ಅಥವಾ

ಒಟ್ಟು 189 ಕಡೆಗಳಲ್ಲಿ , 27 ವಚನಕಾರರು , 141 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
`ಹಸ್ತಮಸ್ತಕಸಂಯೋಗಾದ್ಭೂತಿಪಟ್ಟಸ್ಯ ಧಾರಣಾತ್ | ಶಿವದೇವೇತಿ ವಿಜ್ಞೇಯಃ ಸರ್ವಪಾಪೈಃ ಪ್ರಮುಚ್ಯತೇ || ಎಂದು ವೀರಶೈವಾಚಾರ್ಯನ ಹಸ್ತದ ವೀರಮಾಹೇಶ್ವರನಪ್ಪ ಶಿಷ್ಯನ ಮಸ್ತಕದ ಸಂಯೋಗದ ದೆಸೆಯಿಂದಲೂ ವಿಭೂತಿಯ ಪಟ್ಟವ ಧರಿಸೂದರ ದೆಸೆಯಿಂದಲೂ ಆ ಶಿಷ್ಯನು....ದೇಹಿ ಎಂದರಿಯಲ್ತಕ್ಕಾತನು. ಅಂತಪ್ಪ ವೀರಮಾಹೇಶ್ವರನು ಎಲ್ಲಾ ಪಾಪಂಗಳಿಂ ದಲೂ ಬಿಡಲ್ಪಡುತ್ತಿಹನಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಂತರಂಗ ಬಹಿರಂಗ ಶುದ್ಧನಾದ ಶರಣನ ದಿಟಪುಟವ ನೋಡಿರಯ್ಯ. ಅಂತಪ್ಪ ಶರಣನ ಕಂಡು ನಮೋ ನಮೋ ಎನುತಿರ್ದೆಯಯ್ಯಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ವಂತಿಗೆಲಿಂಗವ ಕಟ್ಟಿಕೊಂಡು ಸಂತೆಯ ಸೂಳೆಯಂತೆ ಇರುವರು ನೋಡಾ. ಅಂತಪ್ಪ ಪಾತಕರಿಗೆ ಗುರುವಿಲ್ಲ, ಜಂಗಮವಿಲ್ಲ. ಪಾದೋದಕ ಪ್ರಸಾದವಿಲ್ಲ. ಇಂತಪ್ಪ ಕರ್ಮಿಗಳ ಕಂಡು ಎನ್ನ ಮನ ನಾಚಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಗುರುವಿಡಿದು ಲಿಂಗವಾವುದೆಂದರಿಯಬೇಕು, ಲಿಂಗವಿಡಿದು ಜಂಗಮವಾವುದೆಂದರಿಯಬೇಕು, ಜಂಗಮವಿಡಿದು ಪ್ರಸಾದವಾವುದೆಂದರಿಯಬೇಕು, ಪ್ರಸಾದವಿಡಿದು ಪರಮಪರಿಣಾಮವೆಡೆಗೊಳ್ಳಬೇಕು. ಅಂತಪ್ಪ ಪರಮಪರಿಣಾಮವೆ ಪರಬ್ರಹ್ಮವೆಂದರಿತಲ್ಲಿ, ಸೌರಾಷ್ಟ್ರ ಸೋಮೇಶ್ವರಲಿಂಗ ಸನ್ನಹಿತ.
