ಅಥವಾ

ಒಟ್ಟು 44 ಕಡೆಗಳಲ್ಲಿ , 21 ವಚನಕಾರರು , 28 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವಿದ್ದಲ್ಲಿಯೇ ನಿಮ್ಮ ನೆನೆಯಬೇಕು. ಬುದ್ಧಿಯಿದ್ದಲ್ಲಿಯೇ ನಿಮ್ಮ ವಿಚಾರಿಸಬೇಕಯ್ಯ. ಚಿತ್ತವಿದ್ದಲ್ಲಿಯೇ ನಿಮ್ಮ ನಿಶ್ಚಯಿಸಬೇಕು. ಅಹಂಕಾರವಿದ್ದಲ್ಲಿಯೇ ನಿಮ್ಮ ಮಮಕರಿಸಬೇಕಯ್ಯ. ಕಾಯವಿದ್ದಲ್ಲಿಯೇ ಸಾಯದ ಸಂಚವನರಿದು ಎಚ್ಚತ್ತಿರಬೇಕಯ್ಯ. ಜೀವಹಾರಿಯ ಕೆಡೆದು ಭೂಗತವಾಗಿ, ವಾಯುಪ್ರಾಣಿಯಾಗಿ ಹೋಹಾಗ, ಆಗ ಮುಕ್ತಿಯ ಬಯಸಿದರುಂಟೇ? ಚಿತ್ತ ಬುದ್ಧಿ ಅಹಂಕಾರ ಮನ ಜಾÕನ ಭಾವಂಗಳ ಮೀರಿದ, ನಿರ್ಭಾವ ಲಿಂಗೈಕ್ಯನಾದ ನಿರಾಶ್ರಯನಯ್ಯ ಮಾಹೇಶ್ವರನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತನ್ನಿಂದ ತಾನುದಿಸಿದ ಬಿಂದುವಿನಿಂದಾಗಿ ನಿಂದುದೊಂದು ಬಿಂದು. ಬಿಂದು ಬೇರಾಗಿ ಬೆರಸಿಕೊಂಡಲ್ಲಿ ಬಿಂದು ಬಿಚ್ಚಿ ಹಿಂದು ಮುಂದು ನಿಲಿಸಿದರೆ ಬಂಧ ಆಗ ಬಯಲಾಯಿತ್ತು. ತಂದೆಯು ನೋಡಿ ಕಂದನ ಕೈವಿಡಿದಲ್ಲಿ ಮುಂದುಗಂಡೆನು ಮೂದೇವರರಿಯದ ಬೇಹಾರವನು. ಕೊಡಲಿಲ್ಲ ಕೊಳಲಿಲ್ಲದ ಸಡಗರ ಸ್ವಯವಾದಲ್ಲಿ ಸತಿಭಾವತಪ್ಪಿ ಗುರುನಿರಂಜನ ಚನ್ನಬಸವಲಿಂಗಕಂಗವಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬರಡು ಕರೆವಾಗ ಈಯಿತ್ತೆ? ಆ ಕೊರಡು ಚಿಗುರುವಲ್ಲಿ ಹುಟ್ಟಿತ್ತೆ? ಆಗ ತೃಣ ನುಡಿವಲ್ಲಿ ಆತ್ಮ ಜೀವಿಸಿತ್ತೆ? ಆಗ ಕಾಷ್ಠವೇಷವೆದ್ದು ನಡೆವಲ್ಲಿ ಅರಿವು ಕರಿಗೊಂಡಿತ್ತೆ? ಇಂತಿವು ವಿಶ್ವಾಸದ ಹಾಹೆ. ಗುರುಚರದಲ್ಲಿ ಗುಣ, ಶಿವಲಿಂಗ ರೂಪಿನಲ್ಲಿ ಸಲಕ್ಷಣವನರಸಿದಲ್ಲಿಯೆ ಹೋಯಿತ್ತು ಭಕ್ತಿ. ಈ ಗುಣ ತಪ್ಪದೆಂದು ಸಾರಿತ್ತು ಡಂಗುರ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 61 ||
--------------
ದಾಸೋಹದ ಸಂಗಣ್ಣ
