ಅಥವಾ

ಒಟ್ಟು 62 ಕಡೆಗಳಲ್ಲಿ , 18 ವಚನಕಾರರು , 37 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಗನದ ಮೇಲೊಂದು ಸರೋವರ; ಆ ಜಲದಲ್ಲಿ ಮುಖವ ತೊಳೆದು ಹೂವ ಕೊಯ್ವವರೆಲ್ಲರೂ; ದೇವರಿಗೆ ಮುಖಮಜ್ಜನವನೆರೆದು, ಪೂಜಿಸಿ ಹೊಡವಂಟಡೆ ಒಮ್ಮೆ ನಾಯಕನರಕ ತಪ್ಪದಲ್ಲಾ! ದೇವಲೋಕದ ಪ್ರಮಥರ ಲಜ್ಜೆಯನೇನ ಹೇಳುವೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಮಿಂಚುಬುಳು ಒಮ್ಮೆ ಪ್ರಚಂಡ ತೇಜೋಮಯ ಸೂರ್ಯಂಗೆ ಸರಿಯಾದಂದು, ಹರಿ ಹರಂಗೆ ಸರಿಯಹನು. ಕಹಿಬೇವಿನ ಕೊರಡು ಬಾವನ್ನ ಶ್ರೀಗಂಧಕ್ಕೆ ಸರಿಯಾದಂದು, ವಿರಿಂಚಿ ಗಿರೀಶಂಗೆ ಸರಿಯಹನು. ಅಜ್ಞಾನ ಸುಜ್ಞಾನಕ್ಕೆ ಸರಿಯಾದಂದು, ವಜ್ರಪಾಣಿ ಮೊದಲಾದ ದೇವ ದಾನವ ಮಾನವರು ಶೂಲಪಾಣಿಗೆ ಸರಿಯಹರು. ಏನ ಹೇಳುವೆ, ಅಜ್ಞಾನಿ ಜನರ ಅಜ್ಞಾನಪ್ರಬಲ ಚೇಷ್ಟೆಯನು ? ಅದೆಂತೆಂದಡೆ: ಖದ್ಯೋತೋಯದಿ ಚಂಡಭಾನು ಸದೃಶಸ್ತುತ್ಯೋ ಹರಿಃ ಶಂಭುನಾ ಕಿಂ ಕಾಷ್ಠಂ ಹರಿಚಂದನೇನ ಸದೃಶಂ ತುಲ್ಯೋಹಮೀಶೇನ ಚ | ಅಜ್ಞಾನಂ ಯದಿ ವೇದನೇನ ಸದೃಶಂ ದೇವೇನ ತುಲ್ಯೋ ಜನಾ ಕಿಂ ವಕ್ಷ್ಯೇ ಸುರಪುಂಗವಾ ಅಹಮಹೋಮೋಹಸ್ಯದುಶ್ಚೇಷ್ಟಿತಂ ನಿಮಗೆ ಸರಿಯೆಂಬವರಿಗೆ ನರಕವೆ ಗತಿಯಯ್ಯಾ, ಬಸವಪ್ರಿಯ ಕೂಡಲಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ, ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಅಯ್ಯ ! ಕಾರ್ಯನಲ್ಲ ಕಾರಣನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಭೇದಕನಲ್ಲ ಸಾಧಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪಾತಕನಲ್ಲ ಸೂತಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದ್ವೈತನಲ್ಲ ಅದ್ವೈತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕಾಟಕನಲ್ಲ ಕೀಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಎನ್ನವನಲ್ಲ ನಿನ್ನವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಸಂಕಲ್ಪನಲ್ಲ ವಿಕಲ್ಪನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಒಮ್ಮೆ ಆಚಾರದವನಲ್ಲ ಒಮ್ಮೆ ಅನಾಚಾರದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕುಂಟಣಿಯಲ್ಲ ನೆಂಟಣಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದುಶ್ಶೀಲನಲ್ಲ ದುರ್ಮಾರ್ಗಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಜಾತಿಯವನಲ್ಲ ಅಜಾತಿಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಂದು ಉಭಯವಳಿದು ಬೆಳಗುವ ಸಂಗನಬಸವಣ್ಣನ ಉನ್ಮನಾಗ್ರದಲಿ ಹೊಳೆವಾತ ತಾನೆ ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಪ್ರಸಾದವ ಪಡೆದವರೆಂದು ಬದ್ಧಸಂಕಲ್ಪ ದುರ್ವರ್ತನೆಗಳನೇನೆಂಬೆನಯ್ಯಾ! ಗಣಸಮೂಹದಲ್ಲಿ ಸೌಖ್ಯವಿಲ್ಲೆಂದು ಚಿಕ್ಕ ಬಟ್ಟಲಲ್ಲರ್ಪಿಸಿಕೊಂಡು, ಪೂರ್ವ ಬಳಗಗೂಡಿ ಹಂದಿ ನಾಯಿಯಂತೆ ಒಗೆದಾಡಿ ತಿಂಬುವ ಬೆಂದ ನರಕಿಗಳಿಗೆ ಪ್ರಸಾದವೆಲ್ಲಿ ಹುದಯ್ಯಾ? ಪ್ರಸಾದಿ ಒಮ್ಮೆ ಪ್ರಸಾದವ ಸೇವಿಸಿ, ಒಮ್ಮೆ ಉಚ್ಛಿಷ್ಟಕೂಳ ಸೇವಿಸುವನೆ? ಛೀ ಅದೇತರ ನಡೆನುಡಿ ಅತ್ತ ಹೋಗಿ, ನಮ್ಮ ಗುರುನಿರಂಜನ ಚನ್ನಬಸವಲಿಂಗಶರಣರ ತಿಂಥಿಣಿಯ ಸೋಂಕದೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು, ಫಣಿಮಣಿ ಕರ್ಣಕುಂಡಲ ನೋಡವ್ವಾ ; ರುಂಡಮಾಲೆಯ ಕೊರಳವನ ಕಂಡಡೆ ಒಮ್ಮೆ ಬರಹೇಳವ್ವಾ ? ಗೋವಿಂದನ ನಯನ ಉಂಗುಟದ ಮೇಲಿಪ್ಪುದು, ಚೆನ್ನಮಲ್ಲಿಕಾರ್ಜುನದೇವನ ಕುರುಹವ್ವಾ.
--------------
ಅಕ್ಕಮಹಾದೇವಿ
ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ತನುವಿಂಗೆ ತನುವಾಗಿ, ಮನಕ್ಕೆ ಮನವಾಗಿ, ಅರಿವಿಂಗೆ ಅರಿವಾಗಿ, ತೆರಹಿಲ್ಲದಿರ್ದ ಘನವ, ಒಮ್ಮೆ ಆಹ್ವಾನಿಸಿ ನೆನೆದು, ಒಮ್ಮೆ ವಿಸರ್ಜಿಸಿ ಬಿಟ್ಟಿಹೆನೆಂದಡೆ ತನ್ನಳವೇ? ಪರಿಪೂರ್ಣ ಪರಶಿವನು, ಆರಾರ ಭಾವಕಲ್ಪನೆ ಹೇಗೆ ಹೇಗೆತೋರಿತೆಂದಡೆ ತೋರಿದಂತೆ, ಖಂಡಿತನಹನೇ ಆಗಲರಿಯನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
ಒಮ್ಮೆ ನೆಲದಲ್ಲಿ ಬಿತ್ತಿದ ಬಿತ್ತುವ ಕಿತ್ತಿ ಕಿತ್ತಿ ಮತ್ತೆ ಬಿತ್ತುತ್ತ ಹೋದಡೆ, ಆ ಬಿತ್ತು ಮೊಳೆತು ಕಳೆಯೇರಿ ಬೆಳೆದು ಬೆಳಸನೀವ ಪರಿಯಿನ್ನೆಂತೊ, ಮರುಳು ಮಾನವಾ ? ಗುರುವಿತ್ತ ಲಿಂಗವ ತೊರೆ ತೊರೆದು ಮರಳಿ ಮರಳಿ ಧರಿಸಿದಡೆ ಆ ಇಷ್ಟಲಿಂಗವು ಅನಿಷ್ಟವ ಕಳೆದು ಇಷ್ಟಾರ್ಥವನೀವ ಪರಿಯಿನ್ನೆಂತೊ ? ಇದು ಕಾರಣ- ಕೂಡಲಚೆನ್ನಸಂಗಯ್ಯನಲ್ಲಿ ಮುಕ್ತಿಯನರಸುವಡೆ ಅಂಗನಲ್ಲಿ ಹೆರೆಹಿಂಗದೆ ಲಿಂಗವ ಧರಿಸಬೇಕು
--------------
ಚನ್ನಬಸವಣ್ಣ
ವಾಸಿ ವಾಸಿ ಗುರುಕ್ರಿಯೆಯ ಹಿಡಿದಡೆಯೂ ವಾದ ಮಾಣದು; ಬಿಟ್ಟಡೆಯೂ ವಾದ, ಹಿಡಿದಡೆಯೂ ವಾದ. ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೂಟ ಒಮ್ಮೆ ಕಾಲಕೂಟ, ಒಮ್ಮೆ ಅಮೃತದ ನೋಟ, ಕೇಳಾ ಕಿನ್ನರಯ್ಯಾ.
