ಅಥವಾ

ಒಟ್ಟು 164 ಕಡೆಗಳಲ್ಲಿ , 44 ವಚನಕಾರರು , 138 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ? ಅರಿದಂಗವ ತಾಳಿದವರಲ್ಲಿ ಮರವೆಗೆ ಮುನಿವರಲ್ಲದೆ ಅರಿವಿಗೆ ಮುನಿವರುಂಟೆ ಅಯ್ಯಾ? ಕೊಲ್ಲಿ ಆವಿಂಗೆ ಕಾಲ ಕಟ್ಟುವರಲ್ಲದೆ ಮೊಲೆಯ ಕಟ್ಟಿದರುಂಟೆ ಅಯ್ಯಾ? ಗುರುವಾದಡೂ ಆಗಲಿ, ಲಿಂಗವಾದಡೂ ಆಗಲಿ, ಜಂಗಮವಾದಡೂ ಆಗಲಿ ಅರಿವಿಂಗೆ ಶರಣು ಮರವಿಂಗೆ ಮಥನವ ಮಾಡಿದಲ್ಲದೆ ಇರೆ. ಇದು ನೀವು ಕೊಟ್ಟ ಅರಿವಿನ ಮಾರನ ಇರವು, ಸದಾಶಿವಮೂರ್ತಿಲಿಂಗದ ಬರವು.
--------------
ಅರಿವಿನ ಮಾರಿತಂದೆ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಜಗದಗಲದ ಗದ್ಗುಗೆಗಳಿಗೆ ಅಪ್ರಮಾಣದ ಲಿಂಗಪ್ರತಿಷ್ಠೆಯ ಮಾಡಿದರು ನೋಡಾ. ಅದಕ್ಕೆ ತೊಂಬತ್ತಾರಂಗುಲ ಪ್ರಮಾಣಿನ ದೇಗುಲ ನೋಡಾ. ನಾಲ್ಕೈದು ಬಾಗಿಲು ನೋಡಾ. ಬೇರೊಂದು ಬಾಗಿಲು ಮುಚ್ಚಿ ಮುಸುಕಿಹುದು. ದಶಮದ್ವಾರವ ನೆರೆಹೆವೆಂದು ಬಾಗಿಲ ಮುಚ್ಚಹೋದಡೆ ತೆಗೆವವು. ತೆಗೆಯಹೋದಡೆ ಮುಚ್ಚುವವು ನೋಡಾ. ಈ ವರ್ಮಸಕೀಲವನರಿಯದೆ ಅತಿರಥರು ಮಹಾರಥರು ತೊಳಲಿ ಬಳಲುತೈದಾರೆ. ವೀರದ್ಥೀರಸುಭಟರುಗಳೆಲ್ಲಾ ಹೇಡಿಬಳೆಯಂ ತೊಟ್ಟು ಹೆಣ್ಣಾಗಿ ಹೋದರು. ಅರುಹಿರಿಯರೆಲ್ಲಾ ಮರುಳಾಗಿ ಮತಿಗೆಟ್ಟು ಹೋದರು. ಇದನಾರಯ್ಯಾ ಬಲ್ಲವರು ? ನೀವಿಕ್ಕಿದ ಕದವ ತೆಗೆಯಬಲ್ಲವರಾರೊ ಅಯ್ಯಾ ! ತೆಗೆಯದ ಕದವನಿಕ್ಕಬಲ್ಲವರಾರೊ ಅಯ್ಯಾ ! ಪದಪಂಕದಲ್ಲಿನ ದ್ವಾರಮಂ ಕಾಯ್ದಿಪ್ಪ ದಿಟ್ಟಿಯ ಕಡೆಗಣ್ಣಿನ ಬೆಳಗಿನೊಳಗಾಡುವ ಅವ್ಯಯ ಹರಿಬ್ರಹ್ಮಾದಿಗಳು ಮೊದಲಾದ ಸಚರಾಚರದವರನೆಲ್ಲ ನುಂಗಿತ್ತು ನೋಡಾ. ಇದನಾರಿಗೂ ಅರಿಯಬಾರದು ನೋಡಾ. ನೀವಿದ್ದಲ್ಲಿ ಇಲ್ಲದಿಪ್ಪ ಶರಣರಿಗಲ್ಲದೆ ಇದರ ಭೇದವ ಬಲ್ಲವ ಅಲ್ಲಮನು. ಕಾಮನ ಕಣ್ಣಿಗೆ ಮುಳ್ಳಬೆಟ್ಟದೊಡನೆ ಮುಟ್ಟದ ಕದವು ತೆಗೆದವು. ತೆಗೆದಿದ್ದ ಬಾಗಿಲು ತಮತಮಗೆ ಮುಚ್ಚಿದವು ನೋಡಾ. ಹೂಗಲ್ಲಿಗೆ ಕಿಚ್ಚನಿಕ್ಕಿ ಆ ಬಾಗಿಲ ಕಾಯ್ದಿಪ್ಪವಳ ಮೂಗ ಮೊಲೆಯ ಕೊಯ್ದು, ಸಾಗರದ ಕಟ್ಟೆಯ ಒಡೆದು, ದಶಮ ದ್ವಾರದಲ್ಲಿ ನಿಂದು, ನಿಮ್ಮ ಹೊತ್ತಿರ್ಪವಳ ನೆತ್ತಿಗಣ್ಣಿಂದ ತೆಗೆದು ನೋಡಿ, ಏಕಾದಶದ್ವಾರದ ಸೂತ್ರ ಸೂಕ್ಷ್ಮವಿನ್ನು ಮಹಾಬೆಳಗಿನೊಳಗೆ ಸಾಸಿವೆಯ ಛಿದ್ರವ ಮಾಡಿ ಕುಂಬಳದ ಕಾಯ ಕೀಲಕೊಟ್ಟಂತೆಯಿಪ್ಪ ನಿಜಗುರು ಭೋಗೇಶ್ವರ ನಿಮ್ಮ ಇರವು, ಪ್ರಭುವಿನ ಕರುಣವುಳ್ಳ ಲಿಂಗಾಂಗಿಗಳಿಗಲ್ಲದೆ ವಾಗದ್ವೈತದಿಂದ ಒಡಲ ಹೊರೆವ ಬಹುಭಾಷಿಗಳಿಗೆಂತು ಸಾಧ್ಯವಪ್ಪುದೊ ?
--------------
ಭೋಗಣ್ಣ
ರಸ ಉಂಬಲ್ಲಿ, ಗಂಧ ವಾಸಿಸುವಲ್ಲಿ, ರೂಪು ನಿರೀಕ್ಷಣೆಯಲ್ಲಿ, ಶಬ್ದ ಗೋಚರದಲ್ಲಿ, ಸ್ಪರ್ಶ ತ್ವಕ್ಕಿನಲ್ಲಿ, ಪಂಚಪುಟ ಭೇದಂಗಳಲ್ಲಿ, ಅಷ್ಟಗುಣ ಮದಂಗಳ ಪಟ್ಟಣದ, ಷೋಡಶದ ರೂಡ್ಥಿಯ ಷಡ್ಚಕ್ರದ ಆಧಾರದ, ಪಂಚವಿಂಶತಿಯ ನಿಳೆಯದ ಸಂಚಾರದ, ನವಕವಾಟದ, ತ್ರಿಶಕ್ತಿ ಸಂಪದದ, ತ್ರಿಗುಣಾತ್ಮನ ತ್ರಿಗುಣ ಓಹರಿಯಲ್ಲಿ ಬಳಸಿಪ್ಪ ಬಂಧದಲ್ಲಿ ಮಗ್ನವಾಗದೆ, ಜಾಗ್ರ [ಸ್ವಪ್ನ] ಸುಷುಪ್ತಿ ತ್ರಿವಿಧ ಘಟಪಟಲ ತತ್ವನಿರಸನ ನಿರ್ವಿಕಾರನಾಗಿ, ಇಂತಿವರಲ್ಲಿ ಅವಘಾನವಾಗಿ ಮುಳುಗದೆ, ನೀರನಿರಿದ ಕೈದಿನಂತೆ ಕಲೆದೋರದೆ, ಆವ ಸುಖಂಗಳಲ್ಲಿ ಅಬ್ಥಿನ್ನವಾಗಿ, ಜಲದೊಳಗಣ ಶಿಲೆ, ಶಿಲೆಯೊಳಗಣ ವಹ್ನಿ ಸುಳುಹುದೋರದ ತೆರ, ಮಥನಕ್ಕೆ ಕಂಡು, ಕಾಣದಡಗಿಪ್ಪ ತೆರ, ಲಿಂಗಾಂಗಿಯ ಇರವು. ಇದು ಸಿದ್ಧವಾಗಬೇಕು, ಶರೀರದ ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ. ಇದೇ ಅಂಜನಸಿದ್ಧಿ.