--------------
ಆದಯ್ಯ
ಉದಯ, ಮಧ್ಯಾಹ್ನ, ಅಸ್ತಮಯ, ಕತ್ತಲೆ ಬೆಳಗು, ದಿನ ವಾರ ಲಗ್ನತಿಥಿ ಮಾಸ ಸಂವತ್ಸರ ಹೋಗುತ್ತ ಬರುತ್ತಲಿವೆ. ಇವ ನೋಡಿದವರೆಲ್ಲ ಇದರೊಳಗೆ ಹೋಗುತ್ತ ಬರುತ್ತ ಇದ್ದಾರೆ. ಜಗಕ್ಕೆ ಇವೀಗ ಇಷ್ಟವಾಗಿಪ್ಪವು. ಎನ್ನ ದೇವಂಗೆ ಇವೊಂದೂ ಅಲ್ಲ. ದಿನಕಾಲ ಯುಗಜುಗ ಪ್ರಳಯಕ್ಕೆ ಹೊರಗಾದ ಆ ದೇವನ, ಅಂಗವಿಸಿ ಮುಟ್ಟಿ ಹಿಡಿದ ಕಾರಣ, ಎಮ್ಮ ಶರಣರು ಪ್ರಳಯಕ್ಕೆ ಹೊರಗಾದರು. ಇದನರಿದು, ಅಂತಪ್ಪ ಶರಣರ ಪಾದವ ನಂಬಿ, ಕೆಟ್ಟು ಬಟ್ಟಬಯಲಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಶರೀರವೇ ಹೇಯದಮೊಟ್ಟೆ ದುರ್ಗಂಧವೇ ನೈಜ, ಸುಗಂಧವೆಲ್ಲಾ ಆರೋಪಿತವಲ್ಲದೆ ನಿಜವಲ್ಲವಾಗಿ ಹೇಯವೇ ನೈಜ. ಮನಸ್ಸೇ ದುಃಖದಮೊಟ್ಟೆ, ಆ ದುಃಖವೇ ನೈಜ, ಸುಖವೇ ಆರೋಪಿತ, ಶರೀರದಲ್ಲಿರ್ಪ ಹೇಯವು ಪ್ರಬಲಗಳಾದ ವ್ಯಾದ್ಥಿಪೀಡೆಗಳನನುಭವಿಸುತ್ತಿರಲು, ಅದೇ ಜೀವನಿಗಿಹಲೋಕದಯಾತನೆಯಾಯಿತ್ತು. ದುಃಖದಮೊಟ್ಟೆಯಾಗಿರ್ಪ ಮನಸ್ಸನ್ನು ದುರ್ಗುಣಂಗಳು ಬಂದು ಅನುಭವಿಸುತ್ತಿರಲ್ಲದೇ ಜೀವನಿಗೆ ಪರಲೋಕಮಾಯಿತ್ತು. ಇಂತಪ್ಪ ಶರೀರದಲ್ಲಿ ಬಿಂದುವನ್ನೂ ಮನದಲ್ಲಿ ನಾದವನ್ನೂ ಇಹಪರಕೃತ್ಯಂಗಳಿಗೆ ಸಾಧಕಭೂತಮಾಗಿ ಪರಮಾತ್ಮನಿಟ್ಟಿರ್ಪನು. ಅಂತಪ್ಪ ಬಿಂದುವೇ ಆನಂದಸ್ವರೂಪು, ನಾದವೇ ಜ್ಞಾನಸ್ವರೂಪು, ಆ ಆನಂದಬಿಂದುವು ಶರೀರಕ್ಕೆ ಕಾರಣಮಾಗಿಹುದು, ಈ ನಾದಬಿಂದುಗಳ ಉತ್ತರಮಾರ್ಗವೇ ಮನಶ್ಶರೀರಗಳಿಗೆ ಸುಖ, ನಿಜಪ್ರಕಟವಂ ಮಾಡುತ್ತಿರ್ಪುದು. ದಕ್ಷಿಣಮಾರ್ಗವೇ ದುಃಖ, ಮಿಥ್ಯಾಪ್ರಕಟವಂ ಮಾಡುತ್ತಿಹುದು. ಇವೆರಡರ ಸಂಬಂಧವಿಲ್ಲದ ವಸ್ತುವಿಗೆ ಕೋಟಲೆಗೊಂಡು ಕುದಿವುತ್ತಿರ್ಪ ಜೀವನ ಪರಿಯ ನೋಡಾ! ಜೀವನಿಗೆ ನಿಜವೇ ಭಾವ. ಆ ಭಾವದಲ್ಲಿರ್ಪುದು ಕಳಾಪದಾರ್ಥವು, ಆ ಕಳಾಮಯವಾಗಿರ್ಪುದು ಸತ್ಯವು. ಅಂತಪ್ಪ ಸತ್ಯವಂ ಹಿಡಿದು ಈ ಮಿಥ್ಯಾರೂಪಮಾದ ಸ್ಥೂಲ ಸೂಕ್ಷ್ಮಂಗಳಂ ಬಿಟ್ಟಲ್ಲಿ, ಜೀವನೇ ಪರಮನಪ್ಪನು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಹುಟ್ಟುವುದೇ ಬಂಧ, ಸಾವುದೇ ಮೋಕ್ಷ ಎಂಬ ಅರೆಮರುಳುಗಳನೇನೆಂಬೆನಯ್ಯಾ. ಸಾವ ಹುಟ್ಟುವ ಬಂಧದಲ್ಲಿ ಮೋಕ್ಷ ಉಂಟೇ ? ಸಂಚಿತ ಪ್ರಾರಬ್ಧ ಆಗಾಮಿ ಸವೆದು ಅಷ್ಟಭೋಗಂಗಳು ತೀರಿ, ಹುಟ್ಟುಹೊಂದು ಬಿಟ್ಟುದೇ ಮೋಕ್ಷ. ಅಂತಪ್ಪ ಮೋಕ್ಷ ಸಿದ್ಧಿಯಪ್ಪಡೆ ಸೌರಾಷ್ಟ್ರ ಸೋಮೇಶ್ವರಲಿಂಗವ ಕೈವಿಡಿದಲ್ಲದಾಗದು.
