ಅಥವಾ

ಒಟ್ಟು 94 ಕಡೆಗಳಲ್ಲಿ , 17 ವಚನಕಾರರು , 53 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹಾಲಿಂಗವೆಂದುಂಟು. ಅದೆಂತಾದುದಯ್ಯಾ ಎಂದಡೆ, ಸ್ವರಾಕ್ಷರ ವಿಕಲಾಕ್ಷರ ವ್ಯಾಪಕಾಕ್ಷರವೆಂದು ಮೂರುಪ್ರಕಾರ. ಸ್ವರಾಕ್ಷರವೆಲ್ಲ ನಾದಸಂಬಂಧ. ವಿಕಲಾಕ್ಷರವೆಲ್ಲ ಬಿಂದುಸಂಬಂಧ. ವ್ಯಾಪಕಾಕ್ಷರವೆಲ್ಲ ಕಳಾಸಂಬಂಧ. ನಾದವೇ ಆಕಾರ, ಬಿಂದುವೆ ಉಕಾರ, ಕಳೆಯೆ ಮಕಾರ. ಈ ನಾದ ಬಿಂದು ಕಳೆಗಳ ಗಬ್ರ್ಥೀಕರಿಸಿಕೊಂಡಿರ್ಪುದು ಚಿತ್ತು. ಆ ಚಿತ್ ಪ್ರಣಮಸ್ವರೂಪವೆ, ಅದ್ವೆ ೈತಾನಂದದಿಂದ ಸಂಪೂರ್ಣವನುಳ್ಳ ಆದಿಮಹಾಲಿಂಗವು, ಅನುಪಮಲಿಂಗವು, ಅನಾಮಯಲಿಂಗವು, ಅದ್ವಯಲಿಂಗವು, ಪರಮಲಿಂಗವು, ಪರಾಪರಲಿಂಗವು, ಪಿಂಡಾಂಡವನೊಳಕೊಂಡ ಅಖಂಡ ಲಿಂಗವು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆದಿ ಅನಾದಿ ತತ್ವವ ಭೇದಿಸಿಕೊಟ್ಟ ಗುರುವೆ, ಅಪ್ರಮಾಣದ ಬೆಳಗ ಭೇದಿಸಿಕೊಟ್ಟ ಗುರುವೆ, ಅಕಾರ ಉಕಾರ ಮಕಾರ ಕಳೆಯನರುಹಿಸಿಕೊಟ್ಟ ಗುರುವೆ, ಇಷ್ಟ ಪ್ರಾಣ ಭಾವವಿದೆಂದು ತೋರಿದ ಗುರುವೆ, ನಿಜದರಿವನರುಹಿಸಿಕೊಟ್ಟ ಗುರುವೆ, ನಿರ್ಮಳಪ್ರಭೆಯ ತೋರಿದ ಗುರುವೆ, ನಿಜವನನುಭವಕ್ಕೆ ತಂದ ಗುರುವೆ ನಿಮ್ಮ ಘನವ ಕಾಬ ಕಣ್ಣು ಕ್ರಮಗೆಟ್ಟಿತ್ತು ಸಂಗಯ್ಯಾ, ಬಸವನ ಪ್ರಭೆ ಎಲ್ಲಿ ಅಡಗಿತ್ತೊ?
