ಅಥವಾ

ಒಟ್ಟು 52 ಕಡೆಗಳಲ್ಲಿ , 25 ವಚನಕಾರರು , 50 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೃಥ್ವಿಯ ಮರೆಯ ಸುವರ್ಣದಂತೆ ಚಿಪ್ಪಿನ ಮರೆಯ ಮುತ್ತಿನಂತೆ ಅಪ್ಪುವಿನ ಮರೆಯ ಅಗ್ನಿಯಂತೆ ಒಪ್ಪದೊಳಗಣ ಮಹಾಪ್ರಕಾಶದಂತೆಯಿಪ್ಪ ಘನಲಿಂಗವನರಿಯೆ. ರುದ್ರ ಬ್ರಹ್ಮ ವಿಷ್ಣ್ವಾವದಿಗಳು ತಮ್ಮ ಆತ್ಮಜ್ಞಾನ [ನಿಶ್ಚಿಂ]ತೆಯೆಂಬ ನಿಜವ ನೀಗಾಡಿಕೊಂಡರು. ಇದನರಿಯದೆ ಆಚರಿಸುವರು, ಆರಿಗೂ ಅಳವಲ್ಲವಯ್ಯಾ. ಇಷ್ಟಪ್ರಾಣಭಾವಸಂಬಂದ್ಥಿಗಳಪ್ಪ ಸದ್ಭಾವಾಚಾರವೆಡೆಗೊಂಡ ಶರಣಂಗಲ್ಲದೆ ಮಿಕ್ಕಿನ ದುರಾಚಾರಿಗಳಿಗೆ ಸಾಧ್ಯವಲ್ಲ, ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು.
--------------
ಬಾಚಿಕಾಯಕದ ಬಸವಣ್ಣ
ಶೀಲವಂತರು, ಶೀಲವಂತರು ಎಂದೇನೊ ? ಶೀಲವಂತಿಕೆಯನಾರು ಬಲ್ಲರು? ಶೀಲವಾದರೆ ಶಿವನೊಳು ಬೆರೆವುದೇ ಶೀಲ. ಶೀಲವಾದರೆ ಗುರುಲಿಂಗಜಂಗಮವ ತನ್ನೊಳಗರಿವುದೇ ಶೀಲ. ಅದಕ್ಕೆ ಮೀರಿದ ಶೀಲವಾದರೆ, ಹಸಿವು ತೃಷೆ ನಿದ್ರೆ ವಿಷಯವ ಕೆಡಿಸುವುದೇ ಶೀಲ. ಅದಕ್ಕೆ ತುರಿಯಾತೀತ ಶೀಲವಾದರೆ, ಬಾಲನಾಗಿ ತನ್ನ ಲೀಲಾವಿನೋದವ ಭೂಮಿಯ ಮೇಲೆ ನಟಿಸುವುದೇ ಶೀಲ. ಇದನರಿಯದೆ ಶೀಲಶೀಲವೆಂದು ಮನೆಮನೆಗೆ ಶೀಲವಲ್ಲದೆ, ತನ್ನ ತನಗೆ ಕಾಯಕೃತ್ಯವಲ್ಲದೆ, ಇದನರಿದು ಮೋಹ ಘನವನೆ ಮರೆದು, ಮನವನೆ ಬಳಲಿಸಿ, ಘನವ ಮಾಡಿ, ತನುವ ಹೊರೆದೆನೆಂಬ ಬಿನುಗರ ನುಡಿಯ ಮೆಚ್ಚುವನೆ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ ?
--------------
ಹಡಪದ ಅಪ್ಪಣ್ಣ
ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೆ ಒಳಗಾದ ಮನುಜರೆಲ್ಲ ತಾವು ಪ್ರಸಾದಿ, ಪ್ರಾಣಲಿಂಗಿಗಳೆಂದು ನುಡಿದುಕೊಂಬಿರಿ. ಪ್ರಸಾದಿಸ್ಥಲ ಎಲ್ಲರಿಗೆಂತಾದುದಣ್ಣಾ ? ಪ್ರಸಾದಿಸ್ಥಲ ಪರಮಸುಖ ಪರಿಣಾಮ. ಮನ ಮೇರೆದಪ್ಪಿ ತನುವನೆ ಪ್ರಸಾದವ ಮಾಡುವದೀಗ ಪ್ರಸಾದ. ಇದನರಿಯದೆ ಸದಮದವಾಗಿ ಮುಡಿ ನೋಡಿ ಒಡಲ ಕೆಡಿಸಿಕೊಂಬ ಜಡಮನುಜರ ನುಡಿಯ ಕೇಳಲಾಗದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಉಂಬೆಡೆಯಲ್ಲಿ ಭರಿತಾರ್ಪಣವೆಂದು ಮಿಕ್ಕಾದ ವಿಷಯೇಂದ್ರಿಯಂಗಳಲ್ಲಿ ಭರಿತಾರ್ಪಣದ ಸಂದನಳಿದು ಅರ್ಪಿಸಬಲ್ಲಡೆ, ಆ ಗುಣ ಉಭಯಭರಿತಾರ್ಪಣಭೇದ. ಇದನರಿಯದೆ ಲಿಂಗಕ್ಕೆ ಸಂದಲ್ಲದೆ, ತಾನೊಂದು ದ್ರವ್ಯವ ಮುಟ್ಟೆನೆಂಬ ಸಂದೇಹದ ಸಂಕಲ್ಪವಲ್ಲದೆ, ಭರಿತಾರ್ಪಣಾಂಗಿಯ ಲಿಂಗಾಂಗಿಯ ಮುಟ್ಟಲ್ಲ. ಭರಿತಾರ್ಪಣವಾವುದೆಂದಡೆ : ತಾ ಕಂಡುದ ಮುಟ್ಟದೆ, ತಾ ಮುಟ್ಟಿದುದನರ್ಪಿಸದೆ, ತಾ ಕಾಣದುದ ಮುನ್ನವೆ, ತಾ ಕಂಡುದ ಮುಟ್ಟದ ಮುನ್ನವೆ ಅರ್ಪಿತವಾದುದ ದೃಷ್ಟಾಂತವನರಿದು, ಭರಿತಾರ್ಪಣವೆಂಬ ಪರಿಪೂರ್ಣತ್ವವಂ ಕಂಡು, ಅಂಗಸಹಿತವಾಗಿ ಮುಟ್ಟದೆ, ಮನಸಹಿತವಾಗಿ ನೆನೆಯದೆ, ಇಂದ್ರಿಯಂಗಳು ಸಹಿತವಾಗಿ ಒಂದನೂ ಅನುಭವಿಸದೆ ಲಿಂಗವೆ ಅಂಗವಾಗಿ, ಅಂಗವೆ ಲಿಂಗವಾಗಿ ಅಂದಂದಿಗೆ ಕಾಯ ಹಿಂಗಬೇಕೆಂಬುದನರಿದಾಗವೆ ಭರಿತಾರ್ಪಣ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗದ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ತದ್ದುತತುರಿ ಬಾವು ಬಗದಳ ಶೀತ ವಾತ ಬಹುಜ್ವರ ಹೊಟ್ಟೆಬೇನೆ ಕೆಟ್ಟ ಹುಣ್ಣು ಮೈಕುಷ್ಠ ಮೊದಲಾದ ಮುನ್ನೂರರುವತ್ತು ವ್ಯಾದ್ಥಿಗಳ, ಶಿವನು ಹರಿಯಬಿಟ್ಟು ನೋಡುವ. ಇವೆಲ್ಲ ಶಿವನ ಕರುಣವಾದಲ್ಲದೆ ಹೋಗವು. ಇದನರಿಯದೆ, ನಾರು ಬೇರ ನಚ್ಚಿದ ಅವಿದ್ಯ ಸಾಧಕರೆಲ್ಲ ಹತವಾಗಿ ಹೋದರಂದೆ. ಇಂತಿದ ವಿಚಾರಿಸಿ ತಿಳಿಯದೆ, ಲೋಕದ ಬುದ್ಧಿಗೇಡಿ ಮನುಜರು, ಸಜ್ಜನಶುದ್ಧಶಿವಾಚಾರಸಂಪನ್ನರಾದ ಜಂಗಮಲಿಂಗದ ಮಾತ ಕೇಳದೆ, ಅದ್ದನ ಜೋಳ, ಅರಪಾವು ಎಣ್ಣೆಯ ಕೊಂಡು, ನೋಟಕಾರ್ತಿಯ ಮನೆಗೆ ಹೋಗಿ, ಅವಳು ಹೇಳಿದ ತಾತುಭೂತದ ಕೋಟಲೆಯ ಕೈಕೊಂಡು ಬಂದು, ಅವಕ್ಕೂಟವನಟ್ಟಿಕ್ಕಿ,. ಮಿಕ್ಕಿದ ಕೂಳ ತನ್ನಿಷ್ಟಲಿಂಗಕ್ಕೆ ತೋರಿ ತಿಂಬ, ಲಿಂಗದ್ರೋಹಿಗಳಿಗೆ ಕುಂಬ್ಥೀಪಾತಕ ನಾಯಕನರಕ, ತಪ್ಪದೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಲೋಕಹಿತಾರ್ಥವಾಗಿ, ಪ್ರಾಣಿಗಳೆಲ್ಲ ಕೆಟ್ಟಹರೆಂದು ಶರಣ ಲಿಂಗವಾಗಿ, ಲಿಂಗಭರಿತ ಶರಣನಾಗಿ ಬದುಕಿಸಿದನು ಕೇಳಿರಣ್ಣಾ. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ಶರಣರೂಪಾಗಿ ಬಂದು ಶ್ರೀಮೂರ್ತಿಯ ತೋರಿ ಪಾಪವ ಕಳೆದನು. ಉಪಪಾತಕಕೋಟೀನಾಂ ಬ್ರಹ್ಮಹತ್ಯಶತಾನಿ ಚ ದಹಂತ್ಯಶೇಷಪಾಪಾನಿ ಶಿವಭಕ್ತಸ್ಯ ದರ್ಶನಾತ್ ಭಕ್ತಜನಂಗಳ ಕೂಡೆ ಸಂಭಾಷಣೆಯ ಮಾಡಿ ಮಹಾಪಾತಕಂಗಳ ಕಳೆದನು. ಮಹಾಪಾತಕಕೋಟಿಘ್ನಃ ಶ್ವಪಚೋ[s]ಪಿ ಲಿಂಗಪೂಜಕಃ ತತ್ಸಂಭಾಷಣಾನ್ಮುಕ್ತಿರ್ಗಣಮುಖ್ಯಗಣೇಶ್ವರಃ ಶ್ರೀಗುರುಮೂರ್ತಿಯ ತೋರಿ ಸಂಭಾಷಣೆಯಂ ಮಾಡಿ ಪಾದೋದಕ ಪ್ರಸಾದವನಿತ್ತು ಸಲಹಿ ರಕ್ಷಿಸಲು ಬಂದನು ಕಾಣಿರಣ್ಣಾ. ಇದನರಿಯದೆ, ಶರಣರು ದ್ರವ್ಯಾರ್ಥಿಗಳಾಗಿ ಬಂದರೆಂಬಿರಿ, ನಾನು ಮಾಡಿದೆನು ಶರಣರು ಮಾಡಿಸಿಕೊಂಡಹರೆಂದೆಂಬಿರಿ, ಉಂಟೆಂದಿರಿ, ಇಲ್ಲೆಂದಿರಿ, ಈ ಪರಿ ಅಜ್ಞಾನದಲ್ಲಿ ಕಂಡು, ನುಡಿದು, ದೋಷಿಗಳಹಿರಿ. ಶರಣರ ಶಿವನೆಂದು ನಂಬಿಮಾಡಲು ಸಿರಿಯಾಳನು ಮಗನ ಕೊಟ್ಟಡೆ ಕೈಲಾಸವ ಕೊಟ್ಟನು. ದಾಸ ವಸ್ತ್ರನಿತ್ತಡೆ ಮಹಾವಸ್ತು ತವನಿದ್ಥಿಯ ಕೊಟ್ಟನು. ಬಲ್ಲಾಳ ವಧುವನಿತ್ತಡೆ, ತನ್ನನೇ ಕೊಟ್ಟನು. ಈ ಪರಿ ಅಣುವಿಂಗೆ ಅಣು, ಮಹತ್ತಿಂಗೆ ಮಹತ್ತವನೆ ಕೊಟ್ಟನು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವಸಂಪೂಜ್ಯಮಾನೇಷು ಗಣಮುಖ್ಯೋ ಗಣೇಶ್ವರಃ ಭಕ್ತಿಯಿಂ ನಂಬಿ ಮಾಡಿರೆ, ದುಭಾರ್ವಿಸಿ ಕೆಡಬೇಡ. ಶರಣರೇ ಶಿವನೆಂದು ನಂಬಿ ಮಾಡಿರಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಕೂಡುವುದಯ್ಯಾ.
--------------
ಉರಿಲಿಂಗಪೆದ್ದಿ
ಆರು ಗುಣವೆಂಬೊ ಅರಿಕೆಯನೈದೆವೆಂಬ ಅರುಹಿರಿಯರು ನೀವು ಕೇಳಿರೋ. ಅರುವೆಂಬುದನೆ ಅರಿದು, ಮರಬೆಂಬುದನೆ ಮರದು, ಪರಶಿವಗುರುಮೂರ್ತಿಯೆಂದು ಗುರುವ ಕೊಂಡಾಡುತ್ತ ಆ ಗುರುಮೂರ್ತಿ ಗುರುದೀಕ್ಷವನೆ ಶಿರದಮೇಲಿಹ ಹಸ್ತವನು ಆ ತತ್‍ಕ್ಷಣದಲ್ಲಿ ಕಾರುಣ್ಯದಿಂದಲಿ ಪರಮಪ್ರಸಾದವ ಸಾರಾಯವ ಕೊಂಡದನು ಅರಿತು, ಮನದಲ್ಲಿ ಆಧಾರಚಕ್ರವಂ ಬಲಿದು ಇಡಾ ಪಿಂಗಳ ಸುಷುಮ್ನವೆಂಬ ಸಂದೇಹವನಳಿದು, ಏಕನಾಳವ ಕೂಡುತ್ತ ಮೂರುಪುರದ ಬಾಗಿಲಂಗಳ ಪೊಕ್ಕು ಪರಮಪ್ರಸಾದವ ಕೊಡುತಿರ್ದ ಘನಲಿಂಗವ ಕೊಡಬಲ್ಲರೆ ಅದೇ ಅರುವು ಹಿರಿಯತನ. ಇದನರಿಯದೆ ಅರುಹಿರಿಯರೆಂದು ತಿರುಗುವ ಬೂಟಕರಿಗೆ ನಾನೇನೆಂಬೆನಯ್ಯಾ ಗೊಹೇಶ್ವರಪ್ರಿಯ ನಿರಾಳಲಿಂಗಾ !
--------------
ಗುಹೇಶ್ವರಯ್ಯ
ವಸ್ತ್ರ ಬಲುಹಿನಲ್ಲಿ ಕಟ್ಟು, ಸೆಜ್ಜೆಯ ಬಲುಹಿನಲ್ಲಿ ಕಟ್ಟು. ಶಿವದಾರವ ಬಲುಹಿನಲ್ಲಿ ಕಟ್ಟೆಂದು ಹೇಳೂದು ಉಪದೇಶವೆ ? ಮತ್ತೆ ಕಟ್ಟುವರಿವುಂಟಾಗಿ, ಅಷ್ಟವಿಧಾರ್ಚನೆ, ಷೋಡಶೋಪಚಾರ, ಕಾಲನೇಮವೆಂದು ಹೇಳೂದು ದೀಕ್ಷೆಯೆ ? ಮತ್ತೆ ಕಾಲನೇಮವುಂಟಾಗಿ, ಇದನರಿಯದೆ ಹೇಳಿದಾತ ಶಿವದ್ರೋಹಿ. ಕೇಳಿದಾತ ಗುರುದ್ರೋಹಿ. ಐಕ್ಯವಿಲ್ಲದ ಮಾಟ, ಸಯಿದಾನದ ಕೇಡು. ಕೂಡಲಚೆನ್ನಸಂಗಯ್ಯಾ ಆ ಗುರುಶಿಷ್ಯರಿಬ್ಬರೂ ಉಭಯಭ್ರಷ್ಟರು.
--------------
ಚನ್ನಬಸವಣ್ಣ
ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ, ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ, ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ, ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು, ಶಿಶುವು ತಾನಾಡುವ ಆಟದಲ್ಲಿ, ಕಲ್ಲಿಗೆ ಕಾಲ ತಗಲಿಸಿಕೊಂಡು ಅಳುವಂತೆ, ವಿಷಯದಿಚ್ಛೆಯಲ್ಲಿ ನೊಂದು ಶೋಕಿಸುತ್ತಿರಲು, ಆ ಶಿಶುವಿಗೆ ತಂದಿ ಬಂದು ಕಣ್ಣೀರೊರಸಿ, ಆ ಕಲ್ಲತಗಲಿದ ಕಾಲ್ನೋವಿಗೆ ಔಷದ್ಥಿಯ ಮಾಡಿ, ತನ್ನ ಹೆಂಡತಿಯ ಕರೆದು, ಮಗನ ಸಮಾಧಾನಮಾಡೆಂದು ಹೇಳಲು, ಆ ತಾಯಿಯೆತ್ತಿಕೊಂಡು, ಕಣ್ಣು, ಮೂಗು, ಕಿವಿ, ಬಾಯಿ, ಮೈ ಧೂಳವನ್ನೆಲ್ಲಾ ತಾ ಹೊದ್ದ ಮೇಲ್‍ಸೆರಗಿಲೊರಸಿ ಮೊಲೆಯುಣಿಸಿ, ತೊಟ್ಟಿಲೊಳು ಹಾಸಿ ಮಲಗಿಸಿ ಹೊಚ್ಚಿ ಹೆಂಗ ಮಂಗಲ ನುಡಿ, ನಮ್ಮಪ್ಪ ಅರಸ ಛೀಮಾರಿ ಛೀ ಛೀ ಛೀ ಅಳುಳುಳುಳುಳುಳೆಂದು ಹಾಡುತ್ತಿರಲು, ಆ ಶಿಶುವು ಆ ಔಷಧದಿಂದೆ ನೋವು ಹೋಗಿ, ತಾಯಿಯ ಮೊಲೆಹಾಲಿನಿಂದೆ ಹಸಿವು ಅಡಗಿ, ಆ ಜೋಗುಳಹಾಡಿಗೆ ಸೊಂಪುದೋರಿ ಸುಮ್ಮನಾಗಿ, ತೊಟ್ಟಿಲ ತೂಗುವುದರೊಳಗೆ ಜೋಕಬಂದು, ಸುಖನಿದ್ರೆಯೊಳ್ ಮೈಮರೆದಿರಲು, ಮಾಯೆಸರ್ಪನು ಬಂದು ಕಚ್ಚಿ ಕಾಣಿಸಿಕೊಳ್ಳದೆ ಹೋಗಲು, ಆ ತಾಯಿ ತಂದಿ ಉಂಡು ಮಂಚದಮ್ಯಾಲೆ, ರತಿಸಂಭೋಗಸುಖನಿದ್ರೆಯಲ್ಲಿರೆ, ಮಾಳಿಗೆ ಬಿದ್ದು ಮರಣವಾಗಲು, ಆ ತಾಯಿ ತಂದಿಯು ಮಗ ಈ ಮೂವರು ಮಾಳಿಗೆ ಬಿದ್ದು ಮರಣವಾದರೆಂಬುದಾಯಿತ್ತಲ್ಲದೆ, ಆ ಶಿಶುವಿನ ಸಾವು ಆರು ಅರಿಯರು. ಇದರ ಹಾಂಗೆ ತನ್ನ ವಿಷಯದಿಚ್ಛೆಗೆ ಓಡ್ಯಾಡಿ ಕಾಲನ ಬಾಧೆಗೆ ಬಿದ್ದು ಭವದುಃಖದೊಳಗಿರುವ ನರರಿಗೆ ತಾನೇ ಗುರುವಾಗಿ ಬಂದು, ಸಾನಂದಸಿದ್ಧರಾಮನು ಹೀನ ನರಕಿಗಳ ತಗೆದಂತೆ, ಆ ಶಿಷ್ಯನ ಕೈಹಿಡಿದೆತ್ತಿ ಸರ್ವಕರಣಗಳ ಶುದ್ಧಗೊಳಿಸಿ, ಶಿಕ್ಷೋಪದೇಶವಮಾಡಿ, ತನ್ನ ಚಿತ್‍ಶಕ್ತಿಯ ಕರಸಂಜ್ಞೆ ನುಡಿನೋಟದಿಂದೆ ತೋರಿ ಹೇಳಿ ಕಾಣಿಸಿಕೊಡಲು, ಆ ಚಿತ್‍ಶಕ್ತಿ ಹತಿಗೊಂಡು ನಿತ್ಯತ್ವದ ನುಡಿ ಮನದ ಮೈಲಿಗೆಯ ತೊಳೆದು ತನ್ನ ಮೇಲುಮುಸುಕಿದ ಮಹಾಜ್ಞಾನದ ಬೆಳಗಿನಲ್ಲಿ ಸರ್ವ ಅವಯವಂಗಳ ಕಸರು ಕಳೆದು, ಆತ್ಮಜ್ಞಾನದೊಳಗೆ ಅಖಂಡಜ್ಞಾನದಲ್ಲಿರಿಸಿ, ಬ್ರಹ್ಮಜ್ಞಾನವನಾಚ್ಛಾದಿಸಿ, ನಿಜಜ್ಞಾನದಲ್ಲಿ ಲೋಲ್ಯಾಡಿ, ಅರುವಿನ ಹರುಷದಲ್ಲಿ ಹಿಂದಿಂದು ಹೇಯವಾಗೆ ಮುಂದಿಂದು ಹಿತವಚನ ಮುಂದೆ ಅಲ್ಲಲ್ಲಾ, ಸರ್ವವು ಸುಳ್ಳು ಸುಳ್ಳೆಂಬ ಮಹದರುವಿನ ಅನುಭವದ ಶಿವೋಹಂ ಶಿವೋಹಂ ಶಿವೋಹಂ, ಸೋಹಂ, ಸೋಹಂ, ಸೋಹಂ, ನಮೋ ನಮೋ, ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಏಂ ಏಂ ಏಂ ಏಂ ಏಂ ಎಂಬ ಮಹಾನಾದದೊಳಗೆ ಆ ಕಾಲನ ಬಾಧೆ ಹೋಗಿ, ಭವದುಃಖ ಹಿಂಗಿ, ಚಿತ್ತಚಿನ್ಮಯ ಸವಿಗೊಂಡು ನಿತ್ಯ ತೃಪ್ತನಾಗಿ, ನಿಜಲೀಲಾನುಭವದ ಶಬ್ದಕ್ಕೆ ಮುಗ್ಧನಾಗಿ, ಆತ್ಮಜ್ಞಾನದ ನಲಿಗಿನೊಳಗೆ ಲೋಲಗೊಂಡು, ಎಚ್ಚರಡಗಿ ಅಚ್ಚಸುಖದಲ್ಲಿ ಸಮರಸವಾಗಿರಲು, ಸಾವು ಬಂದು ಸಾವು ಸತ್ತು ಸಾವು ಸಾವಾಗಲು ಆ ಶರಣನ ಅಂಗ, ಮನ, ಭಾವ, ಆತ್ಮಸಂಗವೊಂದಾಗಿರೆ ಶ್ವಾಸ ಸುಳುಹುಗಳೆಲ್ಲಾ ನಿಂದು, ಚಿತ್ತ ಸತ್ತು ಸ್ವಸ್ಥವಾಗಲು, ನಿಜಶರಣನ ಅರುವು ಲಿಂಗದಲ್ಲಿ ಪರವಶರಾಗಿಹರೆಂಬುದು ಬಲ್ಲರಲ್ಲದೆ ಅರುವು ಮರೆಗೊಂಡಿರ್ಪ ನಿರ್ಬೈಲ ಆರೂ ಅರಿಯರೋ. ಆ ಶರಣ ತನ್ನರುವು ತಾನರಿಯ, ಸತ್ತ ಸುದ್ದಿ ಸತ್ತವ ಅರಿಯ, ಬದುಕಿದವ ಬಲ್ಲ. ಇದೇ ನಿಜಮುಕ್ತಿ ; ಇದನರಿಯದೆ, ತತ್ವವನೋದಿ ಗಾಳಿಗೊದರುವ ಒಡಕುಮಡಕಿಯ ಸ್ವರವ ಕಡಿಮಿಯಾದ ನಾದವನು ಆಲಿಸಿ, ನಾಹಂಬ್ರಹ್ಮವ ನುಡಿದು, ಕೋಹಂಬ್ರಹ್ಮವ ಬೆರೆತು, ಮುಂದೆ ಸೋಹಂ ಬ್ರಹ್ಮವ ಹುಡುಕದೆ, ದಾಸೋಹಂಬ್ರಹ್ಮವ ಕೂಡದೆ, ನಮಗೆ ಸಾವು ಇಲ್ಲಾ, ನಮ್ಮ ದೇಹ ಬೈಲು ಮಾಡುವೆವೆಂದು ಅದು ತಪ್ಪಲಿಕ್ಕೆ ಪಂಚತತ್ವದೇಹವು, ಪಂಚತತ್ವಕ್ಕೆ ಕೂಡಿಸುವೆವು ಎಂಬುವರು. ಅದು ಹಾಂಗಿರಲು, ಆ ದೇಹ ಬಯಲುವಾದರೇನು ? ಆ ಬಯಲಿಗೆ ಸಾವು ಇಲ್ಲವು. ತಾವು ಮಾಡಿದರೆ ಆಗುವುದೆ ? ತಾನೇ ಆಗಲರಿಯದು. ಎಷ್ಟು ನಿಜ ತಿಳಿದರೇನೋ ? ಅಷ್ಟು ತಾವಾಗದೇ, ಭ್ರಷ್ಟರಾಗಿ ಹೋದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಶಿವಶಿವಾ, ನಾವು ಗುರುಗಳು, ನಾವು ಜಂಗಮಲಿಂಗಪ್ರೇಮಿಗಳು, ನಾವು ಪಟ್ಟದಯ್ಯಗಳು, ನಾವು ಚರಂತಿಯ ಹಿರಿಯರು, ನಾವು ಸದಾಚಾರ ಸತ್ಯಸದ್ಭಕ್ತರೆಂದು ಬೊಗಳುತ್ತಿಪ್ಪಿರಿ. ಅದೆಲ್ಲಿಯದೊ ಸದಾಚಾರ? ಮಣ್ಣುಹಿಡಿದವಂಗೆ ಗುರುವಿಲ್ಲ, ಹೆಣ್ಣುಹಿಡಿದವಂಗೆ ಲಿಂಗವಿಲ್ಲ, ಹೊನ್ನುಹಿಡಿದವಂಗೆ ಜಂಗಮವಿಲ್ಲ. ಇಂತೀ ತ್ರಿವಿಧಮಲವ ಕಚ್ಚಿದ ಶೂಕರ ಶುನಿಗಳಿಗೆ ತೀರ್ಥಪ್ರಸಾದ ಅದೆಲ್ಲಿಯದೋ? ಇಲ್ಲವಾಗಿ, ಅಷ್ಟಾವರಣವು ಇಲ್ಲ. ಇಂತಪ್ಪ ಪಂಚಮಹಾಪಾತಕರು ನಾವು ಮೋಕ್ಷವ ಹಡೆಯಬೇಕೆಂದು ಗುರು-ಲಿಂಗ-ಜಂಗಮವ ತಮ್ಮಂಗದಿಂದಿದಿರಿಟ್ಟು ಪೂಜೋಪಚಾರವ ಮಾಡಿ, ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯವೆಂಬ ಚರ್ತುವಿಧ ಖಂಡಿತಫಲಪದವ ಪಡೆದು, ಅನುಭವಿಸಿ ಕಡೆಯಲ್ಲಿ ಎಂಬತ್ತುನಾಲ್ಕುಲಕ್ಷದ ಭವಮಾಲೆಯಲ್ಲಿ ಬಪ್ಪುದು ತಪ್ಪುದು. ಇಂತಪ್ಪ ವಿಚಾರವನು ಸ್ವಾನುಭಾವಗುರುಮುಖದಿಂ ತಿಳಿದು ವಿಚಾರಿಸಿ ಸಕಲ ಪ್ರಪಂಚವೆಲ್ಲವನು ನಿವೃತ್ತಿಯ ಮಾಡಿ ದ್ವೈತಾದ್ವೈತವ ನಷ್ಟವ ಮಾಡಿ, ಸಕಲ ಸಂಸಾರ ವ್ಯಾಪರದ ವ್ಯಾಕುಲಚಿಂತನೆಯ ಬಿಟ್ಟು, ನಿಶ್ಚಿಂತನಾಗಿ ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸಬೇಕಲ್ಲದೆ ಇದನರಿಯದೆ ತನು-ಮನ-ಧನದ ಪ್ರಕೃತಿಯಲ್ಲಿ ಹರಿದಾಡಿ ಮಾತಾಪಿತರು, ಸತಿಸುತರು, ಸ್ನೇಹಿತರು, ಬಾಂಧವರು ಎನ್ನವರು ಎಂದು ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧಮಲವ ತಿಂದು ಸಂಸಾರ ರಸೋದಕವೆಂಬ ನೀರು ಕುಡಿದು ಹಾಳಕೇರಿಗೆ ಹಂದಿ ಜಪಯಿಟ್ಟ ಹಾಂಗೆ ಈ ಸಂಸಾರವೆಂಬ ಹಾಳಕೇರಿಗೆ ಜೀವನೆಂಬ ಹಂದಿ ಮೆಚ್ಚಿ ಮರುಳಾಗಿ ಹೊಡೆದಾಡಿ ಹೊತ್ತುಗಳೆದು ಸತ್ತುಹೋಗುವ ಹೇಸಿ ಮೂಳ ಹೊಲೆಮಾದಿಗರಿಗೆ ಶಿವಪಥವು ಎಂದಿಗೂ ಸಾಧ್ಯವಿಲ್ಲವೆಂದಾತ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತನು ಮಾಯೆ, ತನುವಿಂಗೆ ಮನ ಮಾಯೆ, ಮನಕ್ಕೆ ನೆನಹು ಮಾಯೆ, ನೆನಹಿಂಗೆ ಅರಿವು ಮಾಯೆ, ಅರಿವಿಂಗೆ ಕುರುಹು ಮಾಯೆ. ಇದನರಿಯದೆ ಹರಿಹರಬ್ರಹ್ಮಾದಿಗಳೆಲ್ಲರೂ ಮಾಯೆಯ ಕಾಲಸರಮಾಲೆಗಳಾದರು. ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಮಾಯೆ ದೇವದಾನವಮಾನವರಿಗೆ ದಸರಿದೊಡಕಾಗಿ ಕಾಡಿತ್ತು.
--------------
ಆದಯ್ಯ
ಕಾಯಸ್ಥಲ, ಕರಸ್ಥಲ, ಉರಸ್ಥಲ, ಶಿ ಸ್ಥಲ, ಪ್ರಾಣಸ್ಥಲ, ಭಾವಸ್ಥಲವೆಂದು ನುಡಿದಾಡುವರು. ಆ ಸ್ಥಲದೊಳಗಣ ಸ್ವಯಸ್ಥಲವನರಿಯರು ಕಾಣಿರೆ. ಸ್ವಯಸ್ಥಲವೆಂತಿಪ್ಪುದೆಂದರೆ, ಕಾಯಸ್ಥಲವನರಿದರೆ, ಅದು ತಾನೇ ಲಿಂಗವಾಯಿತ್ತು. ಕರಸ್ಥಲವನರಿದರೆ, ಕೈಲಾಸ ಮರ್ತ್ಯ ತನ್ನೊಳಗಾಯಿತ್ತು. ಉರಸ್ಥಲವನರಿದರೆ, ಪರವು ತನ್ನೊಳಗಾಯಿತ್ತು. ಶಿರಸ್ಥಲವನರಿದರೆ ಶಿವನೆಂಬುದಕ್ಕೆ ಇಲ್ಲ. ಪ್ರಾಣಸ್ಥಲವನರಿದರೆ, ಭಯ ಮರಣಾದಿಗಳಿಲ್ಲ. ಭಾವಸ್ಥಲವನರಿದರೆ, ಇನ್ನಾವುದೂ ನೆನಹಿಲ್ಲ. ಇದರ ಭೇದವನರಿಯದ, ಸ್ಥಲನೆಲೆಯುಂಟೆಂಬಿರಿ. ಅದರ ಭೇದವ ನೀವು ಅರಿಯಿರಿ ಕಾಣಿರೊ. ಸ್ಥಲವೆಂದರೆ ಅಂಗ, ನೆಲೆಯೆಂದರೆ ಪ್ರಾಣ. ಇದನರಿಯದೆ ತಲೆ ಕೆಳಗಾಗಿ ಹೋದರು. ಆರು? ದೇವದಾನವರು. ನಿಮ್ಮ ಪಾಡೇನೋ ನರಗುರಿಗಳಿರಾ? ಇದನರಿದು, ಇನ್ನಾದರೂ ನಮ್ಮ ಶರಣರಿಗೆರಗಿ ಬದುಕಿರೊ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಆಚಾರಲಿಂಗವ ಅಂಗೈಯೊಳಗಳವಡಿಸಿ ಮಜ್ಜನಕ್ಕೆರೆದು ತ್ರಿಪುಂಡ್ರಮಂ ಧರಿಯಿಸಿ ಪುಷ್ಪಜಾತಿಗಳಿಂದರ್ಚಿಸಿ ಪೂಜೆಮಾಡುವ ಕರವು ಆ ಪೂಜೆಗೆ ಮೆಚ್ಚಿ ಪಂಚಸ್ಫರ್ಷನಂಗಳಂ ಮರೆಯಲೊಡನೆ ಆ ಕರದಲ್ಲಿ ಜಂಗಮಲಿಂಗ ನೆಲೆಗೊಂಡಿತ್ತು. ಆ ಲಿಂಗದ ಪ್ರಕಾಶಮಂ ನೋಡುವ ನೇತ್ರಂಗಳು ಆ ಪ್ರಕಾಶಕ್ಕೆ ಮೆಚ್ಚಿ ಪಂಚವರ್ಣಂಗಳಂ ಮರೆಯಲೊಡನೆ ಅ ನೇತ್ರಂಗಳಲ್ಲಿ ಶಿವಲಿಂಗವೆ ನೆಲೆಗೊಂಡಿತ್ತು. ಆ ಲಿಂಗದ ಸದ್ವಾಸನೆಯಂ ವಾಸಿಸುವ ಘ್ರಾಣ ಆ ವಾಸನೆಗೆ ಮೆಚ್ಚಿ ಪಂಚಗಂಧಂಗಳಂ ಮರೆಯಲೊಡನೆ ಆ ಘ್ರಾಣದಲ್ಲಿ ಆಚಾರಲಿಂಗ ನೆಲೆಗೊಂಡಿತ್ತು. ಆ ಲಿಂಗದ ಮಂತ್ರಸ್ವರೂಪವನೆತ್ತಿ ಕೊಂಡಾಡುವ ಜಿಹ್ವೆ ಆ ಮಂತ್ರಕ್ಕೆ ಮೆಚ್ಚಿ ಪಂಚರಸಂಗಳಂ ಮರೆಯಲೊಡನೆ ಆ ಜಿಹ್ವೆಯಲ್ಲಿ ಗುರುಲಿಂಗ ನೆಲೆಗೊಂಡಿತ್ತು. ಆ ಲಿಂಗಮಂ ಮನವೊಲಿದು ಹಾಡುವ ನಾದಮಂ ಕೇಳುವ ಶ್ರೋತ್ರ ಆ ನಾದಕ್ಕೆ ಮೆಚ್ಚಿ ಪಂಚನಾದಂಗಳಂ ಮರೆಯಲೊಡನೆ ಆ ಶ್ರೋತ್ರದಲ್ಲಿ ಪ್ರಸಾದಲಿಂಗ ನೆಲೆಗೊಂಡಿತ್ತು. ಆ ಲಿಂಗವ ನೆನೆವ ಮನ ಆ ನೆನಹಿಂಗೆ ಮೆಚ್ಚಿ ಪಂಚಪರಿಣಾಮಂಗಳಂ ಮರೆಯಲೊಡನೆ ಆ ಮನದಲ್ಲಿ ಮಹಾಲಿಂಗ ನೆಲೆಗೊಂಡಿತ್ತು. ಈ ಷಡಿಂದ್ರಿಯಂಗಳೂ ಲಿಂಗವನಪ್ಪಿ ಅಗಲದ ಕಾರಣ ಆ ಲಿಂಗವೊಲಿದು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ನೆಲೆಗೊಂಡಿತ್ತು. ಇಂತಪ್ಪ ಇಷ್ಟಲಿಂಗದಲ್ಲಿ ಶರಣಂ ನಿಷ್ಠೆ ನಿಬ್ಬೆರಗಾಗಿ ಧ್ಯಾನಯೋಗಮಂ ಕೈಕೊಂಡು ಷಡುವರ್ಣಮಂ ಮರೆಯಲೊಡನೆ ಆ ಲಿಂಗವೊಲಿದು ಅಂಗವೇದ್ಥಿಸಿ ಜ್ಞಾನಕ್ರೀಗಳಲ್ಲಿ ಷಡ್ವಿಧ ಪ್ರಾಣಲಿಂಗವಾಗಿ ನೆಲೆಗೊಂಡಿತ್ತು. ಆ ಪ್ರಾಣಲಿಂಗಳಂ ಶರಣ ಮಂತ್ರಮಾಲೆಯಂ ಹೃದಯದೊಳಿಂಬಿಟ್ಟು ಮನವೆಂಬರಳ್ದ ತಾವರೆಯಲ್ಲಿ ಜಾಗ್ರತ್ ಸ್ವಪ್ನದಲ್ಲಿ ಪೂಜಿಸುವ ಧಾರಣಯೋಗದೊಳಿರ್ದು ಕ್ರೀಯ ಮರೆಯಲೊಡನೆ ಆ ಲಿಂಗವೊಲಿದು ಮನವೇದ್ಥಿಸಿ ಭಾವಂಗಳಡಗಿ ತ್ರಿವಿಧ ಭಾವಲಿಂಗವಾಗಿ ನೆಲೆಗೊಂಡಿತ್ತು. ಆ ಭಾವಲಿಂಗಗಳ ಶರಣನೊಡೆವೆರೆಯಲೊಡನೆ ಕರ್ಪೂರ ಹೋಗಿ ಉರಿಯ ಹಿಡಿದಂತಾದ ಸಮಾದ್ಥಿಯೋಗದೊಳಿರ್ದು ಜ್ಞಾನವ ಮರೆಯಲೊಡನೆ ಆ ಶರಣಂಗೆ ಆ ಲಿಂಗವೊಲಿದು ಸರ್ವಾಂಗಲಿಂಗವಾಯಿತು. ಆತನೇ ಪರಬ್ರಹ್ಮ. ಇದನರಿಯದೆ ಜ್ಞಾನಕ್ರೀಗಳಿಂದಾಚರಿಸಿ ಲಿಂಗಾಂಗ ಸಂಯೋಗವಾಗದೆ ಕೆರಹಿನಟ್ಟೆಗೆ ನಾಯಿ ತಲೆದೂಗುವಂತೆ ತಮ್ಮ ಅರಿವಿಂಗೆ ತಾವೇ ತಲೆದೂಗಿ `ಅಹಂ ಬ್ರಹ್ಮ'ವೆಂಬ ಚೌರಾಶಿ ಹೊಲೆಯರ ಎನಗೆ ತೋರದಿರಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಎಂಟು ಯೋಗ ಆರು ಭೇದ ಮೂರು ಬಟ್ಟೆ ಐದು ಮುಟ್ಟು ಈರೈದು ಹಾದಿ ಹದಿನಾರು ಸಂಗ ನಾಲ್ಕು ಮೆಟ್ಟು ಎರಡುಸಂಚಾರ ಒಂದರ ಕಟ್ಟಿನಲ್ಲಿ ಮುಟ್ಟುಮಾಡಿ ನಿಲಿಸಿ, ದೃಷ್ಟದ ಇಷ್ಟದಲ್ಲಿ ಬೈಚಿಟ್ಟು, ಅವರವರ ಸ್ವಸ್ಥಾನದ ಕಟ್ಟಣೆಯಲ್ಲಿ ವಿಶ್ರಮಿಸಿ ಆ ಚಿತ್ತವ ಆ ಚಿತ್ತು ಒಡಗೂಡಿ ಇಪ್ಪುದೆ ಕ್ರಿಯಾಪಥಲಿಂಗಾಂಗಯೋಗ. ಇದನರಿಯದೆ ಮಾಡುವ ಯೋಗವೆಲ್ಲವೂ ತನ್ನಯ ಭವರೋಗ, ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಇನ್ನಷ್ಟು ... -->