--------------
ಮನುಮುನಿ ಗುಮ್ಮಟದೇವ
ಸಹಭೋಜನವ ಮಾಡುವನ ಇರವು ಹೇಗೆಂದಡೆ: ದಗ್ಧಪಟದಂತೆ, ಮಂಜಿನ ರಂಜನೆಯ ವಾರಿಯ ಧೂಮದಂತೆ, ಒಡಲಿನ ಆತ್ಮನ ಭೇದದಂತಿರಬೇಕು. ಆಕಾಶದ ಸಾಕಾರದಲ್ಲಿ ತೋರುವ ನಾನಾ ಛಾಯದಂತೆ, ಒಂದು ವರ್ಣದಲ್ಲಿ ನಿಲ್ಲದೆ ತೋರುವ ತೋರಿಕೆಯಂತೆ, ಕಾಯದ ಛಾಯವ ತೊಟ್ಟಿದ್ದಲ್ಲಿ ಲಿಂಗಕ್ಕೂ ತನಗೂ ಸಹಭೋಜನ ಸಲವುದೆಂದೆ. ಅದು ಉರಿಯೊಳಗಳ ಕರ್ಪುರದಂತೆ, ಕರ್ಪುರದೊಳಗಳ ಉರಿಯಂತೆ. ಅನ್ಯಬ್ಥಿನ್ನವಿಲ್ಲದಿರಬೇಕು, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಭಕ್ತನಾದಲ್ಲಿ ಭಕ್ತಿಸ್ಥಲ ಅಳವಟ್ಟು. ಮಾಹೇಶ್ವರನಾದಲ್ಲಿ ಆ ಸ್ಥಲ ಅಳವಟ್ಟು. ಪ್ರಸಾದಿಯಾದಲ್ಲಿ ಆ ಸ್ಥಲ ಅಳವಟ್ಟು. ಪ್ರಾಣಲಿಂಗಿಯಾದಲ್ಲಿ ಆ ಸ್ಥಲ ಅಳವಟ್ಟು. ಶರಣನಾದಲ್ಲಿ ಆ ಸ್ಥಲ ಅಳವಟ್ಟು. ಐಕ್ಯನಾದಲ್ಲಿ ಆ ಸ್ಥಲ ಅಳವಟ್ಟು. ಆರು ಲೇಪವಾಗಿ, ಮೂರು ಮುಗ್ಧವಾಗಿ, ಒಂದೆಂಬುದಕ್ಕೆ ಸಂದಿಲ್ಲದೆ, ಲಿಂಗವೆ ಅಂಗವಾಗಿಪ್ಪ ಶರಣನ ಇರವು, ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ ತಾನು ತಾನಾದ ಶರಣ.
