ಅಥವಾ

ಒಟ್ಟು 45 ಕಡೆಗಳಲ್ಲಿ , 15 ವಚನಕಾರರು , 35 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಕ್ಷೆ ಭಕ್ತನ ಸೋಂಕು. ಮುಖಸಜ್ಜೆ ಮಾಹೇಶ್ವರನ ಸೋಂಕು. ಕರಸ್ಥಲ ಪ್ರಾಣಲಿಂಗಿಯ ಸೋಂಕು. ಉತ್ತಮಾಂಗ ಶರಣನ ಸೋಂಕು. ಅಮಳೋಕ್ಯ ಐಕ್ಯನ ಸೋಂಕು. ಭಕ್ತಂಗೆ ಆಚಾರಲಿಂಗ, ಮಾಹೇಶ್ವರಂಗೆ ಸದಾಚಾರಲಿಂಗ, ಪ್ರಸಾದಿಗೆ ವಿಚಾರಲಿಂಗ, ಪ್ರಾಣಲಿಂಗಿಗೆ ಸರ್ವವ್ಯವಧಾನ ಸನ್ನದ್ಧಲಿಂಗ, ಶರಣಂಗೆ ಅವಿರಳ ಸಂಪೂರ್ಣಲಿಂಗ, ಐಕ್ಯಂಗೆ ಪರಮ ಪರಿಪೂರ್ಣಲಿಂಗ ಇಂತೀ ಆರುಸ್ಥಲ ಷಟ್ಕರ್ಮ ಷಡ್ವಿಧಲಿಂಗ ಭೇದಂಗಳಲ್ಲಿ ಮುಂದಣ ವಸ್ತುವೊಂದುಂಟೆಂದು ಸಂಗವ ಮಾಡುವುದಕ್ಕೆ ಆರಂಗದ ಪಥಗೂಡಿ ಕಾಬಲ್ಲಿ ವಸ್ತುವನೊಡಗೂಡುವುದೊಂದೆ ಭೇದ. ಇಂತೀ ಸ್ಥಲವಿವರ ಕೂಟಸಂಬಂಧ. ಏಕಮೂರ್ತಿ ತ್ರಿವಿಧಸ್ಥಲವಾಗಿ, ತ್ರಿವಿಧಮೂರ್ತಿ ಷಡುಸ್ಥಲವಾಗಿ ಮಿಶ್ರಕ್ಕೆ ಮಿಶ್ರ ತತ್ವಕ್ಕೆ ತತ್ವ ಬೊಮ್ಮಕ್ಕೆ ಪರಬ್ರಹ್ಮವನರಿತಡೂ, ಹಲವು ಹೊಲಬಿನ ಪಥದಲ್ಲಿ ಬಂದಡೂ ಪಥ ಹಲವಲ್ಲದೆ ನಗರಕ್ಕೆ ಒಂದೆ ಒಲಬು. ಇಂತೀ ಸ್ಥಲವಸ್ತುನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಕ್ರೀ ಆಚರಣೆ ಶುದ್ಧವಾದಲ್ಲಿ ಇಷ್ಟಲಿಂಗಪೂಜೆ. ರೂಪು ರುಚಿ ಏಕವಾದಲ್ಲಿ ಪ್ರಾಣಲಿಂಗಪೂಜೆ. ರೂಪು ನಿರೂಪೆಂಬ ಉಭಯವಳಿದಲ್ಲಿ ಐಕ್ಯನ ಅನುಭವ ತೃಪ್ತಿ. ಕೂಡುನ್ನಬರ ನೋಟ ಸುಖಿಯಾಗಿ, ಬೇಟದ ನೋಟ ಕೂಟದಲ್ಲಿ ಅಳಿದ ಮತ್ತೆ, ಉಭಯದೃಷ್ಟ ಏಕವಾಯಿತ್ತು. ಚರ ಅಚರವಾದಲ್ಲಿ ಉಭಯನಾಮರೂಪು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಘಟಾಕಾಶ ಮಠಾಕಾಶದಲ್ಲಿ ತೋರುವ ಬೆಳಗು ಘಟಮಠವೆಂಬ ಉಭಯ ಇರುತಿರಲಿಕ್ಕೆ ರೂಪುಗೊಂಡಿತ್ತು. ಬಯಲು ಘಟಮಠವೆಂಬ ಭೇದಂಗಳಳಿಯಲಾಗಿ ಆಕಾಶತತ್ವದಲ್ಲಿ ನಿಶ್ಚಿಂತವನೆಯ್ದಿ ಮಹದಾಕಾಶದಲ್ಲಿ ಲೀಯವಾದುದು ವ್ಯತಿರಿಕ್ತವೆಂಬುದು ನಾಮಶೂನ್ಯ, ಐಕ್ಯನ ಅರ್ಪಿತಸ್ಥಲ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಇನ್ನೊಂದು ಪ್ರಕಾರದ ಷಡ್ಲಿಂಗನ್ಯಾಸಸ್ಥಲವೆಂತೆಂದಡೆ : ಪೃಥ್ವಿಯೇ ಅಂಗವಾದ ಭಕ್ತನ ಸುಚಿತ್ತಹಸ್ತದಲ್ಲಿ ಆಚಾರಲಿಂಗ ನ್ಯಾಸವಾಗಿಹುದು. ಅಪ್ಪುವೆ ಅಂಗವಾದ ಮಹೇಶ್ವರನ ಸುಬುದ್ಧಿಹಸ್ತದಲ್ಲಿ ಗುರುಲಿಂಗ ನ್ಯಾಸವಾಗಿಹುದು. ಅನಲಾಂಗವಾದ ಪ್ರಸಾದಿಯ ನಿರಹಂಕಾರಹಸ್ತದಲ್ಲಿ ಶಿವಲಿಂಗ ನ್ಯಾಸವಾಗಿಹುದು. ವಾಯುವೇ ಅಂಗವಾದ ಪ್ರಾಣಲಿಂಗಿಯ ಸುಮನವೆಂಬ ಹಸ್ತದಲ್ಲಿ ಚರಲಿಂಗ ನ್ಯಾಸವಾಗಿಹುದು. ವ್ಯೋಮಾಂಗವಾದ ಶರಣನ ಸುಜ್ಞಾನಹಸ್ತದಲ್ಲಿ ಪ್ರಸಾದಲಿಂಗ ನ್ಯಾಸವಾಗಿಹುದು. ಆತ್ಮಾಂಗವಾದ ಐಕ್ಯನ ಭಾವಹಸ್ತದಲ್ಲಿ ಮಹಾಲಿಂಗ ನ್ಯಾಸವಾಗಿಹುದು ನೋಡಾ. ಇದಕ್ಕೆ ಈಶ್ವರ್ದೋವಾಚ : ``ಆಚಾರಂ ಚಿತ್ತಹಸ್ತಂ ಚ ಬುದ್ಧಿಹಸ್ತೇ ಗುರುಸ್ತಥಾ | ಶಿವಲಿಂಗಂ ಚ ಅಹಂಕಾರೇ ಚರಲಿಂಗ ಮನೇ ತಥಾ || ಪ್ರಸಾದಂ ಜ್ಞಾನಹಸ್ತೇ ಚ ಭಾವಹಸ್ತೇ ಮಹಸ್ತಥಾ | ಇತಿ ಲಿಂಗಸ್ಥಲಂ ಜ್ಞಾತುಂ ದುರ್ಲಭಂ ಚ ವರಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತಿಸ್ಥಲವಾರು, ಮಹೇಶ್ವರಸ್ಥಲವಾರು, ಪ್ರಸಾದಿಸ್ಥಲವಾರು, ಪ್ರಾಣಲಿಂಗಿಸ್ಥಲವಾರು, ಶರಣಸ್ಥಲವಾರು, ಐಕ್ಯನ ಐಕ್ಯ ಆರೆಂಬಲ್ಲಿ, ನೇತಿಗಳೆದು ಸ್ಥಲನಿಂದ ಮತ್ತೆ ಐಕ್ಯನ ಆರುಕೂಟವಾವುದಯ್ಯಾ ? ಅದು ದರ್ಪಣದ ಭಾವದೊಪ್ಪ. ಅದು ಭಾಗೀರಥಿಯ ಅಪ್ಪುವಿನ ಭೇದ. ಇದು ಆರ ಭಾವಕ್ಕೂ ತಪ್ಪದ ಸ್ಥಲ. ಸಂದೇಹವುಳ್ಳನ್ನಕ್ಕ ಷಟ್ಸ್ಥಲ, ಸಂದೇಹ ನಿಂದು ಒಂದೆಂದಲ್ಲಿ ಏಕಸ್ಥಲ. ಏಕಸ್ಥಲ ಪ್ರತಿರೂಪಾಗಿ ಕರ್ತೃಭೃತ್ಯನೆಂಬ ಉಭಯರೂಪಾಯಿತ್ತು. ಉಭಯದ ರೂಪಿಂದ ಹಲವುಸ್ಥಲ ಒಲವರವಾಯಿತ್ತು. ಆ ಹೊಲಬ ತಿಳಿದು, ಸಲೆ ವಸ್ತು ಒಂದೆಂದಲ್ಲಿ ಸ್ಥಲಲೇಪ, ನಿಃಕಳಂಕ ಮಲ್ಲಿಕಾರ್ಜುನಲಿಂಗವೆಂಬ ಕುರುಹಡಗಿದಲ್ಲಿ.
--------------
ಮೋಳಿಗೆ ಮಾರಯ್ಯ
ಓಂ ನಮೋ ಶಿವಾಯವೆಂಬ ಮಂತ್ರವು ನೆನಹಿಂಗೆ ಬಾರದಂದು. ತಾನುತಾನೆಂಬುದು ಭಾವಕೆ ತೋರದಂದು. ಎಂತಿರ್ದ ಬ್ರಹ್ಮವು ತಾನೇ ನೋಡಾ ! ಆ ಬ್ರಹ್ಮದ ಚಿದ್ವಿಲಾಸದಿಂದ ಚಿದಾತ್ಮನಾದ. ಆ ಚಿದಾತ್ಮನ ಭಾವದಿಂದ ಜ್ಞಾನಾತ್ಮನಾದ. ಆ ಜ್ಞಾನಾತ್ಮನ ಭಾವದಿಂದ ಆಧ್ಯಾತ್ಮನಾದ. ಆ ಆಧ್ಯಾತ್ಮನ ಭಾವದಿಂದ ನಿರ್ಮಲಾತ್ಮನಾದ. ಆ ನಿರ್ಮಲಾತ್ಮನ ಭಾವದಿಂದ ಶುದ್ಧಾತ್ಮನಾದ. ಆ ಶುದ್ಧಾತ್ಮನ ಭಾವದಿಂದ ಬದ್ಧಾತ್ಮನಾದ. ಆ ಬದ್ಧಾತ್ಮನ ಭಾವಕೆ ಭಕ್ತನಾದ. ಆ ಶುದ್ಧಾತ್ಮನ ಭಾವಕೆ ಮಹೇಶ್ವರನಾದ. ಆ ನಿರ್ಮಲಾತ್ಮನ ಭಾವಕೆ ಪ್ರಸಾದಿಯಾದ ಆ ಆಧ್ಯಾತ್ಮನ ಭಾವಕೆ ಪ್ರಾಣಲಿಂಗಿಯಾದ. ಆ ಜ್ಞಾನಾತ್ಮನ ಭಾವಕೆ ಶರಣನಾದ. ಆ ಚಿದಾತ್ಮನ ಭಾವಕೆ ಐಕ್ಯನಾದ. ಆ ಐಕ್ಯನ ಕರಕಮಲಕೆ ಮಹಾಲಿಂಗನಾದ. ಆ ಶರಣನ ಕರಕಮಲಕೆ ಪ್ರಸಾದಲಿಂಗನಾದ. ಆ ಪ್ರಾಣಲಿಂಗಿಯ ಕರಕಮಲಕೆ ಜಂಗಮಲಿಂಗನಾದ. ಆ ಪ್ರಸಾದಿಯ ಕರಕಮಲಕೆ ಶಿವಲಿಂಗನಾದ. ಆ ಮಹೇಶ್ವರನ ಕರಕಮಲಕೆ ಗುರುಲಿಂಗನಾದ. ಆ ಭಕ್ತನ ಕರಕಮಲಕೆ ಆಚಾರಲಿಂಗನಾದ. ಆ ಆಚಾರಲಿಂಗಕೆ ಕ್ರಿಯಾಶಕ್ತಿ, ಆ ಗುರುಲಿಂಗಕೆ ಜ್ಞಾನಶಕ್ತಿ, ಆ ಶಿವಲಿಂಗಕೆ ಇಚ್ಫಾಶಕ್ತಿ, ಆ ಜಂಗಮಲಿಂಗಕೆ ಆದಿಶಕ್ತಿ, ಆ ಪ್ರಸಾದಲಿಂಗಕೆ ಪರಾಶಕ್ತಿ, ಆ ಮಹಾಲಿಂಗಕೆ ಚಿಚ್ಭಕ್ತಿ. ಆ ಚಿಚ್ಫಕ್ತಿಸಂಗದಿಂದ ಚಿದ್ಬ್ರಹ್ಮವ ಕೂಡಿ ಚಿದಾನಂದಸ್ವರೂಪವಾದನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪೃಥ್ವೀತತ್ವದಿಂದ ಭಕ್ತಿರೂಪು, ಅಪ್ಪು ತತ್ವದಿಂದ ಮಾಹೇಶ್ವರರೂಪು, ತೇಜ ತತ್ವದಿಂದ ಪ್ರಸಾದಿ ರೂಪು, ವಾಯು ತತ್ವದಿಂದ ಪ್ರಾಣಲಿಂಗಿ ರೂಪು, ಆಕಾಶ ತತ್ವದಿಂದ ಶರಣ ರೂಪು, ಇಂತೀ ಪಂಚತತ್ವವನವಗವಿಸಿ ಮಹದಾಕಾಶ ಅವಕಾಶವಾದುದು ಐಕ್ಯನ ಅಂತರಿಕ್ಷೆ. ನಿರ್ಮುಕ್ತ ಸ್ವಯಂಸ್ವಾನುಭಾವದಿಂದ ಸಾವಧಾನವನರಿವುದು ಷಟ್ಕರ್ಮನಾಶನ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು || 57 ||
--------------
ದಾಸೋಹದ ಸಂಗಣ್ಣ
ಭಕ್ತನ ಅಂಗಸ್ಥಲ, ಮಹೇಶ್ವರನ ಭಾವಸ್ಥಲ, ಪ್ರಸಾದಿಯ ಜ್ಞಾನಸ್ಥಲ, ಪ್ರಾಣಲಿಂಗಿಯ ಉಭಯಸ್ಥಲ, ಶರಣನ ಏಕಸ್ಥಲ, ಐಕ್ಯನ ಕೂಟಸ್ಥಲ. ಇಂತೀ ಆರುಸ್ಥಲವ ವೇಧಿಸಿ ನಿಂದಲ್ಲಿ, ಮಹದೈಕ್ಯ ಏಕಮೂರ್ತಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ದೇವರ ನಿರೂಪದಿಂದ ಎನ್ನಂತರಂಗದಲ್ಲಿ ಶಿವಾತ್ಮಜ್ಞಾನ ಉಕ್ಕಿ, ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನ ಕೂಡಿ ನಿಷ್ಕಲಪರಬ್ರಹ್ಮಲಿಂಗವನಾಚರಿಸಿ ನಿರ್ಮುಕ್ತನಾದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆತ್ಮನೆ ಅಂಗವಾದ ಐಕ್ಯನ ಭಾವಹಸ್ತದಲ್ಲಿ ಮಹಾಲಿಂಗವು