ಅಥವಾ

ಒಟ್ಟು 186 ಕಡೆಗಳಲ್ಲಿ , 44 ವಚನಕಾರರು , 163 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಾತಿವಿಡಿದು ಜಂಗಮವ ಮಾಡಬೇಕೆಂಬ ಪಾತಕರು ನೀವು ಕೇಳಿರೊ: ಜಾತಿ ಘನವೊ ಗುರುದೀಕ್ಷೆ ಘನವೊ ? ಜಾತಿ ಘನವಾದ ಬಳಿಕ, ಆ ಜಾತಿಯೆ ಗುರುವಾಗಿರಬೇಕಲ್ಲದೆ ಗುರುದೀಕ್ಷೆ ಪಡೆದು, ಗುರುಕರಜಾತರಾಗಿ ಜಾತಕವ ಕಳೆದು ಪುನರ್ಜಾತರಾದೆವೆಂಬುದ ಏತಕ್ಕೆ ಬೊಗಳುವಿರೊ ? ಜಾತಿವಿಡಿದು ಕಳೆಯಿತ್ತೆ ಜಾತಿತಮವು ? ಅಜಾತಂಗೆ ಆವುದು ಕುಲಳ ಆವ ಕುಲವಾದಡೇನು ದೇವನೊಲಿದಾತನೆ ಕುಲಜ. ಅದೆಂತೆಂದಡೆ; ದೀಯತೇ ಜಾÕನಸಂಬಂಧಃ ಕ್ಷೀಯತೇ ಚ ಮಲತ್ರಯಂ ದೀಯತೇ ಕ್ಷೀಯತೇ ಯೇನ ಸಾ ದೀಕ್ಷೇತಿ ನಿಗದ್ಯತೇ ಎಂಬುದನರಿದು, ಜಾತಿ ನಾಲ್ಕುವಿಡಿದು ಬಂದ ಜಂಗಮವೇ ಶ್ರೇಷ್ಠವೆಂದು ಅವನೊಡಗೂಡಿಕೊಂಡು ನಡೆದು ಜಾತಿ ಎಂಜಲುಗಳ್ಳರಾಗಿ ಉಳಿದ ಜಂಗಮವ ಕುಲವನೆತ್ತಿ ನುಡಿದು, ಅವನ ಅತಿಗಳೆದು ಕುಲವೆಂಬ ಸರ್ಪಕಚ್ಚಿ, ಎಂಜಲೆಂಬ ಅಮೇಧ್ಯವ ಭುಂಜಿಸಿ ಹಂದಿ-ನಾಯಂತೆ ಒಡಲ ಹೊರೆವ ದರುಶನಜಂಗುಳಿಗಳು ಜಂಗಮಪಥಕ್ಕೆ ಸಲ್ಲರಾಗಿ. ಅವರಿಗೆ ಗುರುವಿಲ್ಲ ಗುರುಪ್ರಸಾದವಿಲ್ಲ, ಲಿಂಗವಿಲ್ಲ ಲಿಂಗಪ್ರಸಾದವಿಲ್ಲ, ಜಂಗಮವಿಲ್ಲ ಜಂಗಮಪ್ರಸಾದವಿಲ್ಲ. ಇಂತೀ ತ್ರಿವಿಧಪ್ರಸಾದಕ್ಕೆ ಹೊರಗಾದ ನರಜೀವಿಗ? ಸ್ವಯ-ಚರ-ಪರವೆಂದಾರಾಧಿಸಿ ಪ್ರಸಾದವ ಕೊಳಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅನ್ಯರು ಮಾಡಿದುದ ಮುಟ್ಟದೆ ತನ್ನ ತಾ ಮಾಡಿಕೊಂಡು ನಡೆವುದು ಸೌಕರಿಯವಲ್ಲದೆ, ವ್ರತಕ್ಕೆ ಸಂಬಂಧವಲ್ಲ. ಅದೆಂತೆಂದಡೆ ರಸ ಗಂಧ ರೂಪು ಶಬ್ದ ಸ್ಪರ್ಶವೆಂಬ ಪಂಚೇಂದ್ರಿಯವ ಶುದ್ಧತೆಯ ಮಾಡಿ ಪಂಚಾಚಾರವೆಂಬುದನರಿತು, ರಸವ ರುಚಿಸುವಲ್ಲಿ ಬಹುದಕ್ಕೆ ಮುನ್ನವೆ ಭೇದವನರಿತು, ನಾಸಿಕ ವಾಸನೆಯ ಕೊಂಬಲ್ಲಿ ಸೋಂಕುವುದಕ್ಕೆ ಮುನ್ನವೆ ಸುಗುಣ ದುರ್ಗುಣವನರಿತು, ಕಾಂಬುದಕ್ಕೆ ಮುನ್ನವೆ ರೂಪ ನಿರೂಪೆಂಬುದನರಿತು, ನುಡಿಯುವುದಕ್ಕೆ ಮುನ್ನವೆ ಮೃದು ಕoಣವೆಂಬುದನರಿತು, ಇಂತೀ ಭೇದಂಗಳಲ್ಲಿ ಅರ್ಪಿತದ ಲಕ್ಷಣವ ಕಂಡು, ದೃಷ್ಟದಿಂದ ಕಟ್ಟುಮಾಡುವುದೆ ವ್ರತ ; ಆ ಗುಣ ತಪ್ಪದೆ ನಡೆವುದೆ ಆಚಾರ. ಇಂತೀ ವ್ರತಾಚಾರಂಗಳಲ್ಲಿ ಸರ್ವಶೀಲಸನ್ನದ್ಧನಾಗಿ, ಸರ್ವಮುಖ ಲಿಂಗಾವಧಾನಿಯಾಗಿ ಇಪ್ಪ ಅಂಗವೆ, ಆಚಾರವೆ ಪ್ರಾಣವಾಗಿಪ್ಪ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಗುರುವಾಗಿ ಬಂದು ತನುವ ಕೊರೆದಡೂ ಕೇಳೆ, ಲಿಂಗವಾಗಿ ಬಂದು ಮನದಲ್ಲಿ ಕುಳ್ಳಿರ್ದು ನಿಜಾಂಗವ ತೋರಿದಡೂ ಕೇಳೆ, ಜಂಗಮವಾಗಿ ಬಂದು ಬಯಲ ಬೆಳಗಿನಲ್ಲಿ ಒಳಗಾಗೆಂದಡೂ ಒಲ್ಲೆ. ಅದೆಂತೆಂದಡೆ ; ಕುಟಿಲದಲ್ಲಿ ಬಂದು ವ್ರತವ ಕೆಡಿಸಿಹೆನೆಂದಡೆ, ಕುಟಿಲದ ದೇವರುಂಟೆ ವ್ರತ ಮೊದಲು ಘಟ ಕಡೆಯಾಗಿ ಘಟಿಸುವೆನಲ್ಲದೆ, ಮೂರು ಕಿಸುಕುಳಕಾಗಿ ಘಟವ ಹೊರೆದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ಅಯ್ಯಾ, ಮತ್ತೊಂದು ವೇಳೆ ಸಪ್ತಧಾತು ಸಪ್ತವ್ಯಸನವಕೂಡಿ ವರ್ತಿಸಿತಯ್ಯ. ಅದೆಂತೆಂದಡೆ, ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಧಾತುಗಳ ಅನ್ನ ನೀರಿನಿಂದ ಪೋಷಿಸಿಕೊಂಡು, ತನುವ್ಯಸನ, ಮನವ್ಯಸನ, ಧನವ್ಯಸನ, ರಾಜವ್ಯಸನ, ಉತ್ಸಾಹವ್ಯಸನ, ವಿಶ್ವವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಿಯಾಗಿ ಷಡೂರ್ಮೆ-ಷಡ್ಭಾವವಿಕಾರದಿಂದ ಎನ್ನ ತೊಳಲಿಬಳಲಿಸಿ ಅಳಲಿಸಿತಯ್ಯ ಕುಲಗೇಡಿ ಜೀವಮನವು. ಈ ಜೀವಮನದ ಸಂಗವ ತೊಲಗಿಸಿ ರಕ್ಷಿಸಯ್ಯ. ದುರಿತಹರ ಪಾಪಹರ ಶ್ರೀಗುರುಲಿಂಗಜಂಗಮವೆ ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುಸಿದ್ಧಲಿಂಗೇಶ್ವರ !
--------------
ಬಸವಲಿಂಗದೇವ
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಇನ್ನು ಪ್ರಥಮಲಿಂಗ ದ್ವಿತೀಯಲಿಂಗ ತೃತೀಯಲಿಂಗದಲ್ಲಿ ಸಮುದ್ಭವವಾದ, ಪ್ರಥಮ ದ್ವಿತೀಯ ತೃತೀಯ ಪ್ರಸಾದದ ವಿವರ ಅದೆಂತೆಂದಡೆ : ಪ್ರಥಮಲಿಂಗದಲ್ಲಿ ಶುದ್ಧ , ದ್ವಿತೀಯಲಿಂಗದಲ್ಲಿ ಸಿದ್ಧ , ತೃತೀಯಲಿಂಗದಲ್ಲಿ ಪ್ರಸಿದ್ಧ. ಶುದ್ಧ ಗುರುಪ್ರಸಾದ, ಸಿದ್ಧ ಲಿಂಗಪ್ರಸಾದ, ಪ್ರಸಿದ್ಧ ಜಂಗಮಪ್ರಸಾದ, ಶಿವಜ್ಞಾನವೇ ಮಹಾಪ್ರಸಾದ -ಇಂತು ಚತುರ್ವಿಧ ಪ್ರಸಾದ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆಚಾರವೆಂಬುದು ಕೂರಲಗು, ತಪ್ಪಿ ಬಂದಡೆ ಪ್ರಾಣವ ತಗಲುವುದು. ಅದು ಕಾರಣ, ಅರಿದರಿದು ಆಚರಿಸಬೇಕು. ಆಚಾರವಿಚಾರ ಉಭಯದ ವಿಚಾರವ ನೋಡದೆ, ಶಿವದೀಕ್ಷೆಯ ಮಾಡಲಾಗದು. ಅದೆಂತೆಂದಡೆ : ಪರರ ಹೆಣ್ಣಿಗೆ ಕಣ್ಣಿಡದಿಹುದೆ ಒಂದನೆಯ ಆಚಾರ. ಪರರ ದ್ರವ್ಯವ ಅಪಹಾರ ಮಾಡದಿಹುದೆ ಎರಡನೆ ಆಚಾರ. ಸುಳ್ಳಾಡದಿರವುದೆ ಮೂರನೆಯ ಆಚಾರ. ವಿಶ್ವಾಸಘಾತವ ಮಾಡದಿಹುದೆ ನಾಲ್ಕನೆಯ ಆಚಾರ. ಪ್ರಾಣಹಿಂಸೆಯ ಮಾಡದಿಹುದೆ ಐದನೆಯ ಆಚಾರ. ಸಕಲ ಶಿವಶರಣರ್ಗೆ ಸಂತೋಷವಂ ಪುಟ್ಟಿಸುವುದೆ ಆರನೆಯ ಆಚಾರ. ಸ್ವೀಕರಿಸಿದ ನೇಮವ ಪ್ರಾಣಾಂತ್ಯವಾಗಿ ಬಿಡೆನೆಂಬುವ ಏಳನೆಯ ಆಚಾರ. ಷಟ್ಸ್ಥಲದವರ ಧಿಕ್ಕರಿಸುವ ಜನರ ಸೀಳುವೆನೆಂಬುವ ವ್ರತವೆ ಎಂಟನೆ ಆಚಾರ. ಕೆಟ್ಟಜನರ ಸಹವಾಸ ಮಾಡದಿಹುದೆ ಒಂಬತ್ತನೆಯ ಆಚಾರ. ಸಜ್ಜನ ಸಂಗತಿಯ ಬಿಡದಿಹುದೆ ಹತ್ತನೆಯ ಆಚಾರ ಅನ್ಯದೇವತಾಭಜನೆಗೆ ವಿಮುಖನಾಗುವುದೆ ಹನ್ನೊಂದನೆಯ ಆಚಾರ. ಶಿವನೇ ಸರ್ವದೇವಶಿಖಾಮಣಿಯೆಂದು ಮನದಲ್ಲಿ ಅಚ್ಚೊತ್ತಿಪ್ಪುದೆ ಹನ್ನೆರಡನೆಯ ಆಚಾರ. ಶಿವನಿಗೆ ಶಿವಗಣಂಗಳಿಗೆ ಭೇದವ ಮಾಡದಿಹುದೆ ಹದಿಮೂರನೆಯ ಆಚಾರ. ಸಕಲ ಜೀವಿಗಳಿಗೆ ಹಿತವ ಬಯಸುವುದೆ ಹದಿನಾಲ್ಕನೆಯ ಆಚಾರ. ಸರ್ವರಿಗೆ ಹಿತವ ಮಾಡುವುದೆ ಹದಿನೈದನೆಯ ಆಚಾರ. ಕಡ್ಡಿಯ ಲಿಂಗಕ್ಕೆ ತೋರಿ ದಂತಧಾವನೆಯ ಮಾಡುವುದೆ ಹದಿನಾರನೆಯ ಆಚಾರ. ಸರ್ವಾವಯವವ ಸ್ವಚ್ಛ ಪ್ರಕ್ಷಾಳಿಸುವುದೆ ಹದಿನೇಳನೆಯ ಆಚಾರ ಲಿಂಗಮುದ್ರೆಯಿಲ್ಲದ ಗುಡಿಯಲ್ಲಿ ಪಾಕವ ಮಾಡದಿಹುದೆ ಹದಿನೆಂಟನೆಯ ಆಚಾರ. ಪ್ರಣವಮುದ್ರೆ ಇಲ್ಲದ ವಸ್ತ್ರ ಹೊದೆಯದಿಹುದೆ ಹತ್ತೊಂಬತ್ತನೆಯ ಆಚಾರ. ಹುಟ್ಟಿದ ಶಿಶುವಿಗೆ ಲಿಂಗಾಧಾರಣ ಮಾಡದೆ, ತಾಯ ಮೊಲೆಹಾಲು ಜೇನುತುಪ್ಪ ಮುಟ್ಟಿಸದಿಹುದೆ ಇಪ್ಪತ್ತನೆಯ ಆಚಾರ. ಆಡಿದ ಭಾಷೆಯ ಕಡೆಪೂರೈಸುವುದೆ ಇಪ್ಪತ್ತೊಂದನೆಯ ಆಚಾರ. ಸತ್ಯವ ನುಡಿದು ತಪ್ಪದಿಹುದೆ ಇಪ್ಪತ್ತೆರಡನೆಯ ಆಚಾರ. ತುರುಗಳ ಕಟ್ಟಿ ರಕ್ಷಿಸುವುದೆ ಇಪ್ಪತ್ತುಮೂರನೆಯ ಆಚಾರ. ತುರುಗಳಿಗೆ ಲಿಂಗಮುದ್ರೆಯಿಕ್ಕಿ ಹಾಲು ಕರೆವುದು ಇಪ್ಪತ್ತುನಾಲ್ಕನೆಯ ಆಚಾರ. ಮಂತ್ರಸಹಿತ ಗೋಮಯವ ಹಿಡಿದು, ಮಂತ್ರಸಹಿತ ಪುಟವಿಕ್ಕಿ ಭಸ್ಮದ ರಾಶಿಯ ಮಾಡುವುದೆ ಇಪ್ಪತ್ತೈದನೆಯ ಆಚಾರ. ಆ ಭಸ್ಮದ ರಾಶಿಯ ಪಾದೋದಕದೊಡನೆ ಉಂಡಿಯ ಕಟ್ಟುವುದೆ ಇಪ್ಪತ್ತಾರನೆಯ ಆಚಾರ. ವಿಧಿಯರಿತು ಸ್ಥಾನವರಿತು ರುದ್ರಾಕ್ಷಿಗ? ಧರಿಸುವುದೆ ಇಪ್ಪತ್ತೇಳನೆಯ ಆಚಾರ. ಶಿವಾನುಭವವ ಶಾಸ್ತ್ರವ ವಿಚಾರಿಸುವುದೆ ಇಪ್ಪತ್ತೆಂಟನೆಯ ಆಚಾರ. ಮನವ ನೋಯಿಸಿ ಮಾತನಾಡದಿಹುದೆ ಇಪ್ಪತ್ತೊಂಬತ್ತನೆಯ ಆಚಾರ. ಲಿಂಗದ ಕಲೆಯರಿತು ಲಿಂಗವ ಪೂಜಿಸುವುದೆ ಮೂವತ್ತನೆಯ ಆಚಾರ. ಗುರುಮುಖದಿಂದ `ತಾನಾರು' ತನ್ನ ನಿಜವೇನೆಂದು ಬೆಸಗೊಳ್ಳವುದೆ ಮೂವತ್ತೊಂದನೆಯ ಆಚಾರ. ಷಡ್ವರ್ಗಂಗಳ ಮೆಟ್ಟಿ ಷಟ್ಸ್ಥಲವನಿಂಬುಗೊಂಡುದೆ ಮೂವತ್ತೆರಡನೆಯ ಆಚಾರ. ಅವಿಚ್ಛಿನ್ನವಾಗಿ ಅಂಗತ್ರಯದಲ್ಲಿ ಮನ ಓಕರಿಸಿಕೊಂಡುದೆ ಮೂವತ್ತುಮೂರನೆಯ ಆಚಾರ. ಲಿಂಗದಲ್ಲಿ ಶಿಲೆಯ ಭಾವವನರಸದಿಹುದೆ ಮೂವತ್ತುನಾಲ್ಕನೆಯ ಆಚಾರ. ಜಂಗಮದಲ್ಲಿ ಕುಲವನರಸದಿಹುದೆ ಮೂವತ್ತೈದನೆಯ ಆಚಾರ. ವಿಭೂತಿಯ ಮಾಣ್ಬದಿಹುದೆ ಮೂವತ್ತಾರನೆಯ ಆಚಾರ. ರುದ್ರಾಕ್ಷಿಯ ಶುದ್ಧವ ಮಾಡಿ ಮಣಿಗಳ ಅರಸುವುದೆ ಮೂವತ್ತೇಳನೆಯ ಆಚಾರ. ಪಾದೋದಕದಲ್ಲಿ ಉಚ್ಛಿಷ್ಟವಳಿದುದೆ ಮೂವತ್ತೆಂಟನೆಯ ಆಚಾರ. ಪ್ರಸಾದದಲ್ಲಿ ರುಚಿಯ ನೋಡದಿಹುದೆ ಮೂವತ್ತೊಂಬತ್ತನೆಯ ಆಚಾರ. ಮಂತ್ರದಲ್ಲಿ ಕುತ್ಸಿತಕಲ್ಪನೆಯ ಮಾಡದಿಹುದೆ ನಾಲ್ವತ್ತೆಳನೆಯ ಆಚಾರ. ಲಿಂಗಾರ್ಚನವಿರಹಿತ ಭೋಜನ ಮಾಡದಿಹುದೆ ನಾಲ್ವತ್ತೊಂದನೆಯ ಆಚಾರ. ಐಕ್ಯರ ಸಮಾಧಿಗೊಳಿಸಿ ತಾನು ಲಿಂಗಪೂಜೆಯ ಮಾಡುವುದೆ ನಾಲ್ವತ್ತೆರಡನೆಯ ಆಚಾರ. ಲಿಂಗದ್ರೋಹವ ಕೇಳಿ ತಾನು ಪ್ರಾಣಬಿಡುವುದೆ ನಾಲ್ವತ್ತುಮೂರನೆಯ ಆಚಾರ. ಜಂಗಮದ್ರೋಹವ ಕೇಳಿ ತಾನು ಐಕ್ಯನಾಗುವುದೆ ನಾಲ್ವತ್ತುನಾಲ್ಕನೆಯ ಆಚಾರ. ಲಿಂಗದ್ರೋಹವ ಮಾಡಿದವನ ಪ್ರಾಣವ ಭೇದಿಸುವುದೆ ನಾಲ್ವತ್ತೈದನೆಯ ಆಚಾರ. ಜಂಗಮದ್ರೋಹವ ಮಾಡಿದವನ ಶಿರವನೀಡಾಡುವುದೆ ನಾಲ್ವತ್ತಾರನೆಯ ಆಚಾರ. ಅಷ್ಟಾವರಣಸಂಗವ ಮಾಡುವ ಭೇದವ ತಿಳಿವುದೆ ನಾಲ್ವತ್ತೇ?ನೆಯ ಆಚಾರ. ತಾನಾರು ಲಿಂಗವಾರು ಎಂಬ ಭೇದವು ತಿಲಮಾತ್ರ ಇಲ್ಲದಿರುವುದೆ ನಾಲ್ವತ್ತೆಂಟನೆಯ ಆಚಾರ. ತನ್ನ ನಿಜವಿಚಾರವ ತಾ ಮರೆಯದೆ ಷಟ್ಸ್ಥಲದವರಿಗೆ ಅರುಹಿ ತನ್ನಂತೆ ಮಾಡುವುದೆ ನಾಲ್ವತ್ತೊಂಬತ್ತನೆಯ ಆಚಾರ. ಇಂತಿಷ್ಟು ಆಚಾರಂಗಳ ಕಡೆಮುಟ್ಟಿಸುವುದೆ, ಕೂಡಲಚೆನ್ನಸಂಗಮದೇವರಲ್ಲಿ ಐವತ್ತನೆಯ ಆಚಾರ ನೋಡಾ ಸಿದ್ದರಾಮಯ್ಯಾ.
