ಅಥವಾ

ಒಟ್ಟು 111 ಕಡೆಗಳಲ್ಲಿ , 39 ವಚನಕಾರರು , 100 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಕೊರಡು ಕೊನರಾಗಬಲ್ಲುದೇ? ಬರಡು ಹಯನಾಗಬಲ್ಲುದೇ ಅಯ್ಯಾ? ಕುರುಡಗೆ ಕನ್ನಡಿಯ ತೋರಿದಡೆ ನೋಡಬಲ್ಲನೆ? ಮೂಗಗೆ ರಾಗವ ಹೇಳಿದರೆ ಹಾಡಬಲ್ಲನೆ ಅಯ್ಯ? ಹೇಗ ಬುದ್ಧಿಯ ಬಲ್ಲನೇ ಅಯ್ಯ? ಲೋಗರಿಗೆ ಉಪದೇಶವ ಹೇಳಿದರೆ ಶಿವಸತ್ಪಥದ ಹಾದಿಯ ಬಲ್ಲರೇ ಅಯ್ಯ?. ಇದು ಕಾರಣ, ಶಿವ ಸತ್ಪಥದ ಆಗೆಂಬುದು ಶಿವಜ್ಞಾನಸಂಪನ್ನಂಗಲ್ಲದೆ ಸಾಧ್ಯವಲ್ಲ ಕಾಣ. ಅಸಾಧ್ಯವಸ್ತುವಿನೊಳಗಣ ಐಕ್ಯ ಅವಿವೇಕಗಳಿಗೆ ಅಳವಡುವುದೇ ನಮ್ಮವರಿಗಲ್ಲದೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಜ್ಞಾನದುದಯವೇ ಭಕ್ತ, ಜ್ಞಾನದ ಶೂನ್ಯವೇ ಐಕ್ಯ. ಇಂತೀ ಜ್ಞಾನದಾದ್ಯಂತವನರಿವರಿವೆ ಸರ್ವಜ್ಞನಾದ ಈಶ್ವರ ನೋಡಾ. ಅದೆಂತೆಂದಡೆ: ``ಚಿದೋದಯಶ್ಚ ಸದ್ಭಕ್ತೋ ಚಿತ್ಯೂನ್ಯಂಚೈಕ್ಯಮೇವ ಚ ಉಭಯೋರೈಕ್ಯ ವಿಜ್ಞೇಯಾತ್ಸರ್ವಜ್ಞಮೀಶ್ವರಃ'' (?) ಎಂದುದಾಗಿ ಇಂತೀ ಷಟ್ಸ್ಥಲದೊಳಗಾದ್ಯಂತವಡಗಿಹ ಭೇದವ ನೀ ನಲ್ಲದನ್ಯರೆತ್ತ ಬಲ್ಲರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ರಸ ಗಂಧ ರೂಪು ಶಬ್ದ ಸ್ಪರ್ಶ ಪಂಚೇಂದ್ರಿಯಂಗಳಲ್ಲಿ ಅರ್ಪಿಸುವನ್ನಕ್ಕ ಭಕ್ತ. ರೂಪು ರುಚಿಯ ಕಂಡರ್ಪಿಸುವನ್ನಕ್ಕ ಮಾಹೇಶ್ವರ. ಇಚ್ಫೆಯನರಿತು ಸಾಕು ಬೇಕೆಂಬನ್ನಕ್ಕ ಪ್ರಸಾದಿ. ಕಂಡಲ್ಲಿ ಮುಟ್ಟದೆ ಕಾಣಿಸಿಕೊಂಡು ಮುಟ್ಟಿಹೆನೆಂಬಲ್ಲಿ ಪ್ರಾಣಲಿಂಗಿ. ವಂದನೆ ನಿಂದೆಗೆ ಒಳಗಹನ್ನಕ್ಕ ಶರಣ. ಮುಟ್ಟುವ ತಟ್ಟುವ ತಾಗುವ ಸೋಂಕುವ ಸುಖವನರಿದು ಕೂಡಬೇಕೆಂಬನ್ನಕ್ಕ ಐಕ್ಯ. ಆ ಗುಣ ಪರುಷವ ಸೋಂಕಿದ ಲೋಹದಂತಾದುದು ಷಟ್‍ಸ್ಥಲ. ಇಂತೀ ಆರನವಗವಿಸಿ ಬೇರೊಂದು ತೋರದಿಪ್ಪುದು ಐಕ್ಯಸ್ಥಲಲೇಪಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಭಕ್ತ ಮಾಹೇಶ್ವರ ಪ್ರಸಾದಿ ಈ ತ್ರಿವಿಧವು ಒಂದೇ ಕೋಡಿನಲ್ಲಿ ಅಡಗಿತ್ತು. ಪ್ರಾಣಲಿಂಗ ಶರಣ ಐಕ್ಯ ಈ ತ್ರಿವಿಧವು ಒಂದೇ ಕೋಡಿನಲ್ಲಿ ಅಡಗಿತ್ತು. ಇಂತೀ ಉಭಯದ ಕೋಡ ಹಿಡಿದು ಪಶ್ಚಿಮ ದ್ವಾರವ ಮುಚ್ಚಿ ನಿಂದು ಉತ್ತರ ದ್ವಾರದಲ್ಲಿ ಎಡತಾಕುವ ನಿಶ್ಚಿಂತರ ಮುಚ್ಚಿಸಿ ಸಚ್ಚಿದಾನಂದದಿ ನಲಿದೊಲಿದು ಕಲೆ ವಿದ್ಯವನೊಪ್ಪಿಸ ಬಂದೆ. ಉಲುಹಿನ ಗಿಲಿಕೆಯ ಕೊಂಬಿನಲ್ಲಿ ಸುಳುಹಿನ ಸೂಕ್ಷ್ಮದ ಕಳೆಯ ಬೆಳಗಿನಲ್ಲಿ ಅಕ್ಕನ ಗಂಡ ಭಾವಂದಿರ ಧಿಕ್ಕರಿಸ ಬಂದೆ. ಮೇಖಲೇಶ್ವರಲಿಂಗವನರಿಯ ಹೇಳಿ.
--------------
ಕಲಕೇತಯ್ಯ
ಅಯ್ಯಾ, ಚಿದಂಗ ಚಿದ್ಘನಲಿಂಗ ಶಕ್ತಿ ಭಕ್ತಿ ಹಸ್ತ ಮುಖ ಪದಾರ್ಥ ಪ್ರಸಾದ ಎಂಬಿವಾದಿಯಾದ ಸಮಸ್ತ ಸಕೀಲಂಗಳ ನೆಲೆ ಕಲೆಯರಿಯದೆ, ಜಿಹ್ವಾಲಂಪಟಕ್ಕೆ ಆಹ್ವಾನಿಸಿ, ಗುಹ್ಯಾಲಂಪಟಕ್ಕೆ ವಿಸರ್ಜಿಸಿ, ಸಕಲೇಂದ್ರಿಯಮುಖದಲ್ಲಿ ಮೋಹಿಯಾಗಿ, ಸದ್ಗುರುಕರುಣಾಮೃತರಸ ತಾನೆಂದರಿಯದೆ ಬರಿದೆ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಗುರುಚರಪರವೆಂದು ಬೊಗಳುವ ಕುನ್ನಿಗಳ ನೋಡಿ ಎನ್ನ ಮನ ಬೆರಗು ನಿಬ್ಬೆರಗು ಆಯಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಪೃಥ್ವಿ ಅಂಗ, ಚಿತ್ತ ಹಸ್ತ, ನಾಸಿಕ ಮುಖ, ಗಂಧ ಪದಾರ್ಥ, ಆಚಾರಲಿಂಗಕರ್ಪಿತ ಭಕ್ತ. ಅಪ್ಪು ಅಂಗ, ಬುದ್ದಿ ಹಸ್ತ, ಜಿಹ್ವೆ ಮುಖ, ರುಚಿ ಪದಾರ್ಥ, ಗುರುಲಿಂಗಕರ್ಪಿತ ಮಹೇಶ್ವರ. ಅನಿಲ ಅಂಗ, ನಿರಹಂಕಾರ ಹಸ್ತ, ನೇತ್ರ ಮುಖ, ರೂಪು ಪದಾರ್ಥ, ಶಿವಲಿಂಗಕರ್ಪಿತ ಪ್ರಸಾದಿ. ಪವನ ಅಂಗ, ಮನ ಹಸ್ತ, ತ್ವಕ್ಕು ಮುಖ, ಸ್ಪರ್ಶ ಪದಾರ್ಥ, ಜಂಗಮಲಿಂಗಕರ್ಪಿತ ಪ್ರಾಣಲಿಂಗಿ. ವ್ಯೋಮ ಅಂಗ, ಜ್ಞಾನ ಹಸ್ತ, ಶ್ರೋತ್ರ ಮುಖ, ಶಬ್ದ ಪದಾರ್ಥ, ಪ್ರಸಾದಲಿಂಗಕರ್ಪಿತ ಶರಣ. ಹೃದಯ ಅಂಗ, ಭಾವ ಹಸ್ತ, ಅರ್ಥ ಮುಖ, ಪರಿಣಾಮ ಪದಾರ್ಥ, ಮಹಾಲಿಂಗಕರ್ಪಿತ ಐಕ್ಯ. ಇಂತೀ ಷಟ್‍ಸ್ಥಲವಳವಟ್ಟಾತನು ಪರಶಕ್ತಿಸ್ವರೂಪನು, ಆತನು ನಿಜಶಿವಯೋಗಸಂಪನ್ನನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಜಪವೆಂಬುದು ಪಾಪಕ್ಕೆ ಬಹು ತಾಪ ನೋಡಯ್ಯಾ. ಜಪವೆಂಬುದು ಪುಣ್ಯದ ನಾಣ್ಯ ನೋಡಯ್ಯಾ. ಜಪವೆಂಬುದು ಚೆನ್ನಬಸವಣ್ಣನ ಪಾದದಲ್ಲಿಯೆ ಐಕ್ಯ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಇನ್ನೊಂದು ಪ್ರಕಾರದ ಅಂಗಸ್ಥಲವೆಂತೆಂದಡೆ : ಐಕ್ಯ ಶರಣಸ್ಥಲವೆರಡು ಯೋಗಾಂಗ. ಪ್ರಾಣಲಿಂಗಿ ಪ್ರಸಾದಿಸ್ಥಲವೆರಡು ಭೋಗಾಂಗ. ಮಾಹೇಶ್ವರ ಭಕ್ತಸ್ಥಲವೆರಡು ತ್ಯಾಗಾಂಗ. ಇದಕ್ಕೆ ಈಶ್ವರ್ದೋವಾಚ : ``ಯೋಗಾಂಗಮೈಕ್ಯಂ ಶರಣಂ ಸ್ಥಲಮಿತ್ಯುಭಯಂ ಭವೇತ್ | ಪ್ರಾಣಲಿಂಗಂ ಪ್ರಸಾದೀತಿ ದ್ವಯಂ ಭೋಗಾಂಗಮಿಷ್ಯತೇ || ಮಾಹೇಶ್ವರಸ್ಥಲಂ ಭಕ್ತಸ್ಥಲಮಿತ್ಯುಭಯಸ್ತಥಾ | ತ್ಯಾಗಾಂಗಂ ಭವೇನ್ನಿತ್ಯಂ ಪ್ರೋಚ್ಯತೇ ಪಾರಮಾರ್ಥಿಕೈಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಗುರುವೆಂಬ ಗೂಳಿ ಮುಟ್ಟಲು, ಶಿಷ್ಯನೆಂಬ ಮಣಿಕ ತೆನೆಯಾಯಿತ್ತು. ಲಿಂಗವೆಂಬ ಕಿಳುಗರು, ತನುವೆ ಕೆಚ್ಚಲು, ಮನವೆ ಮೊಲೆವಾಲು. ಅರಿದಲ್ಲಿ ಐಕ್ಯ, ಮರೆದಲ್ಲಿ ಸಾಹಿತ್ಯ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಅನಾಚಾರಿಗಲ್ಲದೆ ಪ್ರಸಾದವಿಲ
--------------
ಚನ್ನಬಸವಣ್ಣ
ವಿಶ್ವಾಸದಿಂದ ಭಕ್ತ, ವಿಶ್ವಾಸದಿಂದ ಮಾಹೇಶ್ವರ, ವಿಶ್ವಾಸದಿಂದ ಪ್ರಸಾದಿ, ವಿಶ್ವಾಸದಿಂದ ಪ್ರಾಣಲಿಂಗಿ, ವಿಶ್ವಾಸದಿಂದ ಶರಣ, ವಿಶ್ವಾಸದಿಂದ ಐಕ್ಯ. ಇಂತೀ ವಿಶ್ವಾಸವಿಲ್ಲದವಂಗೆ ವಿರಕ್ತಿಯೆಂಬ ಗೊತ್ತಿನ ಠಾವ ತೋರಾ. ಪ್ರಭುವಿನ ಕೈಯಲ್ಲಿ, ನಿಜಗುಣನ ನೆನಹಿನಲ್ಲಿ, ಅಜಗಣ್ಣನ ಐಕ್ಯದಲ್ಲಿ ಕುರುಹಿಲ್ಲದೆ ವಸ್ತುವ ಬೆರೆದ ಠಾವಾವುದಯ್ಯಾ ? ಎತ್ತ ಸುತ್ತಿ ಬಂದಡೂ ಅಸ್ತಮಕ್ಕೆ ಒಂದು ಗೊತ್ತಿನಲ್ಲಿ ನಿಲ್ಲಬೇಕು. ಇಂತೀ ವಿಶ್ವಾಸದಿಂದಲ್ಲದೆ ವಸ್ತುವ ಕೂಡುವುದಕ್ಕೆ ನಿಶ್ಚಯವಿಲ್ಲ. ಈ ಗುಣ ಸಂಗನಬಸವಣ್ಣ ತೊಟ್ಟತೊಡಿಗೆ, ಬ್ರಹ್ಮೇಶ್ವರಲಿಂಗವ ಮುಟ್ಟುವ ಭೇದ.
--------------
ಬಾಹೂರ ಬೊಮ್ಮಣ್ಣ
ನಿಃಕಲನ ಸಂಗದಿಂದ ಝೇಂಕಾರನಾದನಯ್ಯ. ಝೇಂಕಾರನ ಸಂಗದಿಂದ ನಿರಂಜನನಾದನಯ್ಯ. ನಿರಂಜನನ ಸಂಗದಿಂದ ಸ್ವಯಜ್ಞಾನಿಯಾದನಯ್ಯ. ಸ್ವಯಜ್ಞಾನಿಯ ಸಂಗದಿಂದ ಪರಮಜ್ಞಾನಿಯಾದನಯ್ಯ. ಪರಮಜ್ಞಾನಿಯ ಸಂಗದಿಂದ ಮಹಾಜ್ಞಾನಿಯಾದನಯ್ಯ. ಮಹಾಜ್ಞಾನಿಯ ಸಂಗದಿಂದ ಸುಜ್ಞಾನಿಯಾದನಯ್ಯ. ಸುಜ್ಞಾನಿಯ ಸಂಗದಿಂದ ಮನಜ್ಞಾನಿಯಾದನಯ್ಯ. ಮನಜ್ಞಾನಿಯ ಸಂಗದಿಂದ ನಿರ್ಮಲಜ್ಞಾನಿಯಾದನಯ್ಯ. ನಿರ್ಮಲಜ್ಞಾನಿಯ ಸಂಗದಿಂದ ಬದ್ಧಜ್ಞಾನಿಯಾದನಯ್ಯ. ಬದ್ಧಜ್ಞಾನಿಯ ಸಂಗದಿಂದ ಶುದ್ಧಜ್ಞಾನಿಯಾದನಯ್ಯ. ಶುದ್ಧಜ್ಞಾನಿಯೇ ಭಕ್ತ, ಬದ್ಧಜ್ಞಾನಿಯೇ ಮಹೇಶ್ವರ, ನಿರ್ಮಲಜ್ಞಾನಿಯೇ ಪ್ರಸಾದಿ, ಮನಜ್ಞಾನಿಯೇ ಪ್ರಾಣಲಿಂಗಿ, ಸುಜ್ಞಾನಿಯೇ ಶರಣ, ಪರಮಜ್ಞಾನಿಯೇ ಐಕ್ಯ, ಮಹಾಜ್ಞಾನಿಯೇ ಪರಬ್ರಹ್ಮ, ಸ್ವಯಜ್ಞಾನಿಯೇ ಚಿದ್ಘನ, ನಿರಂಜನವೇ ಚಿನ್ಮಯ, ಝೇಂಕಾರವೇ ಅಣುಮಯ, ನಿಃಕಲವೇ ತಾನು ತಾನೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇಷ್ಟಲಿಂಗಸಂಬಂದ್ಥಿಗಳು ಭಕ್ತಿಸ್ಥಲವನರಿಯರು. ಪ್ರಾಣಲಿಂಗಸಂಬಂದ್ಥಿಗಳು ಮಾಹೇಶ್ವರಸ್ಥಲವನರಿಯರು. ಪ್ರಸಾದಲಿಂಗಸಂಬಂದ್ಥಿಗಳು ಪ್ರಾಣಲಿಂಗಸ್ಥಲವನರಿಯರು. ಶರಣಸ್ಥಲಭರಿತರು ಪ್ರಾಣಲಿಂಗಸಂಬಂಧವನರಿಯರು. ಐಕ್ಯ ನಿರ್ಲೇಪವಾದಲ್ಲಿ ಶರಣಸ್ಥಲ ನಿಂದಿತ್ತು. ಇಂತೀ ಐದು ಸ್ಥಲವ ಆರೋಪಿಸಿ, ಇದಿರಿಟ್ಟು ಕೂಡಿದಲ್ಲಿ ಆರುಸ್ಥಲವಾಯಿತ್ತು. ಆರುಸ್ಥಲ ವೇದ್ಥಿಸಿ ನಿಂದಲ್ಲಿ, ನೀ ನಾನೆಂಬ ಭಾವ, ಎಲ್ಲಿ ಅಡಗಿತ್ತು ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕೈಯಲ್ಲಿ ಮುಟ್ಟಿದ ಪದಾರ್ಥ ಕೈಯೊಳಗೆ ಐಕ್ಯ, ಕಂಗಳು ತಾಗಿದ ಪದಾರ್ಥ ಕಂಗಳೊಳೈಕ್ಯ, ನಾಲಗೆ ತಾಗಿದ ಪದಾರ್ಥ ನಾಲಗೆಯೊಳಗೈಕ್ಯ. ನೀಡುವ ಪರಿಚಾರಕರು ಬೇಸತ್ತರಲ್ಲದೆ ಆರೋಗಣೆಯ ಮಾಡುವ ದೇವನೆತ್ತಲೆಂದರಿಯನು. ಬ್ರಹ್ಮಾಂಡವನೊಡಲೊಳಗಡಗಿಸಿಕೊಂಡು ಬಂದ ದೇವಂಗೆ ಆರೋಗಣೆಯ ಮಾಡಿಸಿಹೆನೆಂಬ ಅಹಂಕಾರದಲ್ಲಿ ಇದ್ದೆನಾಗಿ, ನಾನು ಕೆಟ್ಟ ಕೇಡನೇನೆಂಬೆನಯ್ಯಾ ಕೂಡಲಸಂಗಮದೇವರ ತೃಪ್ತಿಯ ತೆರನ ಬಲ್ಲಡೆ ಹೇಳಾ ಮಡಿವಾಳ ಮಾಚಯ್ಯ.
--------------
ಬಸವಣ್ಣ
ಇನ್ನಷ್ಟು ... -->