ಅಥವಾ

ಒಟ್ಟು 95 ಕಡೆಗಳಲ್ಲಿ , 30 ವಚನಕಾರರು , 71 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಆಧಾರಚಕ್ರವೆ ಶ್ರೀಶೈಲಕ್ಷೇತ್ರ : ಅಲ್ಲಿರ್ಪ ಆಚಾರಲಿಂಗವೇ ಶ್ರೀಮಲ್ಲಿಕಾರ್ಜುನದೇವರು. ಎನ್ನ ಸ್ವಾದ್ಥಿಷ್ಠಾನಚಕ್ರವೆ ಸೇತುಬಂಧಕ್ಷೇತ್ರ; ಅಲ್ಲಿರ್ಪ ಗುರುಲಿಂಗವೆ ರಾಮೇಶ್ವರನು. ಎನ್ನ ಮಣಿಪೂರಕ ಚಕ್ರವೇ ಪಂಪಾಕ್ಪೇತ್ರ; ಅಲ್ಲಿರ್ಪ ಶಿವಲಿಂಗವೆ ವಿರೂಪಾಕ್ಷೇಶ್ವರನು. ಎನ್ನ ಅನಾಹತಚಕ್ರವೇ ಹಿಮವತ್ಕೇದಾರಕ್ಷೇತ್ರ; ಅಲ್ಲಿರ್ಪ ಜಂಗಮಲಿಂಗವೆ ಹಿಮಗಿರೀಶ್ವರನು. ಎನ್ನ ವಿಶುದ್ಧಿಚಕ್ರವೆ ಅವಿಮುಕ್ತಿಕ್ಷೇತ್ರ: ಅಲ್ಲಿರ್ಪ ಪ್ರಸಾದಲಿಂಗವೆ ವಿಶ್ವೇಶ್ವರನು. ಎನ್ನ ಆಜಾÕಚಕ್ರವೆ ಸಂಗಮಕ್ಷೇತ್ರ: ಅಲ್ಲಿರ್ಪ ಮಹಾಲಿಂಗವೆ ಸಂಗಮೇಶ್ವರನು. ಇಂತಿವು ಮೊದಲಾದ ಸಕಲಕ್ಷೇತ್ರಂಗಳನೊಳಕೊಂಡ ಎನ್ನ ಬ್ರಹ್ಮಚಕ್ರವೆ ಮಹಾಕೈಲಾಸ. ಅಲ್ಲಿರ್ಪ ನಿಷ್ಕಲಲಿಂಗವೆ ಅನಾದಿ ಪರಶಿವನು ನೀನೇ ಅಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶ್ರೀಗುರುವಿನಿಂದದ್ಥಿಕರು ಆವ ಲೋಕದೊಳಗಿಲ್ಲವಯ್ಯಾ. ಶ್ರೀಗುರುವಿನಂತೆ ಪರೋಪಕಾರಿಗಳ ಮತ್ತಾರನೂ ಕಾಣೆನಯ್ಯಾ. ಅದೆಂತೆಂದೊಡೆ : ಎನ್ನ ಕಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕಿವಿಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ನಾಸಿಕ ನಾಲಗೆಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕರಚರಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ತನುಮನಪ್ರಾಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಸಕಲಕರಣೇಂದ್ರಿಯಂಗಳ ಭಕ್ತರ ಮಾಡಿದನಯ್ಯ ಶ್ರೀಗುರು ಪರಮಶಿವಲಿಂಗಕ್ಕೆ. ಇಂತಿವು ಮೊದಲಾಗಿ ಎನ್ನ ಸರ್ವ ಅವಯವಂಗಳನೆಲ್ಲ ಸದ್ಭಕ್ತರ ಮಾಡಿ ಲಿಂಗಾರ್ಪಿತಕ್ಕೆ ಅನುಗೊಳಿಸಿದ ಶ್ರೀಗುರುವಿನ ಮಹಾಘನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕಾಲಿನಲ್ಲಿ ನಡೆವುದು, ಕೈಯಲ್ಲಿ ಮುಟ್ಟುವುದು, ಕಣ್ಣಿನಲ್ಲಿ ನೋಡುವುದು, ಕಿವಿಯಲ್ಲಿ ಕೇಳುವುದು, ಮೂಗಿನಲ್ಲಿ ವಾಸಿಸುವುದು. ಬಾಯಲ್ಲಿ ಉಂಬ ಭೇದದಿಂದ ಅಯಿದರಾಟಿ, ಆರರ ಕೂಟ, ಏಳರ ಬೇಟ, ಎಂಟರ ಮದ, ಹದಿನಾರರ ಕಳೆ. ಇಂತಿವೆಲ್ಲವು ಮೂರ ಮರೆದಲ್ಲಿ ನಿಂದವು. ಮೂರನರಿದಲ್ಲಿ ಸಂದವು. ಇಂತಿವು ಉಳ್ಳನ್ನಕ್ಕ ಪೂಜಿಸಬೇಕು. ನಾ ನೀನೆಂಬನ್ನಕ್ಕ ಅರ್ಪಿಸಬೇಕು. ಅದಳಿಯೆ ಮತ್ತೇನೂ ಎನಲಿಲ್ಲ. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆಂಬದಕ್ಕೆ ಎಡೆಯಿಲ್ಲ.
