ಅಥವಾ

ಒಟ್ಟು 41 ಕಡೆಗಳಲ್ಲಿ , 19 ವಚನಕಾರರು , 35 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಎಂಬತ್ತುನಾಲ್ಕುಲಕ್ಷ ಜೀವವ್ರತ. ಐವತ್ತಾರು ನೇಮವ್ರತ. ಅರುವತ್ತನಾಲ್ಕು ಶೀಲವ್ರತ. ಮೂವತ್ತಾರು ಆಚಾರವ್ರತ. ತ್ರಿವಿಧ ಕ್ರೀಭಾವ ನೇಮವ್ರತ. ಇಂತಿವರಲ್ಲಿ ಶುದ್ಧಾತ್ಮನಾಗಿ ಅರಿದುದೇ ಜೀವನ್ಮುಕ್ತವ್ರತ. ಐಘಟದೂರ ರಾಮೇಶ್ವರಲಿಂಗದಲ್ಲಿ ಸರ್ವ ಅವಧಾನಿಯ ಕ್ರೀ ಶುದ್ಧತೆ.
--------------
ಮೆರೆಮಿಂಡಯ್ಯ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆದಿಯಲೊಬ್ಬ ಮೂರ್ತಿಯಾದ, ಆ ಮೂರ್ತಿಯಿಂದ ಸದಾಶಿವನಾದ, ಆ ಸದಾಶಿವನ ಮೂರ್ತಿಯಿಂದ ಜ್ಞಾನಶಕ್ತಿಯಾದಳು. ಆ ಸದಾಶಿವಂಗೆಯೂ ಜ್ಞಾನಶಕ್ತಿಯಿಬ್ಬರಿಗೆಯೂ ಶಿವನಾದ, ಆ ಶಿವಂಗೆ ಇಚ್ಛಾಶಕ್ತಿಯಾದಳು. ಆ ಶಿವಂಗೆಯೂ ಇಚ್ಛಾಶಕ್ತಿಯಿಬ್ಬರಿಗೆಯೂ ರುದ್ರನಾದ. ಆ ರುದ್ರಂಗೆ ಕ್ರಿಯಾಶಕ್ತಿಯಾದಳು. ಆ ರುದ್ರಂಗೆಯೂ ಕ್ರಿಯಾಶಕ್ತಿಯಿಬ್ಬರಿಗೆಯೂ ವಿಷ್ಣುವಾದ. ಆ ವಿಷ್ಣುವಿಂಗೆ ಮಹಾಲಕ್ಷ್ಮಿಯಾದಳು. ಆ ವಿಷ್ಣವಿಂಗೆಯೂ ಮಹಾಲಕ್ಷ್ಮಿಯಿಬ್ಬರಿಗೆಯೂ ಬ್ರಹ್ಮನಾದ. ಆ ಬ್ರಹ್ಮಂಗೆ ಸರಸ್ವತಿಯಾದಳು. ಆ ಬ್ರಹ್ಮಂಗೆಯೂ ಸರಸ್ವತಿಯರಿಬ್ಬರಿಗೆಯೂ ನರರು ಸುರರು ದೇವಕಳು ಹೆಣ್ಣು ಗಂಡು ಸಚರಾಚರಂಗ?ು ಸಹಿತವಾಗಿ ಎಂಬತ್ತುನಾಲ್ಕುಲಕ್ಷ ಜೀವಜಂತುಗಳು, ತೋರುವ ತೋರಿಕೆಯೆಲ್ಲ ಹುಟ್ಟಿತ್ತು ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ನಿರಾಕಾರ ಪರವಸ್ತು ತನ್ನ ಲೀಲಾವಿನೋದದಿಂದ ಎರಡು ಮುಖದಿಂದ ಎರಡು ಸೃಷ್ಟಿಯ ಮಾಡಿದರು. ಒಂದು ಊಧ್ರ್ವಸೃಷ್ಟಿ, ಒಂದು ಅಧೋಸೃಷ್ಟಿ. ಅಧೋಸೃಷ್ಟಿ ಯಾವುದೆಂದಡೆ : ಅಂಡಜ ಪಿಂಡಜ ಜರಾಯುಜ ಉದ್ಭಿಜ ಇವು ನಾಲ್ಕು ಕೂಡಿ ಎಂಬತ್ತುನಾಲ್ಕು ಜೀವರಾಶಿಯ ಮಾಡಿದರು. ಸ್ವರ್ಗ ನರಕ ಇಹ ಪರ ಪುಣ್ಯ ಪಾಪ ಧರ್ಮ ಕರ್ಮ ಸತ್ಯ ಅಸತ್ಯ ಜ್ಞಾನ ಅಜ್ಞಾನ ಹೆಣ್ಣು ಗಂಡು ಹಿರಿದು ಕಿರಿದು ಉತ್ಪತ್ತಿ-ಸ್ಥಿತಿ-ಲಯಕ್ಕೆ ಅದ್ಥಿಕಾರಿಗಳಾದ ಬ್ರಹ್ಮ-ವಿಷ್ಣು-ರುದ್ರರು ಮಾಡಿಟ್ಟರು. ಇನ್ನು ಊಧ್ರ್ವಸೃಷ್ಟಿ ಹೇಗೆಂದಡೆ : ಅಸಂಖ್ಯಾತ ಮಹಾಪ್ರಮಥಗಣಂಗಳು, ಇವರಿಗೆ ಸ್ವರ್ಗ-ನರಕವಿಲ್ಲ, ಇಹ-ಪರವಿಲ್ಲ, ಪುಣ್ಯ-ಪಾಪವಿಲ್ಲ, ಧರ್ಮ-ಕರ್ಮವಿಲ್ಲ, ಹುಸಿ-ಖರೆಯಿಲ್ಲ, ಜ್ಞಾನ-ಅಜ್ಞಾನವಿಲ್ಲ, ಹೆಣ್ಣು-ಗಂಡುವಿಲ್ಲ, ಹಿರಿದು-ಕಿರಿದುವಿಲ್ಲ, ಉತ್ಪತ್ತಿ-ಸ್ಥಿತಿ-ಲಯವಿಲ್ಲ, ಅವರಿಗೆ ಬ್ರಹ್ಮ-ವಿಷ್ಣು ರುದ್ರರು ಇಲ್ಲ. ಅವರಿಗೆ ಮತ್ತಂ, ಆ ನಿರಾಕಾರ ಪರವಸ್ತು ತಾನೆ ಗುರು-ಲಿಂಗ-ಜಂಗಮವಾಗಿ ಗುರುವಿನಲ್ಲಿ ಉತ್ಪತ್ತಿ, ಲಿಂಗದಲ್ಲಿ ಸ್ಥಿತಿ, ಜಂಗಮದಲ್ಲಿ ನಿಜೈಕ್ಯರು. ಮತ್ತೆ ಪರಶಿವಮೂರ್ತಿ ತನ್ನ ವಿನೋದಕ್ಕೆ ಆಟವ ಆಡಬೇಕಾಗಿ ಮಹದಾಕಾಶವ ಮಂಟಪವ ಮಾಡಿ, ಆಕಾಶವ ಪರದೆಯ ಕಟ್ಟಿ, ಅಸಂಖ್ಯಾತ ಪ್ರಮಥಗಣಂಗಳಿಗೆ ಮೂರ್ತವ ಮಾಡಿಸಿ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನೆ ಸೂತ್ರವ ಮಾಡಿ ತಮ್ಮ ಕೈಯಲ್ಲಿ ಪಿಡಿದು, ಚಿತ್ರವಿಚಿತ್ರದಾಟವ ಆಡಿಸುತ್ತಿಹುದಕ್ಕೆ ಲೆಕ್ಕವಿಲ್ಲ, ಹೇಳುವುದಕ್ಕೆ ಅಸಾಧ್ಯ. ಆ ಪ್ರಮಥಗಣಂಗಳು ನೋಡಿ, ಆ ಬೊಂಬೆಗಳೇನು ಆಡಿಹವು ? ಸೂತ್ರಿಕನು ಆಡಿಸಿದ ಹಾಂಗೆ ಆಡ್ಯಾವು. ಆ ಗೊಂಬೆಗೆ ಸೂತ್ರವಲ್ಲದೆ ಶಿವನಿಲ್ಲ. ಆ ಗೊಂಬೆಯೊಳಗೆ ಶಿವನಿದ್ದರೆ, ಆಡಿಸುವುದು ಹ್ಯಾಂಗೆ ? ಇವೆಲ್ಲವು ಅನಿತ್ಯವೆಂದು ತಿಳಿದು ಪ್ರಮಥಗಣಂಗಳು ತಮ್ಮ ಲಿಂಗದಲ್ಲಿ ನಿಜ ಮೋಕ್ಷಿಗಳಾಗಿ ಶಾಂಭವಪುರಕ್ಕೆ ಹೋದ ಭೇದವ ಎನ್ನೊಳರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ವೇದಪುರಾಣಾಗಮಶಾಸ್ತ್ರ ನಾದದ ಸೊಮ್ಮೆಂಬಿರಿ. ಆ ನಾದದಿಂದ ಆಕಾಶ ಪುಟ್ಟಿತ್ತು . ಆಕಾಶದಿಂದ ವಾಯು ಪುಟ್ಟಿತ್ತು , ವಾಯುವಿನಿಂದ ಅಗ್ನಿ ಪುಟ್ಟಿತ್ತು . ಅಗ್ನಿಯಿಂದ ಅಪ್ಪು ಪುಟ್ಟಿತ್ತು , ಅಪ್ಪುವಿನಿಂದ ಪೃಥ್ವಿ ಪುಟ್ಟಿತ್ತು. ಪೃಥ್ವಿಯಿಂದ ಇರುವೆ ಕಡೆಯಾಗಿ ಎಂಬತ್ತುನಾಲ್ಕುಲಕ್ಷ ಜೀವಂಗಳು ಪುಟ್ಟಿದವು. ಅದೇನು ಕಾರಣವೆಂದಡೆ, ರಸಗಂಧದಿಂದ ರೂಪಾದವು, ಅಗ್ನಿಕಳೆಯಾಯಿತ್ತು . ವಾಯು ಚೈತನ್ಯವಾಯಿತ್ತು . ಆಕಾಶ ನಾದವಾಯಿತ್ತು. ಇಂತಿದರೊಳಗೆ ನಮ್ಮ ದೇವ ಇವರೊಂದರಂತೆಯೂ ಅಲ್ಲ . ಪಂಚತತ್ವವನಿಳುಹಿ, ಆತ್ಮತತ್ವ ಅನಾತ್ಮನೊಳು ಕೂಡಿ, ಅನಾಮಯಲಿಂಗ ಕಾಣಬಹುದು. ಅನಾಮಯಲಿಂಗವ ಕಂಡ ಬಳಿಕ, ಅದೇ ಲಿಂಗೈಕ್ಯವು. ಇದು ತಪ್ಪದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ, ಸದ್ಗುರುವೆ ಎನ್ನ ಶಿವಾತ್ಮನ ಮಾಡಿದಿರಾಗಿ, ಆತ್ಮಶುದ್ಧಿಯಾಯಿತ್ತೆನಗೆ. ಪಂಚಭೂತಂಗಳಲಿ ಪಂಚಬ್ರಹ್ಮನನಿರಿಸಿದಿರಾಗಿ, ಭೂತಶುದ್ಧಿಯಾಯಿತ್ತೆನಗೆ. ಅಂಡಜ ಜರಾಯುಜಾದಿ ಎಂಬತ್ತುನಾಲ್ಕುಲಕ್ಷ ಯೋನಿಯಲ್ಲಿ ಬಹ ಜೀವನ ಅಯೋನಿಜನ ಮಾಡಿದಿರಾಗಿ ಜೀವಶುದ್ಧಿಯಾಯಿತ್ತೆನಗೆ. ಅಂಗಾಶ್ರಯವ ಕಳೆದು ಲಿಂಗಾಶ್ರಯವ ಮಾಡಿದಿರಾಗಿ ಮನಶ್ಶುದ್ಧಿಯಾಯಿತ್ತೆನಗೆ. ಪಶುವೆಂಬ ಅಜ್ಞಾನದ್ರವ್ಯವ ಕಳೆದು ಪರಮಸುಜ್ಞಾನದ್ರವ್ಯವ ಮಾಡಿದಿರಾಗಿ ದ್ರವ್ಯಶುದ್ಧಿಯಾಯಿತ್ತೆನಗೆ. ಇಂತು ಸರ್ವಶುದ್ಧನಂ ಮಾಡಿ ಪೂರ್ವಾಶ್ರಯವ ಕಳೆದಿರಾಗಿ ಕೂಡಲಚೆನ್ನಸಂಗಾ, ನಿಮ್ಮುವ `ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ : ಎನುತಿರ್ದೆನು.
--------------
ಚನ್ನಬಸವಣ್ಣ
ಸುಕರ್ಮದಿಂದ ದೇವತಾಯೋನಿಯಲ್ಲಿ ಜನಿಸುವನು. ದುಷ್ಕರ್ಮದಿಂದ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳ ಕ್ರೂರಯೋನಿಯಲ್ಲಿ ಜನಿಸುವನು. ಸುಕರ್ಮ ದುಷ್ಕರ್ಮ ಎರಡರ ಮಿಶ್ರಣದಿಂದ ಮನುಜಯೋನಿಯಲ್ಲಿ ಜನಿಸುವನು. ಇಂತಪ್ಪ ಸುಕರ್ಮ ದುಷ್ಕರ್ಮಗಳು ಪೂರ್ವಕರ್ಮವಶದಿಂದ ಬಹವು ನೋಡಾ. ಇದಕ್ಕೆ ಸೂತಸಂಹಿತಾಯಾಂ : ``ಪುಣ್ಯಾದ್ದೇವತ್ವಮಾಪ್ನೋತಿ ಪಾಪಾತ್ ಸ್ಥಾವರತಾಮಿಯಾತ್ | ಸಮಾಭ್ಯಾಂ ಪಾಪಪುಣ್ಯಾಭ್ಯಾಂ ಮಾನುಷ್ಯೇ ಪರಿರ್ವರ್ತತೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕತ್ತಲಿಪುರದಲ್ಲಿ ಎತ್ತೆಮ್ಮೆ ಮೈಥುನ ಮಾಡುವದ ಕಂಡೆ. ಆ ಎಮ್ಮೆಯ ಗರ್ಭದಲ್ಲಿ ಎಂಬತ್ತುನಾಲ್ಕುಲಕ್ಷ ಎತ್ತು ಪುಟ್ಟುವದ ಕಂಡೆ. ಹಾಳೂರ ಕೋಳಿ ಕೂಗಲು ಕತ್ತಲಿಪುರÀ ಬೆಳಕುದೋರಿತ್ತ ಕಂಡೆ. ಆ ಬೆಳಗಿನೊಳಗೆ ಎತ್ತೆಮ್ಮಿ ಸತ್ತು ಎಂಬತ್ತುನಾಲ್ಕುಲಕ್ಷ ಎತ್ತೆತ್ತ ಹೋದವೆಂದರಿಯೆ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಬ್ರಹ್ಮಾಂಡವು ಹೇಗೆ ಪುಟ್ಟಿತ್ತು ಪೇಳ್ವೆ ಕೇಳಿರಯ್ಯಾ. ಆದಿ, ಅನಾದಿಯಿಂದತ್ತತ್ತಲಾದ ನಿರಾಕಾರ ಪರವಸ್ತು ತನ್ನ ಸ್ವರೂಪವ ತಾನರಿಯದೆ ಅನಂತ ಕಲ್ಪಕಲ್ಪಾಂತರ ಇರ್ದು ತನ್ನ ಸ್ವಲೀಲೆಯಿಂದ ತಾನೇ ಜಗತ್ಸøಷ್ಟಿ ನಿಮಿತ್ತವಾಗಿ, ನೆನವುದೋರಲು, ಆ ನೆನವು ನಿರ್ಧರವಾಗಿ ಚಿತ್ತೆನಿಸಿತ್ತು. ಆ ಚಿತ್ತಿನಿಂದ ಚಿನ್ನಾದ ಚಿದ್ಬಿಂದು ಚಿತ್ಕಳೆಗಳೊಗೆದವು. ಆ ಚಿತ್ತು ತ್ರಿವಿಧಮಲ ಸಹವಾಗಿ ಚತುರ್ವಿಧವು ಘಟ್ಟಿಗೊಂಡು ಅಖಂಡ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗವಾಯಿತ್ತು. ಆ ಮಹಾಲಿಂಗದಿಂದ ಆತ್ಮ ಜನನ ; ಆತ್ಮದಿಂದ ಭಾವ ಪುಟ್ಟಿತ್ತು. ಆ ಭಾವದಿಂದ ಮೋಹ ಪುಟ್ಟಿತ್ತು. ಆ ಮೋಹವೆಂದಡೆ, ಮಾಯವೆಂದಡೆ, ಆಶೆಯೆಂದಡೆ, ಮನವೆಂದಡೆ ಏಕಪರ್ಯಾಯಾರ್ಥ. ಇಂತಪ್ಪ ಮೋಹದಿಂದ ತ್ರೈಲೋಕ ಮೊದಲಾಗಿ ಚತುರ್ದಶಭುವನಂಗಳು ಪುಟ್ಟಿದವು. ಆ ಚತುರ್ದಶಭುವನದ ಮಧ್ಯದಲ್ಲಿ ಇರುವೆ ಮೊದಲು ಆನೆ ಕಡೆಯಾಗಿ ಎಂಬತ್ತುನಾಲ್ಕುಲಕ್ಷ ಜೀವರಾಶಿಯೊಳಗೆ ದೇವ-ದಾನವ-ಮಾನವರು ಮೊದಲಾದ ಹೆಣ್ಣು-ಗಂಡು, ಸಚರಾಚರಂಗಳೆಲ್ಲವು ಉತ್ಪತ್ತಿಯಾದವು. ಇಂತೀ ಎಲ್ಲವು ಪರಶಿವನ ನೆನವುಮಾತ್ರದಿಂದ ಮರೀಚಿಕಾಜಲದಂತೆ, ಸುರಚಾಪದಂತೆ, ತೋರಿ ತೋರಿ ಅಡಗುವವಲ್ಲದೆ ನಿಜವಲ್ಲ ಮಿಥ್ಯವೆಂದು ತಿಳಿದು ವಿಸರ್ಜಿಸಿ ಬಿಡುವಾತ ತಾನೇ ಪರಶಿವನೆಂದು ತಿಳಿವುದಯ್ಯ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಡೆನಾಡಲಿಂಗವ ನಡುನಾಡಿಗೆ ತಂದೆನೆಂಬ ಅಹಂಕಾರವ ಮುಂದುಗೊಂಡಿದ್ದೆಯಲ್ಲಾ ಎಂಬತ್ತುನಾಲ್ಕುಲಕ್ಷ ಶಿವಾಲಯವೆಂಬ ಬಯಲಭ್ರಮೆ ಇದೆಲ್ಲಿಯದು ಹೇಳಾ ? ಮಹಾಘನಲಿಂಗಕ್ಕೆ ಜಗದ ಜೀವರಾಶಿಗಳು ಶಿವಾಲಯವಾಗಬಲ್ಲವೆ ? ನಿನ್ನ ಲಕ್ಷದ ಮೇಲೆ ತೊಂಬತ್ತಾರುಸಾವಿರ ಲಿಂಗವ ನಿನ್ನ ಎದೆಯಲ್ಲಿ ಇರಿದುಕೊಳ್ಳಾ. ಗುಹೇಶ್ವರಲಿಂಗವು ನಿನ್ನ ತಪ್ಪಿಸಿ ಹೋದುದ ಮರೆದೆಯಲ್ಲಾ ಮರುಳ ಸಿದ್ಧರಾಮಯ್ಯಾ