--------------
ಚನ್ನಬಸವಣ್ಣ
ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. ಇದು ಕಾರಣ, ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪ್ರಥಮದೀಕ್ಷೆ, ಪರಬ್ರಹ್ಮದೀಕ್ಷೆ, ಅಂಗಲಿಂಗದೀಕ್ಷೆ, ಪುನರ್ದೀಕ್ಷೆ: ಇಂತೀ ದೀಕ್ಷೆಗಳಲ್ಲಿ ತಿಳಿಯಬೇಕು. ಪ್ರಥಮದೀಕ್ಷೆಯ ಮಾಡುವಲ್ಲಿ ಬ್ರಹ್ಮನ ಪಾಶವ ಹರಿಯಬೇಕು. ಪರಬ್ರಹ್ಮದೀಕ್ಷೆಯ ಮಾಡುವಲ್ಲಿ ವಿಷ್ಣುವಿನ ಪಾಶವ ಹರಿಯಬೇಕು; ಅಂಗಲಿಂಗದೀಕ್ಷೆಯ ಮಾಡುವಲ್ಲಿ ರುದ್ರನ ಪಾಶವ ಹರಿಯಬೇಕು; ಪುನರ್ದೀಕ್ಷೆಯ ಮಾಡುವಲ್ಲಿ ಆ ಘಟದಲ್ಲಿದ್ದ ಆತ್ಮನ ಕಳೆದು ಪುನರಪಿಯ ಮಾಡಿ ಪುನರ್ದೀಕ್ಷೆಯ ಮಾಡಬೇಕು. ಅದೆಂತೆಂದಡೆ, ಅದಕ್ಕೆ ದೃಷ್ಟ: ದ್ವಿಜರ ಗರ್ಭದಲ್ಲಿ ಜನಿಸಿದ ಪಿಂಡಕ್ಕೆ ಮಂತ್ರೋಚ್ಚರಣೆ ಮುಂಜಿಯಿಂದಲ್ಲದೆ ಭೂಸುರಕುಲವಿಲ್ಲ. ಇದನರಿತು ವಿಚಾರವ ಮಾಡಿ ಕೇಳಿ ಕಂಡು ಉಪದೇಶ ಗುರುವಾಗಬೇಕು. ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಇನ್ನು ನಿರ್ಮಲಾವಸ್ಥೆಯ ದರ್ಶನವ ಮಾಡುವಾಗ ಪಂಚಲಿಂಗಗಳನು ದರ್ಶನವ ಮಾಡುವುದು. ಅದೆಂತೆಂದಡೆ : ಅಣವ, ಮಾಯೆ, ಕಾರ್ಮಿಕ, ಮಹಾಮಾಯೆ, ತಿರೋಧಾನಮಲ. ಆಣವಮಲವಾವುದು ? ಶಿವನ ನೆನೆಯಲೀಸದಿಹುದು. ಮಾಯೆಯಾವುದು ? ತನು ಕರಣ ಭುವನಭೋಗಂಗಳ ಬಯಸುತ್ತಿಹುದು, ಕಾರ್ಮಿಕವಾವುದು ? ಪುಣ್ಯಪಾಪಂಗಳೆಂದು ಹೆಸರಾಗಿ ಸುಖದುಃಖಂಗಳಾಗಿಹುದು. ಮಹಾಮಾಯೆ ಯಾವುದು ? ಪಂಚಕರ್ತನು ರೂಪಾದಿ ದೇಹಾಗಿ ಪ್ರಪಂಚಗಳ ಪ್ರೇರಿಸಿಕೊಂಡಿಹುದು. ತಿರೋಧಾನಮಲವಾವುದು ? ಮರಳಿ ಮಾಯಾಭೋಗದಲ್ಲಿ ಬಿದ್ದು ಹೊರಳಾಡಿಸುತ್ತಿಹುದು. ಈ ಪ್ರಕಾರದಲ್ಲಿ ಪಂಚಮಲಂಗಳನು ಅರಿವುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಧೂಳುಪಾವಡವಾದಲ್ಲಿ ಆವ ನೀರನು ಹಾಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹಾಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು. ಅದೆಂತೆಂದಡೆ ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ. ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.
--------------
ಅಕ್ಕಮ್ಮ
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ಇನ್ನಷ್ಟು ... -->