ಅಥವಾ

ಒಟ್ಟು 88 ಕಡೆಗಳಲ್ಲಿ , 31 ವಚನಕಾರರು , 73 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಸವಣ್ಣನ ಪ್ರಸಾದದಿಂದ ಭಕ್ತಿಜ್ಞಾನ ವೈರಾಗ್ಯ ಸಂಪನ್ನನಾದೆನಯ್ಯ. ಚೆನ್ನಬಸವಣ್ಣನ ಪ್ರಸಾದದಿಂದ ಷಟ್‍ಸ್ಥಲಜ್ಞಾನಸಂಪನ್ನನಾದೆನಯ್ಯ. ಪ್ರಭುದೇವರ ಪ್ರಸಾದದಿಂದ ಪರಶಿವತತ್ವಸ್ವರೂಪವೇ ಎನ್ನ ಸ್ವರೂಪವೆಂದರಿದು ಸಮಸ್ತ ಸಂಸಾರಪ್ರಪಂಚ ಕೊಡಹಿದೆನು ನೋಡಾ. ನೀಲಲೋಚನೆಯಮ್ಮನ ಪ್ರಸಾದದಿಂದ ನಿಜಲಿಂಗೈಕ್ಯನಾದೆನಯ್ಯ. ಮಹಾದೇವಿಯಕ್ಕಗಳ ಪ್ರಸಾದದಿಂದ ಸುತ್ತಿದ ಮಾಯಾಪಾಶವ ಹರಿದು ನಿರ್ಮಾಯನಾಗಿ ನಿರ್ವಾಣಪದದಲ್ಲಿ ನಿಂದೆನಯ್ಯ. ಸಿದ್ಧರಾಮಯ್ಯನ ಪ್ರಸಾದದಿಂದ ಶುದ್ಧ ಶಿವತತ್ವವ ಹಡೆದೆನಯ್ಯ. ಮೋಳಿಗೆಯ ಮಾರಿತಂದೆಗಳ ಪ್ರಸಾದದಿಂದ ಕಾಯದ ಕಳವಳನಳಿದು ಕರ್ಮನಿರ್ಮಲನಾಗಿ ವೀರಮಾಹೇಶ್ವರನಾದೆನು ನೋಡಾ. ಇವರು ಮುಖ್ಯವಾದ ಏಳುನೂರೆಪ್ಪತ್ತುಮರಗಣಂಗಳ ಪರಮಪ್ರಸಾದದಿಂದ ಎನ್ನ ಕರಣಂಗಳೆಲ್ಲವು ಲಿಂಗಕರಣಂಗಳಾಗಿ ಕರಣೇಂದ್ರಿಯಂಗಳ ಕಳೆದುಳಿದು ಇಂದ್ರಿಯಂಗಳಿಗೆ ನಿಲುಕದ ಸ್ಥಾನದಲ್ಲಿರ್ದು ಪರಮಾನಂದ ಪ್ರಭಾಮಯನಾಗಿರ್ದೆನು ನೋಡಾ. ನಿಮ್ಮ ಶರಣರ ಪ್ರಸಾದದಿಂದ ನಾನು ಪ್ರಸಾದಿಯಾಗಿರ್ದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸನಕ ಸನಂದಾದಿ ಮುನಿಜನಂಗಳೆಲ್ಲರೂ, ಭಸ್ಮಾಂಗಿಗಳೆಲ್ಲರೂ_ ಇವರು ಸತ್ಯರೆಂಬುದು ಹುಸಿ, ನಿತ್ಯರೆಂಬುದು ಹುಸಿ, ಸತ್ತರೆಂಬುದು ದಿಟ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಶಿವಶಿವಾ, ಈ ಲೋಕದ ಮಾನವರನೇನೆಂಬೆನಯ್ಯಾ. ಅದೆಂತೆಂದಡೆ: ನಾವು ಗುರುಗಳು, ನಾವು ಲಿಂಗಾಂಗಿಗಳು, ನಾವು ಜಂಗಮಲಿಂಗಿಗಳು, ನಾವು ಸದಾಚಾರಸದ್ಭಕ್ತರು ಎಂಬರಯ್ಯ. ಇಂತಿವರ ನಡತೆ ಆಚರಣೆಯೆಂತಾಯಿತೆಂದಡೆ: ಒಬ್ಬಾನೊಬ್ಬ ಜಾತಿಹಾಸ್ಯಗಾರನು ವೇಷವ ಧರಿಸಿಕೊಂಡು ಪುರಜನರ ಮೆಚ್ಚಿಸಿ, ತನ್ನ ಒಡಲಹೊರವಂತೆ, ವಿಭೂತಿ ರುದ್ರಾಕ್ಷಿ ಕಾವಿ ಕಾಷಾಂಬರ ಮುಂತಾಗಿ ವೇಷವ ಧರಿಸಿ, ಗುರು-ಹಿರಿಯರು ಜಂಗಮಲಿಂಗಿಗಳೆಂದು ನಾಮವ ತಾಳಿ, ಭಕ್ತರಿಗೆ ಸದಾಚಾರಮಾರ್ಗವ ಹೇಳೇವು, ಸದಮಲದ ಬೆಳಗ ತೋರೇವು ಎಂದು ಧನಿಕರಿದ್ದೆಡೆಗೆ ಬಂದು, ನಿಮಗೆ ಉಪದೇಶವ ಹೇಳಿ, ಲಿಂಗಾಂಗಸಮರಸವ ತೋರಿ, ಮಾಂಸಪಿಂಡವಳಿದು ಮಂತ್ರಪಿಂಡವ ಮಾಡೇವು ಎಂದು ಹೇಳಿ, ಆ ಭಕ್ತರ ಕೈಯಲ್ಲಿ ಅನ್ನ ಹಚ್ಚಡ ಹೊನ್ನು ವಸ್ತ್ರವ ತೆಗೆದುಕೊಂಡು ಆ ಜಾತಿಕಾರನ ಹಾಗೆ ಇವರು ತಮ್ಮ ಉದರಾಗ್ನಿ ಅಡಗಿಸಿಕೊಂಬುವರಲ್ಲದೆ ಇಂತಪ್ಪ ಗುರು-ಶಿಷ್ಯರ, ದೇವ-ಭಕ್ತರೆಂಬುಭಯರ ಆಚರಣೆಯೆಂತಾಯಿತ್ತೆಂದೊಡೆ- ಹಂದಿಯ ಬಾಯೊಳಗಿನ ತುತ್ತ ನಾಯಿ ಬಂದು ಕಚ್ಚಿದಂತೆ. ಅದೆಂತೆಂದೊಡೆ: ಜೀವನಬುದ್ಭಿಯುಳ್ಳ ಗುರುವೆಂದಾತ ಹಂದಿ, ಕರಣಬುದ್ಧಿಯುಳ್ಳ ಶಿಷ್ಯನೆಂಬಾತ ನಾಯಿ. ಇಂತಪ್ಪ ಗುರು-ಶಿಷ್ಯರ ಸಮ್ಮೇಲನವು ಹುಟ್ಟುಗುರುಡನ ಕೈಯ ಕಟ್ಟಿ ಲೊಟ್ಟಿಗಣ್ಣವ ಪಿಡಿದು ಕಾಣದೆ ಕಮ್ಮರಿಬಿದ್ದಂತಾಯಿತಯ್ಯ. ಅದೇನು ಕಾರಣವೆಂದಡೆ, ಗುರುವಿನಂತ ಶಿಷ್ಯನರಿಯ, ಶಿಷ್ಯನಂತ ಗುರುವರಿಯ, ಜಂಗಮನಂತ ಭಕ್ತನರಿಯ, ಭಕ್ತನಂತ ಜಂಗಮವರಿಯದ ಕಾರಣ. ಉಪಾದ್ಥಿಯುಳ್ಳವರು ಗುರುವಲ್ಲ ಶಿಷ್ಯರಲ್ಲ. ಉಪಾದ್ಥಿಯುಳ್ಳವರಲ್ಲಿ ಉಪದೇಶವ ಹಡಿಯಬೇಕೆಂಬವರ, ಉಪಾದ್ಥಿಯುಳ್ಳವರಿಗೆ ಉಪದೇಶವ ಹೇಳಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಸೂರ್ಯಚಂದ್ರರು ಅಳಿದುಹೋಗುವ ಪರಿಯಂತರವು ಹಂದಿ ನಾಯಿಯ ನರಕದಲ್ಲಿಕ್ಕದೆ ಬಿಡನೆಂದಾತ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ತನ್ನ ತಾ ಬೀಳುವರ ಕಂಡು ತಳ್ಳಿ ಹಗೆಯಾಗಲೇಕೆ? ಒಡೆದುದ ಕಂಡು ಒಡಯಿರಿಯಲೇಕೆ? ಇಂತೀ ಬಿಡುಮುಡಿಯನರಿಯದೆ ಒಡೆಯರೆಂದು ಕೊಡುವರ ಕಾಲ ಪಡಿಗಕ್ಕೆ ಇವರು ಹೆಸರೊಡೆಯರಲ್ಲದೆ ಅಸಮಾಕ್ಷರಲ್ಲ. ಇಂತೀ ಗಸಣಿಗಿನ್ನೇವೆ, ಕಣ್ಣಯ್ಯಪ್ರಿಯ ಗೊಹೇಶ್ವರನ ಶರಣ ಅಲ್ಲಮಾ.
--------------
ಗಾಣದ ಕಣ್ಣಪ್ಪ
ಬ್ರಹ್ಮ ಕುಮಾರ, ವಿಷ್ಣು ಅಬಳ, ಲೆಕ್ಕವಿಲ್ಲದ ರುದ್ರರು ನೋಡಾ. ದೇವರ್ಕಳೆಲ್ಲಾ ಗರ್ವದಲೈದಾರೆ, ಅವರೆತ್ತಬಲ್ಲರು ಶಿವನಾದಿಯಂತುವ? ಶಾಶ್ವತಪದಕ್ಕೆ ಸಲ್ಲದ ಕಾರಣ, ಇವರು ವೇಷಧಾರಿಗಳೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಮನಶುದ್ಧವಾಗಿ ಮಜ್ಜನಕ್ಕೆರೆದರೆ ಭಾವ ಮತ್ತೇಕಯ್ಯಾ ? ಪತ್ರ ಪುಷ್ಪ ರಂಗವಲ್ಲಿಯನಿಕ್ಕಲೇನು, ಭಿತ್ತಿಯ ಚಿತ್ತಾರವೆ ? ಅವರು ಕಾಣಬೇಕು, ಇವರು ಕಾಣಬೇಕೆಂಬ ಭ್ರಮೆಯ ಭ್ರಮಿತರು ಅಂಗಹೀನರು. ಮನದಂಗವನಗಲರು, ಲಿಂಗ ಮತ್ತೆಲ್ಲಿಯದೋ ? ಸದಮದವಳಿದು ನಿಜವನರಿದಡೆ ಲಿಂಗಕ್ಕೆ ಪೂಜೆ ಕಂಡಾ, ಕೂಡಲಚೆನ್ನಸಂಗಯ್ಯ ಸಾಹಿತ್ಯನಾಗಿಹನು.
--------------
ಚನ್ನಬಸವಣ್ಣ
ಅಂಗವ ಮಾರಿಕೊಂಡು ಉಂಬಾತನೊಬ್ಬ ಠಕ್ಕ. ಲಿಂಗವ ಮಾರಿಕೊಂಡು ಉಂಬಾತನೊಬ್ಬ ಠಕ್ಕ. ಜಂಗಮವ ತೋರಿಕೊಂಡು ಉಂಬಾತನೊಬ್ಬ ಠಕ್ಕ. ಇವರು ಮೂವರು ಕಂಗಳು ಕಾಲು ಹೋದವರ ಸಂಗದಂತೆ, ಲಿಂಗ ಜಂಗಮಕ್ಕೆ ದೂರ, ನಮ್ಮ ಶರಣರ ಸಂಗಸುಖಕ್ಕೆ ಸಲ್ಲರು ನೋಡಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಶರಣರಿಗೆ ಭವವುಂಟೆಂದು ಮತ್ರ್ಯದಲ್ಲಿ ಹುಟ್ಟಿದ ಭವಭಾರಿಗಳು ನುಡಿದಾಡುವರು. ತಮ್ಮ ಹುಟ್ಟ ತಾವರಿಯರು, ತಾವು ಮುಂದೆ ಹೊಂದುವದನರಿಯರು. ಇವರು ಬಂದ ಬಂದ ಭವಕ್ಕೆ ಕಡೆಮೊದಲಿಲ್ಲ . ಇಂತಪ್ಪ ಸಂದೇಹಿಗಳು ನಮ್ಮ ಶರಣರ ಹುಟ್ಟ ಬಲ್ಲೆನೆನಬಹುದೆ ? ತನ್ನ ನರಿದವನಲ್ಲದೆ ಇದಿರನರಿಯರು. ಈ ಉದರಪೋಷಕರೆಲ್ಲರೂ ಇದ ಬಲ್ಲೆನೆಂಬುದು ಹುಸಿ. ಇದ ಬಲ್ಲವರು ಬಲ್ಲರಲ್ಲದೆ, ಸೊಲ್ಲಿಗಭೇದ್ಯನ ನಾನೆತ್ತ ಬಲ್ಲೆ ? ಎನ್ನ ಗುರು ಚೆನ್ನಮಲ್ಲೇಶ್ವರನೇ ಬಲ್ಲ . ಇನ್ನು ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣನೆ ಬಲ್ಲ .
--------------
ಹಡಪದ ಅಪ್ಪಣ್ಣ
ಸೂಳೆಯ ತನುಮನದ ಕೊನೆಯಲ್ಲಿ ವಿಟಗಾರನೇ ಪ್ರಾಣಲಿಂಗ; ಶೀಲವಂತನ ತನುಮನದ ಕೊನೆಯಲ್ಲಿ ಭವಿಯೇ ಪ್ರಾಣಲಿಂಗ ; ನಿತ್ಯ ಪ್ರಸಾದಿಯ ತನುಮನದ ಕೊನೆಯಲ್ಲಿ ಬೆಕ್ಕೇ ಪ್ರಾಣಲಿಂಗ ; ಬ್ರಾಹ್ಮಣರ ತನುಮನದ ಕೊನೆಯಲ್ಲಿ ಸೂತಕವೇ ಪ್ರಾಣಲಿಂಗ; ಇಂಥವರಿಗೆಲ್ಲಾ ಇಂತಾಯಿತು! ದೇವರಗುಡಿಯೆಂದು ದೇಗುಲವ ಪೊಕ್ಕು ನಮಸ್ಕಾರವ ಮಾಡುವಂಗೆ ಹೊರಗೆ ಕಳೆದ ಪಾದರಕ್ಷೆಯೆ ಪ್ರಾಣಲಿಂಗ. ಅದು ಎಂತೆಂದಡೆ : ಸೂಳೆಗೆ ವಿಟನ ಹಂಬಲು; ಶೀಲವಂತನಿಗೆ ಭವಿಯ ಹಂಬಲು; ನಿತ್ಯಪ್ರಸಾದಿಗೆ ಬೆಕ್ಕಿನ ಹಂಬಲು ; ಬ್ರಾಹ್ಮಣನಿಗೆ ಸೂತಕದ ಹಂಬಲು ; ಇವರು ಭಕ್ತಿಶೂನ್ಯರು ಕಾಣಿರಯ್ಯಾ ! ಇವಂ ಬಿಟ್ಟು, ಪರಸ್ತ್ರೀಯರ ಮುಟ್ಟದಿರ್ಪುದೇ ಶೀಲ ; ಪರದ್ರವ್ಯ[ವ]ಅಪಹರಿಸದಿರುವುದೇ ಆಚಾರ ; ಪರನಿಂದೆ[ಯ] ಕರ್ಣದಿಂ ಕೇಳದಿರ್ಪುದೇ ನಿತ್ಯಪ್ರಸಾದತ್ವ ; ಪರರಂ ದೂಷಿಸದಿರ್ಪುದೇ ಬ್ರಹ್ಮತ್ವ. ಇಂತಿದರಲ್ಲಿ ನಡೆದು, ದೇವರಿಗೆ ನಮಸ್ಕಾರವ ಮಾಡುವುದೇ ನಮಸ್ಕಾರ. ಹಿಂದಿನ ಪುರಾತನರು ನಡೆದರೆಂಬೋ ಶಾಸ್ತ್ರವಂ ಕೇಳಿ, ಈಗಿನ ಕಿರಾತರು 'ನಾವು ಶೀಲವಂತರು' 'ನಾವು ಆಚಾರವಂತರು', 'ನಾವು ನಿತ್ಯಪ್ರಸಾದಿಗಳು', 'ನಾವು 1[ 'ಪೂಜಸ್ಥರು']1, 'ನಾವು ಬ್ರಾಹ್ಮಣರು', ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ !
--------------
ಕೂಡಲಸಂಗಮೇಶ್ವರ
ವನಾಂತರದಲ್ಲಿ ಕೋಗಿಲೆ ಸ್ವರಗೈದಿತೆಂದು ಕುಂಬ್ಥಿನಿಯ ಮೇಲೆ ಕಾಗಿ ತಾ ಕರೆದಂತೆ, ಅರಸಿ ಮಂಚವನೇರಿದಳೆಂದು ಕಸ ನೀರು ಹೊರುವ ದಾಸಿ ತಾ ಹೊರಸನೇರುವಂತೆ, ಮಹಾರಾಜಕುಮಾರನು ಆನೆಯನೇರಿದನೆಂದು ಮಣ್ಣು ಹೊರುವ ಉಪ್ಪರಿಗನಮಗ ತಾ ಕೋಣ[ನ]ನೇರುವಂತೆ, ಮಹಾವೀರಕುಮಾರ ಮಹಾತೇಜಿಯನೇರಿದನೆಂದು ಮೈಲಿಗೆಯ ತೊಳೆಯುವ ಮಡಿವಾಳನಮಗ ತಾ ಮೋಳಿಗೆಯ ಹೇರುವ ಕತ್ತೆಯನೇರುವಂತೆ, ಬಾಲಹನುಮನು ಲಂಕೆಗೆ ಹಾರಿದನೆಂದು ಒಂದು ಮರುಳಕೋತಿ ತಾ ಪರ್ವತವನೇರಿ ಕೆಳಕ್ಕೆ ಬಿದ್ದಂತೆ, ಮಹಾಮಲೆಯೊಳಗೆ ಒಂದು ಮಹಾವ್ಯಾಘ್ರನು ಘುಡುಘುಡಿಸಿ ಲಂಘಿಸಿ ಒಂದು ಪಶುವಿಗೆ ಹಾರಿತೆಂದು ಮಹಾ ಶೀಗರಿಮೆಳೆಯೊಳಗೊಂದು ಮರುಳ ನರಿ ತಾ ಒದರಿ ಹಲ್ಲು ಕಿಸಿದು ಕಣ್ಣು ತೆರೆದೊಂದು ಇಲಿಗೆ ತಾ ಲಂಘಿಸಿ ಹಾರುವಂತೆ. ಇಂತೀ ದೃಷ್ಟಾಂತದಂತೆ ಆದಿ ಆನಾದಿಯಿಂದತ್ತತ್ತಲಾದ ಘನಮಹಾಲಿಂಗದೊಳಗೆ ಜ್ಯೋತಿ ಜ್ಯೋತಿ ಕೂಡಿದಂತೆ, ಬೆರಸದ ಶಿವಶರಣರು ಹಾಡಿದ ವಚನವ ಶಿವಾಂಶಿಕರಾದ ಸಜ್ಜೀವಾತ್ಮರು ಹಾಡಿ ನಿರ್ವಯಲಾದರೆಂದು ತ್ರಿಭುವನ ಮೊದಲಾದ ಚತುರ್ದಶಭುವನದಲ್ಲಿರುವ ದೇವ ದಾನವ ಮಾನವರು ಮೊದಲಾದ ಜೀವಾತ್ಮರು ಇಟ್ಟೆಯ ಹಣ್ಣ ನರಿ ತಾ ತಿಂದು ಪಿಟ್ಟೆಸಿಕ್ಕು ಬಾಯಿತೆರೆದು ಒದರುವಂತೆ ಏಕಲಿಂಗ ನಿಷ್ಠಾಪಾರಿಗಳ ವಚನವ ಮಲತ್ರಯವೆಂಬ ಇಟ್ಟೆಯಹಣ್ಣ ತಿಂದು ಪಿಟ್ಟೆಸಿಕ್ಕು ಬಾಯಿ ತೆರೆದು ಬೇನೆಹಾಯ್ದ ಕುರಿಯಂತೆ ಒದರಿ ಒದರಿ ಸತ್ತು ಭವದತ್ತ ಮುಖವಾಗಿ ಹೋದರಲ್ಲದೆ ಇವರು ಲಿಂಗೈಕ್ಯಗಳಾಗಲರಿಯರು ನೋಡೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹತ್ತಕ್ಕೆ ನೀಡಿ ಹನ್ನೊಂದಕ್ಕೆ ನೀಡದಾತ ಭಕ್ತನೇ? ಅಲ್ಲಲ್ಲ. ಭಿಕ್ಷವ ಕೊಡುವಲ್ಲಿ ಮುಖವ ನೋಡಿ ಕೊಡುವಾತ ಭಕ್ತನೇ? ಅಲ್ಲಲ್ಲ. ಗಣಾರಾಧನೆಯ ಮಾಡಿದಲ್ಲಿ ಒಳಗೊಂದು ಹೊರಗೊಂದು ನೀಡುವಾತ ಭಕ್ತನೇ? ಅಲ್ಲಲ್ಲ. ಅದೇನು ಕಾರಣವೆಂದರೆ ಇವರು ತಾಮಸಭಕ್ತರು. ಇಂತಪ್ಪ ತಾಮಸಭಕ್ತರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಂದೀಶ್ವರ, ಭೃಂಗೀಶ್ವರ, ವೀರಭದ್ರ, ದಾರುಕ, ರೇಣುಕ, ಶಂಖುಕರ್ಣ, ಗೋಕರ್ಣ, ಏಕಾಕ್ಷರ, ತ್ರಯಕ್ಷರ, ಪಂಚಾಕ್ಷರ, ಷಡಕ್ಷರ, ಸದಾಶಿವ, ಈಶ್ವರ, ಮಹೇಶ್ವರ, ರುದ್ರ, ಘಂಟಾಕರ್ಣ, ಗಜಕರ್ಣ, ಏಕಮುಖ, ದ್ವಿಮುಖ, ತ್ರಿಮುಖ, ಚತುರ್ಮುಖ, ಪಂಚಮುಖ, ಷಣ್ಮುಖ, ಶತಮುಖ, ಸಹಸ್ರಮುಖ ಮೊದಲಾದ ಗಣಾಧೀಶ್ವರರು ಇವರು, ನಿತ್ಯಪರಿಪೂರ್ಣವಹಂಥ ಪರಶಿವತತ್ವದಲ್ಲಿ ಜ್ಯೋತಿಯಿಂದ ಜ್ಯೋತಿ ಉದಿಸಿದಂತೆ ಉದಯಿಸಿದ ಶುದ್ಧ ಚಿದ್ರೂಪರಪ್ಪ ಪ್ರಮಥರು. ಅನಾದಿಮುಕ್ತರಲ್ಲ, ಅವಾಂತರಮುಕ್ತರೆಂಬ ನಾಯ ನಾಲಗೆಯ ಹದಿನೆಂಟು ಜಾತಿಯ ಕೆರಹಿನಟ್ಟಿಗೆ ಸರಿಯೆಂಬೆ. ಆ ಶ್ವಾನಜ್ಞಾನಿಗಳಪ್ಪವರ ಶೈವಪಶುಮತವಂತಿರಲಿ, ಅವರಾಗಮವಂತಿರಲಿ. ನಿಮ್ಮ ಶರಣರಿಗೆ, ನಿಮಗೆ, ಬೇರೆ ಮಾಡಿ ಸಂಕಲ್ಪಿಸಿ ನುಡಿವ ಅಜ್ಞಾನಿ ಹೊಲೆಯರ ಎನಗೊಮ್ಮೆ ತೋರದಿರಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕೇಳು ಕೇಳಾ, ಎಲೆ ಅಯ್ಯಾ, ಬಸವಣ್ಣನು ಅನಿಮಿಷಂಗೆ ಲಿಂಗವ ಕೊಟ್ಟ ಕಾರಣ ಮತ್ರ್ಯಕ್ಕೆ ಬಂದೆನೆಂಬರು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ ಜೈನ ಚಾರ್ವಾಕ ಕಾಳಾಮುಖ ಎನಿಸುವ ಷಡ್ದರ್ಶನಾಗಳು ಹೆಚ್ಚಿ, ವಿಭೂತಿ ರುದ್ರಾಕ್ಷಿ ಪಂಚಾಕ್ಷರವನರಿಯದೆ ನರಕಕ್ಕೆ ಭಾಜನವಾಗಿ ಪೋಪರೆಂದು, ದೇವರು ನಂದಿಕೇಶ್ವರನ ಮುಖವ ನೋಡಲು, ಆ ಪ್ರಶ್ನೆಯಿಂದ ಬಂದನಯ್ಯಾ ಬಸವಣ್ಣ ಪರಹಿತಾರ್ಥನಾಗಿ. ದೇವರು ದೇವಿಯರಿಗೆ ಪ್ರಣವಾರ್ಥವ ಬೋಧಿಸುವಾಗ ದೇವಿಯರ ಮುಡಿಯಲ್ಲಿ ಹೊನ್ನ ತುಂಬಿಯಾಗಿ ಷಣ್ಮುಖ ಕೇಳಿದ ಪ್ರಶ್ನೆಯಿಂದ ಬಂದನೆಂಬರಯ್ಯಾ, ಚೆನ್ನಬಸವಣ್ಣನು. ಸಟೆ ಸಟೆ! ಆ ನುಡಿಯ ಕೇಳಲಾಗದು. ಅದೇನು ಕಾರಣವೆಂದಡೆ: ಷಡ್ವಿಧಸ್ಥಲಕ್ಕೆ ಸ್ಥಾಪನಾಚಾರ್ಯನಾಗಿ ಸಕಲ ಪ್ರಮರ್ಥರ್ಗೆ ವೀರಶೈವವ ಪ್ರತಿಷೆ*ಯ ಮಾಡಲೋಸ್ಕರ ಬಂದನಯ್ಯಾ ಚೆನ್ನಬಸವಣ್ಣನು. ದೇವರ ಸಭೆಯಲ್ಲಿ ನಿರಂಜನನೆಂಬ ಗಣೇಶ್ವರನು ಮಾಯಾಕೋಳಾಹಳನೆಂದು ಹೊಗಳಿಸಿಕೊಂಡು ಬರಲಾಗಿ ಆ ಸಮಯದಲ್ಲಿ ದೇವಿಯರು ದೇವರ ಮಾಯಾಕೋಳಾಹಳನಾದ ಪರಿಯಾವುದೆಂದು ಬೆಸಗೊಳಲು, ಆ ಪ್ರಶ್ನೆಯಿಂದ ಪ್ರಭುದೇವರು ಮತ್ರ್ಯಕ್ಕೆ ಬಂದರೆಂಬರಯ್ಯಾ. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಸುಜ್ಞಾನಿ ನಿರಹಂಕಾರರ ಭಕ್ತಿಗೋಸ್ಕರ ಪ್ರತ್ಯಕ್ಷವಾಗಿ ಬಸವಾದಿ ಪ್ರಮಥರ್ಗೆ ಬೋಧಿಸಿ, ತನ್ನ ನಿಜಪದವ ತೋರಬಂದರಯ್ಯಾ ಪ್ರಭುದೇವರು. ದಕ್ಷಸಂಹಾರದಿಂದ ಬರುವಾಗ ಗುಪ್ತಗಣೇಶ್ವರನ ನಿರಿ ಸೋಂಕಲು, ಆ ಪ್ರಶ್ನೆಯಿಂದ ಬಂದನೆಂಬರಯ್ಯಾ ಮಡಿವಾಳನು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಬಿಜ್ಜಳ ಪರವಾದಿಗಳ ಸಂಹರಿಸಲೋಸ್ಕರ ಬಸವಣ್ಣನ ನಿಮಿತ್ತವಾಗಿ ಬಂದನಯ್ಯಾ ಮಡಿವಾಳ ಮಾಚಯ್ಯಗಳು. ಇಂತಿವರು ಮುಖ್ಯವಾದ ಏಳುನೂರು ಎಪ್ಪತ್ತು ಅಮರಗಣಂಗಳಿಗೆ ವಾಸನಾಧರ್ಮವೆಂದಡೆ ಅಘೋರ ನರಕ ತಪ್ಪದಯ್ಯಾ. ಇವರು ಮುಖ್ಯವಾದ ಪ್ರಮಥ ಗಣಂಗಳಿಗೆ ಶಾಪವೆಂದು ಕಲ್ಪಸಿದಡೆ, ನಾಯಕ ನರಕ ತಪ್ಪದು, ಎಲೆ ಶಿವನೆ ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮಾಣೆ
--------------
ಸಿದ್ಧರಾಮೇಶ್ವರ
ಗುರುವೆಂದರಿಯರು, ಲಿಂಗವೆಂದರಿಯರು, ಜಂಗಮವೆಂದರಿಯರು. ಹಿಂದೊಂದನಾಡುವರು, ಮುಂದೊಂದನಾಡುವರು. ಮತ್ತೆ, ನಂಬದೆ, ಭಕ್ತರಂತೆ, ಪಾದೋದಕ ಪ್ರಸಾದಕ್ಕೆ ಕೈಯ್ಯನಾನುವರು. ಈಶ ವೇಷವ ತೊಟ್ಟ, ವೇಷಧಾರಕರು, ತಾವೆ, ಭಕ್ತರೆಂಬರು. ಇವರು, ಮಾಯಾಪಾಶದಲ್ಲಿ, ಘಾಸಿಯಾಗದೆ ಮಾಣ್ಬರೇ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನನರಿಯದ ಜಾತ್ಯಂಧಕರು.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->