--------------
ಆದಯ್ಯ
ತಾವು ಗುರುವೆಂದು ಮುಂದಣವರಿಗನುಗ್ರಹವ ಮಾಡುವರಯ್ಯಾ, ತಾವು ಗುರುವೆಂತಾದರೊ ! ಎಲ್ಲರಿಗೆಯೂ ಒಂದೇ ದೇಹ. ``ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ ಆತ್ಮಾಕಾಯಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಯಂ' ಎಂದುದಾಗಿ, ಗುರುವೆಂಬುದು ತಾನು ಪರುಷವು ಆ ಪರುಷವು ಮುಟ್ಟಲೊಡನೆ ಉಳಿದ ಲೋಹಂಗಳು ಸುವರ್ಣವಾದುವಲ್ಲದೆ, ಆ ಪರುಷವೆ ಆಗಲರಿಯವು_ ಅದು ಗುರುಸ್ಥಲವಲ್ಲ ನಿಲ್ಲು ಮಾಣು. ಗುರುವೆಂಬುದು ತಾನು ಸ್ವಯಂ ಜ್ಯೋತಿಪ್ರಕಾಶವು, ಅಂತಪ್ಪ ಸ್ವಯಂಜ್ಯೋತಿ ಪ್ರಕಾಶವ ತಂದು ಪರಂಜ್ಯೋತಿಯ ಹೊತ್ತಿಸಿದಡೆ, ಆ ಜ್ಯೋತಿ ತನ್ನಂತೆ ಮಾಡಿತ್ತು. ಅದಾವ ಜ್ಯೋತಿಯೆಂದಡೆ ಪಶ್ಚಿಮಜ್ಯೋತಿ. ಆ ಪಶ್ಚಿಮಜ್ಯೋತಿಯ ಬೆಳಗಿನಿಂದ ಪ್ರಾಣಲಿಂಗವ ಕಂಡು ಸುಖಿಯಾದೆನು. ನಾಲ್ಕು ವೇದಾರ್ಥ:ಅಜಪಗಾಯತ್ರಿ. ಅಜಪಗಾಯತ್ರಿಯರ್ಥ:ಪ್ರಾಣಾಯಾಮ. ಪ್ರಾಣಾಯಾಮದಿಂದ ಪ್ರಾಣಲಿಂಗ ಸಂಬಂಧವ ಮಾಡೂದು. ಇಷ್ಟರಲ್ಲಿ ತಾನು ಸ್ವತಂತ್ರನಾದಡೆ, ಇಷ್ಟಲಿಂಗವನಾರಿಗಾದರೂ ಕೊಡುವುದು. ಇಲ್ಲದಿದ್ದರೆ ಅಂಧಕನ ಕೈಯ ಹೆಳವ ಹಿಡಿದಂತೆ ಕಾಣಾ ಕೂಡಲಚೆನ್ನಸಂಗಮದೇವಯ್ಯಾ
--------------
ಚನ್ನಬಸವಣ್ಣ
ಪರಶಿವತತ್ವದ ಸ್ವರೂಪವ ಬಲ್ಲೆವೆಂಬಿರಿ, ನಿಮ್ಮ ಬಲ್ಲತನವ ಪೇಳಿರಯ್ಯಾ. ಆಗಮ ಪುರುಷರಿರಾ, ನಿಮ್ಮಾಗಮಂಗಳು ನಮ್ಮ ಶಿವನ ನಿಲುಕಡೆಯನರಿಯದೆ, ಅರಸಿ ಅರಸಿ ಆಸತ್ತು ಬಳಲಿ ಹೋದವು ಕೇಳಿರಯ್ಯಾ. ವೇದಪುರುಷರಿರಾ, ನಿಮ್ಮ ವೇದಂಗಳು ವೇದಿಸಲರಿಯದೆ ನಾಯಾಗಿ ಬೊಗಳಿ, ಬೆಂಡಾಗಿ ಹೋದವು ಕೇಳಿರಯ್ಯಾ. ಪುರಾಣಪುರುಷರಿರಾ, ನಿಮ್ಮ ಪುರಾಣಂಗಳು ಪೂರೈಸಿ ಪರಶಿವನ ಕಾಣದೆ ವೀರಶೈವ ಪುಂಡ್ರಮಸ್ತಕದಿಂದ ಮಥನಿಸಿ ಹೋದವು ಕೇಳಿರಯ್ಯಾ. ಶಾಸ್ತ್ರಸಂದ್ಥಿಗಳರಿರಾನಿಮ್ಮಶಾಸ್ತ್ರ ಸಾದ್ಥಿಸಿ ನಮ್ಮ ಪರಶಿವನ ನಿಲುಕಡೆಯ ಕಾಣದೆ ಒರಲಿ ಒರಲಿ ಹೋದವು ಕೇಳಿರಯ್ಯಾ. ತರ್ಕ ತಂತ್ರಗಳ ಕಲಿತು ಹೇಳುವರೆಲ್ಲ ಟಗರು, ಕೋಣ, ಹುಂಜಿನಂತೆ ಹೋರಾಡಿ ಮಥನದಿಂದ ಹೊಡೆದಾಡಿ ಪರಶಿವನ ಕಾಣದೆ ಸತ್ತು ಹೋದರಲ್ಲಾ ! ಇಂತೀ ವೇದ ಶಾಸ್ತ್ರಗಮ ಪುರಾಣ ತರ್ಕ ತಂತ್ರಗಳು ಶಿವನ ನಿಲುಕಡೆಯನೆಂದಿಗೂ ಅರಿಯವು. ಇಂತಿವನೆಲ್ಲವನು ನೋಡಿ ಶಿವನ ಕೂಡಬೇಕೆಂಬಣ್ಣಗಳು ಮುನ್ನವೆ ಅರಿಯರು, ಅದೇನು ಕಾರಣವೆಂದಡೆ- ಪ್ರಸೂತವಾಗದ ಮುನ್ನ ಶಿಶು ಬಯಸಿದರುಂಟೆ ? ಹಸಿಯಿಲ್ಲದ ಭೂಮಿಯಲ್ಲಿ ಬೀಜವ ಬಿತ್ತಿ ಫಲವ ಬಯಸಿದರುಂಟೆ ? ಈ ದೃಷ್ಟಾಂತದಂತೆ ತಿಳಿದು ಇಂತೀ ಎಲ್ಲವನು ವಿಸರ್ಜಿಸಿ ಕಳೆವುದು ಶಿವಜ್ಞಾನ. ಅಂತಪ್ಪ ಶಿವಜ್ಞಾನದ ನಿಲವು ಕರಸ್ಥಳದ ಇಷ್ಟಲಿಂಗ. ಆ ಇಷ್ಟಲಿಂಗಬ್ರಹ್ಮದ ನಿಜವು ತಾನೆಂದು ತಿಳಿದು ಶಿಶುಕಂಡ ಕನಸಿನಂತೆ, ಮೂಕ ಸಕ್ಕರಿಮೆದ್ದಂತೆ ಇರ್ದರಯ್ಯಾ ನಿಮ್ಮ ಶರಣರು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸಾಣಿಯ ಮೇಲೆ ಶ್ರೀಗಂಧವನಿಟ್ಟು, ಗಂಧ ಗಂಧವೆಂದಡೆ ಗಂಧವ ಕೊಡಬಲ್ಲುದೆ ? ಜಡಚಕ್ರದೊಳಗೆ ಧಾನ್ಯವ ನೀಡಿ ಹಿಟ್ಟೆಂದಡೆ ಹಿಟ್ಟಾಗಬಲ್ಲುದೆ ? ಗಾಣಕ್ಕೆ ಎಳ್ಳು ನೀಡಿ, ಎಣ್ಣೆ ಎಣ್ಣೆ ಎಂದಡೆ ಎಣ್ಣೆ ಬೀಳಬಲ್ಲುದೆ ? ಪಂಚಾಮೃತವ ಪಾಕವ ಮಾಡಿ ಎಡೆಯ ಬಡಿಸಿ ಮುಂದಿಟ್ಟುಕೊಂಡು, ಹೊಟ್ಟೆ ತುಂಬು ತುಂಬು ಎಂದಡೆ ಹೊಟ್ಟೆ ತುಂಬಿ ಹಸುವಡಗಬಲ್ಲುದೆ ? ಹಾಗೆ ಜಡರೂಪವಾದ ಲಿಂಗವ ಜಡಮತಿಗಳಾದ ಗುರುಮುಖದಿಂ ಪಡಕೊಂಡು ಅಂಗದ ಮೇಲೆ ಇಷ್ಟಲಿಂಗವೆಂದು ಧರಿಸಿ ಆ ಲಿಂಗಕ್ಕೆ ಮುಕ್ತಿಯ ಕೊಡು ಕೊಡು ಎಂದಡೆ, ಆ ಲಿಂಗವು ಮುಕ್ತಿಯ ಕೊಡಲರಿಯದು. ಅದೆಂತೆಂದೊಡೆ : ಚಂದನ, ಧಾನ್ಯ, ತಿಲಪಂಚಪಾಕವನು 'ಮರ್ದನಂ ಗುಣವರ್ಧನಂ' ಎಂದುದಾಗಿ, ಇಂತೀ ಎಲ್ಲವು ಮರ್ದನವಿಲ್ಲದೆ ಸ್ವಧರ್ಮಗುಣ ತೋರಲರಿಯವು. ಹಾಗೆ ಅಂತಪ್ಪ ಜಡಸ್ವರೂಪನಾದ ಲಿಂಗವನು ಜ್ಞಾನಗುರುಮುಖದಿಂ ಶಿಲಾಲಿಖಿತವ ಕಳೆದು, ಕಳಾಭೇದವ ತಿಳಿದು, ಆ ಲಿಂಗವೇ ಘನಮಹಾ ಇಷ್ಟಲಿಂಗವೆಂಬ ವಿಶ್ವಾಸ ಬಲಿದು ತುಂಬಿ ಅಂತಪ್ಪ ಇಷ್ಟಬ್ರಹ್ಮದಲ್ಲಿ ಅವಿರಳಸಂಬಂದ್ಥಿಯಾಗಿ ಆ ಇಷ್ಟಲಿಂಗದ ಸತ್ಕ್ರಿಯಾಚಾರದಲ್ಲಿ ಸರ್ವಾಂಗವನು ದಹಿಸಿದಲ್ಲದೆ ಭವಹಿಂಗದು, ಮುಕ್ತಿದೋರದು, ಮುಕ್ತಿಯ ಪಡೆಯಲರಿಯದೆ ಪ್ರಾಣಲಿಂಗಿಯಾಗಲರಿಯನು ನೋಡಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮೋರೆಯಿಲ್ಲದವರಿಗೆ ಕನ್ನಡಿಯ ತೋರಿದಂತೆ, ಕಿವಿಯಿಲ್ಲದ ಕಿವುಡಗೆ ಶಾಸ್ತ್ರವ ಹೇಳುವಂತೆ, ಮೂಗಿಲ್ಲದ ಮೂಕಂಗೆ ಮಾತು ಹೇಳುವಂತೆ, ಬಾಯಿ ಇಲ್ಲದವರಿಗೆ ಪಂಚಾಮೃತವನುಣಿಸಿದಂತೆ, ಒಲ್ಲದ ಕೂಸಿಗೆ ನೊರೆವಾಲನೆರೆದಂತೆ, ಕನ್ಯಾಕುಮಾರಿಯ ಸಂಗ ನಪುಂಸಕ ಮಾಡುವಂತೆ, ಇಂತೀ ದೃಷ್ಟಾಂತದಂತೆ ತ್ರಿವಿಧಮಲವ ಕಚ್ಚಿ, ಸಂಸಾರವಿಷಯಲಂಪಟರಾದ ತಾಮಸಜೀವಿಗಳಿಗೆ ಶಿವಾನುಭವಬೋಧೆಯ ಮಾಡಿದುದು ಒಂದೇ ನೋಡಾ. ಅಂತಪ್ಪ ಮಂಗಮೂಳರ ಮುಂದೆ ಮಾತನಾಡಲಾಗದು. ಮನದೆರದು ಮಹಾನುಭಾವಬೋಧೆಯ ಬೆಸಗೊಳ್ಳಲಾಗದು. ತಥಾಪಿ ಬಿಡೆಯಭಾವದಿಂ ಶಿವಾನುಭಾವ ಬೆಸಗೊಂಡಡೆ ಹಳ್ಳಗೊಂಡ ಹರವಿಯ ನೀರು ತುಂಬಿ ಇರಿಸಿದಂತೆ, ಹೊಳ್ಳ ಕುಟ್ಟಿ ಗಾಳಿಗೆ ತೂರಿದಂತೆ ಆಯಿತ್ತು. ಇದು ಕಾರಣ ಶಬ್ದಮುಗ್ಧನಾಗಿ ಕಲ್ಲುಮರದಂತೆ, ಪರ್ಣ ಉದುರಿದ ವೃಕ್ಷದಂತೆ, ಸುಮ್ಮನೆ ಇರ್ದನು ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->