--------------
ಅಲ್ಲಮಪ್ರಭುದೇವರು
ನೆಲನೊಂದೆ ಜಲ[ನೊಂದೆ] ಎಂಬುದ ಎಲ್ಲ ಲೋಕವು ಬಲ್ಲುದು ನೋಡಿರೆ ! ನೆಲ ಶುದ್ಧವೆಂಬಿರಿ:ನೆಲದೊಳಗಿಪ್ಪ ಎಂಬತ್ತುನಾಲ್ಕುಲಕ್ಷ ಜೀವರಾಸಿಗಳು ಅಲ್ಲಿಯೆ ಹುಟ್ಟಿ ಅಲ್ಲಿ ಮಡಿವವಾಗಿ ಆ ನೆಲ ಶುದ್ಧವಲ್ಲ ನಿಲ್ಲು. ಜಲ ಶುದ್ಧವೆಂಬಿರಿ:ಜಲದೊಳಗಿಪ್ಪ ಇಪ್ಪತ್ತೊಂದು [ಲಕ್ಷ] ಜೀವರಾಸಿಗಳು ಅಲ್ಲಿಯೆ ಹುಟ್ಟಿ ಅಲ್ಲಿಯೆ ಮಡಿವವಾಗಿ ಆ ಜಲ ಶುದ್ಧವಲ್ಲ ನಿಲ್ಲು. ನಿಮ್ಮ ತನು ಶುದ್ಧವೆಂಬಿರಿ; ತನುವಿನೊಳಗಿಪ್ಪ ಅಷ್ಟಮದಗಳೆಂಬ ಭವಿಗಳಂ ಕಟ್ಟಿ ನಿಲಿಸಲರಿಯಲಿಲ್ಲವಾಗಿ ಆ ತನು ಶುದ್ಧವಲ್ಲ ನಿಲ್ಲು. ನಿಮ್ಮ ಹಸ್ತಂಗಳು ಶುದ್ಧವೆಂಬಿರಿ:ಒಂದು ಹಸ್ತ ಜಿಹ್ವೆಯೊಳಗಾಡುವದು ಒಂದು ಹಸ್ತ ಗುಹ್ಯದೊಳಗಾಡುವುದು_[ಆ] ಹಸ್ತಂಗಳು ಶುದ್ಧವಲ್ಲ ನಿಲ್ಲು. ನಿಮ್ಮ ನಯನಂಗಳು ಶುದ್ಧವೆಂಬಿರಿ:ನಯನದಲ್ಲಿ ನೋಡಿದಲ್ಲಿ ಕೂಡುವಿರಾಗಿ ನಿಮ್ಮ ನಯನಂಗಳು ಶುದ್ಧವಲ್ಲ ನಿಲ್ಲು_ ಇಂತೀ ತಮ್ಮ ಅಶುದ್ಧವಂ ತಾವು ಕಳೆಯಲರಿಯದೆ, ಇದಿರ ಅಶುದ್ಧವಂ ಕಳೆವೆವೆಂದಡೆ, ನಾಚಿತ್ತು ನೋಡಾ ಎನ್ನ ಮನವು. ಭಕ್ತಿ ವಿಶ್ವಾಸದಿಂದ ಗುರುಲಿಂಗಜಂಗಮದ ಪಾದಾರ್ಚನೆಯಂ ಮಾಡಿ ಪಾದೋದಕ ಪ್ರಸಾದವಂ ಕೊಂಬ ಭಕ್ತನ ಶೀಲವೇ ಶೀಲವಲ್ಲದೆ ಉಳಿದವರದಲ್ಲ ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಎಂಬತ್ತುನಾಲ್ಕುಲಕ್ಷ ಮಂಡಲದೊಳಗೆ ಒಂದೊಂದು ಜನ್ಮದಲ್ಲಿ ಸಹಸ್ರವೇಳೆ ಸತ್ತು ಹುಟ್ಟಿ ಸುತ್ತಿಸುಳಿದು ಸುಖದುಃಖಗಳಿಂದೆ ನೊಂದು ಬೆಂದು ತೊಳಲಿ ಬಳಲುವ ಜೀವಂಗೆ, ಬಡವಂಗೆ ಕಡವರ ದೊರೆಕೊಂಡಂತೆ, ಮನುಷ್ಯದೇಹವು ದೊರೆಕೊಂಡಲ್ಲಿ, ಶಿವಕೃಪೆಯಿಂದ ಗುರುಕಾರುಣ್ಯವಾಗಿ ಅಂಗದ ಮೇಲೆ ಲಿಂಗಧಾರಣವಾದ ಬಳಿಕ ಆ ಲಿಂಗದ ಮೇಲೆ ಪ್ರಾಣಪ್ರತಿಷೆ*ಯಂ ಮಾಡಿ ನಿಮಿಷ ನಿಮಿಷಾರ್ಧವಗಲದಿರಬೇಕು. ಮತ್ತಂ, ಆ ಲಿಂಗದಲ್ಲಿ ಐಕ್ಯವಾಗುವನ್ನಬರ ಸತ್ಕ್ರಿಯಾ ಸಮ್ಯಕ್‍ಜ್ಞಾನವ ಬಿಡದಿರಬೇಕು. ಇಷ್ಟುಳ್ಳಾತಂಗೆ ಶಿವನಲ್ಲಿ ಸಮರಸವಲ್ಲದೆ, ಅಂತರಂಗದಲ್ಲಿ ಅಂತಃಪ್ರಾಣಲಿಂಗದ ಪರಿಪೂರ್ಣ ಬೆಳಗಕಂಡೆವು. ಇನ್ನು ಇಷ್ಟಲಿಂಗದ ಹಂಗು ಏತಕೆಂದು ಆ ಇಷ್ಟಲಿಂಗವ ಕಡೆಗೆ ತೆಗೆದು ಹಾಕಿ ಲಿಂಗಬಾಹ್ಯನಾಗಿ ವ್ರತಗೇಡಿಯಾದಾತನು ಒಂದುಕೋಟಿ ಕಲ್ಪಾಂತರವು ನರಕದೊಳಗಿರ್ದು ಅಲ್ಲಿಂದತ್ತ ಎಂಬತ್ತುನಾಲ್ಕುಲಕ್ಷ ಜನ್ಮದಲ್ಲಿ ಬಂಧನಬಡುತಿರ್ಪನಲ್ಲದೆ ಶಿವನಲ್ಲಿ ಅವಿರಳ ಸಮರಸವಿಲ್ಲ ನೋಡಾ ! ಅದೆಂತೆಂದೊಡೆ : ``ಅಂಗೇ ಚ ಲಿಂಗಸಂಬಂಧಃ ಲಿಂಗಂಚ ಪ್ರಾಣಸಂಯುತಂ | ನಿಮಿಷಾರ್ಧಂ ಪ್ರಾಣವಿಯೋಗೇನ ನರಕೇ ಕಾಲಮಕ್ಷಯಂ||'' ಎಂದುದಾಗಿ, ಇಂತಪ್ಪ ಅದ್ವೈತ ಹೀನಮಾನವರ ಎನಗೊಮ್ಮೆ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇಂದಿಗೆಂತು ನಾಳಿಂಗೆಂತೆಂದು, ಬೆಂದ ಒಡಲಿಗೆ ಚಿಂತಿಸಿ, ಭ್ರಮೆಗೊಂಡು ಬಳಲಬೇಡ ಮರುಳೇ. ಎಂಬತ್ತುನಾಲ್ಕುಲಕ್ಷ ಯೋನಿಯೊಳಗಾದ ಸಮಸ್ತ ಜೀವರಿಗೆ, ಭೋಗವನೂ, ಭೋಗವಿಷಯಜ್ಞಾನವನೂ, ಕೊಟ್ಟು ಸಲಹುವ ದೇವನು, ತನ್ನ ಸಲಹಲಾರನೆ? ಇದನರಿದು ಮತ್ತೇಕೆ ಚಿಂತಿಸುವೆ ಮರುಳೇ? ಹುಟ್ಟಿಸಿದ ದೇವನು ರಕ್ಷಿಸುವನಲ್ಲದೆ ಮಾಣನೆಂಬುದನರಿಯ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು, ಕರುಣಿ ಕೃಪಾಳುವೆಂಬುದನರಿಯ ಮರುಳೇ.
--------------
ಸ್ವತಂತ್ರ ಸಿದ್ಧಲಿಂಗ
ನಿಃಕಳ ನಿರುಪಮ ತೇಜೋಮಯ ನಿರಂಜನಲಿಂಗದ ನೆನಹಿನ ಮಹಾಘನ ಮಹತ್ವವನುಳ್ಳ ಮಹಾಂತ ಅಖಂಡಪರಶಿವನೊಳಗೆ ಷಡ್‍ವಕ್ತ್ರವನುಳ್ಳ ಪರಬ್ರಹ್ಮವಿರ್ಪುದು, ಆ ಪರಬ್ರಹ್ಮದಲ್ಲಿ ಬ್ರಹ್ಮಾಂಡವಿರ್ಪುದು, ಆ ಬ್ರಹ್ಮಾಂಡದೊಳಗೆ ಸಕಲ ಸ್ಥಿರಚರಪ್ರಾಣಿಗಳಿರ್ಪುವು. ಆ ಪ್ರಾಣಿಗಳ ಸತ್ಕರ್ಮ ದುಷ್ಕರ್ಮದಿಂದಾದ ಪುಣ್ಯ ಪಾಪಂಗಳಿಂದೆ ಬಂದ ಸುಖದುಃಖಂಗಳನುಂಡು ಸೃಷ್ಟಿ ಸ್ಥಿತಿ ಲಯಕ್ಕೊಳಗಾಗಿ ಅನಂತಕಾಲ ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಬರುತಿರ್ಪುದು. ಆ ಬರುವದರೊಳಗೆ ಸತ್ಕರ್ಮದಿಂದ ಪುಣ್ಯವೊದಗಿ ಮಾನವಜನ್ಮ ಬರಲು ಈ ಮಾನವಜನ್ಮದ ಅಜ್ಞಾನಕ್ಕೆ ಆ ಮಹಾಮಹಾಂತ ಪರಿಮಳವನೊಳಕೊಂಡು ಮಹಾಂತಮಾರುತ ಸುಳಿಯಲು ಆ ಮಾರುತನ ಸೋಂಕಿಗೆ ಆ ಅಜ್ಞಾನ ಸುಜ್ಞಾನವಾಯಿತ್ತು. ಆ ಸುಜ್ಞಾನದಿಂದೆ ಸತ್ಕರ್ಮವ ಮಾಡಲು ಸಾಧುರಸಂಗವು ದೊರಕಿತ್ತು. ಆ ಸಾಧುರಸಂಗದಿಂದ ಸುಗುಣ ಅಳವಟ್ಟಿತ್ತು. ಆ ಸುಗುಣ ಅಳವಟ್ಟಲ್ಲಿ ಸಂಸಾರ ಹೇಯವಾಯಿತ್ತು. ಆ ಸಂಸಾರ ಹೇಯವಾದಲ್ಲಿ ಮುಕ್ತನಾಗಬೇಕೆಂಬೋ ಚಿಂತೆ ತಲೆದೋರಿತ್ತು. ಆ ಚಿಂತಾಪರವಶದಿಂದೆ ದುಃಖಗೊಂಡಿರಲು ಆ ಮಹಾಂತಪರಿಮಳವನೊಳಕೊಂಡು, ಮಹಾಂತಮಾರುತನೆಂಬ ಪ್ರಭುವೇ ತಾ ಮುನ್ನ ಸೋಂಕಿದ್ದಕ್ಕೆ ತನ್ನ ಬಯಸುವ ಶಿಷ್ಯನಲ್ಲಿಗೆ ತಾನೇ ಗುರುವಾಗಿ ಬಂದು, ಮೋಕ್ಷವಾಸನಿಗೆ ಅವಸ್ಥೆಯೊಳಗಿದ್ದ ಶಿಷ್ಯನ ಸಂತೈಸಿ, ಮಹಾಂತಪರಿಮಳವನುಳ್ಳ ಮುಕ್ತಿಫಲವಾಗುವ ಘನವೆಂಬ ಪುಷ್ಪಕ್ಕೆ ಮೂಲನೆನವಾದ ಮನವೆಂಬ ಲಿಂಗದಲ್ಲಿ ನಿಃಕಲವೇ ನಾನು, ನಾನೇ ನೀನು. ಹೀಗೆಂಬುವುದ ಉಸುರದೆ ಮರೆಗೈದು, ಆ ಲಿಂಗಮಂ ಪರಿಪೂರ್ಣವಾದ ಕರಕಮಲಕ್ಕೆ ಕೊಟ್ಟು ಮನವೆಂಬ ಲಿಂಗದ ನೆನವೆಂಬ ಬಳ್ಳಿಯೇ ಜಂಗಮವೆಂದು ತೋರಿ, ಆ ಬಳ್ಳಿಯ ಬೊಡ್ಡಿಯ ತಂಪು ಪಾದೋದಕವು. ಆ ಆನಂದ ತಂಪ್ಹಿಡಿಯುವುದಕ್ಕೆ ಮಡಿಯಾದ ಮೃತ್ತಿಕೆಯು ನಿರಂಜನಪ್ರಸಾದ. ಆ ಮೃತ್ತಿಕೆಗೆ ಒಡ್ಡಾದ ತೇಜೋಮಯವೇ ವಿಭೂತಿ, ಆ ತೇಜಸ್ಸು ಲಿಂಗಪೂಜೆಯೇ ರುದ್ರಾಕ್ಷಿ, ಆ ತೇಜಸ್ಸು ಲಿಂಗಸ್ಫುಟನಾದವೇ ನಿರುಪಮಮಂತ್ರ, ಇಂತೀ ಅಷ್ಟಾವರಣ ಘಟ್ಟಿಗೊಂಡು ಪೂಜಿಸಲಾಗಿ ಆ ಶಿಷ್ಯನು ಗುರುವ ಹಾಡಿ, ಲಿಂಗವ ನೋಡಿ, ಜಂಗಮವ ಪೂಜಿಸಿ, ಪಾದೋದಕವನ್ನುಪಾರ್ಜಿಸಿ, ಪ್ರಸಾದವನುಂಡು, ವಿಭೂತಿಯ ಲೇಪಿಸಿಕೊಂಡು, ರುದ್ರಾಕ್ಷಿಯ ಧರಿಸಿಕೊಂಡು, ಮಂತ್ರವ ಚಿತ್ತದೊಳಿರಿಸಿ ಆಚರಿಸಲು, ಆ ಶಿಷ್ಯನ ಕಾಯ ಆ ಗುರುವನಪ್ಪಿ ಸದ್ಗುರುವಾಯಿತ್ತು. ಮನವು ಲಿಂಗವ ಕೂಡಿ ಘನಲಿಂಗವಾಯಿತ್ತು. ಪ್ರಾಣ ಜಂಗಮವ ಮರೆಗೊಂಡು ನಿಜಜಂಗಮವಾಯಿತ್ತು. ತೃಷೆ ಪಾದೋದಕದಲ್ಲಿ ಮುಳುಗಿ ಆನಂದಪಾದೋದಕವಾಯಿತ್ತು. ಹಸಿವು ಪ್ರಸಾದದಲ್ಲಡಗಿ ಪ್ರಸಿದ್ಧಪ್ರಸಾದವಾಯಿತ್ತು. ಚಂದನ ವಿಭೂತಿಯಲ್ಲಿ ಸತ್ತು ಚಿದ್ವಿಭೂತಿಯಾಯಿತ್ತು. ಶೃಂಗಾರ ರುದ್ರಾಕ್ಷಿಯಲ್ಲಿ ಕರಗಿ ಏಕಮುಖರುದ್ರಾಕ್ಷಿಯಾಯಿತ್ತು. ಚಿತ್ತ ಮಂತ್ರದಲ್ಲಿ ಸಮರಸವಾಗಿ ಮೂಲಮಂತ್ರವಾಯಿತ್ತು. ಇಂಥಾ ಮೂಲಮಂತ್ರವೇ ಬ್ರಹ್ಮಾಂಡ, ಪಿಂಡಾಂಡ, ಸ್ಥಿರ, ಚರ, ಸಮಸ್ತಕ್ಕೆ ಕಾರಣ ಚೈತನ್ಯಸೂತ್ರವಾಗಿ ಅಂತರಂಗ ನಿವೇದಿಸಲು, ಅಲ್ಲಿ ಅಂತರಂಗದಲ್ಲಿ ತೋರುವ ಆರುಸ್ಥಲ, ಆರುಚಕ್ರ, ಆರುಶಕ್ತಿ, ಆರುಭಕ್ತಿ, ಆರುಲಿಂಗ, ಆರಾರು ಮೂತ್ತಾರು, ಇನ್ನೂರಾಹದಿನಾರು ತೋರಿಕೆಗೆ ಆ ಮೂಲಮಂತ್ರ ತಾನೇ ಕಾರಣ ಚೈತನ್ಯಸೂತ್ರವಾಗಿ ಕಾಣಿಸಲು ಸಮ್ಯಜ್ಞಾನವೆನಿಸಿತು. ಆ ಸಮ್ಯಜ್ಞಾನಬೆಳಗಿನೊಳಗೆ ಮುದ್ರೆ ಸಂಧಾನ ವಿವರ ವಿಚಾರದಿಂದೆ ಷಟ್ತಾರೆಗಳ ಸ್ವರೂಪದ ಆರುಭೂತ, ಆರುಮುಖ, ಆರುಹಸ್ತ, ಆರುಪ್ರಸಾದ, ಆರುತೃಪ್ತಿ, ಆರು ಅಧಿದೇವತೆ ಮೊದಲಾದ ಆರಾರು ಮೂವತ್ತಾರು ಇನ್ನೂರಾಹದಿನಾರು ಅನಂತ ತೋರಿಕೆಯೆಲ್ಲಾ ಮಂತ್ರಸ್ವರೂಪವೇ ಆಗಿ ತೋರಿದಲ್ಲಿ ತತ್ವಜ್ಞಾನವಾಯಿತು. ಒಳಗೇಕವಾದ ತತ್ವಜ್ಞಾನವು ಹೊರಗೆ ನೋಡಲು ಹೊರಗೇಕವಾಗಿ ತೋರಿತು. ಒಳಹೊರಗೆಂಬಲ್ಲಿ ನಡುವೆಂಬುದೊಂದು ತೋರಿತು. ಈ ಮೂರು ಒಂದೇ ಆಗಿ, ಒಂದೇ ಬ್ಯಾರೆ ಬ್ಯಾರೆ ಸ್ಥೂಲ ಸೂಕ್ಷ್ಮ ಕಾರಣ ಮೂರಾದಲ್ಲಿ ಆತ್ಮಜ್ಞಾನವಾಯಿತು. ಆ ಆತ್ಮಜ್ಞಾನದಿಂದ ಆತ್ಮಾನಾತ್ಮ ವಿಚಾರ ಗಟ್ಟಿಗೊಂಡಲ್ಲಿ ಮಹಾಜ್ಞಾನಪ್ರಕಾಶವಾಯಿತು. ಆ ಮಹಾಜ್ಞಾನದಿಂದೆ ಅನುಭವದ ದೃಷ್ಟಿಯಿಡಲು ಬೊಂಬೆಸೂತ್ರ ಆಡಿಸುವವನಂತೆ ಬ್ಯಾರೆ ಬ್ಯಾರೆ ಕಾಣಿಸಲು ಈ ಬೊಂಬೆಯ ಸೂತ್ರ ಆಡಿಸುವವನು ಇವು ಮೂರು ಎಲ್ಲಿಹವು, ಏನೆಂದು ತೂರ್ಯವೇರಿ ಸೂರೆಗೊಂಡಲ್ಲಿ ಸ್ವಯಂಬ್ರಹ್ಮವೆನಿಸಿತ್ತು. ಆ ಸ್ವಯಂಬ್ರಹ್ಮಜ್ಞಾನವು ತನ್ನ ತಾ ವಿಚಾರಿಸಲು ತನ್ನೊಳಗೆ ಜಗ, ಜಗದೊಳಗೆ ತಾನು, ತಾನೇ ಜಗ, ಜಗವೇ ತಾನೆಂಬಲ್ಲಿ ನಿಜಜ್ಞಾನವಾಯಿತು. ಆ ನಿಜಜ್ಞಾನದಿಂದೆ ನಿಜವರಿಯಲು ಆ ನಿಜದೊಳಗೆ ತಾನೇ ಜಗ, ಜಗದೊಳಗೆ ತಾನೇ ಎಂಬೋ ಎರಡಿಲ್ಲದೆ ತಾನೆ ತಾನೆಂಬೊ ಅರುವಾಯಿತು. ಆ ಅರುವು ಮರೆಗೊಂಡು ಕುರುಹು ಉಲಿಯದೆ ನಿರ್ಬೈಲಾಗಲು ಮಹಾಂತನೆಂಬ ಹೆಸರಿಲ್ಲದೆ ಹೋಗಿ ಏನೋ ಆಯಿತ್ತು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->