ಅಥವಾ

ಒಟ್ಟು 84 ಕಡೆಗಳಲ್ಲಿ , 26 ವಚನಕಾರರು , 70 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರ್ಬಯಲು ಮಹಾಬಯಲು ಚಿದ್‍ಬಯಲು ಬಯಲಾತ್ಮ ಸೂರ್ಯ ಚಂದ್ರ ತಾರಕ ಕಠೋರ ವಾಯು ಆಕಾಶ ಅಗ್ನಿ ಅಪ್ಪು ಪೃಥ್ವಿ ಬೀಜ ಅನ್ನರಸ ವೀರ್ಯ ಪಿಂಡ ಪ್ರಾಣ ಮನ ಅಸಿ ಉತ್ಪತ್ತಿ ಸ್ಥಿತಿ ಲಯ ಅಕ್ಷರ ಮೊದಲಾದ ಬ್ರಹ್ಮಾಂಡ ನೀನಾದುದಕ್ಕೆ, ನಿನ್ನ ನೀನರಿವುದಕ್ಕೆ ನೀನೇ ನಾನಾದುದೇ ಇದೇ ಆದಿಯಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಅಮೃತಮತಿ ಸೋಮಶಂಭುವಿಂಗೆ ಹುಟ್ಟಿದಾತನಿಂದ್ರ ಸತ್ಯಋಷಿ ಜೇಷ್ಠಾದೇವಿಗೆ ಹುಟ್ಟಿದಾತ ಬ್ರಹ್ಮ. ವಸುದೇವ ದೇವಕಿಗೆ ಹುಟ್ಟಿದಾತ ವಿಷ್ಣು. ನಾಭಿರಾಜ ಮರುತಾದೇವಿಗೆ ಹುಟ್ಟಿದಾತನರುಹ ಇವರೆಲ್ಲರು ಯೋನಿಜರೆಂಬುದ ತ್ರೈಜಗ ಬಲ್ಲುದು. ಉತ್ಪತ್ತಿ ಸ್ಥಿತಿ ಪ್ರಳಯಕ್ಕೆ ಹೊರಗಾದ ಕೂಡಲಸಂಗಮದೇವಂಗೆ ಮಾತಾಪಿತರುಗಳುಳ್ಳಡೆ ಹೇಳಿರೊ !
--------------
ಬಸವಣ್ಣ
ಒಡಲಡಗ ಮಚ್ಚಿದಾತನ ಅಚ್ಚಶರಣನೆಂಬೆ. ಮಡಿಲಡಗ ಮಚ್ಚಿದಾತನ ಅಚ್ಚಲಿಂಗವಂತನೆಂಬೆ. (ಈ ಒಡಲಡಗು ಮಡಿಲಡಗಿನೊಳಗೆ ಒಂದ ಮಚ್ಚದಿದ್ದರೆ ?) ಉತ್ಪತ್ತಿ ಪ್ರಳಯ ತಪ್ಪದು. ಶ್ರೀಗುರು ಮಹಾಲಿಂಗದಲ್ಲಿ ಒಡಲಡಗ ಮಚ್ಚಿ ಅಚ್ಚಭವಿಯಾದ ಶರಣನೊಬ್ಬನೆ_ಗುಹೇಶ್ವರ.
--------------
ಅಲ್ಲಮಪ್ರಭುದೇವರು
ವೇದ ಹುಟ್ಟುವುದಕ್ಕೆ ಮುನ್ನವೆ ಓದಿದವರಾರು ? ಶಾಸ್ತ್ರ ಹುಟ್ಟುವುದಕ್ಕೆ ಮುನ್ನವೆ ಕಲಿತವರಾರು ? ಪುರಾಣ ಹುಟ್ಟುವುದಕ್ಕೆ ಮುನ್ನವೆ ಕೇಳಿದವರಾರು ? ಉತ್ಪತ್ತಿ ಸ್ಥಿತಿ ಲಯಕ್ಕೆ ಮುನ್ನವೆ ನಾನೆಂಬವರಾರು. ಮನಸಂದ ಮಾರೇಶ್ವರಾ ?