--------------
ಶಿವಲೆಂಕ ಮಂಚಣ್ಣ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಬರಡು ಕರೆವಾಗ ಈಯಿತ್ತೆ? ಆ ಕೊರಡು ಚಿಗುರುವಲ್ಲಿ ಹುಟ್ಟಿತ್ತೆ? ಆಗ ತೃಣ ನುಡಿವಲ್ಲಿ ಆತ್ಮ ಜೀವಿಸಿತ್ತೆ? ಆಗ ಕಾಷ್ಠವೇಷವೆದ್ದು ನಡೆವಲ್ಲಿ ಅರಿವು ಕರಿಗೊಂಡಿತ್ತೆ? ಇಂತಿವು ವಿಶ್ವಾಸದ ಹಾಹೆ. ಗುರುಚರದಲ್ಲಿ ಗುಣ, ಶಿವಲಿಂಗ ರೂಪಿನಲ್ಲಿ ಸಲಕ್ಷಣವನರಸಿದಲ್ಲಿಯೆ ಹೋಯಿತ್ತು ಭಕ್ತಿ. ಈ ಗುಣ ತಪ್ಪದೆಂದು ಸಾರಿತ್ತು ಡಂಗುರ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 61 ||
--------------
ದಾಸೋಹದ ಸಂಗಣ್ಣ
ಚತುರ್ವಿಂಶತಿತತ್ವಕೂಡಿ ಶರೀರ ಹೇಗಾಯಿತ್ತೆಂದಡೆ, ಹೇಳುವೆ ಕೇಳಿರಣ್ಣಾ : ಆ ಆಕಾಶ ಆಕಾಶವ ಬೆರಸಲು ಜ್ಞಾನ ಹುಟ್ಟಿತ್ತು. ಆ ಆಕಾಶ ವಾಯುವ ಬೆರಸಲು ಮನ ಹುಟ್ಟಿತ್ತು. ಆಕಾಶ ಅಗ್ನಿಯ ಬೆರಸಲು ಅಹಂಕಾರ ಹುಟ್ಟಿತ್ತು. ಆಕಾಶ ಅಪ್ಪುವ ಬೆರಸಲು ಬುದ್ಧಿ ಹುಟ್ಟಿತ್ತು. ಆಕಾಶ ಪೃಥ್ವಿಯ ಬೆರಸಲು ಚಿತ್ತ ಹುಟ್ಟಿತ್ತು. ಇಂತಿವು ಕರಣಚತುಷ್ಟಯಂಗಳುತ್ಪತ್ತಿಯೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಉರಿ ಆತ್ಮಸ್ಥಾವರಂಗಳಲ್ಲಿ ನಂದದಿಹನ್ನಕ್ಕ, ನೀರು ಒಂದರಲ್ಲಿಯೆ ಇಂಗದಿಹನ್ನಕ್ಕ, ಲಿಂಗವೆಂಬುದೊಂದು ಪ್ರಮಾಣವುಂಟು ಆ ಪ್ರಮಾಣು ಅಪ್ರಮಾಣಹನ್ನಕ್ಕ, ಭಾವ ಮೂರು, ನಿರ್ಭಾವ ಮೂರು, ಸ್ಥೂಲವಾರು, ತತ್ತ್ವವೈದು, ಇಂತಿವು ಕೂಡೆ, ಅಳೆದು ಮರಳಲಿಕ್ಕೆ ಹಲವು ಸ್ಥಲ ಕುಳ ಬೇರಾಯಿತ್ತು. ಬಂಗಾರವೊಂದು ಹಲವು ತೊಡಿಗೆಯ ಹೊಲಬಾದಂತೆ, ತನ್ನಷ್ಟೇ ತದ್ದøಷ್ಟವುಭಯವ ಕೂಡುವನ್ನಬರ, ನಿಃಕಳಂಕ ಮಲ್ಲಿಕಾರ್ಜುನನೆಂದೆನುತ್ತಿರಬೇಕು.
