ಅಥವಾ

ಒಟ್ಟು 37 ಕಡೆಗಳಲ್ಲಿ , 17 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಲ ಛಲ ರೂಪ ಯೌವ್ವನ ವಿದ್ಯೆ ಧನ ರಾಜ್ಯ ತಪಮದವೆಂಬ ಅಷ್ಟಮದಂಗಳ ಬಹಿರಂಗದಲ್ಲಿ ನೆನೆದು ಬರಿದೆ ಭ್ರಮೆಗೆ ಸಿಲ್ಕಿ ಬಳಲುತ್ತಿಪ್ಪರಯ್ಯ. ಅದು ಎಂತೆಂದಡೆ : ಅಂಧಕನ ಮುಂದಣ ಬಟ್ಟೆಯಂತೆ, ಹುಚ್ಚಾನೆಯ ಮುಂದಣ ಬ್ಥಿತ್ತಿಯಂತೆ, ಎನ್ನ ಅನ್ಯೋನ್ಯದ ಬಾಳುವೆಗೆ ಗುರಿಮಾಡಿ ಎನ್ನ ಕಾಡುತಿದ್ದೆಯಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಎಲಾ, ಶೈವ ವೀರಶೈವ ಎಂಬುವವು ಉಭಯ ಮತಗಳುಂಟು. ಅವು ಎಂತೆಂದಡೆ, ಸ್ಥಾಪ್ಯಲಿಂಗವ ಪೂಜೆಮಾಡುವುದೇ ಶೈವ; ಗುರುವು ಕೊಟ್ಟ ಇಷ್ಟಲಿಂಗವ ಪೂಜೆಮಾಡುವುದೇ ವೀರಶೈವ. ಅದರೊಳಗೆ ಲಿಪ್ತವಾಗಿರ್ಪರೇ ಭಕ್ತರು, ನೀವು ಕೇಳಿರಯ್ಯಾ : ಸ್ಥಾಪ್ಯಲಿಂಗವ ಪೂಜಿಸಿದ ಕರ ಪೋಗಿ ಪರಸ್ತ್ರೀಯರ ಕುಚಂಗಳ ಪಿಡಿಯಬಹುದೆ ? ಈಗ ಯತಿಯ ನುಡಿದ ಜಿಹ್ವೆ ಪೋಗಿ ಪರಸ್ತ್ರೀಯರ ಅಧರಪಾನ ಮಾಡಬಹುದೆ ? ಮಹಾಮಂತ್ರವ ಕೇಳಿದ ಕರ್ಣ ಪೋಗಿ ಪರತಂತ್ರವ ಕೇಳಬಹುದೆ ? ಲಿಂಗಪೂಜಕರ ಅಂಗ ಪೋಗಿ ಪರರಂಗವನಪ್ಪಬಹುದೆ ? ಇವನು ಶೈವ ಭಕ್ತನಲ್ಲಾ ! ಶೈವನಾಗಲಿ ವೀರಶೈವನಾಗಲಿ ಏಕಲಿಂಗನಿಷ್ಠಾಪರನಾಗಿ, ಅಷ್ಟಮದಂಗಳೊಳ್ದಳಗೊಂಡು ಸಂಹರಿಸಿ, ಪಂಚಕ್ಲೇಶ ದುರಿತ ದುರ್ಗುಣಗಳ ಕಳೆದುಳಿದು, ಆರು ಚಕ್ರವ ಹತ್ತಿ ಮೀರಿದ ಸ್ಥಲದೊಳಗಿಪ್ಪ ಲಿಂಗಮಂ ಪೂಜಿಸಿ, ಮೋಕ್ಷಮಂ ಪಡೆದಡೆ, ವೀರಶೈವನೆಂದು ನಮೋ ಎಂಬುವೆನಯ್ಯಾ ಬರಿದೆ ವೀರಶೈವನೆಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಸೂಳೆಯ ತನುಮನದ ಕೊನೆಯಲ್ಲಿ ವಿಟಗಾರನೇ ಪ್ರಾಣಲಿಂಗ; ಶೀಲವಂತನ ತನುಮನದ ಕೊನೆಯಲ್ಲಿ ಭವಿಯೇ ಪ್ರಾಣಲಿಂಗ ; ನಿತ್ಯ ಪ್ರಸಾದಿಯ ತನುಮನದ ಕೊನೆಯಲ್ಲಿ ಬೆಕ್ಕೇ ಪ್ರಾಣಲಿಂಗ ; ಬ್ರಾಹ್ಮಣರ ತನುಮನದ ಕೊನೆಯಲ್ಲಿ ಸೂತಕವೇ ಪ್ರಾಣಲಿಂಗ; ಇಂಥವರಿಗೆಲ್ಲಾ ಇಂತಾಯಿತು! ದೇವರಗುಡಿಯೆಂದು ದೇಗುಲವ ಪೊಕ್ಕು ನಮಸ್ಕಾರವ ಮಾಡುವಂಗೆ ಹೊರಗೆ ಕಳೆದ ಪಾದರಕ್ಷೆಯೆ ಪ್ರಾಣಲಿಂಗ. ಅದು ಎಂತೆಂದಡೆ : ಸೂಳೆಗೆ ವಿಟನ ಹಂಬಲು; ಶೀಲವಂತನಿಗೆ ಭವಿಯ ಹಂಬಲು; ನಿತ್ಯಪ್ರಸಾದಿಗೆ ಬೆಕ್ಕಿನ ಹಂಬಲು ; ಬ್ರಾಹ್ಮಣನಿಗೆ ಸೂತಕದ ಹಂಬಲು ; ಇವರು ಭಕ್ತಿಶೂನ್ಯರು ಕಾಣಿರಯ್ಯಾ ! ಇವಂ ಬಿಟ್ಟು, ಪರಸ್ತ್ರೀಯರ ಮುಟ್ಟದಿರ್ಪುದೇ ಶೀಲ ; ಪರದ್ರವ್ಯ[ವ]ಅಪಹರಿಸದಿರುವುದೇ ಆಚಾರ ; ಪರನಿಂದೆ[ಯ] ಕರ್ಣದಿಂ ಕೇಳದಿರ್ಪುದೇ ನಿತ್ಯಪ್ರಸಾದತ್ವ ; ಪರರಂ ದೂಷಿಸದಿರ್ಪುದೇ ಬ್ರಹ್ಮತ್ವ. ಇಂತಿದರಲ್ಲಿ ನಡೆದು, ದೇವರಿಗೆ ನಮಸ್ಕಾರವ ಮಾಡುವುದೇ ನಮಸ್ಕಾರ. ಹಿಂದಿನ ಪುರಾತನರು ನಡೆದರೆಂಬೋ ಶಾಸ್ತ್ರವಂ ಕೇಳಿ, ಈಗಿನ ಕಿರಾತರು 'ನಾವು ಶೀಲವಂತರು' 'ನಾವು ಆಚಾರವಂತರು', 'ನಾವು ನಿತ್ಯಪ್ರಸಾದಿಗಳು', 'ನಾವು 1[ 'ಪೂಜಸ್ಥರು']1, 'ನಾವು ಬ್ರಾಹ್ಮಣರು', ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ !
--------------
ಕೂಡಲಸಂಗಮೇಶ್ವರ
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು, ಷಡ್ಧಾತುಗಳು, ತನುತ್ರಯಂಗಳು, ಜೀವತ್ರಯಂಗಳು, ಮಲತ್ರಯಂಗಳು, ಮನತ್ರಯಂಗಳು, ಗುಣತ್ರಯಂಗಳು, ಭಾವತ್ರಯಂಗಳು, ತಾಪತ್ರಯಂಗಳು, ಅಂತಃಕರಣಂಗಳು ಇಂತಿವಾದಿಯಾಗಿ ತೋರುವ ತೋರಿಕೆಯೇನೂ ನಾನಲ್ಲ, ನನ್ನವಲ್ಲ. ಇಂತಿವೆಲ್ಲವೂ ನನ್ನಾಧೀನವಾಗಿಪ್ಪವು ನಾನಿವರಾಧೀನದವನಲ್ಲ. ನಾನು ತೂರ್ಯ ತೂರ್ಯಾತೀತವಪ್ಪ ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವಸ್ತುವೆ ತನ್ನಿರವೆಂದು ತಿಳಿಯೆ, ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದ ಬೆಸುಗೆ ಬಿಟ್ಟು ನಿರಾಳದಲ್ಲಿ ನಿಜವನೈದಲರಿಯದೆ ಮತ್ತೆಯುಂ ಭೌತಿಕ ತತ್ವಸಂಬಂಧಿಯಾಗಿ ಇರುತ್ತಿರಲು, ಇಂತೀ ತತ್ವದಾದಿ ತಾನೆಂತೆನಲು ಆ ಪರಬ್ರಹ್ಮವಪ್ಪ ನಿತ್ಯನಿರಾಳ ನಿಃಶೂನ್ಯಲಿಂಗವೆ ತನ್ನ ಲೀಲಾವಿಲಾಸದಿಂದ ತಾನೆ ಸುನಾದ ಬಿಂದು ಪ್ರಕಾಶ ತೇಜೋಮೂರ್ತಿಯಾಗಿ ನಿಂದು ಮಹಾಲಿಂಗವೆಂದೆನಿಸಿತ್ತು. ಆ ಮಹಾಲಿಂಗವೆ ಪಂಚಸಾದಾಖ್ಯವೆಂದೆನಿಸಿತ್ತು. ಆ ಪಂಚಸಾದಾಖ್ಯವೆ ಪಂಚಲಿಂಗ ಪ್ರಕಾಶವೆಂದೆನಿಸಿತ್ತು. ಆ ಪಂಚಲಿಂಗ ಪ್ರಕಾಶವೆ ಪಂಚಮುಖವೆಂದೆನಿಸಿತ್ತು. ಆ ಪಂಚಮುಖದಿಂದವೆ ಪಂಚಾಕ್ಷರಿಯುತ್ಪತ್ತಿ. ಆ ಪಂಚಾಕ್ಷರಿಯಿಂದವೆ ಪಂಚಕಲೆಗಳುತ್ಪತ್ತಿ. ಆ ಪಂಚಕಲೆಗಳಿಂದವೆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳುತ್ಪತ್ತಿ. ಆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳಿಂದವೆ ಪಂಚತನ್ಮಾತ್ರಂಗಳುತ್ಪತ್ತಿ. ಆ ಪಂಚತನ್ಮಾತ್ರಂಗಳಿಂದವೆ ಪಂಚಭೂತಂಗಳುತ್ಪತ್ತಿ. ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು. ಆ ಅಂಗಕ್ಕೆ ಜ್ಞಾನೇಂದ್ರಿಯಂಗಳು ಕರ್ಮೇಂದ್ರಿಯಂಗಳು ಪ್ರತ್ಯಂಗವೆಂದೆನಿಸಿತ್ತು. ಇಂತು ದೇಹ ಸಂಬಂಧಮಂ ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ, ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು ಎಲ್ಲಿಯಾಯಿತ್ತು ಅಲ್ಲಿಯೇ ಅಡಗಿಸಿ ಆ ಕಾಯದ ಪೂರ್ವಾಶ್ರಯವನಳಿದು ಮಹಾ ಘನಲಿಂಗವ ವೇಧಿಸಿ ಕೊಟ್ಟು, ಶಿವ ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿ ಎಂತೆಂದಡೆ ಆತ್ಮಗೂಡಿ ಪಂಚಭೂತಂಗಳನೆ ಷಡ್ವಿಧ ಅಂಗವೆಂದೆನಿಸಿ, ಆ ಅಂಗಕ್ಕೆ ಆ ಕಲೆಗಳನೆ ಷಡ್ವಿಧ ಶಕ್ತಿಗಳೆಂದೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಂಗಳನೆ ಷಡ್ವಿಧ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯಪದಾರ್ಥಂಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾಯ ಮುಖದ ಲಿಂಗಂಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ. ಅಂಗಸ್ಥಲಂಗಳಡಗಿ ತ್ರಿವಿಧ ಲಿಂಗಾಂಗಸ್ಥಲಂಗಳುಳಿದು ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ ಗುರುವಿನಲ್ಲಿ ಶುದ್ಧಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ, ಜಂಗಮದಲ್ಲಿ ಪ್ರಸಿದ್ಧಪ್ರಸಾದ. ಇಂತೀ ತ್ರಿವಿಧ ಪ್ರಸಾದವು ಏಕಾರ್ಥವಾಗಿ, ಮಹಾಘನ ಪರಿಪೂರ್ಣಪ್ರಸಾದವಳವಟ್ಟ ಶರಣ ಜ್ಞಾನಿಯಲ್ಲ, ಅಜ್ಞಾನಿ ಮುನ್ನವೇ ಅಲ್ಲ. ಶೂನ್ಯನಲ್ಲ, ನಿಃಶೂನ್ಯ ಮುನ್ನವೇ ಅಲ್ಲ. ದ್ವೈತಿಯಲ್ಲ, ಅದ್ವೈತಿ ಮುನ್ನವೇ ಅಲ್ಲ. ಇಂತೀ ಉಭಯಾತ್ಮಕ ತಾನೆಯಾಗಿ ? ಇದು ಕಾರಣ, ಇದರ ಆಗುಹೋಗು ಸಕೀಲಸಂಬಂಧವ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರೇ ಬಲ್ಲರು.
--------------
ಅಕ್ಕಮಹಾದೇವಿ
ಇನ್ನು ವಾಯುಧಾರಣೆ ಎಂತೆಂದಡೆ : ಚತುರ್ದಶವಾಯುಗಳೊಳು ಪಂಚವಾಯುವೆ ಮುಖ್ಯವಾಗಿಹುದು. ಆ ಪಂಚವಾಯುವಿನೊಳು ದ್ವಿವಾಯುವೆ ಮುಖ್ಯವಾಗಿಹುದು. ಆ ದ್ವಿವಾಯುವಿನೊಳು ಏಕವಾಯುವೆ ಮುಖ್ಯವಾಗಿಹುದು. ಆ ಏಕವಾಯುವೆ ಚತುರ್ದಶವಾಯುವಾಗಿ ಚರಿಸುತ್ತಿಹುದು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪಶ್ಚಿಮದ ಕದವ ತೆಗೆದು ಬಚ್ಚಬರಿಯ ಬೆಳಗ ನೋಡಲೊಲ್ಲದೆ, ಕತ್ತಲೆಯ ಬಾಗಿಲಿಗೆ ಮುಗ್ಗಿ, ಕಣ್ಣುಕಾಣದ ಅಂಧಕನಂತೆ ಜಾರಿ ಜರಿಯಲ್ಲಿ ಬಿದ್ದು, ಕರ್ಮಕ್ಕೆ ಗುರಿಯಾಗುವ ಮರ್ತ್ಯದ ಮನುಜರಿರಾ, ನೀವು ಕೇಳಿರೋ ಹೇಳಿಹೆನು, ನಮ್ಮ ಶರಣರ ನಡೆ ಎಂತೆಂದಡೆ ಕತ್ತಲೆಯ ಬಾಗಿಲಿಗೆ ಕದವನಿಕ್ಕಿ, ಪಶ್ಚಿಮದ ಕದವ ತೆಗೆದು, ಬಚ್ಚಬರಿಯ ಬೆಳಗಿನೊಳಗೋಲಾಡುವ ಶರಣರ ಪಾದಕ್ಕೆ ನಮೋ ಎಂದು ಸುಖಿಯಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಯ್ಯಾ, ಜೀವಾತ್ಮ ಭೇದವಾದಮಂ ಪೇಳ್ವೆನಯ್ಯಾ : ಜೀವ ಬೇರೆ, ಆತ್ಮ ಬೇರೆ ಎಂದು ಹೇಳುವ[ವು] ಹಲವು ಶಾಸ್ತ್ರ ; ಜೀವಾತ್ಮ ಐಕ್ಯ ಹೇ[ಳುವವು] ಹಲವು ಶಾಸ್ತ್ರ. ಅ[ದು] ಎಂತೆಂದಡೆ: ಸರ್ವ ಚೇತನದಲ್ಲಿಯು ಉಂಟು ಎಂದು ಹೇಳುವವು ಜೀವವು, ಶಿವಶಾಸ್ತ್ರ ಇದಕ್ಕೆ ಸಾಕ್ಷಿ : ಅಣೋರಣೀಯಾ[ನ್] ಮಹತೋ ಮಹೀಯಾ[ನ್] ಎಂದು ಶ್ರುತಿಯುಂಟಾಗಿ, ಇದಂ ತಿಳಿದು, ಭೇದವಾದಿಗಳು ಸರ್ವಜೀವರಲ್ಲಿಯು ಆತ್ಮವುಂಟಾದಡೆಯು ಪಶುಜೀವಜಂತುಗಳಿಗೆ ನಮಸ್ಕಾರವ ಮಾಡಬಾರದೆ ? ಎಂದು ಹೇಳುವ ಮಾಯಾವಾದಿಗಳು ನೀವು ಕೇಳಿ ; ಅದು ಎಂತೆಂದಡೆ : ಎಲಾ ಎಲಾ, ಉಚ್ಫಿಷ್ಟದಲ್ಲಿಯು ಅರ್ಕನ ಪ್ರಭೆ ಬಿದ್ದು ರಸ ಬತ್ತುವದು. ಅದರ ರಸಾಸ್ವಾದವು ಅರ್ಕಂಗೆ ಮುಟ್ಟುವುದೆ ? ಎಲಾ ಎಲಾ, ಸಿಲಹದಲ್ಲಿಯು ಸೂರ್ಯಪ್ರಭೆಯುಂಟು. ಅಲ್ಲಿ ವಹ್ನಿಯು ಪುಟ್ಟುವು]ದೆ?] ಇದರಂತೆ, ಸರ್ವ ಜೀವಜಂತುಗಳಲ್ಲಿ ಮಾಯಾವಾದಿಗಳಲ್ಲಿ ಆತ್ಮಪರೀಕ್ಷೆಯಿಲ್ಲದವರಲ್ಲಿ [ದು]ಷ್ಟ ದುರ್ಜನರಲ್ಲಿ ಶಿವಭಕ್ತರಾಗಿ ಲಿಂಗವ ಧರಿಸಿ ದೇವರಾದರು ಸರಿಯೆ, [ಬ್ರಾ]ಹ್ಮರಾಗಿ ಯಜ್ಞೋಪವೀತವ ಹಾಕಿಕೊಂಡಿದ್ದರು ಸರಿಯೆ, ಯತಿಗಳಾಗಿ ಮಂಡೆ ಬೋಳಿಸಿಕೊಂಡಿದ್ದರು ಸರಿಯೆ, ಮಾರ್ಗ ತಪ್ಪಿ ನಡೆವ ಜೀವಜಂತುಗಳಲ್ಲಿ ಸಿಲಹ ಉಚ್ಫಿಷ್ಟದ ಮೇಲೆ ಸೂರ್ಯನ ಪ್ರಭೆ ಬಿದ್ದಂತೆ ಆತ್ಮ ಇದ್ದ ಕಾರಣ ಇವರಿಗೆ ಕೈಮುಗಿಯಲಾಗದು ಕಾಣಿರಯ್ಯಾ ! ಇ[ವ]ರೊಳಗೆ ಶಿವಯೋಗಿಗಳು ದಾರೆಂದು ಕೇಳುವ ಮಾಯಾವಾದಿ ಕೇಳಲಾ. ಅದು ಎಂತೆಂದಡೆ: ಸೂರ್ಯನ ಪ್ರಕಾಶಕ್ಕೆ ಬಿಲದ್ವಾರವ ಸಿಲಹಂ ಪಿಡಿಯೆ ಅರ್ಕನ ಪ್ರಕಾಶಕ್ಕೆ ವಹ್ನಿ ಪುಟ್ಟೆ ಸರ್ವಕಾಷ*ವನು ಸುಡುವದು ಕಾಣೆಲಾ. ಶಿವಾತ್ಮ ಐಕ್ಯವ ಮಾಡಿದಾ ಶಿವಯೋಗಿಗಳಲ್ಲಿ ಸರ್ವಕರ್ಮೇಂದ್ರಿಯ ಈ ತೆರದಲ್ಲಿ ಸುಟ್ಟ ಕಾರಣ ನಿರ್ಮಳಕಾಯರಾದರು. ಇಂತಪ್ಪ ಜೀವಾತ್ಮವ ಐಕ್ಯವ ಮಾಡಿದ ಶಿವಯೋಗಿಗಳಲ್ಲಿ ನಮಸ್ಕರಿಸಬಹುದು. ಇಂತಾ ಜೀವಾತ್ಮ ವೇದವ ತಿಳಿಯದೆ 'ನಾ ಬ್ರಾಹ್ಮಣ' 'ನಾ ಶಿವಭಕ್ತ'ನೆಂದು ಹೇಳಿಕೊಂಡು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ
--------------
ಕೂಡಲಸಂಗಮೇಶ್ವರ
'ಷಟುಸ್ಥಲದ ಬ್ರಹ್ಮಿಗಳೆ'ಂದು ಹೇಳಿಕೊಂಬಿರಿ, ನೀವು ಕೇಳಿರಯ್ಯಾ : ನಿಮ್ಮ ಷಟುಸ್ಥಲದ ಬ್ರಹ್ಮಿಗಳ ಲಕ್ಷಣ ದಾವುದೆಂದಡೆ, ಅಂಗಲಿಂಗ ಸಂಬಂಧವಾದುದೇ ಷಟುಸ್ಥಲ. ಅಂಗ ಲಿಂಗವಾದ ಪರಿ ಎಂತೆಂದಡೆ, ಲಿಂಗ ಪೋದುದೇ ಷಟುಸ್ಥಲ: ಗ್ರಂಥ || ಅನಾದಿ ಸಂಸಿದ್ಧಸ್ಯ ಆತ್ಮಪರೀಕ್ಷಣಂ ಜಗತಾರಾ[ಧ್ಯಸ್ಯ] | ಸತ್ಯಂ ಜನನಮರಣವಿರಹಿತಂ [ಇತಿ]ಷಟ್‍ಸ್ಥಲಂ || ಇಂತೀ ಸಾಕ್ಷಿ ಉಂಟಾಗಿ, ಪರಾನ್ನ ಅಪೇಕ್ಷಿತನಾಗದೆ, ಪರಸ್ತ್ರೀಯಂ ನೋಡದೆ, ಪರರೊಡವೆಯ ಹಂಗು ಹಚ್ಚದೆ, ಪರಾತ್ಪರವಾಗಿಪ್ಪುದೆ ಜಂಗಮ ಲಿಂಗ. ಪರಮ ಹರುಷದಿಂದ ಪಾತಕವನೀಡಾಡಿ, ಪರ[ಮ] ಪುರುಷಾರ್ಥವನೇ ಗ್ರಹಿಸಿ, ಪಾವನಚರಿತನಾಗಿ, ಭಕ್ತನ ಮನೆಗೆ ನಡೆದು ಬಂದು ಬೀಯೆಂಬೋ ಪಾಪವು ಕ್ಷಯವಾಗಲೆಂದು 'ಭಿಕ್ಷಾ' ಎಂದು ನಿಂದಡೆ, ಅರಿದ ಭಕ್ತ ನೀಡಿದರೂ ಸಂತೋಷ ಅರಿಯದಿದ್ದ ಭಕ್ತ ನೀಡದಿದ್ದರೂ ಸಂತುಷ್ಟನಾಗಿ 'ಹಳ್ಳಿಗೇಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ' ಸಂಚರಿಸುತಿರ್ಪುದೇ ಷಟುಸ್ಥಲದ ಬ್ರಹ್ಮಿ ಎಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಷಟುಸ್ಥಲದ ಬ್ರಹ್ಮಿ' 'ನೀ ಷಟುಸ್ಥಲದ ಬ್ರಹ್ಮಿ' ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಅರುಹಿನಾಪ್ಯಾಯನಕ್ಕೆ ಅನುಭಾವವೇ ತೃಪ್ತಿ. ಅರಿವು ನೆರೆ ಕೂಡಿ, ಆಚಾರವೆ ಪ್ರಾಣವಾಗಿ ವಿಶ್ರಮಿಸಿದ ಬಳಿಕ, ಶ್ರೀಗುರು ಕೃಪೆಮಾಡಿದ ಪ್ರಾಣಲಿಂಗದ ದುರುಶನ ಎಂತೆಂದಡೆ : ಮತ್ಸ್ಯನುಂಗಿದ ಮಾಣಿಕ್ಯದಂತೆ ಹೊಸ್ತಿಲಲೆತ್ತಿದ ಜ್ಯೋತಿಯಂತೆ ಸ್ಫಟಿಕದ ಘಟದಂತೆ, ಮುತ್ತು ನುಂಗಿದ ನೀರಿನಂತೆ ಕಣ್ಣಾಲೆ ನುಂಗಿದ ನೋಟದಂತೆ ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ ಸ್ವಾನುಭಾವಿಗಳ ಅನುಭಾವವ ತೋರಿ ಬದುಕಿಸು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ವ್ರತವ ಹಿಡಿವಲ್ಲಿ, ವ್ರತವ ಉಪದೇಶ ಮಾಡುವಲ್ಲಿ, ಹಿಡಿವಾತನ ಯುಕ್ತಿ ಎಂತೆಂದಡೆ ಮನ, ವಚನ, ಕಾಯ, ತ್ರಿಕರಣಶುದ್ಧಾತ್ಮನಾಗಿ, ಸತಿ, ಸುತ, ಬಂಧುವರ್ಗಂಗಳೆಲ್ಲವು ಏಕತ್ರವಾಗಿ, ನಡೆವುದ ನಡೆಯದಿಹುದೆಂಬುದ ಸ್ಥಿರೀಕರಿಸಿ, ಶ್ರುತ, ದೃಷ್ಟ, ಅನುಮಾನ, ಮೂರನೊಂದುಮಾಡಿ ಮತ್ತೆ ಏನುವ ತೋರದ ವ್ರತವಸ್ತುವನಾದರಿಸಬೇಕು. ವ್ರತ ದೀಕ್ಷೆಯ ಮಾಡುವಲ್ಲಿ ಗುರುವಿನ ಇರವೆಂತೆಂದಡೆ ; ಅವನ ಆಗು ಚೇಗೆಯನರಿತು ಅರ್ತಿಕಾರರಿಗೆ ಇದಿರು ಮೆಚ್ಚುವಭೇದ. ಹಿರಣ್ಯದ ಒದಗಿನ ಲಾಗು, ಕೊಲೆ ಹಗೆಯಪ್ಪನ ರಾಗವಿರಾಗಗಳೆಂಬ ಭಾವವ ವಿಚಾರಿಸಿ, ಈ ವ್ರತ ನೇಮ ನಿನಗೆ ಲಾಗಲ್ಲ ಎಂದು ಅರೆಬಿರಿದಿನ ನೇಮ. ತೊಡಕಿನಂಬಿನ ಘಾಯ ತಪ್ಪಿದಡೆ ಇಹಪರದಲ್ಲಿ ಉಭಯದೋಷz ಹೀಗೆಂದು ಉಪದೇಶವಂ ಕೊಟ್ಟು ಸಂತೈಸುವುದು ಗುರುಸ್ಥಲ. ಆ ಗುಣಕ್ಕೆ ಮುಯ್ಯಾಂತು, ಪರಮಹರುಷಿತನಾಗಿ, ಗಣಸಮೂಹಂ ಕೂಡಿ, ಪರಮ ವಿರಕ್ತರಂ ಕರೆದು, ಮಹತ್ತು ನೆರಹಿ, ಗುರುಲಿಂಗಜಂಗಮಸಾಕ್ಷಿಯಾಗಿ ಮಾಡುವುದೆ ವ್ರತ. ಹೀಗಲ್ಲದೆ, ಮನಕ್ಕೆ ಬಂದಂತೆ, ತನು ಹರಿದಾಡುವಂತೆ, ಊರೂರ ದಾರಿಗರಲ್ಲಿ ವ್ರತವ ಮಾಡಿಕೊಳ್ಳಿಯೆಂದು ಸಾರಲಿಲ್ಲ. ಇಂತೀ ಉಭಯವನರಿತು ವ್ರತಕ್ಕೆ ಅರ್ಹನಾಗಬೇಕು. ಇಂತೀ ಸರ್ವಗುಣಸಂಪನ್ನ ಮಾಡಿಸಿಕೊಂಬವನೂ ತಾನೆ, ಮಾಡುವಾತನೂ ತಾನೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಎಮ್ಮ ಶಿವಶರಣರ ಪ್ರಸಾದವಿವರ ಎಂತೆಂದಡೆ : ಶುದ್ಧಪ್ರಸಾದಸ್ವರೂಪವಾದ ಸದ್ರೂಪಾಚಾರ್ಯನನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿ ಆ ಗುರುವಿನಲ್ಲಿ ನಷ್ಟವಾದುದೆ ಅಚ್ಚಪ್ರಸಾದ. ಸಿದ್ಧಪ್ರಸಾದಸ್ವರೂಪವಾದ ಚಿದ್ರೂಪಲಿಂಗವನು ಮನದಲ್ಲಿ ಸ್ವಾಯತವ ಮಾಡಿ, ಆ ಮನೋಪ್ರಕೃತಿ ಆ ಲಿಂಗದಲ್ಲಿ ನಷ್ಟವಾದುದೆ ನಿಚ್ಚಪ್ರಸಾದ. ಸಿದ್ಧಪ್ರಸಾದಸ್ವರೂಪವಾದ ಪರಮಾನಂದ ಜಂಗಮವನು ಆತ್ಮದಲ್ಲಿ ಸ್ವಾಯತವ ಮಾಡಿ, ಆತ್ಮಪ್ರಕೃತಿ ಆ ಜಂಗಮದಲ್ಲಿ ನಷ್ಟವಾದುದೇ ಸಮಯಪ್ರಸಾದ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದತ್ರಯದ ಏಕಸ್ವರೂಪವಾದ ಮಹಾಪ್ರಸಾದ, ಅಂತಪ್ಪ ಮಹಾಪ್ರಸಾದಸ್ವರೂಪವಾದ ಘನಮಹಾಲಿಂಗವು. ಆ ಘನ ಮಹಾಲಿಂಗವನು ಅಪಾದ ಮಸ್ತಕ ಪರಿಯಂತರವಾಗಿ, ಸರ್ವಾಂಗದಲ್ಲಿ ಸ್ವಾಯತವ ಮಾಡಿ ಆ ಲಿಂಗಪ್ರಕಾಶದಲ್ಲಿ ಸರ್ವಾಂಗದ ಪ್ರಕೃತಿ ನಷ್ಟವಾಗಿ, ಅಂತಪ್ಪ ಘನಮಹಾಲಿಂಗದೇಕಸ್ವರೂಪ ತಾನಾದುದೇ ಏಕಪ್ರಾಸದ. ಇಂತೀ ನಾಲ್ಕುತರದ ಪ್ರಸಾದವ ಕೊಂಡವರು ಆರೆಂದಡೆ : ಹಿಂದಕ್ಕೆ ಕಲ್ಯಾಣಪುರದಲ್ಲಿ ಬಸವಾದಿ ಪ್ರಭುದೇವರಾಂತ್ಯಮಾದ ಏಳುನೂರೆಪ್ಪತ್ತು ಪ್ರಮಥಗಣಂಗಳು, ಇನ್ನು ಮುಂದೆ ಶಿವಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಂಬಂಧಿಗಳಾದ ಶಿವಶರಣರಿಗೆ ಇದೇ ಪ್ರಸಾದವು ನೋಡೆಂದನಯ್ಯಾ ನಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಧ್ಯಾನ ಧಾರಣ ಸಮಾಧಿಯೆಂತೆಂದಡೆ ಸದ್ಗುರುವೆ ಕರುಣಿಪುದು. ಕೇಳಯ್ಯ ಮಗನೆ : ಧ್ಯಾನ ಯೋಗವೆಂತೆಂದಡೆ : ಷಡಾಧಾರಚಕ್ರದೊಳಗೆ ಆಧಾರ ಮೊದಲಾಗಿ ಆಜ್ಞೆ ಕಡೆತನಕ ಇಷ್ಟಲಿಂಗವ ಧ್ಯಾನಿಸಿ ಅರ್ಚಿಸಿ ಪೂಜಿಸಿ ಅಲ್ಲಿ ತ್ರಿಕೂಟ ಸಂಗಮದಲ್ಲಿ ಗಂಗಾ ಯಮುನಾ ಸರಸ್ವತಿ ನದಿಗಳು ಕೂಡಿದ ಠಾವಿನಲ್ಲಿ ಪ್ರಮಥಗಣಂಗಳು ಮೊದಲಾಗಿ ಅಲ್ಲಿ ಮಜ್ಜನವ ನೀಡುತ್ತಿಹರು. ಅಲ್ಲಿ ಸೂರ್ಯಪೀಠದ ಮೇಲೆ ಗುರುವು ಮೂರ್ತವ ಮಾಡಿರಲು ಅವರ ಪಾದಾರ್ಚನೆಯಂ ಮಾಡಿ, ಪಾದೋದಕದ ನದಿಗಳಲ್ಲಿ ಸ್ನಾನವ ಮಾಡಿ ಅವರ ಸಂಗಡ ಏಳನೆಯ ಮಂಟಪಕ್ಕೆ ಹೋಗಿ ಅಲ್ಲಿ ಪಶ್ಚಿಮಚಕ್ರದಿಂದ ನಿರಂಜನಜಂಗಮವು ಶಿಖಾಚಕ್ರದಲ್ಲಿರ್ದ ಬಸವಾದಿ ಪ್ರಮಥರು ಮೊದಲಾದವರು ಬಿಜಯಮಾಡಿ, ಅಲ್ಲಿ ಅಸಂಖ್ಯಾತ ಪ್ರಮಥರು, ನೂತನ ಗಣಂಗಳು ಸಹವಾಗಿ ಲಿಂಗಾರ್ಚನೆಯ ಮಾಡುತ್ತಿಹರು. ಆ ಲಿಂಗಾರ್ಚನೆ ಎಂತೆಂದಡೆ : ಮೊದಲು ಚಿದ್ಭಸ್ಮವನೆ ಧರಿಸಿ, ಆನಂದೋದಕದಿಂದ ಲಿಂಗಕ್ಕೆ ಕ್ರಿಯಾಮಜ್ಜನವ ನೀಡಿ, ಅಷ್ಟತನುವಿನ ಅಷ್ಟಸುಗಂಧವ ಧರಿಸಿ, ಕರಣಂಗಳ ಸಂಚಲವಿಲ್ಲದ ಗುಣತ್ರಯದಕ್ಷತೆಯ ಧರಿಸಿ, ಸಾವಿರದೈವತ್ತು ಪ್ರಣವದ ಪರಿಮಳ ತುಂಬಿರ್ದ ಪುಷ್ಪವ ಧರಿಸಿ, ದಶವಾಯುಗಳ ಗುಣಧರ್ಮಂಗಳ ಜ್ಞಾನಾಗ್ನಿಯೊಳು ನೀಡಿ, ದಶಾಂಗದ ಸದ್ವಾಸನೆಯ ಧೂಪವ ಧರಿಸಿ, ಹೃದಯವೆಂಬ ಪ್ರಣತಿಯಲ್ಲಿ ದೃಢಚಿತ್ತವೆಂಬ ಬತ್ತಿಯನಿರಿಸಿ, ಅರುಹೆಂಬ ತೈಲವನೆರದು, ಮಹಾಜ್ಞಾನವೆಂಬ ಜ್ಯೋತಿಯ ಮುಟ್ಟಿಸಿ ಅದರಿಂದೊದಗಿದ ಏಕಾರತಿ ತ್ರಿಯಾರತಿ ಪಂಚಾರತಿ ಕಡ್ಡಿ ಬತ್ತಿ ಮೊದಲಾದ ಮಹಾಪ್ರಕಾಶದ ದೀಪವ ಧರಿಸಿ, ಕ್ರಿಯಾ ಜ್ಞಾನ ಇಚ್ಫಾ ಆದಿ ಪರ ಚಿತ್‍ಶಕ್ತಿ ಮೊದಲಾದವರು ಆರತಿಯ ಪಿಡಿದಿಹರು. ಆ ಮೇಲೆ ಪಾದತೀರ್ಥವ ಸಲಿಸಿ, ಮತ್ತೆ ಐವತ್ತು ದಳದಲ್ಲಿರ್ದ ಐವತ್ತು ರುದ್ರಕನ್ನಿಕೆಯರು ಅಡುಗೆಯ ಮಾಡಿ, ಅವರಿಗೆ ಇಚ್ಫಾಪದಾರ್ಥವ ನೀಡುತ್ತಿಹರು. ಅವರ ಒಕ್ಕುಮಿಕ್ಕ ಪ್ರಸಾದವನುಂಡು ಫಲದಾಕಾಂಕ್ಷೆಗಳಿಲ್ಲದೆ ಉಲುಹಡಗಿದ ನಿಜ ಪ್ರಭಾಲತೆ ಪರ್ಣದ ವೀಳ್ಯವನಿತ್ತು ಅವರ ತಾಂಬೂಲ ಪ್ರಸಾದವ ಕೊಂಡು ಪರಿಣಾಮಿಸಿ ಮನ ಭಾವಂಗಳಿಂದ ಪ್ರತ್ಯಕ್ಷವಾಗಿ ಕಂಡು, ಧ್ಯಾನಿಸುವುದೇ ಧ್ಯಾನ ಯೋಗ. ಇನ್ನು ಧಾರಣಯೋಗದ ವಿವರ : ಕರದೊಳಗೆ ಇಷ್ಟಲಿಂಗವ ಮೂರ್ತವ ಮಾಡಿಸಿ ಮನದೊಳಗೆ ಪ್ರಾಣಲಿಂಗವ ಮೂರ್ತವ ಮಾಡಿಸಿ ಭಾವದೊಳಗೆ ತೃಪ್ತಿಲಿಂಗವ ಮೂರ್ತವ ಮಾಡಿಸಿ ಕರ ಮನ ಭಾವದೊಳಗೆ ಪ್ರತ್ಯಕ್ಷವಾಗಿ ಕಂಡು ಧರಿಸಿಕೊಂಡಿಪ್ಪುದೀಗ ಧಾರಣಯೋಗ. ಇನ್ನು ಸಮಾಧಿಯೋಗದ ವಿವರ : ಆ ಇಷ್ಟ ಪ್ರಾಣ ಭಾವಲಿಂಗವ ಏಕವ ಮಾಡಿ, ಅಲ್ಲಿ ಐಕ್ಯವಾಗಿಪ್ಪುದೀಗ ಸಮಾಧಿಯೋಗ ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಇನ್ನಷ್ಟು ... -->