--------------
ಮನಸಂದ ಮಾರಿತಂದೆ
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಕಂಡು ಅರ್ಪಿಸುವುದು ಬ್ರಹ್ಮತತ್ವ. ಸಂದೇಹದಲ್ಲಿ ಅರ್ಪಿಸುವುದು ವಿಷ್ಣುತತ್ವ. ಬಂಧಮೋಕ್ಷಕರ್ಮಗಳಿಲ್ಲವೆಂದು ಅರ್ಪಿಸುವುದು ರುದ್ರತತ್ವ. ತತ್ವಂಗಳ ಗೊತ್ತ ಮುಟ್ಟದೆ ನಿಶ್ಚಯವಾದ ಪರಿಪೂರ್ಣಂಗೆ ಉತ್ಪತ್ತಿ ಸ್ಥಿತಿ ಲಯವೆಂಬುದು ಇತ್ತಲೇ ಉಳಿಯಿತ್ತು, ಕಾಮಧೂಮ ಧೂಳೇಶ್ವರನ ಮುಟ್ಟಲಿಲ್ಲವಾಗಿ.
--------------
ಮಾದಾರ ಧೂಳಯ್ಯ
ತನ್ನೊಳಡಗಿಹ ಅನಂತಕೋಟಿ ಬ್ರಹ್ಮಾಂಡಗಳಿಗೆ ಉತ್ಪತ್ತಿ ಸ್ಥಿತಿ ಲಯಾಶ್ರಯವಾದ ಮಹಾ ಚಿದ್ಭಾಂಡವೇ ತನ್ನಿರವೆಂದರಿದ ಕಾರಣ ಸರ್ವತತ್ತ್ವ ಸಾಕ್ಷಿಣಿ ವಿಶ್ವಪ್ರಕಾಶ ಪರಾಶಕ್ತಿರೂಪ ವಿಶ್ವತೋಮುಖ ಚಿದಾತ್ಮಕ ಪರಮಾನಂದಮಯ ತಾನೇ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ನಿಲವು.
--------------
ಸ್ವತಂತ್ರ ಸಿದ್ಧಲಿಂಗ
ಅನಾದಿಪುರುಷ ಬಸವಣ್ಣಾ, ಕಾಲ ಮಾಯೆಗಳೆರಡೂ ನಿಮ್ಮ ಮುಂದಿರ್ದು, ನಿಮ್ಮ ಕಾಣೆವೆನುತ್ತಿಹವು. ಆದಿಪುರುಷ ಬಸವಣ್ಣಾ; ಸುರಾಸುರರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ನಾದಪುರುಷ ಬಸವಣ್ಣಾ, ನಾದ ಮಂತ್ರಗಳು ಪಂಚಮಹಾವಾದ್ಯಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ವೇದಪುರುಷ ಬಸವಣ್ಣಾ, ವೇದಶಾಸ್ತ್ರಾಗಮ ಪುರಾಣಂಗಳು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹವು. ಆಗಮ್ಯಪುರುಷ ಬಸವಣ್ಣಾ, ಅಂಗಾಲ ಕಣ್ಣವರು ಮೈಯೆಲ್ಲ ಕಣ್ಣವರು ನಂದಿವಾಹನರು ಗಂಗೆವಾಳುಕರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಗೋಚರಪುರುಷ ಬಸವಣ್ಣಾ, ಈ ಗೋಚರಿಸಿದ ಮನುಮುನಿ ದೇವದಾನವ ಮಾನವರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಅಪ್ರಮಾಣಪುರುಷ ಬಸವಣ್ಣ, ಈ ಪ್ರಮಾಣರೆಲ್ಲರು ನಿಮ್ಮ ಮುಂದಿರ್ದು ನಿಮ್ಮ ಕಾಣೆವೆನುತ್ತಿಹರು. ಸರ್ವಜ್ಞಪುರುಷ ಬಸವಣ್ಣಾ, ಈ ಸರ್ವರು ನಿಮ್ಮ ಬಳಸಿರ್ದು ನಿಮ್ಮ ಕಾಣೆವೆನುತ್ತಿಹರು. ಇಂತೀ ಸರ್ವಪ್ರಕಾರದವರೆಲ್ಲರೂ ನಿಮ್ಮ ಸಾಧಿಸಿ ಭೇದಿಸಿ ಪೂಜಿಸಿ ತರ್ಕಿಸಿ ಹೊಗಳಿ ಕಾಣದೆ ನಿಮ್ಮಿಂದವೆ ಉತ್ಪತ್ತಿ ಸ್ಥಿತಿಲಯಂಗಳಾಗುತ್ತಿಹರು. ಅದು ಕಾರಣ,_ನಮ್ಮ ಗುಹೇಶ್ವರಲಿಂಗದಲ್ಲಿ ಭಕ್ತಿವಡೆದ ಅನಂತ ಭಕ್ತರೆಲ್ಲ ಬಸವಣ್ಣ ಬಸವಣ್ಣ ಬಸವಣ್ಣ ಎನುತ್ತ ಬದುಕಿದರಯ್ಯಾ.
