ಅಥವಾ

ಒಟ್ಟು 105 ಕಡೆಗಳಲ್ಲಿ , 12 ವಚನಕಾರರು , 102 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ನಿರಂಜನಾತೀತಪ್ರಣವ ಮೊದಲಾಗಿ ಬ್ರಹ್ಮ ಕಡೆಯಾಗಿ ಸೃಷ್ಟಿಮಾರ್ಗವ ಹೇಳುತ್ತಿದ್ದೆನು. ಅದೆಂತೆಂದೊಡೆ : ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯ ನೆನಹುಮಾತ್ರದಲ್ಲಿಯೇ ನಿರಂಜನಾತೀತಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಾತೀತಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಪ್ರಣವದ ನೆನಹುಮಾತ್ರದಲ್ಲಿಯೇ ಅವಾಚ್ಯಪ್ರಣವ ಉತ್ಪತ್ತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ಕಲಾಪ್ರಣವ ಉತ್ಪತ್ತ್ಯವಾಯಿತ್ತು. ಆ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಆದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಆದಿಪ್ರಣವದ ನೆನಹುಮಾತ್ರದಲ್ಲಿಯೇ ಆದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ನಿರಂಜನಾತೀತಚಿಂತಾಯಾಂ ಅನಾದ್ಯೋಂಕಾರ ಸಂಭವಃ | ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯೋಂಕಾರ ಚಿಂತಾಯಾಂ ಕಲಾ ನಾಮ ಸಮುದ್ಭವಃ | ಕಲಾಪ್ರಣವಚಿಂತಾಯಾಂ ಅನಾದಿಪ್ರಣವೋ ಭವೇತ್ || ಅನಾದಿಪ್ರಣವ ಚಿಂತಾಯಾಂ ಆದಿ ಮಾತ್ರಸ್ಯ ಸಂಭವಃ | ಆದಿ ಮಾತ್ರಸ್ಯ ಚಿಂತಾಯಾಂ ಆದಿ ಪ್ರಣವಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದ : ``ಓಂ ನಿರಂಜನಾತೀತಪ್ರಣವಾಖ್ಯಾ ನಿರಂಜನ ಪ್ರಣವ ಜಾಯತೇ | ನಿರಂಜನಪ್ರಣವ ತದಸ್ಯ ಅವಾಚ್ಯೋಂಕಾರ ಜಾಯತೇ | ಅವಾಚ್ಯೋಂಕಾರ ಚಿಂತಾಖ್ಯಾಂ ಕಲಾಪ್ರಣವಸ್ಯ ಜಾಯತೇ | ಕಲಾಪ್ರಣವಸ್ಯ ತದಸ್ಯ ಅನಾದ್ಯೋಂಕಾರ ಜಾಯತೇ | ಅನಾದ್ಯೋಂಕಾರಚಿಂತಾಯಾಂ ಅನಾದಿತ್ರ್ಯಕ್ಷರೋ ಜಾಯತೇ | ಅನಾದ್ಯರಕ್ಷರ ಚಿಂತಾಯಾಂ ಆದಿಪ್ರಣವ ಜಾಯತೇ | ಆದಿ ಪ್ರಣವಚಿಂತಾಯಾಂ ಅಕ್ಷರತ್ರಯಂ ಜಾಯತೇ ||'' ಇಂತೆಂದು ಶ್ರುತಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪಂಚಮಹಾಪಾತಕಂಗಳ ಮಾಡಿದವನಾದಡಾಗಲಿ, ಉಪಪಾತಕಂಗಳ ಕೋಟ್ಯನುಕೋಟಿ ಮಾಡಿದವನಾದಡಾಗಲಿ, ಹತ್ತುಸಾವಿರ ಬ್ರಹ್ಮಹತ್ಯವ ಮಾಡಿದವನಾದಡಾಗಲಿ, ಒಬ್ಬ ಶಿವಭಕ್ತನ ದರ್ಶನವಾದಲ್ಲಿ ಆ ಪಾತಕಂಗಳು ಬೆಂದು ಭಸ್ಮವಾಗಿ ಹೋಗುವವು ನೋಡಾ ! ಅದೆಂತೆಂದೊಡೆ :ಲಿಂಗಪುರಾಣೇ- ``ಉಪಪಾತಕ ಕೋಟೀಶ್ಚ ಬ್ರಹ್ಮಹತ್ಯಾಯುತಾನಿ ಚ | ದಹತ್ಯಶೇಷಪಾಪಾನಿ ಶಿವಭಕ್ತಸ್ಯ ದರ್ಶನಂ ||'' ಎಂದುದಾಗಿ, ಶಿವಭಕ್ತನೇ ಶಿವನು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕೇಳಿರಯ್ಯಾ ಮಾನವರೆ, ಗಂಡ ಹೆಂಡಿರ ಮನಸ್ಸು ಒಂದಾಗಿದ್ದರೆ ದೇವರ ಮುಂದೆ ನಂದಾದೀವಿಗೆಯ ಮುಡಿಸಿದ ಹಾಗೆ. ಗಂಡ ಹೆಂಡಿರ ಮನಸ್ಸು ಬೇರಾದರೆ ಗಂಜಳದೊಳಗೆ ಹಂದಿ ಹೊರಳಾಡಿ ಒಂದರ ಮೇಲೆ ಒಂದು ಬಂದು ಮೂಸಿದ ಹಾಗೆ. ಛೇ, ಛೇ, ಇದು ಭಕ್ತಿಯಲ್ಲಣ್ಣ. ಅದೇನು ಕಾರಣವೆಂದೊಡೆ, ಕಾಶಿಗೆ ಹೋದೆನೆಂಬವರು ಹೇಸಿ ತೊತ್ತಿನ ಮಕ್ಕಳಯ್ಯ. ಮೈಲಾರಕ್ಕೆ ಹೋದೆನೆಂಬವರು ಮಾದಗಿತ್ತಿಯ ಮಕ್ಕಳಯ್ಯ. ಪರ್ವತಕ್ಕೆ ಹೋದೆನೆಂಬವರು ಹಾದರಗಿತ್ತಿಯ ಮಕ್ಕಳಯ್ಯ. ರಾಚೋಟಿಗೆ ಹೋದೆನೆಂಬವರು ಲಜ್ಜೆಮಾರಿ ತೊತ್ತಿನ ಮಕ್ಕಳಯ್ಯ. ಛೇ, ಛೇ, ಇದು ಭಕ್ತಿಯಲ್ಲವಯ್ಯ. ಅದೆಂತೆಂದೊಡೆ; ಪರಬ್ರಹ್ಮ ಮೂರುತಿಯಾದ ಪರಶಿವನೆ ಗುರುನಾಮದಿಂ ಬಂದು ಇಷ್ಟಲಿಂಗವ ಧರಿಸಿ, ಪಂಚಾಕ್ಷರಿಯ ಬೋದ್ಥಿಸಿದ ಮೇಲೆ ಆ ಭಕ್ತನ ಕಾಯವೇ ಕೈಲಾಸ. ಅವನ ಒಡಲೆ ಸೇತುಬಂಧ ರಾಮೇಶ್ವರ. ಅವನ ಶಿರವೆ ಶ್ರೀಶೈಲ. ಆತ ಮಾಡುವ ಆಚಾರವೆ ಪಂಚಪರುಷ. ಇದು ತಿಳಿಯದೆ ಶಾಸ್ತ್ರದಿಂದ ಕೇಳಿ, ಅರಿಯದೆ ಮಂದಬುದ್ಧಿಯಿಂದ ಪರ್ವತಕ್ಕೆ ಹೋಗಿ ಪಾತಾಳಗಂಗೆಯಲ್ಲಿ ಮುಳುಮುಳುಗೆದ್ದರೆ, ಛೇ, ಛೇ, ನಿನ್ನ ದೇಹದ ಮೇಲಣ ಮಣ್ಣು ಹೋಯಿತಲ್ಲದೆ, ನಿನ್ನ ಪಾಪವು ಹೋಗಲಿಲ್ಲವು. ಅಲ್ಲಿಂದ ಕಡೆಗೆ ಬಂದು, ಕೆಟ್ಟ ಕತ್ತಿಯ ಕೊಂಡು ಕೆರವಿನಟ್ಟೆಯ ಮೇಲೆ ಮಸೆದು ಮಸ್ತಕವ ತೋಯಿಸಿ ತಲೆಯ ಬೋಳಿಸಿಕೊಂಡರೆ, ನಿನ್ನ ತಲೆಯ ತಿಂಡಿ ಹೋಯಿತಲ್ಲದೆ ನಿನ್ನ ಪಾಪವು ಬಿಡಲಿಲ್ಲವಯ್ಯ ! ಅಲ್ಲಿಂದ ಕೋಲು ಬುಟ್ಟಿಯ ತೆಗೆದುಕೊಂಡು ಬರುವಂತಹ ದಿಂಡೆತೊತ್ತಿನ ಮಕ್ಕಳ ಕಣ್ಣಲಿ ಕಂಡು, ಪಡಿಹಾರಿ ಉತ್ತಣ್ಣನ ಎಡದ ಪಾದ ಎಕ್ಕಡದಿಂದೆ ಪಟಪಟನೆ ಹೊಡೆ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಇನ್ನು ಆ ಆದಿ ಉಕಾರ ಪ್ರಣವ, ಆದಿ ಮಕಾರ ಪ್ರಣವ, ಆದಿ ಅಕಾರಪ್ರಣವ- ಈ ಮೂರು ಪ್ರಣವಂಗಳು ಸಂಯುಕ್ತವಾಗಿ, ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರ ಉತ್ಪತ್ಯವಾಯಿತ್ತು. ಅದೆಂತೆಂದೊಡೆ : ಆ ಆದಿ ಉಕಾರಪ್ರಣವ, ಆದಿ ಮಕಾರಪ್ರಣವ, ಆದಿ ಅಕಾರಪ್ರಣವ-ಈ ಮೂರು ಬೀಜಾಕ್ಷರ. ಆದಿ ಉಕಾರಪ್ರಣವವೇ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಆದಿ ಕಲಾಪ್ರಣವ. ಆದಿ ಅಕಾರಪ್ರಣವವೇ ಆದಿ ನಾದಪ್ರಣವ. ಆದಿ ಉಕಾರಪ್ರಣವವೇ ಸ್ವಯಂಭುಲಿಂಗ. ಆದಿ ಮಕಾರಪ್ರಣವವೇ ಶಿವತತ್ವ. ಆದಿ ಅಕಾರಪ್ರಣವವೇ ಗುರುತತ್ವ. ಇದಕ್ಕೆ ಈಶ್ವರ ಉವಾಚ : ``ಅಕಾರಂ ಗುರುತತ್ವಂ ಚ ಉಕಾರಂ ಲಿಂಗತತ್ವಕಂ | ಮಕಾರಂ ಶಿವತತ್ವಂ ಚ ಇತಿ ಭೇದೋ ವರಾನನೇ || '' ಇಂತೆಂದುದಾಗಿ, ಆ ಆದಿ ಉಕಾರಪ್ರಣವಕ್ಕೆ ಆದಿ ಬಿಂದುಪ್ರಣವವೇ ಆಧಾರ. ಆದಿ ಮಕಾರಪ್ರಣವಕ್ಕೆ ಆದಿ ಕಲಾಪ್ರಣವವೇ ಆಧಾರ. ಆದಿ ಅಕಾರಪ್ರಣವಕ್ಕೆ ಆದಿ ನಾದಪ್ರಣವವೇ ಆಧಾರ. ಆ ಆದಿ ಬಿಂದುಪ್ರಣವ, ಆದಿ ಕಲಾಪ್ರಣವ, ಆದಿ ನಾದಪ್ರಣವಕ್ಕೆ ಆ ಆದಿ ಪ್ರಕೃತಿಪ್ರಣವಕ್ಕೆ ಆ ಆದಿ ಪ್ರಾಣಮಾತ್ರೆಪ್ರಣವವೆ ಆಧಾರ. ಆ ಪ್ರಾಣಮಾತ್ರೆಪ್ರಣವಕ್ಕೆ ಅಖಂಡ ಮಹಾಜ್ಯೋತಿರ್ಮಯ ಲಿಂಗವೇ ಆಧಾರ. ಉ ಎಂಬ ಆದಿಬಿಂದುಪ್ರಣವವು, ಮ ಎಂಬ ಆದಿಕಲಾಪ್ರಣವವು [ಅಎಂಬ ಆದಿ ನಾದಪ್ರಣವವು] ಸಂಯುಕ್ತವಾಗಿ ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ || ಗುರೂಣಾ ದತ್ತಲಿಂಗಂಚ ನಾಸ್ತಿ ದೈವಂ ಮಹೀತಲೇ' ಇತಿ ಭಾವಾನುಸಂಧಾನೋ ಲಿಂಗಾಚಾರಸ್ಸಮುಚ್ಯತೇ || ಧರ್ಮಾರ್ಜಿತವಿತ್ತೇನ ತೃಪ್ತಿಶ್ಚ ಕ್ರಿಯತೇ ಸದಾ ಗುರುಜಂಗಮಲಿಂಗಾನಾಂ ಸದಾಚಾರಃ ಪ್ರಕೀರ್ತಿತಃ || ಅವಿಚಾರೇಷು ಭಕ್ತೇಷು ಜಾತಿಧರ್ಮಾದಿ ಸೂತಕಾನ್ ೀ ತದ್ಗøಹೇಷ್ವನ್ನಪಾನಾದಿ ಭೋಜನಂ ಕ್ರಿಯತೇ ಸದಾ || ತಚ್ಫಿವಾಚಾರಮಿತ್ಯಾಹುರ್ವೀರಶೈವಪರಾಯಣಾ ಶಿವಭಕ್ತಜನಾ ಸರ್ವೇ ವರಿಷ್ಠಾಃ ಪೃಥಿವೀತಲೇ || ತೇಷಾಂ ಭೃತ್ಯೋಹಮಿತ್ಯೇತದ್ಭೃತ್ಯಾಚಾರಸ್ಸ ಉಚ್ಯತೇ ೀ ಗುರುಲಿಂಗ ಜಂಗಮಶ್ಚೈವ ಪಾದತೀರ್ಥಃ ಪ್ರಸಾದತಃ ೀ ಇತಿ ಪಂಚಸ್ವರೂಪೋ[s]ಯಹಂ ಗಣಾಚಾರಃ ಪ್ರಕೀರ್ತಿತಃ ||ú ಎಂದುದಾಗಿ, ಇಂತಪ್ಪ ಶಿವಾಚಾರದ ಆಚಾರವನರಿಯದೆ ನಾ ಶಿವಭಕ್ತ ನಾ ಶಿವಭಕ್ತೆ ನಾ ಶಿವಾಚಾರಿ ಎಂದು ಕೊಂಬ ಶೀಲವಂತರ ನೋಡಿ ಎನ್ನ ಮನ ನಾಚಿ ನಿಮ್ಮಡಿಮುಖವಾಯಿತ್ತಯ್ಯ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಯ್ಯ.