--------------
ಮೋಳಿಗೆ ಮಾರಯ್ಯ
ವೇದದ ಉತ್ತರವ ವಿಚಾರಿಸಿ, ಶಾಸ್ತ್ರದ ಸಂದೇಹವ ನಿಬದ್ಧಿಸಿ ಪುರಾಣದ ಅಬ್ಥಿಸಂದ್ಥಿಯ ತಿಳಿದು ಇಂತಿವು ಮೊದಲಾದ ಆಗಮಂಗಳಲ್ಲಿ ಚಿಂತಿಸಿಯೆ ನೋಡಿ ಸಕಲಯುಕ್ತಿ ಶಬ್ದಸೂತ್ರಂಗಳಲ್ಲಿ ಪ್ರಮಾಣಿಸಿಯೆ ಕಂಡು ಮಾತುಗಂಟಿತನದಲ್ಲಿ ತರ್ಕಶಾಸ್ತ್ರಂಗಳಿಗೆ ಹೋಗದೆ ಪಂಚವಿಂಶತಿತತ್ವದೊಳಗಾದ ಆಧ್ಯಾತ್ಮ ಆದಿಭೌತಿಕವ ತಿಳಿದು ಪಂಚಭೂತಿಕದ ಸಂಚಿತ ಪ್ರಾರಬ್ಧ ಆಗಾಮಿಗಳ ಸಂಚಿನ ಸಂಕಲ್ಪವ ತಿಳಿದು ಪೃಥ್ವಿತತ್ವದ ಮಲ, ಅಪ್ಪುತತ್ವದ ಸಂಗ, ತೇಜತತ್ವದ ದಗ್ಧ, ವಾಯುತತ್ವದ ಸಂಚಲ, ಆಕಾಶತತ್ವದ ಬಹುವರ್ಣಕೃತಿ. ಇಂತೀ ಪಂಚಭೂತಿಕಂಗಳಲ್ಲಿ ತಿಳುವಳವಂ ಕಂಡು ಕರಂಡದಲ್ಲಿ ನಿಂದ ಗಂಧದಂತೆ ತನ್ನಂಗವಿಲ್ಲದೆ ಗಂಧ ತಲೆದೋರುವಂತೆ ವಸ್ತುಘಟಭೇದವಾದ ಸಂಬಂಧ. ಇಂತೀ ತೆರನ ತಿಳಿದು ವಾಗ್ವಾದಂಗಳಲ್ಲಿ ಹೋರಿಹೆನೆಂದಡೆ ಮಹಾನದಿಯ ವಾಳುಕದ ಮರೆಯ ನೀರಿನಂತೆ ಚೆಲ್ಲಿ ಕಂಡೆಹೆನೆಂದಡೆ ಆ ನದಿವುಳ್ಳನ್ನಕ್ಕ ಕಡೆಗಣಿಸಬಾರದು. ನಿಂದಲ್ಲಿ ಪ್ರಮಾಣುವಿಂದಲ್ಲದೆ ಮೀರಿ ತುಂಬದಾಗಿ ಇಂತೀ ಶ್ರುತ್ಯರ್ಥವಿಚಾರದಿಂದ ಹಾಕಿದ ಮುಂಡಿಗೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಲ್ಲದಿಲ್ಲಾಯೆಂದು.
--------------
ಪ್ರಸಾದಿ ಭೋಗಣ್ಣ
ಓಂಕಾರವೇ ಶಿವ, ಯಕಾರವೇ ಸದಾಶಿವ, ವಾಕಾರವೇ ಈಶ್ವರ, ಶಿಕಾರವೇ ಮಹೇಶ್ವರ, ಮಃಕಾರವೇ ಈಶ್ವರ, ನಕಾರವೇ ಈಶಾನ. ಈ ಷಡಕ್ಷರವೆ ಷಡ್ವಿಧಮಂತ್ರಮೂರ್ತಿಯಾಗಿ ಒಪ್ಪುತಿಪ್ಪುದಯ್ಯ, ಮತ್ತೆ-ನಕಾರವೇ ಮೂರ್ತಿಬ್ರಹ್ಮ, ಮಃಕಾರವೇ ಪಿಂಡಬ್ರಹ್ಮ, ಶಿಕಾರವೇ ಕಲಾಬ್ರಹ್ಮ, ವಾಕಾರವೇ ಆನಂದಬ್ರಹ್ಮ, ಯಕಾರವೇ ವಿಜ್ಞಾನಬ್ರಹ್ಮ, ಓಂಕಾರವೇ ಪರಬ್ರಹ್ಮ, ಈ ಷಡಕ್ಷರವೆ ಷಡ್ವಿಧಬ್ರಹ್ಮವೆಂದು ಹೇಳಲ್ಪಟ್ಟಿತ್ತು ನೋಡಾ. ಮತ್ತೆ-ನಕಾರವೇ ಕ್ರಿಯಾಶಕ್ತಿ:ಮಕಾರವೇ ಜ್ಞಾನಶಕ್ತಿ, ಶಿಕಾರವೇ ಇಚ್ಛಾಶಕ್ತಿ, ವಾಕಾರವೇ ಆದಿಶಕ್ತಿ, ಯಕಾರವೇ ಪರಶಕ್ತಿ, ಓಂಕಾರವೇ ಚಿಚ್ಛಕ್ತಿ, ಇಂತಿವು