ಅಥವಾ

ಒಟ್ಟು 113 ಕಡೆಗಳಲ್ಲಿ , 1 ವಚನಕಾರರು , 113 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ. ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು. ಬಿಂದುವೆಂದಡೆ ಆಗುಮಾಡುವಂತಹದು. ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು, ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು. ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಈ ಪರಂಜ್ಯೋತಿ ಪ್ರಕಾಶವಾದ ಬೆಳಗ ನೋಡಿ ನೋಟವ ಮರೆದೆ, ಕೂಡಿ ಕೂಟವ ಮರೆದೆ. ತಾನು ತಾನಾಗಿಪ್ಪ ಮಹಾಬೆಳಗಿನಲ್ಲಿ ನಾನು ಓಲಾಡಿ ಸುಖಿಯಾದೆನಯ್ಯಾ, ಚೆನ್ನಮಲ್ಲೇಶ್ವರನ ಕರುಣವಿಡಿದು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಟ್ಟಬಯಲಿನಲ್ಲಿ ಒಂದು ಮರ ಹುಟ್ಟಿತ್ತು. ಅದಕ್ಕೆ ಸುತ್ತಲು ಬೇರು ಆವರಿಸಿತ್ತು. ಅದಕ್ಕೆ ಶತಕೋಟಿ ಕೊನೆ ಬಿಟ್ಟಿತ್ತು. ಅಡಗಿದ ಬೇರನೆ ಸವರಿ, ಶತಕೋಟಿ ಕೊನೆಯನೆ ಕಡಿಯೆ, ಮರ ಒಣಗಿತ್ತು, ಉಲುಹು ನಿಂದಿತ್ತು, ಎಲೆ ಉದುರಿತ್ತು. ತರಗೆಲೆಯಾದ ಶರಣರ ಚರಣವಿಡಿದು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಟ್ಟ ಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ ತೊಳಲಿ ಬಳಲಿ, ಜಗದೊಳಗೆ ನಚ್ಚುಮಚ್ಚಿಗೊಳಗಾಗಿ, ಚುಚ್ಚಳ ಪೂಜೆಗೆ ಸಿಲ್ಕಿ, ಕುಲಕೆ ಛಲಕೆ ಕೊಂದಾಡಿ, ಭವಕ್ಕೆ ಗುರಿಯಾಗುವ ಮನುಜರ ಕಂಡು ನಾಚಿತ್ತೆನ್ನ ಮನವು. ಆ ಮನದ ಬೆಂಬಳಿಗೊಂಡು ಹೋದವರೆಲ್ಲ ಮರುಳಾಗಿ ಹೋದರು. ಇದ ನೋಡಿ ನಾನು ಬಟ್ಟಬಯಲಲ್ಲಿ ನಿಂದು ನೋಡಿದಡೆ, ಶರಧಿ ಬತ್ತಿತ್ತು ಕಮಲ ಕಾಣಬಂದಿತ್ತು. ಆ ಕಮಲ ವಿಕಾಸವಾಯಿತ್ತು ಪರಿಮಳವೆಂಬ ವಾಸನೆ ತೀಡಿತ್ತು. ಆ ವಾಸನೆವಿಡಿದು ಜಗದಾಸೆಯ ಹಿಂಗಿ ಮಾತು ಮಥನವ ಕೆಡಿಸಿ, ಮಹಾಜ್ಯೋತಿಯ ಬೆಳಗಿನಲಿ ಓಲಾಡುವ ಶರಣರ ಆಸೆ ರೋಷ ಪಾಶಕ್ಕೊಳಗಾದ ಈ ಜಗದ ಹೇಸಿಗಳೆತ್ತಬಲ್ಲರು, ಈ ಮಹಾಶರಣರ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಜಂಗಮವೆ ಗುರು, ಜಂಗಮವೆ ಲಿಂಗ, ಜಂಗಮವೆ ಪ್ರಾಣವೆಂದಡೆ, ಇಲ್ಲವೆಂಬ ಅಂಗಹೀನರಿರಾ, ನೀವು ಕೇಳಿರೊ. ಜಂಗಮವು ಗುರುವಲ್ಲದಿದ್ದಡೆ, ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವ ಹಿಂಗಿಸುವನೆ ? ಜಂಗಮವು ಲಿಂಗವಲ್ಲದಿದ್ದಡೆ, ಪ್ರಾಣಲಿಂಗವ ತೋರುವನೆ ? ಜಂಗಮವು ಪ್ರಾಣವಲ್ಲದಿದ್ದಡೆ, ಪ್ರಾಣಕ್ಕೆ ಪ್ರಸಾದವನೂಡುವನೆ ? ಇದ ಕಂಡು ಕಾಣೆನೆಂಬ ಭಂಗಿತರ ನುಡಿಯ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಂಡಿಹೆ ಕೇಳಿಹೆನೆಂಬ ದ್ವಂದ್ವವ ಹಿಂಗಿ, ಉಂಡಿಹೆ ಉಟ್ಟಿಹೆನೆಂಬ ಹಂಗ ಬಿಟ್ಟು, ನಡೆದಿಹೆ ನುಡಿದಿಹೆನೆಂಬ ಮಾಟವ ನಿಲಿಸಿ, ಜಗದಾಟವ ನಿಲಿಸಿ, ಮಾಟಕೂಟ ಜಪಕೋಟಲೆಯೊಳು ಸಿಕ್ಕದೆ ದಾಟಿ ಹೋದ ಶರಣರ ಪಾದಕ್ಕೆ ಶರಣೆಂದು ಬದುಕಿದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ ಸಂದೇಹದಲ್ಲಿ ಮುಳುಗಿ. ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೆ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾಗಿ, ಹೇಳುವುದಕ್ಕೆ ನುಡಿಯಿಲ್ಲ, ನೋಡುವುದಕ್ಕೆ ರೂಪಿಲ್ಲ. ಇಂತಪ್ಪ ನಿರೂಪದ ಮಹಾಘನವು ಶರಣರ ಹೃದಯದಲ್ಲಿ ನೆಲೆಗೊಂಬುದಲ್ಲದೆ, ಈ ಜನನ ಮರಣಕ್ಕೊಳಗಾಗುವ ಮನುಜರೆತ್ತ ಬಲ್ಲರು ಆ ಮಹಾಘನದ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಹೋಗುತ್ತ ಹೋಗುತ್ತ ಹೊಟ್ಟೆಯಡಿಯಾಯಿತ್ತು; ಬಟ್ಟಬಯಲಾಯಿತ್ತು. ತುಟ್ಟತುದಿಯನೇರಿ ತೂರ್ಯಾತೀತನಾಗಿ, ಇಷ್ಟ ಪ್ರಾಣ ಭಾವ ಬಯಲಾಯಿತ್ತು. ಬಯಲಲ್ಲಿ ನಿಂದುಕೊಂಡು ನೋಡುತ್ತಿರಲು, ಬ್ರಹ್ಮವೆಯಾಯಿತ್ತು, ಕರ್ಮ ಕಡೆಗೋಡಿತ್ತು. ಅರಿವರತು ಮರಹು ನಷ್ಟವಾಯಿತ್ತು. ತೆರನಳಿದು ನಿರಿಗೆ ನಿಃಪತಿಯಾಗಿ ಮಿರುಗುವ ದೃಷ್ಟಿಯಲ್ಲಿ ನೋಡುತ್ತಿರಲು, ನೋಟ ತ್ರಾಟಕವ ದಾಂಟಿ ಕೂಟದಲ್ಲಿ ಕೂಡಿ, ಬೆರಸಿ ಬೇರಾಗದಿಪ್ಪ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕತ್ತಲೆ ಬೆಳಗೆಂಬುದಿಲ್ಲ ನಿತ್ಯನಾದವಂಗೆ, ಚಿತ್ತ ಪರಚಿತ್ತವೆಂಬುದಿಲ್ಲ ವಸ್ತುವಿನ ನೆಲೆಯ ಕಂಡವಂಗೆ. ನಿತ್ಯ ಅನಿತ್ಯವೆಂಬುದಿಲ್ಲ ಕರ್ತೃ ತಾನಾದವಂಗೆ. ಈ ಮೂರರ ಗೊತ್ತುವಿಡಿದು ನಿಶ್ಚಿಂತನಾಗಿ ನಿರ್ವಯಲನೈದುವ ಶರಣರ ಪಾದಕ್ಕೆ ಶರಣೆಂದು ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮಚ್ಚಬೇಡ, ಮರಳಿ ನರಕಕ್ಕೆರಗಿ ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತವಾಗಿ ನಿಜದಲ್ಲಿ ಚಿತ್ತವ ಸುಯಿದಾನವಮಾಡಿ, ಲಿಂಗದಲ್ಲಿ ಮನವ ಅಚ್ಚೊತ್ತಿದಂತಿರಿಸಿ ಕತ್ತಲೆಯನೆ ಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಾಯವೆಂಬ ಕದಳಿಯನೆ ಹೊಕ್ಕು, ನೂನ ಕದಳಿಯ ದಾಂಟಿ, ಜೀವಪರಮರ ನೆಲೆಯನರಿದು, ಜನನಮರಣವ ಗೆದ್ದು, ಭವವ ದಾಂಟಿದಲ್ಲದೆ, ಘನವ ಕಾಣಬಾರದೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕೈಲಾಸ ಮರ್ತ್ಯಲೋಕ ಎಂಬರು. ಕೈಲಾಸವೆಂದಡೇನೊ, ಮರ್ತ್ಯಲೋಕವೆಂದಡೇನೊ ? ಅಲ್ಲಿಯ ನಡೆಯೂ ಒಂದೆ, ಇಲ್ಲಿಯ ನಡೆಯೂ ಒಂದೆ. ಅಲ್ಲಿಯ ನುಡಿಯೂ ಒಂದೆ, ಇಲ್ಲಿಯ ನುಡಿಯೂ ಒಂದೆ ಕಾಣಿರಯ್ಯಾ ಎಂಬರು. ಕೈಲಾಸದವರೆ ದೇವರ್ಕಳೆಂಬರು; ಸುರಲೋಕದೊಳಗೆ ಸಾಸಿರಕಾಲಕ್ಕಲ್ಲದೆ ಅಳಿದಿಲ್ಲವೆಂಬರು. ನರಲೋಕದೊಳಗೆ ಸತ್ತು ಸತ್ತು ಹುಟ್ಟುತಿಹರೆಂಬರು. ಇದ ಕಂಡು ನಮ್ಮ ಶರಣರು ಸುರಲೋಕವನು ನರಲೋಕವನು ತೃಣವೆಂದು ಭಾವಿಸಿ, ಭವವ ದಾಂಟಿ ತಮ್ಮ ತಮ್ಮ ಹುಟ್ಟನರಿದು, ಮಹಾಬೆಳಗನೆ ಕೂಡಿ, ಬೆಳಗಿನಲ್ಲಿ ಬಯಲಾದರಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಂಡಿಯ ಮೇಗಣ ಹೆಳವನಂತೆ ಕಂಡ ಕಂಡ ಕಡೆಗೆ ಹಲುಬಿದಡೆ, ನಿಮಗೆ ಬಂದುದೇನಿರೊ ? ಆ ಮಹಾಘನವನರಿಯದನ್ನಕ್ಕ ಹಾಡಿದಡಿಲ್ಲ, ಹರಸಿದಡಿಲ್ಲ; ಹೇಳಿದಡಿಲ್ಲ, ಕೇಳಿದಡಿಲ್ಲ. ಇವೇನ ಮಾಡಿದಡೂ ವಾಯಕ್ಕೆ ವಾಯವೆಂದರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಯ್ಯಾ, ನಾ ಕಾಬುದಕ್ಕೆ ನನ್ನ ಶಕ್ತಿಯಲ್ಲ ನಿಮ್ಮಿಂದವೆ ಕಂಡೆನಯ್ಯಾ. ಅದೇನು ಕಾರಣವೆಂದಡೆ; ತನುವ ತೋರಿದಿರಿ, ಮನವ ತೋರಿದಿರಿ, ಘನವ ತೋರಿದಿರಿ. ತನುವ ಗುರುವಿಗಿತ್ತು, ಮನವ ಲಿಂಗಕ್ಕಿತ್ತು, ಧನವ ಜಂಗಮಕ್ಕಿತ್ತು, ಇವೆಲ್ಲವು ನಿಮ್ಮೊಡನೆ ಎಂದು ನಿಮಗಿತ್ತು. ತಳ್ಳಿಬಳ್ಳಿಯನೆ ಹರಿದು ನಿಮ್ಮಲ್ಲಿಯೆ ನೆಲೆಗೊಂಡ ಕಾರಣ, ಚೆನ್ನಮಲ್ಲೇಶ್ವರನ ಪಾದದಲ್ಲಿ ನಿರ್ಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಯ್ಯಾ, ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದವಳ ತಂದು, ಮಹಾಶರಣರು ಎನಗೆ ಕುರುಹ ತೋರಿದರು. ಗುರುವೆಂಬುದನರುಹಿದರು; ಜಂಗಮವೆ ಜಗದ ಕರ್ತುವೆಂದರುಹಿದರು. ಅವರ ನೆಲೆವಿಡಿದು ಮನವ ನಿಲಿಸಿದೆ, ಕಾಯ ಜೀವವೆಂಬುದನರಿದೆ, ಭವಬಂಧನವ ಹರಿದೆ, ಮನವ ನಿರ್ಮಲವ ಮಾಡಿದೆ. ಬೆಳಗಿದ ದರ್ಪಣದಂತೆ ಚಿತ್ತ ಶುದ್ಭವಾದಲ್ಲಿ, ನೀವು ಅಚ್ಚೊತ್ತಿದ್ದ ಕಾರಣದಿಂದ ನಿಮ್ಮ ಪಾದವಿಡಿದು ನಾನು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಇನ್ನಷ್ಟು ... -->