ಅಥವಾ

ಒಟ್ಟು 25 ಕಡೆಗಳಲ್ಲಿ , 15 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗವೆಂಬ ಭಾವವಂಗದಲ್ಲರತು, ಅಂಗವೆಂಬ ಭಾವ ಲಿಂಗದಲ್ಲರತು, ಲಿಂಗ ಅಂಗವೆಂಬ ಭಾವ ನಿಜದಲ್ಲರತು, ನಿರ್ವಾಣಪದದಲ್ಲಿ ನಿವಾಸವಾದ ನಿರ್ಭೇದ್ಯಂಗೆ, ನಡೆದುದೇ ಸತ್ಕ್ರಿಯೆ, ನುಡಿದುದೇ ಶಿವಾನುಭಾವ, ಹಿಡಿದುದೇ ಮಹಾಜ್ಞಾನ. ಗುರುನಿರಂಜನ ಚನ್ನಬಸವಲಿಂಗಾ, ನಿಮ್ಮ ಶರಣ ಅಪೂರ್ವಚರಿತನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂಗವೆಂಬ ಸಂಸಾರದೊಳಗೆ ಸವೆದವರೆಲ್ಲರೂ ಶಿವನನರಿವರೆ ? ಮನವೆಂಬ ಸಂಕಲ್ಪದ ಕುಣಿಕೆಗೊಳಗಾದವರೆಲ್ಲರೂ ಮಾಯದ ಹೊಡೆಗಿಚ್ಚ ಗೆಲ್ಲಬಲ್ಲರೆ ? ಗುಹೇಶ್ವರಲಿಂಗದಲ್ಲಿ ಸರ್ವಸಂದೇಹವ ಕಳೆದಿಪ್ಪ ಚನ್ನಬಸವಣ್ಣಂಗೆ ನಮೋ ನಮೋ ಎಂಬೆನು.
--------------
ಅಲ್ಲಮಪ್ರಭುದೇವರು
ಅಂಗವೆಂಬ ಗದ್ದುಗೆಯ ಮೇಲೆ ಸಂಗಮೇಶ್ವರನೆಂಬ ಲಿಂಗವ ಕಂಡೆನಯ್ಯ. ಆ ಲಿಂಗದ ಸುಳುವಿನಲ್ಲಿ ಮೂವರ ಕಂಡೆನಯ್ಯ. ಒಬ್ಬ ಸತಿಯಳು ಇಪ್ಪತ್ತೈದು ಗ್ರಾಮಂಗಳ ಮೀರಿ ಸಂಗಮೇಶ್ವರನೆಂಬ ಲಿಂಗವ ಪೂಜಿಸುತಿರ್ಪಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒಂದು ಬೀಜವ ಬಿತ್ತಿದಡೆ ಮೂರುಫಲವಾಯಿತ್ತು. ಆ ಫಲ ಬಲಿದು ಬೆಳೆದ ಮತ್ತೆ, ಒಂದ ಉದಯದಲ್ಲಿ ಕೊಯ್ದೆ, ಒಂದ ಮಧ್ಯಾಹ್ನದಲ್ಲಿ ಕೊಯ್ದೆ, ಒಂದ ಹೊತ್ತು ಸಂದ ಮತ್ತೆ ಕೊಯ್ದೆ. ಈ ಮೂರರೆಯನೊಂದು ಮಾಡಿ ಮೆಟ್ಟಿಸಿದೆ. ಭಕ್ತಿಜ್ಞಾನವೈರಾಗ್ಯವೆಂಬ ಎತ್ತಿನ ಕೈಯಲ್ಲಿ ತೂರಿದೆ ಕೊಂಗವನೆತ್ತಿ ಅಂಗವೆಂಬ ಹೊಳ್ಳು ಹಾರಿತ್ತು. ಸಂಸಾರವೆಂಬ ಚೊಳ್ಳು ನಿತ್ಯಾನಿತ್ಯ ವಿವೇಕವೆಂಬ ಕೊಳಗವ ಹಿಡಿದಳೆಯಲಾಗಿ, ನೂರೊಂದು ಕೊಳಗವಾಯಿತ್ತು. ಹೆಡಗೆಗೆ ಅಳವಡಿಸುವಾಗ ಐವತ್ತೊಂದು ಕೊಳಗವಾಯಿತ್ತು. ನಡುಮನೆಯಲ್ಲಿ ಸುರಿವಾಗ ಇಪ್ಪತ್ತೈದು ಕೊಳಗವಾಯಿತ್ತು. ಪಡುವಣ ಕೋಣೆಯಲ್ಲಿ ಮಡಗಿರಿಸುವಾಗ, ಪಡಿಯ ನೋಡಲಾಗಿ ಐಗಳವಾಯಿತ್ತು. ಅದು ಬಿಡುಬಿಸಿಲಿನಲ್ಲಿ ಒಣಗೆ, ಅದು ಪಡಿಪುಚ್ಚಕ್ಕೆ ಮೂಗಳವಾಯಿತ್ತು. ಆ ಮೂಗಳವ ನಡುಮೊರದಲ್ಲಿ ಸುರಿಯೆ, ಪಡಿಗಣಿಸುವಾಗ ಒಕ್ಕುಳವಾಯಿತ್ತು. ಈ ಒಕ್ಕುಳವ ಕುಟ್ಟಿ, ಮಿಕ್ಕುದ ಕೇರೆ ಮತ್ತೆ ಒಬ್ಬಳವಾಯಿತ್ತು. ಒಬ್ಬಳವ ಕುಡಿಕೆಯಲ್ಲಿ ಹೊಯ್ದು ನಿರುತದಿಂ ನೋಡೆ, ಮೂರು ಮಾನವ ನುಂಗಿ, ಒಂದು ಮಾನವಾಯಿತ್ತು. ಒಂದು ಮಾನವನಟ್ಟು ಕುಡಿಕೆಯಲ್ಲಿ ಕುಸುರೆ ಕೂಳೊಡೆದು ಬಾಲಗೋಗರವಾಯಿತ್ತು. ಉಂಡವರತ್ತ, ನಾನಿತ್ತ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಭಕ್ತನಾದರು ಆಗಲಿ, ಗುರುವಾದರು ಆಗಲಿ, ಲಿಂಗವಾದರು ಆಗಲಿ, ಜಂಗಮವಾದರು ಆಗಲಿ, ಈ ಮತ್ರ್ಯದಲ್ಲಿ ಒಡಲುವಿಡಿದು ಹುಟ್ಟಿದ ಮೇಲೆ, ಮಾಯೆಯ ಗೆದ್ದೆ[ಹೆ]ನೆಂದರೆ ಸಾಧ್ಯವಲ್ಲ ಕೇಳಿರಣ್ಣಾ ! ಗೆಲ್ಲಬಹುದು ಮತ್ತೊಂದು ಭೇದದಲ್ಲಿ. ಅದೆಂತೆಂದರೆ:ಭಕ್ತನಾದರೆ ತನುವ ಗುರುವಿಂಗಿತ್ತು, ಮನವ ಲಿಂಗಕ್ಕಿತ್ತು, ಧನವ ಜಂಗಮಕ್ಕಿತ್ತು ಬೆರೆದರೆ, ಮಾಯಾಪಾಶ ಹರಿಯಿತ್ತು. ಇದರ ಗೊತ್ತು ಹಿಡಿವನೆಂದರೆ ಆತನ ಭಕ್ತನೆಂಬೆ. ಗುರುವಾದರೆ ಸಕಲ ಆಗಮಂಗಳನರಿದು, ತತ್ವಮಸಿ ಎಂದು ನಿತ್ಯವ ನೆಮ್ಮಿ, ತನ್ನ ಒತ್ತುವಿಡಿದ ಶಿಷ್ಯಂಗೆ ಪರತತ್ವವ ತೋರಿ, ಪ್ರಾಣಲಿಂಗವ ಕರದಲ್ಲಿ ಕೊಟ್ಟು, ಆ ಲಿಂಗ ಅಂಗವೆಂಬ ಉಭಯದೊಳಗೆ ತಾನಡಗಿ, ತನ್ನೊಳಗೆ ಶಿಷ್ಯನಡಗಿ, ನಾನು ನೀನು ಎಂಬ ಉಭಯ ಎರಡಳಿದರೆ, ಆತನ ಗುರುವೆಂಬೆ. ಜಂಗಮವಾದರೆ ಬಾಯಿಲೆಕ್ಕಕ್ಕೆ ಬಾರದೆ, ಬಂದು ಆಶ್ರಿತವೆನಿಸಿಕೊಳ್ಳದೆ ಆಸೆಯಳಿದು ಲಿಂಗಜಂಗಮವಾಗಿ ನಿರ್ಗಮನಿಯಾಗಿ, ಭರ್ಗೋ ದೇವಸ್ಯ ಎಂಬ, ಏಕೋದೇವ ನ ದ್ವಿತೀಯವೆಂಬ ಶ್ರುತಿಗೆ ತಂದು ತಾ ಪರಮಾನಂದದಲ್ಲಿ ನಿಂದು, ಪರಿಪೂರ್ಣನೆನಿಸಿಕೊಂಡು, ಅಣುವಿಂಗಣು, ಮಹತ್ತಿಂಗೆ ಮಹತ್ತು, ಘನಕ್ಕೆ ಘನವೆಂಬ ವಾಕ್ಯಕ್ಕೆ ಸಂದು, ತಾ ನಿಂದು ಜಗವನೆಲ್ಲವ ಆಡಿಸುವ ಅಂತರಾತ್ಮಕನಾಗಿ ಅಡಗಿದರೆ ಜಂಗಮವೆಂಬೆ. ಅಂತಾದರೆ ಈ ತ್ರಿವಿಧವು ಏಕವಾದುದನರಿದು, ಈ ಲೋಕದ ಕಾಕುಬಳಕೆಗೆ ಸಿಲ್ಕದೆ, ಇಲ್ಲಿ ಹುಟ್ಟಿದವರೆಲ್ಲ ಇವರೊಳಗೆ ಆದರು. ನಾನು ತ್ರಿವಿಧದ ನೆಲೆಯ ಹಿಡಿದುಕೊಂಡು ಇವೆಲ್ಲಕ್ಕೂ, ಹೊರಗಾಗಿ ಹೋದನಯ್ಯಾ, ಬಸವಪ್ರಿಯ ಕೂಡಲಚೆನ್ನ ಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸದ್ಭಕ್ತಂಗೆಯೂ ಜಂಗಮಕ್ಕೆಯೂ ಭಾಜನ ಬೇರೆಂಬ ಶಾಸ್ತ್ರದ ಸದಗರು ನೀವು ಕೇಳಿರೋ. ಭಕ್ತದೇಹಿಕ ದೇವನೆಂದು ಶ್ರುತಿ ಸಾರುತ್ತಿವೆ, ಅರಿದು ಮರೆಯದಿರಿ, ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ, ಮರವೆಯಿಂದ ದಕ್ಷ ಶಿರವ ನೀಗಿ ಕುರಿದಲೆಯಾದುದನರಿಯಿರೆ ಮರೆಯದೆ ವಿಚಾರಿಸಿ ನೋಡಿ, ಭಕ್ತಂಗೂ ಲಿಂಗಕ್ಕೂ ಭಿನ್ನವಿಲ್ಲ. ಇನ್ನು ಆ ಭಕ್ತಂಗೆಯೂ ಆ ಜಂಗಮಕ್ಕೆಯೂ ಭೇದವಿಲ್ಲ. ಬೇರ್ಪಡಿಸಿ ನುಡಿಯಲುಂಟೆ ಇನ್ನು ಆ ಗುರುವಿಂಗೆಯೂ ಆ ಭಕ್ತಂಗೆಯೂ ಸಂಕಲ್ಪವಿಲ್ಲ. ಅದೆಂತೆಂದಡೆ; ಮೆಟ್ಟುವ ರಕ್ಷೆ, ಮುಟ್ಟುವ ಯೋನಿ, ಅಶನ, ಶಯನ, ಸಂಯೋಗ, ಮಜ್ಜನ, ಭೋಜನ ಇಂತಿವನು ಗುರುಲಿಂಗಜಂಗಮ ಸಹಿತವಾಗಿ ಭೋಗಿಸುವ ಸದ್ಭಕ್ತಂಗೆ ನಾನು ನಮೋ ನಮೋ ಎಂಬೆನು. ಅದೆಂತೆಂದಡೆ; ಅರ್ಥಪ್ರಾಣಾಭಿಮಾನಂ ಚ ಗುgõ್ಞ ಲಿಂಗೇ ಚ ಜಂಗಮೇ± ತಲ್ಲಿಂಗಜಂಗಮಪ್ರಾಣಂ ಭಕ್ತಸ್ಥಲಮುದಾಹೃತಮ್ ಎಂದುದಾಗಿ, ಇದನರಿದು ಅರ್ಥವನೂ ಪ್ರಾಣವನೂ ಅಭಿನವನೂ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ಆ ಗುರುಲಿಂಗಜಂಗಮವೆ ಪ್ರಾಣವಾಗಿಹ ಸದ್ಭಕ್ತಂಗೆಯೂ ಆ ಗುರುಲಿಂಗಜಂಗಮಕ್ಕೆಯೂ ಏಕಭಾಜನವಲ್ಲದೆ ಏಕಭೋಜನವಲ್ಲದೆ, ಭಿನ್ನಭಾಜನ ಭಿನ್ನಭೋಜನವುಂಟೆ _ಇಲ್ಲವಾಗಿ, ಅದೇನು ಕಾರಣವೆಂದಡೆ; ಆ ಸದ್ಭಕ್ತನ ಅಂಗವೆಂಬ ಗೃಹದಲ್ಲಿ ಜಂಗಮವಿಪ್ಪನಾಗಿ ಇದನರಿದು ಬೇರೆ ಮಾಡಿ ನುಡಿಯಲಾಗದು. ಚೆನ್ನಯ್ಯನೊಡನುಂಬುದು ಆವ ಶಾಸ್ತ್ರ ಕಣ್ಣಪ್ಪ ಸವಿದುದ ಸವಿವುದಾವ ಶಾಸ್ತ್ರ ಭಕ್ತದೇಹಿಕ ದೇವನಾದ ಕಾರಣ. ಅದೆಂತೆಂದಡೆ; ಭಕ್ತಜಿಹ್ವಾಗ್ರತೋ ಲಿಂಗಂ ಲಿಂಗಜಿಹ್ವಾಗ್ರತೋ ರುಚಿಃ ರುಚ್ಯಗ್ರೇ ತು ಪ್ರಸಾದೋಸ್ತು ಪ್ರಸಾದಃ ಪರಮಂ ಪದಂ ಇಂತೆಂಬ ಪುರಾಣವಾಕ್ಯವನರಿದು ಸದ್ಭಕ್ತನೂ ಗುರುಲಿಂಗಜಂಗಮವೂ ಈ ನಾಲ್ವರೂ ಒಂದೆ ಭಾಜನದಲ್ಲಿ ಸಹಭೋಜನಮಾಡುವರಿಂಗೆ ಇನ್ನೆಲ್ಲಿಯ ಸಂಕಲ್ಪವೊ, ಇನ್ನೆಲ್ಲಿಯ ಸೂತಕವೋ, ಇನ್ನೆಲ್ಲಿಯ ಪಾತಕವೋ ಕೂಡಲಸಂಗಮದೇವಾ.
--------------
ಬಸವಣ್ಣ
ಅಂಗದ ಕಳೆ ಲಿಂಗದಲ್ಲಿ ಅರತ ಬಳಿಕ, ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ. ಪ್ರಾಣದ ಕಳೆ ಅರಿವಿನಲ್ಲಿ ಅರತ ಬಳಿಕ, ಶಬ್ದಸಂದಣಿಗೆ ಹಂಗಿಲ್ಲ ನೋಡಾ. ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ ! ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.
--------------
ಅಲ್ಲಮಪ್ರಭುದೇವರು
ಕಾಯಜೀವದ ಕೀಲವನರಿದು ಜನನ ಮರಣಂಗಳಾಯಾಸವಳಿದು ಅಂಗಲಿಂಗದೊಳಗೇಕಾರ್ಥವ ಮಾಡುವ ಭೇದವೆಂತೆಂದಡೆ : ಪಂಚಭೂತಂಗಳ ಪೂರ್ವಾಶ್ರಯವನಳಿದು ಪಂಚಕರಣಂಗಳ ಹಂಚುಹರಿಮಾಡಿ, ಕರ್ಮಬುದ್ಧೀಂದ್ರಿಯಂಗಳ ಮರ್ದಿಸಿ, ದಶವಾಯುಗಳ ಹಸಗೆಡಿಸಿ ಕರಣಚತುಷ್ಟಯಂಗಳ ಕಾಲಮುರಿದು ಪಂಚವಿಂಶತಿ ತತ್ತ್ವಂಗಳ ವಂಚನೆಯನಳಿದು ಹತ್ತುನಾಡಿಗಳ ವ್ಯಕ್ತೀಕರಿಸಿ ಅಷ್ಟತನು ಅಷ್ಟಾತ್ಮಂಗಳ ನಷ್ಟಮಾಡಿ ಅಂತರಂಗದ ಅಷ್ಟಮದಂಗಳ ಸಂತರಿಸಿ, ಬಹಿರಂಗದ ಅಷ್ಟಮಂದಗಳ ಬಾಯಟೊಣೆದು, ಅಷ್ಟಮೂರ್ತಿಮದಂಗಳ ಹಿಟ್ಟುಗುಟ್ಟಿ ಸಪ್ತಧಾತು