ಜನ್ಮ ಜರಾ ಮರಣಂಗಳಿಲ್ಲವಾಗಿ, ನಿರ್ವಿಕಾರವಾಗಿ, ಸರ್ವವ್ಯಾಪಿಯಾಗಿ, ಅದ್ವಿತೀಯನಾಗಿ, ಅಣುವಿಗೆ ಅಣುವಾಗಿ, ಪರಾಪರವಾಗಿ, ಸಂಸಾರವ್ಯಾಧಿ ಇಲ್ಲದುದಾಗಿ, ಹವಣಿಸಲು ಬಾರದುದಾಗಿ, ಭಾವವೊಂದರಿಂದವೆ ಅರಿಯಲು ಬಹುದಾಗಿ, ಚೈತನ್ಯಸ್ವರೂಪವಾಗಿ ಶಿವತತ್ವವನು ಚಿತ್ ಎಂಬ ಶಕ್ತಿಯ ಸ್ಫುರಣವೇ ರೂಪಾಗಿವುಳ್ಳ ಮಹಾಲಿಂಗವಾಗಿ ಹೇಳುತ್ತಿಹರು ನೋಡಾ. ಇದಕ್ಕೆ ಮಹಾವಾತುಲಾಗಮೇ :ವ್ತೃತ್ತ - ``ಆದ್ಯಂತಯ ಶೂನ್ಯ ಅಮಲಂ ಪರಿಪೂರ್ಣಮೇಕಂ ಸೂಕ್ಷ್ಮಂ ಪರಾತ್ಪರಮನಾಮಯಮಪ್ರಮೇಯಂ | ಭಾವೈಕ್ಯಗಮ್ಯಮಜಡಂ ಶಿವತತ್ವಮಾಹುಃ ಚಿಚ್ಛಕ್ತಿಸಂಸ್ಫುರಣರೂಢಮಾತ್ಮಲಿಂಗಂ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಐಕ್ಯಸ್ಥಲಲೇಪ ಭಾವಿಯ ಭಾವವೆಂತುಂಟೆಂದಡೆ ಚಿನ್ನವರಗಿದಲ್ಲಿ ಬಣ್ಣವೊಡಗೂಡಿ ಹೆರೆಹಿಂಗದಂತೆ ಕಡಿದೊರೆದಡೆ ಚಿನ್ನದಂಗಕ್ಕೆ ಹೊರೆಯಿಲ್ಲದೆ ರಂಜಿಸುವಂತೆ ಐಕ್ಯನ ಮಹದಾಕಾಶದಲ್ಲಿ ಅವಕಾಶವಾಗಿ ಅವಗವಿಸಿದೆಯಲ್ಲಾ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ನಾದಬಿಂದುಕಳಾತೀತವನು ಗರ್ಭೀಕರಿಸಿಕೊಂಡು ಇರಲ್ಪಟ್ಟಂಥಾ ನಿಷ್ಕಲಲಿಂಗದಲ್ಲಿ ಪರಿಪೂರ್ಣವಾದ ಭಕ್ತನ ತೋರಿಸಯ್ಯ. ಪರಿಪೂರ್ಣವಾದ ಮಹೇಶ್ವರನ ತೋರಿಸಯ್ಯ. ಪರಿಪೂರ್ಣವಾದ ಪ್ರಸಾದಿಯ ತೋರಿಸಯ್ಯ. ಪರಿಪೂರ್ಣವಾದ ಪ್ರಾಣಲಿಂಗಿಯ ತೋರಿಸಯ್ಯ. ಪರಿಪೂರ್ಣವಾದ ಶರಣನ ತೋರಿಸಯ್ಯ. ಪರಿಪೂರ್ಣವಾದ ಐಕ್ಯನ ತೋರಿಸಯ್ಯ. ಪರಿಪೂರ್ಣವಾದ ಮಹಾಜ್ಞಾನಿಯ ತೋರಿಸಯ್ಯ. ನಿಮ್ಮ ನೀವೇ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಭಕ್ತಿಸ್ಥಲ ಮಾಹೇಶ್ವರನ ನಿರ್ವೀಜ. ಆ ನಿರ್ವೀಜ, ಪ್ರಸಾದಿಯ ಪ್ರಣಮ. ಆ ಪ್ರಣಮ, ಪ್ರಾಣಲಿಂಗಿಯ ಎರಡಳಿದ ಅರಿವು. ಆ ಅರಿವು, ಶರಣನ ಪರಿಪೂರ್ಣಕಳೆ. ಆ ಕಳೆ, ನಿಃಪತಿಯಾದಲ್ಲಿ ಐಕ್ಯನ ನಿರವಯ. ಆ ನಿರವಯವಸ್ತು ಬೇರೊಂದೇಕೆ, ಕುರುಹುಗೊಂಡೆ ? ಅದು ನಿನ್ನದಲ್ಲ, ಎನ್ನ ಅಂಗಕ್ಕೋಸ್ಕರವಾಗಿ ಲಿಂಗವಾದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಐಕ್ಯಸ್ಥಲದ ಲೇಪಜ್ಞಾನ ವಿವರ : ಅಪ್ಪು ಆವಾವ ಪಾಕಕ್ಕೂ ತಪ್ಪದೆ ಸಾರವ ಕೊಡುವಂತೆ ತಥ್ಯಮಿಥ್ಯವಾದ ದ್ರವ್ಯಕ್ಕೆ ಹೆಚ್ಚುಕುಂದನರಿಯದಿಪ್ಪಂತೆ ವಾಯು ಸುಗುಣ ದುರ್ಗುಣವೆನ್ನದೆ ತನ್ನಯ ಸಹಜದಿಂದ ಸಂಚರಿಸುವಂತೆ ಅಗ್ನಿಗೆ ಕಾಷ* ಸರಿಸ ಡೊಂಕೆನ್ನದೆ ಮಲಿನ ಅಮಲಿನವೆನ್ನದೆ ಆವ ದ್ರವ್ಯ ದೃಷ್ಟದಲ್ಲಿ ಸಿಕ್ಕಿದಡೂ ಭೇದಿಸಿ ವೇಧಿಸಿ ಸುಡುವುದಾಗಿ. ಇಂತಿವು ತ್ರಿವಿಧಸ್ಥಲದಂತೆ ಇಪ್ಪುದು ಐಕ್ಯನ ಅರ್ಪಿತ ಸ್ಥಲಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಪ್ರಥಮ ಮೂಲದಲ್ಲಿ ನಿರಾಕಾರವಸ್ತು ಸಾಕಾರವಾಯಿತ್ತು. ಆಚಾರಕ್ಕೋಸ್ಕರವಾಗಿ ವಸ್ತು ಅನಾಚಾರಿಯಾದ. ಅನಾಹತ ಸಂಸಿದ್ಧ ಆಗಲಾಗಿ ವಿಚಾರಮುಖದಿಂದ ಆಚಾರ್ಯನಾದ. ಆ ಮರದ ಶಾಖೆಯ ತೊಡಪಿಂದ ಆ ಮರದ ಫಲದ ಕೈಗೆ ತಾಹಂತೆ ಈ ಗುಣ ಕ್ರೀ ನಿಃಕ್ರೀಯೆಂಬ ಉಭಯವಿವರದ ಭೇದ. ಉಭಯಕ್ಕೆ ಒಂದು ಶುದ್ಧವಾದಲ್ಲಿ ಒಂದಲ್ಲಿ ಒಂದು ಸಂದಿತ್ತು. ಈ ಗುಣ ಕ್ರೀ ನಿಃಕ್ರೀಲೇಪ, ಏಕಸ್ಥಲ ಐಕ್ಯನ ಕೂಟ ಗೋಪತಿನಾಥ ವಿಶ್ವೇಶ್ವರಲಿಂಗದ ಒಳಗಿನಾಟ.
--------------
ತುರುಗಾಹಿ ರಾಮಣ್ಣ
ಇನ್ನಷ್ಟು ... -->