ಅಥವಾ

ಒಟ್ಟು 6 ಕಡೆಗಳಲ್ಲಿ , 6 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಕೇಳ, ಪ್ರಮಥಗಣಂಗಳೆಲ್ಲ ಷಡ್ವಿಧಭಕ್ತಿಯೆಂಬ ಪರಮಾಮೃತವ ಸೇವಿಸಿ, ಪ್ರವೃತ್ತಿಮಾರ್ಗದಲ್ಲಿ ಚರಿಸುವ ಆರು ವೈರಿಗಳ ಸಂಗವ ತ್ಯಜಿಸಿ, ನಿವೃತ್ತಿ ಮಾರ್ಗದಲ್ಲಿ ಚರಿಸುವ ಷಡ್ಗುಣಗಳ ಸಂಗವ ಸಾಧಿಸಿ, ಜಂಗಮದ ಆಚಾರ ವಿಚಾರವ ತಿಳಿದು, ಷಟ್‍ಸ್ಥಲಮಾರ್ಗದಲ್ಲಿ ನಿಂದು, ಭಕ್ತಿ-ಜ್ಞಾನ-ವೈರಾಗ್ಯದಲ್ಲಾಚರಿಸಿದ ವಿಚಾರವೆಂತೆಂದಡೆ : ಅನಾದಿನಿರಂಜನ-ಅಕಾಯಚರಿತ್ರ-ನಿರಾಲಂಬ-ಪರಶಿವಮೂರ್ತಿ ಸಾಕ್ಷಾತ್ ಶ್ರೀಗುರುದೇವನಿಂದ ಏಕವಿಂಶತಿ ವೇಧಾ-ಮಂತ್ರ-ಕ್ರಿಯಾದೀಕ್ಷೆಯ ಪಡದು, ತನ್ನ ತಾನರ್ಚಿಸಿ, ಆ ಶ್ರೀಗುರುದೇವನ ಲಿಂಗಜಂಗಮಲೀಲೆ ಹೇಗುಂಟೋ ಹಾಂಗೆ, ಭಕ್ತಿಯ ಮಾಡಿ, ಶ್ರೀಗುರು-ಲಿಂಗ-ಜಂಗಮದಂತಃಕರಣವೆಂಬ ಪರಮಾತೃತಸುಧೆಯೊಳಗೆ ಲೋಲುಪ್ತರಾಗಿ, ನಿರಾವಯ ಸಮಾಧಿಯಲ್ಲಿ ಬಯಲಾದರು ನೋಡ. ಅದರ ವಿಚಾರವೆಂತೆಂದಡೆ : ಭಕ್ತಿಸ್ಥಲಕ್ಕೆ ಕಾರಣವಾದ ಬಸವಣ್ಣನೆ ಲಿಂಗಲಾಂಛನಗಳ ನೋಡಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ ! ಮಹೇಶಸ್ಥಲಕ್ಕೆ ಕಾರಣವಾದ ಮಡಿವಾಳದೇಶಿಕೇಂದ್ರನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಪಂಚಾಚಾರವ ನೋಡಿ ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಸಾದಿಸ್ಥಲಕ್ಕೆ ಕಾರಣವಾದ ಮರುಳಶಂಕರದೇವನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಮಂತ್ರ ಪಂಚಾಚಾರದಾಚರಣೆ, ಸಪ್ತಾಚಾರದ ಸಂಬಂಧದ ನಡೆನುಡಿಯ ವಿಚಾರಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಾಣಲಿಂಗಿಸ್ಥಲಕ್ಕೆ ಕಾರಣವಾದ ಸಿದ್ಧರಾಮೇಶ್ವರನೆ ಲಿಂಗಲಾಂಛನ, ಶ್ರೀವಿಭೂತಿ, ರುದ್ರಾಕ್ಷೆ, ಪಂಚಮಂತ್ರ, ದ್ವಾದಶಾಚಾರ ಮೊದಲಾದ ಸರ್ವಾಚಾರ ಸಂಪತ್ತಿನಾಚರಣೆ ಸರ್ವಾಂಗದಲ್ಲಿ ನೂನು ಕೂನುಗಳಿಲ್ಲದೆ, ನಡೆನುಡಿಗಳು ಹೊದ್ದಲ್ಲದೆ, ನಿರಾಭಾರಿ ವೀರಶೈವವ ನೋಡಿ ಇದೆ ಪರವಸ್ತುವೆಂದು ತನುಮನಧನವನೊಪ್ಪಿಸಿ ಶರಣೆಂದರಯ್ಯ. ಶರಣಸ್ಥಲಕ್ಕೆ ಕಾರಣವಾದ ಚೆನ್ನಬಸವೇಶ್ವರನೆ ಇಂತು ಚತುರ್ವಿಧಮೂರ್ತಿಗಳು ವಿಚಾರಿಸಿದ ಆಚರಣೆಯ ನೋಡಿ, ಗುರು-ಸೂತ್ರ-ಗೋತ್ರ-ಸಂಪ್ರದ ದೀಕ್ಷೆಯ ವಿಚಾರಿಸಿ, ಲಿಂಗಾಂಗ ಷಟ್ಸ್ಥಾನಂಗಳ ನೋಡಿ, ಗುರುಮಾರ್ಗಾಚಾರ ನಡೆನುಡಿಗಳ ವಿಚಾರಿಸಿ, ಸ್ವಾನುಭಾವ ಸಕೀಲದ ಗೊತ್ತ ತಿಳಿದು, ಲಾಂಚನವ ನೋಡಿ ಮನ್ನಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಐಕ್ಯಸ್ಥಲಕ್ಕೆ ಕಾರಣವಾದ ಅಜಗಣ್ಣಗಳೆ ಬಸವ, ಮಡಿವಾಳ, ಮರುಳುಶಂಕರ, ಸಿದ್ಧರಾಮ, ಚೆನ್ನಬಸವ ಮೊದಲಾದ ಮಹಾಗಣಂಗಳು ಅರ್ತಿ-ಉತ್ಸಾಹದಿಂದ ಭಕ್ತಿಯ ಮಾಡಿದ ಜಂಗಮವೆ ನನಗೆ ಮಹಾಪ್ರಸಾದವೆಂದು ಅವರಡಿಗಳಿಗೆ ವಂದಿಸಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ. ನಿರವಯಸ್ಥಲಕ್ಕೆ ಕಾರಣವಾದ ಪ್ರಭುದೇವನೆ ಆವ ಮತವೆಂದು ನೋಡದೆ, ಬಾಲಬ್ರಹ್ಮಿ-ಬಳಸಿಬ್ರಹ್ಮಿಯೆಂಬ ಸಂಸಾರ ಸಂಕಲ್ಪಸೂತಕವನೆಣಿಸದೆ, ಸರ್ವಾಂಗದವಯವಂಗಳ ನೋಡಿ, ಸರ್ವಸಂಗಪರಿತ್ಯಾಗದಿಂದ, ದ್ವಾದಶ ಮಲಂಗಳ ತ್ಯಜಿಸಿ, ಭಕ್ತಿ-ಜ್ಞಾನ-ವೈರಾಗ್ಯದಿಂದ ಸಮಸ್ತವಾದ ಭೋಗಯೋಗಾದಿಗಳಿಗೆ ಹೇವರಿಸಿ, ನಿರಾಸಕತ್ವದಿಂದ ಶಿವಧೋ ಎಂದು ಗುರೂಪಾವಸ್ತೆಯಂ ಮಾಡುವ ಜ್ಞಾನಕಲಾತ್ಮಂಗೆ ಜಂಗಮಾಕೃತಿಯಿಂದ ಪ್ರತ್ಯಕ್ಷವಾಗಿ, ಆ ಜ್ಞಾನಕಲಾತ್ಮನ ಉಪಾವಸ್ತೆಯನೊಂದಿಸಿ, ಆತಂಗೆ ಅಂಜಬೇಡವೆಂದು ಅಭಯಹಸ್ತವನಿತ್ತು. ರೇವಣಸಿದ್ಧೇಶ್ವರ ಮೊದಲಾದ ಗಣಾಚಾರ್ಯರ ಮಧ್ಯದಲ್ಲಿ ಈ ಜ್ಞಾನಕಲಾತ್ಮನನೊಪ್ಪಿಸಿ, ಅವರಿಂದ ನಿರಾಕಾರವಾದ ಪ್ರಾಣಲಿಂಗವ ಬಷ್ಕರಿಸಿ, ಪಂಚಕಲಶಸೂತ್ರದಿಂದ ಪ್ರಮಥಗಣ ಸಾಕ್ಷಿಯಾಗಿ ಆತನ ಷಡ್ವಿಧಸ್ಥಾನದಲ್ಲಿ ಸ್ಥಿರಗೊಳಸಿ, ಅಂತರಂಗ ಬಹಿರಂಗದಲ್ಲಿ ಅಷ್ಟವಿಧಾರ್ಚನೆ, ಷೋಡಶೋಪಚಾರ ಭಕ್ತಿಗಳನರುಪಿ, ಆ ಪರಶಿವಲಿಂಗದಲ್ಲಿ ನೈಷೆ*ಯ ನೋಡಿ, ಪ್ರಮಥಗಣರಾಧ್ಯ ಭಕ್ತ ಮಹೇಶ್ವರರೊಡಗೂಡಿ, ಏಕವಿಂಶತಿ ದೀಕ್ಷೆ ಮೊದಲಾಗಿ, ಪ್ರಮಥರು ನುಡಿದ ಎರಡೆಂಬತ್ತು ಕೋಟಿ ವಚನಾನುಭಾವದ ಉದಾಹರಣೆಯ ಬೋಧಿಸಿ, ಸ್ವಸ್ವರೂಪು ನಿಲುಕಡೆಯ ಬೋಧಿಸಿ, ನಾನು ನೀನು ಎಂಬ ಭಿನ್ನಭಾವವನಳಿದು, ಏಕಸ್ವರೂಪವೆಂಬ ಅಭಿನ್ನಲೀಲೆಯಿಂದ ಪಾದೋದಕ ಪ್ರಸಾದದಲ್ಲಿ ಏಕಭಾಜನವ ಮಾಡಿದಮೇಲೆ, ಶ್ರೀಗುರು ಬಸವ ಮೊದಲಾದ ಸಕಲಪ್ರಮಥಗಣಾರಾಧ್ಯರ ಕರದು, ಇಲ್ಲೊಂದು ನಿಜವಸ್ತು ಉಂಟೆಂದು ಹೇಳಿ, ತಾವು ಮೊದಲು ಶರಣು ಹೊಕ್ಕು, ತಮ್ಮ ಹಿಂದೆ ಶರಣಗಣಂಗಳೆಲ್ಲ ಶರಣುಹೊಕ್ಕು. ಅಡಿ ಮುಡಿಯಿಂದ ವಸ್ತುವ ಬೆಸಗೊಂಡು ಆ ಲಿಂಗಜಂಗಮದೇವರೂಪಡಗೂಡಿ ಬಯಲೊಳಗೆ ಮಹಾಬಯಲಾದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಭಕ್ತಸ್ಥಲಕ್ಕೆ ವಿಶ್ವಾಸ ಶ್ರದ್ಧೆ ಸನ್ಮಾರ್ಗ, ಮಾಹೇಶ್ವರಸ್ಥಲಕ್ಕೆ ಅಪರಾಧವಂ ಮಾಡದೆ ನಿಂದೆಗೆ ಒಡಲಲ್ಲದೆ ಅನುಸರಣೆಯ ಕಂಡು ಕೇಳಿ ತಾಳದೆ, ಪ್ರಸಾದಿಸ್ಥಲಕ್ಕೆ ಶುದ್ಧ-ಸಿದ್ಧ-ಪ್ರಸಿದ್ಧ-ಪ್ರಸನ್ನವೆಂಬುದನರಿಯದೆ ಮಲಿನ ಅಮಲಿನವೆಂಬುದ ಕಾಣದೆ ಚಿಕಿತ್ಸೆ ಜಿಗುಪ್ಸೆಯೆಂಬುದ ಭಾವಕಿಲ್ಲದೆ, ಪ್ರಾಣಲಿಂಗಿಸ್ಥಲಕ್ಕೆ ಅರ್ಪಿತ ಅನರ್ಪಿತಂಗಳನರಿದು ರಸವನೀಂಟಿದ ಘಟದಂತೆ ಅಸಿಯ ಮೊನೆಗೆ ಬಂದು ನಿಲುವಂತೆ, ಶರಣಸ್ಥಲಕ್ಕೆ ತೊಟ್ಟುಬಿಟ್ಟ ಫಳ ಮರುತ ಸಂಚಾರಿಸಿದಲ್ಲಿಯೆ ಶಾಖೆಯ ಬಿಡುವಂತೆ ಸ್ತುತಿನಿಂದೆಗಳಲ್ಲಿ ರಾಗವಿರಾಗನಾಗಿ, ಐಕ್ಯಸ್ಥಲಕ್ಕೆ ಉರಿಕೊಂಡ ಕರ್ಪುರದಂತೆ ಭ್ರಮರ ಅನುಭವಿಸಿದ ಗಂಧದಂತೆ ಭೂಸ್ಥಾಪಿತದಂತೆ, ಅನಲಕಾಷ*ಪಾಷಾಣದಂತೆ ದೃಷ್ಟವ ಕಾಬನ್ನಕ್ಕ ಷಟ್‍ಸ್ಥಲಸಂಬಂಧ. ಇಂತೀ ಸ್ಥಲಂಗಳನಾರೋಪಿಸಿದಲ್ಲಿ ಸದ್ಯೋಜಾತಲಿಂಗವು ಸಂಬಂಧನಪ್ಪನು.
