಳ ಮಾಡಿ ಅವಕ್ಕೆ ಶರಣೆಂದು ಅವರೆಂಜಲ ತಿಂದು ಆ ಕ್ಷೇತ್ರಂಗಳಲ್ಲಿ ಆಶ್ರಮಸ್ಥರಾಗಿರ್ದು ಗತಿಪದ ಮುಕ್ತಿಯ ಪಡೆವೆನೆಂಬ ವೇಷಧಾರಿಗಳೆಲ್ಲರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರವೇಳೆ ಬಪ್ಪುದು ತಪ್ಪುದು. ಅದೆಂತೆಂದೊಡೆ ; ಇದಂ ತೀರ್ಥಮಿದಂ ತೀರ್ಥಂ ಭ್ರಮಂತಿ ತಾಮಸಾ ನರಾಃ ಶಿವಜ್ಞಾನೇನ ಜಾನಂತಿ ಸರ್ವತೀರ್ಥನಿರರ್ಥಕಂ ಪ್ರಾಣಲಿಂಗಮವಿಶ್ವಾಸ್ಯ ತೀರ್ಥಲಿಂಗಂತು ವಿಶೇಷತಃ ಶ್ವಾನಯೋನಿಶತಂ ಗತ್ವಾಶ್ಚಾಂಡಾಲಂ ಗೃಹಮಾಚರೇತ್ ಚರಶೇಷ ಪರಿತ್ಯಾಗಾದ್ಯೋಜನಾದ್ಭಕ್ತ ನಿಂದಕಾಃ ಅನ್ಯಪಣ್ಯಾಂಗನೋಚ್ಚಿಷ್ಟಂ ಭುಂಜಯಂತಿರೌರವಂ-ಇಂತೆಂದುದಾಗಿ, ಇದು ಕಾರಣ, ಇಂತಪ್ಪ ಅನಾಚಾರಿಗಳು ಭಕ್ತ ಜಂಗಮ ಸ್ಥಲಕ್ಕೆ ಸಲ್ಲರು. ಅವರಿರ್ವನು ಕೂಡಲಚೆನ್ನಸಂಗಯ್ಯ ಸೂರ್ಯ-ಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅರಿವರತು ಕುರುಹು ನಷ್ಟವಾದ ಬಳಿಕ ಕುರುಹಿನ ಬಣ್ಣ ಅಂಗದ ಮೇಲೇಕೊ ಘಟ್ಟಿವಾಳಂಗೆ ? ಅರಿವನಾರು ? ಅರುಹಿಸಿಕೊಂಬನಾರು ? ಬರಿಯ ಬಯಲು ಕಾಣಾ, ಕೂಡಲಚೆನ್ನಸಂಗಾ ನಿಮ್ಮ ಶರಣ ಘಟ್ಟಿವಾಳನಲ್ಲದೆ ನೆರೆ ಅರಿವರಾರೊ ?
--------------
ಚನ್ನಬಸವಣ್ಣ
ಭವಿಯ ಕಳೆದು ಭಕ್ತನ ಮಾಡಿ ಅಂಗದ ಮೇಲೆ ಲಿಂಗವ ಧರಿಸಿ, ಗುರುರೂಪನ ಮಾಡಿದ ತನ್ನ ನಿಜಗುರುವಪ್ಪ ಪೂರ್ವಾಚಾರ್ಯನನತಿಗಳೆದು; ಯತಿ ಜತಿಗಳಿವರು ಅತಿಶಯರೆಂದು ಅವರಲ್ಲಿ ಹೊಕ್ಕು, ಪ್ರತಿದೀಕ್ಷೆಯ ಕೊಂಡವಂಗೆ ಗುರುದ್ರೋಹ ಕೊಟ್ಟವಂಗೆ ಲಿಂಗದ್ರೋಹ. ಇವರಿಬ್ಬರಿಗೂ ಗುರುವಿಲ್ಲ, ಗುರುವಿಲ್ಲವಾಗಿ ಲಿಂಗವಿಲ್ಲ, ಲಿಂಗವಿಲ್ಲವಾಗಿ ಜಂಗಮವಿಲ್ಲ ಜಂಗಮವಿಲ್ಲವಾಗಿ ಪಾದೋದಕವಿಲ್ಲ, ಪಾದೋದಕವಿಲ್ಲವಾಗಿ ಪ್ರಸಾದವಿಲ್ಲ. ಇಂತೀ ಪಂಚಾಚಾರಕ್ಕೆ ಹೊರಗಾದ ಪತಿತರನು, ಗುರು ಚರ ಪರವೆಂದು ಆರಾಧಿಸಿದವಂಗೆ ಅಘೋರನರಕ ತಪ್ಪದು. ಅದೆಂತೆಂದಡೆ:``ಯಸ್ತು ಗುರು ಭ್ರಷ್ಟಾರಾರಾಧಿತಃ ತಸ್ಯ ಘೋರನರಕಃ' ಎಂದುದಾಗಿ_ ಇವಂದಿರನು ಗುರುಹಿರಿಯರೆಂದು ಸಮಪಂಕ್ತಿಯಲ್ಲಿ ಕೂಡಿ ಪ್ರಸಾದವ ನೀಡಿ, ಒಡಗೂಡಿಕೊಂಡು ನಡೆಯ ಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಜಂಗಮಪ್ರಸಾದ ಮುಂತಾಗಿಯಲ್ಲದೆ ಒಲ್ಲೆನೆಂಬ ಭಕ್ತನ ಕಟ್ಟಳೆಯ ವಿವರ: ಶಿಶು, ಬಂಧುಗಳು, ಚೇಟಿ, ಬೆವಸಾಯವ ಮಾಡುವವರು ಮುಂತಾದ ಇವರಿಗೆಲ್ಲಕ್ಕೂ ಒಡೆಯರಿಗೆ ಸಲುವುದಕ್ಕೆ ಮುನ್ನವೆ ಸೀತಾಳ ಶಿವದಾನವೆಂದು ಇಕ್ಕಬಹುದೆ? ಒಡೆಯರ ಕಟ್ಟಳೆಯಠಾವಿನಲ್ಲಿ ನಿಮ್ಮ ಕೃತ್ಯಕ್ಕೆ ನಿಮ್ಮ ಮನವೆ ಸಾಕ್ಷಿ. ಇದು ದಂಡವಲ್ಲ, ನೀವು ಕೊಂಡ ಅಂಗದ ನೇಮ. ಇದಕ್ಕೆ ನಿಮ್ಮ ಏಲೇಶ್ವರಲಿಂಗವೆ ಸಾಕ್ಷಿ.
--------------
ಏಲೇಶ್ವರ ಕೇತಯ್ಯ
ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ, ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ, ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
--------------
ಬಸವಣ್ಣ
ಮಾಟದಿಂದ ಮಾಡಿ ಕಂಡೆಹೆನೆಂಬವರೆಲ್ಲರು ಸ್ಥೂಲ ಸೂಕ್ಷ್ಮ ಅಧಮವೆಂದರಸಿ ಕೆಟ್ಟರು. ಅರಿದೆಹೆನೆಂದು ತಿರುಗಾಡುವರೆಲ್ಲರು ಕಂಗಳ ನೋಟ ಕಾಮನ ಕೂಟ, ಅಂಗದ ಸುಖಕ್ಕಾಗಿ ಕೆಟ್ಟರು. ಲಿಂಗವ ಪೂಜಿಸುವರೆಲ್ಲರು ಆ ಲಿಂಗದ ಅರ್ಚನೆಯನರಿಯದೆ, ಲಿಂಗದ ಅರ್ಪಿತವನರಿಯದೆ, ನೀರು ಓಗರವೆಂಬ ರೋಗದಲ್ಲಿ ಸತ್ತರು. ಇಂತೀ ಭೇದವನರಿದಲ್ಲಿ ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧವನಳಿದಲ್ಲದೆ ಭವ ಹಿಂಗದೆಂಬರು ಬ್ಥಿನ್ನ ಭಾವದಜ್ಞಾನಕಲಾತ್ಮರು. ಅವೇನು ತಮ್ಮ ಸಂಬಂಧವೆ? ಸಂಬಂಧವಲ್ಲ. ತಮ್ಮ ಸಂಬಂಧವಾದ ಮಲತ್ರಯವ ಪೇಳ್ವೆ. ತನುವೇ ಮಣ್ಣು, ಮನವೇ ಹೆಣ್ಣು, ಆತ್ಮವೇ ಹೊನ್ನು. ಇಂತೀ ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧವನೊಳಗಿಟ್ಟುಕೊಂಡು ಬಾಹ್ಯದ ಮಲತ್ರಯಂಗಳ ವಿಸರ್ಜಿಸಿ ಭವಹಿಂಗಿಸಬೇಕೆಂದು ಗುಡ್ಡ ಗಂಹರವ ಸೇರುವರು. ಅವರಿಗೆ ಎಂದಿಗೂ ಭವಹಿಂಗದು. ಮತ್ತೆಂತೆಂದೊಡೆ: ಸುಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಹಡದು ಅಂಗದ ಮೇಲೆ ಇಷ್ಟಲಿಂಗವ ಸ್ವಾಯತವ ಮಾಡಿಕೊಂಡು ಆ ಇಷ್ಟಬ್ರಹ್ಮವನು ತನುಮನಧನದಲ್ಲಿ ಸ್ವಾಯತವ ಮಾಡಿ, ಆ ತ್ರಿವಿಧ ಲಿಂಗದ ಸತ್ಕ್ರಿಯಾ ಸಮ್ಯಜ್ಞಾನ ಸ್ವಾನುಭಾವದಾಚರಣೆಯಿಂದ ಆ ತನುತ್ರಯದ ಪ್ರಕೃತಿಯನಳಿದು, ಆ ಮಾಯಾಮಲಸಂಬಂಧವೆಂಬ ಸತಿಸುತರು ಮಾತಾಪಿತೃಗಳ ಸಂಬಂಧವಿಡಿದು, ಆಚರಿಸಿದಡೆಯು ಅದಕ್ಕೇನು ಚಿಂತೆಯಿಲ್ಲ, ಇಷ್ಟುಳ್ಳವರಿಗೆ ಭವ ಹಿಂಗಿ ಮುಕ್ತಿಯಾಗುವದು. ಪ್ರಮಥಗಣಂಗಳ ಸಮ್ಮತ ಶಿವಜ್ಞಾನಿಗಳು ಮೆಚ್ಚುವರು. ಅದೇನು ಕಾರಣವೆಂದಡೆ: ಈ ಮಲಸಂಬಂಧ ಜೀವಾತ್ಮರೆಲ್ಲ ದೇಹ ಇರುವ ಪರ್ಯಂತರವಲ್ಲದೆ ಲಿಂಗಾಂಗಿಗೆ ಇದ್ದೂ ಇಲ್ಲದಂತೆ ನೋಡೆಂದನಯ್ಯಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಾಲಿಗೆ ಕೋಳ, ಕೈಗೆ ಸಂಕಲೆ, ಕೊರಳಿಗೆ ಪಾಶ ಪಾಷಂಡಿಗಳಾಗುತ್ತ, ಮತ್ತಾ ಅರಿವಿನ ಹೊಲಬೆಲ್ಲ ಅಡಗಿತ್ತು. ಅಂಗದ ಕ್ರೀ, ಲಿಂಗದ ಕೂಟ, ನಿರಂಗದ ಸುಖವೆಂಬುದು ಆ ಮೂರರ ಬಂಧದಲ್ಲಿ ಅಡಗಿತ್ತು. ಬೇರೊಂದು ಸಂಗವೆಲ್ಲಿದ್ದಿತ್ತು ಹೇಳಾ ? ನಿರಂಗವೆಂಬ ನಾಮವಿಲ್ಲದನೆ ಕಾಮಕ್ಕೇಕೆ ಕೂಟವಾದೆ ? ದುರ್ಮುಖಕ್ಕೇಕೆ ಆತ್ಮನಾದೆ ? ಕಾಮಧೂಮ ಧೂಳೇಶ್ವರನೆಂಬುದಕ್ಕೆ ಕುರುಹಿಲ್ಲದ ನೆರೆ ನಾಮವಾದೆಯಲ್ಲಾ.
--------------
ಮಾದಾರ ಧೂಳಯ್ಯ
ಅಂಗದ ಮೇಲೆ ಶಿವಲಿಂಗ ನೆಲಸುವಂಗೆ ಮೂರುಸ್ಥಲವಾಗಬೇಕು. ಅವಾವವಯ್ಯಾಯೆಂದಡೆ: ಗುರುಲಿಂಗಜಂಗಮದಲ್ಲಿ ಭಕ್ತಿ. ಅರಿವ ಸಾದ್ಥಿಸುವಲ್ಲಿ ಜ್ಞಾನ. ಕರಣಾದಿಗಳ ಭಂಗ ವೈರಾಗ್ಯ. ಇನಿತಿಲ್ಲದೆ ಲಿಂಗವ ಪೂಜಿಸಿಹೆನೆಂಬ, ಲಿಂಗವ ಧರಿಸಿಹೆನೆಂಬ ಲಜ್ಜೆಭಂಡರ ಕಂಡು, ನಾ ನಾಚಿದೆನಯ್ಯಾ. ಇದು ಕಾರಣ ಗದ್ದುಗೆಗೆಟ್ಟು ಎದ್ದಾತನು ಲಿಂಗವಲ್ಲ ಕಾಣಾ. ಲಿಂಗ ಸತ್ತ, ನಾ ಕೆಟ್ಟೆ, ರಂಡೆಗೂಳೆನಿಸಲಾರೆ. ಎನ್ನ ಹತ್ಯವ ಮಾಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ವೇದವನೋದಿದಡೇನು? ಶಾಸ್ತ್ರವ ಕಲಿತಡೇನು? ಮಾಘವ ಮಿಂದಡೇನು? ಮೂಗ ಹಿಡಿದಡೇನು? ಹಲ್ಲ ಕಿರಿದಡೇನು? ಬಾಯ ಹುಯ್ದುಕೊಂಡಡೇನು? ಉಟ್ಟುದನೊಗೆದಡೇನು? ಮಟ್ಟಿಯನಿಟ್ಟಡೇನು? ಮಂಡೆಯ ಬಿಟ್ಟಡೇನು? ತಿಟ್ಟನೆ ತಿರುಗಿದಡೇನು? ಕಣ್ಣು ಮುಚ್ಚಿದಡೇನು? ಕೈಗಳ ಮುಗಿದಡೇನು? ಬೊಟ್ಟನಿಟ್ಟಡೇನು? ಬಯಲಿಂಗೆ ನೆನೆದಡೇನು? ಮುಸುಡ ಹಿಡಿದಡೇನು? ಮೌನದಲ್ಲಿರ್ದಡೇನು? ಅವಕ್ಕೆ ಶಿವಗತಿ ಸಿಕ್ಕದು. ಕುಲವಳಿದು ಛಲವಳಿದು ಮದವಳಿದು ಮತ್ಸರವಳಿದು, ಗುರುಕಾರುಣ್ಯವ ಪಡೆದು, ಅಂಗದ ಮೇಲೆ ಲಿಂಗವ ಧರಿಸಿ, ಗುರುಲಿಂಗಜಂಗಮಕ್ಕೆ ಭಕ್ತಿಯ ಮಾಡಬಲ್ಲಡೆ, ಶಿವಗತಿ ಸಿಕ್ಕುವುದು. ಶಿವಭಕ್ತನಾಗಿ ಸತ್ಯ ಸದಾಚಾರ ಭಕ್ತಿವಿಡಿದು ನಡೆಯಬಲ್ಲಡೆ, ಕೈಲಾಸದ ಬಟ್ಟೆ ಬೇರಿಲ್ಲವೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ. ಮನದ ಭಂಗವ ಅರುಹಿನ ಮುಖದಿಂದ ಗೆಲಿದೆ. ಜೀವದ ಭಂಗವ ಶಿವಾನುಭಾವದಿಂದ ಗೆಲಿದೆ. ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ. ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಂಗೆ ತೋರುವ ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯಾ ? ಚೆನ್ನಮಲ್ಲಿಕಾರ್ಜುನ, ಕಾಮನಕೊಂದು ಮನಸಿಜನಾಗುಳುಹಿದಡೆ ಮನಸಿಜನ ತಲೆಯ ಬರಹವ ತೊಡೆದೆನು.
--------------
ಅಕ್ಕಮಹಾದೇವಿ
ಗುರು ಲಿಂಗ ಒಂದೆಂಬರು. ಗುರು ಲಿಂಗ ಒಂದಾದ ಠಾವ ತಿಳಿದು ನೋಡಿರೆ. ಗುರು ಕಾರುಣ್ಯವಾದ ಬಳಿಕ ಅಂಗದ ಮೇಲೆ ಲಿಂಗವಿರಬೇಕು. ಲಿಂಗವಿಲ್ಲದ ಗುರುಕಾರುಣ್ಯವು ಬತ್ತಿದ ಕೆರೆಯಲ್ಲಿ ತಾವರೆಯ ಬಿತ್ತದಂತೆ ಕಾಣಾ!ರಾಮನಾಥ.
--------------
ಜೇಡರ ದಾಸಿಮಯ್ಯ
ಭವವಿಲ್ಲದಡೇನು, ಬಂಧನವಿಲ್ಲದಡೇನು, ಶಿವಗಣಂಗಳೆಲ್ಲರ ಮನಕ್ಕೆ ಬಾರದುದೆ ಭವಬಂಧನ ನೋಡಾ. ಪರಹಿತಾರ್ಥವಾಗಬೇಕೆಂದು ಲಿಂಗವ ಕೊಟ್ಟಡೆ ನಿಮ್ಮ ಪ್ರಮಥರ ಮುಂದೆ ಶಿವ ಮುನಿದು ಮತ್ರ್ಯಲೋಕಕ್ಕೆ ಕಳುಹಿಸಿದನು. ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದು ನಂಬಿದಲ್ಲಿ ನಿಮ್ಮ ಪ್ರಮಥರೆನ್ನನೊಳಗಿಟ್ಟುಕೊಂಡರು. ಜಂಗಮಮುಖದಲ್ಲಿ ಲಿಂಗವನರಿಸಿಕೋ ಎಂದಡೆ ದಾಸೋಹವೆಂಬ ಪಸರವನಿಕ್ಕಿದೆನು. ಕೂಡಲಸಂಗಮದೇವರ ಮುಂದೆ ಜಂಗಮಮುಖದಲ್ಲಿ ಎಂದು ಸುಖಿಯಪ್ಪೆನು ಹೇಳಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಇನ್ನಷ್ಟು ... -->