ಅಥವಾ

ಒಟ್ಟು 16 ಕಡೆಗಳಲ್ಲಿ , 4 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ನಾ' `ನೀ' ಎಂಬ ಭೇದ ಅಂದೂ ಇಲ್ಲ, ಇಂದೂ ಇಲ್ಲ ಸಾಲೋಕ್ಯನಲ್ಲ ಸಾಮೀಪ್ಯನಲ್ಲ ಶರಣ. ಸಾರೂಪ್ಯನಲ್ಲ ಸಾಯಜ್ಯನಲ್ಲ ಶರಣ. ಕಾಯನಲ್ಲ ಅಕಾಯನಲ್ಲ ಗುಹೇಶ್ವರಲಿಂಗ ತಾನೆಯಾಗಿ
--------------
ಅಲ್ಲಮಪ್ರಭುದೇವರು
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಅಂದೂ ನೀನೆ, ಇಂದೂ ನೀನೆ, ಎಂದೂ ನೀನೆ, ಕೇಳಾ ತಂದೆ. ನಿನ್ನ ಬೆಂಬಳಿವಿಡಿದ ಹಳೆಮಗಳಾನಯ್ಯ ಅಂದೂ ಇಂದೂ ಎಂದೂ ನಿನ್ನ ನಂಬಿದ ಒಲವಿನ ಶಿಶು ನಾನಯ್ಯ. ಒಂದಲ್ಲದೆ ಎರಡರಿಯೆನಯ್ಯಾ. ಎನ್ನ ತಂದೆ ಕೇಳಾ, ಚೆನ್ನಮಲ್ಲಿಕಾರ್ಜುನಾ ನಿಮ್ಮ ಎಂಜಲನುಂಬ ಹಳೆಯವಳಾನಯ್ಯಾ.
--------------
ಅಕ್ಕಮಹಾದೇವಿ
ಸತ್ಯಸಹಜ ನಿತ್ಯ ಉತ್ತಮ ವಸ್ತು, ನಿಜತತ್ವವೆನಿಸುವ ಶಿವನು ಒಂದೇ ವಸ್ತು. ವೇದ, ಶಾಸ್ತ್ರ, ಪುರಾಣ, ಆಗಮ, ಅಷ್ಟಾದಶ ವಿದ್ಯೆಂಗಳು ವಾದಿಸಲು, ಅಂದೂ ಇಂದೂ ಶಿವತತ್ವ ಒಂದೇ ವಸ್ತುವೆಂದು ನಿರ್ಧರಿಸುವವು. ಸಕಲ ನಿಃಕಲದೊಳಗೆ ಉತ್ತಮೋತ್ತಮ ವಸ್ತುವೊಂದೇ. ಇದನರಿದು ನಿಶ್ಚೈಸುವ ವಿವೇಕವುಳ್ಳ ಮನ ಅಂದೂ ಇಂದೂ ಒಂದೇ. ಇದನೆಂತೂ ನೀವೇ ಬಲ್ಲರಿ. ಈ ಒಂದೊಂದರಲ್ಲೆ ಒಂದೊಂದ ಮಾಡಲು ಒಂದಲ್ಲದೆ ಮತ್ತೊಂದಿಲ್ಲ. ಇದಲ್ಲದೆ ಇನ್ನೊಂದುಂಟೆಂಬವಂಗೆ ಎರಡಲ್ಲದೆ ಒಂದಿಲ್ಲ. ಅವಂಗೆ ಅಧೋಗತಿ, ಅವನಜ್ಞಾನಿ. ಒಂದೆಂದರಿದವಂಗೆ ಜ್ಞಾನವಿದೆ, ಭಕ್ತಿಯಿದೆ, ಮುಕ್ತಿಯಿದೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಸಟೆಯ ದಿಟವಮಾಡಿ ಕಂಡು ಸ್ವಭಾವವಾಗಿ ಸದ್ಭಾವದಿಂ ಲಿಂಗವಾಗಿ ಲಿಂಗವನು ಭಕ್ತಿಯಿಂದ ಪೂಜಿಸಿ ಲಿಂಗದಲ್ಲಿ ವರವ ಪಡೆದು, ಶಿವಪದವ ಪಡೆದರು ಪುರಾತನರು. ಅದೆಂತೆನಲು ಕೇಳಿರೆ: ಬಳ್ಳ ಲಿಂಗವೆ? ಅಲ್ಲ, ಅದು ಸಟೆ, ಸದ್ಭಾವದಿಂ ಲಿಂಗವಾಯಿತ್ತು, ಬಳ್ಳೇಶ್ವರ ಮಲ್ಲಯ್ಯಗಳಿಂದ. ಆಡಿನ ಹಿಕ್ಕೆ ಲಿಂಗವೆ? ಅಲ್ಲ, ಅದು ಸಟೆ. ಸದ್ಭಾವದಿಂ ಲಿಂಗವಾಯಿತ್ತು, ಗೊಲ್ಲಾಳರಾಯನಿಂದ. ನರಮಾಂಸವ ಭಕ್ಷಿಸುವೆನೆಂಬವ ಜಂಗಮವೆ? ಅಲ್ಲ, ಅದು ಸಟೆ. ಸದ್ಭಾವದಿಂ ಭಾವಿಸೆ ಜಂಗಮವಾಗಿ ಕೇವಲ ಲಿಂಗವಾಯಿತ್ತು ಸಿರಿಯಾಳನಿಂದ. ಸತ್ತ ಕರುವ ಹೊತ್ತು ಮಾದಾರನಾಗಿಬರುವುದು ಜಂಗಮಲಕ್ಷಣವೇ? ಅಲ್ಲ, ಅದು ಸಟೆ. ಸದ್ಭಾವದಿಂ ಭಾವಿಸೆ ಜಂಗಮ ಲಿಂಗವಾಯಿತ್ತು ಕೆಂಭಾವಿಯ ಭೋಗಣ್ಣನಿಂದ. ಡೊಂಬಿತಿ ಗುರುವೆ? ಅಲ್ಲ, ಅದೂ ಸಟೆ. ಸದ್ಭಾವದಿಂ ಭಾವಿಸೆ ಲಿಂಗವಾಯಿತ್ತು ಗುರುಭಕ್ತಯ್ಯಂಗಳಿಂದ. ಇಂತು ಸಟೆಯ ದಿಟವ ಮಾಡಿ ದಿಟವಾದರು, ಸದ್ಭಕ್ತರಾದರು, ಕೇವಲ ಲಿಂಗವ ಮಾಡಿದರು. ದಿಟ ಶಿವನ ಸಟೆಯ ಮಾಡಿ ಕಂಡು ಸನತ್ಕುಮಾರನೊಂಟೆಯಾದನು. ದಿಟ ಶಿವನ ಸಟೆಯ ಮಾಡಿ ಕಂಡು ಬ್ರಹ್ಮ ತನ್ನ ಶಿರವ ಹೋಗಾಡಿಕೊಂಡನು. ದಿಟ ಶಿವನ ಸಟೆಯ ಮಾಡಿ ಕಂಡು ದಕ್ಷನು ತನ್ನ ಶಿರವ ಹೋಗಾಡಿಕೊಂಡನು. ದಿಟ ಶಿವನ ಸಟೆಯ ಮಾಡಿ ಕಂಡು ನರಸಿಂಹನು ವಧೆಗೊಳಗಾದನು. ಈ ಮಹಾ ತಪ್ಪುಗಳನ್ನು