--------------
ಅವಸರದ ರೇಕಣ್ಣ
ಭಕ್ತಿಸ್ಥಲಕ್ಕೆ ಒಬ್ಬ, ಮಾಹೇಶ್ವರಸ್ಥಲಕ್ಕೆ ಇಬ್ಬರು, ಪ್ರಸಾದಿಸ್ಥಲಕ್ಕೆ ಆತನಳಿಯನಲ್ಲದಿಲ್ಲ, ಪ್ರಾಣಲಿಂಗಿಸ್ಥಲಕ್ಕೆ ಮೂವರು, ಶರಣಸ್ಥಲಕ್ಕೆ ನಾಲ್ವರು, ಐಕ್ಯಸ್ಥಲಕ್ಕೆ ಅಕ್ಕನ ತಮ್ಮನಲ್ಲದಿಲ್ಲ. ಇಂತೀ ಕುರುಹಿನ ಬೆಂಬಳಿಯನರಿದು, ಬಿಡುವರ ಬಿಟ್ಟು, ತಡೆವರ ತಡೆವುತ್ತಿದ್ದೇನೆ ಕೂಡಲಸಂಗಮದೇವರಲ್ಲಿ ಬಸವಣ್ಣನರಿಕೆಯಾಗಿ.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಜ್ಞಾನೋದಯವಾಗಿ ಷಟ್‍ಸ್ಥಲದ ನಿರ್ಣಯವೆಂತುಟೆಂದು ವಿಚಾರಿಸೆ: ಮೊದಲಲ್ಲಿ ಭಕ್ತಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಮಾಹೇಶ್ವರಸ್ಥಲಕ್ಕೆ ಬಂದು, ಮಾಹೇಶ್ವರಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಪ್ರಸಾದಿಸ್ಥಲಕ್ಕೆ ಬಂದು, ಪ್ರಸಾದಿಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಪ್ರಾಣಲಿಂಗಿಸ್ಥಲಕ್ಕೆ ಬಂದು, ಪ್ರಾಣಲಿಂಗಿಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಶರಣಸ್ಥಲಕ್ಕೆ ಬಂದು, ಶರಣಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ಐಕ್ಯಸ್ಥಲಕ್ಕೆ ಬಂದು, ಐಕ್ಯಸ್ಥಲವೆಂತು ಹೇಳಿತ್ತು_ ಅಂತೆ ನಡೆದು ಪೂರೈಸಿ ನಿರವಯಸ್ಥಲಕ್ಕೆ ಬಂದು ನಿರಾಳಕ್ಕೆ ನಿರಾಳನಾದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಬ್ರಹ್ಮನ ಸಂತತಿ ಭಕ್ತಿಸ್ಥಲಕ್ಕೆ ಸಂದಿತ್ತು. ವಿಷ್ಣುವಿನ ಸಂತತಿ ಮಾಹೇಶ್ವರಸ್ಥಲಕ್ಕೆ ಸಂದಿತ್ತು. ರುದ್ರನ ಸಂತತಿ ಪ್ರಸಾದಿಸ್ಥಲಕ್ಕೆ ಸಂದಿತ್ತು. [ಈಶ್ವರನ ಸಂತತಿ ಪ್ರಾಣಲಿಂಗಿಸ್ಥಲಕ್ಕೆ ಸಂದಿತ್ತು]. ಸದಾಶಿವನ ಸಂತತಿ ಶರಣಸ್ಥಲಕ್ಕೆ ಸಂದಿತ್ತು. ಪರಶಿವನ ಸಂತತಿ ಐಕ್ಯಸ್ಥಲಕ್ಕೆ ಸಂದಿತ್ತು. ಅಷ್ಟು ಎಲ್ಲ ಕೂಡಿ ಇಷ್ಟಲಿಂಗವಾಗಿ ನಿಂದಡೆ. ಅದು ನೀನು ನಾನು ಉಭವಿಲ್ಲದಂತೆ ಆಯಿತ್ತು ಕಾಣಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಪ್ರಥಮದಲ್ಲಿ ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಮಹಾಘನ ಶೂನ್ಯಬ್ರಹ್ಮವು. ಆ ಶೂನ್ಯಬ್ರಹ್ಮದಿಂದ ಶುದ್ಧ ಪ್ರಣವ. ಆ ಶುದ್ಧ ಪ್ರಣವಧಿಂದ ಚಿತ್ತು ಭಾವದಕ್ಷರ. ಆ ಚಿತ್ತು ಭಾವದಕ್ಷರದಿಂದ ಪರಶಕ್ತಿ. ಆ ಪರಾಶಕ್ತಿಯಿಂದ ಅಕ್ಷರತ್ರಯಂಗಳು. ಆ ಅಕ್ಷರತ್ರಯಂಗಳಿಂದ ಓಂಕಾರ. ಆ ಓಂಕಾರವೆ ಬಸವಣ್ಣನು. ಆ ಬಸವಣ್ಣನೆ ಎನ್ನ ವದನಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಮಧ್ಯಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಬಲದ ತೊಡೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ತೊಡೆಗೆ ಯಕಾರಾವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಯತಕ್ಕೆ ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಯತಕ್ಕೆ ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸನ್ನಿಹಿತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರೀಗೆ ಅವಾಚ್ಯ ಸ್ವರೂಪಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಮಹಾಶೂನ್ಯ ಸ್ವರೂಪನಾಗಿ ಬಂದನಯ್ಯ ಬಸವಣ್ಣ. ಎನ್ನ ರುಧಿರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮೇದಸ್ಸಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಸ್ಥಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಗಮಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಭಾವ ಕೊಂದಹೆನೆಂದು ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೊನ್ನು ಹೆಣ್ಣು ಮಣ್ಣೆಂಬ ಸಕಲಾಸೆಯ ಕೊಂದಹೆನೆಂದು ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಂದ್ರಿಯ ವಿಷಯಂಗಳ ಕೊಂದಹೆನೆಂದು ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಾದಕ್ಕೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಳೆಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶ್ವಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ತೈಜಸಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ ಎನ್ನ ಪ್ರಜ್ಞೆಗೆ ತೃಪ್ತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸತ್ವಕ್ಕೆ ಶುದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ರಜಕ್ಕೆ ಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ತಮಕ್ಕೆ ಪ್ರಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನಗೆ ಬಕಾರವೆ ಗುರುವಾಗಿ ಬಂದನಯ್ಯ ಬಸವಣ್ಣ. ಎನಗೆ ಸಕಾರವೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನಗೆ ವಕಾರವೆ ಜಂಗಮವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶಿವ ಕ್ಷೇತ್ರಜ್ಞ ಕರ್ತಾರ ಭಾವ ಚೈತನ್ಯ ಅಂತರ್ಯಾಮಿಯೆಂಬ ಷಡುಮೂರ್ತಿಗಳಿಗೆ ನಕಾರ ಮಃಕಾರ ಶಿಕಾರ ವಾಕಾರ ಯಕಾರ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಸ್ಸಿಂಗೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬ್ರಹ್ಮತತ್ವಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಷ್ಣುತತ್ವಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ರುದ್ರತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಈಶ್ವರತತ್ವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸದಾಶಿವತತ್ವಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಹಾಶ್ರೀಗುರುತತ್ವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೃಥ್ವಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪ್ಪುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಗ್ನಿತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಕಾಶಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆತ್ಮಂಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣವಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪಾನವಾಯುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವ್ಯಾನವಾಯುವಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಉದಾನವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮಾನವಾಯುವಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಪಂಚವಾಯುವಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಧಾರಚಕ್ರಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಧಿಷಾ*ನಚಕ್ರಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಣಿಪೂರಚಕ್ರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅನಾಹತಚಕ್ರಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶುದ್ಧಿಚಕ್ರಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಆಜ್ಞಾಚಕ್ರಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರ್ದಳಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡುದಳಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶದಳಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶದಳಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿದಳಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರಾಕ್ಷರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡಾಕ್ಷರಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದಶಾಕ್ಷರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶಾಕ್ಷರಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಾಕ್ಷರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿಯಾಕ್ಷರಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಮ. ಎನ್ನ ಕೆಂಪುವರ್ಣಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೀಲವರ್ಣಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕುಂಕುಮವರ್ಣಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೀತವರ್ಣಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ವೇತವರ್ಣಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಣಿಕ್ಯವರ್ಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ರಾಗ್ರಾವಸ್ಥೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಪ್ನಾವಸ್ಥೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸುಷುಪ್ತಾವಸ್ಥೆಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತೂರ್ಯಾವಸ್ಥೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅತೀತಾವಸ್ತೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿರಾವಸ್ಥೆಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಂತಃಕರಣಂಗಳಿಗೆ ಚತುರ್ವಿಧ ಬಿಂದು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅರಿಷಡ್ವರ್ಗಂಗಳಿಗೆ ಷಡ್ವಿಧಧಾತು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದಶವಾಯುಗಳಿಗೆ ದಶವಿದ ಕ್ಷೇತ್ರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶೇಂದ್ರಿಯಂಗಳಿಗೆ ದ್ವಾದಶ ವಿಕೃತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಕಲೆಗೆ ಷೋಡಶಕಲಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರ ಮಮಕಾರಗಳಿಗೆ ವಿದ್ಯಾಲಿಂಗವಾಗಿ ಬಂದನಯ್ಯಬಸವಣ್ಣ. ಎನ್ನ ಭಕ್ತಿಸ್ಥಲಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಹೇಶ್ವರಸ್ಥಲಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಸಾದಿಸ್ಥಲಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಲಿಂಗಿಸ್ಥಳಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶರಣಸ್ಥಲಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಐಕ್ಯಸ್ಥಲಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರಿಯಾಶಕ್ತಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಶಕ್ತಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಚ್ಛಾಶಕ್ತಿಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆದಿಶಕ್ತಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪರಶಕ್ತಿಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ಶಕ್ತಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರದ್ಧೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿಷೆ*ಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅವಧಾನಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅನುಭಾವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆನಂದಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮರಸಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶಬ್ದಕ್ಕೆ ಗುರುವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಪರುಶನಕ್ಕೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ರೂಪಿಂಗೆ ಶಿವಲಾಂಛನವಾಗಿ ಬಂದನಯ್ಯ ಬಸವಣ್ಣ. ಎನ್ನ ರಸಕ್ಕೆ ಶಿವಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ಗಂಧಕ್ಕೆ ಶಿವಾನುಭಾವವಾಗಿ ಬಂದನಯ್ಯ ಬಸವಣ್ಣ ಎನ್ನ ನಾಸಿಕಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜಿಹ್ವೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೇತ್ರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಕ್ಕಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರೋತ್ರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೃದಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಕ್ಕಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಣಿಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾದಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಗುಹ್ಯಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಇಂತೀ ಪಂಚೇಂದ್ರಿಯಂಗಳೆ ಪಂಚಮಹಾಯಜ್ಞ. ಆ ಪಂಚಮಹಾಯಜ್ಞದಲ್ಲಿ ಎನ್ನ ಮನ ಹಾರೈಸಿ ಪೂರೈಸಿ ಒಲಿದು ಕೇಳಿತ್ತು ಮುಟ್ಟಿತ್ತು ನೋಡಿತ್ತು ರುಚಿಸಿತ್ತು ವಾಸಿಸಿತ್ತು. ಎನ್ನ ಮಾನಸ ವಾಚಕ ಕಾಯಕ ಕರಣಂಗಳೆಲ್ಲವು ಪಂಚಮಹಾಯಜ್ಞ ಸೋಂಕಿ ಪಂಚಮಹಾಯಜ್ಞವಪ್ಪುದು