ಅಥವಾ

ಒಟ್ಟು 113 ಕಡೆಗಳಲ್ಲಿ , 40 ವಚನಕಾರರು , 87 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯಲಬೀಜ ಭೂಮಿಯಲ್ಲಂಕುರಿಸಿ ಎಲೆಯೆರಡಾದುವು, ಎಸಳು ಮೂರಾದವು, ಕುಸುಮ ಆರಾದವು, ಕಾಯಿ ಮೂವತ್ತಾರಾದವು, ಹಣ್ಣು ಇನ್ನೂರಾಹದಿನಾರಾದವು. ತೊಟ್ಟು ತುಂಬಿ ವಿಶ್ವಪರಿಪೂರ್ಣವಾಗಿ ತೊಟ್ಟು ಕಳಚಿ ಇನ್ನೂರಹದಿನಾರರೊಳು ನಿಂದು ಆ ಮೂವತ್ತಾರರಲ್ಲಿ ಅಡಗಿ ಆರರಲ್ಲಿ ಅಳಿದು ಮೂರರಲ್ಲಿ ಮುಳುಗಿ ಎರಡರಲ್ಲಿ ನಿಂದು ಒಂದಾಗಿ ಮರೆದುಳಿದು ಗುರುನಿರಂಜನ ಚನ್ನಬಸವಲಿಂಗದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ತತ್ ತ್ವಂ ಅಸಿಯೆಂಬ ತ್ರಿವಿಧಭೇದಂಗಳಲ್ಲಿ ತ್ರಿವಿಧಮಯನಾಗಿ, ತ್ರಿಗುಣಾತ್ಮನಾಗಿ, ತ್ರಿಶಕ್ತಿಪತಿಯಾಗಿ ಗತಿಯ ತೋರಿಹೆನೆಂದು ಪ್ರತಿರೂಪಾದೆ. ಎಳ್ಳಿನೊಳಗಣ ಎಣ್ಣೆ, ಕಲ್ಲಿನೊಳಗಣ ಬೆಂಕಿ, ಬೆಲ್ಲದೊಳಗಣ ಮಧುರ, ಅಲ್ಲಿಯೆ ಅಡಗಿ ಮಥನದಿಂದಲ್ಲದೆ ತೋರದವೊಲು ಅಲ್ಲಿಯೆ ಅಡಗಿದೆ ಗುಡಿಯೊಳಗೆ, ಗುಮ್ಮಟನಾಥನ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
ಇದು ಜಗವ್ಯವಹಾರಣೆಯ ಧರ್ಮ, ಮುಂದಕ್ಕೆ ಐಕ್ಯಾನುಭಾವ. ಕಾಯ ಅಕಾಯದಲ್ಲಿ ಅಡಗಿ, ಜೀವ ನಿರ್ಜೀವದಲ್ಲಿ ಅಡಗಿ, ಭ್ರಮೆ ಸಂಚಾರವಿಲ್ಲದೆ, ಮಹಾಘನದಲ್ಲಿ ಸಂದು, ಉಭಯದ ಸಂದಿಲ್ಲದೆ ಬಂಕೇಶ್ವರಲಿಂಗದಲ್ಲಿ ಸಲೆ ಸಂದವನ ಒಲುಮೆ.
--------------
ಸುಂಕದ ಬಂಕಣ್ಣ
ತ್ರಾಸಿನ ತೂಕದಂತೆ, ಅಂಗ ಲಿಂಗ ಸಮವಾಗಿ, ಬಿಲುಗಾರನೆಸುಗೆಯ ಬಾಣದ ಕೂಡೆ ಕಾಣಿಸುವ ಘಾಯದಂತೆ, ಹೂಣಿಸಿದರ್ಪಿತಸಂಧಾನವೆಸವುತ್ತ, ಅಕ್ಷರದೊಡನೆ ತೋರುವ ಶಬ್ದದಂತೆ, ಅಂಗ ಲಿಂಗೈಕ್ಯವನರಿದಾಂತಗೆ ಅನರ್ಪಿತವೆಂಬುದುಂಟೇ? ಇಲ್ಲ. ಆತ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೊಳಗೆ, ಅಡಗಿ ಅರ್ಪಿಸುವ ಸುಯಿಧಾನಿ ತಾನು.
--------------
ಸ್ವತಂತ್ರ ಸಿದ್ಧಲಿಂಗ
ಆರು ಬಣ್ಣದ ಆರು ಲಿಂಗದಲ್ಲಿ ಮೂರು ಬಣ್ಣದ ಮೂರು ಲಿಂಗವ ಕೂಡಲು ನವಲಿಂಗದ ಒಂಬತ್ತು ಬಣ್ಣದಲ್ಲಿ ಗುರುಲಿಂಗಜಂಗಮಪ್ರಸಾದವೆಂಬ ನಾಲ್ಕು ಬಣ್ಣವ ಕೂಡಿದ ಹದಿಮೂರು ಬಣ್ಣವ ಕ್ರೀಯೆಂಬ ಕಮ್ಮರನ ಕೈಯಲ್ಲಿ ಕೊಟ್ಟಡೆ, ವಾಸನೆಯೆಂಬ ಸೀಸವ ಬೆರಸಿದ ನೋಡಾ. ಕಮ್ಮಾರನ ಬಾಯಕುಟ್ಟಿ ಸೆಳೆಯಲಾಗಿ ಆ ವಾಸನೆ ಅಲ್ಲಿಯೇ ಅಡಗಿ, ಅಂಗಭವಿ ಲಿಂಗಭವಿಯೆಂಬ ಅಡಗಿದ ಕಾಳಿಕೆಯಳಿದ ಸ್ವಯಬಣ್ಣದ ಮಿಸುನಿಗೆ ತನುವೆಂಬ ಒರೆಗಲ್ಲ ಹಂಗಿಲ್ಲ, ಮನವೆಂಬ ಮಚ್ಚದ ಹಂಗಿಲ್ಲ. ಭಾವವೆಂಬ ಹಸ್ತದ ಹಂಗಿಲ್ಲ, ತಮೋಗುಣವೆಂಬ ಮಯಣದ ಹಂಗಿಲ್ಲ. ಬೋಧವೆಂಬ ನೇತ್ರದ ಹಂಗಿಲ್ಲ. ಇಂತಿವರ ಹಂಗು ಹರಿದಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗ ಪರವಳಿದು ಸಯವಾಯಿತ್ತು
--------------
ಆದಯ್ಯ
ಕಡುಜಲಕ್ಕೆ (ಹರಿವ ಜಲಕ್ಕೆ ?) ಇದಿರಾಗಿ ಹರಿವ ಸ್ವಾಮಿಯ ಬರವ ಕಂಡು, ಬಿಡದೆ ಬೆಂಬತ್ತಿಸುವ ಪರಿಯ ನೋಡಾ. ನಡೆ ನುಡಿ ಚೈತನ್ಯ ಒಡಲನೊಂದನು ಮಾಡಿ ಬಿಡದೆ ವೇಧಿಸುವ ಬೆಡಗ ಕಂಡೆನಯ್ಯಾ ! ಕಡೆಗೆ ಸೂಸದ ದೃಷ್ಟಿ, ಹಿಡಿದು ತೊಲಗದ ಹಸ್ತ, ಬೇಡ ಬೇಡ ತನಗೆನ್ನದ ಸಜ್ಜನ ಮಡದಿ, ತನ್ನ ಗಂಡನ ಅಡಗಿ ಕೂಡುವ ಭೇದ !_ ನಡುವಿರುಳು ಕೂಡಿ ನಿಮಿರೆ ಬೆಳಗಾಯಿತ್ತು. ಮಾಡಿ ನೀಡುವನ ಕಂಡು ನಾಡು ಬೀಡೆಲ್ಲ ನೆರೆದು ಕೊಡ ಕೈಯಲ್ಲಿ ಕೊಟ್ಟಡೆ ತೃಪ್ತರಾಗಿ, ಮಾಡುವರು ಹರಸುವರು ನೋಡುವರು ಮನದಣಿಯೆ ಕೊಡುವರು ಕೋಟಿ, ಸಹಜ ಒಂದೆ ಎಂದು ! ಜೋಡ ತೊಡದಾತನ ಮೈಯಲ್ಲಿ, ಕೂಡೆ ಘಾಯವಿಲ್ಲದುದ ಕಂಡು, ನೋಡಿರೆ ಮಸೆ ಮುಟ್ಟದ ಮಹಾಂತನ ! ಬೇಡುವೆನು ಕರುಣವನು, ಪಾದ [ವ]ನೊಸಲಲ್ಲಿ ಸೂಡುವೆನು ಗುಹೇಶ್ವರನ ಶರಣ ಬಸವಣ್ಣಂಗೆ ನಮೋ ನಮೋ ಎಂಬೆನು.
