ಅಥವಾ

ಒಟ್ಟು 25 ಕಡೆಗಳಲ್ಲಿ , 16 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರ್ವಾಹವಾಯಿತ್ತಯ್ಯಾ ಬಸವಣ್ಣಂಗೆ ಕಪ್ಪಡಿಯ ಸಂಗಯ್ಯನಲ್ಲಿ. ಅಕ್ಕನಾಗಾಯಿ ಮಿಂಡ ಮಲ್ಲಿನಾಥ ಹಡಪದ ಅಪ್ಪಣ್ಣ ಮೊಗವಾಡದ ಕೇಶಿರಾಜ ಕೋಲಶಾಂತಯ್ಯ ಮೊದಲಾದ ಶಿವಗಣಂಗಳೆಲ್ಲರೂ ಬಸವರಾಜನ ಬಯಲ ಬೆರಸಿದರು. ಆ ಬಯಲ ಪ್ರಸಾದದಿಂದ, ನಿರುಪಮ ಪ್ರಭುದೇವರು ಕದಳಿಯಲ್ಲಿ ಬಯಲಾದರು. ಆ ಬಯಲ ಪ್ರಸಾದದಿಂದ, ಮೋಳಿಗೆಯ ಮಾರಯ್ಯ ಕಕ್ಕಯ್ಯ ಪಡಿಹಾರಿ ಉತ್ತಣ್ಣ ಕನ್ನದ ಮಾರಣ್ಣ ಕಲಕೇತ ಬೊಮ್ಮಣ್ಣ ನುಲಿಯ ಚಂದಯ್ಯ ಹೆಂಡದ ಮಾರಯ್ಯ ಶಂಕರ ದಾಸಿಮಯ್ಯ ಏಕಾಂತ ರಾಮಯ್ಯ ಮೇದರ ಕೇತಯ್ಯ ಮೊದಲಾದ ಏಳುನೂರೆಪ್ಪತ್ತು ಅಮರಗಣಂಗಳ ದಂಡು, ಕೈಲಾಸಕ್ಕೆ ನಡೆಯಿತ್ತು, ಬಂದ ಮಣಿಹ ಪೂರೈಸಿತ್ತು. ಸಂದ ಪುರಾತನರೆಲ್ಲರು ಎನ್ನ ಮನದ ಮೈಲಿಗೆಯ ಕಳೆದ ಕಾರಣ, ಕಲಿದೇವರದೇವಯ್ಯಾ, ಇವರೆಲ್ಲರ ಒಕ್ಕಮಿಕ್ಕಪ್ರಸಾದದ ಬಯಲು ಎನಗಾಯಿತ್ತು.
--------------
ಮಡಿವಾಳ ಮಾಚಿದೇವ
ಕಾಷ್ಠವ ಸುವರ್ಣವ ಮಾಡಿದೆನೆಂಬ ಘಾತುಕತನವೆ ನಿಮ್ಮ ಭಕ್ತಿ ? ಸಕಲ ದೇಶ ಕೋಶ ವಾಸ ಭಂಡಾರ ಸವಾಲಕ್ಷ ಮುಂತಾದ ಸಂಬಂಧ, ಸ್ತ್ರೀಯರ ಬಿಟ್ಟು ಬಂದೆನೆಂಬ ಕೈಕೂಲಿಯೆ ನಿಮ್ಮ ಭಕ್ತಿ ? ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಂತಾದ ಏಳುನೂರೆಪ್ಪತ್ತು ಅಮರಗಣಂಗಳ ಭಾವವಿದ್ದಂತೆ ನಿಮ್ಮ ಅಗಡವೇಕಯ್ಯಾ ? ನಿಮ್ಮ ಅರಿವಿಂಗೆ ಇದಿರಿನಲ್ಲಿ ಕೂಡಿಹೆನೆಂಬ ಭಿನ್ನಭಾವವುಂಟೆ ಅಯ್ಯಾ ? ಕರ್ಪೂರದ ಅರಣ್ಯವ ಕಿಚ್ಚುಹತ್ತಿ ಬೆಂದಲ್ಲಿ ಭಸ್ಮ ಇದ್ದಿಲೆಂದು ಲಕ್ಷಿಸಲುಂಟೆ ? ನಿಮ್ಮ ಭಾವವ ನಿಮ್ಮಲ್ಲಿಗೆ ತಿಳಿದುಕೊಳ್ಳಿ. ನಿಮ್ಮ ಕೂಟಕ್ಕೆ ಎನ್ನ ನಾಚಿಕೆಯ ಬಿಡಿಸಿದ ತೆರನ ತಿಳಿದುಕೊಳ್ಳಿ. ಶಕ್ತಿಯ ಮಾತೆಂದು ಧಿಕ್ಕರಿಸಬೇಡಿ. ಹೊರಗೆ ಕೂಡಿಹೆನೆಂಬುದು ನಿಮ್ಮ ಅರಿವಿಂಗೆ ಹಾನಿ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ, ನಿಮ್ಮ ಶರಣರ ನೆಲೆಯ ನೀವೇ ನೋಡಿಕೊಳ್ಳಿ.
--------------
ಮೋಳಿಗೆ ಮಹಾದೇವಿ
ಉದಕವಿಲ್ಲದಿರೆ ಅಂಬುದ್ಥಿ ತಟಾಕಂಗಳೆಂಬ ನಾಮವುಂಟೆ? ಬಣ್ಣ ನಾಸ್ತಿಯಾಗಿರೆ ಬಂಗಾರವೆಂಬ ವಿಶೇಷವುಂಟೆ? ಗಂಧವಿಲ್ಲದಿರೆ ಚಂದನವೆಂಬ ಅಂಗವುಂಟೆ? ನೀನಿಲ್ಲದಿರೆ ನಾನೆಂಬ ಭಾವವುಂಟೆ? ಜಗವೆಲ್ಲ ನಿನ್ನ ಹಾಹೆ, ಉತ್ಪತ್ಯ ಸ್ಥಿತಿ ಲಯವೆಲ್ಲ ನಿನ್ನ ಹಾಯೆ. ಕ್ರೀ, ನಿಃಕ್ರೀಯೆಂಬುದೆಲ್ಲ ನಿನ್ನ ಹಾಹೆ. ಜಗಹಿತಾರ್ಥವಾಗಿ ಭಕ್ತನಾದೆ. ಭಕ್ತಿ ತದರ್ಥವಾಗಿ ಮಾಹೇಶ್ವರನಾದೆ. ಮಾಹೇಶ್ವರ ತದರ್ಥವಾಗಿ ಪ್ರಸಾದಿಯಾದೆ. ಪ್ರಸಾದಿ ತದರ್ಥವಾಗಿ ಪ್ರಾಣಲಿಂಗಿಯಾದೆ. ಪ್ರಾಣಲಿಂಗಿ ತದರ್ಥನಾಗಿ ಶರಣನಾದೆ. ಶರಣ ತದರ್ಥನಾಗಿ ಐಕ್ಯನಾದೆ. ಇಂತೀ ಷಡುಸ್ಥಲಮೂರ್ತಿಯಾಗಿ ಬಂದೆಯಲ್ಲಾ ಸಂಗನಬಸವಣ್ಣ, ಚೆನ್ನಬಸವಣ್ಣ, ನಿಮ್ಮ ಸುಖದುಃಖದ ಪ್ರಮಥರು ಸಹಿತಾಗಿ ಏಳುನೂರೆಪ್ಪತ್ತು ಅಮರಗಣಂಗಳು, ಗಂಗೆವಾಳುಕ ಸಮಾರುದ್ರರು ಮತ್ತೆ ಅವದ್ಥಿಗೊಳಗಲ್ಲದ ಸಕಲ ಪ್ರಮಥರು ಬಂದರಲ್ಲಾ. ಬಂದುದು ಕಂಡು ಎನ್ನ ಸಿರಿ ಉರಿಯೊಳಗಾಯಿತ್ತು. ಎನ್ನ [ಭ]ವದ ಉರಿಯ ಬಿಡಿಸು, [ಭ]ವವಿರಹಿತ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ತಾಳಮರದ ಮೇಲೊಂದು ಹೂಳಿದ್ದ ವಸ್ತುವ ಕಂಡೆ. ಏಳುನೂರೆಪ್ಪತ್ತು ಮನೆಯಲ್ಲಿ ತಾನಾಗಿಪ್ಪುದಯ್ಯ. ಸರ್ವ ಸಂದುಗಳೊಳಗೆ ಅಳವಟ್ಟು ಬೆಳಗುವುದು. ನಟ್ಟ ನಡು ಮಧ್ಯದಲ್ಲಿ ನಂದಾದೀವಿಗೆ ನಂದದ ಬೆಳಗು ಕುಂದದು ನೋಡಿರೇ. ಮೂರಾರು ನೆಲೆಗಳ ಮೀರಿ ಪರಿಪೂರ್ಣವಾಗಿಪ್ಪುದು. ದಶನಾಡಿಗಳೊಳಗೆ ಎಸೆದು ಪಸರಿಸಿಪ್ಪ ಸ್ಫಟಿಕಪ್ರದ್ಯುತ್ ಪ್ರಭಾಮಯವಾಯಿತ್ತಯ್ಯ. ಒಳಗಿಲ್ಲ, ಹೊರಗಿಲ್ಲ, ಎಡನಿಲ್ಲ, ಬಲನಿಲ್ಲ, ಹಿಂದಿಲ್ಲ, ಮುಂದಿಲ್ಲ, ಅಡಿಯಿಲ್ಲ, ಅಂತರವಿಲ್ಲ, ಆಕಾಶವೆಂಬುದು ಮುನ್ನಿಲ್ಲವಯ್ಯ. ಹಿಡಿದರೆ ಹಿಡಿಯಿಲ್ಲ, ಕರೆದರೆ ನುಡಿಯಿಲ್ಲ, ನೋಟಕ್ಕೆ ನಿಲುಕದು. ಇದರಾಟ ಅಗಮ್ಯವಾಗಿಪ್ಪುದು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪಾದೋದಕ ಪ್ರಸಾದಗಳೆಂದೆಂಬಿರಿ, ಪಾದೋದಕ ಪ್ರಸಾದದ ಬಗೆಯ ಪೇಳ್ವೆ. ಗದ್ದುಗೆಯ ಮೇಲೆ ಗದ್ದುಗೆಯ ಹಾಕಿ, ಜಂಗಮಲಿಂಗಿಗಳ ಕರತಂದು ಕುಳ್ಳಿರಿಸಿ, ಧೂಪ ದೀಪ ಪತ್ರಿ ಪುಷ್ಪದಿಂದ ಪಾದಪೂಜೆಯ ಮಾಡಿ, ಕೆರೆ ಬಾವಿ ಹಳ್ಳ ಕೊಳ್ಳ ನದಿ ಮೊದಲಾದವುಗಳ ನೀರ ತಂದು- ಬ್ರಹ್ಮರಂಧ್ರದಲ್ಲಿರುವ ಸತ್ಯೋದಕವೆಂದು ಮನದಲ್ಲಿ ಭಾವಿಸಿ, ಆ ಜಂಗಮದ ಉಭಯಪಾದದ ಮೇಲೆರೆದು, ಪಾದೋದಕವೇ ಪರಮತೀರ್ಥವೆಂದು ಲಿಂಗ ಮುಂತಾಗಿ ಸೇವಿಸಿ, ನವಖಂಡಪೃಥ್ವಿಯಲ್ಲಿ ಬೆಳೆದ ಹದಿನೆಂಟು ಜೀನಸಿನ ಧಾನ್ಯವ ತಂದು, ಉದಕದಲ್ಲಿ ಹೆಸರಿಟ್ಟು, ಅಗ್ನಿಯಲ್ಲಿ ಪಾಕವಮಾಡಿ, ತಂದು ಜಂಗಮಕ್ಕೆ ಎಡೆಮಾಡಿ, ಜಂಗಮವು ತನ್ನ ಲಿಂಗಕ್ಕೆ ಅರ್ಪಿಸಿ ಸೇವಿಸಿದಬಳಿಕ ತಾವು ಪ್ರಸಾದವೇ ಪರಬ್ರಹ್ಮವೆಂದು ಭಾವಿಸಿ, ಕೊಂಡು ಸಲಿಸುವರಯ್ಯ. ಇಂತೀ ಕ್ರಮದಿಂದ ಕೊಂಬುದು ಪಾದೋದಕಪ್ರಸಾದವಲ್ಲ. ಇಂತೀ ಉಭಯದ ಹಂಗು ಹಿಂಗದೆ ಭವಹಿಂಗದು, ಮುಕ್ತಿದೋರದು. ಮತ್ತಂ, ಹಿಂದಕ್ಕೆ ಪೇಳಿದ ಕ್ರಮದಿಂದಾಚರಿಸಿ, ಗುರುಲಿಂಗಜಂಗಮದಲ್ಲಿ ಪಾದೋದಕ ಪ್ರಸಾದವ ಸೇವಿಸಬಲ್ಲವರಿಗೆ ಪ್ರಸಾದಿಗಳೆಂಬೆ. ಇಂತಪ್ಪವರಿಗೆ ಭವ ಹಿಂಗುವದು, ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಈ ಪಾದೋದಕದ ಭೇದವ ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಖ್ಯವಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಜಡಮತಿ ಕಡುಪಾತಕರಾದ ಭಿನ್ನಭಾವ ಜೀವಾತ್ಮರೆತ್ತ ಬಲ್ಲರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನ ಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ, ಭಕ್ತಿಹೀನನ ಬಟ್ಟೆಯಲ್ಲಿ ಕಂಡು ನೆಟ್ಟನೆ ಶಿವಭಕ್ತ ಜೋಹಾರ ಎಂದಡೆ, ಸುರಾಪಾನದಲ್ಲಿ ಮಜ್ಜನಮಾಡಿದಂತಾಯಿತ್ತು ಅವನ ಶಿವಪೂಜೆ? ಕಟ್ಟಿದ ಕೆರೆಯನೊಡೆದಂತಾಯಿತ್ತು ಅವನ ಶಿವಪೂಜೆ. ಅಮೇಧ್ಯವ ಭುಂಜಿಸಿದಂತಾಯಿತ್ತು ಅವನ ಶಿವಪೂಜೆ. ಹೇಲೊಳಗಣ ಹುಳವ ಕೋಳಿ ಕೆದರಿದಂತಾಯಿತ್ತು ಅವನ ಶಿವಪೂಜೆ. ಒಣಗಿದೆಲುವ ಸೊಣಗ ಕಡಿದು ತನ್ನ ರಕ್ತವ ತಾನೇ ಭುಂಜಿಸಿದಂತಾಯಿತ್ತು ಅವನ ಶಿವಪೂಜೆ. ಅವನ ಸರ್ವಾಂಗವು ಪಾಕುಳದ ಕುಳಿಯಂತಾಯಿತ್ತು. ಕನ್ನಡಿಯ ಮೇಲೆ ಉದ್ದುರುಳಿದಂತಾಯಿತ್ತು ಅವನ ಶಿವಪೂಜೆ. ಅರೆಯ ಮೇಲೆ ಆಡು ಹಿಕ್ಕೆಯನಿಟ್ಟಂತಾಯಿತ್ತು ಅವನ ಶಿವಪೂಜೆ. ಲೋಳಸರದ ಮೇಲೆ ಬಂಡಿ ಹರಿದಂತಾಯಿತ್ತು ಅವನ ಶಿವಪೂಜೆ. ಅದೆಂತೆಂದಡೆ:ವಿಷ್ಣು ಪುರಾಣೇ, ಬ್ರಹ್ಮಬೀಜಂ ತೃಣಂ ನಾಸ್ತಿ ಕೇಶವಶ್ಚಾಧಿದೇವತಾ ಗುರುಭ್ರಷ್ಟಶ್ಚ ಚಾಂಡಾಲೋ ವಿಪ್ರಃ ಶ್ವಾನೋ ಹಿ ಜಾಯತೇ ವಿಪ್ರಸ್ಯ ದರ್ಶನಂ ಚೈವ ಪಾಪಪಂಜರಮೇವ ಚ ವಿಪ್ರಸ್ಯ ವಂದನಂ ಚೈವ ಕೋಟಿಜನ್ಮಸು ಸೂಕರಃ ಎಂದುದಾಗಿ ರೇಣುಕಾದೇವಿಯ ಮಗನೇ ಬ್ರಾಹ್ಮಣನು, ಮಾತಂಗಿಯ ಮಗನೇ ಹೊಲೆಯನು, ಇವರಿಬ್ಬರೂ ಜಮದಗ್ನಿಗೆ ಹುಟ್ಟಿದರಾಗಿ, ಇದಕ್ಕೆ ಸಾಕ್ಷಿ, ಭಾರದ್ವಾಜ ವಿಶ್ವಾಮಿತ್ರ ಅಗಸ್ತ್ಯ ನಾರದ ಕೌಂಡಿಲ್ಯ ಈಯೈವರು ಸಾಕ್ಷಿಯಲ್ಲಿ, ನಿಮ್ಮ ನಿಮ್ಮೊಳಗೆ ಸಂವಾದವು ಬೇಡೆಂದು ವಿಭಾಗವಂ ಮಾಡಿಕೊಟ್ಟ ವಿವರಮಂ ಕೇಳಿರಣ್ಣಾ ಗ್ರಾಮದೊಳಗಣ ಸೀಮೆಯ ಗೃಹವನೇ ಹೊಲೆಯರಿಗೆ ಕೊಟ್ಟರು, ಸತ್ತ ಹಸುವನೆಳೆದುಕೊಂಡು ಹೋಹವರನೇ ಹೊಲೆಯರ ಮಾಡಿದರು. ಜೀವದ ಹಸುವ ಹದಿನೆಂಟು ಜಾತಿಯ ಮಂಚದಡಿಯಲ್ಲಿ ನುಸಿದು ಗೋದಾನಮುಖದಲ್ಲಿ ಕೊಂಡು ಹೋಹರನೇ ಬ್ರಾಹ್ಮಣರ ಮಾಡಿದರು. ಇನ್ನು ನಿಮಗೂ ತಮಗೂ ಸೊಮ್ಮು ಸಂಬಂಧವಿಲ್ಲವೆಂದು ಕಂಡಾಗ ತೊಲಗುವಂತೆ ಸಂಬೋಳಿಯೆಂಬ ನಾಮಾಂಕಿತವಂ ಕೊಟ್ಟು ತೊರೆ ಪತ್ರಮಂ ಬರೆದರಾಗಿ. ಇದನರಿಯದಿದ್ದಡೆ ಇನ್ನೂ ಕೇಳಿರಣ್ಣ: ನಳಚಕ್ರವರ್ತಿರಾಯನು ಪಿಂಡ ಪಿತೃಕಾರ್ಯವ ಮಾಡುವಲ್ಲಿ, ಹೊನ್ನ ಗೋವಂ ತಂದು ಬಿನ್ನಾಣದಲ್ಲಿ ದಾನವ ಕೊಟ್ಟಲ್ಲಿ, ಹೊಲೆಯರು ನಾಡಕೂಟವ ಕೂಡಿ ಆ ಸ್ಥಲ ತಾರ್ಕಣೆಯಲ್ಲಿ ಪೂರ್ವಸಾಧನ ಸಂಬಂಧದಿಂದ ನ್ಯಾಯವನಾಡಿ ಇತ್ತಂಡವ ಹಂಚಿಕೊಂಡ ವಿವರವ ಕೇಳಿರಣ್ಣಾ: ಕೊಂಬುಕೊಳಗನೇ ತೆಗೆದು ಏಳುನೂರೆಪ್ಪತ್ತು ತೂಕ ಚಿನ್ನವ ಹಂಚಿಕೊಂಡು ಉಳಿದ ಕೊಂಬು ಕೊಳಗವ ವಿಪ್ರರು ಎತ್ತಿಕೊಂಡರಾಗಿ, ಈ ಹೊನ್ನಗೋವನಳಿದು ತಿಂಬ ಕುನ್ನಿಗಳ ಕಂಡು ಕೇಳಿಯೂ ಅರಿದು ಮರೆದೂ ಉತ್ತಮಕುಲದ್ವಿಜರೆಂದು ಅಲ್ಲಿ ಉಪದೇಶವಂ ಕೊಂಡು ನಮಸ್ಕರಿಸುವ ಅಜ್ಞಾನಿ ಹೊಲೆಯರ ನಾನೇನೆಂಬೆನಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಬಸವಣ್ಣನ ಪ್ರಸಾದವಕೊಂಡು ಎನ್ನ ಕಾಯ ಶುದ್ಧವಾಯಿತ್ತಯ್ಯಾ. ಚೆನ್ನಬಸವಣ್ಣನ ಪ್ರಸಾದವಕೊಂಡು ಎನ್ನ ಜೀವ ಶುದ್ಧವಾಯಿತ್ತಯ್ಯಾ. ಮಡಿವಾಳಯ್ಯನ ಪ್ರಸಾದವಕೊಂಡು ಎನ್ನ ಭಾವ ಶುದ್ಧವಾಯಿತ್ತಯ್ಯಾ. ಶಂಕರದಾಸಿಮಯ್ಯನ ಪ್ರಸಾದವಕೊಂಡು ಎನ್ನ ತನು ಶುದ್ಧವಾಯಿತ್ತಯ್ಯಾ. ಸಿದ್ಧರಾಮಯ್ಯನ ಪ್ರಸಾದವಕೊಂಡು ಎನ್ನ ಮನ ಶುದ್ಧವಾಯಿತ್ತಯ್ಯಾ. ಘಟ್ಟಿವಾಳಯ್ಯನ ಪ್ರಸಾದವಕೊಂಡು ಎನ್ನ ಪ್ರಾಣ ಶುದ್ಧವಾಯಿತ್ತಯ್ಯಾ. ಅಕ್ಕನಾಗಾಯಮ್ಮನ ಪ್ರಸಾದವಕೊಂಡು ಎನ್ನ ಅಂತರಂಗ ಶುದ್ಧವಾಯಿತ್ತಯ್ಯಾ. ಮುಕ್ತಾಯಕ್ಕಗಳ ಪ್ರಸಾದವಕೊಂಡು ಎನ್ನ ಬಹಿರಂಗ ಶುದ್ಧವಾಯಿತ್ತಯ್ಯಾ. ಪ್ರಭುದೇವರ ಪ್ರಸಾದವಕೊಂಡು ಎನ್ನ ಸರ್ವಾಂಗ ಶುದ್ಧವಾಯಿತ್ತಯ್ಯಾ. ಇವರು ಮುಖ್ಯವಾದ ಏಳುನೂರೆಪ್ಪತ್ತು ಅಮರಗಣಂಗಳ ಪ್ರಸಾದವಕೊಂಡು ಬದುಕಿದೆನಯ್ಯಾ ಮಾರೇಶ್ವರಪ್ರಿಯ ಅಮಲೇಶ್ವರಾ, ನಿಮ್ಮ ಶರಣರ ಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋ ಎನುತಿರ್ದೆನು.
--------------
ಆಯ್ದಕ್ಕಿ ಲಕ್ಕಮ್ಮ
ಗೊಲ್ಲನ ಕೊಳಲಧ್ವನಿ ಕೇಳಿ ಹಂದಿ ನಾಯಿ ಎಮ್ಮೆ ಕೋಣ ಸರಳ ಕೊಂಬಿನಪಶುಗಳು ಸಾಯದೇ ಇರ್ಪವು. ಕೊಂಬಿಲ್ಲದ ಪಶುವು ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮೊದಲಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಸತ್ತಿರ್ಪರು. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಮ್ಮ ಪುರಾತನರ ವಚನಂಗಳನೆಲ್ಲ ಓದದೆ ಇದ್ದಾರು, ಓದಿಯೂ ನಂಬಿಗೆ ಇಲ್ಲದೆ ಇದ್ದಾರು, ನೂರಕ್ಕೊಬ್ಬರಲ್ಲದೆ ನಂಬರು, ನಮ್ಮ ಆದ್ಯರ ವಚನಂಗಳ ಜರೆದಾರು, ತಮ್ಮ ಕವಿತ್ವವ ಮೆರೆದಾರು, ನಮ್ಮ ಆದ್ಯರ ವಚನಂಗಳಿಂದೊದವಿದ ಜ್ಞಾನವೆಂಬುದನರಿಯರು. ತಾಯಿಯಿಂದ ಮಕ್ಕಳಾದರೆಂಬುದನರಿಯರು. ಊರೆಲ್ಲಕ್ಕೆ ಹುಟ್ಟಿದ ಹಾಗೆ ನುಡಿದಾರು ನಮ್ಮ ಪುರಾತನರ ವಚನವೆ ತಾಯಿ ತಂದೆ ಎಂದರಿಯರು. ನಮ್ಮ ಆದ್ಯರ ವಚನ ಜ್ಞಾನದ ನೆಲೆಯ ತೆಗೆದಿರಿಸಿತ್ತು ನಮ್ಮ ಆದ್ಯರ ವಚನ ಮದ ಮಾತ್ಸರ್ಯಾದಿ ಅರಿಷಡ್ವರ್ಗ ಸಪ್ತವ್ಯಸನ ಪಂಚೇಂದ್ರಿಯ ದಶವಾಯುಗಳಿಚ್ಛೆಗೆ ಹರಿವ ಮನವ ಸ್ವಸ್ಥವಾಗಿ ನಿಲಿಸಿತ್ತು ನಮ್ಮ ಆದ್ಯರ ವಚನ ಅಂಗೇಂದ್ರಿಯಂಗಳ ಲಿಂಗೇಂದ್ರಿಯಂಗಳೆನಿಸಿತ್ತು. ನಮ್ಮ ಆದ್ಯರ ವಚನ ನೂರೊಂದುಸ್ಥಲವ ಮೀರಿದ ಮಹದಲ್ಲಿ ನೆಲಸಿತ್ತು. ನಮ್ಮ ಆದ್ಯರ ವಚನ ಇನ್ನೂರಹದಿನಾರು ಲಿಂಗಕ್ಕೆ ಸರ್ವೇಂದ್ರಿಯವ ಸನ್ಮತವ ಮಾಡಿ, ಸಾಕಾರವ ಸವೆದು ನಿರಾಕಾರವನರಿದು ನಿರವಯಲ ನಿತ್ಯಸುಖದಲ್ಲಿರಿಸಿತ್ತು. ಇಂತಪ್ಪ ಆದ್ಯರ ವಚನಭಂಡಾರವ, ನಮ್ಮ ಪ್ರಭುದೇವರು ಮುಖ್ಯವಾದ ಏಳುನೂರೆಪ್ಪತ್ತು ಅಮರಗಣಂಗಳು ಅಂಖ್ಯಾತ ಪುರಾತನರು, ಪ್ರಮಥಗಣಂಗಳು ಕೇಳಿ ಹೇಳಿ ಕೊಂಡಾಡಿದ ಕಾರಣ ನಮ್ಮ ಕೂಡಲಚೆನ್ನಸಂಗಯ್ಯನಲ್ಲಿ ಸರ್ವಸುಖವ ಸೂರೆಗೊಂಡು ಸ್ವಯಲಿಂಗವಾದರು
--------------
ಚನ್ನಬಸವಣ್ಣ
ಬಸವಣ್ಣನೆನ್ನ ಅಂಗ, ಮಡಿವಾಳನೆನ್ನ ಮನ, ಪ್ರಭುವೆನ್ನ ಪ್ರಾಣ, ಚನ್ನಬಸವನೆನ್ನ ಕರಸ್ಥಲದ ಲಿಂಗ, ಘಟ್ಟಿವಾಳನೆನ್ನ ಭಾವ, ಸೊಡ್ಡಳಬಾಚರಸರೆನ್ನ ಅರಿವು, ಮಹಾದೇವಿಯಕ್ಕನೆನ್ನ ಜ್ಞಾನ, ಮುಕ್ತಾಯಕ್ಕನೆನ್ನ ಅಕ್ಕರು, ಸತ್ಯಕ್ಕನೆನ್ನ ಯುಕ್ತಿ, ನಿಂಬಿಯಕ್ಕನೆನ್ನ ನಿಶ್ಚಯ, ಅಲ್ಲಾಳಿಯಕ್ಕನೆನ್ನ ಸಮತೆ, ಅನುಮಿಷನೆನ್ನ ನಿಶ್ಚಲ, ನಿಜಗುಣನೆನ್ನ ಕ್ಷಮೆ, ರೇವಣಸಿದ್ಧಯ್ಯದೇವರೆನ್ನ ನೇತ್ರ, ಸಿದ್ಧರಾಮತಂದೆಗಳೆನ್ನ ನೇತ್ರದ ದೃಕ್ಕು, ಮರುಳುಸಿದ್ಧಯ್ಯದೇವರೆನ್ನ ಶ್ರೋತೃ, ಪಂಡಿತಾರಾಧ್ಯರೆನ್ನ ಜಿಹ್ವೆ, ಏಕೋರಾಮಯ್ಯಗಳೆನ್ನ ನಾಸಿಕ, ಅಸಂಖ್ಯಾತರೆನ್ನ ಅವಯವಂಗಳು, ಪುರಾತರೆನ್ನ ಪುಣ್ಯದ ಪುಂಜ, ಏಳುನೂರೆಪ್ಪತ್ತು ಅಮರಗಣಂಗಳೆನ್ನ ಗತಿಮತಿ ಚೈತನ್ಯ, ಸೌರಾಷ್ಟ್ರ ಸೋಮೇಶ್ವರಾ, ಆ ನಿಮ್ಮ ಶರಣರ ಪಡಿದೊತ್ತಯ್ಯಾ.
--------------
ಆದಯ್ಯ
ಎಮ್ಮ ಶಿವಶರಣರ ಪ್ರಸಾದವಿವರ ಎಂತೆಂದಡೆ : ಶುದ್ಧಪ್ರಸಾದಸ್ವರೂಪವಾದ ಸದ್ರೂಪಾಚಾರ್ಯನನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿ ಆ ಗುರುವಿನಲ್ಲಿ ನಷ್ಟವಾದುದೆ ಅಚ್ಚಪ್ರಸಾದ. ಸಿದ್ಧಪ್ರಸಾದಸ್ವರೂಪವಾದ ಚಿದ್ರೂಪಲಿಂಗವನು ಮನದಲ್ಲಿ ಸ್ವಾಯತವ ಮಾಡಿ, ಆ ಮನೋಪ್ರಕೃತಿ ಆ ಲಿಂಗದಲ್ಲಿ ನಷ್ಟವಾದುದೆ ನಿಚ್ಚಪ್ರಸಾದ. ಸಿದ್ಧಪ್ರಸಾದಸ್ವರೂಪವಾದ ಪರಮಾನಂದ ಜಂಗಮವನು ಆತ್ಮದಲ್ಲಿ ಸ್ವಾಯತವ ಮಾಡಿ, ಆತ್ಮಪ್ರಕೃತಿ ಆ ಜಂಗಮದಲ್ಲಿ ನಷ್ಟವಾದುದೇ ಸಮಯಪ್ರಸಾದ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದತ್ರಯದ ಏಕಸ್ವರೂಪವಾದ ಮಹಾಪ್ರಸಾದ, ಅಂತಪ್ಪ ಮಹಾಪ್ರಸಾದಸ್ವರೂಪವಾದ ಘನಮಹಾಲಿಂಗವು. ಆ ಘನ ಮಹಾಲಿಂಗವನು ಅಪಾದ ಮಸ್ತಕ ಪರಿಯಂತರವಾಗಿ, ಸರ್ವಾಂಗದಲ್ಲಿ ಸ್ವಾಯತವ ಮಾಡಿ ಆ ಲಿಂಗಪ್ರಕಾಶದಲ್ಲಿ ಸರ್ವಾಂಗದ ಪ್ರಕೃತಿ ನಷ್ಟವಾಗಿ, ಅಂತಪ್ಪ ಘನಮಹಾಲಿಂಗದೇಕಸ್ವರೂಪ ತಾನಾದುದೇ ಏಕಪ್ರಾಸದ. ಇಂತೀ ನಾಲ್ಕುತರದ ಪ್ರಸಾದವ ಕೊಂಡವರು ಆರೆಂದಡೆ : ಹಿಂದಕ್ಕೆ ಕಲ್ಯಾಣಪುರದಲ್ಲಿ ಬಸವಾದಿ ಪ್ರಭುದೇವರಾಂತ್ಯಮಾದ ಏಳುನೂರೆಪ್ಪತ್ತು ಪ್ರಮಥಗಣಂಗಳು, ಇನ್ನು ಮುಂದೆ ಶಿವಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಂಬಂಧಿಗಳಾದ ಶಿವಶರಣರಿಗೆ ಇದೇ ಪ್ರಸಾದವು ನೋಡೆಂದನಯ್ಯಾ ನಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಏಳುನೂರೆಪ್ಪತ್ತು ಅಮರಗಣಂಗಳಿಗೆಲ್ಲಕ್ಕೂ ತಮ್ಮ ತಮ್ಮ ಭಾವದಶೀಲ. ಗಂಗೆವಾಳುಕ ಸಮಾರುದ್ರರೆಲ್ಲಕ್ಕೂ ತಮ್ಮ ತಮ್ಮ ಮನಕ್ಕೆ ಸಂದ ಸಂದ ನೇಮ. ಮರ್ತ್ಯಕ್ಕೆ ಬಂದ ಪ್ರಮಥರೆಲ್ಲರೂ ತಾವು ಬಂದುದನರಿದು ಮುಂದಿನ ಪಯಣಕ್ಕೆ ಎಂದೆಂಬುದ ಕಂಡು, ಬಸವಣ್ಣನ ಮಣಿಹ ಎಂದಿಂಗೆ ಸಲೆ ಸಂದು ನಿಂದಿಹ ವೇಳೆಯನರಿವನ್ನಕ್ಕ ತಾವು ಕೊಂಡ ವ್ರತದಲ್ಲಿ ಭಯ ಭಂಗವಿಲ್ಲದೆ ನಿಂದಿರಬೇಕು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದೊಳಗಹನ್ನಕ್ಕ.
--------------
ಅಕ್ಕಮ್ಮ
ಎನ್ನ ಮನವೆ ಬಸವಣ್ಣನು. ಎನ್ನ ಬುದ್ಧಿಯೆ ಚನ್ನಬಸವಣ್ಣನು. ಎನ್ನ ಚಿತ್ತವೆ ಸಿದ್ಧರಾಮಯ್ಯನು. ಎನ್ನ ಅಹಂಕಾರವೆ ಮಡಿವಾಳಯ್ಯನು. ಎನ್ನ ಕ್ಷಮೆಯೆ ನಿಜಗುಣದೇವರು. ಎನ್ನ ದಮೆಯೆ ಘಟ್ಟಿವಾಳಯ್ಯನು. ಎನ್ನ ಶಾಂತಿಯೆ ಅಜಗಣ್ಣನು. ಎನ್ನ ಸೈರಣೆಯೆ ಪ್ರಭುದೇವರು. ಎನ್ನ ಹರುಷವೆ ಏಳುನೂರೆಪ್ಪತ್ತು ಅಮರಗಣಂಗಳು. ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ, ಕಾಲಾಂತಕ ಭೀಮೇಶ್ವರಲಿಂಗವೆ.
--------------
ಡಕ್ಕೆಯ ಬೊಮ್ಮಣ್ಣ
ಶರಣರ ನಿಲುಕಡೆ ದಾರುಬಲ್ಲರಯ್ಯ ? ಶರಣರ ನಿಲವ ಉರಿಲಿಂಗಪೆದ್ದಯ್ಯಗಳು, ನುಲಿಯ ಚಂದಯ್ಯಗಳು, ಹಡಪದ ಅಪ್ಪಣ್ಣಗಳು, ಮ್ಯಾದಾರ ಕೇತಯ್ಯಗಳು, ಗಜೇಶ ಮಸಣಯ್ಯಗಳು, ಬಸವಣ್ಣ, ಚೆನ್ನಬಸವಣ್ಣ, ಪ್ರಭುದೇವರು ಮೊದಲಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಭವಭಾರಿಗಳಾದ ವೇದಾಂತಿ, ಸಿದ್ಧಾಂತಿ, ಯೋಗಮಾರ್ಗಿಗಳು ಮೊದಲಾದ ಭಿನ್ನಭಾವ ಜೀವಾತ್ಮರೆತ್ತ ಬಲ್ಲರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ ?
--------------
ಕಾಡಸಿದ್ಧೇಶ್ವರ
ಮಾಯಾಕೋಳಾಹಳನೆಂಬ ಬಿರುದ ಸೂರೆಗೊಂಡರು ಪ್ರಭುದೇವರು. ಯೋಗಾಂಗವ ಸೂರೆಗೊಂಡರು ಸಿದ್ಧರಾಮೇಶ್ವರದೇವರು. ಭಕ್ತಿಸ್ಥಲವ ಸೂರೆಗೊಂಡು, ನಿತ್ಯಪವಾಡವ ಗೆದ್ದರು ಬಸವೇಶ್ವರದೇವರು. ಷಟ್‍ಸ್ಥಲವ ಸೂರೆಗೊಂಡರು ಚನ್ನಬಸವೇಶ್ವರದೇವರು. ಐಕ್ಯಸ್ಥಲವ ಸೂರೆಗೊಂಡರು ಅಜಗಣ್ಣದೇವರು. ಶರಣಸತಿ ಲಿಂಗಪತಿಯಾದರು ಉರಿಲಿಂಗದೇವರು. ಪ್ರಸಾದಿಸ್ಥಲವ ಸೂರೆಗೊಂಡರು ಬಿಬ್ಬಿ ಬಾಚಯ್ಯಂಗಳು, ಜ್ಞಾನವ ಸೂರೆಗೊಂಡರು ಚಂದಿಮರಸರು. ನಿರ್ವಾಣವ ಸೂರೆಗೊಂಡರು ನಿಜಗುಣದೇವರು. ಪ್ರಸಾದಕ್ಕೆ ಸತಿಯಾದರು ಅಕ್ಕನಾಗಮ್ಮನವರು. ಉಟ್ಟುದ ತೊರೆದು ಬಟ್ಟಬಯಲಾದರು ಮೋಳಿಗಯ್ಯನ ರಾಣಿಯರು. ಪರಮ ದಾಸೋಹವ ಮಾಡಿ, ಲಿಂಗದಲ್ಲಿ ನಿರವಲಯನೈದಿದರು ನೀಲಲೋಚನೆಯಮ್ಮನವರು. ಪರಮವೈರಾಗ್ಯದಿಂದ ಕಾಮನ ಸುಟ್ಟ ಭಸ್ಮವ ಗುಹ್ಯದಲ್ಲಿ ತೋರಿಸಿ ಮೆರೆದರು ಮಹಾದೇವಿಯಕ್ಕಗಳು. ಗಂಡ ಸಹಿತ ಲಿಂಗದಲ್ಲಿ ಐಕ್ಯವಾದರು ತಂಗಟೂರ ಮಾರಯ್ಯನ ರಾಣಿಯರು. ಇಂತಿವರು ಮುಖ್ಯವಾದ ಏಳುನೂರೆಪ್ಪತ್ತು ಅಮರ ಗಣಂಗಳ ಶ್ರೀಪಾದವ ಅಹೋರಾತ್ರಿಯಲ್ಲಿ ನೆನೆನೆದು ಬದುಕಿದೆನಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಇನ್ನಷ್ಟು ... -->