ಅಥವಾ

ಒಟ್ಟು 64 ಕಡೆಗಳಲ್ಲಿ , 30 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಲ್ಲದ ಹೊಗೆಯನಿಕ್ಕಿ, ಭರಣಿಯ ಹೊರವಂತೆ ಇರಬೇಡವೆ ಗುರುವಿನುಪದೇಶ? ದಾರಿಯ ಹಸಮಾಡಿ ನೀರ ತಿದ್ದುವಂತೆ ಇರಬೇಡವೆ ಗುರುವಿನುಪದೇಶ? ಹಾಲುಂಬ ಹಸುಳೆಗೆ ಕೂಳು ಮೈಯಕ್ಕುವುದೆ? ಬುದ್ಧಿಹೀನರು ಬಲ್ಲರೆ ಪರಬ್ರಹ್ಮದ ಸುಖವ? ಈ ಭೇದವನರಿಯದ ಗುರುಶಿಷ್ಯರಿಬ್ಬರೂ ಇದ್ದ ಊರೊಳಗಿರೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ನಾನಾ ಜನ್ಮಂಗಳ ತಿರುಗಿ ಮಾನವ ಜನ್ಮಕ್ಕೆ ಬಂದು ಲಿಂಗೈಕ್ಯನಾಗಿರುವುದೇ ಚಂದ. ಶಾಸ್ತ್ರಂಗಳ ಓದಿ ಸಂಪಾದನೆಯ ಮಾಡಿ ಹೇಳಿ ಕೇಳುವ ಅಣ್ಣಗಳಿರಾ ಕೃತಯುಗದಲ್ಲಿ ಹನ್ನೆರಡು ಭಾರ ಜ್ಯೋತಿರ್ಲಿಂಗವನು ಬ್ರಹ್ಮರ್ಷಿಗಳು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿ ಆದಿಗಳು ಇರುವನಂತ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೊ. ತ್ರೇತಾಯುಗದಲ್ಲಿ ಲಕ್ಷ ಲಿಂಗವನು ನಮ್ಮ ರವಿಕುಲ ರಘುರಾಮರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿಯಾದಿಗಳು ಇರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡಿದ್ದವು ಕಾಣಿರೋ. ದ್ವಾಪರಯುಗದಲ್ಲಿ ಸೋಮವಂಶಿಕರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿವ ಲಿಂಗವು ಗ್ರಾಮಕ್ಕೆ ಒಂದು ಕಲ್ಕೇಶ್ವರನಾಗಿ ರವಿ ಶಶಿಗಳಿರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕೃತ, ತ್ರೇತಾ, ದ್ವಾಪರ ಇವು ಮೂರು ಯುಗದಲ್ಲಿ ಬ್ರಹ್ಮ ಕ್ಷತ್ರಿಯರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿ, ಇದ್ದ ಲಿಂಗವನು ಅತಿಗಳೆದು ಇಷ್ಟಲಿಂಗಯೆಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನು ಅರ್ಪಿಸಿ, ಹುಟ್ಟಿದ ಮನುಜರೆಲ್ಲ ತಲೆತಲೆಗೊಂದು ಲಿಂಗವನು ಕಟ್ಟಿಕೊಂಡಿದ್ದರೇನಯ್ಯ, ಆ ಲಿಂಗಕ್ಕೆ ನಿಷ್ಕ್ರಿಯವಾಗಲಿಲ್ಲ. ಕಾರ್ಯಕ್ಕೆ ಬಾರದೆ ಅಕಾರ್ಯವಾಗಿ ಹೋಗಿತ್ತು ಕಾಣಿರೋ. ಅದು ಎಂತೆಂದರೆ : ಕೃತಯುಗದಲ್ಲಿ ಹುಟ್ಟಿದ ಮನುಜರು ಸುವರ್ಣಲಿಂಗವನು ಪೂಜೆಯ ಮಾಡಿಪ್ಪರು. ಆ ಸುವರ್ಣವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ತ್ರೇತಾಯುಗದಲ್ಲಿ ಹುಟ್ಟಿದ ಮನುಜರು ಕಾರಪತ್ರದ ಲಿಂಗದ ಪೂಜೆಯ ಮಾಡಲು, ಆ ಕಾರಪತ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಗಿತ್ತು ಕಾಣಿರೋ. ದ್ವಾಪರಯುಗದಲ್ಲಿ ಹುಟ್ಟಿದ ಮನುಜರು ನಾಗತಾಮ್ರದ ಲಿಂಗವನು ಪೂಜೆಯ ಮಾಡಲು ಆ ನಾಗತಾಮ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕಲ್ಲುಲಿಂಗವನು ತಮ್ಮ ಕೈಲ್ಹಿಡಿದುಕೊಂಡು ಪಂಚಮುಖದ ಪರಮೇಶ್ವರದೇವರು ಎಮ್ಮ ಕರಸ್ಥಲಕ್ಕೆ ಬಂದನೆಂದು ಬಿಂಕವನು ಹೇಳುವ ಡೊಂಕುಮನುಜರು ಕಾಯ ಅಸುವಳಿದು ನೆಲಕ್ಕೆ ಬಿದ್ದು ಹೋಗುವಾಗ ಕೈಯಲ್ಲಿ ಕಲ್ಲುಲಿಂಗವು ಭೂಮಿ ಆಸ್ತಿಯನು ಭೂಮಿ ಕೂಡಿ ಹೋಗುವಾಗ ಒಂ ನಮಃಶಿವಾಯ ಎಂಬ ಮಂತ್ರವು ಮರೆತು ಹೋಯಿತು. ಅದ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಕದ್ದ ಕಳವ ಮರೆಸಿಕೊಂಡು, ನಾ ಸಜ್ಜನನೆಂಬಂತೆ, ಇದ್ದ ಗುಣವ ನೋಡಿ, ಹೊದ್ದಿ ಸೋದಿಸಲಾಗಿ, ಕದ್ದ ಕಳವು ಕೈಯಲ್ಲಿದ್ದ ಮತ್ತೆ, ಸಜ್ಜನತನವುಂಟೆ ? ಇಂತೀ ಸಜ್ಜನಗಳ್ಳರ ಕಂಡು ಹೊದ್ದದೆ ಹೋದ, ನಿಃಕಳಂಕ ಮಲ್ಲಿಕಾರ್ಜುನ.
--------------
ಮೋಳಿಗೆ ಮಾರಯ್ಯ
ವಿಷ ಉಂಡು ದಣಿಯಲಾರದೆ, ವಿಷ ನೈವೇದ್ಯವ ಮಾಡಿಕೊಂಡ ನೋಡಾ, ಈ ದೇವಾ. ತ್ರಿಪುರಾಂತಕ ಕೆರೆಯಗುಳಿ ದಣಿಯಲಾರದೆ, ಹಲವು ಗುಡ್ಡ ರೂಪಾಗಿ ಕೆರೆಯಗುಳಿಸಿಕೊಂಡ ನೋಡಾ [ಈ ದೇವ] ಇದ್ದ ದೇವಾಲಯವಲ್ಲದೆ ಮತ್ತೆ ದೇವಾಲಯವ ಮಾಡಿಸಿಕೊಂಡ ನೋಡಾ, ಈ ದೇವ, ತಾನಾಖಂಡಮೂರ್ತಿಯ ರೂಪು ಧರಿಸದೆ, ಲಕ್ಷ ತೊಂಬತ್ತಾರು ಸಾಸಿ[ವಾಗಿ]ನೆಲಸಿಪ್ಪ ನೋಡಾ ಈ ದೇವ, ಕಪಿಲಸಿದ್ಧಮಲ್ಲಿಕಾರ್ಜುನದೇವ.
--------------
ಸಿದ್ಧರಾಮೇಶ್ವರ
ಶುದ್ಧವಾಯಿತ್ತೆಂಬೆನೆ ಸುಯಿಧಾನಿ ನಾನಲ್ಲ, ಅನುವಾಯಿತ್ತೆಂಬೆನೆ ಅವಧಾನಿ ನಾನಲ್ಲ, ಸುಯಿಧಾನ ಅವಧಾನ ಅರ್ಪಿತವ ನಾನರಿಯೆ. ಇದ್ದ ಪರಿಯಲಿ ನೀಡಿದಡೆ, ಬಂದ ಪರಿಯಲಿ ಕೈಕೋ ಕೂಡಲಸಂಗಮದೇವಾ.