--------------
ಅಲ್ಲಮಪ್ರಭುದೇವರು
ಆದಿ ನಾದದ ಬಿಂದುವನರಿದು ಭಕ್ತಿಸಂಭಾಷಣೆಯ ಮಾಡಿದ ಬಸವಾ, ಪ್ರಣವದಲ್ಲಿ ನಿಜವ ಕಂಡು ತೋರಿದ ಬಸವಾ. ಆ ಪ್ರಣವದ ಘನವ ಕಂಡ ಬಸವಾ. ಇತರ ತೃಪ್ತಿಯನನುಭವಿಸಬಲ್ಲ ಬಸವಾ ನೀನೆನ್ನಲ್ಲಿ ಅಡಗಿ, ನಾ ನಿನ್ನಲ್ಲಿ ಅಡಗಿ, ನಾ ನಿನ್ನ ಮನದ ಅರಿವನರಿದು ಉಭಯವಿಲ್ಲವೆಂದೆನೆಂದೆ ಬಸವಾ. ಸುಖದ ಸಮಯಾಚಾರವ ಕಂಡು ನಿಜದಲ್ಲಿ ನಿಂದವಳಾನು ನಾನಯ್ಯ ಬಸವಾ. ಸಂಗಯ್ಯನಲ್ಲಿ ನಿಜವಿಡಿದ ಹೆಣ್ಣು ನಾನೇ ಅಹುದೆಂದು ನುಡಿದೆನಯ್ಯಾ ಅಪ್ಪಣ್ಣಾ.
--------------
ನೀಲಮ್ಮ
ಕಾಯಜೀವದ ಕೀಲವನರಿದು ಜನನ ಮರಣಂಗಳಾಯಾಸವಳಿದು ಅಂಗಲಿಂಗದೊಳಗೇಕಾರ್ಥವ ಮಾಡುವ ಭೇದವೆಂತೆಂದಡೆ : ಪಂಚಭೂತಂಗಳ ಪೂರ್ವಾಶ್ರಯವನಳಿದು ಪಂಚಕರಣಂಗಳ ಹಂಚುಹರಿಮಾಡಿ, ಕರ್ಮಬುದ್ಧೀಂದ್ರಿಯಂಗಳ ಮರ್ದಿಸಿ, ದಶವಾಯುಗಳ ಹಸಗೆಡಿಸಿ ಕರಣಚತುಷ್ಟಯಂಗಳ ಕಾಲಮುರಿದು ಪಂಚವಿಂಶತಿ ತತ್ತ್ವಂಗಳ ವಂಚನೆಯನಳಿದು ಹತ್ತುನಾಡಿಗಳ ವ್ಯಕ್ತೀಕರಿಸಿ ಅಷ್ಟತನು ಅಷ್ಟಾತ್ಮಂಗಳ ನಷ್ಟಮಾಡಿ ಅಂತರಂಗದ ಅಷ್ಟಮದಂಗಳ ಸಂತರಿಸಿ, ಬಹಿರಂಗದ ಅಷ್ಟಮಂದಗಳ ಬಾಯಟೊಣೆದು, ಅಷ್ಟಮೂರ್ತಿಮದಂಗಳ ಹಿಟ್ಟುಗುಟ್ಟಿ ಸಪ್ತಧಾತು ಸಪ್ತವ್ಯಸನಂಗಳ ಸಣ್ಣಿಸಿ ಷಡೂರ್ಮೆ ಷಡ್‍ವರ್ಗಂಗಳ ಕೆಡೆಮೆಟ್ಟಿ ಷಡ್‍ಭ್ರಮೆ ಷಡ್‍ಭಾವವಿಕಾರಂಗಳ ಗಂಟಸಡಲಿಸಿ, ಪಂಚಕೋಶ ಪಂಚಕ್ಲೇಶಂಗಳ ಪರಿಹರಿಸಿ ಅಂಗಚತುಷ್ಟಯಂಗಳ ಶೃಂಗಾರವಳಿದು ಗುಣತ್ರಯಂಗಳ ಗೂಡಮುಚ್ಚಿ ಅಹಂಕಾರತ್ರಯಂಗಳ ಶಂಕೆಗೊಳಗುಮಾಡಿ ತಾಪತ್ರಯಂಗಳ ತಲ್ಣಣಗೊಳಿಸಿ ತನುತ್ರಯಂಗಳ ತರಹರಮಾಡಿ ಜೀವತ್ರಯಂಗಳ ಜೀರ್ಣೀಕರಿಸಿ, ಆತ್ಮತ್ರಯಂಗಳ ಧಾತುಗೆಡಿಸಿ, ಅವಸ್ಥಾತ್ರಯಂಗಳ ಅವಗುಣವಳಿದು, ತ್ರಿದೋಷಂಗಳ ಪಲ್ಲಟಗೊಳಿಸಿ, ಭಾವತ್ರಯಂಗಳ ಬಣ್ಣಗೆಡಿಸಿ , ದುರ್ಭಾವತ್ರಯಂಗಳ ದೂರಮಾಡಿ, ಮನತ್ರಯಂಗಳ ಮರ್ದನಮಾಡಿ, ತ್ರಿಕರಣಂಗಳ ಛಿದ್ರಗೊಳಿಸಿ, ಪಂಚಾಗ್ನಿಗಳ ಸಂಚಲವನತಿಗಳೆದು, ಇಂತೀ ಅಂಗ ಪ್ರಕೃತಿಗುಣಂಗಳೆಲ್ಲ ನಷ್ಟವಾಗಿ ಸರ್ವಾಂಗದಲ್ಲಿ ಸರ್ವಾಚಾರ ನೆಲೆಗೊಂಡು ಬಹಿರಂಗದ ಮೇಲಿದ್ದ ಇಷ್ಟಲಿಂಗದಲ್ಲಿ ನೈಷಿ*ಕಭಾವಂಬುಗೊಂಡು, ಅನಿಮಿಷದೃಷ್ಟಿ ಅಚಲಿತವಾಗಿ ಭಾವಬಲಿದಿರಲು, ಆ ಲಿಂಗವು ಅಂತರಂಗಕ್ಕೆ ವೇಧಿಸಿ ಪ್ರಾಣಲಿಂಗವೆನಿಸಿಕೊಂಡು ಷಡಾಧಾರಚಕ್ರಂಗಳಲ್ಲಿ ಷಡ್‍ವಿಧ ಲಿಂಗವಾಗಿ ನೆಲೆಗೊಂಬುದು. ಆ ಷಡ್‍ವಿಧ ಲಿಂಗಕ್ಕೆ ಷಡಿಂದ್ರಿಯಗಳನೆ ಷಡ್‍ವಿಧಮುಖಂಗಳೆನಿಸಿ, ಆ ಷಡ್‍ವಿಧ ಮುಖಂಗಳಿಗೆ ಷಡ್‍ವಿಧವಿಷಯಂಗಳನೆ ಷಡ್‍ವಿಧ ದ್ರವ್ಯಪದಾರ್ಥವೆನಿಸಿ, ಆ ಪದಾರ್ಥಂಗಳು ಷಡ್‍ವಿಧಲಿಂಗಕ್ಕೆ ಷಡ್‍ವಿಧ ಭಕ್ತಿಯಿಂದೆ ಸಮರ್ಪಿತವಾಗಲು, ಅಂಗವೆಂಬ ಕುರುಹು ಅಡಗಿ ಒಳಹೊರಗೆಲ್ಲ ಮಹಾಘನಲಿಂಗದ ದಿವ್ಯಪ್ರಕಾಶವೆ ತುಂಬಿ ತೊಳಗಿ ಬೆಳಗುತ್ತಿರ್ಪುದು. ಇಂತಪ್ಪ ಘನಲಿಂಗದ ಬೆಳಗನೊಳಗೊಂಡಿರ್ಪ ಚಿದಂಗವೆ ಚಿತ್‍ಪಿಂಡವೆನಿಸಿತ್ತು. ಇಂತಪ್ಪ ಅತಿಸೂಕ್ಷ್ಮವಾದ ಚಿತ್‍ಪಿಂಡದ ವಿಸ್ತಾರವನು ಚಿದ್‍ಬ್ರಹ್ಮಾಂಡದಲ್ಲಿ ವೇಧಿಸಿ ಕಂಡು, ಆ ಚಿದ್‍ಬ್ರಹ್ಮಾಂಡದ ಅತಿಬಾಹುಲ್ಯವನು ಆ ಚಿತ್‍ಪಿಂಡದಲ್ಲಿ ವೇಧಿಸಿ ಕಂಡು, `ಪಿಂಡಬ್ರಹ್ಮಾಂಡಯೋರೈಕ್ಯಂ' ಎಂಬ ಶ್ರುತಿ ಪ್ರಮಾಣದಿಂದ ಆ ಪಿಂಡಬ್ರಹ್ಮಾಂಡಗಳು ಒಂದೇ ಎಂದು ಕಂಡು, ಆ ಪಿಂಡಬ್ರಹ್ಮಾಂಡಂಗಳಿಗೆ ತಾನೇ ಆಧಾರವೆಂದು ತಿಳಿದು ಆ ಪಿಂಡಬ್ರಹ್ಮಾಂಡಗಳ ತನ್ನ ಮನದ ಕೊನೆಯಲ್ಲಿ ಅಡಗಿಸಿ, ಆ ಮನವ ಭಾವದ ಕೊನೆಯಲ್ಲಿ ಅಡಗಿಸಿ, ಆ ಭಾವವ ಜ್ಞಾನದ ಕೊನೆಯಲ್ಲಿ ಅಡಗಿಸಿ, ಆ ಜ್ಞಾನವ ಮಹಾಜ್ಞಾನದಲ್ಲಿ ಅಡಗಿಸಿ, ಆ ಮಹಾಜ್ಞಾನವನು ಪರಾತ್ಪರವಾದ ಪರಿಪೂರ್ಣ ಬ್ರಹ್ಮದಲ್ಲಿ ಅಡಗಿಸಿ, ಆ ಪರಬ್ರಹ್ಮವೆ ತಾನಾದ ಶರಣಂಗೆ ದೇಹಭಾವವಿಲ್ಲ. ಆ ದೇಹಭಾವವಿಲ್ಲವಾಗಿ ಜೀವಭಾವವಿಲ್ಲ. ಆ ಜೀವಭಾವವಿಲ್ಲವಾಗಿ ಫಲಪದಂಗಳ ಹಂಗಿಲ್ಲ. ಫಲಪದದ ಹಂಗಿಲ್ಲವಾಗಿ ಭವಬಂಧನಂಗಳು ಮುನ್ನವೆ ಇಲ್ಲ. ಭವಬಂಧನಂಗಳು ಇಲ್ಲವಾಗಿ, ಆ ಶರಣನು ತಾನು ಎಂತಿರ್ದಂತೆ ಪರಬ್ರಹ್ಮವೆ ಆಗಿ ಆತನ ಹೃದಯಾಕಾಶವು ಬಚ್ಚಬರಿಯ ಬಯಲನೈದಿಪ್ಪುದು. ಇದು ಕಾರಣ, ಆ ಶರಣನು ದೇಹವಿದ್ದು ಸುಟ್ಟಸರವಿಯಂತೆ ನಿರ್ದೇಹಿಯಾದ ಕಾರಣ ಉಪಮಾತೀತ ವಾಙ್ಮನಕ್ಕಗೋಚರನಾಗಿರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕೋಡಗ ಜೋಗಿನಾಡಿಸುವುದ ಕಂಡೆ. ಹಾವು ಹಾವಾಡಿಗನ ಗಾರುಡವನಿಕ್ಕಿ, ಹೇಳಿಗೆಯ ಬಂಧನದಲ್ಲಿ ಕೂಡಿ ಕಾಡುವುದ ಕಂಡೆ. ಉರಿಗೆಂಡ ತೃಣಕಂಜಿ, ಅಲ್ಲಿಯೆ ಅಡಗಿ ತನ್ನ ಉಷ್ಣವಿಲ್ಲದುದ ಕಂಡೆ. ಇಂತೀ ದೃಷ್ಟವ ಮರೆದು, ಇಷ್ಟವನರಿಯದ ವಿಶ್ವಾಸಹೀನರು, ನಿಃಕಳಂಕ ಮಲ್ಲಿಕಾರ್ಜುನಲಿಂಗವನರಿಯದೆ ಹೋದರು.
--------------
ಮೋಳಿಗೆ ಮಾರಯ್ಯ
ಅರ್ಥದ ಭಕ್ತಿ ಉತ್ತರಿಸಿ ಹೋಯಿತ್ತು, ಅರಸು ಭಕ್ತಿ `ನಿಲ್ಲು, ಮಾಣು' ಎಂದಲ್ಲಿ ಹೋಯಿತ್ತು, ಆಚರಣೆಯ ಭಕ್ತಿ ಅಡಗಿ ಹೋಯಿತ್ತು, ಕೂಡಲಚೆನ್ನಸಂಗಮದೇವರಲ್ಲಿ ಕೀಟಕರು ಹೆಚ್ಚಿ, ಪುರಾತರು ಅಡಗಿಹೋದರು
--------------
ಚನ್ನಬಸವಣ್ಣ
ಆಸ್ತಿ ಜಾಯತೇ ವಿಪರಿಣಮತೇ ವಿವರ್ಧತೇ ಅಪಕ್ಷೀಯತೇ ವಿನಶೃತಿ ಎಂಬ ಷಡ್ಭಾವವಿಕಾರಂಗಳು ಕೆಡುವುದಕ್ಕೆ ವಿವರವೆಂತೆಂದಡೆ; ಶ್ರೀಗುರುವಿನ ಕೃಪಾಗರ್ಭದ ಮಧ್ಯದಲ್ಲಿರ್ದವ ನಾನಹುದೆಂದರಿದಾಗವೆ ಅಸ್ತಿ ಎಂಬ ವಿಕಾರ ಕೆಟ್ಟಿತ್ತು. ಗುರುಕರದಲ್ಲಿ ಜನಿಸಿದೆನಾಗಿ ನಾ ಮಾಯಾಯೋನಿಜನವಲ್ಲವೆಂದು ಅರಿದಾಗವೆ ಜಾಯತೇ ಎಂಬ ವಿಕಾರ ಕೆಟ್ಟಿತ್ತು. ಗುರುವಿನ ಸದ್ಭಾವಜಾತಲಿಂಗವನಂಗದಲ್ಲಿ ಧರಿಸಿ ಪರಮಪರಿಣಾಮದಲ್ಲಿ ಪರಿಣಮಿಸುತ್ತಿರ್ದ ಕಾರಣ ವಿಪರಿಣಮತೇ ಎಂಬ ವಿಕಾರ ಕೆಟ್ಟಿತ್ತು. ಗುರುವಿನ ಆಚಾರ ಜ್ಞಾನಮಾರ್ಗದಲ್ಲಿ ಆಚರಿಸಿ ಬೆಳೆವುತ್ತಿದ್ದ ಕಾರಣ ವಿವರ್ಧತೇ ಎಂಬ ವಿಕಾರ ಕೆಟ್ಟಿತ್ತು. ದೇಹೇಂದ್ರಿಯಾದಿಗಳೆಲ್ಲ ಲಿಂಗದಲ್ಲಿ ಅಡಗಿ ಶಿಥಿಲವಾಗಲು ಅಪಕ್ಷೀಯತೇ ಎಂಬ ವಿಕಾರ ಕೆಟ್ಟಿತ್ತು. ಲಿಂಗಾಂಗದ ಐಕ್ಯವನರಿದು ಲಿಂಗದಲ್ಲಿ ಲೀಯವಾಗಲು ವಿನಶ್ಯತಿ ಎಂಬ ವಿಕಾರ ಕೆಟ್ಟಿತ್ತು. ಇಂತೀ `ಲಿಂಗಸಂಗದಿಂದ ಷಡ್ಭಾವವಿಕಾರಂಗಳಳಿದು ನಿಮ್ಮವಿಕಾರವೆಡೆಗೊಂಡಿತ್ತು' ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮಭಕ್ತಂಗೆ.
--------------
ಸ್ವತಂತ್ರ ಸಿದ್ಧಲಿಂಗ
ಧರೆಯ ಮೇಲಣ ಜನಿತಕ್ಕೆ ಉರಗನ ಅಧರಪಾನ. ನಖಕಂಕಣ (ನ ಖ ಕಂ ಕ ಣ ?) ಮುಖ ಮೂವತ್ತೊಂದು ಶಿರವ ನುಂಗಿತ್ತು ನೋಡಾ ! ಉತ್ತರಾಪಥದ ಕೊಡಗೂಸು ಈಶಾನ್ಯದ ಒಡಲೊಳಗೆ ಅಡಗಿ, ಸಾಕಾರದ ಸಂಗವ ನುಂಗಿದ ಭಾಷೆಯನರಿಯದ ಮುಗ್ಧೆ ! ಅರಿವಿನೊಳಗಣ ಮರಹು, ಮರಹಿನೊಳಗಣ ಅರಿವು ಗುಹೇಶ್ವರಲಿಂಗವು ತ್ರಿಕಾಲ ಪೂಜೆಯ ನುಂಗಿತ್ತು.