ಮಂತ್ರಶಕ್ತಿಸ್ವರೂಪೆಂದರಿವುದು ನೋಡಾ. ಮತ್ತೆ-ನಕಾರವೇ ಕರ್ಮಸಾದಾಖ್ಯ, ಮಃಕಾರವೇ ಕರ್ತೃಸಾದಾಖ್ಯ, ಶಿಕಾರವೇ ಮೂರ್ತಿಸಾದಾಖ್ಯ, ವಾಕಾರವೇ ಅಮೂರ್ತಿಸಾದಾಖ್ಯ; ಯಕಾರವೇ ಶಿವಸಾದಾಖ್ಯ, ಓಂಕಾರವೇ ಮಹಾಸಾದಾಖ್ಯ ನೋಡ. ಮತ್ತೆ-ನಕಾರವೇ ಪೀತವರ್ಣ, ಮಃಕಾರವೇ ನೀಲವರ್ಣ, ಶಿಕಾರವೇ ಕುಂಕುಮವರ್ಣ, ವಾಕಾರವೇ ಶ್ವೇತವರ್ಣ, ಯಕಾರವೇ ಸ್ಫಟಿಕವರ್ಣ, ಓಂಕಾರವೇ ಜ್ಯೋತಿರ್ಮಯಸ್ವರೂಪು ನೋಡಾ. ಇಂತಿವು ಮಂತ್ರಮೂರ್ತಿಯ ವರ್ಣಭೇದವೆಂದರಿವುದಯ್ಯ. ಮತ್ತೆ-ನಕಾರವೇ ಸದ್ಯೋಜಾತಮಂತ್ರಮೂರ್ತಿ. ಮಃಕಾರವೇ ವಾಮದೇವಮಂತ್ರಮೂರ್ತಿ. ಶಿಕಾರವೇ ಅಘೋರಮಂತ್ರಮೂರ್ತಿ. ವಾಕಾರವೇ ತತ್ಪುರುಷಮಂತ್ರಮೂರ್ತಿ. ಯಕಾರವೇ ಈಶಾನ್ಯಮಂತ್ರಮೂರ್ತಿ. ಓಂಕಾರವೇ ಮಹಾಮಂತ್ರಮೂರ್ತಿ. ಇಂತಿವು ಮಂತ್ರಮೂರ್ತಿಯ ವದನಭೇದವೆಂದರಿವುದು ನೋಡಾ. ಮತ್ತೆ-ನಕಾರವೇ ಸತ್ತು, ಮಃಕಾರವೇ ಚಿತ್ತು, ಶಿಕಾರವೇ ಆನಂದ ವಾಕಾರವೇ ನಿತ್ಯ, ಯಕಾರವೇ ಪರಿಪೂರ್ಣ, ಓಂಕಾರವೇ ನಿರಂಜನಸ್ವರೂಪವೆಂದರಿವುದಯ್ಯ. ಮತ್ತೆ-ನಕಾರವೇ ಆಚಾರಲಿಂಗ, ಮಃಕಾರವೇ ಗುರುಲಿಂಗ, ಶಿಕಾರವೇ ಶಿವಲಿಂಗ, ವಾಕಾರವೇ ಜಂಗಮಲಿಂಗ, ಯಕಾರವೇ ಪ್ರಸಾದಲಿಂಗ, ಓಂಕಾರವೇ ಮಹಾಲಿಂಗ ಇಂತಿವು ಷಡಕ್ಷರ ಮಂತ್ರಲಿಂಗವೆಂದರಿವುದಯ್ಯ. ಇಂತಿವು ಲಿಂಗಷಡಕ್ಷರವೆಂದು ಹೇಳಲ್ಪಟ್ಟವು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬ್ರಹ್ಮನ ಕಲ್ಪಿತವ ಕಳೆಯನಾಗಿ, ಗುರು ಲಿಂಗವ ಕೊಟ್ಟುದು ಹುಸಿ. ಆ ಲಿಂಗ ಬಂದು ತನುವನಿಂಬುಗೊಳ್ಳದಾಗಿ, ವಿಷ್ಣುವಿನ ಸ್ಥಿತಿ ಬಿಟ್ಟುದು ಹುಸಿ. ಆ ವಿಷ್ಣುವಿನ ಹಂಗಿನಲ್ಲಿ ಉಂಡುಹೋಹ ಕಾರಣ, ಜಂಗಮದ ಮಾಟ ಹುಸಿ. ಇದು ಕಾರಣ, ರುದ್ರನ ಹಂಗಿನಲ್ಲಿ ಜಗವೆಲ್ಲ ಲಯವಾಗುತ್ತಿರ್ಪ ಕಾರಣ, ಪ್ರಾಣಲಿಂಗಿಗಳೆಂಬುದು ಹುಸಿ. ಇಂತಿವು ನಿರ್ಲೇಪವಾಗಿಯಲ್ಲದೆ ಸಹಜಭರಿತನಲ್ಲ, ಇಹ ಪರಕ್ಕೆ ಸಲ್ಲ. ಸೊಲ್ಲಿಗಭೇದ್ಯ ನಿಃಕಳಂಕ ಮಲ್ಲಿಕಾರ್ಜನ ಬಲ್ಲರ ಬಲ್ಲಹ.
