ಅಥವಾ

ಒಟ್ಟು 23 ಕಡೆಗಳಲ್ಲಿ , 13 ವಚನಕಾರರು , 23 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಭಾನು ಶಶಿ ಕಳೆಗುಂದಿ, ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂಬ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ_ ವಾಯುವನರಿಯವೊ! ಆದಿಪ್ರಣಮವನರಿದಹೆನೆಂಬವಂಗೆ, ಬಯಲು ಆಕಾಶದೊಳಗೊಂದು ರಸದ ಬಾವಿ! ಮುನ್ನಾದವರೆಲ್ಲಿಯವರೆಂದೆನಬೇಡ ಗುಹೇಶ್ವರನೆಂಬ ಲಿಂಗವು ತಾನೆ ಕಂಡೆಲವೊ!
--------------
ಅಲ್ಲಮಪ್ರಭುದೇವರು
ಅಯ್ಯ ! ಸಮಸ್ತಧಾನ್ಯಾದಿಗಳಲ್ಲಿ, ಸಮಸ್ತ ಫಲಾದಿಗಳಲ್ಲಿ, ಸಮಸ್ತಪುಷ್ಪಪತ್ರಾದಿಗಳಲ್ಲಿ ಮಧುರ, ಒಗರು, ಕ್ಷಾರ, ಆಮ್ಲ, ಕಹಿ, ಲವಣ ಮೊದಲಾದ ಸಮಸ್ತಪರಮಚಿದ್ರಸವಡಗಿರ್ಪಂತೆ, ಷೋಡಶಮದಗಜದಂತರಂಗದ ಮಧ್ಯದಲ್ಲಿ ಸಮಸ್ತ ವೈರಾಗ್ಯ, ತಿರಸ್ಕಾರಸ್ವರೂಪ ಮಹಾ [ಅ]ಜ್ಞಾನವಡಗಿರ್ಪಂತೆ, ಚಂದ್ರಕಾಂತದ ಶಿಲಾಮಧ್ಯದಲ್ಲಿ ಚಿಜ್ಜಲವಡಗಿರ್ಪಂತೆ, ಶಿಶುಗಳು `ಕಂಡ ಕನಸು' ತಂದೆ ತಾಯಿಗಳಿಗೆ ಕಾಣಿಸಿದಂತೆ, ಕರವೀರ, ಸುರಹೊನ್ನೆ, ಜಾಜಿ, ಬಕುಳ, ಪಾದರಿ, ಪಾರಿಜಾತ, ಮೊಲ್ಲೆ, ಮಲ್ಲಿಗೆ, ತಾವರೆ, ನೈದಿಲೆ, ಸಂಪಿಗೆ, ದವನ, ಪಚ್ಚೆ, ಕಸ್ತೂರಿ, ಮರುಗ, ಬಿಲ್ವ ಮೊದಲಾದ ಪುಷ್ಪ ಪತ್ರಾದಿಗಳಲ್ಲಿ ಮಹಾಸದ್ವಾಸನಾ ಸ್ವರೂಪವಾದ ಪರಿಮಳವಡಗಿರ್ಪಂತೆ, ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳ ಮಧ್ಯದಲ್ಲಿ ಭ್ರಮರನಾದ, ವೀಣಾನಾದ, ಘಂಟಾನಾದ, ಭೇರಿನಾದ, ಮೇಘನಾದ, ಪ್ರಣಮನಾದ, ದಿವ್ಯನಾದ, ಸಿಂಹನಾದ, ಶರಭನಾದ, ಮಹಾನಾದಂಗಳಡಗಿರ್ಪಂತೆ, ಸದ್ಭಕ್ತ ಶಿವಶರಣಗಣಂಗಳ ಮಧ್ಯದಲ್ಲಿ ಅಡಗಿರ್ದು, ಜಗದ ಜಡಜೀವರಿಗೆ ಗೋಚರವಿಲ್ಲದಿರ್ಪುದು ನೋಡ ! ಗುಹೇಶ್ವರಲಿಂಗವು, ಚೆನ್ನಬಸವಣ್ಣ
--------------
ಅಲ್ಲಮಪ್ರಭುದೇವರು
ಪ್ರಾಣಾದಿ ವಾಯುಗಳ ಕಳೆದು ಭಕ್ತರಾದರೆಮ್ಮವರು, _ಅದೆಂತೆಂದಡೆ: ಅಲ್ಲಲ್ಲಿರ್ದ ದಶವಾಯುಗಳ ದಶಸ್ಥಾನದಲ್ಲಿ ನಿಲಿಸಿ ಭಕ್ತಿಯ ಮಾಡುವ ಪರಿಯ ಹೇಳಿಹೆ ಕೇಳಿರಣ್ಣಾ: ಪ್ರಾಣವಾಯುವ ನಿಲಿಸಿದರು ಪ್ರಾಣಲಿಂಗದಲ್ಲಿ, ಅಪಾನವಾಯುವ ನಿಲಿಸಿದರು ಪ್ರಸಾದಲಿಂಗದಲ್ಲಿ, ವ್ಯಾನವಾಯುವ ನಿಲಿಸಿದರು ಚತುರ್ವಿಧಪದದ ಬಯಕೆಯಳಿದ ಲಿಂಗಧ್ಯಾನದಲ್ಲಿ. ಉದಾನ ವಾಯುವ ನಿಲಿಸಿದರು ಉದ್ದೇಶದಿಂದ ನಡೆವ ಅನ್ಯಗಮನವ ಕೆಡಿಸಿ
--------------
ಚನ್ನಬಸವಣ್ಣ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಅಯ್ಯ ! ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯು ಪ್ರಾಣಗುಣಂಗಳ ನಷ್ಟವ ಮಾಡಿ ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾನ್ಯ, ಧಾರಣ, ಸಮಾಧಿಯೆಂಬ ಹಠಯೋಗ ಜಡಶೈವಮಾರ್ಗವನುಳಿದು, ನಿಭ್ರ್ರಾಂತ, ನಿಶ್ಚಿಂತ, ನಿರ್ಗುಣಾನಂದಲೀಲೆಯನರಿದು, ಹಿಂದೆ ಹೇಳಿದ ಸದ್ಭಕ್ತ_ಮಹೇಶ_ಪ್ರಸಾದಿಸ್ಥಲವ ಅಂಗವ ಮಾಡಿಕೊಂಡು ಸರ್ವಾಂಗಲೋಚನಮೂರ್ತಿಯಾಗಿ ಪ್ರಭಾವಿಸುವ ನಿಜಪ್ರಾಣಲಿಂಗಿಯಂತರಂಗದಲ್ಲಿ ಚಿನ್ಮಯ ಸ್ವರೂಪಲೀಲೆಯಿಂ ಸಮಸ್ತ ತತ್ತ್ವಾನುಭಾವವನೊಳಗು ಮಾಡಿಕೊಂಡು ಹದಿನಾಲ್ಕು ಸ್ಥಲಂಗಳ ಗರ್ಭೀಕರಿಸಿಕೊಂಡು ಐದು ಸಾವಿರದ ನೂರ ಎಂಬತ್ತುನಾಲ್ಕು ಮಂತ್ರಮಾಲೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ, ಬಂಗಾರ ಲೋಹವನೊಳಕೊಂಡಂತೆ, ತನ್ನ ಸೋಂಕಿದವರೆಲ್ಲ ತನ್ನಂತೆಯೆಂಬ ಗುರುವಚನೋಕ್ತಿಪ್ರಮಾಣದಿಂದೆ ಶಬ್ದದೊಳಗೆ ನಿಃಶಬ್ದವಡಗಿರ್ಪ ಹಾಂಗೆ ಏಕಸ್ವರೂಪಿನಿಂದೆ ಯಜನಸ್ವರೂಪಮೂರ್ತಿ ಜಂಗಮಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯ - ಇಂತೀ ದಶವಾಯುಗಳು. ಅಲ್ಲಿ ಪ್ರಾಣವಾಯು ಇಂದ್ರನೀಲವರ್ಣ ಕಂಡದ ಅಧೋ ಭಾಗೆಯಲ್ಲಿರ್ದ ಹೃದಯ ಪಾದ ನಾಬ್ಥಿ ನಾಶಿಕವಧರಂಗಳಲ್ಲಿ ಉಚ್ಛಾ ್ವಸ ನಿಶ್ವಾಸಂಗಳಿಂದ ಚರಿಸುತ್ತಿಹುದು. ಅಪಾನವಾಯು