--------------
ಅಲ್ಲಮಪ್ರಭುದೇವರು
ಲಿಂಗೋದ್ಭವ ಐವತ್ತೆರಡು ಅಕ್ಷರಂಗಳಲ್ಲಿ ವರ್ತುಳ ಗೋಮುಖ ಗೋಳಕಾಕಾರಕ್ಕೆ ಸಂಬಂಧಿಸುವಲ್ಲಿ ಅಕಾರ ವರ್ತುಳಾಕಾರಕ್ಕೆ, ಉಕಾರ ಗೋಮುಖಕ್ಕೆ ಮಕಾರ ಗೋಳಕಾಕಾರಕ್ಕೆ. ಇಂತೀ ಆದಿ ಆಧಾರ ಆತ್ಮಬೀಜ ಓಂಕಾರದಿಂದ ಉದ್ಭವವಾದ ಅಕ್ಷರಾತ್ಮಕ ವಸ್ತುವನರಿತು ಬ್ರಹ್ಮ ವರ್ತುಲದಲ್ಲಿ ಅಡಗಿ, ವಿಷ್ಣು ಗೋಮುಖದಲ್ಲಿ ನಿಂದು ರುದ್ರ ಗೋಳಕಾಕಾರಕ್ಕೆ ಸಂಬಂಧಿತನಾಗಿ ಉತ್ಪತ್ಯ ಸ್ಥಿತಿ ಲಯಂಗಳ ಲಕ್ಷಿಸುತ್ತ ಜಗಹಿತಾರ್ಥವಾಗಿ ಸ್ವಯಂಭು ಉಮಾಪತಿಯಾದೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಾದೆಹೆನೆಂದು.
--------------
ಪ್ರಸಾದಿ ಭೋಗಣ್ಣ
ಸಿರಿಯ ಭೂಮಿಯ ಮಧ್ಯದಲ್ಲಿ ಉರಿಯ ಮಡು ಹುಟ್ಟಿತ್ತು. ಆ ಮಡುವಿನ ಮಧ್ಯದಲ್ಲಿ ಐದು ಸರಗೂಡಿದ ಬಾವಿ. ಆ ಬಾವಿಯೊಳಗೆ ಮೂರು ಮುಖದ ಹುಲಿ ಹುಟ್ಟಿತ್ತು. ಒಂದು ಕೊಂದು ತಿಂಬುದು, ಒಂದು ಕೊಲ್ಲದೆ ತಿಂಬುದು, ಒಂದು ಎಲ್ಲರ ನೋಡಿ ತಿಂಬುದು, ಅಲ್ಲಾ ಎಂಬುದು, ಹುಲಿಯ ಬಣ್ಣ ಮೊದಲು ಕಪ್ಪು, ನಡುವೆ ಭಾಸುರ, ತುದಿಯಲ್ಲಿ ಬಿಳಿದು. ಹಗೆವಣ್ಣ ಸಹಿತಾಗಿ ಹುಟ್ಟಿದ ಹುಲಿ, ಉರಿಯ ಮಡುವನೀಂಟಿ, ಸರಬಾವಿಯ ಕುಡಿದು, ತಿಂಬವೆರಡು ಮುಖ ತಿನ್ನದ ಮುಖದಲ್ಲಿ ಅಡಗಿ, ಕಡೆ ಕಪ್ಪು, ನಡುವಣ ಭಾಸುರ, ತುದಿಯ ಬಿಳುಪಿನಲ್ಲಿ ಅಡಗಿ ಒಡಗೂಡಿತ್ತು. ಅದರ ತೊಡಿಗೆಯ ಕೇಳಿಹರೆಂದಂಜಿ, ಅಡಗಿದೆಯಾ, ಅಲೇಖನಾದ ಶೂನ್ಯ ಕಲ್ಲಿನೊಳಗಾಗಿ ?
--------------
ವಚನಭಂಡಾರಿ ಶಾಂತರಸ
ವಿಶ್ವಮಯ ರೂಪು ನೀನಾಗಿ, ಅರಿವ ಆತ್ಮ ಒಬ್ಬನಲ್ಲಿಯೇ ಅಡಗಿದೆಯಲ್ಲಾ! ಬೀಗದ ಎಸಳು ಹಲವಾದಡೇನು, ಒಂದು ದ್ವಾರದಲ್ಲಿ ಅಡಗಿ ಓತಂತೆ ಇಪ್ಪ ತೆರ ನೀನಾಗಿ, ಭಕ್ತರ ಚಿತ್ತದಲ್ಲಿ ನಿಶ್ಚಯನಾದೆ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆ.
--------------
ಶಿವಲೆಂಕ ಮಂಚಣ್ಣ
ಇನ್ನಷ್ಟು ... -->