--------------
ಬಸವಣ್ಣ
ತಮ್ಮಿಚ್ಛೆಗೆ ಬಂದ ಪದಾರ್ಥ ಲಿಂಗದಿಚ್ಛೆ ಎಂಬರು; ತಮ್ಮಿಚ್ಛೆಗೆ ಬರದ ಪದಾರ್ಥ ಲಿಂಗದಿಚ್ಛೆ ಇಲ್ಲವೆಂಬರು. ಹೋದ ವಾಕ್ಕು ಶಿವಾಜ್ಞೆ ಎಂಬರು. ಇದ್ದ ಮಾತು ತನ್ನಾಜ್ಞೆ ಎಂಬರು, ಅದೆಂತಯ್ಯಾ? ಇಚ್ಛೆಗೆ ಒಳಗಾಗುವನಲ್ಲಯ್ಯಾ ಲಿಂಗವು. `ಶಿವೋ ದಾತಾ ಶಿವೋ ಭೋಕ್ತಾ' ಎಂಬುದ ತಿಳಿದು, ಲಿಂಗಮುಖಂದ ಬಂದ ಪದಾರ್ಥವ ಕೈಕೊಂಬಡೆ, ಅಚ್ಚ ಲಿಂಗೈಕ್ಯನೆಂಬೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಕಾಯದ ಕಣ್ಣಿನಲ್ಲಿ ನೋಡಿ ವಿಕಾರವಳಿದು ಸುಖಪಟ್ಟಣವ ಕಂಡೆ. ಆ ಪಟ್ಟಣದರಸಿಂಗೆ ಭಾವ ಕಾಲಿಲ್ಲ. ಪ್ರಧಾನಂಗೆ ಪಾರುಪತ್ಯಕ್ಕೆ ನುಡಿವಡೆ ಬಾಯಿಲ್ಲ. ತಳವಾರ ತಿರುಗುವುದಕ್ಕೆ ಕಣ್ಣಿಲ್ಲ. ಆ ಪಟ್ಟಣದಲ್ಲಿ ಮೂವರಿಗೆ ಕರ್ತನೊಬ್ಬ ಅರಸು. ಆ ಅರಸ ಕಣ್ಣಿನಲ್ಲಿ ಕಾಣಲಿಲ್ಲ, ಎಲ್ಲಿದ್ದಹರೆಂದು ಕೇಳಲಿಲ್ಲ. ಇದ್ದ ಠಾವಿಂಗೆ ಒಬ್ಬರೂ ಹೊದ್ದಲಿಲ್ಲ. ಅರಸಿನ ಆಜ್ಞೆ, ಬಲುಹ, ಓಲಗಕ್ಕೆ ತೆರಪಿಲ್ಲ. ಜೀವಿತಕ್ಕೆ ಅಡಹಿಲ್ಲ, ಎನ್ನ ಬಡತನವ ಇನ್ನಾರಿಗೆ ಹೇಳುವೆ? ಬಂಟರು ಸತ್ತರು, ಅರಸು ನಷ್ಟವಾದ. ಆ ಉಭಯದ ಬೇಧವ ನಾನರಿಯೆ, ನೀ ಹೇಳು. ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅಸಮಾಕ್ಷಲಿಂಗಕ್ಕೆ ಅನ್ಯದೈವವ ಸರಿಯೆಂಬವನ ಬಾಯಲ್ಲಿ ಮಸೆದ ಕೂರಲಗನಿಕ್ಕದೆ ಮಾಬನೆ ಹುಸಿಯಾಗಿ ನುಡಿವವನ ನಾಯಾಗಿ ಬಗುಳಿಸನೆ ಹಿರಿಯರುತ್ತಮರೆನ್ನದವರ ಕುದುರೆಯಾಗಿ ಕಟ್ಟಿಸನೆ ಗುರುಲಘುವೆನ್ನದವರ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಪರಸ್ತ್ರೀಗಳುಪಿದವರ ಗಾಣದಲಿಕ್ಕಿ ಹಿಳಿಯನೆ ಪರಧನಕ್ಕಳುಪಿದವರ ಹಿಡಿ ಖಂಡವ ಕೊಯ್ಯನೆ ಎಲೆ ಕೂಡಲಸಂಗಮದೇವಾ, ನಿಮ್ಮ ಹೇಳಿದ ಹೇಳಿಕೆಯಿಂದ ಪಿಂಬೇರ ಮೈ[ಲುಗ] ಮೇಳವಾಡುತ ಇದ್ದ ಕಾಣಾ, ತೃಜಗದೊಳಗೆ.
--------------
ಬಸವಣ್ಣ
ಜಲದಲ್ಲಿ ಇಲ್ಲದೆ ಜಲದಲ್ಲಿ ತೋರುವ ತೆರೆಗಳನು ಭೂತ ತಿಳಿದೆಡೆಯಲ್ಲಿಯೂ ಇಲ್ಲದಂತೆ ಪರಮನ ಹೊದ್ದದಂತೆ ಆ ಪರಮನಲ್ಲಿಯೆ ತೋರುವ ಜಗವನು ಭೂತಭ್ರಮೆಯಿಂದ ತಿಳಿದೆಡೆಯಲ್ಲಿಯೂ ಇಲ್ಲದೆ ನೆನಸಿನ ವಾರಣಾಸಿಯಲ್ಲಿ ಕನಸಿನ ಕಟಕವ ಕಂಡಂತೆ ಇದ್ದ ಮಹವೆಂಬ ತೋರಿಕೆಯ ಎಲ್ಲವನು ತಿಳಿದಚಲಿತ ನೀನೆ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಇದ್ದ ಪರಿ ಇಂತುಟಿದೆ ನೋಡಯ್ಯಾ; ನಿಂದಡೆ ನೆಳಲಿಲ್ಲ, ನಡೆದಡೆ ಹೆಜ್ಜೆಯಿಲ್ಲ, ಭೂತಳದೊಳಗೆ ಕಂಡುದಿಲ್ಲ. ಇಂತಪ್ಪ ಅನಿಯಮದ ಸುಳುಹು, ಅಹುದಹುದು, ಅರಿದರಿದು ಜಂಗಮಸ್ಥಲ ಇಂತುಟಲ್ಲದೆ, ಎಂತುಟು ಹೇಳಾ ಆಪ್ಯಾಯನದ ಅರಿಕೆಯ ಹೊಲಬ ಕಾಣಬಾರದು, ಊಡಿಸಿದಡೆ ಉಂಬನೊ ಉಣ್ಣನೊ ಉಂಬಂಥವರಾದಡೆ ನೀಡುವೆ ಕೂಡಲಸಂಗಮದೇವರಿಗೆ ಚೆನ್ನಬಸವಣ್ಣಾ, ನೀನಹುದಹುದೆನಲಿಕೆ.
--------------
ಬಸವಣ್ಣ
ದೇಹ ಕಂದಡೇನು? ದೇಹ ಇಂದುವಿನಂತಾದಡೇನು? ದೇಹ ಬಾತು ಬಿದ್ದಡೇನು? ದೇಹ ಇದ್ದ ಯೋಗ್ಯತೆಗೆ ಮೈಗೊಟ್ಟಡೇನಯ್ಯಾ? ಅಂತರಂಗ ಶುದ್ಧವಾದ ಬಳಿಕ ಹೇಗಿದ್ದಡೇನಯ್ಯಾ? ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ತನುವೆಂಬ ಹುತ್ತದಲ್ಲಿ ಮನವೆಂಬ ಸರ್ಪ ಹೆಡೆಯನುಡುಗಿಕೊಂಡಿರಲು ಜ್ಞಾನಶಕ್ತಿ ಬಂದು ಎಬ್ಬಿಸಲು, ಉರಿ ಭುಗಿಲೆನುತ್ತ ಹೆಡೆಯನೆತ್ತಿ ಊರ್ದ್ವಕ್ಕೇರಲು, ಅಷ್ಟಮದವೆಲ್ಲ ಹಿಟ್ಟುಗುಟ್ಟಿದವು; ಕರಣಂಗಳೆಲ್ಲ ಉರಿದುಹೋದವು. ಇದ್ದ ಶಕ್ತಿಯನೆ ಕಂಡು, ಮನ ನಿಶ್ಚಯವಾದುದನೆ ನೋಡಿ, ಪಶ್ಚಿಮದ ಕದವ ತೆಗೆದು, ಬಟ್ಟಬಯಲ ಬೆಳಗಿನೊಳಗೆ ಓಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಶುದ್ಧವೆ ಜವನಿಕೆಯಾಗಿ, ಸಿದ್ಧವೆ ಸಿಂಹಾಸನವಾಗಿ ಪ್ರಸಿದ್ಧದ ಹೊದಿಕೆಯ ಹೊದ್ದು, ನಾನಾಡುತ್ತಿರ್ದೆ ಬಹುರೂಪ. ಶುದ್ಧ ಓಡಿದಲ್ಲಿ, ಇದ್ದ ನಿಜ ನಾಸ್ತಿಯಾಯಿತ್ತೆನ್ನ ಬಹುರೂಪು. ಸಿದ್ಧವೆಂಬ ಸಿಂಹಾಸನ ಅಳಿದಲ್ಲಿ ಬುದ್ಧಿಗೆಟ್ಟಾಡುತ್ತಿದ್ದುದಯ್ಯಾ, ಎನ್ನ ಬಹುರೂಪು. ಪ್ರಸಿದ್ಧ ಹೊದಿಕೆ ಹರಿದಲ್ಲಿ ನಾ ಬಸವನ ಕೂಡೆ ಆಡುತ್ತಿರ್ದೆ ಕಾಣಾ. ರೇಕಣ್ಣಪ್ರಿಯ ನಾಗಿನಾಥಾ, ಬಸವನಿಂದ ಬದುಕಿತೀ ಲೋಕವೆಲ್ಲಾ.
--------------
ಬಹುರೂಪಿ ಚೌಡಯ್ಯ
ಪಿಸಿತ ನಡುವೆ ಇದ್ದ ಕಿರಾತಂಗೆ ಹೊಸ ವಾಸನೆಯ ಬಲ್ಲನೆ? ಸಕಲವ್ಯಾಪಾರದಲ್ಲಿ ಮೂಡಿ ಮುಳುಗುವವ ಸುಖದ ತದ್ರೂಪರ ಬಲ್ಲನೆ? ವಿಕಳತೆಗೊಂಡು ಅಖಿಳರ ಕೂಡಿ ಸುಖದುಃಖದಲ್ಲಿ ಬೇವವಂಗೆ ಅಕಳಂಕತನವುಂಟೆ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇನ್ನಷ್ಟು ... -->