ಅಥವಾ

ಒಟ್ಟು 91 ಕಡೆಗಳಲ್ಲಿ , 32 ವಚನಕಾರರು , 83 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಅಂತರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು, ಬಹಿರಂಗದಲ್ಲಿ ಹಳಿದಾಡುವರೇನಯ್ಯ ? ಬಹಿರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು ಅಂತರಂಗದಲ್ಲಿ ಹಳಿದಾಡುವರೇನಯ್ಯ ? ಅಂತರಂಗ ಬಹಿರಂಗದಲ್ಲಿ ಸಂಶಯವಿಲ್ಲದೆ ಬಹಿರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಇಷ್ಟಲಿಂಗಕ್ಕೆ ಅರ್ಪಿಸಿ, ಪ್ರಾಣಲಿಂಗದಲ್ಲಿ ಕೂಡಿದ್ದೇ ಭಕ್ತಿಯೆಂಬೆನಯ್ಯ. ಅಂತರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಭಾವಲಿಂಗದಲ್ಲಿ ಕೂಡಿದ್ದೇ ಸದ್ಭಕ್ತಿಯೆಂಬೆನಯ್ಯ. ಭಕ್ತಿ ಸದ್ಭಕ್ತಿಯೆಂಬ ಭೇದವನು ಅರಿತಾತನೇ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂತರಂಗ ಬಹಿರಂಗ ಶುದ್ಧನಾದ ಶರಣನ ದಿಟಪುಟವ ನೋಡಿರಯ್ಯ. ಅಂತಪ್ಪ ಶರಣನ ಕಂಡು ನಮೋ ನಮೋ ಎನುತಿರ್ದೆಯಯ್ಯಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ ಭಕ್ತಿಯನೊಳಕೊಂಡು, ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ ನಾನು, ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ, ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.
--------------
ಅಲ್ಲಮಪ್ರಭುದೇವರು
ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.
--------------
ಜೇಡರ ದಾಸಿಮಯ್ಯ
ತ್ಯಾಗಾಂಗನಾಗಿ ಕೊಡುತ್ತಿದ್ದಲ್ಲಿ ಭೋಗಾಂಗನಾಗಿ ಸುಖಿಸುತ್ತಿದ್ದಲ್ಲಿ ಯೋಗಾಂಗನಾಗಿ ವಾಯುದ್ವಾರ ಭೇದಂಗಳನರಿತು ಧ್ಯಾನ ಧಾರಣ ಸಮಾದ್ಥಿಗಳಲ್ಲಿದ್ದಡೂ ಒಂದು ಕುರಿತು ಲಕ್ಷಸಿ ವಸ್ತು ಇದೇನೆಂದು ವಿಶ್ವಾಸದಿಂದಲ್ಲದಾಗದು. ಹಿಂದಕ್ಕಾದ ದೇವಪದವಂತರು ಮುಂದಕ್ಕೆ ಅರಿದು ಕೂಡುವ ಅರುಹಿರಿಯ ಶರಣತತಿಗಳೆಲ್ಲರು ವಿಶ್ವಾಸದಿಂದಲ್ಲದೆ ದೃಷ್ಟವ ಕಾಣರು. ಇದು ಕಾರಣ, ಬಾಹ್ಯಕರ್ಮ ಅಂತರಂಗ ಶುದ್ಧ ನಿರವಯವೆಂಬುದೊಂದು ಕುರುಹಿನ ನೆಮ್ಮುಗೆ ಉಂಟಹನ್ನಕ್ಕ ವಿಶ್ವಾಸಬೇಕು. ಇದು ಸಂಗನಬಸವಣ್ಣ ಕೊಂಡು ಬಂದ ಲಿಂಗದ ಬಟ್ಟೆ. ಬ್ರಹ್ಮೇಶ್ವರಲಿಂಗವೆಂಬ ವಸ್ತುವ ಕೂಡುವ ದೃಷ್ಟ.