--------------
ಅಕ್ಕಮಹಾದೇವಿ
ಇನ್ನು ಪ್ರಾಣಾಯಾಮದ ಲಕ್ಷಣವೆಂತೆಂದೊಡೆ : ಪ್ರಾಕೃತಪ್ರಾಣಾಯಾಮವೆಂದು, ವೈಕೃತಪ್ರಾಣಾಯಾಮವೆಂದು, ಆ ಎರಡರಿಂ ಪೊರತಾದ ಕೇವಲ ಕುಂಭಕವೆಂದು, ಮೂರು ಪ್ರಕಾರವಾಗಿರ್ಪುದದೆಂತೆನೆ : ದಿನವೊಂದಕ್ಕೆ ಇಪ್ಪತ್ತೊಂದು ಸಾವಿರದ ಆರುನೂರು ಹಂಸ ಹಂಸವೆಂದುಚ್ಚರಿಸುವ ಅಹಂಕಾರಾತ್ಮಕವಾದ ಜೀವಜಪವೇ ಪ್ರಾಕೃತ ಪ್ರಾಣಾಯಾಮವೆನಿಸುವುದು. ಮತ್ತಾ ಜೀವಜಪವನು ಗೂರೂಪದೇಶದಿಂದೆ ಲೋಪವಮಾಡಿ ಸೋಹಂ ಸೋಹಂ ಎಂಬ ಮಂತ್ರಸಂಸ್ಕಾರದಿಂದುಚ್ಚರಿಸುವುದೆ ವೈಕೃತಪ್ರಾಣಾಯಾಮವೆನಿಸುವುದು. ಆ ವೈಕೃತಪ್ರಾಣಾಯಾಮವೆ ಇನ್ನೊಂದು ಪ್ರಕಾರವಾಗಿ ಪೇಳಲ್ಪಡುವುದದೆಂತೆನೆ : ಕನಿಷ್ಠೆ ಅನಾಮಿಕೆಗಳಿಂದೆ ಈಡನಾಡಿಯಂ ಬಲಿದು, ಪಿಂಗಳನಾಡಿಯಿಂದೆ ದೇಹಾಂತರ್ಗತ ವಾಯುಮಂ ಅಕಾರೋಚ್ಚರಣದಿಂ ಪನ್ನೆರಡು ಮಾತ್ರೆ ರಚಿಸಿ, ಮತ್ತೆ ಪಿಂಗಳನಾಡಿಯಂ ಅಂಗುಷ್ಠದಿಂ ಬಲಿದು, ಈಡಾನಾಡಿಯಿಂದೆ ಪನ್ನೆರಡು ಮಾತ್ರೆ ಉಕಾರೋಚ್ಚರಣದಿಂ ಪೂರಿಸಿ, ನಾಬ್ಥಿ ಹೃದಯ ಕಂಠವೆಂಬ ತ್ರಿಸ್ಥಾನದೊಳೊಂದರಲ್ಲಿ ಪನ್ನೆರಡು ಮಾತ್ರೆ ಮಕಾರೋಚ್ಚರಣದಿಂ ತುಂಬಿಪುದೆ ಕನಿಷ್ಠಪ್ರಾಣಾಯಾಮವೆನಿಸುವುದು. ಅದೆಂತೆಂದೊಡೆ : ಶೀಘ್ರವಲ್ಲದೆ ವಿಳಂಬವಲ್ಲದೆ ಜಾನುಪ್ರದಕ್ಷಿಣಮಂ ಮಾಡಿ, ಅಂಗುಲಿಸ್ಫೋಟನಮಂ ಮಾಡಿದರೆ ಒಂದು ಮಾತ್ರೆ ಎನಿಸುವುದು. ಇಂತಹ ಮಾತ್ರೆ ಪನ್ನೆರಡು ಆದರೆ ಕನಿಷ್ಠವೆನಿಸುವುದು. ಮತ್ತಾ ಮಾತ್ರೆ ಇಪ್ಪತ್ತು ನಾಲ್ಕಾದರೆ ಮಧ್ಯಮವೆನಿಸುವುದು. ಬಳಿಕಾ ಮಾತ್ರೆ ಮೂವತ್ತಾರಾದರೆ ಉತ್ತಮವೆನಿಸುವುದು. ಇಂತೀ ಮೂವತ್ತಾರು ಮಾತ್ರೆಗಳು ಮಂತ್ರ ಸ್ಮರಣೆ ಧ್ಯಾನ ಸಹಿತಮಾಗಿ ಮಾಳ್ಪುದೆ ಪ್ರಾಣಾಯಾಮದಲ್ಲಿ ಉತ್ತಮ ಪ್ರಾಣಾಯಾಮವೆನಿಸುವುದು. ಇನ್ನು ಕೇವಲ ಕುಂಭಕವೆಂತೆನೆ : ವಾಮಭಾಗದ ಈಡಾನಾಡಿಯೇ ಚಂದ್ರನಾಡಿಯೆಂದು ಯಮುನಾನದಿ ಎಂದು ಪೇಳಲ್ಪಡುವುದು. ದಕ್ಷಿಣಭಾಗದ ಪಿಂಗಳನಾಡಿಯೇ ಸೂರ್ಯನಾಡಿಯೆಂದು ಗಂಗಾನದಿಯೆಂದು ಪೇಳಲ್ಪಡುವುದು. ಸುಷುಮ್ನೆಯೆಂಬ ಮಧ್ಯನಾಡಿಯೇ ಅಗ್ನಿಯೆಂದು ಸರಸ್ವತಿನದಿಯೆಂದು ಪೇಳಲ್ಪಡುವುದಾಗಿ, ಆ ನದಿತ್ರಯಂಗಳ ಸಂಬಂಧದಿಂ ತ್ರಿವೇಣಿಯೆಂಬ ಯೋಗಸ್ಥಲಕೆ ತ್ರಿಕೂಟವೆಂದು, ಮಧ್ಯಹೃದಯವೆಂದು, ಕಾಶಿಕ್ಷೇತ್ರವೆಂದು, ಕೂರ್ಚವೆಂದು ಆಜ್ಞಾಚಕ್ರವೆಂದು, ಪರ್ಯಾಯ ನಾಮಂಗಳನುಳ್ಳ ಶಿವಧ್ಯಾನಕ್ಕೆ ರಹಸ್ಯವಾದ ಭ್ರೂಮಧ್ಯಸ್ಥಾನದಲ್ಲಿ ಮನೋಮಾರುತಂಗಳನೈದಿಸಿ ಯೋಗಮಂ ಸಾದ್ಥಿಸಲ್ತಕ್ಕುದೇ ಪ್ರಾಣಾಯಾಮಾಭ್ಯಾಸ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಂದಿನ ಶರಣರಿಗೆ ಇಂದಿನವರು ಸರಿಯಲ್ಲವೆಂದು ನುಡಿವ ಸಂದೇಹ ಸೂತಕ ಹೊಲೆಯರ ಮಾತ ಕೇಳಲಾಗದು. ಆ ಪಂಚಮಹಾಪಾತಕರ ಮುಖವ ನೋಡಲಾಗದು. ಅದೆಂತೆಂದೊಡೆ : ತಾ ಮೂಕೊರೆಯನೆಂದರಿಯದೆ ಕನ್ನಡಿಗೆ ಮೂಗಿಲ್ಲೆಂಬಂತೆ. ತಾ ಕುಣಿಯಲಾರದೆ ಅಂಗಳ ಡೊಂಕೆಂಬಂತೆ, ತನ್ನಲ್ಲಿ ನಡೆನುಡಿ ಸಿದ್ಧಾಂತವಿಲ್ಲದೆ ಇತರವ ಹಳಿವ ಅಧಮ ಮಾದಿಗರನೇನೆಂಬೆನಯ್ಯಾ ! ಅಷ್ಟಾವರಣ ಪಂಚಾಚಾರವು ಅಂದೊಂದು ಪರಿ ಇಂದೊಂದು ಪರಿಯೇ ? ಷಟ್‍ಸ್ಥಲ ಸ್ವಾನುಭಾವವು ಅಂದೊಂದು ಪರಿ ಇಂದೊಂದು ಪರಿಯೇ ? ಭಕ್ತಿ ವಿರಕ್ತಿ ಉಪರತಿ ಜ್ಞಾನ ವೈರಾಗ್ಯ ಅಂದೊಂದು ಪರಿ ಇಂದೊಂದು ಪರಿಯೇ ? ನಡೆನುಡಿ ಸಿದ್ಧಾಂತವಾದ ಶರಣರ ಘನವು ಅಂದೊಂದು ಪರಿ ಇಂದೊಂದು ಪರಿಯೇ ? ಇಂತೀ ವಿಚಾರವನರಿಯದೆ ಪರಸಮಯವನಾದಡೂ ಆಗಲಿ, ಶಿವಸಮಯವನಾದಡೂ ಆಗಲಿ, ವರ್ಮಗೆಟ್ಟು ನುಡಿವ ಕರ್ಮಜೀವಿಗಳ ಬಾಯಲ್ಲಿ ಬಾಲ್ವುಳ ಸುರಿಯದೆ ಮಾಣ್ಬುವೆ ಹೇಳಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಪರಿಪಾಕವಾದ ಸಕಲಪದಾರ್ಥಂಗಳ ಹಸ್ತಪರುಷದಿಂದೆ ಶುದ್ಧಸಂಸ್ಕಾರವ ಮಾಡಿದಲ್ಲದೆ ಲಿಂಗಕ್ಕೆ ಅರ್ಪಿಸಲಾಗದು. ಅದೇನು ಕಾರಣವೆಂದಡೆ : ಹಸ್ತಪರುಷವಿಲ್ಲದ ಪದಾರ್ಥ ಉಚ್ಛಿಷ್ಟವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಪಂಚಭೂತ ಪ್ರಕೃತ ಜೀವಮಯವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಜೀರ್ಣಗೋಮಾಂಸವೆನಿಸಿತ್ತು. ಹಸ್ತಪರುಷವಿಲ್ಲದ ಪದಾರ್ಥ ಅಶುದ್ಧ ಕಿಲ್ಬಿಷವೆನಿಸಿತ್ತು. ಅದೆಂತೆಂದೊಡೆ : ``ಜಂಗಮಸ್ಯ ಕರಸ್ಪರ್ಶಾತ್ ಸರ್ವದ್ರವ್ಯಂ ಚ ಶುದ್ಧ್ಯತೇ | ಹಸ್ತಸ್ಪರ್ಶಂ ವಿನಾ ಪಾಕಂ ಕಿಲ್ಬಿಷಂ ಪ್ರೋಚ್ಯತೇ ಬುಧೈಃ ||'' ಎಂದುದಾಗಿ, ಇಂತಪ್ಪ ಪದಾರ್ಥದ ಪೂರ್ವಾಶ್ರಯವನು ಶಿವಮಂತ್ರ ಶ್ರೀ ವಿಭೂತಿಯಿಂದೆ ಕಳೆದು, ಶುದ್ಧಸಂಸ್ಕಾರವೆನಿಸಿ ಶಿವನೇತ್ರದಿಂದೆ ನೋಡಿ, ಶಿವಹಸ್ತದಿಂದೆ ಮುಟ್ಟಿ, ಶಿವಲಿಂಗಕ್ಕೆ ಅರ್ಪಿಸಿದಲ್ಲಿ ಶಿವಪ್ರಸಾದವೆನಿಸಿತ್ತು. ಆ ಶಿವಪ್ರಸಾದವನು ಶಿವಲಿಂಗಸನ್ನಿಹಿತನಾಗಿ ಶಿವಜಿಹ್ವೆಯಲ್ಲಿ ಭೋಗಿಸುವಾತನೆ ಶಿವಶರಣನು. ಆತನೆ ಶಿವಪ್ರಸಾದಿ, ಆತನೆ ಶಿವಾನುಭಾವಿ. ಇಂತಪ್ಪ ಭೇದವನರಿಯದೆ ಮಾಡುವ ಮಾಟವೆಲ್ಲವು ಜೀವಗಡಣದೊಳಗಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪೃಥ್ವಿಯಲ್ಲಿ ಹುಟ್ಟಿದ ಶಿಲೆಯ ತಂದು ಕಲ್ಲುಕುಟಿಕನಿಂದ ಕಟಿಸಿ, ಕರಿಯ ಕೆಸರ ಮೆತ್ತಿ, ಪಾತಕಗುರುವಿನ ಕೈಯಲ್ಲಿ ಪ್ರೇತಲಿಂಗವ ಕೊಟ್ಟು, ಭೂತದೇಹಿಗಳು ಪಡಕೊಂಡು ಅಂಗೈಯಲ್ಲಿ ಆ ಲಿಂಗವ ಕುಳ್ಳಿರಿಸಿ, ಕರುವಿಲ್ಲದ ಎಮ್ಮಿಗೆ ಮುರುವು ಹಾಕಿದಹಾಗೆ, ಅಡವಿಯೊಳಗಣ ಕಾಡುಮರದ ಹಸರು ತಪ್ಪಲು ತಂದು ಆ ಲಿಂಗಕ್ಕೆ ಹಾಕಿದರೆ ಸಾಕೆನ್ನದು ಬೇಕೆನ್ನದು. ಅನ್ನ ನೀರು ತೊರೆದರೆ ಒಂದಗುಳನ್ನ ಸೇವಿಸದು. ಒಂದು ಹನಿ ಉದಕವ ಮುಟ್ಟದು. ಇಂತಪ್ಪ ಲಿಂಗವ ಪೂಜಿಸಿ ಮರಣಕ್ಕೆ ಒಳಗಾಗಿ ಹೋಹಲ್ಲಿ ಪ್ರಾಣಕ್ಕೆ ಲಿಂಗವಾವುದು ಎಂದರಿಯದೆ ತ್ರಿಲೋಕವೆಲ್ಲ ಪ್ರಳಯವಾಗಿ ಹೋಗುತಿರ್ಪುದು ನೋಡಾ. ಅದೇನು ಕಾರಣವೆಂದಡೆ : ತಮ್ಮ ನಿಜವ ಮರೆದ ಕಾರಣ. ಲಿಂಗದ ಗೊತ್ತು ತಮಗಿಲ್ಲ, ತಮ್ಮ ಗೊತ್ತು ಲಿಂಗಕ್ಕಿಲ್ಲ. ಇಂತಪ್ಪ ಆಚಾರವೆಲ್ಲ ಶೈವಮಾರ್ಗವಲ್ಲದೆ ವೀರಶೈವಮಾರ್ಗ ಮುನ್ನವೇ ಅಲ್ಲ. ಅದೆಂತೆಂದೊಡೆ : ಆದಿ ಅನಾದಿಯಿಂದತ್ತತ್ತಲಾದ ನಿಃಕಲಚಿದ್ರೂಪಲಿಂಗವನು ನಿಃಕಲಸದ್ರೂಪಾಚಾರ್ಯನಲ್ಲಿ ಪಡಕೊಂಡು ಆತ್ಮನೆಂಬ ಅಂಗದ ಮೇಲೆ ಅರುಹೆಂಬ ಲಿಂಗವ ಧರಿಸಿಕೊಂಡು, ಸದ್ಭಾವವೆಂಬ ಹಸ್ತದಲ್ಲಿ ಸುಜ್ಞಾನವೆಂಬ ಲಿಂಗವ ಮೂರ್ತಗೊಳಿಸಿ, ಪರಮಾನಂದವೆಂಬ ಜಂಗಮದ ಜಲದಿಂ ಮಜ್ಜನಕ್ಕೆರದು, ಮಹಾಜ್ಞಾನ ಕುಸುಮದಿಂ ಪುಷ್ಪವ ಧರಿಸಿ, ಪೂಜಿಸಬಲ್ಲರೆ ಭವಹಿಂಗುವದು. ಮುಕ್ತಿಯೆಂಬುವದು ಕರತಳಾಮಳಕವಾಗಿ ತೋರುವದು ಎಂದನಯ್ಯ ನಿಮ್ಮ ಶರಣ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಲಿಂಗಾಂಗಸಾಮರಸ್ಯವನರಿಯದೆ ಖಂಡಿತ ಬುದ್ಧಿಯಿಂದೆ ಲಿಂಗವ ಬೇರಿಟ್ಟುಕೊಂಡು ಸಕಲಭೋಗೋಪಭೋಗವನು ಅರ್ಪಿಸಿದೆವೆಂಬ ಭಂಗಗೇಡಿಗಳ ಮಾತ ಕೇಳಲಾಗದು. ಅದೆಂತೆಂದೊಡೆ : ಆ ಲಿಂಗಕ್ಕೆ ಶರಣನಂಗದ ಮಜ್ಜನಸುಖವಲ್ಲದೆ ಬೇರೆ ಮಜ್ಜನಸುಖವುಂಟೆ ? ಆ ಲಿಂಗಕ್ಕೆ ಶರಣನ ಲಲಾಟದ ಶ್ರೀವಿಭೂತಿ ಗಂಧಾಕ್ಷತೆಯ ಶೃಂಗಾರವಲ್ಲದೆ ಬೇರೆ ಶೃಂಗಾರವುಂಟೆ ? ಆ ಲಿಂಗಕ್ಕೆ ಶರಣನ ಕರ್ಣದಲ್ಲಿಯ ಪಂಚಮಹಾವಾದ್ಯದ ಕೇಳಿಕೆಯಲ್ಲದೆ ಬೇರೆ ಕೇಳಿಕೆಯುಂಟೆ ? ಆ ಲಿಂಗಕ್ಕೆ ಶರಣನ ಜಿಹ್ವೆಯಲ್ಲಿಯ ಷಡುರಸಾನ್ನದ ನೈವೇದ್ಯವಲ್ಲದೆ ಬೇರೆ ನೈವೇದ್ಯವುಂಟೆ ? ಆ ಲಿಂಗಕ್ಕೆ ಶರಣನ ಕಂಗಳಲ್ಲಿಯ ನಾನಾ ವಿಚಿತ್ರರೂಪಿನ ವಿನೋದವಲ್ಲದೆ ಬೇರೆ ವಿನೋದವುಂಟೆ ? ಆ ಲಿಂಗಕ್ಕೆ ಶರಣನ ತ್ವಕ್ಕಿನಲ್ಲಿಯ ವಸ್ತ್ರಾಭರಣದ ಅಲಂಕಾರವಲ್ಲದೆ ಬೇರೆ ಅಲಂಕಾರವುಂಟೆ ? ಆ ಲಿಂಗಕ್ಕೆ ಶರಣನ ಘ್ರಾಣದಲ್ಲಿಯ ಸುಗಂಧ ಪರಿಮಳವರ್ಪಿತವಲ್ಲದೆ ಬೇರೆ ಅರ್ಪಿತವುಂಟೆ ? ಆ ಲಿಂಗಕ್ಕೆ ಶರಣನ ಪರಮ ಹೃದಯಕಮಲವೆ ನಿಜವಾಸವಲ್ಲದೆ ಬೇರೆ ನಿಜವಾಸವುಂಟೆ ? ಇಂತೀ ಶರಣಸನ್ನಿಹಿತಲಿಂಗ, ಲಿಂಗಸನ್ನಿಹಿತ ಶರಣನೆಂಬುದನರಿಯದೆ ಅನಂತಕಾಲ ಲಿಂಗವ ಧರಿಸಿಕೊಂಡು ಲಿಂಗಾಂಗಿಯೆನಿಸಿಕೊಂಡಡೇನು ? ಅದು ಪಶುವಿನ ತೊಡೆಯಲ್ಲಿ ಬರೆದ ಮುದ್ರೆಯಂತೆ ಕಂಡೆಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮನವ ನಿಲಿಸಿಹೆನೆಂದು ನುಡಿವ ಅಣ್ಣಗಳ ಕಣ್ಣಗೆಡಿಸಿ ಬಣ್ಣಗುಂದಿಸಿ ಬಂಧನಕ್ಕೊಳಗುಮಾಡಿ ಭವದಲ್ಲಿ ಸೆರೆಹಿಡಿದಿರ್ಪುದು ನೋಡಾ ಮನವು. ಅದೆಂತೆಂದೊಡೆ : ವ್ರತವುಳ್ಳವರ ಭ್ರಾಂತುಗೆಡಿಸಿತ್ತು ನೋಡಾ ಮನವು. ಯತಿಗಳೆಂಬವರ ಮತಿಹೀನರ ಮಾಡಿತ್ತು ನೋಡಾ ಮನವು. ಕಣ್ಣುಮುಚ್ಚಿ ಧ್ಯಾನಿಸುವ ಅಣ್ಣಗಳ ಕಳವಳಗೊಳಿಸಿತ್ತು ನೋಡಾ ಮನವು. ಏಕಾಂತವಾಸಿಗಳೆಲ್ಲರ ಹಿಡಿತಂದು ಲೋಕದ ಮಧ್ಯದೊಳಗಿರಿಸಿ ಕಾಕುತನದಲ್ಲಿ ಕಾಡಿ ಏಡಿಸಿತ್ತು ನೋಡಾ ಮನವು. ಯೋಗಿಗಳೆಂಬವರ ಭೋಗಕ್ಕೊಳಗುಮಾಡಿ ಕಾಡಿತ್ತು ನೋಡಾ ಮನವು. ಇಂತೀ ಮನವ ನಿಲಿಸಿಹೆವೆಂದು ನುಡಿದು ಮತಿಗೆಟ್ಟು ಮಣ್ಣುಮಸಿಯಾಗಿ ಹೋದರು ನೋಡಾ ಹಲಕೆಲಬರು. ಅವರಂತಿರಲಿ. ಇನ್ನು ಮನವ ನಿಲಿಸುವ ಭೇದವ ಹೇಳಿಹೆ ಕೇಳಿರೆ. ಆದಿ-ಅನಾದಿ, ಸುರಾಳ-ನಿರಾಳ, ಶೂನ್ಯ-ನಿಃಶೂನ್ಯ, ಸಾಕಾರ-ನಿರಾಕಾರ, ಸಗುಣ-ನಿರ್ಗುಣ, ಮೂರ್ತಿ-ಅಮೂರ್ತಿ, ಶಿವ-ಶಕ್ತಿ, ನಾಮ-ರೂಪು-ಕ್ರಿಯೆ ಸಕಲ ಬ್ರಹ್ಮಾಂಡ ಸಚರಾಚರಾದಿ ನಾನಾ ತೋರಿಕೆಯೆಲ್ಲವು ತಾನೆ ಎಂದು ತಿಳಿಯಲು ಆ ತಿಳಿದಮಾತ್ರದಲ್ಲಿಯೆ ಮನದ ಕಲ್ಪಿತವಳಿದು ಕಾಯಿ ಹಣ್ಣಾದಂತೆ, ಆ ಮನವು ಮಹಾಘನಪರಬ್ರಹ್ಮವೆ ಅಪ್ಪುದು. ಆ ಮನವು ಮಹಾಘನವಾದಲ್ಲಿಯೆ ಶರಣನ ಹುಟ್ಟು ಹೊಂದು ನಷ್ಟವಾಗಿರ್ಪುದು. ಆ ಶರಣನ ಹುಟ್ಟು ಹೊಂದು ನಷ್ಟವಾದಲ್ಲಿಯೆ ಅಖಂಡೇಶ್ವರನೆಂಬ ಕುರುಹು ನಿರ್ವಯಲು ನೋಡಾ.
