ಅಥವಾ

ಒಟ್ಟು 33 ಕಡೆಗಳಲ್ಲಿ , 19 ವಚನಕಾರರು , 30 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓದಿ ಬೋದ್ಥಿಸಿ ಇದಿರಿಗೆ ಹೇಳುವನ್ನಬರ ಚದುರತೆಯಲ್ಲವೆ ? ತಾ ತನ್ನನರಿದಲ್ಲಿ, ಆ ಅರಿಕೆ ಇದಿರಿಗೆ ತೋರಿದಲ್ಲಿ ಅದೆ ದೇವತ್ವವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ನಾನಾ ಜನ್ಮಂಗಳ ತಿರುಗಿ ಮಾನವ ಜನ್ಮಕ್ಕೆ ಬಂದು ಲಿಂಗೈಕ್ಯನಾಗಿರುವುದೇ ಚಂದ. ಶಾಸ್ತ್ರಂಗಳ ಓದಿ ಸಂಪಾದನೆಯ ಮಾಡಿ ಹೇಳಿ ಕೇಳುವ ಅಣ್ಣಗಳಿರಾ ಕೃತಯುಗದಲ್ಲಿ ಹನ್ನೆರಡು ಭಾರ ಜ್ಯೋತಿರ್ಲಿಂಗವನು ಬ್ರಹ್ಮರ್ಷಿಗಳು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿ ಆದಿಗಳು ಇರುವನಂತ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೊ. ತ್ರೇತಾಯುಗದಲ್ಲಿ ಲಕ್ಷ ಲಿಂಗವನು ನಮ್ಮ ರವಿಕುಲ ರಘುರಾಮರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿಯಾದಿಗಳು ಇರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡಿದ್ದವು ಕಾಣಿರೋ. ದ್ವಾಪರಯುಗದಲ್ಲಿ ಸೋಮವಂಶಿಕರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿವ ಲಿಂಗವು ಗ್ರಾಮಕ್ಕೆ ಒಂದು ಕಲ್ಕೇಶ್ವರನಾಗಿ ರವಿ ಶಶಿಗಳಿರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕೃತ, ತ್ರೇತಾ, ದ್ವಾಪರ ಇವು ಮೂರು ಯುಗದಲ್ಲಿ ಬ್ರಹ್ಮ ಕ್ಷತ್ರಿಯರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿ, ಇದ್ದ ಲಿಂಗವನು ಅತಿಗಳೆದು ಇಷ್ಟಲಿಂಗಯೆಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನು ಅರ್ಪಿಸಿ, ಹುಟ್ಟಿದ ಮನುಜರೆಲ್ಲ ತಲೆತಲೆಗೊಂದು ಲಿಂಗವನು ಕಟ್ಟಿಕೊಂಡಿದ್ದರೇನಯ್ಯ, ಆ ಲಿಂಗಕ್ಕೆ ನಿಷ್ಕ್ರಿಯವಾಗಲಿಲ್ಲ. ಕಾರ್ಯಕ್ಕೆ ಬಾರದೆ ಅಕಾರ್ಯವಾಗಿ ಹೋಗಿತ್ತು ಕಾಣಿರೋ. ಅದು ಎಂತೆಂದರೆ : ಕೃತಯುಗದಲ್ಲಿ ಹುಟ್ಟಿದ ಮನುಜರು ಸುವರ್ಣಲಿಂಗವನು ಪೂಜೆಯ ಮಾಡಿಪ್ಪರು. ಆ ಸುವರ್ಣವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ತ್ರೇತಾಯುಗದಲ್ಲಿ ಹುಟ್ಟಿದ ಮನುಜರು ಕಾರಪತ್ರದ ಲಿಂಗದ ಪೂಜೆಯ ಮಾಡಲು, ಆ ಕಾರಪತ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಗಿತ್ತು ಕಾಣಿರೋ. ದ್ವಾಪರಯುಗದಲ್ಲಿ ಹುಟ್ಟಿದ ಮನುಜರು ನಾಗತಾಮ್ರದ ಲಿಂಗವನು ಪೂಜೆಯ ಮಾಡಲು ಆ ನಾಗತಾಮ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕಲ್ಲುಲಿಂಗವನು ತಮ್ಮ ಕೈಲ್ಹಿಡಿದುಕೊಂಡು ಪಂಚಮುಖದ ಪರಮೇಶ್ವರದೇವರು ಎಮ್ಮ ಕರಸ್ಥಲಕ್ಕೆ ಬಂದನೆಂದು ಬಿಂಕವನು ಹೇಳುವ ಡೊಂಕುಮನುಜರು ಕಾಯ ಅಸುವಳಿದು ನೆಲಕ್ಕೆ ಬಿದ್ದು ಹೋಗುವಾಗ ಕೈಯಲ್ಲಿ ಕಲ್ಲುಲಿಂಗವು ಭೂಮಿ ಆಸ್ತಿಯನು ಭೂಮಿ ಕೂಡಿ ಹೋಗುವಾಗ ಒಂ ನಮಃಶಿವಾಯ ಎಂಬ ಮಂತ್ರವು ಮರೆತು ಹೋಯಿತು. ಅದ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಪಂಚಾಂಗವ ಬರೆದು ಓದಿ ಮುಹೂರ್ತವ ಹೇಳುವರ ಕಂಡೆ. ಪಂಚಾಂಗವ ಪಿಡಿದು ಮುಹೂರ್ತವ ಕೇಳುವರ ಕಂಡೆ. ಪಂಚಾಂಗದ ಅಕ್ಷರವ ಕಲಿತು ಹೇಳುವರ ಕಂಡೆ. ಆ ಅಕ್ಷರವ ಕಲಿತು ಎಣಿಸುವರ ಕಂಡೆ. ಪಂಚಾಂಗದ ಭೇದವನು ಆರೂ ಅರಿಯರು. ಅರಿಯದೆ ನುಂಗಿ ಅಕ್ಷರವನಡಗಿಸಿ ಮರುಳನಂತೆ ಕಾಯಕವ ಮಾಡುತ್ತಿರ್ಪರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಓದಿ ಓದಿ ವೇದ ವಾದಕ್ಕಿಕ್ಕಿತ್ತು. ಕೇಳೀ ಕೇಳಿ ಶಾಸ್ತ್ರ ಸಂದೇಹಕ್ಕಿಕ್ಕಿತ್ತು. ಅರಿದೆ ಅರಿದೆನೆಂದು ಆಗಮ ಅಗಲಕ್ಕೆ ಹರಿಯಿತ್ತು. ನೀನೆತ್ತ ನಾನೆತ್ತಲೆಂದು_ ಬೊಮ್ಮ ಬಕ್ಕಟ ಬಯಲು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಬ್ಥಿನ್ನವಿಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕೃತಯುಕ ತ್ರೇತಾಯುಗ ದ್ವಾಪರಯುಗ ಕಲಿಯುಗಂಗಳಲ್ಲಿ ಬಸವನೆ ಭಕ್ತ, ಪ್ರಭುವೆ ಜಂಗಮವೆಂಬುದಕ್ಕೆ ಭಾವಭೇದವಿಲ್ಲವೆಂಬುದು ತಪ್ಪದು ನೋಡಯ್ಯಾ. ಕಲಿಯುಗದಲ್ಲಿ ಶಿವಭಕ್ತಿಯನು ಪ್ರಬಲವ ಮಾಡಬೇಕೆಂದು ಮತ್ರ್ಯಲೋಕಕ್ಕೆ ಇಳಿದು, ಶೈವಾಗಮಾಚಾರ್ಯ ಮಂಡಗೆಯ ಮಾದಿರಾಜನ ಸತಿ ಮಾದಾಂಬಿಕೆಯ ಗರ್ಭದಿಂದವತರಿಸಿದ. ಬಸವಣ್ಣನೆಂಬ ನಾಮಕರಣವಂ ಧರಿಸಿ, ಕೂಡಲಸಂಗಮದೇವರ ದಿವ್ಯ ಶ್ರೀಪಾದಪದ್ಮಾರಾಧಕನಾಗಿ, ಮತ್ರ್ಯಕ್ಕೆ ಪ್ರತಿಕೈಲಾಸವೆಂಬ ಕಲ್ಯಾಣಮಂ ಮಾಡಿ, ತನ್ನ ಪರೀಕ್ಷೆಗೆ ಬಿಜ್ಜಳನೆಂಬ ಒರೆಗಲ್ಲ ಮಾಡಿ, ಆ ಸದ್ಭಕ್ತಿ ಬಿನ್ನ[ಹ]ವನು ಒರೆದೊರೆದು ನೋಡುವ ಕೊಂಡೆಯ ಮಂಚಣ್ಣಗಳ ಪುಟ್ಟಿಸಿದ ಬಸವಣ್ಣ. ಕಪ್ಪಡಿಯ ಸಂಗಯ್ಯದೇವರ ಸ್ವಹಸ್ತದಿಂದಲುಪದೇಶಮಂ ಪಡೆದು ಸರ್ವಾಚಾರಸಂಪನ್ನನಾಗಿ ಇರುತ್ತಿರೆ, ಶಿವನಟ್ಟಿದ ನಿರೂಪಮಂ ಓದಿ, ಅರವತ್ತುಕೋಟಿ ವಸ್ತುವಂ ತೆಗೆಸಿ, ಬಿಜ್ಜಳಂಗೆ ದೃಷ್ಟಮಂ ತೋರಿ, ಶಿರಪ್ರಧಾನನಾಗಿ, ಶಿವಾಚಾರ ಶಿರೋಮಣಿಯಾಗಿ, ಏಳುನೂರಯೆಪ್ಪತ್ತು ಅಮರಗಣಂಗಳಿಗೆ ಪ್ರಥಮದಂಡನಾಯಕನಾಗಿ, ಗುರುಲಿಂಗಜಂಗಮಕ್ಕೆ ತನುಮನಧನವಂ ನಿವೇದಿಸಿ, ಅನವರತ ಶಿವಗಣ ತಿಂಥಿಣಿಯೊಳು ಓಡಾಡುತ್ತಿಪ್ಪ ಆ ಬಸವಣ್ಣ, ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜಂಗಮದ ಪಾದೋದಕ ಪ್ರಸಾದದಲ್ಲಿ ನಿಯತನಾಗಿ, ಅವರವರ ನೇಮದಿಚ್ಫೆಗಳು ಸಲಿಸಿ, ಒಲಿದು ಮಾಡುವ ದಾಸೋಹದ ಪರಿಯೆಂತೆಂದಡೆ : ಹಾಲನೇಮದವರು ಹನ್ನೆರಡುಸಾವಿರ. ಘಟ್ಟಿವಾಲ ನೇಮದವರು ಹನ್ನೆರಡುಸಾವಿರ. ಪಂಚಾಮೃತಗಳ ಒಲಿದು ಲಿಂಗಕ್ಕೆ ಸಲಿಸುವ ನೇಮದವರು ಹನ್ನೆರಡುಸಾವಿರ. ಕಟ್ಟುಮೊಸರ ನೇಮದವರು ಹನ್ನೆರಡುಸಾವಿರ. ಘಟ್ಟಿದುಪ್ಪದ ನೇಮದವರು ಆರುಸಾವಿರ. ತಿಳಿದುಪ್ಪದ ನೇಮದವರು ಆರುಸಾವಿರ. ಚಿಲುಮೆಯಗ್ಘವಣಿಯ ನೇಮದವರು ಹನ್ನೆರಡುಸಾವಿರ. ಪರಡಿ ಸಜ್ಜಿಗೆಯ ನೇಮದವರು ಹನ್ನೆರಡುಸಾವಿರ ಕಟ್ಟುಮಂಡಗೆಯ ನೇಮದವರು ಹನ್ನೆರಡುಸಾವಿರ. ಎಣ್ಣೆಹೂರಿಗೆಯ ನೇಮದವರು ಹನ್ನೆರಡುಸಾವಿರ. ವಡೆ ಘಾರಿಗೆಯ ನೇಮದವರು ಹನ್ನೆರಡುಸಾವಿರ. ಹಾಲುಂಡೆ ಲಡ್ಡುಗೆಯ ನೇಮದವರು ಹನ್ನೆರಡುಸಾವಿರ. ತವರಾಜ ಸಕ್ಕರೆಯ ನೇಮದವರು ಹನ್ನೆರಡುಸಾವಿರ. ಷಡುರಸಾಯನದ ನೇಮದವರು ಹನ್ನೆರಡುಸಾವಿರ. ದ್ರಾಕ್ಷೆ ಮಾವು, ಖರ್ಜೂರ, ಹಲಸು, ದಾಳಿಂಬ ಇಕ್ಷುದಂಡ ಕದಳಿ ಮೊದಲಾದ ಫಲದ್ರವ್ಯಂಗಳ ನೇಮದವರು ಹನ್ನೆರಡುಸಾವಿರ. ಸಪ್ಪೆಯ ನೇಮದವರು ಹನ್ನೆರಡುಸಾವಿರ. ಸರ್ವದ್ರವ್ಯಂಗಳ ನೇಮದವರು ಹನ್ನೆರಡುಸಾವಿರ. ಸಮಯಾಚಾರ ಸಹಿತ ಲಿಂಗಾರ್ಚನೆ ಮಾಡುವ ನಿತ್ಯನೇಮಿಗಳು ಹದಿನಾರುಸಾವಿರ. ಇಂತು ಎಡೆಬಿಡುವಿಲ್ಲದೆ ಲಿಂಗಾರ್ಚನೆಯ ಮಾಡುವ ಜಂಗಮ ಲಕ್ಷದ ಮೇಲೆ ತೊಂಬತ್ತಾರು ಸಾವಿರ. ಆ ಬಸವಣ್ಣನ ಸಮಯಾಚಾರದಲ್ಲಿ ಕುಳ್ಳಿರ್ದು, ಲಿಂಗಾರ್ಚನೆಯ ಮಾಡುವ ಸಮಯಾಚಾರಿಗಳು ಮೂವತ್ತಾರು ಸಾವಿರ. ಅಂತು ಎರಡುಲಕ್ಷ ಮೂವತ್ತೆರಡು ಸಾವಿರ ಶಿವಗಣತಿಂಥಿಣಿಗೆ ಒಲಿದು ದಾಸೋಹಮಂ ಮಾಡುತ್ತ, ಪ್ರಸಾದ ಪಾದೋದಕದೊಳೋಲಾಡುತ್ತ, ಸುಖಸಂಕಧಾವಿನೋದದಿಂದ ಭಕ್ತಿಸಾಮ್ರಾಜ್ಯಂಗೆಯ್ವುತ್ತಿರಲು, ಶಿವಭಕ್ತಿಕುಲಕತಿಲಕ ಶಿವಭಕ್ತಿ ಶಿರೋಮಣಿಯೆಂಬ ಚೆನ್ನಬಸವಣ್ಣನವತರಿಸಿ ಶೈವಮಾರ್ಗಮಂ ಬಿಡಿಸಿ, ಪ್ರಾಣಲಿಂಗ ಸಂಬಂಧಮಂ ತೋರಿಸಿ, ಸರ್ವಾಂಗ ಶಿವಲಿಂಗ ಪ್ರಾಣಪ್ರಸಾದ ಭೋಗೋಪಭೋಗದ ಭೇದಮಂ ತೋರಿಸಿ, ದಾಸೋಹದ ನಿರ್ಣಯಮಂ ಬಣ್ಣವಿಟ್ಟು ಬೆಳಗಿ ತೋರಿ, ಪಾದೋದಕ ಪ್ರಸಾದಮಂ ಕೊಳ ಕಲಿಸಿ, ಗುರುಲಿಂಗಜಂಗಮದ ಘನಮಂ ತೋರಿಸಿ, ಶರಣಸತಿ ಲಿಂಗಪತಿಯೆಂಬುದಂ ಸಂಬಂಧಿಸಿ ತೋರಿ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣೈಕ್ಯನೆಂಬ ಷಡುಸ್ಥಲಮಂ ಸರ್ವಾಂಗದೊಳು ಪ್ರತಿಷಿ*ಸಿ ತೋರಿ ಸಲಹಿದ ಚೆನ್ನಬಸವಣ್ಣನ ತನ್ನಲ್ಲಿ ಇಂಬಿಟ್ಟುಕೊಂಡು, ಅಚ್ಚಪ್ರಸಾದಿಯಾಗಿ ಸತ್ಯಪ್ರಸಾದಿಯಾಗಿ ಸಮಯಪ್ರಸಾದಿಯಾಗಿ, ಸಂತೋಷಪ್ರಸಾದಿಯಾಗಿ ಸರ್ವಾಂಗಪ್ರಸಾದಿಯಾಗಿ, ಸಮರಪ್ರಸಾದಿಯಾಗಿ, ನಿರ್ಣಯದಲ್ಲಿ ನಿಷ್ಪನ್ನನಾಗಿ, ನಿಜದಲ್ಲಿ ನಿವಾಸಿಯಾಗಿ, ನಿರಾಳಕ್ಕೆ ನಿರಾಳನಾಗಿ, ಘನದಲ್ಲಿ ಅಗಮ್ಯನಾಗಿ, ಅಖಂಡ ಪರಿಪೂರ್ಣನಾಗಿ, ಉಪಮೆಗೆ ಅನುಪಮನಾಗಿ, ವಾಙ್ಮನಕ್ಕಗೋಚರನಾಗಿ, ಭಾವ ನಿರ್ಭಾವವೆಂಬ ಬಗೆಯ ಬಣ್ಣಕ್ಕೆ ಅತ್ತತ್ತಲೆಂದೆನಿಸಿ ನಿಃಶೂನ್ಯನೆಂದೆನಿಸಿಪ್ಪ ಸಂಗನಬಸವಣ್ಣನ ತೊತ್ತಿನ ತೊತ್ತಿನ ಮರುದೊತ್ತಿನ ಮಗ ನಾನು ಕಾಣಾ ಪ್ರಭುವೆ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಅನುಭಾವಿಗೆ ಅಂಗಶೃಂಗಾರವುಂಟೆ ? ಅನುಭಾವಿಗೆ ಕಾಮಕ್ರೋಧವುಂಟೆ ? ಅನುಭಾವಿಗೆ ನಾಹಂ ಕೋಹಂ ಸೋಹಂ ಎಂಬ ಭ್ರಾಂತಿನ ಭ್ರಮೆಯುಂಟೆ ? ಅನುಭಾವಿಗೆ ನನ್ನವರು ತನ್ನವರೆಂಬ ಗನ್ನಗದಕಿನ ಮಾತುಂಟೆ ? ಅನುಭಾವಿಗಳೆಂಬವರು ಅಲ್ಲಿಗಲ್ಲಿಗೆ ತಮ್ಮ ಅನುಭಾವಂಗಳ ಬೀರುವರೆ ? ಅನುಭಾವಿಗಳ ಪರಿಯ ಹೇಳಿಹೆ ಕೇಳಿರಣ್ಣಾ ; ನೀರಮೇಲಣ ತೆಪ್ಪದಂತೆ, ಸಮುದ್ರದೊಳಗಣ ಬೆಂಗುಂಡಿನಂತೆ ಇರಬಲ್ಲಡೆ ಅನುಭಾವಿಗಳೆಂಬೆನಯ್ಯಾ. ವಚನಂಗಳ ಓದಿ ವಚನಂಗಳ ಕೇಳಿ ಕಂಡ ಕಂಡ ಠಾವಿನಲ್ಲಿ ಬಂಡುಗೆಲೆವ ಜಗಭಂಡರ, ಆತ್ಮತೇಜಕ್ಕೆ ತಿರುಗುವ ವೇಷಧಾರಿಗಳ ಕಂಡು ಅನುಭಾವಿಗಳೆಂದಡೆ ಅಘೋನರಕ ತಪ್ಪದು ಕಾಣಾ, ಅಮುಗೇಶ್ವರಾ.