ಸಪ್ತವ್ಯಸನಂಗಳ ಸಣ್ಣಿಸಿ ಷಡೂರ್ಮೆ ಷಡ್‍ವರ್ಗಂಗಳ ಕೆಡೆಮೆಟ್ಟಿ ಷಡ್‍ಭ್ರಮೆ ಷಡ್‍ಭಾವವಿಕಾರಂಗಳ ಗಂಟಸಡಲಿಸಿ, ಪಂಚಕೋಶ ಪಂಚಕ್ಲೇಶಂಗಳ ಪರಿಹರಿಸಿ ಅಂಗಚತುಷ್ಟಯಂಗಳ ಶೃಂಗಾರವಳಿದು ಗುಣತ್ರಯಂಗಳ ಗೂಡಮುಚ್ಚಿ ಅಹಂಕಾರತ್ರಯಂಗಳ ಶಂಕೆಗೊಳಗುಮಾಡಿ ತಾಪತ್ರಯಂಗಳ ತಲ್ಣಣಗೊಳಿಸಿ ತನುತ್ರಯಂಗಳ ತರಹರಮಾಡಿ ಜೀವತ್ರಯಂಗಳ ಜೀರ್ಣೀಕರಿಸಿ, ಆತ್ಮತ್ರಯಂಗಳ ಧಾತುಗೆಡಿಸಿ, ಅವಸ್ಥಾತ್ರಯಂಗಳ ಅವಗುಣವಳಿದು, ತ್ರಿದೋಷಂಗಳ ಪಲ್ಲಟಗೊಳಿಸಿ, ಭಾವತ್ರಯಂಗಳ ಬಣ್ಣಗೆಡಿಸಿ , ದುರ್ಭಾವತ್ರಯಂಗಳ ದೂರಮಾಡಿ, ಮನತ್ರಯಂಗಳ ಮರ್ದನಮಾಡಿ, ತ್ರಿಕರಣಂಗಳ ಛಿದ್ರಗೊಳಿಸಿ, ಪಂಚಾಗ್ನಿಗಳ ಸಂಚಲವನತಿಗಳೆದು, ಇಂತೀ ಅಂಗ ಪ್ರಕೃತಿಗುಣಂಗಳೆಲ್ಲ ನಷ್ಟವಾಗಿ ಸರ್ವಾಂಗದಲ್ಲಿ ಸರ್ವಾಚಾರ ನೆಲೆಗೊಂಡು ಬಹಿರಂಗದ ಮೇಲಿದ್ದ ಇಷ್ಟಲಿಂಗದಲ್ಲಿ ನೈಷಿ*ಕಭಾವಂಬುಗೊಂಡು, ಅನಿಮಿಷದೃಷ್ಟಿ ಅಚಲಿತವಾಗಿ ಭಾವಬಲಿದಿರಲು, ಆ ಲಿಂಗವು ಅಂತರಂಗಕ್ಕೆ ವೇಧಿಸಿ ಪ್ರಾಣಲಿಂಗವೆನಿಸಿಕೊಂಡು ಷಡಾಧಾರಚಕ್ರಂಗಳಲ್ಲಿ ಷಡ್‍ವಿಧ ಲಿಂಗವಾಗಿ ನೆಲೆಗೊಂಬುದು. ಆ ಷಡ್‍ವಿಧ ಲಿಂಗಕ್ಕೆ ಷಡಿಂದ್ರಿಯಗಳನೆ ಷಡ್‍ವಿಧಮುಖಂಗಳೆನಿಸಿ, ಆ ಷಡ್‍ವಿಧ ಮುಖಂಗಳಿಗೆ ಷಡ್‍ವಿಧವಿಷಯಂಗಳನೆ ಷಡ್‍ವಿಧ ದ್ರವ್ಯಪದಾರ್ಥವೆನಿಸಿ, ಆ ಪದಾರ್ಥಂಗಳು ಷಡ್‍ವಿಧಲಿಂಗಕ್ಕೆ ಷಡ್‍ವಿಧ ಭಕ್ತಿಯಿಂದೆ ಸಮರ್ಪಿತವಾಗಲು, ಅಂಗವೆಂಬ ಕುರುಹು ಅಡಗಿ ಒಳಹೊರಗೆಲ್ಲ ಮಹಾಘನಲಿಂಗದ ದಿವ್ಯಪ್ರಕಾಶವೆ ತುಂಬಿ ತೊಳಗಿ ಬೆಳಗುತ್ತಿರ್ಪುದು. ಇಂತಪ್ಪ ಘನಲಿಂಗದ ಬೆಳಗನೊಳಗೊಂಡಿರ್ಪ ಚಿದಂಗವೆ ಚಿತ್‍ಪಿಂಡವೆನಿಸಿತ್ತು. ಇಂತಪ್ಪ ಅತಿಸೂಕ್ಷ್ಮವಾದ ಚಿತ್‍ಪಿಂಡದ ವಿಸ್ತಾರವನು ಚಿದ್‍ಬ್ರಹ್ಮಾಂಡದಲ್ಲಿ ವೇಧಿಸಿ ಕಂಡು, ಆ ಚಿದ್‍ಬ್ರಹ್ಮಾಂಡದ ಅತಿಬಾಹುಲ್ಯವನು ಆ ಚಿತ್‍ಪಿಂಡದಲ್ಲಿ ವೇಧಿಸಿ ಕಂಡು, `ಪಿಂಡಬ್ರಹ್ಮಾಂಡಯೋರೈಕ್ಯಂ' ಎಂಬ ಶ್ರುತಿ ಪ್ರಮಾಣದಿಂದ ಆ ಪಿಂಡಬ್ರಹ್ಮಾಂಡಗಳು ಒಂದೇ ಎಂದು ಕಂಡು, ಆ ಪಿಂಡಬ್ರಹ್ಮಾಂಡಂಗಳಿಗೆ ತಾನೇ ಆಧಾರವೆಂದು ತಿಳಿದು ಆ ಪಿಂಡಬ್ರಹ್ಮಾಂಡಗಳ ತನ್ನ ಮನದ ಕೊನೆಯಲ್ಲಿ ಅಡಗಿಸಿ, ಆ ಮನವ ಭಾವದ ಕೊನೆಯಲ್ಲಿ ಅಡಗಿಸಿ, ಆ ಭಾವವ ಜ್ಞಾನದ ಕೊನೆಯಲ್ಲಿ ಅಡಗಿಸಿ, ಆ ಜ್ಞಾನವ ಮಹಾಜ್ಞಾನದಲ್ಲಿ ಅಡಗಿಸಿ, ಆ ಮಹಾಜ್ಞಾನವನು ಪರಾತ್ಪರವಾದ ಪರಿಪೂರ್ಣ ಬ್ರಹ್ಮದಲ್ಲಿ ಅಡಗಿಸಿ, ಆ ಪರಬ್ರಹ್ಮವೆ ತಾನಾದ ಶರಣಂಗೆ ದೇಹಭಾವವಿಲ್ಲ. ಆ ದೇಹಭಾವವಿಲ್ಲವಾಗಿ ಜೀವಭಾವವಿಲ್ಲ. ಆ ಜೀವಭಾವವಿಲ್ಲವಾಗಿ ಫಲಪದಂಗಳ ಹಂಗಿಲ್ಲ. ಫಲಪದದ ಹಂಗಿಲ್ಲವಾಗಿ ಭವಬಂಧನಂಗಳು ಮುನ್ನವೆ ಇಲ್ಲ. ಭವಬಂಧನಂಗಳು ಇಲ್ಲವಾಗಿ, ಆ ಶರಣನು ತಾನು ಎಂತಿರ್ದಂತೆ ಪರಬ್ರಹ್ಮವೆ ಆಗಿ ಆತನ ಹೃದಯಾಕಾಶವು ಬಚ್ಚಬರಿಯ ಬಯಲನೈದಿಪ್ಪುದು. ಇದು ಕಾರಣ, ಆ ಶರಣನು ದೇಹವಿದ್ದು ಸುಟ್ಟಸರವಿಯಂತೆ ನಿರ್ದೇಹಿಯಾದ ಕಾರಣ ಉಪಮಾತೀತ ವಾಙ್ಮನಕ್ಕಗೋಚರನಾಗಿರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪರಿಶುದ್ಧ ಮನದಿಂದ ಲಿಂಗವ ಧರಿಸಿ, ನಿಯಮ ವ್ರತ ಶೀಲ ಧರ್ಮದಲ್ಲಿ ನಿರತನಾದ ಭಕ್ತನ, ಅಂಗವೆಂಬ ಅರಮನೆಯಲ್ಲಿಹ ಲಿಂಗಕ್ಕೆ ಮನವೆ ಮಂಚ, ನೆನಹೆ ಹಾಸುಗೆ, ಅನುಭಾವವೆ ಒರಗು, ಶಾಂತಿಯೆ ಆಲವಟ್ಟವು, ಸಮತೆಯೆ ಸಂತೋಷವಾಗಿ, ಸದ್ಭಕ್ತನ ಹೃದಯ ಸಿಂಹಾನಸದಲ್ಲಿ ಮೂರ್ತಿಗೊಂಡಿಪ್ಪನಯ್ಯಾ, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
ಅಂಗವೆಂಬ ಶಿವಾಲಯದೊಳಗೆ ಆನಾದಿಲಿಂಗವು ಚತುರ್ದಶ ಭುವನಂಗಳ ನುಂಗಿಕೊಂಡು ತನ್ನ ಸುಳುವ ತಾನೇ ತೋರುತಿಪ್ಪುದು ನೋಡಾ. ಆ ಸುಳುವಿನ ಭೇದವನರಿತು ಲಿಂಗಾರ್ಚನೆಯಂ ಮಾಡಿ ಕೂಡಿ ಸಮರಸವಾದ ಶರಣಂಗೆ ನಮೋ ನಮೋ ಎನುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನಾದವೇ ಲಿಂಗ, ಬಿಂದುವೇ ಪೀಠವಾಗಿ ಶಿವಶಕ್ತಿಸಂಪುಟವಾದ ಪಂಚಮದ ಕರ್ಮೇಶ ಲಿಂಗನಿರ್ವಯಲ ಪಿಂಡ, ಅಂಗವೆಂಬ ಪಿಂಡ ತದ್ರೂಪವೆನೆಯ್ದಿ ಪರಿಪೂರ್ಣ ಪಿಂಡಾಕಾಶರೂಪ ತಾನಾಗಿ ನುಡಿಗೆಡೆ ಇಲ್ಲ[ದೆ] ನಿಂದ ನಿರವಯ ಘನತೇಜ ಹೋ ಜ್ಯೋತಿಯಂತೆ ಇರ್ದುಯಿಲ್ಲದ ಬೆಡಗಿನ ಭೇದವ ನಿಮ್ಮಲ್ಲಿಯೇ ಕಂಡೆನಯ್ಯಾ, ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಅಂಗಲಿಂಗವೆಂದು, ಪ್ರಾಣಲಿಂಗವೆಂದು, ಉಭಯದ ಒಡಲನೊಡಗೂಡುವ ಪರಿಯಿನ್ನೆಂತೊ? ಅದು ಶಿಲೆಯ ಬೆಳಗಿನಂತೆ, ಶಿಲೆ ಅಡಗಿದಡೆ ಬೆಳಗಿಲ್ಲ. ಬೆಳಗಡಗಲಿಕ್ಕೆ ಆ ಶಿಲೆ ಅಚೇತನ ಪಾಷಾಣವಾಯಿತ್ತು. ಅಪ್ಪು ಕೂಡಿದ ಪರ್ಣಯೆಲೆ ನಾಮರೂಪಾದಂತೆ, ಅಪ್ಪುವಡಗೆ ಅಚೇತನ ತರಗಾಯಿತ್ತು. ಅಂಗದ ಮೇಲಣ ಲಿಂಗ, ಲಿಂಗದ ಮೂರ್ತಿಯ ನೆನಹು, ಈ ತ್ರಿವಿಧ ಒಂದುಗೂಡಿದಲ್ಲಿ, ಅಂಗವೆಂಬ ಭಾವ, ಲಿಂಗವೆಂಬ ನೆನಹು ನಿರಂಗವಾದಲ್ಲಿ, ಕಾಯಕ್ಕೆ ಕುರುಹಿಲ್ಲ, ಜೀವಕ್ಕೆ ಭಯವಿಲ್ಲ. ಈ ಗುಣ ಪ್ರಾಣಲಿಂಗಿಯ ಭೇದ, ನಿ:ಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಂಗವೆಂಬ ಭೂಮಿಯಲ್ಲಿ ಸಂಗಸಮರಸವೆಂಬ ಪುರುಷನು ಹಿಂಗದೆ ಪರಮಾನಂದ ಪ್ರಭೆಯಲ್ಲಿ ಕೂಡಿ ಮಂಗಳಮಯವಾದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂಗವೆಂಬ ಅಂಗನೆ ಆತ್ಮನೆಂಬ ಪುರುಷನನಪ್ಪಿ ಮುಂಡೆತನವಿಲ್ಲದೆಯಿಪ್ಪ ಭೇದವ ತಿಳಿದು ನೋಡಿರಣ್ಣಾ. ಕುಂಟಣಿಯಾದ ಒಡಹುಟ್ಟಿದ ಮನ ನಪುಂಸಕನಾದ ಕಾರಣ ಲಿಂಗಸಂಗಿಯಲ್ಲದೆ ಹೋದ ಕೇಳಿರಣ್ಣಾ. ಆತ್ಮನು ಪುರುಷನಾದಡೂ ಲಿಂಗವ ಕೂಡುವ ಭರದಿಂದ ಸತಿಯಾಗಬಲ್ಲ. ಶರಣಸತಿ ಲಿಂಗಪತಿಯೆಂಬುದುಂಟಾಗಿ, ಶಿವಜ್ಞಾನವೆಂಬ ಸಖಿಯ ಕೈವಿಡಿದು ಸೌರಾಷ್ಟ್ರ ಸೋಮೇಶ್ವರಲಿಂಗವ ಕೂಡಿ ಸುಖಿಯಾದನು.
