ಅಥವಾ

ಒಟ್ಟು 72 ಕಡೆಗಳಲ್ಲಿ , 29 ವಚನಕಾರರು , 65 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗಲಿಂಗ ಸಹವಾಗಿ, ಆತ್ಮನರಿವು ಸಹವಾಗಿ, ಇಷ್ಟಪದಾರ್ಥವ ಇಷ್ಟ ಲಿಂಗಸಹವಾಗಿ, ರುಚಿಪದಾರ್ಥವ ಆತ್ಮಲಿಂಗಸಹವಾಗಿ, ರಸ ಗಂಧ ರೂಪ ಶಬ್ದ ಸ್ಪರ್ಶ ಪಂಚೇಂದ್ರಿಯಗಳಲ್ಲಿ ದೃಷ್ಟಪದಾರ್ಥವ ಇಷ್ಟಲಿಂಗಸಹವಾಗಿ, ಸ್ಥೂಲ ಸೂಕ್ಷ್ಮ ಕಾರಣದಲ್ಲಿ ಒಳಗು ಹೊರಗು ಸಹವಾಗಿ, ಅಳಿವು ಉಳಿವು ಸಹವಾಗಿ, ಕಾಬುದು ಕಾಣಿಸಿಕೊಂಬುದು ಸಹವಾಗಿ, ರಸವ ಕೊಂಡವನಂತೆ,ಅಸಿಯ ಮೊನೆ ಹರಿದಲ್ಲಿ ರಸ ಬಂದು ನಿಂತಂತೆ, ಎಲ್ಲಿ ಅರ್ಪಿತಕ್ಕೆ ಅಲ್ಲಿ ವಸ್ತು ಸಹವಾಗಿ ಎಲ್ಲಾ ಎಡೆಯಲ್ಲಿ ಪರಿಪೂರ್ಣ ಸಹವಾಗಿ, ಇಪ್ಪುದು ಸಹಭೋಜನಸ್ಥಲ. ಹೀಗಲ್ಲದೆ ಓಗರ ಮೇಲೋಗರವ ಲಾಗುಲಾಗಿಗೆ ತೋರುತ್ತ ಸಕಲಸಂಸಾರದ ಸಾಗರದಲ್ಲಿ ಮುಳುಗುತ್ತ, ಮರವೆ ಅಜ್ಞಾನದಲ್ಲಿ ಮರಳಿ ತಿರುಗುತ್ತ ನಾನಾವಿಕಾರತ್ರಯಗಳಿಂದ ಹುಟ್ಟುತ್ತ ಸಾವುತ್ತ, ಮತ್ತೆ ಸಾವಧಾನ ಸಹಭೋಜನವೆಂದಡೆ ನಾಚಿತ್ತು ಎನ್ನ ಮನ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಉಭಯವನಳಿದು ಏಕವಾದುದು ಸಹಭೋಜನಸ್ಥಲ.
--------------
ಅಕ್ಕಮ್ಮ
ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ, ಆ ಜಂಗಮದರಿವು ಅಪ್ಪುವಾಗಿ, ಆ ಸುಭೂಮಿಯ ಬೀಜದ ಮೇಲೆ ಸುರಿಯೆ, ಆ ಭೂಮಿ ಶೈತ್ಯವಾಗಿ, ಆ ಬೀಜದ ಒಳಗು ಒಡೆದು ಅಂಕುರ ತಲೆದೋರಿ, ಭಕ್ತಿ ಜ್ಞಾನ ವೈರಾಗ್ಯವೆಂಬ ಮರ ಶಾಖೆ ಫಲ ಬಲಿದು ತುರೀಯ ನಿಂದು ಹಣ್ಣಾಯಿತ್ತು. ಆ ಹಣ್ಣ ಮೇಲಣ ಜಡವ ಕಳೆದು ಒಳಗಳ ಬಿತ್ತ ಮುಂದಕ್ಕೆ ಹುಟ್ಟದಂತೆ ಹಾಕಿ ಉಭಯದ ಮಧ್ಯದಲ್ಲಿ ನಿಂದ ಸವಿಸಾರವ ಸದಾಶಿವಮೂರ್ತಿಲಿಂಗಕ್ಕೆ ಅರ್ಪಿತವ ಮಾಡು.
--------------
ಅರಿವಿನ ಮಾರಿತಂದೆ
ತೊಗಲ ಕೈಯಲ್ಲಿ ಶಿಲೆಯ ಲಿಂಗವ ಹಿಡಿದು, ಮಣ್ಣ ಪರಿಯಾಣದಲ್ಲಿ ಓಗರವನಿಕ್ಕಿ, ಲಿಂಗನೈವೇದ್ಯವ ತೋರಿದಡೆ, ಓಗರ ಸವೆದುದಿಲ್ಲ, ನೈವೇದ್ಯದ ರುಚಿಯನರಿದುದಿಲ್ಲ. ಒಳಗು ಶುದ್ಭವಿಲ್ಲದೆ ಮುಟ್ಟಿ ಅರ್ಪಿತವೆಂದಡೆ, ಮೆಚ್ಚುವರೆ ಪ್ರಾಣಲಿಂಗಿಸಂಬಂದ್ಥಿಗಳು. ಉಂಡವನು ಉಂಡಂತೆ ತೇಗುವ ಸಂದಳಿದು, ದ್ವಂದ್ವ ಹಿಂಗಿ ನಿಜವಾರೆಂಬುದ ವಿಚಾರಿಸಿ ಕೊಡುವುದಕ್ಕೆ ಮೊದಲೆ, ಕೊಂಡವರಾರು ಎಂಬುದ ಭಾವಿಸುವುದಕ್ಕೆ ಮೊದಲೆ, ಭಾವನೆಗೆ ಬಂದವರಾರೆಂದು ವಿಚಾರಿಸಿ, ಬೀಜ ನೆರೆ ಬಲಿದು ಪುನರಪಿ ಬಪ್ಪಂತೆ ಲಿಂಗ ತಾನಾಗಿ, ಸಂದೇಹವಿಲ್ಲದೆ ಸೋಂಕುವುದಕ್ಕೆ ಮುನ್ನವೆ ಅರ್ಪಿತ ನಿಂದಾಯಿತ್ತಾಗಿ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಪ್ರಾಣಲಿಂಗ ಸಮರ್ಪಣ.
--------------
ಮೋಳಿಗೆ ಮಾರಯ್ಯ
ಮೂರಂಗುಲದಲ್ಲಿ ಅಳೆದು, ಐದಂಗುಲದಲ್ಲಿ ಪ್ರಮಾಣಿಸಿ ಆರಂಗುಲದಲ್ಲಿ ವಟ್ಟಕ್ಕೆ ಶುದ್ಧವಾಯಿತ್ತು. ಎಂಟರಳತೆ ಹದಿನಾರರ ಚದುರಸ ಮೂವತ್ತೆರಡರ ಮಧ್ಯದಲ್ಲಿ ಹಸ್ತಕಂಬಿಯನಿಕ್ಕಿ ಮೂರರಲ್ಲಿ ಭಾಗಿಸಲಾಗಿ, ಎರಡು ಒಳಗು ನಿಂದಿತ್ತು. ಒಂದು ಹೊರಗಾದ ಕೈಸಾಲೆಯಾಯಿತ್ತು. ಈ ಕೆಲಸವ ಹೊರಗೆ ಬಾಚಿಯಲ್ಲಿ ಸವೆದೆ, ಒಳಗೆ ಉಳಿಯಲ್ಲಿ ಸವೆದೆ. ಇಂತೀ ತೆರನ ತಿಳಿದಡೆ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವಲ್ಲದಿಲ್ಲಾ ಎಂದೆ.
--------------
ಬಾಚಿಕಾಯಕದ ಬಸವಣ್ಣ
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ತನು ಉಂಟೆಂಬ ಭಾವ ಮನದಲ್ಲಿಲ್ಲವಯ್ಯಾ; ಮನ ಉಂಟೆಂಬ ಭಾವ ಅರುಹಿನಲಿಲ್ಲವಯ್ಯಾ; ಅರುಹು ಉಂಟೆಂಬ ಭಾವ ನುಡಿಯೊಳಗಿಲ್ಲವಯ್ಯಾ. ಇಂತೀ ತನು ಮನ ಜಾÐನವೆಂಬ ತ್ರಿವಿಧವು ಏಕಾರ್ಥವಾದ ಬಳಿಕ, ಆವ ತನುವಿನ ಮೇಲೆ ಸ್ವಾಯತವ ಮಾಡುವೆ? ಎನ್ನ ಕಾಯವೆ ಬಸವಣ್ಣನು, ಎನ್ನ ಪ್ರಾಣಲಿಂಗವೆ ಪ್ರಭುದೇವರು, ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಒಳಗು ಹೊರಗೆಂಬುದಿಲ್ಲ ಕಾಣಾ, ಚೆನ್ನಬಸವಣ್ಣಾ.
--------------
ಸಿದ್ಧರಾಮೇಶ್ವರ
ಸಕಲಪದಾರ್ಥ ರಸದ್ರವ್ಯಂಗಳ ಲಿಂಗಕ್ಕೆಂದು ಕಲ್ಪಿಸಿ ಅರ್ಪಿಸುವಲ್ಲಿ ಮೃದು ಕಠಿಣ ಮಧುರ ಸವಿಸಾರಂಗಳ ರುಚಿ ಮುಂತಾದುದ ತನ್ನಂಗವರಿದು ಲಿಂಗವ ಮುಟ್ಟಬೇಕು. ಹಾಗಲ್ಲದೆ ತನ್ನ ಜಿಹ್ವೆಯಲ್ಲಿ ಮಧುರ ಮೃದು ಸವಿಸಾರ ರುಚಿಗಳನರಿದು ಆತ್ಮಲಿಂಗಕ್ಕೆ ಅರ್ಪಿತವೆಂದಲ್ಲಿ ದೃಷ್ಟಲಿಂಗದ ಅರ್ಪಿತ ಇತ್ತಲೆ ಉಳಿಯಿತ್ತು. ರೂಪು ಇಷ್ಟಲಿಂಗಕ್ಕೆಂದು, ರುಚಿ ಪ್ರಾಣಲಿಂಗಕ್ಕೆಂದು ಅರ್ಪಿತದ ಭೇದವನರಿಯದೆ ಇದಿರಿಟ್ಟು ಉಭಯವ ತಮ್ಮ ತಾವೆ ಕಲ್ಪಿಸಿಕೊಂಡು ಮೊದಲಿಗೆ ಮೋಸ, ಲಾಭಕ್ಕದ್ಥೀನವುಂಟೆ? ಸ್ವಯಂಭು ಹೇಮಕ್ಕೆ ಒಳಗು ಹೊರಗುಂಟೆ? ಎಡಬಲದಲ್ಲಿ ಒಂದಕ್ಷಿ ನಷ್ಟವಾದಡೆ ಅದಾರ ಕೇಡೆಂಬರುರಿ ಬಿಡುಮುಡಿಯಲ್ಲಿ ಕ್ರೀನಷ್ಟವಾದಲ್ಲಿ ಅರಿವಿಂಗೆ ಹೀನ. ಅರಿದು ಆಚರಿಸದಿದ್ದಡೆ ಕ್ರೀಗೆ ಒಡಲೆಡೆಯಿಲ್ಲ. ಘಟಾಂಗಕ್ಕೆ ನೋವು ಬಂದಲ್ಲಿ ಆ ಘಟಗೂಡಿಯೆ ಆತ್ಮ ಅನುಭವಿಸುವಂತೆ. ಇಂತೀ ಇಷ್ಟಪ್ರಾಣವೆಂದು ಕಟ್ಟಿಲ್ಲ. ಇಂತೀ ಉಭಯವನರಿಯಬೇಕು ಅರ್ಪಿಸಬೇಕು ಸದ್ಯೋಜಾತಲಿಂಗದಲ್ಲಿ.
--------------
ಅವಸರದ ರೇಕಣ್ಣ
ತಿಲದೊಳಗಣ ತೈಲ, ಫಲದೊಳಗಣ ರಸ, ಹೇಮದೊಳಗಣ ಬಣ್ಣ, ಮಾಂಸದೊಳಗಣ ಕ್ಷೀರ, ಇಕ್ಷುದಂಡದ ಸಾರದ ಸವಿ, ಒಳಗು ಹೊರಗಾಗಿಯಲ್ಲದೆ ಕುಲದ ಸೂತಕ ಬಿಡದು. ಇಷ್ಟದಲ್ಲಿ ತೋರುವ ವಿಶ್ವಾಸ ದೃಷ್ಟವಾಗಿಯಲ್ಲದೆ, ಶಿಲೆಕುಲದ ಸೂತಕ ಬಿಡದು. ಬಿಡುವನ್ನಕ್ಕ ಜ್ಞಾನಶೂನ್ಯವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಕಲ್ಯಾಣವೆಂಬುದಿನ್ನಾರಿಗೆ ಹೊಗಬಹುದು ? ಹೊಗಬಾರದು, ಅಸಾಧ್ಯವಯ್ಯಾ. ಆಸೆ ಆಮಿಷ ಅಳಿದಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು. ಒಳಹೊರಗು ಶುದ್ಧನಾದಂಗಲ್ಲದೆ ಕಲ್ಯಾಣವ ಹೊಗಬಾರದು. ನೀನಾನೆಂಬುದ ಹರಿದಂಗಲ್ಲದೆ ಕಲ್ಯಾಣದ ಒಳಗು ತಿಳಿಯಬಾರದು. ಚೆನ್ನಮಲ್ಲಿಕಾರ್ಜುನಂಗೊಲಿದು ಉಭಯ ಲಜ್ಜೆ ಅಳಿದೆನಾಗಿ ಕಲ್ಯಾಣವಂ ಕಂಡು ನಮೋ ನಮೋ ಎನುತಿದ್ದೆನು.
--------------
ಅಕ್ಕಮಹಾದೇವಿ
ಯೋಗದಲ್ಲಿ ಕಾಬುದು ಶರೀರಕ್ಕೆ ಹೊರಗು. ಕರ್ಮದಲ್ಲಿ ಕಾಬುದು ಸಂಕಲ್ಪಕ್ಕೆ ಹೊರಗು. ಬಟ್ಟಬಯಲಲ್ಲಿ ಕಾಬುದು ಲಕ್ಷಕ್ಕೆ ಹೊರಗು ಉಭಯದ ಸಂದನಳಿದು ನಿಂದಲ್ಲಿ ಸದಾಶಿವಮೂರ್ತಿಲಿಂಗಕ್ಕೆ ಒಳಗು.
--------------
ಅರಿವಿನ ಮಾರಿತಂದೆ
ಆರತವಡಗಿತ್ತೆನ್ನ, ಬಯಕೆ ಸಮನಿಸಿತ್ತೆನ್ನ, ಸಂಕಲ್ಪ ಸಮನಿಸಿತ್ತೆನ್ನ, ಸ್ವಯವು ದೊರೆಕೊಂಡಿತ್ತೆನ್ನ. ನಿಮ್ಮ ನೋಡಿ ಎನ್ನ ಕಂಗೆ ಮಂಗಳಮಯದ ಸುಖಸಂಗವಾಯಿತ್ತು. ಅಯ್ಯಾ, ಒಳಗು ಹೊರಗು, ಹೊರಗೊಳಗೆಂಬುದ ತಿಳಿದು, ಪ್ರಭುವಿನ ಕರುಣದಿಂದ ಕೂಡಲಸಂಗಮದೇವರಲ್ಲಿ ತೆರಹಿಲ್ಲದಿರ್ದೆನು.
--------------
ಬಸವಣ್ಣ
ಜಗದಲ್ಲಿ ಪರಿವೇಷ್ಟಿಸುವ ದೈವಜಾತಿಗಳ ಪರಿಪ್ರಕಾರವ ನೋಡಿರೆ. ಬ್ರಹ್ಮಮೂರ್ತಿ ಗುರುವಾದ, ವಿಷ್ಣುಮೂರ್ತಿ ಲಿಂಗವಾದ, ರುದ್ರಮೂರ್ತಿ ಜಂಗಮವಾದ. ಇಂತೀ ಮೂವರು ಬಂದ ಭವವ ನೋಡಾ. ಇಷ್ಟಲಿಂಗವ ಕೊಟ್ಟು ಕಷ್ಟದ್ರವ್ಯಕ್ಕೆ ಕೈಯಾನುವ ಕಾರಣ, ಗುರುಬ್ರಹ್ಮನ ಕಲ್ಪಿತವ ತೊಡೆದುದಿಲ್ಲ. ಲಿಂಗ ಸರ್ವಾಂಗದಲ್ಲಿ ಸಂಬಂದ್ಥಿಸಿದ ಮತ್ತೆ, ಕಾಯದಲ್ಲಿ ಮೆಟ್ಟಿಸಿಕೊಂಬ ಕಾರಣ, ವಿಷ್ಣುವಿನ ಸ್ಥಿತಿ ಬಿಟ್ಟುದಿಲ್ಲ. ಜಂಗಮ ರುದ್ರನ ಪಾಶವ ಹೊತ್ತ ಕಾರಣ, ರುದ್ರನ ಲಯಕ್ಕೆ ಹೊರಗಾದುದಿಲ್ಲ. ಇಂತಿವರ ಗುರುವೆನಬಾರದು, ಲಿಂಗವೆನಬಾರದು, ಜಂಗಮವೆನಬಾರದು. ಪೂಜಿಸಿದಲ್ಲಿ ಮುಕ್ತಿಯಲ್ಲದೆ ನಿತ್ಯತ್ವವಿಲ್ಲ. ಸತ್ಯವನರಸಿ ಮಾಡುವ ಭಕ್ತ, ನಿತ್ಯಾನಿತ್ಯವ ವಿಚಾರಿಸಬೇಕು. ಸತ್ತು ಗುರುವೆಂಬುದ, ಚಿತ್ತು ಲಿಂಗವೆಂಬುದ, ಆನಂದ ಜಂಗಮವೆಂಬುದ [ಅರಿದು], ಇಂತೀ ತ್ರೈಮೂರ್ತಿಯಾಗಬೇಕು. ತಾನೆ ಗುರುವಾದಡೆ ಬ್ರಹ್ಮಪಾಶವ ಹರಿಯಬೇಕು. ತಾನೆ ಲಿಂಗವಾದಡೆ ಶಕ್ತಿಪಾಶವ ನಿಶ್ಚೆ ೈಸಬೇಕು. ತಾನೆ ಜಂಗಮವಾದಡೆ ರುದ್ರನ ಬಲೆಯ ಹರಿಯಬೇಕು. ಇಂತಿವರೊಳಗಾದವೆಲ್ಲವು ಪ್ರಳಯಕ್ಕೆ ಒಳಗು. ಗುರುವೆಂಬುದು ಬಿಂದು, ಲಿಂಗವೆಂಬುದು ಕಳೆ, ಜಂಗಮವೆಂಬುದು ಕಳಾತೀತ, ಜ್ಞಾನ ಜಂಗಮ. ಆ ವಸ್ತುವಿಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ. ಪಾಶಬದ್ಧನಲ್ಲ, ವೇಷಧಾರಿಯಲ್ಲ, ಗ್ರಾಸಕ್ಕೋಸ್ಕರವಾಗಿ ಭಾಷೆಯ ನುಡಿವನಲ್ಲ. ಈಶಲಾಂಛನವ ಹೊತ್ತು, ಕಾಸಿಂಗೆ ಕಾರ್ಪಣ್ಯಬಡುವನಲ್ಲ. ಮಹದಾಶ್ರಯವನಾಶ್ರಯಿಸಿದನಾಗಿ, ಮನೆಯ ತೂತಜ್ಞಾನಿಗಳ ಮೆಚ್ಚ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ನಿರ್ಲೇಪನಾದ ಶರಣ.