--------------
ಅಮುಗೆ ರಾಯಮ್ಮ
`ಏಕಜನ್ಮನ್ಯೇವ ವಿದ್ಯಾಪ್ರಾಪ್ತಿರ್ಭವಿಷ್ಯ್ಕತಿ' ಎಂಬ ವಾಕ್ಯವದು ಪುಸಿಯೇನಯ್ಯಾ? ಶಾಸ್ತ್ರವನೋದಿ ಓದಿ ಪಿಶಾಚಿಯಾಗನೆ ಅಂದು ಕಾಶಿಯಲ್ಲಿ ಹರಿದತ್ತನು? ವಾಸಿದಲ್ಲಿ ಫಲವೇನಯ್ಯಾ, ವಾದಿಸಬೇಡ! ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನಲಿಂಗವ ಪೂಜಿಸದೆ ವ್ಯರ್ಥ ದಿನಗಳೆಯಬೇಡ. |
--------------
ಸಿದ್ಧರಾಮೇಶ್ವರ
ಯೋಗ ಶಿವಯೋಗವೆಂಬರು, ಯೋಗದ ಹೊಲಬನಾರು ಬಲ್ಲರಯ್ಯಾ ? ಹೃದಯಕಮಲ ಮಧ್ಯದಲ್ಲಿ ಭ್ರಮಿಸುವನ ಕಳೆದಲ್ಲದೆ ಯೋಗವೆಂತಪ್ಪುದೊ ? ಐವತ್ತೆರಡಕ್ಷರದ ಲಿಪಿಯ ಓದಿ ನೋಡಿ ತಿಳಿದಲ್ಲದೆ ಯೋಗವೆಂತಪ್ಪುದೊ ? ಆರುನೆಲೆಯ ಮೇಲಿಪ್ಪ ಮಣಿಮಾಡದೊಳಗೆ ಇರಬಲ್ಲಡೆ ಅದು ಯೋಗ ! `ಸ್ಯೋಹಂ' ಎಂಬಲ್ಲಿ ಸುಳುಹಡಗಿ ಮನ ನಷ್ಟವಾಗಿರಬಲ್ಲ ಕಾರಣ, ಗುಹೇಶ್ವರಲಿಂಗದಲ್ಲಿ ನೀನು ಸ್ವತಂತ್ರಧೀರನೆಂಬುದು ಕಾಣಬಂದಿತ್ತು ನೋಡಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ನವಿಲಾಡಿತೆಂದು ಕೆಂಬೋತ ಪಕ್ಕವ ತರಕೊಂಡಂತೆ ಹುಲಿಯ ಬಣ್ಣಕ್ಕೆ ನರಿ ಮೈಯ ಸುಟ್ಟುಕೊಂಡಂತೆ ಕೋಗಿಲೆ ಸ್ವರಗೆಯ್ದದೆಂದು ಕಾಗೆ ಕರೆದಂತೆ ಲಿಂಗನಿಷಾ*ಂಗಿ ವಚನಹಾಡಿದರೆ ಒಪ್ಪುವನಲ್ಲದೆ ನಿಷೆ*ಹೀನರು ಓದಿ ಹಾಡಿದರೆ ನಳ್ಳಿಗುಳ್ಳೆಯ ತಿಂದ ನರಿ ಹಳ್ಳದ ತಡಿಯಲ್ಲಿ ಬಳ್ಳಿಟ್ಟು ಬಗುಳಿದಂತೆ ಏನೆಂದು ಪಾಟಿ ಮಾಡರಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹರನ ಕೊರಳಲಿಪ್ಪ ಕರೋಟಿಮಾಲೆಯ ಶಿರದ ಲಿಖಿತವ ಕಂಡು, ಮರುಳ ತಂಡಗಳು ಓದಿ ನೋಡಲು, ಇವನಜ ಇವ ಹರಿ ಇವ ಸುರಪತಿ ಇವ ಧರಣೇಂದ್ರ ಇವನಂತಕನೆಂದು ಹರುಷದಿಂದ ಸರಸವಾಡಿತ ಕಂಡು, ಹರ ಮುಕುಳಿತನಾಗಿ ನಕ್ಕ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಭಕ್ತನ ಹಾಡಿ ಬೇಡುವಾತ ಜಂಗಮವಲ್ಲ. ಭಕ್ತನ ಹೊಗಳಿ ಬೇಡುವಾತ ಜಂಗಮವಲ್ಲ. ಭಕ್ತನ ಓದಿ ಬೇಡುವಾತ ಜಂಗಮವಲ್ಲ. ಭಕ್ತನ ಕೊಂಡಾಡಿ ಬೇಡುವಾತ ಜಂಗಮವಲ್ಲ. ಭಕ್ತನ ಸ್ತುತಿಸಿ ಬೇಡುವಾತ ಜಂಗಮವಲ್ಲ. ಭಕ್ತನ ಕೈವಾರಿಸಿ ಬೇಡುವಾತ ಜಂಗಮವಲ್ಲ. ಕೂಡಲಚೆನ್ನಸಂಗಮದೇವರಲ್ಲಿ ಬೇಡದೆ ಮಾಡುವನೆ ಭಕ್ತ, ಬೇಡದೆ ಮಾಡಿಸಿಕೊಂಬಾತನೆ ಜಂಗಮ.