ಮತ್ತಮಾ ಸಾಧಾರದೀಕ್ಷೆಯು ಸಬೀಜದೀಕ್ಷೆ ನಿರ್ಬೀಜದೀಕ್ಷೆ ಚಿನ್ಮಯ ದೀಕ್ಷೆ ಯೆಂದು ಮೂರು [ಪ್ರಕಾರದವು]. ಅವು ಯಥಾಕ್ರಮದಿಂದ ಕರ್ಮಕಾಂಡ ಭಕ್ತಿ ಕಾಂಡ ಜ್ಞಾನಕಾಂಡಗಳಲ್ಲಿಯ ದೀಕ್ಷೆ ಎನಿಸಿಕೊಂಬವು. ಇಂತೆಂದು ಕಾರಣಾಗಮ ಪೇಳೂದಯ್ಯಾ. ಅವರೊಳು ನಿರ್ಬೀಜದೀಕ್ಷೆ[ಯು ಸದ್ಯೋ ನಿರ್ವಾಣದೀಕ್ಷೆ ಎಂದು] ಚಿರಂ ನಿರ್ವಾಣದೀಕ್ಷೆ ಎಂದು ಎರಡು ಭೇದವು ಪೇಳಲ್ಪಡುತ್ತಿಹುದು. ಅವರೊಳು ಅತ್ಯಂತ ವಿರಕ್ತನಾದ ಶಿಷ್ಯ[ನು] ಅನೇಕ ಭವಂಗಳಲ್ಲಿ ಮಾಡಲ್ಪಟ್ಟ ಸಂಚಿತಕರ್ಮಂಗಳನು, ಮತ್ತಮಾ ಸಂಚಿತಕರ್ಮರಾಶಿಯೊಳಂ ಆಗ ತಾಳ್ದಿರ್ದ ಶರೀರವಿಡಿದು ಅನುಭವಿಸುತ್ತಿರ್ದ ಪ್ರಾರಬು ಕರ್ಮಂಗಳನು, ಮುಂದೆ ಭವಾಂ ತರಂಗಳಲ್ಲಿ ಅನುಭವಿಸಲುಳ್ಳ ಆಗಾಮಿ ಕರ್ಮಂಗಳನು ಶೋದ್ಥಿಸಿ ಸದ್ಯೋನ್ಮುಕ್ತಿ ಯನೆಯಿಸುವ ದೀಕ್ಷೆ ಸದ್ಯೋನಿರ್ವಾಣದೀಕ್ಷೆ ಎನಿಸುವದಯ್ಯಾ, ಶಾಂತವೀರ ಪ್ರಭುವೇ.
--------------
ಶಾಂತವೀರೇಶ್ವರ
ಆಗ ಹುಟ್ಟಿ ಬೇಗ ಸಾವ ಕಾಯಗೊಂಡ ಮಾನವಾ, ನೀ ದೇವರೆನಿಸಿಕೊಂಬುದೊಂದು ಆವುದಂತರ ಹೇಳಾ ? ದೇವರು ಸಾವಡೆ, ದೇವರಿಗೂ ಸಾವರಿಗೂ ಆವುದಂತರ ಹೇಳಾ ? ದೇವರಿಗೆ ದೇವಲೋಕ, ಮಾನವರಿಗೆ ಮತ್ರ್ಯಲೋಕ, ಗುಹೇಶ್ವರ ಅಲ್ಲಯ್ಯಂಗೆ ಇನ್ನಾವ ಲೋಕವೂ ಇಲ್ಲ.
--------------
ಅಲ್ಲಮಪ್ರಭುದೇವರು
ಅಯ್ಯ, ವರಕುಮಾರದೇಶಿಕೇಂದ್ರನೆ ಕೇಳಾ, ಚಿದ್ಘನಶರಣ ಪ್ರಸಾದಲಿಂಗವಾಗಿ ನಿಂದ ನಿಜಾಚರಣೆಯ ನಿಲುಕಡೆಯ, ಕಲ್ಯಾಣಪಟ್ಟಣದ ಅನುಭಾವ ಮಂಟಪದ ಶೂನ್ಯಸಿಂಹಾಸನದಲ್ಲಿ, ಬಸವ, ಚೆನ್ನಬಸವ, ಸಿದ್ಧರಾಮ, ಅಕ್ಕಮಹಾದೇವಿ, ನೀಲಲೋಚನೆ ಮೊದಲಾದ ಸಕಲಮಹಾಪ್ರಮಥಗಣಂಗಳೆಲ್ಲ ಮಹಾಪ್ರಭುಸ್ವಾಮಿಗಳಿಗೆ ಅಬ್ಥಿವಂದಿಸಿ ಹಸ್ತಾಂಜಲಿತರಾಗಿ ಎಲೆ ಮಹಾಪ್ರಭುವೆ ನಿನ್ನ ಅನಾದಿ ಷಟ್ಸ್ಥಲ ನಿರಭಾರಿವೀರಶೈವಶರಣನ ನಿಜಾಚರಣೆಯ ನಿಲುಕಡೆಯ ದಯವಿಟ್ಟು ಕರುಣಿಸಬೇಕಯ್ಯ ಮಹಾಗುರುವೆ ಎಂದು ಬೆಸಗೊಂಡಲ್ಲಿ ಆಗ ಮಹಾಪ್ರಭುವು ಲಿಂಗಾಂಗಕ್ಕೆ ಬ್ಥಿನ್ನವಿಲ್ಲದೆ ಹಸ್ತಮಸ್ತಕಸಂಯೋಗವ ಮಾಡಿ, ವೇಧಾ-ಮಂತ್ರ-ಕ್ರಿಯಾದೀಕ್ಷೆಯನಿತ್ತು. ಇಪ್ಪತ್ತೊಂದು ತೆರದ ವಿಚಾರವನರುಪಿ, ನೂರೊಂದುಸ್ಥಲದಾಚರಣೆಯ, ಇನ್ನೂರಹದಿನಾರು ಸ್ಥಲದ ಸಂಬಂಧವ ತೋರಿ, ಸರ್ವಾಚಾರ ಸಂಪತ್ತಿನಾವರಣದ ಸ್ವಸ್ವರೂಪು ನಿಲುಕಡೆಯ ತೋರಿಸಿ, ಸಾಕಾರನಿರಾಕಾರದ ನಿಜದ ನಿಲುಕಡೆಯನರುಪಿ, ನಿಜಶಿವಯೋಗದ ನಿರ್ಣಯದ ಕರಿಣಿಸಿ, ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ಅವಿರಳಪರಂಜ್ಯೋತಿಸ್ವರೂಪ ತಾವೆಂದರುಪಿದ ನೋಡ. ಇಂತು ಚೆನ್ನಬಸವೇಶ್ವರಸ್ವಾಮಿಗಳು ಬೆಸಗೊಂಡು ತಮ್ಮ ಚಿದಂಗಸ್ವರೂಪರಾದ ಚಿದ್ಘನರಶರಣ ನಿರ್ಲಜ್ಜಶಾಂತಯ್ಯನೆಂಬ ಶಿವಶರಣನ ಮುಖದಲ್ಲಿ ಮೋಳಿಗಯ್ಯ ಮೊದಲಾದ ಸಕಲಪ್ರಮಥರ್ಗೆ ಬೋದ್ಥಿಸಿದರು ನೋಡ. ಅದೇ ಪ್ರಸಾದವನ್ನೆ ನಿರ್ಲಜ್ಜಶಾಂತಯ್ಯನೆಂಬ ದೇಶಿಕೇದ್ರನು ಚಂಗಣಗಿಲಮಂಟಪದ ರೇವಣಸಿದ್ದೇಶ್ವರಂಗೆ ಬೋದ್ಥಿಸಿದರು ನೋಡ. ಅದೇ ಪ್ರಸಾದವನ್ನೆ ರೇವಣಸಿದ್ದೇಶ್ವರನೆಂಬ ದೇಶಿಕೇಂದ್ರನು ಜ್ಞಾನೋದಯರಾಗಿ ತಮ್ಮಡಿಗೆರಗಿ ಬಂದ ಶಿಷ್ಯೋತ್ತಮ ಶಿವಶರಣರ್ಗೆ ಸ್ವಾನುಭಾವಸೂತ್ರವ ಬೋದ್ಥಿಸುತ್ತಿರ್ದರು ನೋಡ. ಅದೇ ಮಹಾಪ್ರಸಾದವ ನಿನ್ನ ಶ್ರೋತ್ರಮುಖದಲ್ಲಿ ಮಹಾಮಂತ್ರಮೂರ್ತಿಯಾಗಿ ನೆಲೆಗೊಂಡಿರ್ಪ ಪ್ರಸಾದಲಿಂಗಮುಖದಲ್ಲಿ ಅರುಹಿಸಿ ಕೊಟ್ಟೇವು ಕೇಳಿ, ಮಹಾಲಿಂಗಮುಖದಲ್ಲಿ ಸಂತೃಪ್ತನಾಗಿ, ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿ, ಎನ್ನ ಜ್ಞಾನಮಂಟಪದಲ್ಲಿ ಮೂರ್ತಿಗೊಂಡಿರುವ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಲಿಂಗವ ಪೂಜಿಸಿ ಅಂಗವ ಬೇಡಬಾರದಯ್ಯಾ. ಅದೇಕೆಂದಡೆ ಶಿವನು ದೀನನು. ಅದು ಹೇಗೆಂದಡೆ: ದ್ರವ್ಯವೆಲ್ಲವು ಕುಬೇರನ ವಾಸಮಾಡಿ ದೀನವಾಯಿತು. ಹದಿನಾಲ್ಕು ಲೋಕಗೋಸ್ಕರವಾಗಿ ಆ ದ್ರವ್ಯವಿದ್ದು, ಹದಿನಾಲ್ಕು ಲೋಕಕ್ಕೆ ಹೇಗೆ ಮಾಡಲಿ ಎಂದು ಚಿಂತಿಸಿ ಒಂದು ಕೌಪವ ತಂದು ನಮ್ಮ ಗಣಂಗಳ ಮನೆಯಲಿಟ್ಟು ಮಾಯವಾಗಿ, ನ್ಯಾಯಕಿಕ್ಕಿ, ಅಮರನೀತಿಗಳ ಮನೆಯ ಭಂಡಾರವೆಲ್ಲವ ಅವರು ಸಹಜವಾಗಿ ಒಯ್ದರು. ಅದು ಸಾಲದೆ, ನಮ್ಮ ಗಜಪತಿರಾಯನ ಮನೆಯ ಕನ್ನವನಿಕ್ಕಿ ಒಯ್ದು, ಈರೇಳು ಲೋಕವನೆ ಪ್ರತಿಪಾಲನೆಯ ಮಾಡಿ, ಅವರೆಲ್ಲ ಉಂಡ ಮೇಲೆ ನೀವು ಉಂಬಿರಿ. ದಿನದಿನಕ್ಕೆ ಇದೇ ಚಿಂತೆ ನಿಮಗೆ. ನಮ್ಮ ಗಣಂಗಳು ನಿಶ್ಚಿಂತೆಯಲ್ಲಿಪ್ಪರು. ಅದು ಹೇಗೆಂದಡೆ: ದಿನದಿನದ ಈ ಕಾಯಕವ ದಿನದಿನಕೆ ಸರಿಮಾಡಿ ಇಂದಿನ ಕಾಸು ಉದಯಕ್ಕೆ ತಂಗಳೆಂಬರು. ನಾಳಿನ ಚಿಂತೆ ನನಗೇಕೆಂಬರು. ನೀವು ನಾಳಿಗೆ ಬೇಕೆಂದು ಇಟ್ಟುಕೊಂಡು, ನಮ್ಮ ಕರಿಕಾಲಚೋಳನ ಮನೆಯಲ್ಲಿ ಅಡಿಗೆಯ ಮಾಡಿಸಿ ಉಂಡು, ಅದು ಸಾಲದೆ ? ನಮ್ಮ ಮಾದಾರ ಚೆನ್ನಯ್ಯನ ಮನೆಯಲ್ಲಿ ಅಂಬಲಿಯನುಂಡಿರಿ, ಆಗ ಈರೇಳು ಲೋಕಕ್ಕೆ ತೃಪ್ತಿಯಾಯಿತ್ತು. ಇಂತಪ್ಪ ನಮ್ಮ ಗಣಂಗಳ ಉದಾರತ್ವ ಹೇಳಲಿಕ್ಕೆ ಅಸಾಧ್ಯವು. ಇದ ನೀವು ಬಲ್ಲಿರಿಯಾಗಿ, ನಮ್ಮ ಗಣಂಗಳ ಹೃದಯದಲ್ಲಿ ಮನೆಯ ಮಾಡಿಕೊಂಡಿಪ್ಪಿರಿ ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಪ್ರಸಾದಿ ಪ್ರಸಾದಿಗಳೆಂದು ನುಡಿದುಕೊಂಡು ನಡೆಯಬಹುದಲ್ಲದೆ ಪ್ರಸಾದವ ಕೊಂಬ ಭೇದವನರಿಯರು. ಕರುಣಿಸು ಮದ್ಗುರವೆ, ಕೇಳಯ್ಯ ಮಗನೆ : ಗುರುವಿನಲ್ಲಿ ತನುವಂಚನೆಯಿಲ್ಲದೆ ಕೊಂಬುದು ಶುದ್ಧಪ್ರಸಾದ ; ಲಿಂಗದಲ್ಲಿ ಮನವಂಚನೆಯಿಲ್ಲದೆ ಕೊಂಬುದು ಸಿದ್ಧಪ್ರಸಾದ ; ಜಂಗಮದಲ್ಲಿ ಧನವಂಚನೆಯಿಲ್ಲದೆ ಕೊಂಬುದು ಪ್ರಸಿದ್ಧಪ್ರಸಾದ. ಈ ತ್ರಿವಿಧಲಿಂಗದಲ್ಲಿ ತ್ರಿವಿಧ ವಂಚನೆಯಿಲ್ಲದೆ ಅವರ ಕರುಣಪ್ರಸಾದವ ಕೊಂಬ ಪ್ರಸಾದಕಾಯಕ್ಕೆ ಪ್ರಳಯಬಾಧೆಗಳು ಬಾಧಿಸಲಮ್ಮವು ; ಕರಿ ಉರಗ ವೃಶ್ಚಿಕ-ಇವು ಹೊದ್ದಲಮ್ಮವು ; ಇರುವೆ ಕೆಂಡವು ಹೊದ್ದಲಮ್ಮವು. ಹೊದ್ದುವ ಪರಿ ಎಂತೆಂದೊಡೆ : ಲಿಂಗದಲ್ಲಿ ನಿಷೆ*ಯಿಲ್ಲ ; ಜಂಗಮದಲ್ಲಿ ಪ್ರೇಮ-ಭಕ್ತಿಯಿಲ್ಲ ; ವಿಭೂತಿ - ರುದ್ರಾಕ್ಷೆಯಲ್ಲಿ ವಿಶ್ವಾಸವಿಲ್ಲ ; ಶಿವಾಚಾರದಲ್ಲಿ ದೃಢವಿಲ್ಲದ ಕಾರಣ ತಾಪತ್ರಯಂಗಳು ಕಾಡುವವು ಎಂದಿರಿ ಸ್ವಾಮಿ, 'ಮತ್ತೆ ನಂಬುಗೆಯುಳ್ಳ ಪ್ರಸಾದಿಗಳಿಗೆ ವ್ಯಾಧಿಯೇಕೆ ಕಾಡುವವು ? ಸದ್ಗುರುಮೂರ್ತಿಯೆ ಕರುಣಿಸು ಎನ್ನ ತಂದೆ'. ಕೇಳೈ ಮಗನೆ : ಭಕ್ತಗಣಂಗಳಿಗೆ ವಂದಿಸಿ ನಿಂದಿಸಿ ಹಾಸ್ಯ ದೂಷಣವ ಮಾಡಿದಡೆ ಅದೇ ವ್ಯಾಧಿರೂಪಾಗಿ ಕಾಡುವದು ; ತಲೆಶೂಲೆ ಹೊಟ್ಟೆಶೂಲೆ ನಾನಾತರದ ಬೇನೆಯಾಗಿ ಕಾಡುವವು. ಆ ಭಕ್ತಗಣಂಗಳಿಗೆ ತಾನು ನಿಂದಿಸಿದುದ ತಿಳಿದು, ಅವರಿಗೆ ತ್ರಿಕರಣಶುದ್ಧವಾಗಿ ಸೇವೆಯ ಮಾಡಿ, ಅವರ ಕರುಣವ ಹಡೆದಡೆ ಆಗ ಅವರಿಗೆ ವ್ಯಾಧಿ ಬಿಟ್ಟು ಹೋಗುವವು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಆಗ ಆದುದು ತಾನೆ ಇಕೊ ಈಗ ಆದುದು ತಾನೆ ಕೂಗಿ ಹೇಳಿದುದು ತಾನೆ ತಲೆದೂಗಿ ಕೇಳುವುದು ತಾನೆ | ಪಲ್ಲ | ಬೀಜ ಬಿತ್ತಾಯಿತು ಆ ಬೀಜವೇ ವೃಕ್ಷವಾಯಿತು ಬೀಜ ಫಲವಾಯಿತು ಬೀಜ ಬೀಜವೇ ರಸವಾಯಿತು. ರಸವೆ ಊಟವಾಯಿತು ಆ ರಸವೇ ತಾಟಾಯಿತು ಆ ರಸವೇ ನೋಟಾಯಿತು ರಸವೇ ಕೂಟಾಯಿತು. ಕೂಟೇ ಹೆಣ್ಣಾಯಿತು ಆ ಕೂಟೇ ಗಂಡಾಯಿತು ಕೂಟೇ ಪಿಂಡಾಯಿತು ಆ ಕೂಟೇ ಆಶಾಯಿತು. ಆಶೆ ದೋಷವಾಯಿತು ಆಶೆ ಪಾಶವಾಯಿತು ಆ ಆಶೆ ಘಾಸ್ಯಾಯಿತು ಆಶೆ ಆಶೆ ನಾಶಾಯಿತು. ನಾಶ ನಾನಾಯಿತು ಆ ನಾಶ ನೀನಾಯಿತು ನಾಶ ತಾನಾಯಿತು ನಾಶ ನಾಶ ಮಹಾಂತಾಯಿತು.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ನಮ್ಮ ಗಣಂಗಳ ಸಹವಾಸದಿಂದೆ ಏನೇನು ಫಲಪದವಿಯಾಯಿತ್ತೆಂದಡೆ, ಅಷ್ಟಾವರಣಂಗಳು ಸಾಧ್ಯವಾದವು. ಸಾಧ್ಯವಾದ ಕಾರಣ, ಶ್ರೀಗುರುವು ಎನ್ನ ಕರಸ್ಥಲಕ್ಕೆ ಲಿಂಗವ ಕೊಟ್ಟ, ಎಂದೆಂದಿಗೂ ಸತಿ-ಪತಿ ಭಾವ ತಪ್ಪಬೇಡವೆಂದು ಗಣಂಗಳ ಸಾಕ್ಷಿಯ ಮಾಡಿ, ನೀನು ಅಂಗವಾಗಿ ಲಿಂಗವೇ ಪ್ರಾಣವಾಗಿರಿಯೆಂದು ಇಬ್ಬರಿಗೂ ಆಜ್ಞೆಯ ಮಾಡಿದ ಕಾರಣ ಎನ್ನಂಗವೇ ನಿನ್ನಂಗ, ಎನ್ನ ಪ್ರಾಣವೇ ನಿನ್ನ ಪ್ರಾಣ. ನಿನ್ನ ಪ್ರಾಣವೇ ಎನ್ನ ಪ್ರಾಣವಾದ ಮೇಲೆ ಎನ್ನ ಮಾನಾಪಮಾನ ನಿಮ್ಮದಯ್ಯಾ, ಎನ್ನ ಹಾನಿ ವೃದ್ಧಿ ನಿಮ್ಮದಯ್ಯಾ. ನೀವು ಈರೇಳು ಲೋಕದ ಒಡೆಯರೆಂಬುದ ನಾನು ಬಲ್ಲೆನಯ್ಯಾ. ಬಲ್ಲೆನಾಗಿ, ಪುರುಷರ ದೊರೆತನ ಹೆಂಡರಿಗಲ್ಲದೆ ಬೇರುಂಟೆ? ಎನ್ನ ಸುಖದುಃಖವೆ ನಿನ್ನದಯ್ಯ, ನಿನ್ನ ಸುಖದುಃಖವೆ ಎನ್ನದಯ್ಯ, ಅದಕ್ಕೆ ಎನ್ನ ತನುಮನಧನವ ಸೂಸಲೀಯದೆ ನಿಮ್ಮೊಡವೆ ನೀವು ಜೋಕೆಯ ಮಾಡಿಕೊಳ್ಳಿರಿ. ಜೋಕೆಯ ಮಾಡದಿದ್ದಡೆ ಗಣಂಗಳಿಗೆ ಹೇಳುವೆ, ಏಕೆಂದರೆ ಗಣಂಗಳು