ಅಥವಾ

ಒಟ್ಟು 101 ಕಡೆಗಳಲ್ಲಿ , 28 ವಚನಕಾರರು , 97 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಟವನರಿಯದೆ ಕೋಟಲೆಗೊಂಡಿತ್ತು ಲೋಕವೆಲ್ಲ. ಹಾದಿಯೆರಡರಲ್ಲಿ ನಡೆವ ಕುಂಟ ಕುರುಡರು ತಂಟಕರಾಗಿ ಹೋಗಿಬರುವರು. ಸಾಧಕ ಸಂದಣಿಗಳೆಲ್ಲ ಮೇದಿನಿಯೊಳುಳಿದರು. ಹಿರಿಯ ಕಿರಿಯರೆನಿಸುವರೆಲ್ಲ ಬಲೆಯೊಳು ಸಿಲುಕಿದರು. ಉಳಿದವರಂತಿರಲಿ, ಇದನರಿದು ನಾನು ಮಾಟವ ಮರೆದು ಕೂಟವ ಕಂಡು ಕಾಣದೆ ಸಮರಸಾನಂದದೊಳಿರ್ದೆನು ಗುರುನಿರಂಜನ ಚನ್ನಬಸವಲಿಂಗದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ವಂಚಿಸುವ ಸತಿ ಸುತ ಬಂಧು ಮೊದಲಾದ ಲೋಕವ ನಂಬಿ, ನಿರ್ವಂಚಕರಪ್ಪ ಗುರು ಲಿಂಗ ಜಂಗಮರ ವಂಚಿಸಿ ನರಕಕ್ಕಿಳಿವರನೇನೆಂಬೆನಯ್ಯಾ ? ಅಕಟಕಟಾ, ಈ ಹೀಂಗೆ ಶಿವಾಚಾರ ? ಈ ಹೀಂಗೆ ಭೃತ್ಯಾಚಾರ ? ಭಕ್ತಿ ಮುಕ್ತಿಯನರಿಯದೆ ಹೋದರು. ತನು ಮನ ಧನ ಕೆಟ್ಟುಹೋಹುದೆಂಬ ಯುಕ್ತಿಯನರಿಯಿರಿ. ಇದನರಿದು, ವಂಚಿಸುವವರನೆ ವಂಚಿಸಿ ನಿರ್ವಂಚಕರಾಗಿ ಗುರು ಲಿಂಗ ಜಂಗಮಕ್ಕೆ ದಾಸೋಹವ ಮಾಡಲು ತನು ಕೆಡದು, ಮನ ಕೆಡದು, ಧನ ಕೆಡದು. ಮುಕ್ತಿಯುಂಟು ಭಕ್ತಿಯುಂಟು, ಇದು ಸತ್ಯ ಶಿವ ಬಲ್ಲ, ಶಿವನಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಭವಿವಿರಹಿತ ಭಕ್ತನೆಂದೆಂಬರು, ಭವಿವಿರಹಿತ ಭಕ್ತನಾದ ಪರಿಯೆಂತೋ? ಭವಿಪಾಕಂ ನಿವೇದ್ಯಂ ಸ್ಯಾತ್ ಬಂಧನಂ ಭವಿಸಂಗಿನಾಂ ಸರ್ವಲೋಕಸ್ತು ಉಚ್ಛಿಷ್ಟಂ ಸಂಸಾರೋ ಹಿ ತಟಾಕವತ್ ಇದನರಿದು ಊರೆಲ್ಲಾ ಒಂದೇ ತಳಿಗೆಯಲುಂಡು ಬೇರೆ ಬೇರೆ ಕೈತೊಳೆದಂತೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಉದಯ, ಮಧ್ಯಾಹ್ನ, ಅಸ್ತಮಯ, ಕತ್ತಲೆ ಬೆಳಗು, ದಿನ ವಾರ ಲಗ್ನತಿಥಿ ಮಾಸ ಸಂವತ್ಸರ ಹೋಗುತ್ತ ಬರುತ್ತಲಿವೆ. ಇವ ನೋಡಿದವರೆಲ್ಲ ಇದರೊಳಗೆ ಹೋಗುತ್ತ ಬರುತ್ತ ಇದ್ದಾರೆ. ಜಗಕ್ಕೆ ಇವೀಗ ಇಷ್ಟವಾಗಿಪ್ಪವು. ಎನ್ನ ದೇವಂಗೆ ಇವೊಂದೂ ಅಲ್ಲ. ದಿನಕಾಲ ಯುಗಜುಗ ಪ್ರಳಯಕ್ಕೆ ಹೊರಗಾದ ಆ ದೇವನ, ಅಂಗವಿಸಿ ಮುಟ್ಟಿ ಹಿಡಿದ ಕಾರಣ, ಎಮ್ಮ ಶರಣರು ಪ್ರಳಯಕ್ಕೆ ಹೊರಗಾದರು. ಇದನರಿದು, ಅಂತಪ್ಪ ಶರಣರ ಪಾದವ ನಂಬಿ, ಕೆಟ್ಟು ಬಟ್ಟಬಯಲಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಶೀಲವಂತರು, ಶೀಲವಂತರು ಎಂದೇನೊ ? ಶೀಲವಂತಿಕೆಯನಾರು ಬಲ್ಲರು? ಶೀಲವಾದರೆ ಶಿವನೊಳು ಬೆರೆವುದೇ ಶೀಲ. ಶೀಲವಾದರೆ ಗುರುಲಿಂಗಜಂಗಮವ ತನ್ನೊಳಗರಿವುದೇ ಶೀಲ. ಅದಕ್ಕೆ ಮೀರಿದ ಶೀಲವಾದರೆ, ಹಸಿವು ತೃಷೆ ನಿದ್ರೆ ವಿಷಯವ ಕೆಡಿಸುವುದೇ ಶೀಲ. ಅದಕ್ಕೆ ತುರಿಯಾತೀತ ಶೀಲವಾದರೆ, ಬಾಲನಾಗಿ ತನ್ನ ಲೀಲಾವಿನೋದವ ಭೂಮಿಯ ಮೇಲೆ ನಟಿಸುವುದೇ ಶೀಲ. ಇದನರಿಯದೆ ಶೀಲಶೀಲವೆಂದು ಮನೆಮನೆಗೆ ಶೀಲವಲ್ಲದೆ, ತನ್ನ ತನಗೆ ಕಾಯಕೃತ್ಯವಲ್ಲದೆ, ಇದನರಿದು ಮೋಹ ಘನವನೆ ಮರೆದು, ಮನವನೆ ಬಳಲಿಸಿ, ಘನವ ಮಾಡಿ, ತನುವ ಹೊರೆದೆನೆಂಬ ಬಿನುಗರ ನುಡಿಯ ಮೆಚ್ಚುವನೆ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ ?
--------------
ಹಡಪದ ಅಪ್ಪಣ್ಣ
ಕರ್ಮಿಗಳು ಶಿವಪಥಕ್ಕೆ ಬಪ್ಪಾಗಳವರ ಕರ್ಮ ಬೆಂಬತ್ತಿ ಕಾಡುವದಯ್ಯಾ. ಲಿಂಗಾರಾಧನೆಯ ಮಾಡಲೀಯದು. ಸಂದೇಹವನೆ ತೋರಿಸಿ ಕೆಡಿಸುವದಯ್ಯಾ. ಏಕೆ? ಅವರು ಮಾಡಿದ ಕರ್ಮವನುಣಬೇಕಾಗಿ! ಇದನರಿದು ನಿಮ್ಮ ನೆರೆನಂಬಿ ಪೂಜಿಸೆ ಹರಿವುದು ಕರ್ಮ, ಕಪಿಲಸಿದ್ಧಮಲ್ಲಿಕಾರ್ಜುನ, ದೇವರ ದೇವಾ.
--------------
ಸಿದ್ಧರಾಮೇಶ್ವರ
ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪಂಚವರ್ಣದಬಿಂದು ಪ್ರಪಂಚವನಳಿದುಳಿದಿರಲು, ಸಂಚರಿಸುವಡೆ ಆವೆಡೆಯೂ ಇಲ್ಲ. ನಿಂದ ಚಿತ್ತಿನ ಪ್ರಭೆ ಅಂಗವನು ನೆರೆ ನುಂಗೆ, ಹಿಂದು ಮುಂದು ಎಡಬಲನೆಂಬುದಿಲ್ಲ ! ಅಡಿಯಾಕಾಶವೆಂಬುದಿಲ್ಲ ಕೆಳಗೆ ನಿಲಲು, ಆಧಾರ ಮೊದಲಿಂಗಿಲ್ಲ ಕಡೆಗೆ ಸಾರುವೆನೆನಲು ಊಧ್ರ್ವವಿಲ್ಲ. ನಡುವೆ ನಾನಿದ್ದಿಹೆನೆಂದಡೆ, ತನ್ನೊಡಲೊಳಗೆ ಒಡೆದು ಮೂಡಿತ್ತು ತನ್ನಂತೆ ಬಯಲು ! ಈ ಬೆಡಗು ಬಿನ್ನಾಣವ ಬಡವರರಿವರೆ ? ಇದನರಿದು ನುಡಿದು ತೋರಿದನು ಗುಹೇಶ್ವರನ ಶರಣ ಚನ್ನಬಸವಣ್ಣನು.
--------------
ಅಲ್ಲಮಪ್ರಭುದೇವರು
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ, ಸಂಸಾರದೊಳಗಿರ್ದ ಭಕ್ತನು, ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ '' ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ ''_ ಇಂತೆಂಬ ಶಿವನವಾಕ್ಯವನರಿಯದೆ, ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ, ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?