--------------
ನೀಲಮ್ಮ
ಆಧಾರಚಕ್ರದಲ್ಲಿ ನಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಬ್ರಹ್ಮನು ಉತ್ತರಖಂಡಣೆಯೆಂಬ ವೇದವನುಚ್ಚರಿಸುತ್ತಿಹನು. ಸ್ವಾದ್ಥಿಷ್ಠಾನಚಕ್ರದಲ್ಲಿ ಮಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ವಿಷ್ಣು ಪ್ರೌಢಲಕ್ಷಿತವೆಂಬ ವೇದವನುಚ್ಚರಿಸುತ್ತಿಹನು. ಮಣಿಪೂರಕಚಕ್ರದಲ್ಲಿ ಶಿಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ರುದ್ರನು ಋಗ್ವೇದವನುಚ್ಚರಿಸುತ್ತಿಹನು. ಅನಾಹತಚಕ್ರದಲ್ಲಿ ವಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಈಶ್ವರನು ಯಜುರ್ವೇದವನುಚ್ಚರಿಸುತ್ತಿಹನು. ವಿಶುದ್ಧಿಚಕ್ರದಲ್ಲಿ ಯಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಸದಾಶಿವ ಸಾಮವೇದವನುಚ್ಚರಿಸುತ್ತಿಹನು. ಆಜ್ಞಾಚಕ್ರದಲ್ಲಿ ಒಂಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಉಪಮಾತೀತನು ಅಥರ್ವಣವೇದವನುಚ್ಚರಿಸುತ್ತಿಹನು. ಬ್ರಹ್ಮರಂಧ್ರದಲ್ಲಿ ಅಕಾರ ಉಕಾರ ಮಕಾರವೆಂಬ ಬೀಜಾಕ್ಷರವಿಹುದು, ಅಲ್ಲಿ ಪ್ರಕೃತಿ ವಿಕೃತಿಗಳು ಗಾಯತ್ರಿಯನುಚ್ಚರಿಸುತ್ತಿಹವು. ಇಂತಿವೆಲ್ಲವನರಿದು ಮರದು, ನಿಜಲಿಂಗ ನಿಜಮಂತ್ರಂಗಳಲ್ಲಿ ಪರವಶವಾಗಿರ್ದೆನು ಕಾಣಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ರವಿ ಶಶಿಗಳಿಲ್ಲದಂದು, ಕತ್ತಲೆ ಕಾಳಾಂಧಗಳಿಲ್ಲದಂದು, ಜ್ಞಾನ ಮಹಾಜ್ಞಾನಂಗಳು ಇಲ್ಲದಂದು, ಅತ್ತತ್ತಲೆ ತಾನೆ ತಂದೆಯಾಗಿದ್ದೆಯಯ್ಯ. ತನಗೆ ಮಕ್ಕಳು ಬೇಕಾಗಿ ನೆನಹಂಗೈಯಲು. ಓಂಕಾರವೆಂಬ ಪ್ರಣವ ಪುಟ್ಟಿತ್ತು ನೋಡಾ. ಆ ಓಂಕಾರವೆಂಬ ಪ್ರಣವದಲ್ಲಿ ಅಕಾರ ಉಕಾರ ಮಕಾರಂಗಳಾದವು ನೋಡಾ. ಅಕಾರ ಉಕಾರ ಮಕಾರಂಗಳೊಡನೆ ಷಡಕ್ಷರಂಗಳು ಆದವು ನೋಡಾ. ಆ ಷಡಕ್ಷರಂಗಳೊಡನೆ ಷಟ್ಚಕ್ರಂಗಳಾದವು ನೋಡಾ. ಆ ಷಟ್ಚಕ್ರಂಗಳೊಡನೆ ಷಡ್ವಿಧಮೂರ್ತಿಗಳಾದವು ನೋಡಾ. ಆ ಷಡ್ವಿಧಮೂರ್ತಿಗಳೊಡನೆ ಷಡ್ವಿಧಲಿಂಗವಾದವು ನೋಡಾ. ಆ ಷಡ್ವಿಧಲಿಂಗದೊಡನೆ ಷಡ್ವಿಧಶಕ್ತಿಯರಾದರು ನೋಡಾ. ಆ ಷಡ್ವಿಧಶಕ್ತಿಯರೊಡನೆ ಷಡ್ವಿಧಭಕ್ತಿಯಾಯಿತು ನೋಡಾ. ಆ ಷಡ್ವಿಧಭಕ್ತಿಯನರಿತು ನಾದಬಿಂದುಕಲೆಗಳ ಮೀರಿ ಪರಕೆ ಪರವಾದ ಲಿಂಗವನಾಚರಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅನಂತಕೋಟಿ ಆದಿಬ್ರಹ್ಮರ ಶಿರವನರಿದು ಬ್ರಹ್ಮಕಪಾಲವ ಪಿಡಿದಾಡದಂದು, ಅನಂತಕೋಟಿ ಆದಿನಾರಾಯಣರ ನಿಟ್ಟೆಲುವ ಮುರಿದು ಕಂಕಾಳದಂಡವ ಧರಿಸದಂದು, ಅನಂತಕೋಟಿ ಆದಿಕಾಲರ ಒದ್ದೊದ್ದು ಕೊಲ್ಲದಂದು, ಅನಂತಕೋಟಿ ಆದಿ ಮನ್ಮಥರ ದಹಿಸಿ ಭಸ್ಮವ ಮಾಡದಂದು, ಅನಂತಕೋಟಿ ತ್ರಿಪುರಂಗಳ ಸಂಹಾರವ ಮಾಡದಂದು, ಪರಶಿವಲೀಲೆಯಿಂದ ಅನಂತಕೋಟಿ ಬ್ರಹ್ಮಾಂಡಂಗಳ ಸೃಜಿಸದಂದು, ಅನಾದಿ ಅಕಾರ, ಅನಾದಿ ಉಕಾರ, ಅನಾದಿ ಮಕಾರವೆಂಬ ಪ್ರಣವತ್ರಯವಾಗಿದ್ದನು ನೋಡಾ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ, ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ; ಬಿಂದುಮಯವಾದ ಶರೀರದಲ್ಲಿ ರೂಪು ನಾದಮಯಮಾದ ಪ್ರಾಣದಲ್ಲಿ ನಾಮ ಕಳಾಮಯಮಾದ ಮನದಲ್ಲಿ ಕ್ರಿಯೆ ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ, ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು, ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು. ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು . ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು. ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು . ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ, ಆ ಬಿಂದುವೇ ಆದಿಶಕ್ತಿಮಯಮಾಯಿತ್ತು. ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ, ಆ ನಾದವೇ ಪರಾಶಕ್ತಿಯಾಯಿತ್ತು. ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ, ಆ ಕಳೆಯೇ ಜ್ಞಾನಶಕ್ತಿಯಾಯಿತ್ತು. ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ, ಪ್ರಾಣವು ಗುರುವಿನಿಂದ ಪವಿತ್ರಮಾಗಿ, ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಗೆಬಗೆದು ನೋಡಿದಡೆ ದೇಹವೆಲ್ಲ ಮೂರು ಮಾತ್ರೆಯಿಂದಾದುವಯ್ಯಾ. ಸ್ಥೂಲದೇಹ ಅಕಾರಪ್ರಣವ, ಸೂಕ್ಷ್ಮದೇಹ ಉಕಾರ ಪ್ರಣವ, ಕಾರಣದೇಹ ಮಕಾರಪ್ರಣವ, ಮೂರು ಮಾತ್ರೆ ಏಕವಾದಲ್ಲಿ ಓಂಕಾರವಾಯಿತ್ತು. ತತ್ಪ್ರಣವಕ್ಕೆ ಸಾಕ್ಷಿಯಾಗಿ ನಿಂದೆ; ನಿಂದೆನೆಂಬುದಕ್ಕೆ ಅನಿರ್ವಾಚ್ಯ ಪ್ರಣವವಾದೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಲೀಯವಾಗಿ ಬಂದ ಪರಿಯ, ಅಕಾರ ಉಕಾರ ಮಕಾರಂಗಳು ಸೋಂಕದಿರ್ದ ಪರಿಯ, ನಿರ್ಲೇಪಸ್ಥಲವಾಧಾರವಾದ ಪರಿಯ, ನಿಮ್ಮ ಶರಣ ಬಸವಣ್ಣ ಬಲ್ಲನು. ಬೆಸಗೊಳ್ಳಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಆ ಆದಿ ಪ್ರಣವದ ನೆನಹುಮಾತ್ರದಲ್ಲಿ ಆದಿ ಅಕಾರ, ಆದಿ ಉಕಾರ, ಆದಿ ಮಕಾರವೆಂಬ ಪ್ರಣವತ್ರಯಂಗಳುತ್ಪತ್ಯವಾಯಿತ್ತು . ಆ ಆದಿ ಅಕಾರ, ಆದಿ ಉಕಾರ, ಆದಿ ಮಕಾರ-ಇವು ಮೂರು ಬೀಜಾಕ್ಷರ. ಆದಿ ಅಕಾರವೆ ಆದಿನಾದ, ಆದಿ ಉಕಾರವೇ ಆದಿಬಿಂದು, ಆದಿ ಮಕಾರವೆ ಆದಿಕಲೆ. ಆದಿ ಅಕಾರವೇ ನಿರಾಳಾತ್ಮನು, ಆದಿ ಉಕಾರವೇ ನಿರಂಜನಾತ್ಮನು, ಆದಿ ಮಕಾರವೆ ನಿರಾಮಯಾತ್ಮಕನು ನೋಡಾ. ಇದಕ್ಕೆ ಶ್ರೀಮಹಾದೇವೋವಾಚ: ``ಅಕಾರಂ ನಾದರೂಪೇಣ ಉಕಾರೋ ಬಿಂದುರುಚ್ಯತೇ | ಮಕಾರಂತು ಕಲಾಶ್ಚೈವ ನಾದಬಿಂದುಕಲಾತ್ಮನೇ || ಓಂಕಾರೋ ಜ್ಯೋತಿರೂಪಂಚ ಓಂಕಾರೋ ಪರಮೇಶ್ವರಃ | ನಾದರೂಪಂ ನಿರಾಲಂಬಂ ಬಿಂದುರೂಪಂ ನಿರಂಜನಂ | ನಾದಬಿಂದೂಭಯೋಃ ಕರ್ತಾ ರುದ್ರಃ ಶಂಭುಃ ನಿರಾಮಯಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಏನೂ ಏನೂ ಎನಲಿಲ್ಲದ ಅನಾದಿ ಅಕಾರ, ಅನಾದಿ ಉಕಾರ, ಅನಾದಿ ಮಕಾರವೆಂಬ ಪ್ರಣವತ್ರಯಂಗಳ ನೆನಹು ಮಾತ್ರದಲ್ಲಿಯೇ ಆದಿ ಪ್ರಣವ ಉತ್ಪತ್ಯವಾಯಿತು. ಆ ಆದಿ ಪ್ರಣವಸ್ಥಲದ ವಚನವದೆಂತೆಂದಡೆ : ಆಧಾರಚಕ್ರ ಸ್ವಾದ್ಥಿಷ್ಠಾನಚಕ್ರ ಉತ್ಪತ್ಯವಾಗದ ಮುನ್ನ , ಮಣಿಪೂರಕಚಕ್ರ ಅನಾಹತಚಕ್ರ ಉತ್ಪತ್ಯವಾಗದ ಮುನ್ನ , ವಿಶುದ್ಧಿಚಕ್ರ ಆಜ್ಞಾಚಕ್ರ ಉತ್ಪತ್ಯವಾಗದ ಮುನ್ನ , ಬ್ರಹ್ಮಚಕ್ರ ಶಿಖಾಚಕ್ರ ಉತ್ಪತ್ಯವಾಗದ ಮುನ್ನ , ಪಶ್ಚಿಮಚಕ್ರ ಅಣುಚಕ್ರ ಉತ್ಪತ್ಯವಾಗದ ಮುನ್ನವೆ ಓಂಕಾರವೆಂಬ ಆದಿಪ್ರಣವವಾಗಿದ್ದನು ನೋಡಾ ಇಲ್ಲದಂತೆ, ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ನಿರಂಜನಾತೀತಪ್ರಣವ ಮೊದಲಾಗಿ ಬ್ರಹ್ಮ ಕಡೆಯಾಗಿ ಸೃಷ್ಟಿಮಾರ್ಗವ ಹೇಳುತ್ತಿದ್ದೆನು. ಅದೆಂತೆಂದೊಡೆ : ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯ ನೆನಹುಮಾತ್ರದಲ್ಲಿಯೇ ನಿರಂಜನಾತೀತಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಾತೀತಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಪ್ರಣವದ ನೆನಹುಮಾತ್ರದಲ್ಲಿಯೇ ಅವಾಚ್ಯಪ್ರಣವ ಉತ್ಪತ್ತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ಕಲಾಪ್ರಣವ ಉತ್ಪತ್ತ್ಯವಾಯಿತ್ತು. ಆ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಆದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಆದಿಪ್ರಣವದ ನೆನಹುಮಾತ್ರದಲ್ಲಿಯೇ ಆದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ನಿರಂಜನಾತೀತಚಿಂತಾಯಾಂ ಅನಾದ್ಯೋಂಕಾರ ಸಂಭವಃ | ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯೋಂಕಾರ ಚಿಂತಾಯಾಂ ಕಲಾ ನಾಮ ಸಮುದ್ಭವಃ | ಕಲಾಪ್ರಣವಚಿಂತಾಯಾಂ ಅನಾದಿಪ್ರಣವೋ ಭವೇತ್ || ಅನಾದಿಪ್ರಣವ ಚಿಂತಾಯಾಂ ಆದಿ ಮಾತ್ರಸ್ಯ ಸಂಭವಃ | ಆದಿ ಮಾತ್ರಸ್ಯ ಚಿಂತಾಯಾಂ ಆದಿ ಪ್ರಣವಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದ : ``ಓಂ ನಿರಂಜನಾತೀತಪ್ರಣವಾಖ್ಯಾ ನಿರಂಜನ ಪ್ರಣವ ಜಾಯತೇ | ನಿರಂಜನಪ್ರಣವ ತದಸ್ಯ ಅವಾಚ್ಯೋಂಕಾರ ಜಾಯತೇ | ಅವಾಚ್ಯೋಂಕಾರ ಚಿಂತಾಖ್ಯಾಂ ಕಲಾಪ್ರಣವಸ್ಯ ಜಾಯತೇ | ಕಲಾಪ್ರಣವಸ್ಯ ತದಸ್ಯ ಅನಾದ್ಯೋಂಕಾರ ಜಾಯತೇ | ಅನಾದ್ಯೋಂಕಾರಚಿಂತಾಯಾಂ ಅನಾದಿತ್ರ್ಯಕ್ಷರೋ ಜಾಯತೇ | ಅನಾದ್ಯರಕ್ಷರ ಚಿಂತಾಯಾಂ ಆದಿಪ್ರಣವ ಜಾಯತೇ | ಆದಿ ಪ್ರಣವಚಿಂತಾಯಾಂ ಅಕ್ಷರತ್ರಯಂ ಜಾಯತೇ ||'' ಇಂತೆಂದು ಶ್ರುತಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಷಡ್ವಿಧ ಚಕ್ರಂಗಳಿಲ್ಲದಂದು, ಷಡ್ವಿಧ ಮೂರ್ತಿಗಳಿಲ್ಲದಂದು, ಷಡ್ವಿಧ ಲಿಂಗಂಗಳಿಲ್ಲದಂದು, ಷಡ್ವಿಧ ಶಕ್ತಿಗಳಿಲ್ಲದಂದು, ಷಡ್ವಿಧ ಭಕ್ತಿಯಿಲ್ಲದಂದು, ಷಡ್ವಿಧ ಹಸ್ತಂಗಳಿಲ್ಲದಂದು, ಷಡ್ವಿಧ ಕಲೆಗಳಿಲ್ಲದಂದು, ಇವೇನೇನೂ ಇಲ್ಲದಂದು, ಅತ್ತತ್ತಲೆ. ಅಕಾರ ಉಕಾರ ಮಕಾರಗಳಿಲ್ಲದಂದು, ನಾದ ಬಿಂದು ಕಲೆಗಳಿಲ್ಲದಂದು, ಗುರು ಲಿಂಗ ಜಂಗಮವಿಲ್ಲದಂದು, ಇಷ್ಟ ಪ್ರಾಣ ಭಾವಂಗಳಿಲ್ಲದಂದು, ಧ್ಯಾನ ಧಾರಣ ಸಮಾದ್ಥಿಗಳಿಲ್ಲದಂದು, ನಾಮ ರೂಪ ಕ್ರಿಯೆಗಳಿಲ್ಲದಂದು, ಇವೇನೇನೂ ಇಲ್ಲದಂದು, ಅತ್ತತ್ತಲೆ. ಮನ ನಿರ್ಮನಂಗಳಿಲ್ಲದಂದು, ಭಾವ ನಿರ್ಭಾವಂಗಳಿಲ್ಲದಂದು, ಜ್ಞಾನ ಮಹಾಜ್ಞಾನಂಗಳಿಲ್ಲದಂದು, ಶಬ್ದ ನಿಃಶಬ್ದಂಗಳಿಲ್ಲದಂದು, ಆತ್ಮ ನಿರಾತ್ಮಂಗಳಿಲ್ಲದಂದು, ನಾನು ನೀನಿಲ್ಲದಂದು, ಅತ್ತತ್ತಲೆ. ಮಹಾಘನ ಅಗಮ್ಯ ಅಗೋಚರ ಅಪ್ರಮಾಣ ನಿರಾಕುಳ ನಿರಂಜನ ನಿರ್ಭರಿತ ನಿಃಶೂನ್ಯ ಅಪರಂಪರ ನಿಷ್ಕಲಲಿಂಗ ತಾನೇ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆದಿ ಅಕಾರದಲ್ಲಿ ತಾರಕಸ್ವರೂಪ ದಂಡಕಸ್ವರೂಪ ಉತ್ಪತ್ಯವಾಗದ ಮುನ್ನ ಮುನ್ನ, ಆದಿ ಉಕಾರದಲ್ಲಿ ಕುಂಡಲಾಕಾರ ಅರ್ಧಚಂದ್ರಕಸ್ವರೂಪ ಉತ್ಪತ್ಯವಾಗದ ಮುನ್ನ ಮುನ್ನ, ಆದಿ ಮಕಾರದಲ್ಲಿ ದರ್ಪಣಾಕಾರ ಜ್ಯೋತಿಸ್ವರೂಪ ಉತ್ಪತ್ಯವಾಗದ ಮುನ್ನ ಮುನ್ನ, ಆದಿ ಅಕಾರ ಉಕಾರ ಮಕಾರ-ಈ ಮೂರು ಏಕವಾಗಿ ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವ ಉತ್ಪತ್ಯವಾಗದ ಮುನ್ನ ಮುನ್ನವೆ ಓಂಕಾರವೆಂಬ ಅನಾದಿಪ್ರಣವವಾಗಿದ್ದನು ನೋಡಾ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->