ತಪ್ಪದು. ಅದೆಂತೆಂದಡೆ- ಮಹಾಜ್ಯೋತಿಯ ಸೋಂಕಿದ ಉತ್ತಮ ಅಧಮ ತೃಣ ಮೊದಲಾದವೆಲ್ಲವು ಮಹಾ ಅಗ್ನಿಯ ಸೋಂಕಿ ಮಹಾ ಅಗ್ನಿಯಪ್ಪುದು ತಪ್ಪದು. ಇಂತಪ್ಪ ಮಹಾಯಜ್ಞವನೊಳಕೊಂಡಿಪ್ಪ ಮೂಲಾಗ್ನಿಯೇ ಬಸವಣ್ಣ. ಆ ಬಸವಣ್ಣನೆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿಯೇ ಚಿದ್ಬ ್ರಹ್ಮ. ಆ ಚಿದ್ಬ ್ರಹ್ಮವೇ ಬಸವಣ್ಣ. ಆ ಬಸವಣ್ಣನೇ ಎನಗೆ ಅಷ್ಟಾವರಣ ಸ್ವರೂಪನಾದ ಸಚ್ಚಿದಾನಂದ ಬಸವಣ್ಣ. ನಿತ್ಯಪರಿಪೂರ್ಣ ಬಸವಣ್ಣ. ಅಖಂಡಾದ್ವಯ ಬಸವಣ್ಣ. ನಿರಂಜನ ಬಸವಣ್ಣ. ನಿರ್ಮಾಯ ಬಸವಣ್ಣ, ನಿರಾಚರಣ ಬಸವಣ್ಣ. ನಿರ್ಜನಿತ ಬಸವಣ್ಣ. ನಿರ್ಲೇಪ ಬಸವಣ್ಣ. ನಿಃಕಪಟಿ ಬಸವಣ್ಣ. ಅಸಾಧ್ಯ ಸಾಧಕ ಬಸವಣ್ಣ. ಅಭೇದ್ಯ ಭೇದಕ ಬಸವಣ್ಣ. ಚಿತ್ಪ್ರಕಾಶ ಬಸವಣ್ಣ. ಇಂತಪ್ಪ ಬಸವಣ್ಣನ ಅಂಗವೆ ಚಿದಾಕಾಶ. ಆ ಚಿದಾಕಾಶದ ಮಧ್ಯದಲ್ಲಿ ಚಿತ್ಪ್ರಾಣವಾಯು. ಆ ಚಿತ್ಪ್ರಾಣವಾಯುವಿನ ಮಧ್ಯದಲ್ಲಿ ಚಿದಾಗ್ನಿ. ಆ ಚಿದಾಗ್ನಿಯ ಮಧ್ಯದಲ್ಲಿ ಚಿಜ್ಜಲ. ಆ ಚಿಜ್ಜಲದ ಮಧ್ಯದಲ್ಲಿ ಚಿದ್ಭೂಮಿ. ಆ ಚಿದ್ಭೂಮಿಯ ಮಧ್ಯದಲ್ಲಿ ಹೃದಯ. ಆ ಹೃದಯದ ಮಧ್ಯದಲ್ಲಿ ಆಕಾರ ಉಕಾರ ಮಕಾರ ಪ್ರಣಮಪೀಠ. ಆ ಪ್ರಣವಪೀಠದ ಮಧ್ಯದಲ್ಲಿ ಜಂಗಮ ಆ ಜಂಗಮವ ಮಕುಟದಲ್ಲಿ ಶೂನ್ಯಲಿಂಗ. ಆ ಶೂನ್ಯಲಿಂಗದಲ್ಲಿ ಚಿದಂಬರ, ಆ ಚಿದಂಬರರಲ್ಲಿ ಶಿವಶಕ್ತಿ. ಆ ಶಿವಶಕ್ತಿಯಲ್ಲಿ ಪಂಚಶಕ್ತಿ. ಆ ಪಂಚಶಕ್ತಿಯಲ್ಲಿ ಪಂಚನಾದ. ಆ ಪಂಚನಾದದಲ್ಲಿ ಪಂಚಸಾದಾಖ್ಯ. ಆ ಪಂಚಸಾದಾಖ್ಯದಲ್ಲಿ ಈಶ್ವರ. ಆ ಈಶ್ವರನಲ್ಲಿ ಮಾಹೇಶ್ವರ. ಆ ಮಾಹೇಶ್ವರನಲ್ಲಿ ರುದ್ರ. ಆ ರುದ್ರನಲ್ಲಿ ತ್ರಯವಯ ಹಿರಣ್ಯಗರ್ಭ ವಿರಾಟ್‍ಮೂರ್ತಿ. ಇಂತೀ ಎಂಬತ್ತುಮೂರು ಮೂರ್ತಿಗಳೊಳಗೆ ಎಂಬತ್ತೆರಡೆ ಬಸವಣ್ಣನಂಗವೊಂದೆ ಪ್ರಾಣ. ಆ ಪ್ರಾಣ ಚೈತನ್ಯ ಶೂನ್ಯವೆ ಗೋಳಕ ಗೋಮುಖ ವೃತ್ತಾಕಾರವಾಗಿ ಕರಸ್ಥಲದಲ್ಲಿ ಪಿಡಿದು ಆ ಲಿಂಗದ ಆದಿಪ್ರಣಮವೆ ಪೀಠ, ಆಕಾರವೆ ಕಂಠ, ಉಕಾರವೆ ಗೋಮುಖ, ಮಕಾರವೆ ವರ್ತುಳ, ನಾಳ ಬಿಂದು ಮಹಾತೇಜ. ನಾದವೆ ಅಖಂಡಲಿಂಗ. ಇಂತಪ್ಪ ಬಸವಣ್ಣನ ನಿತ್ಯತ್ವವೆ ಲಿಂಗ; ಪೂರ್ಣತ್ವವೆ ಗುರು. ಚಿತ್ಪ್ರಕಾಶವೆ ಜಂಗಮ. ಆನಂದವೆ ಪ್ರಸಾದ, ಚಿದ್ರಸದ ಪ್ರವಾಹವೆ ಪಾದತೀರ್ಥ. ಇಂತಪ್ಪ ಬಸವಣ್ಣ ಅನಂತಕೋಟಿ ಬ್ರಹ್ಮಾಂಡಗಳ ರೋಮಕೂಪದಲ್ಲಿ ಸಂಕಲ್ಪಿಸಿ ಅಲ್ಲಿದ್ದಾತ್ಮಂಗೆ ಸುಜ್ಞಾನ ಕ್ರೀಯನಿತ್ತು ತದ್ ಭೃತ್ಯ ಕರ್ತೃ ತಾನಾಗಿ ಇಷ್ಟಾರ್ಥಸಿದ್ಧಿಯನೀವುತಿಪ್ಪ ಬಸವಣ್ಣನ ಭೃತ್ಯರ ಭೃತ್ಯರ ತದ್‍ಭೃತ್ಯನಾಗಿರಿಸಿ ಬಸವಣ್ಣನ ಪಡುಗ ಪಾದರಕ್ಷೆಯ ಹಿಡಿವ ಭಾಗ್ಯವಯೆನಗೀವುದಯ್ಯ, ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಬಸವಣ್ಣನ ಅರುಹಿಕೊಟ್ಟ ಸಿದ್ಧೇಶ್ವರನ ಶ್ರೀಪಾದಪದ್ಮದಲ್ಲಿ ಭೃಂಗನಾಗಿರ್ದೆನಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
-->