--------------
ಅಲ್ಲಮಪ್ರಭುದೇವರು
ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಹೆಸರಿಟ್ಟುಕೊಂಬಿರಿ. ಆರು ಪರಿಯಲ್ಲಿ ಆರಾದವನರಿಯಿರಿ. ಭಕ್ತನಾದಡೇಕೆ ಭವದ ಬೇರು? ಮಾಹೇಶ್ವರನಾದಡೇಕೆ ಪ್ರಳಯಕ್ಕೊಳಗಿಹ? ಪ್ರಸಾದಿಯಾದಡೇಕೆ ಇಂದ್ರಿಯವೈದ ಅನಿಗ್ರಹಿಯಾಗಿಹ? ಪ್ರಾಣಲಿಂಗಿಯಾದಡೇಕೆ ಉತ್ಪತ್ತಿ ಸ್ಥಿತಿ ಲಯಕೊಳಗಾಗಿಹ? ಶರಣನಾದಡೇಕೆ ಉಪಬೋಧೆಗೊಳಗಾಗಿಹ? ಐಕ್ಯನಾದಡೇಕೆ ಇಹ-ಪರವನರಿದಿಹ? ಇವೆಲ್ಲ ಠಕ್ಕ, ಇವೆಲ್ಲ ಅಭ್ಯಾಸ! ಕಪಿಲಸಿದ್ಧಮಲ್ಲಿಕಾರ್ಜುನಯ್ಯ, ನಿಮ್ಮ ಷಡುಸ್ಥಲವಭೇದ್ಯ!
--------------
ಸಿದ್ಧರಾಮೇಶ್ವರ
ಪಂಚಾಕ್ಷರಿಯೆ ಸರ್ವಮಂತ್ರವೆಲ್ಲವಕ್ಕೆಯು, ಉತ್ಪತ್ತಿ, ಸ್ಥಿತಿ, ಲಯಸ್ಥಾನ, ಸರ್ವಕಾರಣವೆಲ್ಲವಕ್ಕೆಯು ಮೂಲ. ಅದೆಂತೆಂದಡೆ: ಸಪ್ತಕೋಟಿ ಮಹಾಮಂತ್ರಂ ಉಪಮಂತ್ರಸ್ತನೇಕತಃ ಪಂಚಾಕ್ಷರ ಪ್ರತಿಲೀಯಂತೇ ಪುನಸ್ತಸ್ಯವಸರ್ಗತಃ ತಸ್ಮಿನ್ ವೇದಶ್ಚ ಶಾಸ್ತ್ರಾಣಿ ಮಂತ್ರೇ ಪಂಚಾಕ್ಷರಿ ಸ್ಥಿತಂ ಎಂದುದಾಗಿ, ಇದು ಕಾರಣ ಶ್ರೀ ಪಂಚಾಕ್ಷರಿಯುಳ್ಳ ಸದ್ಭಕ್ತನೇ ವೇದವಿತ್ತು. ಆತನೇ ಶಾಸ್ತ್ರವಾನ್, ಆ ಮಹಾಮಹಿಮನೆ ಪುರಾಣಿಕನು, ಆತನೇ ಆಗಮಿಕನು, ಆತನೇ ಸರ್ವಜ್ಞನಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ನಿರಾಕಾರ ಪರವಸ್ತು ತನ್ನ ಲೀಲಾವಿನೋದದಿಂದ ಎರಡು ಮುಖದಿಂದ ಎರಡು ಸೃಷ್ಟಿಯ ಮಾಡಿದರು. ಒಂದು ಊಧ್ರ್ವಸೃಷ್ಟಿ, ಒಂದು ಅಧೋಸೃಷ್ಟಿ. ಅಧೋಸೃಷ್ಟಿ ಯಾವುದೆಂದಡೆ : ಅಂಡಜ ಪಿಂಡಜ ಜರಾಯುಜ ಉದ್ಭಿಜ ಇವು ನಾಲ್ಕು ಕೂಡಿ ಎಂಬತ್ತುನಾಲ್ಕು ಜೀವರಾಶಿಯ ಮಾಡಿದರು. ಸ್ವರ್ಗ ನರಕ ಇಹ ಪರ ಪುಣ್ಯ ಪಾಪ ಧರ್ಮ ಕರ್ಮ ಸತ್ಯ ಅಸತ್ಯ ಜ್ಞಾನ ಅಜ್ಞಾನ ಹೆಣ್ಣು ಗಂಡು ಹಿರಿದು ಕಿರಿದು ಉತ್ಪತ್ತಿ-ಸ್ಥಿತಿ-ಲಯಕ್ಕೆ ಅದ್ಥಿಕಾರಿಗಳಾದ ಬ್ರಹ್ಮ-ವಿಷ್ಣು-ರುದ್ರರು ಮಾಡಿಟ್ಟರು. ಇನ್ನು ಊಧ್ರ್ವಸೃಷ್ಟಿ ಹೇಗೆಂದಡೆ : ಅಸಂಖ್ಯಾತ ಮಹಾಪ್ರಮಥಗಣಂಗಳು, ಇವರಿಗೆ ಸ್ವರ್ಗ-ನರಕವಿಲ್ಲ, ಇಹ-ಪರವಿಲ್ಲ, ಪುಣ್ಯ-ಪಾಪವಿಲ್ಲ, ಧರ್ಮ-ಕರ್ಮವಿಲ್ಲ, ಹುಸಿ-ಖರೆಯಿಲ್ಲ, ಜ್ಞಾನ-ಅಜ್ಞಾನವಿಲ್ಲ, ಹೆಣ್ಣು-ಗಂಡುವಿಲ್ಲ, ಹಿರಿದು-ಕಿರಿದುವಿಲ್ಲ, ಉತ್ಪತ್ತಿ-ಸ್ಥಿತಿ-ಲಯವಿಲ್ಲ, ಅವರಿಗೆ ಬ್ರಹ್ಮ-ವಿಷ್ಣು ರುದ್ರರು ಇಲ್ಲ. ಅವರಿಗೆ ಮತ್ತಂ, ಆ ನಿರಾಕಾರ ಪರವಸ್ತು ತಾನೆ ಗುರು-ಲಿಂಗ-ಜಂಗಮವಾಗಿ ಗುರುವಿನಲ್ಲಿ ಉತ್ಪತ್ತಿ, ಲಿಂಗದಲ್ಲಿ ಸ್ಥಿತಿ, ಜಂಗಮದಲ್ಲಿ ನಿಜೈಕ್ಯರು. ಮತ್ತೆ ಪರಶಿವಮೂರ್ತಿ ತನ್ನ ವಿನೋದಕ್ಕೆ ಆಟವ ಆಡಬೇಕಾಗಿ ಮಹದಾಕಾಶವ ಮಂಟಪವ ಮಾಡಿ, ಆಕಾಶವ ಪರದೆಯ ಕಟ್ಟಿ, ಅಸಂಖ್ಯಾತ ಪ್ರಮಥಗಣಂಗಳಿಗೆ ಮೂರ್ತವ ಮಾಡಿಸಿ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನೆ ಸೂತ್ರವ ಮಾಡಿ ತಮ್ಮ ಕೈಯಲ್ಲಿ ಪಿಡಿದು, ಚಿತ್ರವಿಚಿತ್ರದಾಟವ ಆಡಿಸುತ್ತಿಹುದಕ್ಕೆ ಲೆಕ್ಕವಿಲ್ಲ, ಹೇಳುವುದಕ್ಕೆ ಅಸಾಧ್ಯ. ಆ ಪ್ರಮಥಗಣಂಗಳು ನೋಡಿ, ಆ ಬೊಂಬೆಗಳೇನು ಆಡಿಹವು ? ಸೂತ್ರಿಕನು ಆಡಿಸಿದ ಹಾಂಗೆ ಆಡ್ಯಾವು. ಆ ಗೊಂಬೆಗೆ ಸೂತ್ರವಲ್ಲದೆ ಶಿವನಿಲ್ಲ. ಆ ಗೊಂಬೆಯೊಳಗೆ ಶಿವನಿದ್ದರೆ, ಆಡಿಸುವುದು ಹ್ಯಾಂಗೆ ? ಇವೆಲ್ಲವು ಅನಿತ್ಯವೆಂದು ತಿಳಿದು ಪ್ರಮಥಗಣಂಗಳು ತಮ್ಮ ಲಿಂಗದಲ್ಲಿ ನಿಜ ಮೋಕ್ಷಿಗಳಾಗಿ ಶಾಂಭವಪುರಕ್ಕೆ ಹೋದ ಭೇದವ ಎನ್ನೊಳರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗಂಡನೆಂಜಲಿಗೆ ಹೇಸುವಳು ಮಿಂಡನ ತಂಬುಲವ ತಿಂಬುವ ತೆರನಂತೆ, ಗುರುವಿನುಪದೇಶವ ಕೊಂಡು, ಅನೀತಿ ದೇವರುಗಳ ಎಡೆಯ ತಿನ್ನುವಂತಹ ಮಾದಿಗರು ನೀವು ಕೇಳಿರೊ. ಅಂಡಜ ಉತ್ಪತ್ತಿ ಎಲ್ಲ ದೇವರಿಂದಾಯಿತ್ತು. ಮೈಲಾರ, ಬೀರ, ಭೈರವ, ಧೂಳ, ಕೇತನೆಂಬ ಕಿರಿ ದೈವಕ್ಕೆರಗಿ, ಭಕ್ತರೆನಿಸಿಕೊಂಬುವ ಚಂಡಿನಾಯಿಗಳ ಕಂಡು ಮನ ಹೇಸಿತ್ತೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಋಗ್ವೇದ ಯಜುರ್ವೇದ ತಾನಿರ್ದಲ್ಲಿ, ಸಾಮದೇವ ಅಥರ್ವಣವೇದ ತಾನಿರ್ದಲ್ಲಿ, ಉದಾತ್ತ ಅನುದಾತ್ತ ಸ್ವರಿತ ಪ್ರಚರವೆಂಬ ಸ್ವರಂಗಳು ಮೊದಲಾಗಿ, ಅನಂತ ವೇದಸ್ವರಂಗಳೆಲ್ಲ ತಾನಿರ್ದಲ್ಲಿ, ಅಜಪೆ ಗಾಯತ್ರಿ ತಾನಿರ್ದಲ್ಲಿ, ಛಂದಸ್ಸು ನಿಘಂಟು ಶಾಸ್ತ್ರಂಗಳೆಲ್ಲ ತಾನಿರ್ದಲ್ಲಿ, ಅಷ್ಟಾದಶಪುರಾಣಂಗಳು ತಾನಿರ್ದಲ್ಲಿ, ಅಷ್ಟವಿಂಶತಿ ದಿವ್ಯಾಗಮಂಗಳು ತಾನಿರ್ದಲ್ಲಿ, ಅನಂತಕೋಟಿ ವೇದಂಗಳು ತಾನಿರ್ದಲ್ಲಿ, ಇವೆಲ್ಲ ತನ್ನಲ್ಲಿ ಉತ್ಪತ್ತಿ ಸ್ಥಿತಿ ಲಯವಲ್ಲದೆ ಮತ್ತಾರುಂಟು ಹೇಳಾ ? ತನ್ನಿಂದದ್ಥಿಕವಪ್ಪ ಪರಬ್ರಹ್ಮವಿಲ್ಲವಾಗಿ ತಾನೇ ಸಹಜ ನಿರಾಲಂಬವಾಗಿಹ ಸ್ವಯಂಭುಲಿಂಗ ನೋಡಾ ಅನಂತ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪರಾತ್ಪರ ಚಿದ್ಬ್ರಹ್ಮಪರಶಿವಮೂರ್ತಿಯು ಮನು-ಮುನಿ, ಸಿದ್ಧ-ಸಾಧಕ, ಯಕ್ಷ-ರಾಕ್ಷಸ, ಯತಿ-ವ್ರತಿ, ಶೀಲ-ನೇಮಗಳ ಭಾವಾಭಾವಕ್ಕೆ ಮೆಚ್ಚಿ, ಅವರವರ ಕಾಂಕ್ಷೆಗಳಂತೆ ಫಲಪದದಾಯುಷ್ಯಕ್ಕೆ ಯೋಗ್ಯರಾಗಿ, ಅಷ್ಟಮಹದೈಶ್ವರ್ಯದಿಂದ ಬ್ರಹ್ಮನ ಉತ್ಪತ್ತಿ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹಕ್ಕೆ ಕಾರಣರಾಗಿ, ಶೈವಮಾರ್ಗದಿಂದೆ ನಿಜಮೋಕ್ಷವ ಕಾಣದೆ, ಅಷ್ಟಾವರಣದ ಚಿದ್ಬೆಳಗ ಸೇರಿದ ಸದ್ಭಕ್ತಿ-ಜ್ಞಾನ-ವೈರಾಗ್ಯ, ಸತ್ಯ-ಸದಾಚಾರವನರಿಯದೆ, ಇಹಲೋಕದ ಭೋಗವ ಪರಲೋಕದ ಮೋಕ್ಷಾಪೇಕ್ಷೆಯಿಂದ ಎಡೆಯಾಡುತ್ತ, ಪುಣ್ಯ-ಪಾಪ, ಸುಖ-ದುಃಖ, ಸ್ತುತಿ-ನಿಂದೆ, ಸಿರಿ-ದರಿದ್ರ. ಆಶೆ-ಆಮಿಷ, ರೋಗ-ರುಜಿನಗಳಿಂದ, ಶಿವನೆ ಹರನೆ ಭವನೆಯೆಂದು ಗೋಳಿಡುವವರಿಗೆ, ನಿರಾಕಾರಪರಿಪೂರ್ಣ ಪರಶಿವನು ಆಗಳು ಹಿಂದಾಗಿ, ಶಿವಗಣವ ಸೇರುವಂತೆ ಯೋಗಾಭ್ಯಾಸವ ತೋರಿ, ಅನಂತಮಣಿಮಾಲೆ ಜಪಕ್ರಿಯಾನುಷ್ಠಾನ ಮಂತ್ರ-ತಂತ್ರ-ಯಂತ್ರ-ಯಜ್ಞಾದಿಗಳ ಹೇಳಿ, ಪರಮಾರಾಧ್ಯ ನಿರವಯಪ್ರಭು ಮಹಾಂತನ ಗಣಾಚಾರಕ್ಕೆ ಅಯೋಗ್ಯರೆನಿಸಿರ್ಪರು ಕಾಣಾ ಸಿದ್ಧಮಲ್ಲಿಕಾರ್ಜುಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
[ಪೃಥ್ವಿ ಸಲಿಲ ಪಾವಕ ಪವನ ಅಂಬರ]ರವಿ ಶಶಿ ಆತ್ಮವೆಂಬ ಅಷ್ಟತನುವಿನ ಭೇದವ ಭೇದಿಸಿ ಶ್ರೋತ್ರ ನೇತ್ರ ತ್ವಕ್ಕು ಘ್ರಾಣ ಜಿಹ್ವೆ [ಎಂಬ] ಪಂಚೇಂದ್ರಿಯವನರಿದು, ವಾಕು ಪಾಣಿ ಪಾದ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂ[ಗಳ] ತೊರೆದು, ಪ್ರಾಣಾಪಾನ ವ್ಯಾನೋದಾನ ಸಮಾನ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ ದಶವಾಯುಗಳ ಸಂಚವನರಿದು, ಮನಬುದ್ಧಿ ಚಿತ್ತಹಂಕಾರವೆಂಬ ಚತುರ್ವಿಧ ಕರಣಂಗಳನೊಂದು ಮಾಡಿ, ಉತ್ಪತ್ತಿ ಸ್ಥಿತಿ ಲಯವೆಂಬ ಕಾಲಮೂಲಾದಿಗಳಂ ಸುಟ್ಟು, ಜ್ಞಾನವನೆ ಬೆಳಗಿ, ಧ್ಯಾನವನೆ ನಿಲಿಸಿ, ಸುಚಿತ್ತದಲ್ಲಿ ಲಿಂಗಾರ್ಚನೆಯ ಮಾಡುವ ಶರಣ. ವ್ಯಾಪಾರಂ ಸಕಲಂ ತ್ಯಕ್ತ್ವಾ ರುದ್ರೋ ರುದ್ರಂ ಸಮರ್ಚಯೇತ್ ಎಂಬ ಶ್ರುತಿಯ ನಿಮ್ಮ ಶರಣರಲ್ಲಿ ಕಾಣಬಹುದು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->