--------------
ಸಿದ್ಧರಾಮೇಶ್ವರ
ಆದಿ ಅನಾದಿಯಿಲ್ಲದತ್ತಣ ದೂರಕ್ಕೆ ದೂರದಲ್ಲಿ ಭಾವಕ್ಕೆ ನಿರ್ಭಾವಕ್ಕೆ ಬಾರದಿರ್ದ ನಿಷ್ಕಳಂಕ ಪರಬ್ರಹ್ಮವೇ ಮುನ್ನ ನೀನು ಶಾಖೆದೋರುವಲ್ಲಿ ನಿನ್ನೊಳಂಕುರಿಸಿ ನಾನು ತಾಮಸ ಮುಸುಂಕಿ ಜನನ ಮರಣಕ್ಕೊಳಗಾಗಿ ಚೌರಾಶಿ ಎಂಬತ್ತುನಾಲ್ಕು ಲಕ್ಷ ಪ್ರಾಣಿಗಳ ಗರ್ಭದಿಂದ ಬಂದು ಬಂದು ಒಮ್ಮೆ ಮಾನವನಪ್ಪಂದಿಗೆ ನಾನುಂಡು ಮೊಲೆಹಾಲು ಸಪ್ತಸಮುದ್ರಕ್ಕೆ ಸರಿಯಿಲ್ಲವಯ್ಯ. ಇಂತಪ್ಪ ಮಾನವ ಜನ್ಮದಲ್ಲಿ ಬಂದ ಬಂದುದು ಗಣಿತಕ್ಕೆ ಬಾರದಯ್ಯ. ಈ ಜನ್ಮದಲ್ಲಿ ಪಿಂಡೋತ್ಪತ್ತಿಯಲ್ಲಿಯೇ ಶರಣಸತಿ ಲಿಂಗಪತಿಯೆಂಬ ಜ್ಞಾನ ತಲೆದೋರಿ ಶರಣವೆಣ್ಣಾಗಿ ಹುಟ್ಟಿದೆನಯ್ಯ. ಎನಗೆ ನಿನ್ನ ಬಯಕೆಯೆಂಬ ಸಿಂಗಾರದ ಸಿರಿಮುಡಿಯಾಯಿತು. ಎನಗೆ ನಿನ್ನ ನೋಡುವೆನೆಂಬ ಮುಗುಳ್ಮೊಲೆ ಮೂಡಿದವು. ಎನಗೆ ನಿನ್ನೊಳು ನುಡಿಯಬೇಕೆಂಬ ಉರವಣೆಯ ಸಂಪದದ ಜವ್ವನ ಕುಡಿವರಿಯಿತ್ತು. ಎನಗೆ ನಿನ್ನನೊಲಿಸಬೇಕೆಂಬ ಸಂಭ್ರಮದ ಕಾಂಚೀಧಾಮ ಕಟಿಸೂತ್ರ ನೇವುರ ನಿಡುಗೊಂಡೆಯವೆಂಬಾಭರಣ ಅನುಲೇಪನ ವಸ್ತ್ರಂಗಳೆನಗೆ ಅಲಂಕಾರವಾಯಿತ್ತು. ಭಕ್ತಿಯೆಂಬ ವಿರಹಾಗ್ನಿ ಎನ್ನ ಹೃದಯಕಮಲದಲ್ಲಿ ಬೆಳೆದು ಬೀದಿವರಿದು ನಿಂತಲ್ಲಿ ನಿಲಲೀಸದಯ್ಯ. ಕುಳಿತಲ್ಲಿ ಕುಳ್ಳಿರಲೀಸದಯ್ಯ. ಮನ ನಿಂದಲ್ಲಿ ಮನೋಹರವಪ್ಪುದಯ್ಯ. ಅಂಗ ಮನ ಪ್ರಾಣ ನೇತ್ರ ಚಿತ್ತಂಗಳೊಳು ಪಂಚಮುಖವೆಂಬ ಪಂಚಬಾಣಂಗಳು ನೆಟ್ಟವಯ್ಯ. ನಾನು ಧರೆಯೊಳುಳಿವುದರಿದು. ಪ್ರೇಮದಿಂ ಬಂದು ಕಣ್ದುಂಬಿ ನೋಡಿ ಮನವೊಲಿದು ಮಾತಾಡಿ ಕರುಣದಿಂ ಕೈವಿಡಿದು ಅಕ್ಕರಿಂದಾಲಂಗಿಸಿ ದಿಟ್ಟಿಸಿ ಬೊಟ್ಟಾಡಿ ಲಲ್ಲೆವಾತಿಂ ಗಲ್ಲವ ಪಿಡಿದು ಪುಷ್ಪ ಪರಿಮಳದಂತೆ ನಾನು ನೀನುಭಯವಿಲ್ಲದಂತೆ ಕೂಡೆನ್ನ ಪ್ರಾಣೇಶನೇ. ಕೂಡಿದಿರ್ದೊಡೆ ಗಲ್ಲವ ಪಿಡಿ. ಪಿಡಿಯದಿರ್ದೊಡೆ ಬೊಟ್ಟಾಡು. ಬೊಟ್ಟಾಡದಿರ್ದೊಡೆ ಆಲಂಗಿಸು. ಆಲಂಗಿಸದಿರ್ದೊಡೆ ಕೈವಿಡಿ. ಕೈವಿಡಿಯದಿರ್ದೊಡೆ ಮಾತಾಡು. ಮಾತಾಡದಿರ್ದೊಡೆ ನೋಡು. ನೋಡದಿರ್ದೊಡೆ ಬಾ. ಬಾರದಿರ್ದೊಡೆ ಪ್ರಮಥಗಣಂಗಳೊಡನೆನ್ನವಳೆಂದು ನುಡಿ. ನುಡಿಯದಿರ್ದೊಡೆ ನಿನ್ನ ಮನದಲ್ಲಿ ನನ್ನವಳೆಂದು ಭಾವಿಸು. ಭಾವಿಸದಿರ್ದೊಡೆ ಪುಣ್ಯ ಕಣ್ದೆರೆಯದು. ಕರ್ಮ ಕಾಂತಿಯಪ್ಪುದು. ಕಾಮ ಕೈದುಗೊಂಬ, ಕಾಲ ಕಲಿಯಪ್ಪ. ಭವಕ್ಕೆ ಬಲ್ಮೆ ದೊರೆವುದು. ಇಂತೀ ಐವರು ಎನಗೆ ಅವಾಂತರದೊಳಗಾದ ಹಗೆಗಳಯ್ಯ, ಇವರೆನ್ನ ತಿಂದುತೇಗಿ ಹಿಂಡಿ ಹಿಪ್ಪೆಯಮಾಡಿ ನುಂಗಿ ಉಗುಳ್ದು ಹಿಂದಣ ಬಟ್ಟೆಗೆ ನೂಂಕುತಿಪ್ಪರಯ್ಯ. ಹೊಗಲಂಜುವೆನಯ್ಯ. ಹೋದರೆ ಚಂದ್ರಸೂರ್ಯಾದಿಗಳುಳ್ಳನಕ್ಕ ನಿನ್ನ ನೆನವ ಮನಕ್ಕೆ ನಿನ್ನ ಕೊಂಡಾಡುವ ಬಾಯ್ಗೆ ನಿನ್ನ ನೋಡುವ ಕಂಗಳಿಗೆ ಸೆರೆ ಸಂಕಲೆಯಪ್ಪುದಯ್ಯ. ಇಂತಿವಂ ತಿಳಿದು ನಿನ್ನ ಮನದೊಳು ನನ್ನವಳೆಂದರೆ ದಿವಾರಾತ್ರೆಯುಳ್ಳನ್ನಬರ ಎನ್ನ ಮನ ಜಿಹ್ವೆ ನೇತ್ರಂಗಳಿಗೆ ಬಂಧನಗಳೆಂಬಿವು ಮುಂಗೆಡುವುವಯ್ಯ. ನಿನ್ನನು ನೆನೆನೆನೆದು ನನ್ನ ಮನ ಬೀಗಿ ಬೆಳೆದು ತಳಿರಾಗಿ ಹೂ ಮಿಡಿಗೊಂಬುದಯ್ಯ. ನಿನ್ನ ಹಾಡಿ ಹಾಡಿ ನನ್ನ ಜಿಹ್ವೆ ಅಮೃತಸಾಗರದೊಳೋಲಾಡುತ್ತಿಪ್ಪುದಯ್ಯ. ನಿನ್ನಂ ನೋಡಿ ನೋಡಿ ಕಂಗಳು ನಿಜಮೋಕ್ಷಮಂ ಪಡೆವುವಯ್ಯ. ನಾನು ಈರೇಳು ಲೋಕಕ್ಕೆ ಬರುವ ಹಾದಿ ಹಾಳಾಗಿಪ್ಪುದಯ್ಯ. ಶತ್ರುಗಳೆನಗೆ ಮಿತ್ರರಪ್ಪರಯ್ಯ. ಭವದ ಬಳ್ಳಿ ಅಳಿವುದು. ಕಾಲಿನ ಕಲಿತನ ಕೆಡುವುದು. ಕಾಮನ ಕೈದು ಖಂಡಿಸುವುದು. ಕರ್ಮದ ಕಾಂತಿ ಕರಗುವುದು. ಪುಣ್ಯದ ಕಣ್ಣು ಬಣ್ಣಗೆಡುವುದಯ್ಯ. ನಿನಗೊಲಿದವರ ನಿನ್ನಂತೆ ಮಾಡು ಕೃಪಾಕರನೆ. ನಿನಗೆ ಮೆಚ್ಚಿದೆನಯ್ಯ. ನಿನ್ನ ಮೆಚ್ಚಿಸಿಕೊಳ್ಳಲರಿಯದ ಮುಗ್ಧವೆಣ್ಣಿನ ಪತಿಭಕ್ತಿಯಂ ಸಾಧಿಸು. ಎನ್ನವಸ್ಥೆಯಂ ಲಾಲಿಸು, ನಿನ್ನ ಶ್ರೀಪಾದಪದ್ಮದೊಳಗೆನ್ನನೊಡಗೂಡಿಸು. ಎನ್ನ ಬಿನ್ನಪಮಂ ಲಾಲಿಸು, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ತನು ಉಂಟೆಂದಡೆ ಪಾಶಬದ್ಧ, ಮನ ಉಂಟೆಂದಡೆ ಭವಕ್ಕೆ ಬೀಜ. ಅರಿವ ನುಡಿದು ಕೆಟ್ಟೆನೆಂದರೆ ಅದೇ ಅಜ್ಞಾನ. ಭಾವದಲ್ಲಿ ಸಿಲುಕಿದೆನೆಂಬ ಮಾತು ಬಯಲ ಭ್ರಮೆ ನೋಡಾ. ಒಮ್ಮೆ ಕಂಡೆ, ಒಮ್ಮೆ ಕಾಣೆ, ಒಮ್ಮೆ ಕೂಡಿದೆ, ಒಮ್ಮೆ ಅಗಲಿದೆ ಎಂದಡೆ ಕರ್ಮ ಬೆಂಬತ್ತಿ ಬಿಡದು. ನಿನ್ನೊಳಗೆ ನೀ ತಿಳಿದುನೋಡಲು ಭಿನ್ನವುಂಟೆ ? ಗುಹೇಶ್ವರಲಿಂಗವನರಿವಡೆ ನೀನೆಂದೇ ತಿಳಿದು ನೋಡಾ ಮರುಳೆ ?
--------------
ಅಲ್ಲಮಪ್ರಭುದೇವರು
ಅಂಡಜ ಮುಗ್ಧೆಯ ಮಕ್ಕಳಿರಾ, ಕೆಂಡದ ಮಳೆ ಕರೆವಲ್ಲಿ ನಿಮ್ಮ ಹಿಂಡಿರು ಹಳುಹೊಕ್ಕು ಹೋದಿರಲ್ಲಾ! ಜುಗಮವೆಂಬುದಕ್ಕೆ ನಾಚಿರಿ. ನಿಮ್ಮ ಕಂಗಳ ಹಿಂಡಿರ ತಿಂಬಳೆಂಬುದನರಿಯಿರಿ. ಅವಳು ಒಮ್ಮೆ ತಿಂಬಳು ಒಮ್ಮೆ ಕರುಣಿಸಿ ಬಿಡುವಳು. ಅವಳು ತಿಂದು ತಿಂದು ಉಗುಳುವ ಬಾಯೊಳಗಣದೆಲ್ಲಾಜಂಗಮವೆ? ಲೋಕವೆಲ್ಲಾ ಅವಳು. ಅವಳು ವಿರಹಿತವಾದ ಜಂಗಮವಾರೈ ಬಸವಣ್ಣ? ಅವಳು ವಿರಹಿತವಾದ ಭಕ್ತರಾರೈ ಬಸವಣ್ಣ? ಅವಳ ಮಕ್ಕಳು ನಿನ್ನ ಕಯ್ಯಲ್ಲಿ ಆರಾಧಿಸಿಕೊಂಬ ಜಂಗಮ ಕಾಣೈ ಬಸವಣ್ಣಾ! ಅವಳು ವಿರಹಿತವಾದ ಚಿಕ್ಕಯ್ಯಪ್ರಿಯ ಸಿದ್ಧಲಿಂಗನಲ್ಲದಿಲ್ಲ,ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ಪಾತಕ ಮಹಾಪಾತಕವ ಮಾಡಿದವನು ಸದ್ಭಕ್ತರ ಮನೆಗೆ ಹೋಗಿ, ಅವರೊಕ್ಕ ಪ್ರಸಾದವನಾಯ್ದುಂಡಡೆ, ಸಕಲ ಬ್ರಹ್ಮಹತ್ಯಾದಿ ಪಾತಕ ಪರಿಹಾರ. ಒಮ್ಮೆ ಬೇಡಿಕೊಂಡುಂಡಡೆ ! ಪಾತಕೇ ಸಮನುಪ್ರಾಪ್ತೇ ಶಿವಭಕ್ತಗೃಹಂ ವ್ರಜೇತ್ ಯಾಚಯೇದನ್ನಮಮೃತಂ ತದಲಾಭೇ ಜಲಂ ಪಿಬೇತ್ ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರಿಗೆ ನಮೋ ನಮೋ ಎಂಬೆನು. 470
--------------
ಬಸವಣ್ಣ
ಒಮ್ಮೆ ಶ್ರೀಗುರುವಿನ ಚರಣವ ನೆನೆಯಲೊಡನೆ ಭವಬಂಧನ ಬಿಡುವುದು. ಗುರುವೇ ಶರಣು ಗುರುಲಿಂಗವೇ ಶರಣು ಹರಿಬ್ರಹ್ಮಾದಿಗಳಿಗಗೋಚರ ಕೂಡಲಚೆನ್ನಸಂಗನ ತೋರಿದ ಗುರುವೇ ಶರಣು.
--------------
ಚನ್ನಬಸವಣ್ಣ
ಇನ್ನಷ್ಟು ... -->