--------------
ಮೋಳಿಗೆ ಮಾರಯ್ಯ
ಕಳೆ ಮೆಳೆಯ ಕಿತ್ತಲ್ಲದೆ ಹೊಲ ಶುದ್ಧವಲ್ಲ. ಹೊಲೆ ಮಲವ ಕಳೆದಲ್ಲದೆ ಮನ ಶುದ್ಧವಲ್ಲ. ಜೀವನ ನೆಲೆಯನರಿದಲ್ಲದೆ ಕಾಯ ಶುದ್ಧವಲ್ಲ. ಕಾಯ ಜೀವದ ಸಂಚವನರಿದಲ್ಲದೆ ಜ್ಞಾನಲೇಪಿಯಲ್ಲ. ಇಂತೀ ಭಾವದ ಭ್ರಮಿತರಿಗೇಕೆ ಜ್ಞಾನದ ಒಳಗು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಉಪೇಕ್ಷೆಯಿಂದ ಉರಿವ ಬೆಳಗು, ಪವನನ ಪ್ರಾಣಕ್ಕೆ ಒಳಗು. ಸ್ವಯಸಂಪರ್ಕದಿಂದ ಒದಗಿದ ಬೆಳಗು, ಅನಲನ ಆಹುತಿಗೆ ಹೊರಗಾಗಿಪ್ಪುದು. ಇಂತೀ ವಾಗದ್ವೈತದ ಮಾತಿನ ಮಾಲೆ, ಸ್ವಯಾದ್ವೈತವ ಮುಟ್ಟಬಲ್ಲುದೆ? ಸ್ಥಲಜ್ಞಾನ, ಯಾಚಕತ್ವ, ಸ್ಥಲಭರಿತನ ಮುಟ್ಟಬಲ್ಲುದೆ? ಇಂತೀ ಉಭಯದೊಳಗನರಿತು, ಇಷ್ಟಕ್ಕೆ ಕ್ರೀ, ಭಾವಕ್ಕೆ ಜ್ಞಾನ ಸಂಪೂರ್ಣವಾದಲ್ಲಿ, ನಿಃಕಳಂಕ ಮಲ್ಲಿಕಾರ್ಜುನ ತಾನು ತಾನೆ.
--------------
ಮೋಳಿಗೆ ಮಾರಯ್ಯ
ಅಂಗವುಂಟಾದಲ್ಲಿ ಲಿಂಗವನರಿಯಬೇಕು. ಲಿಂಗವುಂಟಾದಲ್ಲಿ ಚೇತನ ಭೂತಹಿತವನರಿಯಬೇಕು. ಆ ಅರಿವು ನೆಲೆಗೊಂಡಲ್ಲಿ ಒಳಗು ಹೊರಗ ವಿಚಾರಸಲಿಲ್ಲ. ಮಹಾರ್ಣವ ಬಲುಜಲವನಿಂಬಿಟ್ಟುಕೊಂಡಂತೆ. ಶರಣಸತಿಯಲ್ಲಿ ಲಿಂಗಕುಲದಲ್ಲಿ ಜಂಗಮಪದದಲ್ಲಿ ಗುರುಸ್ಥಲದಲ್ಲಿ ಕಂಗಳ ಮುಂದೆ ಮಹೇಂದ್ರಜಾಲ ನಿಂದಂತೆ, ನಿಂದ ನಿಲವೆ ಸದ್ಭಕ್ತನಿರವು; ಕಾಲಾಂತಕ ಭೀಮೇಶ್ವರಲಿಂಗದ ನಿಜವಾಸದ ಬೆಳಗು.
--------------
ಡಕ್ಕೆಯ ಬೊಮ್ಮಣ್ಣ
ಇನ್ನಷ್ಟು ... -->