ಮಾಡಿ ದೋಷಿಗಳಾದರು. ಮಹಾಲಿಂಗದ ಸದ್ಭಕ್ತರು, ಮಹಾಶರಣಪ್ಪ ನಂದೀಶ್ವರ ವೀರಭದ್ರ ಮೊದಲಾದ ಮಹಾಗಣಂಗಳಿಗೆ ಸದ್ಭಕ್ತಿಯ ಮಾಡಿ ತಪ್ಪ ಪರಿಹರಿಸಿಕೊಂಡು ಸದ್ಭಕ್ತರಾದರು. ಸಟೆಯ ದಿಟವ ಮಾಡುವ ಶಕ್ತಿಯಿಲ್ಲ ಎಮ್ಮ ಸದ್ಭಕ್ತರಂತೆ. ಅದಂತಿರಲಿ, ದಿಟವ ಸಟೆಯ ಮಾಡಿ ದೋಷಿಗಳಾದಿರಿ ಅಭಕ್ತರಂತೆ. ಅದಂತಿರಲಿ, ಸಟೆಯ ದಿಟವ ಮಾಡಬೇಡ, ದಿಟವ ಸಟೆಯ ಮಾಡಬೇಡ. ಸಹಜಸ್ವಭಾವ ನಿತ್ಯಸತ್ಯವಹ ತಾತ್ಪರ್ಯವನೆ ವಿಶ್ವಾಸವ ಮಾಡಿ, ನಂಬಿ ಭಕ್ತಿಯಿಂ ಪೂಜಿಸಿ ಅವಿಶ್ವಾಸದಿಂ ಕೆಡಬೇಡ, ಕೆಡಬೇಡ. ಸಹಜವಹ ದೃಷ್ಟವಹ ಪರಶಿವನು ಶ್ರೀಗುರು ವಿಶ್ವಾಸವಂ ಮಾಡಿ ನಂಬಿರಣ್ಣಾ, ಮತ್ತೆಯೂ ನಂಬಿರಣ್ಣಾ. ಆ ಪರಶಿವನು ಶ್ರೀಗುರುಲಿಂಗವು ಏಕವಾದ ಲಿಂಗವು ವಿಶ್ವಾಸವ ಮಾಡಿ ನಂಬಿರಣ್ಣಾ, ಮತ್ತೆಯೂ ನಂಬಿರಣ್ಣಾ. ಆ ಪರಶಿವಮೂರ್ತಿ ಜಂಗಮವು ವಿಶ್ವಾಸವ ಮಾಡಿ ನಂಗಿರಣ್ಣಾ, ಮತ್ತೆಯೂ ನಂಬಿರಣ್ಣಾ. ಕೇವಲವಿಶ್ವಾಸವ ಮಾಡಿ ಪ್ರಸಾದವ ಪಡೆದು ಮುಕ್ತರಾಗಿ, ಇದು ದೃಷ್ಟ. ಅವಿಶ್ವಾಸದಿ ಕೆಡದಿರಿ ಕೆಡದಿರಿ. ಸರ್ವಸದ್ಭಾವವಿಶ್ವಾಸದಿಂ ಬದುಕಿರಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗವ ನಂಬಿರಣ್ಣಾ.
--------------
ಉರಿಲಿಂಗಪೆದ್ದಿ
ಪೃಥ್ವಿಯೊಳಗಿಲ್ಲ, ಆಕಾಶದೊಳಗಿಲ್ಲ, ಚತುರ್ದಶ ಭುವನಾದಿ ಭುವನಂಗಳೊಳಗೆಯೂ ಇಲ್ಲ. ಹೊರಗೆಯೂ ಇಲ್ಲ_ಏನಾಯಿತ್ತೆಂದರಿಯೆನಯ್ಯಾ. ಗುಹೇಶ್ವರ ಅಂದೂ ಇಲ್ಲ ಇಂದೂ ಇಲ್ಲ ಎಂದೂ ಇಲ್ಲ.
