ಲಿಂಗಾರ್ಚನೆಯ ಮಾಡುವಾಗ
ಪಾದಪೂಜೆಯ ಮಾಡುವಾಗ
ಪಾದೋದಕ ಪ್ರಸಾದ ಕೊಂಬುವಾಗ
ಭವಿಶಬ್ದ ಕುಶಬ್ದ ಹಿಂಸಾಶಬ್ದ ಹೊಲೆಶಬ್ದ ಹುಸಿಶಬ್ದ
ಹೇಸಿಕೆಶಬ್ದ ವಾಕರಿಕೆಶಬ್ದ
ಇವೆಲ್ಲವ ಪ್ರಸಾದಿಗಳು ವರ್ಜಿಸುವುದು.
ವರ್ಜಿಸದಿರ್ದಡೆ,
ಲಿಂಗಾರ್ಚನೆ ಪಾದಪೂಜೆ ಪಾದೋದಕ ಪ್ರಸಾದ ನಿಷ್ಫಲ.
ಸಾಕ್ಷಿ :
'ಭವಿಶಬ್ದಂ ಕುಶಬ್ದಂ ಚ ಹಿಂಸಾಶಬ್ದಂ ಸತಾಪಕಂ |
ಶ್ವಪಚ್ಯಾನೃತಶಬ್ದಂ ಚ ಕರ್ಕಶೋ ಭಾಂಡಿಕೋಪಿ ವಾ |
ಬೀಭತ್ಸಕಂ ಮಹಾದೇವಿ ಪ್ರಸಾದಂ ಚ ವಿವರ್ಜಯೇತ್ ||'
ಎಂದುದಾಗಿ,
ಪ್ರಸಾದ ಮುಗಿಯುವತನಕ ಭೋಜ್ಯ ಭೋಜ್ಯಕ್ಕೆ
ಪಂಚಾಕ್ಷರಿಯ ಸ್ಮರಿಸುತ್ತ ಸಲಿಸುವುದು.
ಶಿವಸ್ಮರಣೆಯಿಂದ ಸ್ವೀಕರಿಸಿದ್ದು ಮುನ್ನೂರರುವತ್ತು
ವ್ಯಾಧಿ ನಿಲ್ಲದೆ ಓಡುವವು.
ಹೀಗೆ ನಂಬಿಗೆಯುಳ್ಳಡೆ ಪ್ರಸಾದಸಿದ್ಧಿಯಪ್ಪುದು ನೋಡಾ !
ನಮ್ಮ ಬಿಬ್ಬಬಾಚಯ್ಯನವರು ನಂಬಿದ ಕಾರಣದಿಂದ
ಓಗರ ಪ್ರಸಾದವಾಗಿ,
ಎಂಜಲವೆಂದ ವಿಪ್ರರ ಮಂಡೆಯಮೇಲೆ ತಳೆಯಲು ಕೆಂಡವಾಗಿ
ಸುಟ್ಟುದಿಲ್ಲವೆ ಗ್ರಾಮಸಹಿತವಾಗಿ ?
ಮತ್ತೆ, ಮರುಳಶಂಕರದೇವರು ಪ್ರಸಾದದ ಕುಂಡದೊಳಗೆ
ಹನ್ನೆರಡು ವರ್ಷವಿದ್ದು ನಿಜೈಕ್ಯವಾದುದಿಲ್ಲವೆ ?
ಇಂತಪ್ಪ ದೃಷ್ಟವ ಕಂಡು ನಂಬದಿರ್ದಡೆ ಕರ್ಮದ ಫಲವು ;
ನಂಬಿದವರಿಗಿಂಬಾಗಿಪ್ಪನು ನಮ್ಮ ಶಾಂತಕೂಡಸಂಗಮದೇವ.