--------------
ಷಣ್ಮುಖಸ್ವಾಮಿ
ಆವನೊಬ್ಬನು ಉಪಪಾತಕ ಮಹಾಪಾತಕಂಗಳ ಮಾಡಿ, ಶ್ರೀ ರುದ್ರಾಕ್ಷಿಯ ನಾಮೋಚ್ಚರಣೆಯ ಮಾಡಿದಡೆ ಆ ಪಾತಕಂಗಳು ಪರಿಹಾರವಾಗಿ ಹತ್ತುಸಾವಿರ ಗೋದಾನದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಸ್ವರೂಪವನು ಕಂಗಳು ತುಂಬಿ ನೋಡಿದಡೆ ಶತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮುಟ್ಟಿ ಮುಟ್ಟಿ ಪೂಜಿಸಿದಡೆ ಸಹಸ್ರಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ತತ್ ಸ್ಥಾನಂಗಳಲ್ಲಿ ಭಕ್ತಿಯಿಂದೆ ಧರಿಸಿದಡೆ ಲಕ್ಷಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮಣಿಗಳಿಂದೆ ಜಪವ ಮಾಡಿದಡೆ ಅನಂತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಅದೆಂತೆಂದೊಡೆ : ``ಸಪ್ತಕೋಟಿಶತಂ ಪುಣ್ಯಂ ಲಭತೇ ಧಾರಣಾತ್ ನರಃ | ಲಕ್ಷಕೋಟಿಸಹಸ್ರಾಣಿ ಲಕ್ಷಕೋಟಿಶತಾನಿ ಚ | ತಜ್ಜಪಾತ್ ಲಭತೇ ಪುಣ್ಯಂ ನಾತ್ರ ಕಾರ್ಯವಿಚಾರಣಾ ||' ಎಂದುದಾಗಿ, ಇಂತಪ್ಪ ರುದ್ರಾಕ್ಷಿಯ ಧರಿಸಿದ ಫಲಕ್ಕೆ ಇನ್ನಾವ ಫಲವು ಸರಿಯಿಲ್ಲವೆಂದು ಸಕಲಾಗಮಂಗಳು ಸಾರುತಿಪ್ಪವು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮತ್ತೆ ಕೇಳಿರೋ, ಸತ್ಪಾತ್ರಜಂಗಮಕ್ಕೆ ಇತ್ತ ಪುಣ್ಯವು ಸಾವಿರಕೊಡವಾಲು ದಾನದ ಫಲವು, ಮಲಹರಜಂಗಮಕ್ಕೆ ತುತ್ತು ಭಿಕ್ಷವ ನೀಡಿದಲ್ಲುಂಟು ನೋಡಿರೋ! ನೂರುಕೊಡ ತುಪ್ಪದ ದಾನದ ಫಲವು, ಮಲಹರಜಂಗಮಕ್ಕೆ ತುತ್ತು ಭಿಕ್ಷವ ನೀಡಿದಲ್ಲುಂಟು ನೋಡಿರೋ! ಕೋಟಿಯಜ್ಞಂಗಳ ಮಾಡಿದ ಫಲವು, ಮಲಹರಜಂಗಮಕ್ಕೆ ತುತ್ತು ಭಿಕ್ಷವ ನೀಡಿದಲ್ಲುಂಟು ನೋಡಿರೋ ! ಅದೆಂತೆಂದೊಡೆ : ``ಕ್ಷೀರಕುಂಭಸಹಸ್ರೇಣ ಘೃತಕುಂಭಶತೈರಪಿ| ಭಸ್ಮಾಂಗಿಭಿಕ್ಷಮಾತ್ರೇಣ ಕೋಟಿಯಜ್ಞಫಲಂ ಭವೇತ್ ||'' ಎಂದುದಾಗಿ, ಜಂಗಮಕ್ಕೆ ನೀಡಿ ನಮ್ಮ ಅಖಂಡೇಶ್ವರಲಿಂಗವನೊಲಿಸಿರೋ.
--------------
ಷಣ್ಮುಖಸ್ವಾಮಿ
ಸತ್ತು ಚಿತ್ತು ಆನಂದ ನಿತ್ಯಪರಿಪೂರ್ಣ ಅಖಂಡವೆಂಬ ಆರು ಲಕ್ಷಣಯುಕ್ತವಾದ ಮಹಾಲಿಂಗವೇ ಪತಿ, ನಾನೇ ಶರಣಸತಿ ಎಂಬ ದೃಢಬುದ್ಧಿ ನಿಶ್ಚಲವಾಗಿರಬೇಕು. ಮತ್ತೆ ತಾನೇ ಸರ್ವಾಧಾರ ಪರಮಸ್ವತಂತ್ರನು ಎಂಬ ಭಾವ ಇಂಬುಗೊಂಡಿರಬೇಕು. ಅಂಗಭೋಗೋಪಭೋಗಂಗಳೆಲ್ಲ ಹಿಂದುಳಿದಿರಬೇಕು. ಲಿಂಗಭೋಗೋಪಭೋಗಂಗಳೆಲ್ಲ ಮುಂದುಗೊಂಡಿರ್ಪಾತನೆ ಶರಣ ನೋಡಾ ! ಅದೆಂತೆಂದೊಡೆ : ``ಪತಿರ್ಲಿಂಗಂ ಸತೀಚಾಹಂ ಹೃದಿಯುಕ್ತಃ ಸ್ವಯಂ ಪ್ರಭುಃ | ಪಂಚೇಂದ್ರಿಯ ಸುಖಂ ನಾಸ್ತಿ ಶರಣಸ್ಥಲಮುತ್ತಮಮ್ ||'' ಎಂದುದಾಗಿ, ಇಂತಪ್ಪ ಮಹಾಶರಣರ ಸಂಗದಲ್ಲಿರಿಸಿ ಸಲಹಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->