--------------
ಅಲ್ಲಮಪ್ರಭುದೇವರು
ಶ್ರೀಗುರುಪ್ರೇಮವಿಲ್ಲದೆ ಲಿಂಗಾರ್ಚನೆಯ ಮಾಡಿದಡೆ ಅದು ಲಿಂಗಾರ್ಚನೆಯಲ್ಲ. ಜಂಗಮಪ್ರೇಮವಿಲ್ಲದೆ ಲಿಂಗಾರ್ಚನೆಯ ಮಾಡಿದಡೆ ಅದೂ ಲಿಂಗಾರ್ಚನೆಯಲ್ಲ. ಶಿವಲಿಂಗಪ್ರೇಮವಿಲ್ಲದೆ ಲಿಂಗಾರ್ಚನೆಯ ಮಾಡಿದಡೆ ಅದೂ ಲಿಂಗಾರ್ಚನೆಯಲ್ಲ. ಅರ್ಪಿತವನರಿತು, ಅರ್ಪಿಸಿ ಪ್ರಸನ್ನತೆಯ ಹಡೆದು ಪ್ರಸಾದವ ಗ್ರಹಿಸದೆ ಲಿಂಗಾರ್ಚನೆಯ ಮಾಡಿದಡೆ ಅದೂ ಲಿಂಗಾರ್ಚನೆಯಲ್ಲ. ಸರ್ವಾಚಾರಸಂಪತ್ತಿಲ್ಲದೆ ಲಿಂಗಾರ್ಚನೆಯ ಮಾಡಿದಡೆ ಅದೂ ಲಿಂಗಾರ್ಚನೆಯಲ್ಲ. ವಿಚಾರಜ್ಞಾನ ಸುಜ್ಞಾನ ಮಹಾಜ್ಞಾನವೆಂಬ ಪರಿಯನರಿಯದೆ ಲಿಂಗಾರ್ಚನೆಯ ಮಾಡಿದಡೆ ಅದೂ ಲಿಂಗಾರ್ಚನೆಯಲ್ಲ. ಪ್ರಸಾದವ ಹಡೆದು ಮುಕ್ತನಲ್ಲ ಪೂಜಕಾ ಬಹವಸ್ಸಂತಿ ಭಕ್ತಾಶ್ಚ ಲಕ್ಷಮೇವ ಚ ಮತ್ಪ್ರಸಾದಧರಾ ದೇವಿ ದ್ವೌ ತ್ರಯೋ ದ[ಶ]ಪಂಗಕಃ ಇಂತು ಪೂಜಕರಪ್ಪರು. ಬೆಟ್ಟವನೆಚ್ಚ ಕೋಲ್ತಪ್ಪದಂತೆ, ಪೂಜೆಯ ಫಲವುಂಟು. ಸಜ್ಜನಸದ್ಭಕ್ತಿಶಿವಾಚಾರ ಸಂಪತ್ತಿಗೆ ಸಲ್ಲದು. ಇದನರಿದು ಶ್ರೀಗುರುಲಿಂಗ ಶಿವಲಿಂಗ ಜಂಗಮಲಿಂಗದಲ್ಲಿ ಅತ್ಯಂತ ಪ್ರೇಮಿಯಾಗಿ, ಆವಾವ ವಸ್ತು ತನಗೆ ಪ್ರೇಮವಾದುದನಿತ್ತು ಪ್ರಸಾದಿಯಾಗಿ, ಶಿವಲಿಂಗಾರ್ಚನೆಯಂ ಮಾಡಿದಡೆ ಸರ್ವಲೋಕಕ್ಕೆ ಪೂಜ್ಯನಪ್ಪನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಭೂಮಿಯೊಳಗಿಲ್ಲ ಆಕಾಶದೊಳಗಿಲ್ಲ: ಚತುರ್ದಶ ಭುವನದೊಳಗಿಲ್ಲ, ಹೊರಗಿಲ್ಲ. ಏನೆಂದರಿಯರು ಎಂತೆಂದರಿಯರು ಹೇಳಿರಯ್ಯಾ (ಹೇಳಯ್ಯಾ?) ಕೃತಯುಗದಂದಿನ ಮಾತು ಬೇಡ ಗುಹೇಶ್ವರ ಅಂದೂ ಇಲ್ಲ ಇಂದೂ ಇಲ್ಲ.
--------------
ಅಲ್ಲಮಪ್ರಭುದೇವರು
ಕರುವಿನ ರೂಪಿಂಗೆ ಒಳಗೊಂದು ಹೊರಗೊಂದಲ್ಲದೆ ಪರುಷದ ರೂಪಿಂಗೆ ಒಳಗೊಂದು ಹೊರಗೊಂದುಂಟೆ ? ಅಲ್ಲ, ನಿಲ್ಲು, ಮಾಣು, ಪರೀಕ್ಷಿಸಿ ನೋಡಾ. ಪಂಚಭೂತಸಮ್ಮಿಶ್ರನಾದಡೆ ದೇವ ದಾನವರೊಳಗಾದ ಪ್ರಕೃತಿಕಾಯವಾದಾ ತನುವಿಂಗೆ ಒಳಗೊಂದು ಹೊರಗೊಂದು ಅದೂ ಕ್ರಿಯಾಕರ್ಮ ಬೇರೆ ದ್ವಂದ್ವಗ್ರಸ್ತವಾಗಿಹುದು. ಆಪ್ರಕಾರವಲ್ಲ ನೋಡಾ. ಗುರುಲಿಂಗಜಂಗಮ ಪ್ರಸನ್ನವಾದ ಪ್ರಸಾದಕಾಯ ಮಹಾಜ್ಞಾನತನು ಪ್ರಾಣಲಿಂಗ ಸ್ವಾಯತವಾಗಿಪ್ಪ ಘನತರ ಶಿವಲಿಂಗಮೂರ್ತಿ ಸರ್ವಾಂಗಲಿಂಗ ಮೂರ್ತಿಯ ಪರೀಕ್ಷಿಸಿ ನೋಡಿ, ಇಂತು ಸದ್ಗುರುಸ್ವಾಮಿ ಪ್ರಾಣಲಿಂಗಪ್ರತಿಷೆ*ಯಂ ಎಂದು ಮಾಡಿದನೋ ಅಂದೇ ಐಕ್ಯನು, ಅಂದೇ ಶರಣನು, ಅಂದೇ ಪ್ರಾಣಲಿಂಗಿ, ಅಂದೇ ಪ್ರಸಾದಿ, ಅಂದೇ ಮಾಹೇಶ್ವರ, ಅಂದೇ ಭಕ್ತನು. ಇಂದಿನ್ನಾವುದು ಹೊಸತಲ್ಲ ನೋಡಾ. ಗುರುಲಿಂಗಜಂಗಮಕ್ಕೆ ತ್ರಿವಿಧಭಕ್ತಿಯ ಮಾಡುತ್ತಿಪ್ಪ ಭಕ್ತನಾಗಿಪ್ಪನು ಪರಧನ ಪರಸ್ತ್ರೀ ಪರದೈವಂಗಳ ಬಿಟ್ಟು ಮಾಹೇಶ್ವರನಾಗಿಪ್ಪನು. ಕರ್ಮಣಾ ಮನಸಾ ವಾಚಾ ಗುರೂಣಾಂ ಭಕ್ತವತ್ಸಲಃ ಶರೀರಮರ್ಥಂ ಪ್ರಾಣಂ ಚ ಸದ್ಗುರುಭ್ಯೋ ನಿವೇದಯೇತ್ ಎಂಬುದನರಿದು ಈ ತ್ರಿವಿಧವನೂ ಗುರುಲಿಂಗಜಂಗಮಕ್ಕೆ ಅರ್ಪಿಸಿ ನಿರಂತರ ಪ್ರಸಾದವನವಗ್ರಹಿಸಿ ಭಕ್ತಕಾಯ ಮಮಕಾಯವೆಂಬೀ ವಾಕ್ಯದಲೂ ತನು ಶಿವತನುವೆಂದರಿದು ಸದ್ಗುರು ಪ್ರಾಣಲಿಂಗವನೇಕೀಭವಿಸಿದ ಲಿಂಗವೇ ಪ್ರಾಣವೆಂಬುದರಿದ ಬಳಿಕ ಪ್ರಾಣಲಿಂಗವೆಂದರಿದು, ಒಳಗು ಹೊರಗೆಂದರಿಯದೆ ಸರ್ವಾಂಗಲಿಂಗವೆಂದರಿದು, ಪ್ರಾಣಮಯ ಶಿವನೆಂದರಿದು ತತ್ವಮಯಶಿವನೆಂದರಿದು ಸರ್ವಕ್ರಿಯಾಕರ್ಮಂಗಳೆಲ್ಲವನೂ ಶಿವಕ್ರೀ ಎಂದರಿದು ಕರಣಂಗಳೆಲ್ಲವೂ ಶಿವಕರಣಂಗಳೆಂದರಿದು ಶಿವಪ್ರೇರಣೆಯಿಂದ ಬಂದ ಪದಾರ್ಥಂಗಳೆಲ್ಲವೂ ಸರ್ವಶುದ್ಧ ಎಂದರಿದು ಶಿವಹಸ್ತದಲ್ಲಿ ಶಿವಾರ್ಪಿತವಂ ಮಾಡಿ ರೂಪನರ್ಪಿಸಿ ಶಿವಜಿಹ್ವೆಯಲ್ಲಿ ಶಿವಾರ್ಪಿತವಂ ಮಾಡಿ ರುಚಿಯನರ್ಪಿಸಿ ಅರ್ಪಿಸಿದೆನೆಂದೆನ್ನದೆ, ಶಿವಕ್ರೀ ಎಂದರಿದು ಮಹಾಜ್ಞಾನ ಪರಿಣಾಮಪ್ರಸಾದವ ನಿರಂತರ ಗ್ರಹಿಸುವನು. ಮನೋವಾಕ್ಕಾಯದಲ್ಲಿ ಮಿಥ್ಯವ ಕಳೆದು ಜಂಗಮಲಿಂಗಕ್ಕೆ ಅಷ್ಟಭೋಗಂಗಳ ಸಲಿಸಿ ಪ್ರಸನ್ನತೆಯಂ ಪಡೆದು ಪ್ರಸನ್ನಪ್ರಸಾದವ ಪ್ರಸಾದಿಯಾಗಿ ಗ್ರಹಿಸುನವನುಫ. ಅಲಸುಗಾರನ ಭಕ್ತಿ ಅದ್ವೈತವೆಂಬ ವಾಕ್ಯಕ್ಕಂಜಿ ಸರ್ವಕ್ರೀಯಲ್ಲಿ ಎಚ್ಚತ್ತು ನಡೆವನು. ಪ್ರಾಣ ಲಿಂಗವೆಂದರಿದು, ಪ್ರಾಣಲಿಂಗಿಯಾಗಿ ಸುಖ ದುಃಖ ಭಯಾದಿ ದ್ವಂದ್ವಕರ್ಮಂಗಳು ನಾಸ್ತಿಯಾಗಿಪ್ಪನು. ಸರ್ವಕ್ರಿಯಾಕರ್ಮಂಗಳೆಲ್ಲವನೂ ಲಿಂಗದಲ್ಲಿ ಇರಿಸಿ, ಧರಿಸಿ, ಸುಖಿಸಿ, ಶರಣನಾಗಿಪ್ಪನು. ಸರ್ವಕ್ರೀಯಲ್ಲಿ ನಡೆದು ತನುಮನಧನವ ಸವೆಸಿ ಮಹಾಜ್ಞಾನವಳವಟ್ಟು, ನಿಸ್ಸಂಗಿಯಾಗಿ ಸರ್ವಕ್ರೀಯನೇಕೀಭವಿಸಿ ಕ್ರಿಯಾನಾಸ್ತಿಯಾಗಿ ಐಕ್ಯನಾಗಿಪ್ಪನು. ಕ್ರಿಯಾಕ್ರಿಯೆ ಅಂದು ಇಂದು ಎಂದೂ ಒಂದೇ ಪರಿಯಯ್ಯಾ. ಈ ವಿಚಾರ ಒಮ್ಮಿಂದೊಮ್ಮೆ ಅರಿಯಬಾರದು. ಅರಿಯದಿದ್ದರೇನುರಿ ಬಾಲ್ಯದಲ್ಲಿ ಸತಿಪತಿಗಳೂ ಮಾತಾಪಿತರುಗಳು ವಿವಾಹವ ಮಾಡುವಲ್ಲಿ ಒಮ್ಮಿಂದೊಮ್ಮೆ ಬಾಲಕ್ರಿಯಾಕರ್ಮ ರತಿಸುಖವನರಿಯಬಾರದು. ಅರಿಯದಿದ್ದರೇನು? ಬಾಲ್ಯ ಸತಿಪತಿಗಳಲ್ಲಿ ಮುಂದೆ ಯೌವನದಲ್ಲಿ ಕ್ರಿಯಾಕರ್ಮಕರದಿ ಸುಖವನರಿವಂತೆ ಶಿವಾಚಾರ ಸರ್ವಕ್ರಿಯಾ ಸಂಪನ್ನತ್ವವನೂ, ಮಹಾನುಭಾವರ ಸಂಗದಿಂದಲರಿಯಬಹುದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
-->