--------------
ಮನುಮುನಿ ಗುಮ್ಮಟದೇವ
ಪಾಷಾಣದುದಕ ಏತರಿಂದ ದ್ರವ ? ಪಾಷಾಣದ ಪಾವಕ ಅದೇತರಿಂದ ಕ್ರೋಧ ? ಅಪ್ಪುವಿನ ಸಂಚಾರದ ರೂಪು ಅದೇತರ ಒಪ್ಪದಿಂದ ? ಅರಿದರುಹಿಸಿಕೊಂಬ ಅರ್ಕೇಶ್ವರಲಿಂಗನ ಇರವು ಅದೇತರಿಂದ?
--------------
ಮಧುವಯ್ಯ
ವಿಶ್ವಾಸವಿಲ್ಲದವಂಗೆ ಭಕ್ತಸ್ಥಲವಿಲ್ಲ, ಗುರು ಭಕ್ತನಲ್ಲ. ವಿಶ್ವಾಸವಿಲ್ಲದವಂಗೆ ಮಾಹೇಶ್ವರಸ್ಥಲವಿಲ್ಲ, ಲಿಂಗ ಭಕ್ತನಲ್ಲ. ವಿಶ್ವಾಸವಿಲ್ಲದವಂಗೆ ಪ್ರಸಾದಿಸ್ಥಲವಿಲ್ಲ, ಜಂಗಮ ಭಕ್ತನಲ್ಲ. ವಿಶ್ವಾಸವಿಲ್ಲದವಂಗೆ ಪ್ರಾಣಲಿಂಗಿಸ್ಥಲವಿಲ್ಲ, ಸರ್ವ ವ್ಯವಧ್ಯಾನಿಯಲ್ಲ. ವಿಶ್ವಾಸವಿಲ್ಲದವಂಗೆ ಶರಣಸ್ಥಲವಿಲ್ಲ, ಆರೂಢಭಾವಿಯಲ್ಲ. ವಿಶ್ವಾಸವಿಲ್ಲದವಂಗೆ ಐಕ್ಯಸ್ಥಲವಿಲ್ಲ, ಸರ್ವಲೇಪನಲ್ಲ. ಇಂತೀ ಷಟ್‍ಸ್ಥಲಸಂಬಂಧ. ಗುರುವಿನಲ್ಲಿ ಶ್ರದ್ಧೆ, ಲಿಂಗದಲ್ಲಿ ಅಬ್ಥಿನ್ನನಲ್ಲದೆ ಜಂಗಮದಲ್ಲಿ ಮನೋಮೂರ್ತಿಯಾಗಿಪ್ಪುದೆ ಸರ್ವಾಂಗಲಿಂಗಸಂಬಂಧದ ಇರವು ಸಂಗನಬಸವಣ್ಣಪ್ರಿಯ ಬ್ರಹ್ಮೇಶ್ವರಲಿಂಗದಲ್ಲಿ.
--------------
ಬಾಹೂರ ಬೊಮ್ಮಣ್ಣ
ಅಸಿಯಾಗಲಿ ಕೃಷಿಯಾಗಲಿ, ವಾಚಕ ವಾಣಿಜ್ಯ ಮಸಿಯಾಗಲಿ, ಮಾಡುವಲ್ಲಿ ಹುಸಿಯಿಲ್ಲದಿರಬೇಕು. ಅದು ಅಸಮಾಕ್ಷನ ಬರವು, ಪಶುಪತಿಯ ಇರವು, ಐಘಟದೂರ ರಾಮೇಶ್ವರಲಿಂಗ ತಾನೆ.