--------------
ಆದಯ್ಯ
ಅಂಗವೆಂಬ ವಾಕುಳದ ಕುಂಭದಲ್ಲಿ ತೋರಿ ಅಡಗುವ ಮರೀಚಿಕಾ ಜಲವ ತುಂಬಿದಂತೆ. ಚಿತ್ತ ಸಾಳಿವನವೆಂಬ ತಂಡುಲ ತೊಳೆಯದೆ, ಥಳಿಸದೆ, ಕುಂಭದೊಳಗೆ ಹಾಕಿ ವಾಯುವಿನ ದೂಮ್ರದಿಂದ ಬೇಯಿಸಿ ಅದು ಬೆಂದುದಿಲ್ಲ. ಅದು ಮೂರು ಗುಂಡಿನ ಗುಣದಿಂದ ಗುಂಡಿನ ಚಂದ ತುಂಬಿಹ ಮಡಕೆಯಂತೆ. ಮತ್ತೊಂದರ ಇರವು ತಿರುಗುವ ಚಕ್ರದಗೊಂದಣದಂದದ ದ್ವಂದ್ವವ, ಹಿಂಗಿ ನಿಂದ ಕುಂದಿನಿರವು, ಕೂರಲಗಿನ ಬಾಯ ಧಾರೆಯಂತೆ ಉಭಯವ ಕೂಡಿಕೊಂಡು ನಿಂದ ಗುಂಡು. ಇದು ಬೇಯದು, ಮಡಕೆಯನೊಡೆ, ಜಲವ ತಡಹು, ತಂಡುಲವ ಚೆಲ್ಲು, ಮಾರುತನ ಬೆಂಕಿಯ ಕೆಡಿಸು, ಓಗರದೂಟದ ಬಿಡು, ಭವಸಾಗರದ ಸಾಧನೆಯನೆ ಗೈ, ಕಾಹುರದ ಕಮ್ಮಟವ ಪರರುವ ಬೋಧಿಸುವ ರಸನವ ಕೀಳು, ಕಿತ್ತ ಮತ್ತೆ ಇನ್ನರಿ. ಸಕಲೇಂದ್ರಿಯದ ಹುತ್ತದ ಹಾವ ಹಾಡಿ. ಮೊತ್ತದ ಮನೆ ವಿಕಾರದ ಚಿತ್ತದ ಹುಲಿಯ ಮುರಿ. ಭಕ್ತಿಗೆ ಸಹ ಕರ್ತುವ ಚಿತ್ತದಲ್ಲಿ ಅಚ್ಚೊತ್ತಿದಂತಿರು. ಸಚ್ಚಿದಾನಂದ ಹೃದಯಪೂರಿತನಾಗಿ ಬೆಚ್ಚಂತಿರು. ವಿರಳವಿಲ್ಲದೆ ಅವಿರಳನಾಗಿ ಎನಗೊಂದು ತೊಡುಗೆಯಿಲ್ಲ, ನಿನ್ನಡಿಯಲ್ಲಿ ಅಡಗಿದೆನಾಗಿ ನಿನ್ನ ಒಡಗೂಡುವ ಕಡೆಯಾವುದು? ಎನ್ನ ಕಾಯಕದ ಬಿಡುವಾವುದು? ಅಂದಾಡಿದ ಮಾತಿನ ಕಡಿವೆಂಗೆ ಬಂದ ಮೊಡತದ ನಗೆಯ ಕಾಯಕ ಸಂದಿತ್ತು. ನಿನ್ನಯ ಕೂಪಳ ಬಯಲಾಗಿ ಅಜಾತನೆ ಸಲಹು, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಇನ್ನಷ್ಟು ... -->