ಇಂದ್ರಗೋಪವರ್ಣ, ವಾಯು ಶಿಶ್ನ ಉರ ಜಾನು ಪಾದ ಜಂಘೆ ನಾಬ್ಥಿಮೂಲ ಜಠರದಲ್ಲಿರ್ದು ಮಲ ಮೂತ್ರಂಗಳ ಪೊರಮಡಿಸುತ್ತಿಹುದು. ವ್ಯಾನವಾಯು ಗೋಕ್ಷೀರವರ್ಣ, ಕರ್ಣ ಅಕ್ಷಿ ಘ್ರಾಣ ಗಂಡಾಗ್ರ ಗುಲ್ಫಂಗಳಲ್ಲಿ ವರ್ತಿಸುತ್ತ ಹಿಡಿವುದು ಬಿಡುವುದು ಇವು ಮೊದಲಾದ ವ್ಯಾಪಾರಂಗಳ ಮಾಡುತ್ತಿಹುದು. ಉದಾನವಾಯು ಎಳೆಮಿಂಚಿನವರ್ಣ, ಹಸ್ತಪಾದಾ ಸರ್ವಸಂದುಗಳಲ್ಲಿರ್ದು ಸಂದು ಸಂದುಗಳಿಗೆ ಪಟುತ್ವಮಂ ಪುಟ್ಟಿಸುತ್ತಿಹುದು. ಸಮಾನವಾಯು ಶುದ್ಧ ಸ್ಫಟಿಕವರ್ಣ, ದೇಹ ಮಧ್ಯದಲ್ಲಿರ್ದು ಸರ್ವ ಸಂದುಗಳಲ್ಲಿ ವ್ಯಾಪಿಸಿಕೊಂಡು, ಕೊಂಡಂತಹ ಅನ್ನರಸವ ಸರ್ವಾಂಗಕ್ಕೆ ಸಮಾನವಂ ಮಾಡಿ ಅಷ್ಟಕೋಟಿ ರೋಮನಾಳಂಗಳಿಗೂ ಹಂಚಿಕ್ಕಿ ಅಂಗವಂ ಪೋಷಿಸುತ್ತಿಹುದು. ನಾಗವಾಯು ಬಾಲಸೂರ್ಯನ ವರ್ಣ, ಕಂಠಸ್ಥಾನದ್ಲರ್ದು ವದ್ರ್ಥಿ ನಿರೋಧಂಗಳಿಂದುದ್ಗಾರಮಂ ಮಾಡಿಸುತ್ತಿಹುದು. ಕೂರ್ಮವಾಯು ಕುಂದೇಂದುವಿನ ವರ್ಣ, ನೇತ್ರಮೂಲದಲ್ಲಿರ್ದು ಉನ್ಮೀಲನ ನಿಮೀಲನಾಡಿಗಳನು ಮಾಡುತ್ತಿಹುದು. ಕೃಕರವಾಯು ನೀಲವರ್ಣ ಕಾಯದಲ್ಲಿರ್ದು ಕ್ಷುಧಾ ಧರ್ಮಂಗಳಂ ಮಾಡುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ, ತಾಳಮೂಲದಲ್ಲಿರ್ದು ಅಗುಳಿಕೆಯಾರಡಿಗಳಂ ಪುಟ್ಟಿಸ್ಕ್ತುಹುದು. ಧನಂಜಯವಾಯು ಸಪ್ತ ಜಾಂಬೂನದ ವರ್ಣ, ಶೋಕರಾಗಂಗಳ ಪುಟ್ಟಿಸಿ ಹಾಡಿಸ್ಕ್ತುಹುದು. ಇಂತೀ ದಶವಾಯುಗಳ ದೇಹವನುದ್ಧರಿಸುತ್ತಿಹವು. ಈ ವಾಯುವನೇರಿ ಜೀವನು ಈಡಾಪಿಂಗಳ ಮಾರ್ಗದಲ್ಲಿ ವ್ಯವಹರಿಸುತ್ತಿಹನು. ಈ ವಾಯುಗ್ಕಯನರಿದು ಯೋಗಿಸುವುದೇ ಯೋಗ. ಕಪಿಲಸಿದ್ಧಮಲ್ಲಿಕಾರ್ಜುನನೆಂಬ ನಿಜವನೈದುವದೇ ಮಾರ್ಗವು
--------------
ಸಿದ್ಧರಾಮೇಶ್ವರ
ಲಿಂಗಾರ್ಚನೆಯಿಲ್ಲದ ಮುನ್ನ, ಸಿಂಗಿಯನಾರೋಗಿಸಿದಿರಿ. ಸಂಜೆ ಸಮಾಧಿಗಳಿಲ್ಲದ ಮುನ್ನ ಉಂಡಿರಿ ಚನ್ನನ ಮನೆಯಲ್ಲಿ. ಚಿತ್ರಗುಪ್ತರರಿಯದ ಮುನ್ನ ಎತ್ತಿದಿರಿ ಕಾಂಚಿಯ ಪುರವ, ಬೈಚಿಟ್ಟಿರಿ ಕೈಲಾಸದಲ್ಲಿ. ನಿಮ್ಮ ಚಿಕ್ಕುಟ ಉದರದಲ್ಲಿ ಈರೇಳು ಭುವನಂಗಳೆಲ್ಲವು. ನಿಮ್ಮ ರೋಮಕೂಪದಲ್ಲಿ ಅಡಗಿದವು; ಪ್ರಾಣ ಅಪಾನ ವ್ಯಾನ ಉದಾನ ಸಮಾನ [ಗಳು]_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಂಗದಮೇಲೊಂದು ಲಿಂಗವ ಕಂಡೆ; ಲಿಂಗದಮೇಲೊಂದಂಗವ ಕಂಡೆನು ನೋಡಾ. ಅಂಗವೆಂದರೆ ಆತ್ಮನು; ಲಿಂಗವೆಂದರೆ ಪರಮನು. ಶಿವಜೀವರೊಂದಾದಲ್ಲಿ, ಪ್ರಾಣಾಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ[ವೆ]ಂಬ ದಶವಾಯುಗಳ ಗಮನಾಗಮನದ ವಿಷಯವ್ಯಾಪ್ತಿಯಡಗಿ ಆತ್ಮಲಿಂಗಸಂಬಂಧಿಯಾಗಿರ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಕಾರ ನಿರಾಕಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು, ಜೀವ ಪರಮರಿಲ್ಲದಂದು, ಮನ ಮನನ ಮನುನೀಯವಿಲ್ಲದಂದು, ಶೂನ್ಯ ನಿಶೂನ್ಯ ನಾಮ ನಿರ್ನಾಮ ಇವೇನೂ ಇಲ್ಲದೆ, ಬಚ್ಚಬರಿಯ ಬಯಲೆ ಸಹಜದಿಂದ ಗಟ್ಟಿಗೊಂಡು, ಘನಲಿಂಗವೆಂಬ ಪುರುಷತತ್ತ್ವವಾಯಿತ್ತಯ್ಯ. ಆ ಘನಲಿಂಗದಿಂದ ಚಿಚ್ಛಕ್ತಿ ಜನಿಸಿದಳು. ಚಿಚ್ಚಕ್ತಿಯಿಂದ ಪರಶಕ್ತಿ ಪುಟ್ಟಿದಳು. ಪರಶಕ್ತಿಯಿಂದ ನಾದ ಬಿಂದು ಕಳೆಗಳಾದವು. ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ. ಇಂತೀ ತ್ರಿವಿಧಕ್ಕೆ ಪರಶಕ್ತಿಯೇ ತಾಯಿ. ಇಂತೀ ನಾಲ್ಕು ಒಂದಾದಲ್ಲಿ ಓಂಕಾರವಾಯಿತ್ತಯ್ಯ. ಮುಂದೀ ಪ್ರಣವ ತಾನೆ ಪಂಚಲಕ್ಷಣವಾಯಿತ್ತು. ಆ ಘನಲಿಂಗದಿಂದಲೇ ಪಂಚಸಾದಾಖ್ಯಮೂರ್ತಿಗಳಾದುವು. ಆ ಚಿಚ್ಛಕ್ತಿಯಿಂದಲೇ ಪಂಚಶಕ್ತಿಯರಾದರು. ಆ ಪಂಚಶಕ್ತಿಯರಿಂದಲೇ ಪಂಚಕಲೆಗಳಾದವು. ಆ ಪಂಚಲಕ್ಷಣವುಳ್ಳ ಮೂರ್ತಿ ತಾನೆ ತ್ರಯವಾದ ಭೇದವ ಹೇಳಿಹೆನು. ಅದೆಂತೆಂದಡೆ: ಶಿವತತ್ತ್ವ ಸದಾಶಿವತತ್ತ್ವ ಮಾಹೇಶ್ವರತತ್ತ್ವವೆಂದು ಮೂರುತೆರನಾಗಿಪ್ಪುದು. ಬಾಹ್ಯ ನಿಃಕಲತತ್ತ್ವವಾಗಿಪ್ಪುದು. ಒಂದು ಸಕಲನಿಃಕಲತತ್ತ್ವವಾಗಿಪ್ಪುದು. ಒಂದು ಸಕಲತತ್ತ್ವವಾಗಿಪ್ಪುದು. ಶಿವತತ್ತ್ವ ಏಕಮೇವ ಒಂದೆಯಾಗಿಪ್ಪುದು. ಸದಾಶಿವತತ್ತ್ವ ಐದುತೆರನಾಗಿಪ್ಪುದು. ಮಾಹೇಶ್ವರತತ್ವ ಇಪ್ಪತ್ತೆ ೈದು ತೆರನಾಗಿಪ್ಪುದು. ಹೀಂಗೆ ಶಿವತತ್ತ್ವ ಮೂವತ್ತೊಂದು ತೆರನೆಂದರಿವುದು. ಸ್ಥೂಲ, ಸೂಕ್ಷ ್ಮ, ಪರತತ್ವವೆಂಬ ಈ ಮೂರು ತತ್ತ್ವವೆ ಆರಾದ ಭೇದಮಂ ಪೇಳ್ವೆ. ಅದೆಂತೆಂದಡೆ: ಆ ಘನಲಿಂಗದ ಸಹಸ್ರಾಂಶದಲ್ಲಿ ಚಿತ್‍ಶಕ್ತಿ. ಚಿತ್‍ಶಕ್ತಿಯ ಸಹಸ್ರಾಂಶದಿಂದ ಪರಮೇಶ್ವರ. ಪರಮೇಶ್ವರನ ಸಹಸ್ರಾಂಶದಿಂದ ಪರಶಕ್ತಿ. ಆ ಪರಶಕ್ತಿಯ ಸಹಸ್ರಾಂಶದಿಂದ ಸದಾಶಿವನು. ಆ ಸದಾಶಿವನ ಸಹಸ್ರಾಂಶದಿಂದ ಆದಿಶಕ್ತಿ. ಆದಿಶಕ್ತಿಯ ಸಹಸ್ರಾಂಶದಿಂದ ಈಶ್ವರ. ಆ ಈಶ್ವರನ ಸಹಸ್ರಾಂಶದಿಂದ ಇಚ್ಛಾಶಕ್ತಿ. ಇಚ್ಛಾಶಕ್ತಿಯ ಸಹಸ್ರಾಂಶದಿಂದ ಮಾಹೇಶ್ವರ. ಮಾಹೇಶ್ವರನ ಸಹಸ್ರಾಂಶದಿಂದ ಜ್ಞಾನಶಕ್ತಿ. ಆ ಜ್ಞಾನಶಕ್ತಿಯ ಸಹಸ್ರಾಂಶದಿಂದ ರುದ್ರನು. ಆ ರುದ್ರನ ಸಹಸ್ರಾಂಶದಿಂದ ಕ್ರಿಯಾಶಕ್ತಿ. ಆ ಕ್ರಿಯಾಶಕ್ತಿಯ ಸಹಸ್ರಾಂಶದಿಂದ ಈಶಾನ್ಯಮೂರ್ತಿಯಾದನು. ಹೀಂಗೆ ಮೂರು ಆರು ತೆರನಾಯಿತ್ತಯ್ಯ. ಇನ್ನೀ ಲಿಂಗಂಗಳಿಗೆ ಸರ್ವ ಲಕ್ಷಣ ಸಂಪೂರ್ಣವ ಹೇಳಿಹೆನು. ಅದೆಂತೆಂದಡೆ: ಒಂದು ಮೂರ್ತಿ ಸರ್ವತೋಮುಖ ಸರ್ವತೋಚಕ್ಷು, ಸರ್ವತೋಬಾಹು, ಸರ್ವತೋಪಾದ, ಸರ್ವಪರಿಪೂರ್ಣನಾಗಿ ಮಾಣಿಕ್ಯವರ್ಣದ ಧಾತುವಿನಲ್ಲಿ ಭಾವಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಏಕ ಶಿರಸ್ಸು, ತ್ರಿಣೇತ್ರ, ಎರಡು ಹಸ್ತ, ಎರಡು ಪಾದ. ಮಿಂಚಿನವರ್ಣದ ಧಾತುವಿನಲ್ಲಿ ಜ್ಞಾನಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಎರಡು ಶಿರಸ್ಸು, ಆರು ಕಂಗಳು, ನಾಲ್ಕು ಭುಜ, ಎರಡು ಪಾದ, ಸುವರ್ಣದ ಧಾತುವಿನಲ್ಲಿ ಮನೋಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಮೂರು ಮುಖ, ಒಂಬತ್ತು ಕಂಗಳು, ಆರು ಭುಜ, ಎರಡು ಪಾದ, ಶ್ವೇತವರ್ಣದ ಧಾತುವಿನಲ್ಲಿ ಅಹಂಕಾರಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ನಾಲ್ಕುಮುಖ, ಹನ್ನೆರಡು ಕಂಗಳು, ಎಂಟು ಭುಜ, ಎರಡು ಪಾದ, ಕುಂಕುಮವರ್ಣದ ಧಾತುವಿನಲ್ಲಿ ಬುದ್ಧಿಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಪಂಚಮುಖ, ದಶಭುಜ, ದಶಪಂಚನೇತ್ರ, ದ್ವಿಪಾದ, ತನುಯೇಕ, ಶುದ್ಧಸ್ಫಟಿಕವರ್ಣದ ಧಾತುವಿನಲ್ಲಿ ಚಿತ್ತಗಮ್ಯವಾಗಿ ಒಪ್ಪುತಿಪ್ಪುದು. ನಿರಾಕಾರವೇ ಸಾಕಾರವಾಗಿ ತೋರಿತ್ತು. ಸಾಕಾರ ನಿರಾಕಾರವೇಕವೆಂಬುದನು ಸ್ವಾನುಭಾವದಿಂದ ಅನುಭಾವಕೆ ತಂದೆನಯ್ಯ. ಇದು ತನ್ನಿಂದ ತಾನೆ ಸ್ವಯಂಭುವಾದ ಮೂರ್ತಿಯಲ್ಲದೆ ಮತ್ತೊಂದರಿಂದಾದುದಲ್ಲ. ಇಂತೆಸೆವ ಶಿವನ ಮುಖದಲ್ಲಿ ಒಗೆದ ಭೂತಂಗಳಾವವೆಂದಡೆ: ಸದ್ಯೋಜಾತ ಮುಖದಲ್ಲಿ ಪೃಥ್ವಿ. ವಾಮದೇವ ಮುಖದಲ್ಲಿ ಅಪ್ಪು. ಅಘೋರ ಮುಖದಲ್ಲಿ ಅಗ್ನಿ. ತತ್ಪುರುಷ ಮುಖದಲ್ಲಿ ವಾಯು. ಈಶಾನ್ಯ ಮುಖದಲ್ಲಿ ಆಕಾಶ. ಇಂತುದಯವಾದ ಪಂಚಭೂತಂಗಳು ಪಂಚವಿಂಶತಿತತ್ವವಾದ ಭೇದವ ಹೇಳಿಹೆನು. ಆವಾವೆಂದರೆ: ಪೃಥ್ವಿ ಅಪ್ಪು ತೇಜ ವಾಯು ಆಕಾಶ ಇಂತಪ್ಪ ಸ್ಥೂಲಭೂತಿಕವೈದು. ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂದು ವಾಯುಗಳೈದು. ವಾಕು ಪಾಣಿ ಪಾದ ಪಾಯು ಗುಹ್ಯವೆಂದು ಕರ್ಮೇಂದ್ರಿಯಂಗಳೈದು. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂದು ಬುದ್ಧೀಂದ್ರಿಯಂಗಳೈದು. ಮನ ಬುದ್ಧಿ ಚಿತ್ತ ಅಹಂಕಾರವೆಂದು ಕರಣ ಚತುಷ್ಟಯ ನಾಲ್ಕು. ಜೀವನೊಬ್ಬನು; ಅಂತು ಆತ್ಮತತ್ತ್ವವಿಪ್ಪತ್ತೆ ೈದು. ವಿದ್ಯಾತತ್ತ್ವಹತ್ತು ತೆರನು. ಅದೆಂತೆಂದಡೆ: ಶಾಂತಾತೀತ, ಶಾಂತಿ, ವಿದ್ಯೆ, ಪ್ರತಿಷೆ*, ನಿವೃತ್ತಿ ಎಂದು ಕಲಾಶಕ್ತಿಯರೈದು. ಶಿವಸಾದಾಖ್ಯ ಅಮೂರ್ತಿಸಾದಾಖ್ಯ ಮೂರ್ತಿಸಾದಾಖ್ಯ ಕರ್ತೃಸಾದಾಖ್ಯ ಕರ್ಮಸಾದಾಖ್ಯವೆಂದು ಶಿವಾದಿಯಾದ ಸಾದಾಖ್ಯಮೂರ್ತಿಗಳೈದು. ಅಂತು ವಿದ್ಯಾತತ್ವ ಹತ್ತು ತೆರನು. ದ್ವಿತೀಯ ತತ್ತ್ವಮೂವತ್ತೆ ೈದು ತೆರನು. ಇವೆಲ್ಲಾ ತತ್ತ್ವಂಗಳಿಗನುತ್ತರತತ್ತ್ವವಾಗಿ ಶಿವತತ್ತ್ವವೊಂದು. ಅಂತು ತತ್ತ್ವ ಮೂವತ್ತಾರು. ಅಂತು ಆತ್ಮತತ್ತ್ವ ವಿದ್ಯಾತತ್ತ್ವ ಶಿವತತ್ತ್ವವೆಂಬ ತ್ರೆ ೈತತ್ತ್ವ ಮೂವತ್ತಾರು ತೆರನು. ಈ ತತ್ತ್ವಂಗಳಲ್ಲಿಯೇ ತತ್ತ್ವಮಸ್ಯಾದಿ ವಾಕ್ಯಾರ್ಥ ಕಾಣಲಾಯಿತ್ತು. ಅದು ಹೇಂಗೆಂದಡೆ: ತತ್‍ಪದ ತ್ತ್ವಂಪದ ಅಸಿಪದವೆಂದು ಮೂರು ತೆರನು. ತತ್‍ಪದವೆಂದು ತೂರ್ಯನಾಮದ ಶಿವತತ್ತ್ವವು. ತ್ವಂ ಪದವೆಂದು ಇಪ್ಪತ್ತೆ ೈದು ತೆರನಾಗುತಂ ಇದ್ದಂಥಾ ಆತ್ಮತತ್ತ್ವವು. ಅಸಿ ಪದವೆಂದು ಹತ್ತು ತೆರನಾಗುತಂ ಇದ್ದಂಥಾ ವಿದ್ಯಾತತ್ತ್ವವು. ತತ್‍ಪದವೇ ಲಿಂಗ, ತ್ವಂ ಪದವೇ ಅಂಗ, ಅಸಿ ಪದವೇ ಲಿಂಗಾಂಗ ಸಂಬಂಧ. ಈ ತ್ರಿವಿಧ ಪದವನೊಳಕೊಂಡು ನಿಂದುದೇ ಪರತತ್ತ್ವವಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದಶವಾಯುಗಳು ಅವಾವೆಂದಡೆ ಹೇಳುವ ಕೇಳಿರಣ್ಣಾ : ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ ದಶವಾಯುಗಳು. ಇವರ ಗುಣಧರ್ಮಕರ್ಮವೆಂತೆಂದಡೆ, ಅದಕ್ಕೆ ವಿವರ : ಪ್ರಾಣವಾಯು ಇಂದ್ರನೀಲವರ್ಣ, ಹೃದಯಸ್ಥಾನದಲ್ಲಿದ್ದು ಅಂಗುಷ* ತೊಡಗಿ ಪ್ರಾಣಾಗ್ರಪರಿಯಂತರದಲು ಸಪ್ರಾಣಿಸಿಕೊಂಡು ಉಚ್ಛ್ವಾಸ ನಿಶ್ವಾಸಮನೈದು ಅನ್ನ ಜೀರ್ಣಕಾರವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ, ಗುದಸ್ಥಾನದಲ್ಲಿದ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಅಧೋದ್ವಾರಮಂ ಬಲಿದು ಅನ್ನರಸವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷೀರವರ್ಣ, ಸರ್ವಸಂಧಿಯಲ್ಲಿದ್ದು ನೀಡಿಕೊಂಡಿದ್ದುದ ಅನುವಂ ಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯು ಎಳೆಮಿಂಚಿನವರ್ಣ, ಕಂಠಸ್ಥಾನದಲ್ಲಿದ್ದು ಸೀನುವ, ಕೆಮ್ಮುವ, ಕನಸುಕಾಣುವ, ಏಳಿಸುವ ಕಾರ್ಯಗೈದು ವರ್ಧಿಸಿ ರೋಧನಂಗಳಂ ಮಾಡಿಸಿ ಅನ್ನರಸ ಆಹಾರ ಸ್ಥಾಪನಂಗೈಸುತ್ತಿಹುದು. ಸಮಾನವಾಯು ನೀಲವರ್ಣ, ನಾಭಿಸ್ಥಾನದಲ್ಲಿದ್ದು ಅಪಾದಮಸ್ತಕ ಪರಿಯಂತರದಲ್ಲು ಸಪ್ರಾಣಿಸಿಕೊಂಡು ಇದ್ದಂಥ ಅನ್ನರಸವನು ಎಲ್ಲ ರೋಮನಾಳಂಗಳಿಗೆ ಹಂಚಿಹಾಕುತ್ತಿಹುದು. ಇಂತಿವು ಪ್ರಾಣಪಂಚಕವು. ಇನ್ನು ನಾಗವಾಯು ಪೀತವರ್ಣ, ರೋಮನಾಳಂಗಳಲ್ಲಿದ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂರ್ಮವಾಯು ಶ್ವೇತವರ್ಣ, ಉದರ ಲಲಾಟದಲ್ಲಿದ್ದು ಶರೀರಮಂ ತಾಳ್ದು ದೇಹಮಂ ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆಯುತ್ತ ನಯನದಲ್ಲಿ ಉನ್ಮೀಲನಮಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ, ನಾಶಿಕಾಗ್ರದಲ್ಲಿದ್ದು ಕ್ಷುಧಾದಿ ಧರ್ಮಂಗಳಂ ನೆಗಳಿಸಿ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದ ತ್ತವಾಯು ಸ್ಫಟಿಕವರ್ಣ, ಗುಹ್ಯ ಕಟಿಸ್ಥಾನದಲ್ಲಿದ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿದ್ದಲ್ಲಿ ಏಳಿಸಿ, ಚೇತರಿಸಿ, ಒರಲಿಸಿ, ಮಾತಾಡಿಸುತ್ತಲಿಹುದು. ಧನಂಜಯವಾಯು ನೀಲವರ್ಣ, ಬ್ರಹ್ಮರಂಧ್ರಸ್ಥಾನದಲ್ಲಿದ್ದು ಕರ್ಣದಲ್ಲಿ ಸಮುದ್ರಘೋಷವಂ ಘೋಷಿಸುತ್ತಿಹುದು. ಮರಣಕಾಲಕ್ಕೆ ನಿರ್ಘೋಷಮಪ್ಪುದು. ಇಂತಿವು ದಶವಾಯುಗಳು. ನಿನ್ನ ಕಟ್ಟಳೆಯಿಲ್ಲದೆ ಅಂಗದೊಳು ಚರಿಸ್ಯಾಡಲು ಈ ದಶವಾಯುಗಳಿಗಳವಲ್ಲ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಶಿರ ಮುಖ ಹೃದಯ ಪಾದ ಬಾಹುಗಳೆಲ್ಲ ಶಿವನ ಅವಯವಂಗಳಾದವು. ಶ್ರೋತ್ರ ತ್ವಕ್ ನೇತ್ರ ಜಿಹ್ವೆ ಘ್ರಾಣವೆಂಬವೆಲ್ಲ ಶಿವನ ಇಂದ್ರಿಯಂಗಳಾದವು. ಮನ ಬುದ್ಧಿ ಚಿತ್ತ ಅಹಂಕಾರಗಳೆಲ್ಲಾ ಶಿವನ ಕರಣಂಗಳಾದವು. ಪ್ರಾಣ ಅಪಾನ ವ್ಯಾನ ಉದಾನ ಸಮಾನ ಎಂಬವುಗಳಲ್ಲಿ ಶಿವನ ಚೈತನ್ಯವಿದ್ದುದಾಗಿ ಒಳಗಿದ್ದ ಚೇತನವು ನೀವೇ. ಒಳಗೆ ನೀವು, ಹೊರಗೆ ನೀವು:ನಾನೆಂಬುದಿಲ್ಲ. ನಾನೇನ ಮಾಡಿತ್ತೆಲ್ಲಾ ನಿಮ್ಮ ವಿನೋದ. ಎನ್ನ ಸರ್ವ ಭೋಗವೆಲ್ಲ ನಿಮ್ಮ ಭೋಗವಯ್ಯ. ಕರ್ತೃತ್ವ ನಿಮ್ಮದಾಗಿ, ಎನಗೆ ಕರ್ತೃತ್ವವಿಲ್ಲ. ನಾ ನಿಮ್ಮೊಳಗು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಶ್ರೋತ್ರ, ನೇತ್ರ, ಜಿಹ್ವೆ, ತ್ವಕ್ಕು, ಘ್ರಾಣವೆಂಬ ಬುದ್ಧೀಂದ್ರಿಯಂಗಳನರಿದು, ವಾಕ್ಕು, ಪಾಣಿ, ಪಾದ, ಪಾಯು, ಗುಹ್ಯವೆಂಬ ಕರ್ಮೇಂದ್ರಿಯವ ತೊರೆದು, ಗಂಧ, ರಸ, ರೂಪು, ಸ್ಪರ್ಶನ, ಶಬ್ದವೆಂಬ ಪಂಚೇಂದ್ರಿಯವ ಜರಿದು, ಮನ, ಬುದ್ಧಿ, ಚಿತ್ತ, ಅಹಂಕಾರವೆಂಬ ಚತುಷ್ಟಯ ಕರಣಂಗಳ ಮೆಟ್ಟಿ, ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರವೆಂಬ ಅರಿಷಡ್ವರ್ಗಮಂ ಸುಟ್ಟು, ತನುವ್ಯಸನ, ಮನವ್ಯಸನ, ಧನವ್ಯಸನ, ವಾಹನವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನ, ಮತ್ಸರವ್ಯಸನವೆಂಬ ಸಪ್ತವ್ಯಸನಂಗಳ ಸ್ವಪ್ನದಲ್ಲಿ ನೆನೆಯದೆ, ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ, ಚಂದ್ರ, ಸೂರ್ಯ, ಆತ್ಮರೆಂಬ ಇಂತೀ ಅಷ್ಟಮದವ ಹಿಟ್ಟುಗುಟ್ಟಿ, ಪ್ರಾಣ, ಅಪಾನ, ಉದಾನ, ಸಮಾನ, ನಾದ, ಕೂರ್ಮ, ಕ್ರಕರ, ದೇವದತ್ತ, ಧನಂಜಯವೆಂಬ ದಶವಾಯುವ ಕಡೆಮೆಟ್ಟಿ, ಸಂಸಾರವ ಒಡಹಾಯ್ದು, ಜಗವ ಹೊದ್ದದೆ, ತಾನೊಂದು ಕಡೆಯಾಗಿ ನಿಂದು, ಮಾಯೆಗೆ ಒಡೆಯನಾಗಿ, ಆ ಮಹಾಘನವ ಸೂರೆಗೊಂಡ ಶರಣಂಗೆ ನಮೋ ನಮೋ ಎಂದು ಬದುಕಿದೆನಯ್ಯಾ. ಬಸವಪ್ರಿಯ ಕೂಡಲಚೆನ್ನಬಸವಣ್ಣ, ನಿಮ್ಮ ಧರ್ಮ, ನಿಮ್ಮ ಧರ್ಮ.
--------------
ಹಡಪದ ಅಪ್ಪಣ್ಣ
ಸಹಸ್ರದಳಕಮಲಮಂಟಪದಲ್ಲಿ ಓಂಯೆಂಬ ತಾಯಿ ಒಬ್ಬ ಮಗನ ಹಡೆದು ಸಾಕಿ ಸಲುಹಿ ತನ್ನಂತೆ ಮಾಡಿಕೊಂಡು ತತ್ಪುರುಷಲೋಕದಲ್ಲಿರುವ ಈಶ್ವರನ ಮಗಳ ತಕ್ಕೊಂಡು, ನಿಟಿಲವೆಂಬ ಹಸೆಯಜಗುಲಿಯ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಅಂತಃಕರಣಚತುಷ್ಟಯಂಗಳೆಂಬ ನಾಲ್ಕು ಕಂಬವ ನಿಲ್ಲಿಸಿ, ಮಹಾಜ್ಞಾನವೆಂಬ ಹಂದರವ ಹೊಂದಿಸಿ, ಪ್ರಾಣಾಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯಯೆಂಬ ಹತ್ತು ತೋರಣವ ಕಟ್ಟಿ, ಚಂದ್ರ ಸೂರ್ಯರೆಂಬ ದೀವಿಗೆಯ ಮುಟ್ಟಿಸಿ, ಪಾತಾಳಲೋಕದಲ್ಲಿರ್ಪ ಭಕ್ತನ ಕರೆಸಿ, ಮತ್ರ್ಯಲೋಕದಲ್ಲಿರ್ಪ ಮಹೇಶ್ವರನ ಕರೆಸಿ, ಸ್ವರ್ಗಲೋಕದಲ್ಲಿರ್ಪ ಪ್ರಸಾದಿಯ ಕರೆಸಿ, ತತ್ಪುರುಷಲೋಕದಲ್ಲಿರ್ಪ ಪ್ರಾಣಲಿಂಗಿಯ ಕರೆಸಿ, ಈಶಾನ್ಯಲೋಕದಲ್ಲಿರ್ಪ ಶರಣನ ಕರೆಸಿ, ಈ ಪಂಚಮೂರ್ತಿಗಳಂ ಮಜ್ಜನಂಗೈಸಿ ಕುಳ್ಳಿರ್ದರು ನೋಡಾ ! ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೀಣೆ, ರುದ್ರಂಗೆ ಮೃದಂಗ, ಈಶ್ವರಂಗೆ ಶಂಖ, ಸದಾಶಿವಂಗೆ ಘಂಟೆ, ಈ ಪಂಚಮೂರ್ತಿಗಳು ನಾದವಾಲಗವಂ ಮಾಡುತಿಪ್ಪರು ನೋಡಾ ! ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಈ ಐವರು ನಾಂಟ್ಯವನಾಡುತ್ತಿಪ್ಪರು ನೋಡಾ ! ನಿಷ್ಪತಿಯೆಂಬ ಬಸವಣ್ಣನ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಸೋಮಬೀದಿ ಸೂರ್ಯಬೀದಿಯಲ್ಲಿ ಮೆರವಣಿಗೆಯಂ ಮಾಡಿ, ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಫಾಶಕ್ತಿ ಆದಿಶಕ್ತಿ ಪರಾಶಕ್ತಿ ಈ ಐವರು ನವರತ್ನದ ಹರಿವಾಣಗಳಲ್ಲಿ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಸಪ್ತದೀಪಂಗಳ ರಚಿಸಿ ಓಂ ನಮೋ ಓಂ ನಮೋ ಶಿವಾಯಯೆಂದು ಬೆಳಗುತಿರ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅನಾದಿ ಸದಾಶಿವತತ್ವ, ಅನಾದಿ ಈಶ್ವರತತ್ವ, ಅನಾದಿ ಮಹೇಶ್ವರತತ್ವವೆಂಬ, ಅನಾದಿ ತ್ರಿತತ್ವಂಗಳು ತಾನಲ್ಲ. ಆದಿ ಸದಾಶಿವತತ್ವ, ಆದಿ ಈಶ್ವರತತ್ವ, ಆದಿ ಮಹೇಶ್ವರತತ್ವವೆಂಬ ಆದಿ ತ್ರಿತತ್ವಂಗಳು ತಾನಲ್ಲ. ಶಂಕರ ಶಶಿಧರ ಗಂಗಾಧರ ಗೌರೀಶ ಕಳಕಂಠ ರುದ್ರ, ಕಪಾಲಮಾಲಾಧರ ರುದ್ರ,ಕಾಲಾಗ್ನಿರುದ್ರ, ಏಕಪಾದರುದ್ರ, ಮಹಾಕಾಲರುದ್ರ, ಮಹಾನಟನಾಪಾದರುದ್ರ, ಊಧ್ರ್ವಪಾದರುದ್ರ, ಬ್ರಹ್ಮಕಪಾಲ ವಿಷ್ಣುಕಂಕಾಳವ ಪಿಡಿದಾಡುವ ಪ್ರಳಯಕಾಲರುದ್ರರು, ತ್ರಿಶೂಲ ಖಟ್ವಾಂಗಧರರು ವೃಷಭವಾಹನರು ಪಂಚಮುಖರುದ್ರರು, ಶೂನ್ಯಕಾಯನೆಂಬ ಮಹಾರುದ್ರ, ಅನೇಕಮುಖ ಒಂದುಮುಖವಾಗಿ ವಿಶ್ವರೂಪರುದ್ರ, ವಿಶ್ವಾಧಿಕಮಹಾರುದ್ರ, ಅಂಬಿಕಾಪತಿ ಉಮಾಪತಿ ಪಶುಪತಿ ಮೊದಲಾದ ಗಣಾಧೀಶ್ವರರೆಂಬ ಮಹಾಗಣಂಗಳು ತಾನಲ್ಲ. ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್ಪುರುಷನು ತಾನಲ್ಲ. ವಿಶ್ವತೋಮುಖ ವಿಶ್ವತೋಚಕ್ಷು ತಾನಲ್ಲ. ವಿಶ್ವತೋಪಾದವನುಳ್ಳ ಮಹಾಪುರುಷ ತಾನಲ್ಲ. ಪತಿ-ಪಶು-ಪಾಶಂಗಳೆಂಬ ಸಿದ್ಧಾಂತಜ್ಞಾನತ್ರಯಂಗಳು ತಾನಲ್ಲ. ತ್ವಂ ಪದ ತತ್‍ಪದ ಅಸಿಪದವೆಂಬ ವೇದಾಂತಪದತ್ರಯ ಪದಾರ್ಥಂಗಳು ತಾನಲ್ಲ. ಜೀವಹಂಸ ಪರಮಹಂಸ ಪರಾಪರಹಂಸನೆಂಬ ಹಂಸತ್ರಯಂಗಳು ತಾನಲ್ಲ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವರೆಂಬ ಪಂಚಮೂರ್ತಿಗಳು ತಾನಲ್ಲ. ಆ ಸದಾಶಿವತತ್ವದಲ್ಲುತ್ಪತ್ಯವಾದ ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯಾತ್ಮರೆಂಬ ಅಷ್ಟತನುಮೂರ್ತಿಗಳು ತಾನಲ್ಲ. ಅಸ್ಥಿ ಮಾಂಸ ಚರ್ಮ ನರ ರೋಮ -ಈ ಐದು ಪೃಥ್ವಿಯಿಂದಾದವು. ಪಿತ್ಥ ಶ್ಲೇಷ್ಮ ರಕ್ತ ಶುಕ್ಲ ಮೂತ್ರ -ಈ ಐದು ಅಪ್ಪುವಿನಿಂದಾದವು. ಕ್ಷುದೆ ತೃಷೆ ನಿದ್ರೆ ಆಲಸ್ಯ ಸಂಗ -ಈ ಐದು ಅಗ್ನಿಯಿಂದಾದವು. ಪರಿವ ಪಾರುವ ಸುಳಿವ ಕೂಡುವ ಅಗಲುವ -ಈ ಐದು ವಾಯುವಿನಿಂದಾದವು. ವಿರೋಧಿಸುವ ಅಂಜಿಸುವ ನಾಚುವ ಮೋಹಿಸುವ ಅಹುದಾಗದೆನುವ -ಈ ಐದು ಆಕಾಶದಿಂದಾದವು. ಇಂತೀ ಪಂಚಭೌತಿಕದ ಪಂಚವಿಂಶತಿ ಗುಣಂಗಳಿಂದಾದ ದೇಹವು ತಾನಲ್ಲ. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಲ್ಲ. ವಾಕು ಪಾದ ಪಾಣಿ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳು ತಾನಲ್ಲ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚವಿಷಯಂಗಳು ತಾನಲ್ಲ, ವಚನ ಗಮನ ದಾನ ವಿಸರ್ಗ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರೆಗಳು ತಾನಲ್ಲ, ಇಡೆ ಪಿಂಗಳೆ ಸುಷುಮ್ನಾ ಗಾಂಧಾರೀ ಹಸ್ತಿಜಿಹ್ವಾ ಪೂಷೆ ಪಯಸ್ವಿನೀ ಅಲಂಬು ಲಕುಹ ಶಂಕಿನೀ-ಎಂಬ ದಶನಾಡಿಗಳು ತಾನಲ್ಲ. ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯವೆಂಬ ದಶವಾಯುಗಳು ತಾನಲ್ಲ. ಸ್ಥೂಲತನು, ಸೂಕ್ಷ್ಮತನು, ಕಾರಣತನು, ನಿರ್ಮಲತನು, ಆನಂದತನು, ಚಿನ್ಮಯತನು, ಚಿದ್ರೂಪತನು, ಶುದ್ಧತನುವೆಂಬ ಅಷ್ಟತನುಗಳು ತಾನಲ್ಲ. ಜೀವಾತ್ಮ ಅಂತರಾತ್ಮ ಪರಮಾತ್ಮ ನಿರ್ಮಲಾತ್ಮ ಶುದ್ಧಾತ್ಮ ಜ್ಞಾನಾತ್ಮ ಭೂತಾತ್ಮ ಮಹಾತ್ಮವೆಂಬ ಅಷ್ಟ ಆತ್ಮಂಗಳು ತಾನಲ್ಲ. ಸಂಸ್ಥಿತ ತೃಣೀಕೃತ ವರ್ತಿನಿ ಕ್ರೋಧಿನಿ ಮೋಹಿನಿ ಅತಿಚಾರಿಣಿ ಗಂಧಚಾರಿಣಿ ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳು ತಾನಲ್ಲ. ಕುಲ ಛಲ ಧನ ರೂಪ ಯೌವ್ವನ ವಿದ್ಯೆ ರಾಜ್ಯ ತಪವೆಂಬ ಬಹಿರಂಗ ಅಷ್ಟಮದಂಗಳು ತಾನಲ್ಲ. ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಸಪ್ತಧಾತುಗಳು ತಾನಲ್ಲ. ತನುವ್ಯಸನ, ಮನವ್ಯಸನ, ಧನವ್ಯಸನ, ರಾಜ್ಯವ್ಯಸನ, ವಿಶ್ವವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಂಗಳು ತಾನಲ್ಲ. ಕ್ಷುತ್ ಪಿಪಾಸೆ ಶೋಕ ಮೋಹ ಜನನ ಮರಣವೆಂಬ ಷಡೂರ್ಮಿಗಳು ತಾನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅರಿಷಡ್ವರ್ಗಂಗಳು ತಾನಲ್ಲ. ಜಾತಿ, ವರ್ಣ, ಆಶ್ರಮ, ಕುಲ, ಗೋತ್ರ, ನಾಮಗಳೆಂಬ ಷಟ್‍ಭ್ರಮೆಗಳು ತಾನಲ್ಲ. ಆಸ್ತಿ, ಜಾಯತೇ, ಪರಿಣಮತೇ, ವರ್ಧತೇ, ವಿನಶ್ಯತಿ, ಅಪಕ್ಷೀಯತೇ ಎಂಬ ಷಡ್ಭಾವವಿಕಾರಂಗಳು ತಾನಲ್ಲ. ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯವೆಂಬ ಪಂಚಕೋಶಂಗಳು ತಾನಲ್ಲ. ಸತ್ವ ರಜ ತಮೋಗುಣತ್ರಯಂಗಳು ತಾನಲ್ಲ. ಅಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳು ತಾನಲ್ಲ. ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯಂಗಳು ತಾನಲ್ಲ. ವಾತ ಪಿತ್ಥ ಕಫಂಗಳೆಂಬ ದೋಷತ್ರಯಂಗಳು ತಾನಲ್ಲ. ಆಣವ ಮಾಯಾ ಕಾರ್ಮಿಕವೆಂಬ ಮಲತ್ರಯಂಗಳು ತಾನಲ್ಲ. ಸುಖ ದುಃಖ ಪುಣ್ಯ ಪಾಪಂಗಳು ತಾನಲ್ಲ. ಸಂಚಿತ, ಪ್ರಾರಬ್ಧ, ಆಗಾಮಿಯೆಂಬ ಕರ್ಮತ್ರಯಂಗಳು ತಾನಲ್ಲ. ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳು ತಾನಲ್ಲ. ಆಧಾರ, ಸ್ವಾಧಿಷಾ*ನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೆ ಎಂಬ ಷಡುಚಕ್ರಂಗಳ ದಳ ವರ್ಣ ಅಕ್ಷರಂಗಳು ತಾನಲ್ಲ. ಜಾಗ್ರ ಸ್ವಪ್ನ ಸುಷುಪ್ತಿ ತೂರ್ಯ ತೂರ್ಯಾತೀತಗಳೆಂಬ ಪಂಚಾವಸ್ಥೆಗಳು ತಾನಲ್ಲ. ಜಾಗ್ರದಲ್ಲಿಯ ಜಾಗ್ರ, ಜಾಗ್ರದಲ್ಲಿಯ ಸ್ವಪ್ನ, ಜಾಗ್ರದಲ್ಲಿಯ ಸುಷುಪ್ತಿ, ಜಾಗ್ರದಲ್ಲಿಯ ತೂರ್ಯ, ಜಾಗ್ರದಲ್ಲಿಯ ತೂರ್ಯಾತೀತವೆಂಬ ಜಾಗ್ರಪಂಚಾವಸ್ಥೆಗಳು ತಾನಲ್ಲ. ಸ್ವಪ್ನದಲ್ಲಿಯ ಜಾಗ್ರ, ಸ್ವಪ್ನದಲ್ಲಿಯ ಸ್ವಪ್ನ, ಸ್ವಪ್ನದಲ್ಲಿಯ ಸುಷುಪ್ತಿ, ಸ್ವಪ್ನದಲ್ಲಿಯ ತೂರ್ಯ, ಸ್ವಪ್ನದಲ್ಲಿಯ ತೂರ್ಯಾತೀತವೆಂಬ ಸ್ವಪ್ನಪಂಚಾವಸ್ಥೆಗಳು ತಾನಲ್ಲ. ಸುಷುಪ್ತಿಯಲ್ಲಿಯ ಜಾಗ್ರ, ಸುಷುಪ್ತಿಯಲ್ಲಿಯ ಸ್ವಪ್ನ, ಸುಷುಪ್ತಿಯಲ್ಲಿಯ ಸುಷುಪ್ತಿ , ಸುಷುಪ್ತಿಯಲ್ಲಿಯ ತೂರ್ಯ, ಸುಷುಪ್ತಿಯಲ್ಲಿಯ ತೂರ್ಯಾತೀತವೆಂಬ ಸುಷುಪ್ತಿಯ ಪಂಚಾವಸ್ಥೆಗಳು ತಾನಲ್ಲ. ತೂರ್ಯದಲ್ಲಿಯ ಜಾಗ್ರ, ತೂರ್ಯದಲ್ಲಿಯ ಸ್ವಪ್ನ, ತೂರ್ಯದಲ್ಲಿಯ ಸುಷುಪ್ತಿ, ತೂರ್ಯದಲ್ಲಿಯ ತೂರ್ಯ, ತೂರ್ಯದಲ್ಲಿಯ ತೂರ್ಯಾತೀತವೆಂಬ ತೂರ್ಯಪಂಚಾವಸ್ಥೆಗಳು ತಾನಲ್ಲ. ತೂರ್ಯಾತೀತದಲ್ಲಿಯ ಜಾಗ್ರ, ತೂರ್ಯಾತೀತದಲ್ಲಿಯ ಸ್ವಪ್ನ , ತೂರ್ಯಾತೀತದಲ್ಲಿಯ ಸುಷುಪ್ತಿ, ತೂರ್ಯಾತೀತದಲ್ಲಿಯ ತೂರ್ಯ, ತೂರ್ಯಾತೀತದಲ್ಲಿಯ ತೂರ್ಯಾತೀತವೆಂಬ ತೂರ್ಯಾತೀತಪಂಚಾವಸ್ಥೆಗಳು ತಾನಲ್ಲ. ಸಕಲ-ಶುದ್ಧ-ಕೇವಲಾವಸ್ಥೆಗಳು ತಾನಲ್ಲ. ಸಕಲದಲ್ಲಿಯ ಸಕಲ, ಸಕಲದಲ್ಲಿಯ ಶುದ್ಧ, ಸಕಲದಲ್ಲಿಯ ಕೇವಲವೆಂಬ ಸಕಲತ್ರಿಯಾವಸ್ಥೆಗಳು ತಾನಲ್ಲ. ಶುದ್ಧದಲ್ಲಿಯ ಸಕಲ, ಶುದ್ಧದಲ್ಲಿಯ ಶುದ್ಧ, ಶುದ್ಧದಲ್ಲಿಯ ಕೇವಲವೆಂಬ ಶುದ್ಧತ್ರಿಯಾವಸ್ಥೆಗಳು ತಾನಲ್ಲ. ಕೇವಲದಲ್ಲಿಯ ಸಕಲ, ಕೇವಲದಲ್ಲಿಯ ಶುದ್ಧ, ಕೇವಲದಲ್ಲಿಯ ಕೇವಲವೆಂಬ ಕೇವಲತ್ರಿಯಾವಸ್ಥೆಗಳು ತಾನಲ್ಲ. ಜ್ಞಾತೃ ಜ್ಞಾನ ಜ್ಞೇಯವೆಂಬ ಜ್ಞಾನತ್ರಯಂಗಳು ತಾನಲ್ಲ. ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿಯೆಂಬ ಅಷ್ಟಾಂಗಯೋಗಂಗಳು ತಾನಲ್ಲ. ಧರ್ಮ ಅರ್ಥ ಕಾಮ ಮೋಕ್ಷಂಗಳೆಂಬ ಚತುರ್ವಿಧ ಪುರುಷಾರ್ಥಂಗಳು ತಾನಲ್ಲ. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳು ತಾನಲ್ಲ. ಅಣಿಮಾ ಗರಿಮಾ ಲಘಿಮಾ ಮಹಿಮಾ ಪ್ರಾಪ್ತಿ ಪ್ರಕಾವ್ಯ ಇಶಿತ್ವ ವಶಿತ್ವ ಎಂಬ ಅಷ್ಟಮಹದೈಶ್ವರ್ಯಂಗಳು ತಾನಲ್ಲ. ರಾಜಸಹಂಕಾರ ತಾಮಸಹಂಕಾರ ಸ್ವಹಂಕಾರವೆಂಬ ಅಹಂಕಾರತ್ರಯಂಗಳು ತಾನಲ್ಲ. ಅಂಜನಾಸಿದ್ಧಿ, ಘುಟಿಕಾಸಿದ್ಧಿ, ರಸಸಿದ್ಧಿ, ಪಾದೋದಕಸಿದ್ಧಿ, ಪರಕಾಯ ಪ್ರವೇಶ, ದೂರಶ್ರವಣ, ದೂರದೃಷ್ಟಿ, ತ್ರಿಕಾಲಜ್ಞಾನವೆಂಬ ಅಷ್ಟಮಹಾಸಿದ್ಧಿಗಳು ತಾನಲ್ಲ. ಉದರಾಗ್ನಿ ಮಂದಾಗ್ನಿ ಶೋಕಾಗ್ನಿ ಕ್ರೋಧಾಗ್ನಿ ಕಾಮಾಗ್ನಿಯೆಂಬ ಪಂಚಾಗ್ನಿಗಳು ತಾನಲ್ಲ. ಪ್ರಕೃತಿ, ಪುರುಷ, ಕಾಲ, ಪರ, ವ್ಯೋಮಾಕಾಶಂಗಳು ತಾನಲ್ಲ. ಊಧ್ರ್ವಶೂನ್ಯ, ಅಧಃಶೂನ್ಯ, ಮಧ್ಯಶೂನ್ಯ, ಸರ್ವಶೂನ್ಯವಾಗಿಹ ಸಹಜನಿರಾಲಂಬವೇ ತಾನೆಂದರಿದ ಮಹಾಶರಣಂಗೆ ನಾಮ ರೂಪ ಕ್ರಿಯಾತೀತವಾಗಿಹ ಮಹಾಘನವೇ ತನ್ನ ಶಿರಸ್ಸು ನೋಡಾ. ದಿವ್ಯಜ್ಞಾನವೇ ತನ್ನ ಚಕ್ಷು, ಅಚಲಪದವೇ ತನ್ನ ಪುರ್ಬು, ಅಚಲಾತೀತವೇ ತನ್ನ ಹಣೆ ನೋಡಾ. ನಿರಾಕುಳಪದವೇ ತನ್ನ ನಾಸಿಕ, ನಿರಂಜನಾತೀತವೆ ತನ್ನ ಉಶ್ವಾಸ-ನಿಶ್ವಾಸ ನೋಡಾ. ನಿರಾಮಯವೇ ತನ್ನ ಕರ್ಣ, ನಿರಾಮಯಾತೀತವೇ ತನ್ನ ಕರ್ಣದ್ವಾರ ನೋಡಾ. ಅಮಲ ನಿರ್ಮಲವೇ ತನ್ನ ಗಲ್ಲ, ಅಮಲಾತೀತವೇ ತನ್ನ ಗಡ್ಡಮೀಸೆ ಕೋರೆದಾಡೆ ನೋಡಾ. ನಾದಬಿಂದುಕಳಾತೀತವೆ ತನ್ನ ತಾಳೋಷ*ಸಂಪುಟ ನೋಡಾ. ಅಕಾರ, ಉಕಾರ, ಮಕಾರ, ನಾದ ಬಿಂದು ಅರ್ಧಚಂದ್ರ ನಿರೋದಿನಾದಾಂತ ಶಕ್ತಿವ್ಯಾಪಿನಿ ವ್ಯೋಮರೂಪಿಣಿ ಅನಂತ ಆನಂದ ಅನಾಶ್ರಿತ ಸುಮನೆ ಉನ್ಮನಿ ಇಂತೀ ಪ್ರಣವದಲ್ಲಿ ಉತ್ಪತ್ಯವಾದ ಷೋಡಶಕಳೆ ತನ್ನ ಷೋಡಶ ದಂತಂಗಳು ನೋಡಾ. ಆ ದಂತಂಗಳ ಕಾಂತಿ ಅನೇಕಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ತನ್ನ ಕೊರಳೆ ನಿರಾಕುಳ, ತನ್ನ ಭುಜಂಗಳೆ ಅಪ್ರಮಾಣ ಅಗೋಚರ ನೋಡಾ. ತನ್ನ ಹಸ್ತಾಂಗುಲಿ ನಖಂಗಳೆ ಪರತತ್ವ, ಶಿವತತ್ವ, ಗುರುತತ್ವ, ಲಿಂಗತತ್ವಂಗಳು ನೋಡಾ. ಪರಬ್ರಹ್ಮವೇ ತನ್ನ ಎದೆ, ಆ ಪರಬ್ರಹ್ಮವೆಂಬ ಎದೆಯಲ್ಲಿ ನಿರಂಜನಪ್ರಣವ ಅವಾಚ್ಯಪ್ರಣವವೆಂಬ ಸಣ್ಣ ಕುಚಂಗಳು ನೋಡಾ. ಚಿತ್ತಾಕಾಶ ಭೇದಾಕಾಶವೆ ತನ್ನ ದಕ್ಷಿಣ ವಾಮ ಪಾಶ್ರ್ವಂಗಳು ನೋಡಾ. ಬಿಂದ್ವಾಕಾಶವೇ ತನ್ನ ಬೆನ್ನು ನೋಡಾ. ಮಹಾಕಾಶವೇ ತನ್ನ ಬೆನ್ನ ನಿಟ್ಟೆಲವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾಕಾರಲಿಂಗವೆ ತನ್ನ ಗರ್ಭ ನೋಡಾ. ಆ ಗರ್ಭ ಅನೇಕಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದುನೋಡಾ. ಆ ಗರ್ಭದಲ್ಲಿ ಅನೇಕಕೋಟಿತತ್ವಂಗಳು, ಅನೇಕಕೋಟಿ ಸದಾಶಿವರು, ಅನೇಕಕೋಟಿ ಮಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿರುದ್ರರು, ಅನೇಕಕೋಟಿ ವಿಷ್ಣಾ ್ವದಿಗಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಋಷಿಗಳು ಅನೇಕಕೋಟಿ ಚಂದ್ರಾದಿತ್ಯರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ದೇವರ್ಕಗಳು, ಅನೇಕಕೋಟಿ ಬ್ರಹ್ಮಾಂಡಗಳಡಗಿಹವು ನೋಡಾ. ತನ್ನ ನಡುವೆ ವ್ಯೋಮಾತೀತವು, ತನ್ನ ಕಟಿಸ್ಥಾನವೇ ಕಲಾಪ್ರಣವ, ತನ್ನ ಪಚ್ಚಳವೆ ಅನಾದಿಪ್ರಣವ ಆದಿಪ್ರಣವ ನೋಡಾ. ತನ್ನ ಉಪಸ್ಥವೇ ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವ ಮೊದಲಾದ ಸಮಸ್ತ ದೇವರ್ಕಗಳಿಗೂ ಜನನಸ್ಥಳವಾಗಿಹ ನಿರ್ವಾಣಪದ ನೋಡಾ. ಶಿವಸಂಬಂಧ, ಶಕ್ತಿಸಂಬಂಧವಾಗಿಹ ಓಂಕಾರವೆ ತನ್ನ ಒಳದೊಡೆ ನೋಡಾ. ಸಚ್ಚಿದಾನಂದ ಪರಮಾನಂದವೆ ತನ್ನ ಒಳಪಾದ ಕಂಬಗಳು ನೋಡಾ. ಚಿದಾತ್ಮ ಪರಮಾತ್ಮನೆ ತನ್ನ ಹರಡು, ಅತಿಸೂಕ್ಷ್ಮಪಂಚಾಕ್ಷರವೆ ತನ್ನ ಪಾದಾಂಗುಷಾ*ಂಗುಲಿಗಳೆಂಬ ಸಾಯುಜ್ಯಪದ ನೋಡಾ. ತನ್ನ ಸ್ವರವೆ ಪರಾಪರ, ತನ್ನ ಮಾತೇ ಮಹಾಜ್ಯೋತಿರ್ಮಯಲಿಂಗ, ಚಿನ್ಮಯ ಚಿದ್ರೂಪ ಚಿತ್ಪ್ರಕಾಶವೆ ತನ್ನ ವಪೆ ನೋಡಾ. ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗ, ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗ ಮೊದಲಾಗಿ ಇನ್ನೂರ ಹದಿನಾರು ಷಡುಸ್ಥಲಲಿಂಗವೆ ತನ್ನಂತಃಸ್ಥಾನದಲ್ಲಿ ಧರಿಸಿಹ ಆಭೂಷಣಂಗಳು ನೋಡಾ. ಮಹಾಲಿಂಗವೇ ತುರುಬು, ಶಿವಜ್ಞಾನವೆ ಶೃಂಗಾರವಾಗಿಹ ತನ್ನ ತಾನರಿದು ಅಂತಃಶೂನ್ಯ, ಅಧಃಶೂನ್ಯ, ಬಹಿಃಶೂನ್ಯ, ದಶದಿಶಾಶೂನ್ಯ ನಿರಾಕಾರವಾಗಿಹ ತನ್ನ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳ ತಿಳಿದು ಮಹಾಶರಣನು ತಾನೆ ಗುರು, ತಾನೆ ಲಿಂಗ, ತಾನೆ ಜಂಗಮ, ತಾನೆ ಪರಮಪಾದೋದಕಪ್ರಸಾದ ನೋಡಾ. ತಾನೆ ನಾದಬಿಂದುಕಳಾತೀತ ನೋಡಾ. ತಾನೆ ಶೂನ್ಯ ನಿಶ್ಶೂನ್ಯನು, ತಾನೆ ಘನಶೂನ್ಯ, ಮಹಾಘನಶೂನ್ಯ ನೋಡಾ. ತಾನೆ ಬಯಲು ನಿರ್ಬಯಲು, ತಾನೆ ನಿರುಪಮ ನಿರಾಕಾರ ತಾನೆ ನಿರಾಳ ನಿರಾಲಂಬ ನೋಡಾ. ತಾನೆ ಸಚ್ಚಿದಾನಂದ ನಿತ್ಯಪರಿಪೂರ್ಣನು, ತನ್ನಿಂದಧಿಕವಪ್ಪ ಪರಬ್ರಹ್ಮವೊಂದಿಲ್ಲವಾಗಿ ತಾನೆ ಸ್ವಯಂಜ್ಯೋತಿರ್ಲಿಂಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->