ಅಥವಾ

ಒಟ್ಟು 122 ಕಡೆಗಳಲ್ಲಿ , 28 ವಚನಕಾರರು , 86 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆ ಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟು ಬೇಕಾದ ಹಾಂಗೆಯಾದೆ. ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿ ಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ. ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.
--------------
ಸಿದ್ಧರಾಮೇಶ್ವರ
ಇನ್ನು ಅಖಂಡಪರಿಪೂರ್ಣ ಅಪ್ರಮಾಣ ಅಗೋಚರ ಅಪ್ರಮೇಯ ಅವ್ಯಕ್ತ ಅನಂತತೇಜ ಅನಂತಪ್ರಚಯ ಅನಂತಕೋಟಿ ಸೂರ್ಯಚಂದ್ರಾಗ್ನಿಪ್ರಕಾಶವಾಗಿಹ ಮಹಾಘನಲಿಂಗದಲ್ಲಿ ವಿಶ್ವತೋ ಮುಖ, ವಿಶ್ವತೋ ಚಕ್ಷು, ವಿಶ್ವತೋ ಹಸ್ತ, ವಿಶ್ವತೋ ಪಾದ, ವಿಶ್ವತೋ ಬಾಹುವನುಳ್ಳ ಅನಾದಿ ಸದಾಶಿವತತ್ವ ಉತ್ಪತ್ಯವಾಯಿತ್ತು. ಆ ಸದಾಶಿವನ ಈಶಾನಮುಖದಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಅನಾದಿ ಶಿವತತ್ವದಿಂದ ಅನೇಕ ಮುಖ, ಅನೇಕ ಚಕ್ಷು, ಅನೇಕ ಬಾಹು, ಅನೇಕ ಪಾದವನುಳ್ಳ ಅನಾದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಈಶ್ವರತತ್ವದಲ್ಲಿ ಸಹಸ್ರ ಶಿರ, ಸಹಸ್ರ ಅಕ್ಷ, ಸಹಸ್ರ ಬಾಹು, ಸಹಸ್ರ ಪಾದವನುಳ್ಳ ಅನಾದಿ ಮಹೇಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಮಹೇಶ್ವರತತ್ವದಲ್ಲಿ ತ್ರಿಪಂಚಮುಖ, ತ್ರಿದಶಭುಜ, ತ್ರಿದಶಪಾದವನುಳ್ಳ ಆದಿ ಸದಾಶಿವ ಉತ್ಪತ್ಯವಾಯಿತ್ತು. ಆ ಆದಿ ಸದಾಶಿವತತ್ವದಲ್ಲಿ ಷಷ್ಠ ವಕ್ತ್ರ, ದ್ವಾದಶಭುಜ, ತ್ರಿಪಾದವನುಳ್ಳ ಆದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಆದಿ ಈಶ್ವರತತ್ವದಲ್ಲಿ ಪಂಚವಿಂಶತಿ ಮುಖ, ಪಂಚದಶಭುಜವನುಳ್ಳ ಸದಾಶಿವತತ್ವ ಉತ್ಪತ್ಯವಾಯಿತ್ತು. ಇದಕ್ಕೆ ಅತಿ ಮಹಾಗಮೇ : ``ಅಖಂಡಲಿಂಗ ಸಂಭೂತಾ ಅನಾದಿ ಸಾದಾಖ್ಯಸ್ತಥಾ | ಅನಾದಿ ವಿಶ್ವತೋಮುಖತತ್ವೇ ಚ ಅನಾದಿ ಈಶ್ವರೋದ್ಭವಃ || ಅನಾದಿ ಈಶ್ವರತತ್ವೇ ಚ ಅನಾದಿ ಮಾಹೇಶ್ವರೋ ಭವೇತ್ | ಅನಾದಿ ಮಾಹೇಶ್ವರ ಶಂಭುತೊ ಆದಿ ಸದಾಖ್ಯ ಸ್ತಥಾ || ಆದಿ ಸಾದಾಖ್ಯತತ್ವೇ ಚ ಆದಿ ಈಶ್ವರೋದ್ಭವಂ | ಆದಿ ಈಶ್ವರತತ್ವೇ ಚ ಆದಿ ಮಾಹೇಶ್ವರೋ ಭವೇತ್ || ಆದಿ ಮಾಹೇಶ್ವರ ಶಂಭುತೊ ಶಿವಸದಾಶಿವಾಯುವೋ | ಇತಿ ತತ್ವೋದ್ಭವಜ್ಞಾನಂ ದುರ್ಲಭಂ ಕಮಲಾನನೇ|| '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆದಿ ಅನಾದಿ ಸುರಾಳ ನಿರಾಳ ಶೂನ್ಯ ನಿಃಶೂನ್ಯದಿಂದತ್ತತ್ತಲಾದ ಘನಮಹಾಲಿಂಗವೆಂಬ ಪರಬ್ರಹ್ಮವು, ಗುರುಕರುಣದಿಂ ಬಹಿಷ್ಕರಿಸಿ ಕರಸ್ಥಲಕ್ಕೆ ಇಷ್ಟಲಿಂಗವಾಗಿ ಬರಲು ಆ ಲಿಂಗದಲ್ಲಿ ಕೃಷ್ಣಾ ಭಾಗೀರಥಿ ಮೊದಲಾದ ಅನೇಕ ತೀರ್ಥಂಗಳು, ಕಾಶಿರಾಮೇಶ್ವರ ಮೊದಲಾದ ಅನೇಕ ಕ್ಷೇತ್ರಂಗಳು, ಹಿಮಾಚಲ ಶ್ರೀಶೈಲಪರ್ವತ ಮೊದಲಾದ ಅನೇಕ ಪುಣ್ಯಶೈಲಂಗಳುಂಟೆಂದು, ತನ್ನ ಸ್ವಾನುಭಾವಮೂಲಜ್ಞಾನದಿಂ ತಿಳಿದು, ಸಕಲ ಸಂಶಯಂ ಬಿಟ್ಟು ನಿಶ್ಚಿಂತನಾಗಿ, ಮನವ ಮಹಾಘನದಲ್ಲಿರಿಸಿ ಇರಬಲ್ಲಡೆ ಆತನೇ ಅನಾದಿಸದ್ವೀರಮಹೇಶ್ವರನ ಭಕ್ತನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಪುಣ್ಯಪಾಪಂಗಳನರಿಯದ ಮುನ್ನ ಅನೇಕ ಭವಂಗಳಲ್ಲಿ ಬಂದು ನಿಮ್ಮ ನಿಲುವನರಿಯದೆ ಕೆಟ್ಟನಯ್ಯಾ. ಇನ್ನು ನಿಮ್ಮ ಶರಣುವೊಕ್ಕೆನಾಗಿ, ನಾ ನಿಮ್ಮನೆಂದೂ ಅಗಲದಂತೆ ಮಾಡಾ ಅಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ! ನಿಮ್ಮಲ್ಲಿ ಒಂದು ಬೇಡುವೆ; ಎನ್ನ ಕರ್ಮಬಂಧನ ಬಿಡಿವಂತೆ ಮಾಡಾ ಅಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮಲೆಯ ಕಡಿದು ಒಂದು ವೃಕ್ಷವ ತಂದು, ಕೊರೆದು ಅನೇಕ ತೊಲಿ ಕಂಬ ಬೋದುಗೆಗಳು ಚಿಲುಕಿ ಮೊದಲಾದ ಎಲ್ಲವನು ಕೆತ್ತಿ ಉಣ್ಣದೆ ಉಂಡು, ಮನೆಯ ಕಟ್ಟಿ, ಒಗತನವಿಲ್ಲದೆ ಸತ್ತು ಕಾಯಕವ ಮಾಡುತ್ತಿರ್ಪರು ನೋಡೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮತ್ತಮಾ ಸಾಧಾರದೀಕ್ಷೆಯು ಸಬೀಜದೀಕ್ಷೆ ನಿರ್ಬೀಜದೀಕ್ಷೆ ಚಿನ್ಮಯ ದೀಕ್ಷೆ ಯೆಂದು ಮೂರು [ಪ್ರಕಾರದವು]. ಅವು ಯಥಾಕ್ರಮದಿಂದ ಕರ್ಮಕಾಂಡ ಭಕ್ತಿ ಕಾಂಡ ಜ್ಞಾನಕಾಂಡಗಳಲ್ಲಿಯ ದೀಕ್ಷೆ ಎನಿಸಿಕೊಂಬವು. ಇಂತೆಂದು ಕಾರಣಾಗಮ ಪೇಳೂದಯ್ಯಾ. ಅವರೊಳು ನಿರ್ಬೀಜದೀಕ್ಷೆ[ಯು ಸದ್ಯೋ ನಿರ್ವಾಣದೀಕ್ಷೆ ಎಂದು] ಚಿರಂ ನಿರ್ವಾಣದೀಕ್ಷೆ ಎಂದು ಎರಡು ಭೇದವು ಪೇಳಲ್ಪಡುತ್ತಿಹುದು. ಅವರೊಳು ಅತ್ಯಂತ ವಿರಕ್ತನಾದ ಶಿಷ್ಯ[ನು] ಅನೇಕ ಭವಂಗಳಲ್ಲಿ ಮಾಡಲ್ಪಟ್ಟ ಸಂಚಿತಕರ್ಮಂಗಳನು, ಮತ್ತಮಾ ಸಂಚಿತಕರ್ಮರಾಶಿಯೊಳಂ ಆಗ ತಾಳ್ದಿರ್ದ ಶರೀರವಿಡಿದು ಅನುಭವಿಸುತ್ತಿರ್ದ ಪ್ರಾರಬು ಕರ್ಮಂಗಳನು, ಮುಂದೆ ಭವಾಂ ತರಂಗಳಲ್ಲಿ ಅನುಭವಿಸಲುಳ್ಳ ಆಗಾಮಿ ಕರ್ಮಂಗಳನು ಶೋದ್ಥಿಸಿ ಸದ್ಯೋನ್ಮುಕ್ತಿ ಯನೆಯಿಸುವ ದೀಕ್ಷೆ ಸದ್ಯೋನಿರ್ವಾಣದೀಕ್ಷೆ ಎನಿಸುವದಯ್ಯಾ, ಶಾಂತವೀರ ಪ್ರಭುವೇ.
--------------
ಶಾಂತವೀರೇಶ್ವರ
ಸಾಯದ ಪಶುವಿಂಗೆ ಒಂದು ಗೂಟ, ಸಾಯುವ ಪಶುವಿಂಗೆ ಮೂರು ಗೂಟ, ಸತ್ತ ಪಶುವಿಂಗೆ ಆರು ಗೂಟ. ಸತ್ತ ಕರವ ಹೊತ್ತವರಿಗೆ ಅನೇಕ ಗೂಟ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುವಿನೊಡನೆ ಸಹಭೋಜನ ಮಾಡಬೇಕಾದಡೆ, ಚತುರ್ವಿಧಭಕ್ತಿಯಿಂದೆ ಗುರುವಿನೊಳಗೆ ತನುವಡಗಿರಬೇಕು. ಲಿಂಗದೊಡನೆ ಸಹಭೋಜನ ಮಾಡಬೇಕಾದಡೆ, ಸಂಕಲ್ಪ ವಿಕಲ್ಪ ಸೂತಕ ಪಾತಂಕಗಳಳಿದು ಲಿಂಗದೊಳಗೆ ಮನವಡಗಿರಬೇಕು. ಜಂಗಮದೊಡನೆ ಸಹಭೋಜನ ಮಾಡಬೇಕಾದಡೆ, ಮಜ್ಜನ ಭೋಜನ ಕುಸುಮ ಗಂಧಾನುಲೇಪನ ಅನ್ನ ವಸ್ತ್ರ ಮಣಿ ರತ್ನಾಭರಣ ಗೀತ ವಾದ್ಯ ನೃತ್ಯ ಹಾಸುಮಂಚ ಸ್ತ್ರೀಭೋಗ ಮೊದಲಾದ ಅನೇಕ ಭಕ್ತಿಯಿಂದೆ ಜಂಗಮಕ್ಕೆ ಧನವ ಸಮರ್ಪಿಸಬೇಕು. ಇಂತೀ ತ್ರಿವಿಧ ಭಕ್ತಿಯ ನಿರ್ಣಯವನರಿಯದೆ, ತನು ಮನ ಧನಂಗಳ ಹಿಂದಿಟ್ಟುಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ನೀತಿಹೀನರು ಸಹಭೋಜನ ಕವಳ ಪ್ರಸಾದವ ಕೊಟ್ಟು ಕೊಂಡಡೆ ಹುಳುವಿನ ಕೊಂಡದಲ್ಲಿ ಮುಳುಗಿಸಿಬಿಡುವನು ನೋಡಾ ನಮ್ಮ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಒಂದು ಪದದೊಳಗೆ ಎರಡೆಂಬತ್ತೆಂಟುಕೋಟಿ ಪದ ಹುಟ್ಟಿದವು ನೋಡಾ. ಆ ಎರಡೆಂಬತ್ತೆಂಟು ಕೋಟಿ ಪದದೊಳಗೆ ಅನೇಕ ಕಾಲುಗಳು ಹುಟ್ಟಿದವು ನೋಡಾ. ಆ ಅನೇಕ ಕಾಲುಗಳ ಮುರಿದು, ಎರಡೆಂಬತ್ತುಕೋಟಿ ಪದಗಳನಳಿದು, ಒಂದೆ ಪದದಲಿ ನಿಲಬಲ್ಲರೆ ಆತನು ಪರಶಿವ ಪದಸ್ಥನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ!
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮನವೇ, ನಿನ್ನ ನೆನಹು ಸಿದ್ಧಿಯಾದುದಲ್ಲಾ, ಪರಶಿವನೇ ಶ್ರೀಗುರುರೂಪಾಗಿ ನಿನ್ನ ಮನಕ್ಕೆ ಬಂದನು. ಬುದ್ಧಿಯೇ ನಿನ್ನ ಬುದ್ಧಿ ಸುಬುದ್ಧಿಯಾದುದಲ್ಲಾ, ಶ್ರೀಗುರುವೇ ಶಿವ[ಲಿಂಗ]ರೂಪಾಗಿ ನಿನ್ನ ಬುದ್ಧಿಗೆ ಬಂದನು. ಚಿತ್ತವೇ ನೀ ನಿನ್ನ ಚಿತ್ತ ನಿಶ್ಚಿಂತವಾದುದಲ್ಲಾ, ಶಿವಲಿಂಗವೇ ಜಂಗಮರೂಪಾಗಿ ನಿನ್ನ ಚಿತ್ತಕ್ಕೆ ಬಂದನು. ಅಹಂಕಾರವೇ, ನಿನ್ನಹಂಕಾರ ನಿಜವಾದುದಲ್ಲಾ, ಶ್ರೀ ಗುರು ಲಿಂಗ ಜಂಗಮ ತ್ರಿವಿಧವು ಏಕೀಭವಿಸಿ ನಿನಗೆ ಪ್ರಸನ್ನಪ್ರಸಾದವ ಕರುಣಿಸಿದನು. ಆ ಪ್ರಸಾದಲಿಂಗಸ್ವಾಯತವಾಗಿ ನಿಮಗೆ ನಾಲ್ವರಿಗೂ ಪರಿಣಾಮವಾಯಿತ್ತು ಕಾಣಾ. ಪ್ರಾಣವು ನಿನಗೆ ಲಿಂಗಪ್ರಾಣವಾದುದಲ್ಲಾ, ನಮ್ಮೆಲ್ಲರನೂ ಗಬ್ರ್ಥೀಕರಿಸಿಕೊಂಡಿಪ್ಪ ಅಂಗವೇ ಲಿಂಗವಾದುದಲ್ಲಾ. ಪ್ರಾಣವೇ ನಿನ್ನ ಸಂಗದಿಂದ ನಿನ್ನನಾಶ್ರಯಿಸಿಕೊಂಡಿಪ್ಪ ಸರ್ವತತ್ತ್ವಂಗಳೂ ಸರ್ವಪಂಚಾದ್ಥಿಕಾರಿಗಳೂ ಸರ್ವಯೋಗಿಗಳೆಲ್ಲ ಶಿವಪದಂಗಳ ಪಡೆದರಲ್ಲಾ. ಅಹಂಗೆ ಅಹುದು ಕಾಣಾ, ಪ್ರಾಣವೇ ಇದು ದಿಟ, ನೀನೇ ಮಗುಳೆ ಮಹಾಬಂಧುವಾಗಿ ನಿನಗೊಂದು ಏಕಾಂತವ ಹೇಳುವೆನು ಕೇಳು. ನಾನು ನೀನು ಅನೇಕ ಕಲ್ಪಂಗಳಲ್ಲಿಯೂ ಅನೇಕ ಯೋನಿಗಳಲ್ಲಿಯೂ ಜನಿಸಿ ಸ್ಥಿತಿ ಲಯಂಗಳನೂ ಅನುಭವಿಸಿ, ಪಾಪಪುಣ್ಯಂಗಳನುಂಡುದ ಬಲ್ಲೆ. ಅವೆಲ್ಲವನೂ ಕಳೆದುಳಿದು, ಶ್ರೀಗುರುವಿನ ಕರುಣ ಮೇರೆವರಿದು ಮಹಾಪದವಾಯಿತ್ತು. ಶ್ರೀಗುರುವಿನ ಹಸ್ತದಲ್ಲಿ ಜನನವಾಯಿತ್ತು. ಶ್ರೀಗುರುವಿನ ಕರುಣವಾಯಿತ್ತು. ಶಿವಲಿಂಗ ಸ್ವಾಯತವಾಯಿತ್ತು. ಜಂಗಮವೆಂದರಿದು ಜ್ಞಾನವಾಯಿತ್ತು. ಶ್ರೀಗುರು ಲಿಂಗ ಜಂಗಮದಿಂದ ಪ್ರಸಾದವ ಪಡೆದು ಪ್ರಸಾದವನು ಗ್ರಹಿಸಿ ಶಿವಮಹಾಮುಕ್ತಿಪದವಾಯಿತ್ತು. ಇನ್ನೊಂದ ನಾ ನಿಮ್ಮ ಬೇಡಿಕೊಂಬೆನು : ಮಾಯಾಂಗನೆ ಆಸೆ ಮಾಡಿಕೊಂಡು ಬಂದಹಳು, ಅವರಿಬ್ಬರೂ ಹೋಗಲೀಸದಿರಿ, ನಿಮಗೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನಾಣೆ ಎನಗೆಯೂ ಅದೇ ಆಣೆ.
--------------
ಉರಿಲಿಂಗಪೆದ್ದಿ
ಪ್ರಾಣದ ತತ್ವದ ಪ್ರಾಪಂಚುವಿಲ್ಲದಿರು, ಏಕ ಏಕಾರ್ಥವೆಂದು ನಿರ್ವಾಣದ ಆಕಾರಧ್ಯಾನವು ಬೇಕು ಮನ ಕರದಲ್ಲಿ. ಸಾಕಾರದಿಂದತ್ತ ಶೂನ್ಯಭೇದ ಅನೇಕ ರೂಪನು ಕಪಿಲಸಿದ್ಧಮಲ್ಲಿಕಾರ್ಜುನನ ಬೇಕಾದವೀ ಪರಿಯ ತಪ್ಪದಿಹುದು.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->