--------------
ಮೆರೆಮಿಂಡಯ್ಯ
ರುದ್ರ ದೈವವಾದಡೆ ಕಪಾಲವ ಹೊತ್ತು ತಿರುಗಲೇಕೆ? ವಿಷ್ಣು ದೈವವಾದಡೆ ದಶಾವತಾರಕ್ಕೊಳಗಾಗಲೇಕೆ? ಬ್ರಹ್ಮ ದೈವವಾದಡೆ ಶಿರವ ಹೋಗಾಡಲೇಕೆ? ಇಂತೀ ಮೂರು ಅಳಿವಿಂಗೊಳಗು. ಅನಾದಿ ಚಿಚ್ಛಕ್ತಿಯ ಅಂಶೀಭೂತ ಮಾಯಿಕ ಸಂಬಂಧ ದೇಹಿಕರು; ಅವತಾರಮೂರ್ತಿಗಳಾದ ರಣಜಗದ ದೈವಂಗಳಿವರು. ಇವರ ಭೇದ ದರ್ಪಣದ ಒಳ ಹೊರಗಿನಂತಪ್ಪ ಭೇದ. ನಿಶ್ಚಯವಂತರು ತಿಳಿದು ನೋಡಿರಣ್ಣಾ, ತಿಳಿದಡೆ ಇರವು ಉದಕದೊಳಗಣ ವಿಕಾರದಂತೆ ಬಯಲೊಳಗಣ ಮರೀಚಿಯಂತೆ ಹಿಂಗದ ವಸ್ತು ನಾರಾಯಣಪ್ರಿಯ ರಾಮನಾಥನಲ್ಲಿ ಗುಣವಿರಹಿತ ಶರಣಂಗೆ.
--------------
ಗುಪ್ತ ಮಂಚಣ್ಣ
ಒಂದು ಪಕ್ಷಿಗೆ ಐದು ತಲೆ, ಶಿರವೊಂದರಲ್ಲಿಯೆ ಮೂಡಿತ್ತು ನೋಡಾ. ಒಡಲು ಒಂದಾಯಿತ್ತು, ಬಣ್ಣ ಹದಿನಾರಾಯಿತ್ತು. ಅದರ ಚಂದ ಇಪ್ಪತ್ತೈದಾಯಿತ್ತು, ಹುಟ್ಟಿದ ಗರಿ ನೂರೊಂದಾಯಿತ್ತು. ಆ ಹಕ್ಕಿಯ ಜೀವವಿದ್ದಂತೆ ಕೊಂದು, ಸುಡದ ಬೆಂಕಿಯಲ್ಲಿ ಸುಟ್ಟು, ತಲೆಯಿಲ್ಲದ ಕಣ್ಣಿನಲ್ಲಿ ನೋಡಿ, ಬಾಯಿಲ್ಲದ ನಾಲಗೆಯಲ್ಲಿ ಸವಿದು, ಸವಿವುದಕ್ಕೆ ಮೊದಲೆ ರುಚಿಯನರ್ಪಿತವ ಮಾಡಿದ ಜ್ಞಾನಜಂಗಮವ ನೋಡಾ. ಆತನ ಇರವು ತುರುಬೊ? ಜಡೆಯೊ? ಅರಿಯಬಾರದಣ್ಣಾ. ಎಣ್ಣೆ ಕೊಂಡ ಮಣ್ಣಿನಂತೆ, ಅನಲ ಕೊಂಡ ದ್ರವ್ಯದಂತೆ, ಕುಸುಮ ಕೊಂಡ ಮಣ್ಣಿನಂತೆ, ಅನಲ ಕೊಂಡ ದ್ರವ್ಯದಂತೆ, ಕುಸುಮಕೊಂಡ ಗಂಧದಂತೆ, ರಸ ಕೊಂಡ ಪಾಷಾಣದಂತೆ, ಹೆಸರಿಡಬಾರದಯ್ಯಾ, ಆ ಜಂಗಮದಿರವ. ಆ ಜಂಗಮ ಬಂದು ಎನ್ನ ಹುಳ್ಳಿಯಂ ಬಿಡಿಸಿ, ತಳ್ಳಿಯಂ ಹರಿದು, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ತಲ್ಲೀಯವಾದ.