--------------
ಚನ್ನಬಸವಣ್ಣ
ಗಾಳಿ ಬೀಸುವ ವೇಳೆಯಲ್ಲಿ ತೂರಿಕೊಳ್ಳಿರೋ ಬೇಗ ಬೇಗ ! ಗಾಳಿ ನಿಮ್ಮಿಚ್ಛೆಯಲ್ಲ ಕೇಳಿರೋ ಜಾಳಮನುಜರಿರಾ. ಅಂಗಕ್ಕೆ ಅಳಿವು ಬರುವುದು ದೂರವಿಲ್ಲ ನೋಡಿರೋ. ``ತ್ವರಿತಂ ಜೀವಿತಂ ಯಾತಿ ತ್ವರಿತಂ ಯಾತಿ ಯೌವನಮ್ | ತ್ವರಿತಂ ಯಾತಿ ಪ್ರಖ್ಯಾತಿಃ ತಸ್ಮಾತ್ಪೂಜಯ ಶಂಕರಮ್ ||'' ಇದನರಿದು ಬೇಗ ಬೇಗ ಲಿಂಗವ ಪೂಜಿಸಿರೊ ! ಬೇಗ ಬೇಗ ಜಂಗಮವನೊಲಿಸಿರೋ ! ಅರುವುಳ್ಳ ಕಾಲಕ್ಕೆ ಬೇಗ ಬೇಗ ನಮ್ಮ ಅಖಂಡೇಶ್ವರಲಿಂಗವ ಕೂಡಿರೋ.
--------------
ಷಣ್ಮುಖಸ್ವಾಮಿ
ಲಿಂಗಕ್ಕೆ ಬೇರೆ ಭಾಜನ ತಮಗೆ ಬೇರೆ ಭಾಜನವೆಂದೆಂಬರು ನಾನಿದನರಿಯೆನಯ್ಯಾ. ಅಂಗದ ಮೇಲೆ ಪ್ರಾಣ[ಲಿಂಗ]ಪ್ರತಿಷ್ಠೆಯಾದ ಬಳಿಕ ಲಿಂಗಕ್ಕೆಯೂ ತಮಗೆಯೂ ಏಕಭಾಜನವಿಲ್ಲದನ್ನಕ್ಕ ಅಂಗದ ಕಳೆಯಲ್ಲಿ ಲಿಂಗವ ಧರಿಸಿಕೊಳಬಹುದೆ ? ಇದನರಿದು ಏಕಭಾಜನವಾಗದಿದ್ದಡಂತದು ದೋಷ ಅರಿಯದೆ ಏಕಭಾಜನವಾದಡಿಂತು ದೋಷ. ಈ ಕುಳಸ್ಥಳದ ಭೇದವ ಭೇದಿಸಬಲ್ಲ ಕೂಡಲಚೆನ್ನಸಂಗಾ ನಿಮ್ಮ ಶರಣ
--------------
ಚನ್ನಬಸವಣ್ಣ
ಮೊದಲೆನ್ನ ಕೈವಶವಾಗಿರ್ದ ಪುರುಷನ ಕಣ್ಣಸನ್ನೆಯಲ್ಲಿರಿಸಿಕೊಂಡಳೆಮ್ಮಕ್ಕ ; ಇದು ನೀತಿಯೇ ? ಕಾಮಿಸಿ ಕಲ್ಪಿಸಿ ಒಲಿಸಿಕೊಂಡವಳಕ್ಕ ; ಇದು ನೀತಿಯೇ ? ಒಳಗೊಳಗೆ ಮಾತನಾಡಿ ಮೋಹಿಸಿಕೊಂಡವಳಕ್ಕ ; ಇದು ನೀತಿಯೇ ? ಇದನರಿದು ಮುನಿಸನುಳಿಸಿ ಹಿರಿಯಕ್ಕನೊಲುಮೆಯೊಳು ಪರಸ್ತ್ರೀಯಾಗಿ ಪರಿಪರಿಯಿಂದೆ ಅವರ ಮೇಲೆ ನೆರೆದರೆ ಮರುಳುಗೊಂಡೆನ್ನೊಳಗಾದರು, ಗುರುನಿರಂಜನ ಚನ್ನಬಸವಲಿಂಗಕ್ಕೆ ಪರಿಣಾಮವಾಯಿತ್ತು.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು, ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ, ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು, ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು, ಕೇಳೈ ಮೀಮಾಂಸಕಾ, ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ, ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು, ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ, ಆತನೆ ಮಾಹೇಶ್ವರ, ಆತನೆ ಪ್ರಸಾದಿ, ಆತನೆ ಪ್ರಾಣಲಿಂಗಿ, ಆತನೆ ಶರಣ, ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು, ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಮಾತನು ಮನೆಯ ಮಾಡಿ ಪತಿ (ಸತಿರಿ) ಯ ನೆಲೆಗೊಳಿಸಿ ಭ್ರಾಂತಿನ ಕದವನಿಕ್ಕಿ ಸೂತಕವಳಿದ ಸುಯಿದಾನಿ, ಇದನರಿದು ಮರೆದವರ ಕೂಡಲಚೆನ್ನಸಂಗನೆಂಬೆ
--------------
ಚನ್ನಬಸವಣ್ಣ
ಇನ್ನಷ್ಟು ... -->