ಅಥವಾ

ಒಟ್ಟು 111 ಕಡೆಗಳಲ್ಲಿ , 33 ವಚನಕಾರರು , 87 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊನ್ನು ಹೆಣ್ಣು ಮಣ್ಣು ತನಗೆ ಸಂಬಂಧವೆಂದು ಹೇಳಿಕೊಂಬರು ತನಗೆ ಸಂಬಂಧವೇನು? ಬ್ರಹ್ಮಚಾರಿಯಾದ ಮೇಲೆ[ಬಿ]ಡದಾಚರಿಸಿದರೆ. ಮುಕ್ತಿಸ್ಥಲ ದೂರವಾಯಿತ್ತು. ಅದು ಇದ್ದರೇನು? ಪರೋಪಕಾರವಿರಬೇಕು. ಜಂಗಮಕ್ಕೆ ಹೆಣ್ಣಿನಲ್ಲಿ ಸಿಕ್ಕಿದರೆ ಅವರಿಗೆ ಹಿಂದಣ ಸಂಬಂಧವಿದ್ದ ಕಾರಣ ದೊರಕಿತ್ತು. ಆವ ನಡೆಯಲ್ಲಿ ನಡೆದರೇನು? ಕಂಡು ಮನದಲ್ಲಿ ಜರಿದೆನಾದರೆ ಜಂಗಮವೆನಗಿಲ್ಲ. ಪಾದೋದಕ ಪ್ರಸಾದಕ್ಕೆ ದೂರವಾಯಿತ್ತು. ನಿಮ್ಮನರಿದು ನಡೆದಾತಂಗೆ ಸಾಧನೆಯಾಗುವುದಲ್ಲದೆ, ಬೆಳಗಿನ ಕತ್ತಲೆಯ ಕಂಡು ಕತ್ತಲೆಯಾಯಿತ್ತೆಂದು, ದೀಪವ ಮುಟ್ಟಿಸಲೆಂದು, ತನ್ನೊಳಗಿರ್ದ ಜೋತಿಯ ಬೆಳಗಮಾಡಿ, ಜ್ಞಾನವನುದ್ಧರಿಸಿರ್ಪ ಶರಣನ ಹೆಜ್ಜೆಯ ತಿಳಿವರೆ? ನೋಡಾ, ನಿಜಗುರು ಸ್ವತಂತ್ರ ಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಪೂರ್ವವನಳಿದು ಪುನರ್ಜಾತನಾದೆನೆಂದು ಪೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ, ನಿಮ್ಮ ಅಂಗ, ಆ ಈಶ್ವರದೇವರು ಹುಟ್ಟಿಸಿದ ಮೂರೂವರೆ ಮೊಳದ ಸ್ಥೂಲಕಾಯವಾಗಿ ಜೀಕಿತ್ತು. ಬ್ರಹ್ಮಕಲ್ಪನೆಯ ಮಾನವನು ಜಾಜಿಯನಾಗಿಸಿ ಮರುವಾದೆ ಮನುಜರ ಕೈಯಲ್ಲಿ ಅನ್ನ ಉಣ್ಣದೆ, ಅಂಗಿಯ ಕೊಳ್ಳದೆ, ಸ್ವರ್ಗ-ಮತ್ರ್ಯ-ಪಾತಾಳ ಇವು ಮೂರು ಲೋಕವನು ಬಿಟ್ಟು, ಬೇರೊಂದು ಸ್ಥಳದಲ್ಲಿ ಇರಬಲ್ಲರೆ, ಆತನಿಗೆ ಪೂರ್ವವನಳಿದ ಮನುಜೋತ್ತಮನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗದ ಈಶ್ವರದೇವರು ಹುಟ್ಟಿಸಿದ ಮೂರುವರೆ ಮೊಳದ ಸ್ಥೂಲಕಾಯವನು ಮುಂದಿಟ್ಟುಕೊಂಡು ಹಲವು ಜಾತಿಗಳ ನೆಲೆಯನರಿಯದೆ, ಮನೆ ಮನೆಯಲ್ಲಿ ಕಾಡಿ ಬೇಡಿ ಉಂಬುವ ಪಾಷಂಡಿಗಳ ದೀಕ್ಷೆಯನು ಮಾಡಿಕೊಂಡು, ಕಾವಿಯರಿವೆಯನ್ಹೊದ್ದುಕೊಂಡು ನಾನು ಪೂರ್ವವನಳಿದು ಪುನರ್ಜಾತನಾದೆನೆಂದು ಪೂಜೆಗೊಂಬುವ ಜಾತಿಶ್ರೇಷ* ಅಜ್ಞಾನಿಗಳಿಗೆ ಜಾತಿಸೂತಕ ಉಳಿಯಿತೆ ? ಸುಜ್ಞಾನಿಗಳು ಹೋಗಿ ಅವರಿಗೆ ಶರಣಂ ಕೊಟ್ಟರೆ, ಅವರಾ ಮನೆಯಲ್ಲಿ ಅನ್ನವನುಂಡರೆ, ಅಗ್ನಿಯ ಕಂಡರೆ, ಮೊದಲೆ ತಾವೇ ಭೋಗಿಸಿ ಮೇಲೆ ಮಲಮೂತ್ರವ ಭುಂಜಿಸಿದಂತೆ ಆಯಿತ್ತು ಎಂದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಶಿವಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಮೃತದ ಗುಟಿಕೆಯ ಮರೆದು, ಅಂಬಲಿಯನರಸುವನಂತೆ, ಶಂಬರವೈರಿ ತನ್ನಲ್ಲಿ ಇದ್ದು, ಕುಜಾತಿಯ ಬೆಂಬಳಿಯಲ್ಲಿ ಹೋಹವಂಗೆ, ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗ, ಅವರಿಗೆ ಇಲ್ಲಾ ಎಂದೆ.
--------------
ಮನುಮುನಿ ಗುಮ್ಮಟದೇವ
ಪರಸ್ತ್ರೀಯರ ನೋಡುವ ಕಣ್ಣು, ಲಿಂಗವ ನೋಡಿದ ಅವರಿಗೆ ಲಿಂಗವಿಲ್ಲ. ಪರಬ್ರಹ್ಮವ ನುಡಿವ ನಾಲಿಗೆಯಲ್ಲಿ, ಪರಸ್ತ್ರೀಯರ ಅಧರಪಾನವ ಕೊಂಡಡೆ, ಪ್ರಸಾದಕ್ಕೆ ದೂರ. ಘನಲಿಂಗವ ಪೂಜಿಸುವ ಕೈಯಲ್ಲಿ, ಪರಸ್ತ್ರೀಯರ ತೋಳು ಕುಚವ ಮುಟ್ಟಿದಡೆ, ತಾ ಮಾಡುವ ಪೂಜೆ ನಿಷ್ಫಲ. ಇದರಿದಡೆ ವ್ರತ. ಅಲ್ಲದಿರ್ದಡೆ, ಸುರೆಯ ಒಳಗೆ ತುಂಬಿ, ಹೊರಗೆ ಬೂದಿಯ ಪೂಸಿದಂತಾಯಿತ್ತು, ಕಲಿದೇವಾ.
--------------
ಮಡಿವಾಳ ಮಾಚಿದೇವ
ಹೊಲೆಯೊಳಗೆ ಹುಟ್ಟಿ ಕುಲವನರಸುವೆ, ಎಲವೊ, ಮಾತಂಗಿಯ ಮಗ ನೀನು. ಸತ್ತುದನೆಳೆವನೆತ್ತಳ ಹೊಲೆಯ ಹೊತ್ತು ತಂದು ನೀವು ಕೊಲುವಿರಿ. ಶಾಸ್ತ್ರವೆಂಬುದು ಹೋತಿಂಗೆ ಮಾರಿ, ವೇದವೆಂಬುದು ನಿಮಗೆ ತಿಳಿಯದು. ನಮ್ಮ ಕೂಡಲಸಂಗನ ಶರಣರು. ಕರ್ಮವಿರಹಿತರು, ಶರಣಸನ್ನಿಹಿತರು, ಅನುಪಮಚಾರಿತ್ರರು. ಅವರಿಗೆ ತೋರಲು ಪ್ರತಿಯಿಲ್ಲವೋ.