--------------
ಮೋಳಿಗೆ ಮಾರಯ್ಯ
ಪೂರ್ವವನಳಿದು ಪುನರ್ಜಾತನಾದ ಮತ್ತೆ ಜಾತತ್ವ ಅಳವಟ್ಟು ಆ ಗುರುಮೂರ್ತಿಯ ಇರವು ತಾನಾದ ಮತ್ತೆ ಹಿಂದ ಮೆಟ್ಟಲಿಲ್ಲ. ಬಂಧುಗಳೆಂದು, ಕೊಂಡ ಕೊಟ್ಟ ಬೆಂಬಳಿಯವರೆಂದು, ತಂದೆ ತಾಯಿ ಒಡಹುಟ್ಟಿದವರ. ಹಿಂದ ನೆನೆವನಿಗೇಕೆ ಗುರುಸ್ಥಲದ ಸಂಪತ್ತಿನಿರವು ಮಾತಾ ಉಮೆ ಪಿತಾ ಶಿವ ಶಿವಭಕ್ತ ಬಾಂಧವರಾದಲ್ಲಿ, ಅವರೊಳಗೆ ಒಬ್ಬರಿವರೆಂದು ವಿಶೇಷವ ಕಾಣದೆ ಕಾಬುದುಗುರುಸ್ಥಲ. ಹಾಗಲ್ಲದೆ ಹಿಂದಣ ತೂತಿನವರೆಂದು ಬದ್ದುದ ಮಾಡಿ, ಮುಂದಣ ತೂತಿಂಗೀಡುಮಾಡುವ ಭಂಡಂಗೇಕೆ ಗಾಂಬ್ಥೀರದ ಇರವು ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಪದವನರಿಯದ ವಾಚಕ, ಘಾತಕನ ಇರವು ಪುಸಿ ಧನುವಿನಲ್ಲಿ ಸಿಕ್ಕಿದ ಮಿಸುಕಿದ ಕಣೆಯಂತೆ, ಹುಸಿದವನ ಒಡಲಿನ ಪ್ರತಿಮೂದಲೆಯಂತೆ. ಇಂತೀ ಅರಿವಿನ ಒಳಗನರಿಯದ ಜೂಜಿನ ಹುದುಗಿಂಗೆ ಬಂದು, ಸುರಿಗಾಯ ಸುರಿವವನ ವಿದ್ಥಿಯಂತೆ, ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
ಮಧುರವ ಕೂಡಿದ ಜಲವ ತೆಗೆದು ಬ್ಥಿನ್ನವ ಮಾಡಬಹುದೆ ಅಯ್ಯಾ ? ಘಟವ ಹೊದ್ದಿದ ಬೆಳಗ ಪ್ರಕಟಿಸಬಹುದೆ ಅಯ್ಯಾ ? ಇಂತೀ ಉಭಯದ ತೆರದಂತೆ ಪ್ರಾಣಲಿಂಗಿಯ ಸಂಬಂಧದ ಇರವು. ಮಾತಿನ ಮಾಲೆಯಿಂದ, ನೀತಿಯಲ್ಲಿ ಕಾಬ ವಾದದಿಂದ, ಇಂತಿವರಿಗೇತಕ್ಕೊಲಿವ, ನಿಃಕಳಂಕ ಮಲ್ಲಿಕಾರ್ಜುನ ?
--------------
ಮೋಳಿಗೆ ಮಾರಯ್ಯ
ಮರನುರಿದು ಬೆಂದು ಕರಿಯಾದ ಮತ್ತೆ ಉರಿಗೊಡಲಾದುದ ಕಂಡು, ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ. ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ, ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ, ಉರಿಯೊಳಗೊಡಗೂಡಿದ ತಿಲಸಾರ ತುಪ್ಪ ಮರಳಿ ಅಳೆತಕ್ಕುಂಟೆ ? ವಸ್ತುವಿನಲ್ಲಿ ಕರಿಗೊಂಡ ಚಿತ್ತ, ತ್ರಿವಿಧಮಲಕ್ಕೆ ಹೊರಳಿ ಮರಳುವದೆ ? ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು, ಗಾರುಡೇಶ್ವರಲಿಂಗವ ಕೂಡಿದವನ ಕೂಟ.
--------------
ಉಪ್ಪರಗುಡಿಯ ಸೋಮಿದೇವಯ್ಯ
ಇನ್ನಷ್ಟು ... -->