ಅಥವಾ

ಒಟ್ಟು 55 ಕಡೆಗಳಲ್ಲಿ , 31 ವಚನಕಾರರು , 49 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವ ಇಂದ್ರಿಯಗಳ ಒಂದು ಮುಖವ ಮಾಡಿ ಸರ್ವ ಮೋಹಂಗಳಲ್ಲಿ ನಿರ್ಮೋಹಿತನಾಗಿ, ಅಂಗದಿಚ್ಫೆಯ ಮರೆದು ವ್ರತವೆಂಬ ಆಚಾರಲಿಂಗವ ಧರಿಸಬೇಕಲ್ಲದೆ ತನುವಿಗೆ ಬಂದಂತೆ ಮುಟ್ಟಿ, ಮನಕ್ಕೆ ಬಂದಂತೆ ಹರಿದು, ನಾನಿಲ್ಲಿ ಒಬ್ಬ ಶೀಲವಂತನಿದ್ದೇನೆ ಎಂದು ಕಲಹಟ್ಟಿಯಂತೆ ಕೂಗುತ್ತ ಕೊರಚುತ್ತ ಅಲ್ಲಿ ಬೊಬ್ಬಿಡುತ್ತ ಶೂಲವನೇರುವ ಕಳ್ಳನಂತೆ ಬಾಹ್ಯದಲ್ಲಿ ಬಾಯಾಲುವ, ಮನದಲ್ಲಿ ಸತ್ತೆಹೆನೆಂಬ ಸಂದೇಹದವನಂತೆ ಸಾಯದೆ, ಹೊರಗಣ ಕ್ರೀ ಶುದ್ಭವಾಗಿ, ಒಳಗಳ ಆತ್ಮ ಶುದ್ಧವಾಗಿ, ಉಭಯ ಶುದ್ಧವಾಗಿಪ್ಪುದು ಪಂಚಾಚಾರ ನಿರುತ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸರ್ವಾಂಗಭರಿತನು
--------------
ಅಕ್ಕಮ್ಮ
ಇಂದ್ರಿಯಂಗಳ ಗಮನಗೆಡದೆ ಕರಣಂಗಳ ಸೂತಕ ಕಡೆಗಾಗದೆ ಆತ್ಮನ ಕುರುಹು ಅಡಗದೆ ಬರಿದೆ ಭ್ರಮೆಗೊಂಡು ಹಿರಿಯತನವ ಹೊತ್ತರಲ್ಲ ! ಮತ್ತೆ ಪೂರ್ವ ಮೊತ್ತದ ಬರಿವಿದ್ಯೆ ಬಂಧನಕ್ಕೆರಗಿ ಸಂದಿನ ಕಿಚ್ಚಿನಲ್ಲಿ ಬೆಂದರಲ್ಲ! ಒಂದುವನರಿಯದೆ ಹಿಂದಿನ ಸರಮಾಲೆಯ ಸಂಕೋಲೆಯೊಳಗಾಗಿ ಭೋಗವನರಿವರು ಕಾಣಾ ಪಂಚಾಕ್ಷರಮೂರ್ತಿಲಿಂಗವೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು, ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ, ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ, ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ, ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ, ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ ?
--------------
ಹಾವಿನಹಾಳ ಕಲ್ಲಯ್ಯ
ಇಂದ್ರಿಯಂಗಳಲ್ಲಿ ಲಿಂಗವು ಅರ್ಪಿತವ ಸಂದ್ಥಿಸಿಕೊಂಡು ಉಂ[ಬು]ದೆಂಬ ತ್ರಿಭಂಗಿ ಗ್ರಹಿತವ ನೋಡಾ. ಇಂದ್ರಿಯಂಗಳ ಮುಖದಲ್ಲಿ ಲಿಂಗವು ಬಂದು ಉಂಬಾಗ ಇಂದ್ರಿಯವೆ ಲಿಂಗಕ್ಕೆ ಬೀಜವೆ? ಅದು ಗರಿಗೋಲಿನ ಮೊನೆಯಂತೆ, ಲಿಂಗದಿಂದ ಸರ್ವೇಂದ್ರಿಯ ನಿಶ್ಚಯ. ಇದು ಲಿಂಗವ್ಯವಧಾನಿಯ ಅಂಗ, ಸದ್ಯೋಜಾತಲಿಂಗದ ಸಂಗ.
--------------
ಅವಸರದ ರೇಕಣ್ಣ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಾಮದ ಕಳವಳದಲ್ಲಿ ಕಂಗೆಡುವನಲ್ಲ ಶರಣ. ಜೀವನುಪಾದ್ಥಿಕೆಯ ಹೊದ್ದವನಲ್ಲ ಶರಣ. ಭಾವದ ಭ್ರಮೆಯಲ್ಲಿ ಸುಳಿವನಲ್ಲ ಶರಣ. ಮನದ ಮರವೆಯಲ್ಲಿ ಮಗ್ನನಲ್ಲ ಶರಣ. ಕರಣಂಗಳ ಕತ್ತಲೆಯಲ್ಲಿ ಸುತ್ತಿ ಬೀಳುವನಲ್ಲ ಶರಣ. ಇಂದ್ರಿಯಂಗಳ ವಿಕಾರದಲ್ಲಿ ಹರಿದಾಡುವನಲ್ಲ ಶರಣ. ಪರತರಲಿಂಗದ ಬೆಳಗಿನೊಳಗೆ ಬೆರೆದು ತೆರಹಿಲ್ಲದೆ ಬೆಳಗುವ ಪರಮಗಂಬ್ಥೀರ ಶರಣನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇಂದ್ರಿಯಂಗಳ ಕೊಂದೆಹೆನೆಂದಡೆ, ಅವು ಕಂದರ್ಪನ ಹಂಗು. ಕಂದರ್ಪನ ಕೊಂದೆಹೆನೆಂದಡೆ, ಅವು ಕಂಗಳ ಲಾಭ. ಕಂಗಳು ಮುಚ್ಚಿಯಲ್ಲದೆ ಲಿಂಗವ ಕಾಣಬಾರದು. ಅದು ನಿರಂಗಂಗಲ್ಲದೆ, ಜಗದ ಹಂಗಿನವರಿಗಿಲ್ಲಾ ಎಂದೆ, ಗವರೇಶ್ವರಾ.
--------------
ಮೇದರ ಕೇತಯ್ಯ
ಸಕಲಜ್ಞಾನಸಂಪನ್ನ ಕಲೆಯನರಿತೆನೆಂಬ ಅರುಹಿರಿಯರು ಹೇಳಿರಣ್ಣಾ. ಸಕಲ ಅರ್ಪಿತದಲ್ಲಿ ಲಿಂಗಮುಖವಾಗಿ ಇರಬೇಕೆಂಬ ಸಂದೇಹಿಗಳು ಹೇಳಿರಣ್ಣಾ. ಇಂದ್ರಿಯಂಗಳ ಮುಖದಿಂದ ಲಿಂಗವನರಿಯಬೇಕೋ? ಲಿಂಗದ ಮುಖದಿಂದ ಇಂದ್ರಿಯಂಗಳನರಿಯಬೇಕೊ? ಒಂದ ಬಿಟ್ಟು ಒಂದನರಿತಲ್ಲಿ ಹಿಂಗಬಾರದ ತೊಡಕು. ಉಭಯದ ಸಂದೇಹ ನಿಂದಲ್ಲಿ ಸದಾಶಿವಮೂರ್ತಿಲಿಂಗವನರಿತುದು.
--------------
ಅರಿವಿನ ಮಾರಿತಂದೆ
ಹೊರನಾಳ ಎಂಟುಕೋಟಿ, ಒಳನಾಳ ನೂರೆಂಟು. ಹೊರದ್ವಾರ ಒಂಬತ್ತು, ಒಳದ್ವಾರ ಸರ್ವಾಂಗಮಯ. ಇಂತೀ ಪಂಚತತ್ವ, ಅಷ್ಟಗುಣಂಗಳು ಕೂಡಿ, ಘಟ್ಟಿಗೊಂಡ ತನು ಶುಕ್ಲ ಶೋಣಿತ ಮಜ್ಜೆ ಮಾಂಸ ಎಲುವು ಸರ ಚರ್ಮ ರೋಮ. ಇಂತೀ ಅಷ್ಟಗುಣಂಗಳ ಕಷ್ಟೋತ್ತರದಲ್ಲಿ ಸಿಕ್ಕಿದ ಆತ್ಮಂಗೆ, ಇಂದ್ರಿಯಂಗಳ ರೋಗವಿಡಿದು ಬಂಧ ಮೋಕ್ಷ ಕರ್ಮಂಗಳೆಂಬ ಶೀತ ಜ್ವರ ತಾಪಂಗಳಲ್ಲಿ ವ್ಯವಹರಿಸುವ ಆತ್ಮಂಗೆ, ನಾನೊಂದು ನಿಹಿತದ ಮದ್ದ ಕಂಡೆ. ಅದು ಅರೆವಡೆ ಅಸಾದ್ಯ, ಸುಮ್ಮನೆ ಮೆಲುವಡೆ ಸವೆಯದು. ದೃಷ್ಟಿ ನಟ್ಟು ಮುಚ್ಚಿರಲಿಕ್ಕಾಗಿ ರೋಗರುಜೆ ಬಚ್ಚಬಯಲು, ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನರಿಯಲಾಗಿ.
--------------
ವೈದ್ಯ ಸಂಗಣ್ಣ
ಪ್ರಸಾದಿಯಾದಾತ ಪ್ರಳಯಕ್ಕೊಳಗಾಗ, ಇಂದ್ರಿಯಗಳ ಹರಿಯೀಯ, ಬಂದುದನ್ಕಗಳೆಯ - ಅದು ಲಿಂಗಮುಖದಿಂ ಬಂದುದಾಗಿ, ಆತನ ಅಂಗ ಸರ್ವಾಂಗಲಿಂಗಾಂಗ; ಆತನ ನಡೆ-ನುಡಿ ಚೈತನ್ಯ ಸಾಕ್ಷಾತ್ ಅಯ್ಯನ ಸದ್ಭಾವ. ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಡಿದ ನಿತ್ಯಪ್ರಸಾದಿಯ ಪರಿಯಿಂತುಂಟು.
--------------
ಸಿದ್ಧರಾಮೇಶ್ವರ
ಹೊನ್ನ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೊನ್ನಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಹೆಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೆಣ್ಣಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಮಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಮಣ್ಣಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಅಂಗವ ಬಿಟ್ಟು ಲಿಂಗವನೊಲಿಸಬೇಕೆಂಬರು, ಅಂಗಕ್ಕೆಯೂ ಲಿಂಗಕ್ಕೆಯೂ ವಿರುದ್ಧವೆ ? ಇಂದ್ರಿಯಂಗಳ ಬಿಟ್ಟು ಲಿಂಗವನೊಲಿಸಬೇಕೆಂಬರು, ಇಂದ್ರಿಯಂಗಳಿಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಜಗವ ಬಿಟ್ಟು ಲಿಂಗವನೊಲಿಸಬೇಕೆಂಬರು, ಜಗಕ್ಕೆಯೂ ಲಿಂಗಕ್ಕೆಯೂ ವಿರುದ್ಧವೆ ? ಇದು ಕಾರಣ, ಪರಂಜ್ಯೋತಿ ಪರಮಕರುಣಿ ಪರಮಶಾಂತನೆಂಬ ಲಿಂಗವು ಕೋಪದ ಮುನಿಸನರಿದಡೆ ಕಾಣಬಹುದು, ಮರೆದಡೆ ಕಾಣಬಾರದು. ಅರಿವಿಂದ ಕಂಡೊದಗಿದ ಸುಖವು ಮಸಣಯ್ಯಪ್ರಿಯ ಗಜೇಶ್ವರಾ
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ಇಂದ್ರಿಯಂಗಳಿಗೆ ಪ್ರೇಮದಿಂದಾಡಿ ನುಡಿದು, ಅವರಿಚ್ಚೆಯ ಬಳಿಸಲುವ ಇಚ್ಚೈಕಪುರುಷರು ಅನೇಕರು. ಆ ಇಂದ್ರಿಯಂಗಳ ನಂದಿಸಿ, ಲಿಂಗೇಂದ್ರಿಯಂಗಳ ಮಾಡಿ, ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಪ್ರತಿಷೆ*ಯ ಮಾಡಿ, ಪಂಚಪ್ರೇಮದಿಂದ ನುಡಿದು, ಶಿವಜ್ಞಾನಪಥವ ಹತ್ತಿಸುವ ಪುರುಷರದೇ ಮಾರ್ಗ. ಅವರ ಕಂಡಡೆ ನೀನೆಂಬೆನು ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕಾಯಗುಣದಲ್ಲಿದ್ದು ಕರಣಂಗಳಂತಾಡದಿದ್ದಡೆ, ಕಾಯದ ಸಂಗವೇ ಲೇಸು, ಇಂದ್ರಿಯಂಗಳ ಸಂಸರ್ಗದಲ್ಲಿದ್ದು ಮುಟ್ಟುವ ಸಂಗವ ಬಲ್ಲಡೆ, ಇಂದ್ರಿಯಂಗಳ ಸಂಗವೇ ಲೇಸು. ಅವಗುಣದಲ್ಲಿದ್ದು ಅರತು, ತನ್ನಯ ಸಾವರಿತಡೆ, ಸಾವಯವ ಲೇಸು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಕೂಡಿ ಕೂಟವಾದ ಮತ್ತೆ.
--------------
ಸಗರದ ಬೊಮ್ಮಣ್ಣ
ಕೋಲೊಂದರಲ್ಲಿ ಹಲವು ಕುಲದ ಗೋವುಗಳ ಚಲಿಸದೆ ನಿಲಿಸುವಂತೆ ಏಕಚಿತ್ತನಾಗಿ ಸರ್ವವಿಕಾರಂಗಳ ಕಟ್ಟುವಡೆದು, ಇಂದ್ರಿಯಂಗಳ ಇಚ್ಛೆಯಲ್ಲಿ ತ್ರಿವಿಧವ ಹಿಡಿದಿರುವರ ಸಂದಿಯಲ್ಲಿ ನುಸುಳದೆ ವಸ್ತುವಿನ ಅಂಗದಲ್ಲಿಯೆ ತನ್ನಂಗೆ ತಲ್ಲೀಯವಾಗಿಪ್ಪುದೆ ಮಹಾ ನಿಜದ ನೆಲೆ. ಗೋಪತಿನಾಥ ವಿಶ್ವೇಶ್ವರಲಿಂಗವನರಿವುದಕ್ಕೆ ಇದೆ ಬಟ್ಟೆ.
--------------
ತುರುಗಾಹಿ ರಾಮಣ್ಣ
ಅರಿವಿಂಗೂ ಮರವೆಯ ದೆಸೆಯಲ್ಲಿ ಓಲಾಡುವ ಇಂದ್ರಿಯಂಗಳ ಸಮೂಹ. ಈ ಉಭಯವೂ ಕೂಡಿ, ಮಹವೊಡಗೂಡಿದಲ್ಲಿ ಭರಿತಾರ್ಪಣ. ಅರಿವುಳ್ಳವನೆಂದು, ನಿಬ್ಬೆರಗು ಕರಿಗೊಂಡವನೆಂದು, ಸರ್ವಸಂಗಪರಿತ್ಯಾಗಿಯೆಂದು ತಾನರಿಯದೆ, ಉಳಿದರ ಕೈಯಿಂದ, ಪರಾಧೀನರಿಗೊರೆಯದೆ, ಅಮೃತ ಸುಧೆಯಂತೆ, ಪರಿಪೂರ್ಣ ಕಳೆದಂತೆ, ಅರಿದರಿಯದಂತಿದ್ದುದು ಭರಿತಾರ್ಪಣ. ಹೀಂಗಲ್ಲದೆ ಅಜಯಾಗವ ಮಾಡುವ ವಿಪ್ರನ ಕರ್ಮದಂತೆ ನಾನಲ್ಲ ನೇಣು ಕೊಂದಿತ್ತೆಂದು ದಾಯಗಾರಿಕೆಯಲ್ಲಿ ಹೋಹ ದರ್ಶನ ಢಾಳಕವಂತಂಗೆ, ತನ್ನ ಕಾಲ ವೇಳೆಗೆ ತಕ್ಕಹಾಗೆ ಭಕ್ತಿಯ ಮರೆದು, ಸತ್ಯವ ತೊರೆದ ದುರ್ಮತ್ತಂಗೆ ಭರಿತಾರ್ಪಣದ ಕಟ್ಟುಂಟೆ ? ಇಂತೀ ಭೇದಂಗಳ ಯುಕ್ತಿಯಲ್ಲಿ ಸತ್ತು ಚಿತ್ತು ಆನಂದವೆಂಬ ಗೊತ್ತ ಮುಟ್ಟದೆ, ಮನ ಘನದಲ್ಲಿ ನಿಂದು ಉಭಯದೆಡೆಗೆಟ್ಟುದು ಭರಿತಾರ್ಪಣ. ಈ ಗುಣ ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಇನ್ನಷ್ಟು ... -->