ಸಾಕ್ಷಿಯಾಗಿದ್ದ ಕಾರಣ. ಆಗ ಆ[ಣೆ]ಯ ಮಾತು ಹೇಳಬಹುದೆಯೆಂದಡೆ ಆಗ ಎನಗೆ ಪ್ರತ್ಯುತ್ತರವಿಲ್ಲ ಸ್ವಾಮಿ. ನಿಮ್ಮ ಒಡವೆ ನಿಮಗೆ ಒಪ್ಪಿಸುವೆನೆಂದರುಹಿದನು ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗಳಿಗೆಯ ಮೇಲೆ ಗಾಳಿ ಹರಿಯದ ಮುನ್ನ ಕೊಳಗ ರಾಶಿಯ ನುಂಗುವುದ ಕಂಡೆ. ಮುಂಡವೆದ್ದು ಭೂಮಂಡಲವ ನುಂಗಿ ಆಲಿಯ ಮರೆಗೊಂಬುದ ಕಂಡೆನು. ಹಗಲೆಗತ್ತಲೆಯಾಗಿ ಆಗ ಗಿಡಿಯ ಮಂಜಿನ ಹೊಗೆಯ ದಾಳಿಯ ಕಂಡೆನು. ಅಂಬುಧಿಯೊಳು ಮುಳುಗಿ ಲೋಕ ತೇಲಾಡುವುದ ಕಂಡೆನು. ಇದೇನು ಚೋದ್ಯ ಹೇಳಾ ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಯ್ಯಾ ಎನ್ನ ತಂದೆ ತಾಯಿಗಳು ತಮ್ಮ ಕಂದನಪ್ಪ ಶಕ್ತಿಯ ಕೈಲೆಡೆಗೊಟ್ಟು ಕಳುಹಿದಡೆ, ಎನ್ನ ಇಲ್ಲಿಗೆ ತಂದು ಮದುವೆಯಂ ಮಾಡಿ, ಮುಗ್ಧನಪ್ಪ ಗಂಡನ ಕೊರಳಲ್ಲಿ ಕಟ್ಟಿ, ಎನ್ನ ಅತ್ತೆ ಮಾವಂದಿರ ವಶಕ್ಕೆ ಕೊಟ್ಟರು. ಎಮ್ಮತ್ತೆ ಮಾವಂದಿರ ಊರ ಹೊಕ್ಕರೆ, ಕತ್ತಲೆಯಲ್ಲದೆ ಬೆಳಗಿಲ್ಲ. ಎಮ್ಮತ್ತೆ ಮಾವಂದಿರ ಮನೆಯ ಹೊಕ್ಕರೆ, ಅತ್ತಿಗೆ ನಾದಿನಿ ಭಾವ ಮೈದುನ ಇವರು ನಾಲ್ವರು ಎನ್ನ ಗಂಡನ ತಲೆಯೆತ್ತಿ ನೋಡಲೀಸರು. ಹಟ್ಟಿಯಲಿಪ್ಪ ಶುನಕ ಅಡಿಯಿಟ್ಟು ನಡೆಯಲೀಸವು. ಸುತ್ತಲಿಹ ಆನೆ ಕುದುರೆ ತೊತ್ತಳದುಳಿವುತಿಪ್ಪವು. ಒತ್ತೊತ್ತಿನ ಬಾಗಿಲವರು ಎನ್ನ ಇತ್ತಿತ್ತ ಹೊರಡಲೀಸರು. ಸುತ್ತಲಿಹ ಕಾಲಾಳ ಪ್ರಹರಿ, ಮೊತ್ತದ ಸರವರ ಈ ಮುತ್ತಿಗೆಗೊಳಗಾಗಿ ನಾ ಸತ್ತು ಹುಟ್ಟುತಿರ್ದೆನಯ್ಯಾ, ಆಗ ಎನ್ನ ಹೆತ್ತತಾಯಿ ಬಂದು ತತ್ವವೆಂಬ ತವರುಮನೆಯ ಹಾದಿ ತೋರಿದಡೆ, ಇತ್ತ ತಾ ನೋಡಿ ಎಚ್ಚತ್ತು, ಎನ್ನ ಚಿಕ್ಕಂದಿನ ಗಂಡನ ನೋಡಿದೆ. ಎಮ್ಮಿಬ್ಬರ ನೋಟದಿಂದ ಒಂದು ಶಿಶು ಹುಟ್ಟಿತ್ತು. ಆ ಶಿಶು ಹುಟ್ಟಿದಾಕ್ಷಣವೆ ಎಮ್ಮಿಬ್ಬರ ನುಂಗಿತ್ತು. ನುಂಗಿದ ಶಿಶು ತಲೆಯೆತ್ತಿ ನೋಡಲು, ಎಮ್ಮತ್ತೆ ಮಾವಂದಿರಿಬ್ಬರು ಹೆದರಿ ಬಿದ್ದರು. ಅತ್ತಿಗೆ ನಾದಿನಿ ಭಾವ ಮೈದುನ ಇವರು ನಾಲ್ವರು ಎತ್ತಲೋ ಓಡಿಹೋದರು. ಈ ಹಟ್ಟಿಯಲ್ಲಿಪ್ಪ ಶುನಕ ಸುತ್ತಲಿಹ ಆನೆ ಕುದುರೆ ಒತ್ತೊತ್ತಿನ ಬಾಗಿಲವರು, ಸುತ್ತಲಿಹ ಕಾಲಾಳ ಪ್ರಹರಿ ಮೊತ್ತದ ಸರವರ ಹೊತ್ತಿ ನಿಂದುರಿದು, ನಾ ಸುತ್ತಿ ನೋಡಿದರೆ ಎಲ್ಲಿಯೂ ಬಟ್ಟಬಯಲಾಗಿರ್ದಿತ್ತು ಕಾಣಾ. ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಬೈಲ ಬ್ರಹ್ಮವು ತನ್ನ ಬೈಲಿನೊಳಗೆ ತಾನೆ ಬೈಲುರೂಪವಾಗಿ ಬೈಲಾದುದು ತಾನೆ | ಪಲ್ಲ | ಜಾರನೋರ್ವಗೆ ಸುತರು ನೂರೆಂಟು ಹುಟ್ಟಿಹರು ಚೋರತನಕ್ಕೆ ಬಿದ್ದು ಹೋರುವ ತಾನೆ ಚೋರತನಕೆ ಬಿದ್ದು ಹೋರುವ ಮಕ್ಕಳ ಜಾರ ತಾ ಕೊಂದು ಅಳಿವನು ತಾನೆ. | 1 | ಪುಂಡಪುಂಡರು ಕೂಡಿ ದಂಡೆತ್ತಿ ಬರುವರು ಕಂಡಕಂಡ್ಹಂಗೆ ಕಡಿದಾಡಿ ತಾನೆ. ಕಂಡಕಂಡ್ಹಂಗೆ ಕಡಿದಾಡಿ ಆ ದಂಡು ಬಂಡಾಟವಾಗಿ ಹೋಗುದು ತಾನೆ. | 2 | ಇರವಿಯ ದಂಡೆದ್ದು ಧರೆಯೆಲ್ಲ ಮುತ್ತುವುದು ನರರಿರುವುದಕ್ಕೆ ನೆಲೆಯಿಲ್ಲ ತಾನೆ. ನರರಿರುವುದಕ್ಕೆ ನೆಲೆಯಿಲ್ಲದಂತಾಗಿ ಧರೆ ಉರಿದಿರಿವಿ ಅಳಿವುದು ತಾನೆ. | 3 | ಇದ್ದ ದೈವಗಳೆಲ್ಲ ಬಿದ್ದುರುಳಿ ಹೋದಾವು ಸುದ್ದಿ ಕೇಳೋರ್ವ ಬರುವನು ತಾನೆ ಸುದ್ದಿ ಕೇಳೋರ್ವ ಬಂದು ತಾ ಮಾಡಿದ ಬುದ್ಧಿಂದ ಸೀಮಾ ನೇಮವು ತಾನೆ. | 4 | ಮಾಡಿದ ನೇಮ ಸೀಮಾ ಮಾಡಿದಂತಿರದೆ ತಾ ಕೂಡೋದು ಜಾತಿಸಂಕರ ತಾನೆ ಕೂಡೋದು ಜಾತಿಸಂಕರವಾಗಲು ರೂಢಿಯೊಳಗೆ ಮಹಾಶ್ಚರ್ಯವು ತಾನೆ. | 5 | ಹಿಂದೆ ಬಸವರಾಜ ಬಂದು ತೋರಿದ ಮಹತ್ವಕ್ಕೆ ಅಂದೇ ಆಯಿತು ವಿಘ್ನ ಪ್ರಮಥರಿಗೆ ತಾನೆ ಅಂದಾದ ವಿಘ್ನಕ್ಕೆ ಪ್ರಮಥರು ತಾವೆಲ್ಲಾ ಮುಂದಾಗುವದು ಸೂಚಿಸಿದರು ತಾನೆ. | 6 | ಮುಂದಾದುದು ತಾನೆ ಮುಂದೇನಾಗುವದು ಅದ ರಂದವ ಅರಿಯದೆ ಉಳುವಿಟ್ಟರು ತಾನೆ ಅಂದವರಿಯದೆ ತಾವು ಉಳುವಿಟ್ಟು ಹೋದ ಕಾರಣ ಬಂದುಹೋಗುವದು ಭವವುಂಟು ತಾನೆ. | 7 | ಚನ್ನಣ್ಣ ಬರುವದು ಬಿನ್ನಣ ಮುಂದುಂಟು ಚನ್ನಣ್ಣನಿಂದೇನಾಗುವದು ತಾನೆ ಚನ್ನಣ್ಣನಿಂದೇನಾಗದಿರಲು ಆಗ ತನ್ನ ತಾ ತಿಳಿದು ನಿಜವಹ ತಾನೆ | 8 | ಆರು ಕೂಡಿಸಿದರೆ ಕೂಡದು ಆರು ಅಗಲಿಸಿದರೆ ಅಗಲದು ಆರಿಗೆ ಆರಾಗಿ ಮೀರುವದು ತಾನೆ ಆರಿಗೆ ಆರಾಗಿ ಮೀರುವ ಮಾತಿಗೆ ಘೋರಾಟವಾಯಿತು ಬಹುಜನ್ಮ ತಾನೆ | 9 | ಒಂದೊಂದು ಜೀವದಿಂದೆ ಮುಂದೊಮ್ಮೆ ಸರ್ವಜೀವವು ಹೊಂದಿ ಹೋಗುವದು ಲಯವಾಗಿ ತಾನೆ ಹೊಂದಿ ಹೋಗುವದು ಲಯವಾಗಿ ಅದರೊಳ್ ಬಂದುಳಿದು ಹಲವಾಗುವದು ತಾನೆ | 10 | ನಿಷೆ* ನೆಲೆಗೊಳಿಸಿ ನಿಷೆ*ಯೊಳ್ ಅಳಿವರು ನಿಷೆ* ಉಳ್ಳವರು ನಿಜವಲ್ಲ ತಾನೆ ನಿಷೆ*ಯುಳ್ಳವರು ನಿಜವಲ್ಲ ಇದರಂತೆ ದುಷ್ಟರು ದುಷ್ಟರೊಳ್ ಅಳಿವರು ತಾನೆ | 11 | ಅಳಿದದ್ದು ಅಳಿವುದು ಉಳಿದದ್ದು ಉಳಿವುದು ಇಳೆಯು ನೀರೊಳ್ ಕರಗುವದು ತಾನೆ ಇಳೆಯು ನೀರೊಳು ಕರಗಿದ ಕಾಲಕ್ಕೆ ಬಲವಂತನೊಬ್ಬನು ಬರುವನು ತಾನೆ | 12 | ಬಲವಂತ ಬಂದಾಗ ನೆಲಜಲ ನೆಲಮಾಡಲು ಹಲವುಕಾಲ ಮತ್ತಾಗುವದು ತಾನೆ ಹಲವುಕಾಲ ಮತ್ತಾಗುವದು ಈ ಪರಿ ನೆಲೆಯೊಳಳಿವು ಸಾಕಾರಕ್ಕೆ ತಾನೆ | 13 | ಆರಾರ ವ್ಯಾಳ್ಯಕ್ಕೆ ಮೀರುವದು ಈ ಭೂಮಿ ನೀರೊಳು ಕೂಡಿ ನೀರಾಗುವದು ತಾನೆ ನೀರೊಳು ಕೂಡಿ ನೀರಾಗಿರಲು ಆ ನೀರು ನೀರರ್ತು ಅಗ್ನಿ ಆಗುವದು ತಾನೆ | 14 | ಅನಲಾನ ಉರಿನುಂಗಿ ಅನಿಲಾನ ಒಳಕೊಂಡು ಅನುವಾಯಿತು ಆಕಾಶ ಆತ್ಮನೊಳು ತಾನೆ ಅನುವಾಯಿತು ಆತ್ಮನೊಳು ಆಕಾಶ ಆ ಆತ್ಮ ಚಿನುಮಯನೊಳಗೆ ತನುಮಯ ತಾನೆ | 15 | ಲೀಲವನುಳಿದು ತಾ ಲೀಲವಾಗಲು ಮಹಾಂತ ಮೂಲೋಕವೆಲ್ಲಾ ಸಾಲೋಕ್ಯ ತಾನೆ ಮೂಲೋಕವೆಲ್ಲಾ ಸಾಲೋಕ್ಯವೆಲ್ಲುಂಟು ಲೀಲ ಮೇಲಾಗಿ ತಾನಹನು ತಾನೆ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಹಡೆದ ಹೆಣ್ಣಿಗಾಗಲಿ, ಹಡೆದ ಗಂಡಿಗಾಗಲಿ, ಗುರುಪಾದೋದಕಸ್ನಾನವೆ ಶುದ್ಧ ಕಾಣಾ. ವನದ ಭೋಜನವಾಗಲಿ, ಮನೆಯ ಭೋಜನವಾಗಲಿ, ಗುರುಪಾದೋದಕ ಪ್ರೋಕ್ಷಣೆಯೆ ಶುದ್ಧ ಕಾಣಾ. ಮದುವೆಯ ಸಂಭ್ರಮವಾಗಲಿ, ಮರಣದ ದುಃಖವಾಗಲಿ, ಗುರುಪಾದೋಕವೆ ಸಂಜೀವನ ಕಾಣಾ. ಆಗುವ ದೀಕ್ಷೆಯೆ ಆಗಲಿ, ಭೋಗಿಪ ಶಿಕ್ಷೆಯೆ ಆಗ, ಗುರುಪಾದೋದಕವರ್ತನವೆ ಅಮರಗಣ ನಡಾವಳಿ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->