ಅಥವಾ

ಒಟ್ಟು 659 ಕಡೆಗಳಲ್ಲಿ , 63 ವಚನಕಾರರು , 531 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ, ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ 400
--------------
ಬಸವಣ್ಣ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ವಿಕಾರ ಈ ಜನ್ಮದ ಹೊರೆಯ ಕಳೆವುದೆಂದು, ಭೂಕಾರ ಭೂತ ಪಿಶಾಚಿಗಳ ಗ್ರಹಗಳ ನಿಟ್ಟೊರಸುವ ಅರಿಯೆಂದು, ತಿಕಾರ ಅಂತರಂಗದ ಒಳಹೊರಗೆ ಇಡಿದಿಹ ತಿಮಿರಕೆ ಜ್ಯೋತಿಸ್ವರೂಪವೆಂದು ಶ್ರೀ ವಿಭೂತಿಯ ಧರಿಸ ಕಲಿಸಿದನಯ್ಯಾ ಶ್ರೀಗುರು. ಪಂಚಗವ್ಯ ಗೋಮಯದಿಂದುದಯವಾದ ಶ್ರೀವಿಭೂತಿ ಪಂಚಭೂತದ ಪೂರ್ವಗ್ರಹವ ಕಳೆವುದೆಂದು ನಿರೂಪಿಸಿ ಧರಿಸಿದನಯ್ಯಾ. ಇಂತಪ್ಪ ಶ್ರೀ ವಿಭೂತಿಯ ಸಂತತ ಧರಿಸಿ ನಿಶ್ಚಿಂತನಾಗಿದ್ದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕಾಮನ ಕೊಂದು ಪಟ್ಟಕ್ಕೆ ನಿಂದ ಕಾಮರಾಜರಾಜನು, ರಾಜಾದ್ಥಿರಾಜನು. ಗಂಡರನೆಲ್ಲರ ಹೆಂಡಿರ ಮಾಡಿ ನೆರೆವ ವೈಶಿಕ, ಕಾಮಿನೀ ಕೇಳಾ, ಇಂತಪ್ಪ ಕಾಮಿ ಎನಗತಿ ಕಾಮಿಸಿ ನೆರೆದು ಕಾಮಸಿದ್ಧಿಯನೀವನು ಉರಿಲಿಂಗದೇವನು.
--------------
ಉರಿಲಿಂಗದೇವ
ಸರ್ವಾಚಾರಸಂಪತ್ತನರಿದಲ್ಲದೆ ನಿರವಯಲಪದವ ಕಾಣಬಾರದು ನೋಡಾ ಆರಿಗೆಯು. ಸರ್ವಾಚಾರಸಂಪತ್ತು ಎಂತೆನಲು, ಷಡ್‍ಭೂತಂಗಳಲ್ಲಿ ಷಡ್ವಿಧ ಮಂತ್ರಂಗಳ ನೆಲೆಗೊಳಿಸಿ, ಆ ಷಡ್ವಿಧ ಮಂತ್ರಂಗಳನೆ ಷಡ್ವಿಧಚಕ್ರಂಗಳೆಂದು ತಿಳಿದು, ಆ ಷಡ್ವಿಧ ಚಕ್ರಂಗಳಿಗೆ ಷಡ್ವಿಧ ಅದ್ಥಿದೈವಂಗಳನೆ ಷಡ್ವಿಧ ಅಂಗವೆಂದಾಧಾರಗೊಳಿಸಿ, ಆ ಷಡ್ವಿಧ ಅಂಗಕ್ಕೆ ಷಡ್ವಿಧ ಕರಣಂಗಳನೆ ಷಡ್ವಿಧ ಹಸ್ತಂಗಳೆಂದು ಅರಿದಳವಡಿಸಿಕೊಂಡು, ಆ ಷಡ್ವಿಧ ಹಸ್ತಂಗಳಿಗೆ ಷಡ್ವಿಧ ಲಿಂಗಂಗಳನಳವಡಿಸಿಕೊಂಡು, ಆ ಷಡ್ವಿಧ ಲಿಂಗಕ್ಕೆ ಷಡ್ವಿಧೇಂದ್ರಿಯಂಗಳನೆ ಷಡ್ವಿಧ ಪದಾರ್ಥಂಗಳೆಂದರಿದು, ಆ ಷಡ್ವಿಧ ಪದಾರ್ಥಂಗಳನು ಷಡ್ವಿಧ ಭಕ್ತಿಯಿಂದೆ ಷಡ್ವಿಧ ಲಿಂಗಮುಖಂಗಳಿಗೆ ಸಮರ್ಪಿಸಲು, ಒಳಹೊರಗೆಲ್ಲ ಆ ಷಡ್ವಿಧ ಲಿಂಗದ ಬೆಳಗು ತುಂಬಿ ತೊಳಗಿ ಬೆಳಗುತಿರ್ಪುದು ನೋಡಾ. ಎಡೆದೆರಹಿಲ್ಲದೆ ಆ ಷಡ್ವಿಧ ಲಿಂಗದ ಬೆಳಗಿನೊಳಗೆ ತನ್ನ ಷಡ್ವಿಧಾಂಗದ ಕಳೆಗಳನೆಲ್ಲವನಡಗಿಸಿ, ತಾನೆಂಬ ಕುರುಹುದೋರದಿರ್ದಡೆ ಅದೇ ಸರ್ವಾಚಾರಸಂಪತ್ತು ನೋಡಾ. ಇಂತಪ್ಪ ಸರ್ವಾಚಾರಸಂಪತ್ತು ನಿಮ್ಮ ಪೂರ್ಣ ಒಲುಮೆಯ ಶರಣರಿಗಲ್ಲದೆ ಉಳಿದವರಿಗಳವಡದಯ್ಯಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಆಚಾರಲಿಂಗಾನುಭಾವದಿಂದ ಪೃಥ್ವಿಯ ಪೂರ್ವಾಶ್ರಯವನಳಿದ ಸದಾಚಾರನಿಷ್ಠನ ನೋಡಾ! ಸದ್ಗುರುರತಿಯಿಂದ ಅಪ್ಪುತತ್ವದ ಪೂರ್ವಾಶ್ರಯವನಳಿದು ಸದ್ಗುರುನಿಷ್ಠನ ನೋಡಾ! ಶಿವಲಿಂಗದ ಸಂಗದಿಂದ ಅಗ್ನಿಯ ಪೂರ್ವಾಶ್ರಯವನಳಿದ ಶಿವಲಿಂಗಪ್ರೇಮಿಯಾದ ಶಿವಾಚಾರನಿಷ್ಠನ ನೋಡಾ! ಚರಲಿಂಗದ ಸಂಗದಿಂದ ವಾಯುವಿನ ಪೂರ್ವಾಶ್ರಯವನಳಿದ ಜಂಗಮಲಿಂಗಗ್ರಾಹಕನ ನೋಡಾ! ಪ್ರಸಾದಲಿಂಗದ ಸೇವಕತ್ವದಿಂದ ಕರ್ಮತ್ರಯವನಳಿದ ನಿರ್ಮಲ ನಿರಾವರಣನ ನೋಡಾ! ಮಹಾಲಿಂಗದ ಸಂಗದಿಂದ ಜೀವಭಾವವಳಿದ ಮಹಾಮಹಿಮನ ನೋಡಾ! ಲಿಂಗನಿಷ್ಠೆಯಿಂದ ಅಂಗಗುಣಂಗಳೆಲ್ಲವ ಕಳೆದುಳಿದ ನಿರಂಗಸಂಗಿಯ ನೋಡಾ! ಇಂತಪ್ಪ ಮಹೇಶ್ವರಂಗೆ ನಮೋನಮೋಯೆಂಬೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸಜ್ಜನವೆಂಬ ಮಾರ್ಗದಲ್ಲಿ ಒಬ್ಬ ಬಾಲೆಯು ನಿಂದು ನಿಜವ ತೋರುತಿರ್ಪಳು ನೋಡಾ. ಆ ನಿಜವ ಈ ಜನಂಗಳೇನು ಬಲ್ಲರಯ್ಯ ? ಅಜ ಹರಿ ಸುರ ನಾರದ ಮೊದಲಾದವರಿಗೆ ಅಗೋಚರವೆನಿಸಿತ್ತು ನೋಡಾ. ಸ್ವಜ್ಞಾನಿಯಾದ ಶರಣನು ಆ ನಿಜವ ನೋಡಬಲ್ಲನಯ್ಯಾ. ಆ ಬಾಲೆಯ ಅಂಗವ ಕೂಡಬಲ್ಲನಯ್ಯ. ಆ ಸಜ್ಜನವೆಂಬ ಮಾರ್ಗವ ಹತ್ತಬಲ್ಲನಯ್ಯ. ಇಂತಪ್ಪ ಶರಣಂಗೆ ನಮೋ ನಮೋ ಎನುತಿರ್ದೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಂಗಳೆ ಕರುಳಾಗಿ ಉರವಣಿಸಿ ಬಪ್ಪವನ ಬರವ ನೋಡಾ, ಇರವ ನೋಡಾ. ಪರವ ನೋಡಾ, ಇಹಪರವ ನೋಡಾ, ಇಹಪರವೊಂದಾದ ಘನವ ನೋಡಾ, ಎಲೆ, ಘನಕ್ಕೆ ಘನವ ನೋಡಾ. ಕರುವಿಟ್ಟ ರೂಪಿನಂತೆ ಕಂಗಳೆರಡು ಹಳಚದೆ ಭುಗಿಲನೆ ನಡೆತಹ. ಇಂತಪ್ಪ ಗರುವ ಪ್ರಭುವ ಕಂಡೆವೈ ಕೂಡಲಸಂಗಮದೇವಾ.
--------------
ಬಸವಣ್ಣ
ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ ಸಂದೇಹದಲ್ಲಿ ಮುಳುಗಿ. ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೆ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾಗಿ, ಹೇಳುವುದಕ್ಕೆ ನುಡಿಯಿಲ್ಲ, ನೋಡುವುದಕ್ಕೆ ರೂಪಿಲ್ಲ. ಇಂತಪ್ಪ ನಿರೂಪದ ಮಹಾಘನವು ಶರಣರ ಹೃದಯದಲ್ಲಿ ನೆಲೆಗೊಂಬುದಲ್ಲದೆ, ಈ ಜನನ ಮರಣಕ್ಕೊಳಗಾಗುವ ಮನುಜರೆತ್ತ ಬಲ್ಲರು ಆ ಮಹಾಘನದ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ವಿರಕ್ತನೆನಿಸುವಂಗಾವುದು ಚಿಹ್ನೆವೆಂದೊಡೆ : ವಿಷಯವಿಕಾರವ ಸುಟ್ಟಿರಬೇಕು. ಬಯಕೆ ನಿರ್ಬಯಕೆಯಾಗಿರಬೇಕು. ಸ್ತ್ವರಜತಮವೆಂಬ ತ್ರೈಗುಣಂಗಳನಿಟ್ಟೊರಸಿರಬೇಕು. ಅದೆಂತೆಂದೊಡೆ : ``ವಿಕಾರಂ ವಿಷಯಾತ್‍ದೂರಂ ರಕಾರಂ ರಾಗವರ್ಜಿತಂ | ತಕಾರಂ ತ್ರೈಗುಣಂ ನಾಸ್ತಿ ವಿರಕ್ತಸ್ಯ ಸುಲಕ್ಷಣಂ ||'' ಇಂತಪ್ಪ ವಿರಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹೊನ್ನು ಹೆಣ್ಣು ಮಣ್ಣನಾವರಿಸಿಕೊಂಡು, ಒಡವೆ ಆಭರಣಂಗಳ ಹಲ್ಲಣಿಸಿಕೊಂಡು ಬಂದು, ಸರ್ವರಿಗೆ ಶಾಸ್ತ್ರೋಪದೇಶವ ಹೇಳುವರು ವೇಷಧಾರಿಗಳು. ಸೂಳೆಯರಂತೆ ತಮ್ಮ ಉಪಾದ್ಥಿಕೆಗೆ ಒಡಲಾಸೆಗೆ ಹಿತವಚನ ನುಡಿವರು. ಇಂತಪ್ಪ ಪ್ರಪಂಚಿನ ವೇಷಡಂಭಕ ಧೂರ್ತಲಾಂಛನಧಾರಿಗಳಿಗೆ ಮಹಂತಿನ ದೇವರೆನ್ನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ತಮ್ಮಾದಿಯ ನಿಲುವ ತಾವರಿಯರು. ಷಟ್‍ಸ್ಥಲದ ನಿರ್ಣಯವ ಏನೆಂದರಿಯರು. ಆಚಾರದನುಭಾವದಂತರಂಗದ ಮೂಲವ ಮುನ್ನವೇ ಅರಿಯರು. ಇಂತಿದನರಿಯದ ಪಶುಪ್ರಾಣಿಗಳಿಗೆ ಜಂಗಮವೆನ್ನಬಹುದೆ ? ಎನ್ನಲಾಗದಯ್ಯಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ ಭಕ್ತಿಯನೊಳಕೊಂಡು, ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ ನಾನು, ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ, ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->