--------------
ಮೋಳಿಗೆ ಮಾರಯ್ಯ
ವಸ್ತುವೆಂದಡೆ ಪರಬ್ರಹ್ಮದ ನಾಮ. ಆ ವಸ್ತುವಿನಿಂದ ಆತ್ಮನ ಜನನ. ಆತ್ಮನಿಂದ ಆಕಾಶಪುಟ್ಟಿತ್ತು. ಆಕಾಶದಿಂದ ವಾಯು ಜನಿಸಿತ್ತು. ವಾಯುವಿನಿಂದ ಅಗ್ನಿ ಪುಟ್ಟಿತ್ತು; ಅಗ್ನಿಯಿಂದ ಅಪ್ಪು ಪುಟ್ಟಿತ್ತು. ಅಪ್ಪುವಿನಿಂದ ಪೃಥ್ವಿ ಪುಟ್ಟಿತ್ತು; ಇಂತಿದೆಲ್ಲವೂ ಶಿವನ ಮುಖದಿಂದ ಹುಟ್ಟಿತ್ತೆಂದರಿವುದು. ಇಂತು ಹುಟ್ಟಿದ ಪಂಚಭೂತಂಗಳೆ, ಪಂಚವಿಂಶತಿತತ್ವಯುಕ್ತವಾಗಿ ದೇಹವಾಯಿತ್ತು. ಅದು ಹೇಗೆಂದಡೆ: ಆಕಾಶದಿಂದ ಅಂತಃಕರಣಚತುಷ್ಟಯಂಗಳು ಹುಟ್ಟಿದವು. ವಾಯುವಿನಿಂದ ಪಂಚಪ್ರಾಣವಾಯುಗಳಾದುವಯ್ಯ. ಅಗ್ನಿಯಿಂದ ಬುದ್ಧೀಂದ್ರಿಯಂಗಳು ಪುಟ್ಟಿದವಯ್ಯ. ಅಪ್ಪುವಿನಿಂದ ಶಬ್ದಾದಿ ಪಂಚವಿಷಯಂಗಳು ಪುಟ್ಟಿದವಯ್ಯ. ಪೃಥ್ವಿಯಿಂದ ವಾಗಾದಿ ಕರ್ಮೇಂದ್ರಿಯಂಗಳು ಪುಟ್ಟಿದವಯ್ಯ. ಇಂತೀ ಚತುರ್ವಿಂಶತಿ ತತ್ವಯುಕ್ತವಾಗಿ, ಶರೀರ ವ್ಯಕ್ತೀಕರಿಸಿತ್ತಯ್ಯ. ಅದೆಂತೆಂದಡೆ: ಆಕಾಶ ಆಕಾಶವ ಬೆರಸಲು ಜ್ಞಾನ ಪುಟ್ಟಿತ್ತು. ಆಕಾಶ ವಾಯುವ ಬೆರಸಲು ಮನಸ್ಸು ಪುಟ್ಟಿತ್ತು. ಆಕಾಶ ಅಗ್ನಿಯ ಬೆರಸಲು ಅಹಂಕಾರ ಪುಟ್ಟಿತ್ತು. ಆಕಾಶ ಅಪ್ಪುವ ಬೆರಸಲು ಬುದ್ಧಿ ಪುಟ್ಟಿತ್ತು. ಆಕಾಶ ಪೃಥ್ವಿಯ ಬೆರಸಲು ಚಿತ್ತ ಪುಟ್ಟಿತ್ತು. ಇಂತಿವು, ಕರಣಚತುಷ್ಟಯದ ಉತ್ಪತ್ತಿಯಯ್ಯ. ವಾಯು ಆಕಾಶವ ಬೆರಸಿದಲ್ಲಿ ಸಮಾನವಾಯುವಿನ ಜನನ. ವಾಯು ವಾಯುವ ಬೆರಸಿದಲ್ಲಿ ಉದಾನವಾಯುವಿನ ಜನನ. ವಾಯು ಅಗ್ನಿಯ ಬೆರಸಿದಲ್ಲಿ ವ್ಯಾನವಾಯುವಿನ ಜನನ. ವಾಯು ಅಪ್ಪುವ ಬೆರಸಿದಲ್ಲಿ ಅಪಾನವಾಯುವಿನ ಜನನ. ವಾಯು ಪೃಥ್ವಿಯ ಬೆರಸಿದಲ್ಲಿ ಪ್ರಾಣವಾಯುವಿನ ಜನನ. ಇಂತಿವು, ವಾಯುಪಂಚಕದ ಉತ್ಪತ್ತಿಯಯ್ಯ. ಅಗ್ನಿ ಆಕಾಶವ ಬೆರಸಲು ಶ್ರೋತ್ರೇಂದ್ರಿಯದ ಜನನ. ಅಗ್ನಿ ವಾಯುವ ಬೆರಸಲು ತ್ವಗಿಂದ್ರಿಯದ ಜನನ. ಅಗ್ನಿ ಅಗ್ನಿಯ ಬೆರಸಲು ನೇತ್ರೇಂದ್ರಿಯದ ಜನನ. ಅಗ್ನಿ ಅಪ್ಪುವ ಬೆರಸಲು ಜಿಹ್ವೇಂದ್ರಿಯದ ಜನನ. ಅಗ್ನಿ ಪೃಥ್ವಿಯ ಬೆರಸಲು ಘಾಣೇಂದ್ರಿಯದ ಜನನ. ಇಂತಿವು, ಬುದ್ಧೀಂದ್ರಿಯಂಗಳುತ್ಪತ್ಯವಯ್ಯ. ಅಪ್ಪು ಆಕಾಶವ ಬೆರಸಲು ಶಬ್ದ ಪುಟ್ಟಿತ್ತು. ಅಪ್ಪು ವಾಯುವ ಬೆರಸಲು ಸ್ಪರ್ಶನ ಪುಟ್ಟಿತ್ತು. ಅಪ್ಪು ಅಗ್ನಿಯ ಬೆರಸಲು ರೂಪು ಪುಟ್ಟಿತ್ತು. ಅಪ್ಪು ಅಪ್ಪುವ ಬೆರಸಲು ರಸ ಪುಟ್ಟಿತ್ತು. ಅಪ್ಪು ಪೃಥ್ವಿಯ ಬೆರಸಲು ಗಂಧ ಪುಟ್ಟಿತ್ತು. ಇಂತಿವು, ಪಂಚವಿಷಯಂಗಳುತ್ಪತ್ಯವಯ್ಯ. ಪೃಥ್ವಿ ಆಕಾಶವ ಬೆರಸಲು ವಾಗಿಂದ್ರಿಯದ ಜನನ. ಪೃಥ್ವಿ ವಾಯುವ ಬೆರಸಲು ಪಾಣೀಂದ್ರಿಯದ ಜನನ. ಪೃಥ್ವಿ ಆಗ್ನಿಯ ಬೆರಸಲು ಗುಹ್ಯೇಂದ್ರಿಯದ ಜನನ. ಪೃಥ್ವಿ ಪೃಥ್ವಿಯ ಬೆರಸಲು ಪಾಯ್ವಿಂದ್ರಿಯದ ಜನನ. ಇಂತಿವು, ಚತುರ್ವಿಂಶತಿ ತತ್ವಂಗಳುತ್ಪತ್ತಿ. ಈ ತತ್ವಂಗಳಿಗೆ ಎಲ್ಲಕ್ಕೆಯೂ ಆಶ್ರಯವಾಗಿ, ಚೈತನ್ಯವಾಗಿ ಆತ್ಮನೊಬ್ಬನು. ಇಂತು ಇಪ್ಪತ್ತೆ ೈದುತತ್ವಂಗಳ ಭೇದವೆಂದು ಅರಿಯಲು ಯೋಗ್ಯವಯ್ಯ. ಆಕಾಶದೊಳಗಣ ಆಕಾಶ ಜ್ಞಾನ. ಆಕಾಶದೊಳಗಣ ವಾಯು ಮನಸ್ಸು. ಆಕಾಶದೊಳಗಣ ಅಗ್ನಿ ಅಹಂಕಾರ. ಆಕಾಶದೊಳಗಣ ಅಪ್ಪು ಬುದ್ಧಿ. ಆಕಾಶದೊಳಗಣ ಪೃಥ್ವಿ ಚಿತ್ತ. ಇಂತಿವು, ಆಕಾಶದ ಪಂಚೀಕೃತಿಯಯ್ಯ. ವಾಯುವಿನೊಳಗಣ ವಾಯು ಉದಾನವಾಯು. ವಾಯುವಿನೊಳಗಣ ಆಕಾಶ ಸಮಾನವಾಯು. ವಾಯುವಿನೊಳಗಣ ಅಗ್ನಿ ವ್ಯಾನವಾಯು. ವಾಯುವಿನೊಳಗಣ ಅಪ್ಪು ಅಪಾನವಾಯು. ವಾಯುವಿನೊಳಗಣ ಪೃಥ್ವಿ ಪ್ರಾಣವಾಯು. ಇಂತಿವು, ವಾಯುವಿನ ಪಂಚೀಕೃತಿಯಯ್ಯ. ಅಗ್ನಿಯೊಳಗಣ ಅಗ್ನಿ ನೇತ್ರೇಂದ್ರಿಯ. ಅಗ್ನಿಯೊಳಗಣ ಆಕಾಶ ಶ್ರೋತ್ರೇಂದ್ರಿಯ. ಅಗ್ನಿಯೊಳಗಣ ವಾಯು ತ್ವಗಿಂದ್ರಿಯ. ಅಗ್ನಿಯೊಳಗಣ ಅಪ್ಪು ಜಿಹ್ವೇಂದ್ರಿಯ. ಅಗ್ನಿಯೊಳಗಣ ಪೃಥ್ವಿ ಘ್ರಾಣೇಂದ್ರಿಯ. ಇಂತಿವು, ಅಗ್ನಿಯ ಪಂಚೀಕೃತಿಯಯ್ಯ. ಅಪ್ಪುವಿನೊಳಗಣ ಅಪ್ಪು ರಸ. ಅಪ್ಪುವಿನೊಳಗಣ ಆಕಾಶ ಶಬ್ದ. ಅಪ್ಪುವಿನೊಳಗಣ ವಾಯು ಸ್ಪರ್ಶನ. ಅಪ್ಪುವಿನೊಳಗಣ ಅಗ್ನಿ ರೂಪು. ಅಪ್ಪುವಿನೊಳಗಣ ಪೃಥ್ವಿ ಗಂಧ. ಇಂತಿವು, ಅಪ್ಪುವಿನ ಪಂಚೀಕೃತಿಯಯ್ಯ. ಪೃಥ್ವಿಯೊಳಗಣ ಪೃಥ್ವಿ ಪಾಯ್ವಿಂದ್ರಿಯ. ಪೃಥ್ವಿಯೊಳಗಣ ಆಕಾಶ ವಾಗಿಂದ್ರಿಯ. ಪೃಥ್ವಿಯೊಳಗಣ ಅಗ್ನಿ ಪಾದೇಂದ್ರಿಯ. ಪೃಥ್ವಿಯೊಳಗಣ ಅಪ್ಪು ಗುಹ್ಯೇಂದ್ರಿಯ. ಇಂತಿವು, ಪೃಥ್ವಿಯ ಪಂಚೀಕೃತಿಯಯ್ಯ. ಪಂಚಮಹಾಭೂತಂಗಳು ಪಂಚಪಂಚೀಕೃತಿಯನೆಯ್ದಿ ಪಂಚವಿಂಶತಿ ಅಂಗರೂಪಾದ ಕಾಯದ ಕೀಲನು ಸ್ವಾನುಭಾವದ ನಿಷ್ಠೆಯಿಂದರಿದು ಈ ದೇಹ ಸ್ವರೂಪವು ತಾನಲ್ಲವೆಂದು ತನ್ನ ಸ್ವರೂಪು ಪರಂಜ್ಯೋತಿಸ್ವರೂಪೆಂದು ತಿಳಿದು, ಆ ಜ್ಯೋತಿರ್ಮಯ ಲಿಂಗಕಳೆಯೊಳಗೆ ಅಂಗಕಳೆಯ ಸಂಬಂದ್ಥಿಸಿ, ಅಂಗಲಿಂಗಸಂಬಂಧ, ಪ್ರಾಣಲಿಂಗಸಂಬಂಧ ಮಾಡುವ ಕ್ರಮವಿದಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತರ್ವಾಯಕ್ಕೆ ಸಿಕ್ಕಿದಲ್ಲಿ ವೇದಾಂತಿಯಾದ. ಆಗುಚೇಗೆಯನಾಡೆಹೆನೆಂದು ಆಗಮಿಕನಾದ. ಹಿಂದುಮುಂದಣ ನಿಂದ ಹರಟೆಯ ಹೇಳಿಹೆನೆಂದು ಪುರಾಣಿಕನಾದ. ಇಂತಿವು ಪಂಚವಿಂಶತಿತತ್ವದ ಶಾಖೆಯಲ್ಲಿ ಅದ ಜಾಳಿಸುವ ವಾರ್ದಿಕ ಪರ್ಣ. ಇಂತಿವ ನೇತಿಗಳೆದು ನಿಂದುದು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ ಸ್ವಯಂಭುವಾದ.