--------------
ಬಾಹೂರ ಬೊಮ್ಮಣ್ಣ
ಲಿಂಗವೇ ಪ್ರಾಣ, ಪ್ರಾಣವೇ ಲಿಂಗವಾದ ಪ್ರಾಣಲಿಂಗಿಯ ಪ್ರಾಣಲಿಂಗಕ್ಕೆ, ಧ್ಯಾನಾಮೃತ ಪಂಚಾಕ್ಷರಂಗಳ ಪಂಚಾಮೃತದಿಂ ಮಜ್ಜನಕ್ಕೆರೆದು, ಆ ಲಿಂಗಕ್ಕೆ ಮನವೇ ಪುಷ್ಪ, ಬುದ್ಧಿಯೆ ಗಂಧ, ಚಿತ್ತವೇ ನೈವೇದ್ಯ. ಅಹಂಕಾರವಳಿದ ನಿರಹಂಕಾರದ ಆರೋಗಣೆಯ ಮಾಡಿಸಿ, ಪರಿಣಾಮದ ವೀಳ್ಯವನಿತ್ತು, ಸ್ನೇಹದಿಂದ ವಂದನೆಯಂ ಮಾಡಿ, ಆ ಪ್ರಾಣಲಿಂಗಕ್ಕೆ ಬಹಿರಂಗದ ಪೂಜೆಯ ಪರಿಯಲಿ ಅಂತರಂಗದ ಪೂಜೆಯ ಮಾಡುವುದು. ಬಹಿರಂಗದ ಪೂಜೆಯ ಪ್ರಾಣಲಿಂಗಕ್ಕೆ ಅಂತರಂಗದ ವಸ್ತುಗಳೆಲ್ಲವನ್ನು ತಂದು, ಬಹಿರಂಗದ ವಸ್ತುವಿನಲ್ಲಿ ಕೂಡಿ, ಅಂತರ್ಬಹಿರುಭಯ ಲಿಂಗಾರ್ಚನೆಯ ಮಾಡಲು, ಅಂತರಂಗ ಬಹಿರಂಗ ಭರಿತನಾಗಿಪ್ಪನಾ ಶಿವನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅಂತರಂಗ ಶುದ್ಧವಿಲ್ಲದವರೊಳಗೆ ಅತ್ತಿಯ ಹಣ್ಣಿನಂತೆ ಕ್ಷುದ್ರ ಬಿಡಿದು ನೋಡಯ್ಯಾ. ಅಂತರಂಗ ಶುದ್ಧವುಳ್ಳವರೊಳಗೆ ಬಾಳೆಯ ಹಣ್ಣಿನಂತೆ ಸಂಗದಲ್ಲಿ ಇರಬಾರದು ಶರಣರು. ಇದು ಕಾರಣ. ಅಂತರಂಗ ಶುದ್ಧವಿಲ್ಲದವರ ಸಂಗದಲ್ಲಿ ಇರಬಾರದು ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಲ್ಲಿ ಪಂಚಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯದಲ್ಲಿ ಚತುರ್ಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಶ್ರೋತ್ರ ನೇತ್ರ ಘ್ರಾಣ ತ್ವಕ್ಕು ಜಿಹ್ವೆ ವಾಕ್ಕು ಪಾಣಿ ಪಾದ ಪಾಯು ಗುಹ್ಯಗಳೆಂಬ ದಶೇಂದ್ರಿಯಂಗಳಲ್ಲಿ ದಶಮುಖಲಿಂಗವ ಪ್ರತಿಷ್ಠೆಯ ಮಾಡಿ ಅಂತರಂಗ ಬಹಿರಂಗವ ಹತವ ಮಾಡಿದನಯ್ಯಾ ಕೂಡಲಚೆನ್ನಸಂಗಮದೇವಾ ಎನ್ನ ಶ್ರೀಗುರು ಬಸವಣ್ಣನು
--------------
ಚನ್ನಬಸವಣ್ಣ
ತನ್ನ ತಾನರಿಹವೇ ಪರಮಾತ್ಮಯೋಗ, ತನ್ನ ತಾಮರಹವೇ ಮಾಯಾಸಂಬಂಧ. ಅಂತರಂಗ ಬಹಿರಂಗ ಪರಮಾಕಾಶಮಧ್ಯದಲ್ಲಿ ಪರಮಾತ್ಮನು ಪರಬ್ರಹ್ಮಸ್ವರೂಪನು, ನಿತ್ಯ, ನಿರಂಜನ, ಉಪಮಾತೀತ ನಿಷ್ಪತಿ, ಕೇವಲ ನಿಷ್ಕಲಸ್ವರೂಪನು. ಭ್ರೂಮಧ್ಯದಲ್ಲಿ ಪರಮಾತ್ಮನೇ ಅಂತರಾತ್ಮನೆನಿಸಿ ಸಕಲ ನಿಷ್ಕಲನಾಗಿಪ್ಪ. ಹೃದಯಸ್ಥಾನದಲ್ಲಿ ಆ ಪರಮಾತ್ಮನೇ ಜೀವಾತ್ಮನಾಗಿ ಕೇವಲ ಸಕಲನಾಗಿಪ್ಪ. ಬ್ರಹ್ಮರಂಧ್ರಸ್ಥಾನದಲ್ಲಿ ನಿಷ್ಕಳಗುರುಮೂತಿರ್ಲಿಂಗ ಭ್ರೂಮಧ್ಯದಲ್ಲಿ ಸಕಲನಿಷ್ಕಲ ಪರಂಜ್ಯೋತಿರ್ಲಿಂಗ ಹೃದಯಸ್ಥಾನದಲ್ಲಿ ಕೇವಲ ಸಕಲ ಜಂಗಮಲಿಂಗ ಇಂತು ಪರಮಾತ್ಮನೇ ಪರಬ್ರಹ್ಮ, ಪರಮಾತ್ಮನೇ ಅಂತರಾತ್ಮ, ಪರಮಾತ್ಮನೇ ಜೀವಾತ್ಮ. ಬಹಿರಂಗದಲ್ಲಿ ಪರಮಾತ್ಮನೇ ಗುರುಲಿಂಗ ಪರಮಾತ್ಮನೇ ಶಿವಲಿಂಗ ಪರಮಾತ್ಮನೇ ಜಂಗಮಲಿಂಗ. ಇಂತು, ಪರಮಾತ್ಮನೇ ಪರಬ್ರಹ್ಮ, ಪರಮಾತ್ಮನೇ ಸರ್ವಾತ್ಮ, ಪರಮಾತ್ಮನೇ ಸರ್ವಗತ, ಪರಮಾತ್ಮನೇ ಆತ್ಮಗತ. ಇದು ಕಾರಣ, ಪರಮಾತ್ಮನೇ ಅಂತರಂಗ, ಬಹಿರಂಗಭರಿತ ಪ್ರಾಣಲಿಂಗ. ಇಂತು ಅರಿವುದೇ ಪರಮಾತ್ಮಯೋಗ, ಮರವೇ ಮಾಯಾ ಸಂಗ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಎನ್ನ ಸರ್ವಾಂಗದಲ್ಲಿ ಲಿಂಗವೈದಾನೆ, ಐದಾನೆ, ಎನ್ನ ಮನವನರಿಯದೆ ಕೆಟ್ಟೆ ಕೆಟ್ಟೆನಯ್ಯಾ. ಎನ್ನ ಅಂತರಂಗ ಬಹಿರಂಗದಲ್ಲಿ ಲಿಂಗವೈದಾನೆ, ಮನವನರಿಯದೆ ಕೆಟ್ಟೆ ಕೆಟ್ಟೆ. ವಿಶ್ವಾಸದಿಂ ಗ್ರಹಿಸಲೊಲ್ಲದೆ ಕೆಟ್ಟೆ ಕೆಟ್ಟೆನಯ್ಯಾ. ಈ ಮನ ವಿಶ್ವಾಸದಿಂದ ಗ್ರಹಿಸಿದಡೆ ಸತ್ಯನಹೆ ನಿತ್ಯನಹೆ ಮುಕ್ತನಹೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರು ಮಾಡಿದ ಗುರುತ್ವ ಉಪಮಾತೀತವು. ನೇತ್ರದಲ್ಲಿ ತನ್ನ ರೂಪು ತುಂಬಿ ನೇತ್ರವ ಗುರು ಮಾಡಿದನು. ಶ್ರೋತ್ರದಲ್ಲಿ ಮಹಾಮಂತ್ರವ ತುಂಬಿ ಶ್ರೋತ್ರವ ಗುರು ಮಾಡಿದನು. ಘ್ರಾಣದಲ್ಲಿ ಮಹಾಗಂಧವ ತುಂಬಿ ಘ್ರಾಣವ ಗುರು ಮಾಡಿದನು. ಜಿಹ್ವೆಯಲ್ಲಿ ಕರುಣಪ್ರಸಾದವ ತುಂಬಿ ಜಿಹ್ವೆಯ ಗುರು ಮಾಡಿದನು. ಕಾಯವ ಮಹಾಕಾಯವೆನಿಸಿ, ಪ್ರಸಾದಕಾಯವೆನಿಸಿ, ಕಾಯವ ಗುರು ಮಾಡಿದನು. ಪ್ರಾಣವನೂ ಲಿಂಗಪ್ರಾಣಸಂಬಂಧವ ಮಾಡಿ ಪ್ರಾಣವ ಗುರು ಮಾಡಿದನು. ಇಂತು ಅಂತರಂಗ ಬಹಿರಂಗವನು ಗುರು ಮಾಡಿದನು. ಸರ್ವಾಂಗವನು ಗುರುವ ಮಾಡಿದ ಗುರುವಿಂಗೆ ನಾನಿನ್ನೇನ ಮಾಡುವೆನಯ್ಯಾ? ಗುರುಪೂಜೆಗನುವಾದ ದ್ರವ್ಯಂಗಳನೂ, ಆವಾವ ಪದಾರ್ಥಂಗಳನೂ ಆವಾವ ಪುಷ್ಪಫಲಾದಿಗಳನೂ ವಿಚಾರಿಸಿ ನೋಡಿದಡೆ ಆವುವು ಗುರುತ್ವವಿಲ್ಲ. ಸರ್ವದ್ರವ್ಯಮೂಲವೂ ಸರ್ವಪದಾರ್ಥಮೂಲವೂ ಸರ್ವರಸಪುಷ್ಪಫಲಾದಿಗಳಿಗೆ ಎಲ್ಲದಕ್ಕೂ ಮೂಲಿಗ ಮನವು ಗುರುತ್ವವನ್ನುಳ್ಳದ್ದು. ತನ್ನ ಮನೋವಾಕ್‍ಸಹಿತ ಕಾಯವನೂ ಸದ್ಗುರುವಿಂಗಿತ್ತು ಶ್ರೀಗುರು ದರ್ಶನ ಸ್ಪರ್ಶನ ಮಾಡಿ ಸುಖಿಯಪ್ಪೆ ನಾನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ದೇಹ ಕಂದಡೇನು? ದೇಹ ಇಂದುವಿನಂತಾದಡೇನು? ದೇಹ ಬಾತು ಬಿದ್ದಡೇನು? ದೇಹ ಇದ್ದ ಯೋಗ್ಯತೆಗೆ ಮೈಗೊಟ್ಟಡೇನಯ್ಯಾ? ಅಂತರಂಗ ಶುದ್ಧವಾದ ಬಳಿಕ ಹೇಗಿದ್ದಡೇನಯ್ಯಾ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂತರಂಗ ಶುದ್ಧವಿಲ್ಲದವರು, ಬಹಿರಂಗದಲ್ಲಿ ಸದಾಚಾರ ಸತ್ಕಿ ್ರೀಯೆಯ, ಸರ್ವಜನ ಮೆಚ್ಚುವಂತೆ ಮಾಡುತಿರ್ದರೇನು? ಅದು ಲೋಕರಂಜನೆಯಲ್ಲದೆ ಶಿವ ಮೆಚ್ಚ. ಶಿವಶರಣರು ಮೆಚ್ಚರು. ಬಿತ್ತಿದ ಬೆಳೆಯನುಂಬಂತೆ, ಮಾಡಿದ ಸತ್ಕರ್ಮಫಲವನುಂಬ, ಕೈಕೂಲಿಕಾರಂಗೆ ಮುಕ್ತಿಯುಂಟೆ? ನಿಜಗುರು ಸ್ವತಂತ್ರಸಿದ್ಧಲೀಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->