--------------
ಬಸವಣ್ಣ
ಪ್ರಸಾದಿ ಪ್ರಸಾದಿಗಳೆಂದು ನುಡಿದುಕೊಂಡು ನಡೆಯಬಹುದಲ್ಲದೆ ಪ್ರಸಾದವ ಕೊಂಬ ಭೇದವನರಿಯರು. ಕರುಣಿಸು ಮದ್ಗುರವೆ, ಕೇಳಯ್ಯ ಮಗನೆ : ಗುರುವಿನಲ್ಲಿ ತನುವಂಚನೆಯಿಲ್ಲದೆ ಕೊಂಬುದು ಶುದ್ಧಪ್ರಸಾದ ; ಲಿಂಗದಲ್ಲಿ ಮನವಂಚನೆಯಿಲ್ಲದೆ ಕೊಂಬುದು ಸಿದ್ಧಪ್ರಸಾದ ; ಜಂಗಮದಲ್ಲಿ ಧನವಂಚನೆಯಿಲ್ಲದೆ ಕೊಂಬುದು ಪ್ರಸಿದ್ಧಪ್ರಸಾದ. ಈ ತ್ರಿವಿಧಲಿಂಗದಲ್ಲಿ ತ್ರಿವಿಧ ವಂಚನೆಯಿಲ್ಲದೆ ಅವರ ಕರುಣಪ್ರಸಾದವ ಕೊಂಬ ಪ್ರಸಾದಕಾಯಕ್ಕೆ ಪ್ರಳಯಬಾಧೆಗಳು ಬಾಧಿಸಲಮ್ಮವು ; ಕರಿ ಉರಗ ವೃಶ್ಚಿಕ-ಇವು ಹೊದ್ದಲಮ್ಮವು ; ಇರುವೆ ಕೆಂಡವು ಹೊದ್ದಲಮ್ಮವು. ಹೊದ್ದುವ ಪರಿ ಎಂತೆಂದೊಡೆ : ಲಿಂಗದಲ್ಲಿ ನಿಷೆ*ಯಿಲ್ಲ ; ಜಂಗಮದಲ್ಲಿ ಪ್ರೇಮ-ಭಕ್ತಿಯಿಲ್ಲ ; ವಿಭೂತಿ - ರುದ್ರಾಕ್ಷೆಯಲ್ಲಿ ವಿಶ್ವಾಸವಿಲ್ಲ ; ಶಿವಾಚಾರದಲ್ಲಿ ದೃಢವಿಲ್ಲದ ಕಾರಣ ತಾಪತ್ರಯಂಗಳು ಕಾಡುವವು ಎಂದಿರಿ ಸ್ವಾಮಿ, 'ಮತ್ತೆ ನಂಬುಗೆಯುಳ್ಳ ಪ್ರಸಾದಿಗಳಿಗೆ ವ್ಯಾಧಿಯೇಕೆ ಕಾಡುವವು ? ಸದ್ಗುರುಮೂರ್ತಿಯೆ ಕರುಣಿಸು ಎನ್ನ ತಂದೆ'. ಕೇಳೈ ಮಗನೆ : ಭಕ್ತಗಣಂಗಳಿಗೆ ವಂದಿಸಿ ನಿಂದಿಸಿ ಹಾಸ್ಯ ದೂಷಣವ ಮಾಡಿದಡೆ ಅದೇ ವ್ಯಾಧಿರೂಪಾಗಿ ಕಾಡುವದು ; ತಲೆಶೂಲೆ ಹೊಟ್ಟೆಶೂಲೆ ನಾನಾತರದ ಬೇನೆಯಾಗಿ ಕಾಡುವವು. ಆ ಭಕ್ತಗಣಂಗಳಿಗೆ ತಾನು ನಿಂದಿಸಿದುದ ತಿಳಿದು, ಅವರಿಗೆ ತ್ರಿಕರಣಶುದ್ಧವಾಗಿ ಸೇವೆಯ ಮಾಡಿ, ಅವರ ಕರುಣವ ಹಡೆದಡೆ ಆಗ ಅವರಿಗೆ ವ್ಯಾಧಿ ಬಿಟ್ಟು ಹೋಗುವವು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ದೇಹದೊಡನೆ ತ್ರಿದೋಷಗಳು, ವಾತ ಪಿತ್ತ ಶ್ಲೇಷ್ಮ-ಇವು ಮೂರುಕೂಡಿ ದೇಹ ಹುಟ್ಟಿತು. ಇದರ ವಿವರವು : ವಾತ 81, ಪಿತ್ತ 64, ಶ್ಲೇಷ 215. ಇವು ಕೂಡಿ 360 ವ್ಯಾಧಿಗಳಾದವು. ಇವು ಶಿವನ ಅಪ್ಪಣೆಯಿಂದ ಬಂದುವಲ್ಲದೆ, ಮನುಷ್ಯನ ಯತ್ನವಿಲ್ಲವು. ಅದಕ್ಕೆ ಮನುಷ್ಯರು ವೈದ್ಯವ ಮಾಡಿದಡೆ ಲೋಕ ಏಕೆ ಸಾವುದು ? ಅದಕ್ಕೆ ಸೊಕ್ಕಿದವರಿಗೆ, ಗುರುತಲ್ಪಕರಿಗೆ, ಭಕ್ತರ ನಿಂದ್ಯವ ಮಾಡಿದವರಿಗೆ, ತಂದೆಗೆ ಮಗ ಬೈದರೆ, ಅತ್ತೆಗೆ ಸೊಸೆ ಸೊಕ್ಕಿ ನುಡಿದಡೆ, ಅನಾಚಾರಿಗಳಿಗೆ, ಆಸೆಯ ಕೊಟ್ಟು ಭಾಷೆಗೆ ತಪ್ಪಿದವರಿಗೆ, ಶಿವಸದ್ವರ್ತನೆ ಸದ್ಧರ್ಮ ಸದಾಚಾರವಿಲ್ಲದವರಿಗೆ ಈ ವ್ಯಾಧಿಗಳು ಕಾಡುತ್ತಿಹವು. ತಲೆಶೂಲೆ, ಪಕ್ಕಶೂಲೆ, ಜ್ವರ, ಉರಿ -ಇವು ಕಣ್ಣಿಗೆ ಕಾಣಿಸದೆ ಬಂದಂಥ ವ್ಯಾಧಿಗಳು ; ಶಿವನ ಅಂಶಿಕವು. ತದ್ದು ತುರಿ ಕೆಮ್ಮು ಭಗದಳ ಕುಷ* ಗಂಡಮಾಲೆ ಕುರು ಬಾವು ಹುಣ್ಣುಗಳು ಕಣ್ಣಿಗೆ ಕಾಣಿಸುವಂಥ ಬೇನೆಗಳು ; ಪಾರ್ವತಿಯ ಅಂಶಿಕವು. ಇವು ಎಲ್ಲ ವ್ಯಾಧಿಗಳು ಅವರಿಗೆ ತಕ್ಕಷ್ಟು ಶಿಕ್ಷೆ ಮಾಡಿಸುತ್ತಿಹವು. ಮತ್ತೆ ಗುರುಮಾರ್ಗಾಚಾರವಿಡಿದು ಆಚರಿಸುವ ಪ್ರಸಾದಿಗಳಿಗೆ ಅವೇ ವ್ಯಾಧಿಗಳು ಹಿತವಾಗಿಹವು. ಮತ್ತೆ ಸರ್ಪ ಕಚ್ಚಿದಡೆ, ಸ್ತ್ರೀಯು ಹಡೆಯಲಾರದಿದ್ದಡೆ, ಯಾವ ಕುಲದವನಾಗಲಿ ವಿಚಾರಿಸದೆ ಅವರು ಮಂತ್ರಿಸಿದ ಉದಕವ ಕುಡಿವುದು. ಮತ್ತೆ ಅವರ ಕುಲಕ್ಕೆ ಭಕ್ತರ ಕುಲಕ್ಕೆ ಹೇಸುವುದು. ಅನ್ಯಕುಲದ ವೈದ್ಯನ ಕೈಯಲ್ಲಿ ಮದ್ದು ಮಾಡಿಸಿಕೊಂಬರು. ಭಕ್ತರು ಅಡುಗೆಯ ಮಾಡಿದಡೆ, ಯಾವ ಕುಲವೆಂಬರು ? ಅವರಿಗೆ ಎಂದೆಂದಿಗೂ ಮುಕ್ತಿಯಿಲ್ಲವಯ್ಯಾ. ಮತ್ತೆ ಪ್ರಸಾದವ ಕೊಂಬುವರು ಮದ್ದು ಕೇಳಲಾಗದು. ಅದೇನುಕಾರಣವೆಂದಡೆ- ಪ್ರಸಾದಕ್ಕಿಂತ ಮದ್ದು ಹಿತವಾಯಿತಲ್ಲ ! ಶಿವಮಂತ್ರ ಕಾಯಕ್ಕೆ ಅನ್ಯರ ಕೈಯಲ್ಲಿ ಮಂತ್ರಿಸಿ ಕೇಳಲಾಗದು. ಅದೇನು ಕಾರಣವೆಂದಡೆ - ಶಿವಮಂತ್ರಕ್ಕಿಂತ ಅನ್ಯರ ಮಂತ್ರ ಅಧಿಕವಾಯಿತ್ತಲ್ಲ ! ಮತ್ತೆ ವೈದ್ಯಕಾರನಿಂದ ಮಂತ್ರಗಾರನಿಂದ ಮನುಷ್ಯರ ಪ್ರಾಣ ಉಳಿವುದೆಂದು ಯಾವ ಶಾಸ್ತ್ರ ಹೇಳುತ್ತದೆ ? ಯಾವ ಆಗಮ ಸಾರುತ್ತದೆ ? ಹೇಳಿರಿ. ಅರಿಯದಿದ್ದಡೆ ಕೇಳಿರಿ : ಭಕ್ತಗಣಂಗಳು ಪಾದೋದಕ ಪ್ರಸಾದ ವಿಭೂತಿ ಶಿವಮಂತ್ರಗಳಿಂದೆ ಲೆಕ್ಕವಿಲ್ಲದೆ ಹೋಹ ಪ್ರಾಣವ ಪಡೆದರು - ಎಂದು ಬಸವೇಶ್ವರ ಪುರಾಣದಲ್ಲಿ ಕೂಗ್ಯಾಡುತ್ತದೆ. ಇಂತಪ್ಪ ದೃಷ್ಟವ ಕಂಡು ನಂಬದಿರ್ದಡೆ ಆವಿನ ಕೆಚ್ಚಲೊಳಗೆ ಉಣ್ಣೆಯಿದ್ದು ಹಾಲು ಬಿಟ್ಟು ರಕ್ತವ ಸೇವಿಸುವಂತಾಯಿತ್ತು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಶಿವಶಿವಾ, ಈ ಮರುಳಮಾನವರ ಮರುಳತನವ ನಾನೇನೆಂಬೆನಯ್ಯಾ. ಹೊನ್ನು ತನ್ನದೆಂಬರು, ಹೊನ್ನು ರುದ್ರನದು. ಹೆಣ್ಣು ತನ್ನದೆಂಬರು, ಹೆಣ್ಣು ವಿಷ್ಣುವಿನದು. ಮಣ್ಣು ತನ್ನದೆಂಬರು, ಮಣ್ಣು ಬ್ರಹ್ಮನದು. ಇಂತೀ ತ್ರಿವಿಧವು ನಿಮ್ಮವೆಂಬಿರಿ- ನಿಮ್ಮವು ಅಲ್ಲ ಕಾಣಿರೋ ಎಲಾ ದಡ್ಡ ಪ್ರಾಣಿಗಳಿರಾ. ಇದಕ್ಕೆ ದೃಷ್ಟಾಂತ: ಗಗನದಲ್ಲಿ ಚಂದ್ರೋದಯವಾಗಲು ಭೂಮಂಡಲದಲ್ಲಿ ಕ್ಷೀರಸಮುದ್ರ ಹೆಚ್ಚುವದು. ಹೆಚ್ಚಿದರೇನು ? ಆ ಚಂದ್ರನ ವ್ಯಾಳ್ಯಕ್ಕೆ ಸಮುದ್ರವಿಲ್ಲ; ಸಮುದ್ರದ ವ್ಯಾಳ್ಯಕ್ಕೆ ಚಂದ್ರನಿಲ್ಲ. ಮತ್ತೆ ಆಕಾಶದಲ್ಲಿ ಮೋಡ ಬಂದು ಸುಳಿಗಾಳಿ ಬೀಸಲು ಗಿರಿಯೊಳಗಿರ್ದ ನವಿಲು ತನ್ನ ಪಕ್ಕವ ಬಿಚ್ಚಿ ಹರುಷಾನಂದದಲ್ಲಿ ಆಡುವದು ; ಪ್ರೇಮದಿಂದಲಿ ಕುಣಿಯವದು. ಕುಣಿದರೇನು ? ಚಂಡವಾಯುವಿನಿಂದ ಆಕಾಶದೊಳಗಣ ಕಾರಮುಗಿಲು ಹಾರಿಹೋಹಾಗ ನವಿಲು ಅಡ್ಡಬಂದಿತ್ತೆ ? ಇಲ್ಲ. ಗಿರಿಯೊಳಗಣ ಮಯೂರನನ್ನು ವ್ಯಾಧನು ಬಂದು ಬಲಿಹಾಕಿ ಕೊಲ್ಲುವಾಗ ಆ ಮೋಡ ಅಡ್ಡಬಂದಿತ್ತೆ ? ಇಲ್ಲ. ಇದರ ಹಾಂಗೆ, ನಿಮಗೆ ಬಾಲಪ್ರಾಯದಲ್ಲಿ ಮಾತಾಪಿತರ ಮೋಹ ಯೌವ್ವನಪ್ರಾಯದಲ್ಲಿ ಸ್ತ್ರೀ, ಪುತ್ರಮೋಹ. ಮಧ್ಯಪ್ರಾಯದಲ್ಲಿ ಧನಧಾನ್ಯದ ಮೋಹ. ಈ ಪರಿಯಲ್ಲಿ ಸಕಲವು ನೀವು ಇರುವ ಪರ್ಯಂತರದಲ್ಲಿ ಮಾಯಾ ಮಮಕಾರವಲ್ಲದೆ ಅಳಲಿ ಬಳಲಿ, ಕುಸಿದು ಕುಗ್ಗಿ ಮುಪ್ಪುವರಿದು, ಮರಣಕಾಲಕ್ಕೆ ಯಮದೂತರು ಬಂದು ಹಿಂಡಿ ಹಿಪ್ಪಿಯ ಮಾಡಿ ಒಯ್ಯುವಾಗ, ಮೂವರೊಳಗೆ ಒಬ್ಬರು ಅಡ್ಡಬಂದರೆ ? ಬಂದುದಿಲ್ಲ. ಅವರ ಸಂಕಟಕ್ಕೆ ನೀವಿಲ್ಲ, ನಿಮ್ಮ ಸಂಕಟಕ್ಕೆ ಅವರಿಲ್ಲ. ನಿನ್ನ ಪುಣ್ಯಪಾಪಕ್ಕೆ ಅವರಿಲ್ಲ, ಅವರ ಪುಣ್ಯಪಾಪಕ್ಕೆ ನೀನಿಲ್ಲ. ನಿನ್ನ ಸುಖದುಃಖಕ್ಕೆ ಅವರಿಲ್ಲ, ಅವರ ಸುಖದುಃಖಕ್ಕೆ ನೀನಿಲ್ಲ. ನಿನಗವರಿಲ್ಲ, ಅವರಿಗೆ ನೀನಿಲ್ಲ. ಇಂತಿದನು ಕಂಡು ಕೇಳಿ ಮತ್ತಂ ಹಿತ್ತಲಕ್ಕೆ ಹಳೆಯೆಮ್ಮಿ ಮನಸೋತ ಹಾಗೆ, ಹಾಳಕೇರಿಗೆ ಹಂದಿ ಜಪ ಇಟ್ಟ ಹಾಗೆ, ಹಡಕಿಗೆ ಶ್ವಾನ ಮೆಚ್ಚಿದ ಹಾಗೆ, ಮತ್ತಂ, ಮಾನವರೊಳಗೆ ಹಂದಿ, ನಾಯಿ, ಹಳೆಯೆಮ್ಮಿಯೆಂದರೆ- ಜೀವನಬುದ್ಭಿಯುಳ್ಳವನೇ ಹಂದಿ. ಕರಣಬುದ್ಧಿಯುಳ್ಳವನೇ ನಾಯಿ. ಮಾಯಾಪ್ರಕೃತಿಯುಳ್ಳವನೇ ಹಳೆಯೆಮ್ಮಿ. ಇವಕ್ಕೆ ಮೂರು ಮಲವಾವೆಂದಡೆ: ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯವನು, ಕಚ್ಚಿ ಮೆಚ್ಚಿ ಮರುಳಾಗಿ ಬಿಡಲಾರದೆ ಕಂಡು ಕೇಳಿ ಮೋಹಿಸಿ, ಇದನು ಬಿಟ್ಟು ವೈರಾಗ್ಯಹೊಂದಿದರೆ ಮೋಕ್ಷವಿಲ್ಲೆಂದು ಪ್ರಪಂಚವಿಡಿದು ಪಾರಮಾರ್ಥ ಸಾಧಿಸಬೇಕೆಂದು ಹೇಳುವವರ, ಹೀಂಗೆ ಮಾಡಬೇಕೆಂಬುವರ ಬುದ್ಧಿಯೆಂತಾಯಿತಯ್ಯಾ ಎಂದಡೆ: ಗಿಳಿ ಓದಬಲ್ಲುದು; ಬಲ್ಲರೇನು ತನ್ನ ಮಲವ ತಾನು ತಿಂದ ಹಾಗೆ. ವಿಹಂಗ ಹನ್ನೆರಡುಯೋಜನದಮೇಲೆ ಅಮೃತಫಲವಿಪ್ಪುದ ಬಲ್ಲದು. ಬಲ್ಲರೇನು, ಅದು ಬಾಯಿಲಿ ತಿಂದು ಬಾಯಿಲೆ ಕಾರುವದು. ಹಾಂಗೆ ಈ ಮಾನವರು ತ್ರಿವಿಧಮಲಸಮಾನವೆಂಬುದ ಬಲ್ಲರು, ಬಲ್ಲರೇನು ? ಬಿಡಲಾರರು. ಇಂತೀ ಪರಿಪರಿಯಲ್ಲಿ ಕೇಳಿ ಕೇಳಿ ಕಂಡು ಬಿಡಲಾರದೆ ಇದ್ದರೆ ಇಂಥ ಹೊಲೆಸೂಳೆಯ ಮಕ್ಕಳ ಶರೀರವ ಖಡ್ಗದಿಂದ ಕಡಿದು ಕರಗಸದಿಂದ ಕೊರೆದು ಛಿದ್ರಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿಗಳಿಗೆ ಹಾಕಿದರೆ ಎನ್ನ ಸಿಟ್ಟು ಮಾಣದು. ಕಡೆಯಲ್ಲಿ ಚಂದ್ರಸೂರ್ಯರು ಇರುವ ಪರ್ಯಂತರ ಮಹಾ ಅಘೋರ ನರಕದಲ್ಲಿ ಕಲ್ಪಕಲ್ಪಾಂತರದಲ್ಲಿ ಹಾಕದೆ ಬಿಡನೆಂದಾತನು ವೀರಾಧಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಭಕ್ತರ ಮನೆಗೆ ಹೋಗಿ ಒರಳಕ್ಕಿಯನಾಯ್ದು ತಂದು, ಲಿಂಗಕ್ಕೆ ಬೋನವ ಮಾಡಿ, ಜಂಗಮಕ್ಕೆ ನೀಡಿ, ಒಕ್ಕುದ ಕೊಂಡವ ಪೋಪನೈ ಕೈಲಾಸಕ್ಕೆ. ಅವರಿಗೆ ಮುಕ್ಕಣ್ಣನಲ್ಲದೆ ಉಳಿದ ಭುವನತ್ರಯದವರು ಸರಿಯಲ್ಲೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಒಂದು ಲಿಂಗದ ಸಂಗದಿಂದ ಮೂವರು ಪುರುಷರು ಹುಟ್ಟಿದರು ನೋಡಾ! ಅವರಿಂಗೆ ಆರು ಮಂದಿ ಅಂಗನೆಯರ ಮದುವೆಯ ಮಾಡಿ ಒಬ್ಬ ಕುಂಟಿಣಿಗಿತ್ತಿಯು ಬಂದು ಆರು ಮಂದಿ ಅಂಗನೆಯರ ಮೂವರು ಗಂಡರಿಗೆ ಕೊಟ್ಟು ಆ ಕುಂಟಿಣಿಗಿತ್ತಿಯು ಲಿಂಗದೊಳು ಮಡಿದುದ ಕಂಡೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಉಂಡು ಕೊಂಡಾಡುವನ್ನ ಬರ, ವೇಶಿಯ ಮನೆಯ ದಾಸಿಯ [ಬರಿಹುಂಡವೆಂಬೆ], ಈಶ್ವರನ ರೂಪ ತೊಟ್ಟು ಕೈಯಾಂತು ಬೇಡಿದಡೆ, ವೇಷದ ಮರೆಯ ಬಲೆಯ ಬೀಸುವ ಬೇಟೆಗಾರನೆಂಬೆ, ಆಗಮವ ಕಲಿತು ಅವರಿಗೆ ಆಗಹೇಳಿ, ಹೋಗಿನ ದ್ರವ್ಯಕ್ಕೆ ಕೈಯಾನುವ ಈ ಲಾಗಿನ ಅಣ್ಣಗಳ ಬಗೆಯ ಭಕ್ತಿಯಲ್ಲಿ ಇದ್ದೆಹೆನೆಂಬವರಿಗೆ ಸತ್ತು ಸಾಯದ ಕುದುರೆಗೆ ಹುಲ್ಲನಡಕುವಂತಾಯಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಎಲೆ ಅಯ್ಯಾ, ನೀನು ಕುಲವು, ಅವಕುಲವು ಎನ್ನದೆ ಒಲಿದು ಅವರಿಗೆ ಬೆಲೆಯಿಲ್ಲದ ಬಲವ ಮಾಡಿದೆ. ಒಲಿದು ನಿನ್ನ ಪೂಜಿಪರಿಗೆ ಗೆಲವ ಮಾಡಿ, ನಿಲುಗಡೆಯ ಮರೆದವರ ತಲೆಯರಿದು ಬಿಸುಡಿ[ದೆ] ಕಲಿದೇವ, ನಿನಗಾರು ಸರಿಯಿಲ್ಲ ಕಾಣಾ ಚೆನ್ನಬಸವೇಶ್ವರಾ.
--------------
ಮಾದಾರ ಚೆನ್ನಯ್ಯ
ಕುಲಛಲಕ್ಕೆ ಹೋರಿ ಆಡುವರೆಲ್ಲ ಶಿವಭಕ್ತರೆ ? ಶಿವಭಕ್ತರಲ್ಲ ; ಅವರು ಕುಲದ ಪಾತಕರು. ಅವರಿಂಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದೋದಕ-ಪ್ರಸಾದವಿಲ್ಲ, ವಿಭೂತಿ-ರುದ್ರಾಕ್ಷಿಯಿಲ್ಲ, ಓಂ ನಮಃ ಶಿವಾಯವೆಂಬ ಮಂತ್ರವಿಲ್ಲ. ಇಂತೀ ಕುಲ ಛಲಂಗಳ ಬಿಟ್ಟು, ನಿರ್ಮಲಸ್ವರೂಪನಾಗಿ, ಗುರುಕಾರುಣ್ಯದಿಂದ ಜ್ಞಾನಸಂಬಂಧಿಯಾಗಿ, ಅಷ್ಟಾವರಣವನಾಚರಿಸಬಲ್ಲಾತನೆ ಭಕ್ತನೆಂಬೆನಯ್ಯ,ಮಹೇಶ್ವರನೆಂಬೆನಯ್ಯ, ಪ್ರಸಾದಿಯೆಂಬೆನಯ್ಯ, ಪ್ರಾಣಲಿಂಗಿಯೆಂಬೆನಯ್ಯ, ಶರಣನೆಂಬೆನಯ್ಯ, ಐಕ್ಯನೆಂಬೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನಷ್ಟು ... -->