--------------
ಶಿವಲೆಂಕ ಮಂಚಣ್ಣ
ಕುಂಭ ಘಟದಂತೆ ಕುರುಹಾಗಿ, ತುಂಬಿದ ಜಲದಂತೆ ಮನವಾಗಿ, ತಂಡುಲದಂತೆ ಚಿತ್ತಶುದ್ಧವಾಗಿ, ಮಾಡುವ ಕ್ರೀ ಅಗ್ನಿಯಂತಾಗಿ. ಇಂತಿವು ಕೂಡಿ ಘಟಿಸಿ, ಕ್ರೀಜ್ಞಾನ ಶುದ್ಧವಾಗಿ ಅರಿಯಬೇಕು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ರೂಪನರಿದು ರುಚಿಯನುಂಡು ಅವರ ನಿಹಿತಂಗಳ ಕಂಡು ಮತ್ತೆ ಲಿಂಗಕ್ಕೆ ಅರ್ಪಿಸಿ ಪ್ರಸಾದ ಮುಂತಾಗಿ ಕೊಂಡೆಹೆನೆಂಬ ವರ್ತಕಭಂಡರ ನೋಡಾ. ಕಟ್ಟಿ ಹುಟ್ಟದ ರತ್ನ, ಸುಗುಣ ಅಪ್ಪು ತುಂಬದ ಮುತ್ತು ಕಳೆ ತುಂಬದ ಬೆಳಗು, ಹೊಳಹುದೋರದ ಸೂತ್ರ ಲವಲವಿಕೆಯಿಲ್ಲದ ಚಿತ್ತ, ಇದಿರಗುಣವನರಿಯದ ಆತ್ಮ. ಇಂತಿವು ಫಲಿಸಬಲ್ಲವೆ ? ಕ್ರೀಯನರಿದು ಅರ್ಪಿಸಬೇಕು. ಅರ್ಪಿಸುವಲ್ಲಿ ದೃಷ್ಟಾಂತದ ಸಿದ್ಧಿ ಪ್ರಸಿದ್ಧವಾಗಬೇಕು. ಕಾಣದವಗೆ ತಾ ಕಂಡು ಕುರುಹಿನ ದಿಕ್ಕ ಅರುಹಿ ತೋರುವನ ತೆರನಂತೆ ತಾ ಲಕ್ಷಿಸಿದಲ್ಲಿ, ತಾ ದೃಷ್ಟಿಸಿದಲ್ಲಿ, ತಾ ಮುಟ್ಟಿದಲ್ಲಿ ಅರ್ಪಿತವಾದ ಪ್ರಸಾದಿಯ ಕಟ್ಟು. ದಹನ ಚಂಡಿಕೇಶ್ವರಲಿಂಗವು ತಾನಾದ ಚಿತ್ತದವನ ಮುಟ್ಟು.
--------------
ಪ್ರಸಾದಿ ಲೆಂಕಬಂಕಣ್ಣ
ಪೃಥ್ವಿಯೊಳಗಣ ಪೃಥ್ವಿ ಪಾಯುವಿಂದ್ರಿಯ. ಪೃಥ್ವಿಯೊಳಗಣ ಆಕಾಶ ವಾಗೀಂದ್ರಿಯ. ಪೃಥ್ವಿಯೊಳಗಣ ವಾಯು ಪಾಣೀಂದ್ರಿಯ. ಪೃಥ್ವಿಯೊಳಗಣ ಅಗ್ನಿ ಪಾದೇಂದ್ರಿಯ. ಪೃಥ್ವಿಯೊಳಗಣ ಅಪ್ಪು ಗುಹ್ಯೇಂದ್ರಿಯ. ಇಂತಿವು ಪೃಥ್ವಿಯ ಪಂಚಕೃತಿಯಯ್ಯ. ಪಂಚಮಹಾಭೂತಂಗಳು ಪಂಚೀಕೃತಿಯನ್ನೈದಿ ಶರೀರರೂಪಾಯಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->