--------------
ಚನ್ನಬಸವಣ್ಣ
ವೇದ ಶಾಸ್ತ್ರ ಆಗಮ ಪುರಾಣ ತರ್ಕ ವ್ಯಾಕರಣ ಇತಿಹಾಸಂಗಳ ಓದಿ ಕೇಳಿ ಹೇಳುವಾತ ಜಾಣನೆ ? ಅಲ್ಲಲ್ಲ. ಜಾತಿಗೊಂದು ಮಾತು ಕಲಿತು ಸರ್ವರಿಗೆ ನೀತಿ ಹೇಳುವಾತ ಜಾಣನೇ ? ಅಲ್ಲಲ್ಲ. ಮತ್ತಾರು ಜಾಣರೆಂದಡೆ : ಮತ್ತಮತಿಯೆಂಬ ಕತ್ತಲೆಯ ಕಳೆದು, ತಥ್ಯಮಿಥ್ಯ ರಾಗದ್ವೇಷವನಳಿದು ನಿತ್ಯ ಲಿಂಗದಲ್ಲಿ ಚಿತ್ತವಡಗಿರ್ಪ ಚಿನ್ಮಯಶರಣನೇ ಜಾಣನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶಿವ ಶಿವ! ಮಾಹೇಶ್ವರರ ಮಹಾತ್ಮೆಯನೇನೆಂದುಪಮಿಸಬಹುದಯ್ಯಾ, ವಾಙ್ಮನೋತೀತರು. ಕೋಟಿ ಕೋಟಿಯಾಯುಷ್ಯ ಕೋಟಿ ಕೋಟಿ ಜಿಹ್ವೆಯುಳ್ಳರೆಯೂ ಸ್ತುತಿಸಲರಿಯದು. `ಶಂಭೋರ್ಮಾಹಾತ್ಮ್ಯಮಣುಪ್ರಮಾಣಜಾನಂತಃ ಎಂದು ಲಿಂಗದ ಮಹಾತ್ಮೆಯನು ಅಣುಪ್ರಮಾಣವೂ ಅರಿಯಬಾರದೆಂದಡೆ ಲಿಂಗವಂತರ ಮಹಾತ್ಮೆಯನೇನೆಂದುಪಮಿಸಬಹುದಯ್ಯಾ ! ಲಿಂಗಾಲಿಂಗೀ ಮಹಜ್ಜೀವೀ ಲಿಂಗಾಲಿಂಗೀ ತು ರಕ್ಷಕಃ ಲಿಂಗಾಲಿಂಗೀ ಮಮ ಸ್ವಾಮೀ ಲಿಂಗಾಲಿಂಗೀ ಮನೋಹರಃ ಈ ಪರಿ ದೇಹಲಿಂಗಕ್ಕೆ ಪ್ರಾಣಲಿಂಗಕ್ಕೆ ತಾನಾಗಿಹ ಲಿಂಗವಂತನ ಮಹಾತ್ಮೆಯನೇನೆಂದುಪಮಿಸಬಹುದಯ್ಯಾ ! ಶಿವನೇ ಬಲ್ಲ, ಶಿವನೇ ಬಲ್ಲ. ಮದ್ಭಕ್ತಜನಮಾಹಾತ್ಮ್ಯಂ ಕೋ ವಾ ಜಾನಾತಿ ತತ್ತ್ವತಃ ಜಾನೇ[s]ಹಂ ತ್ವಂ ತು ಜಾನಾಸಿ ನಂದೀ ಜಾನಾತಿ ವಾ ಗುಹಃ ಶಿವನು, ನಂದೀಶ್ವರ, ಗುಹನು ಇವರೇ ಬಲ್ಲರು. ಸಜ್ಜನಶುದ್ಧಶಿವಾಚಾರಸಂಪನ್ನರಪ್ಪ ನಮ್ಮ ಸದ್ಭಕ್ತರೇ ಬಲ್ಲರು. ಸಾಮಾನ್ಯ ತರದ ದೇವದಾನವ ಮಾನವರಿಗೆಯೂ ಅರಿಯಬಾರದು. ಅದೆಂತೆನಲು ಕೇಳಿರೆ: ಬ್ರಹ್ಮ ವಿಷ್ಣು ಇಂದ್ರ ಚಂದ್ರ ರವಿ ಕಾಮ ದಕ್ಷ ಮೊದಲಾದ ದೇವಜಾತಿಗಳು, ತಾರಕ ರಾವಣಾದಿ ದಾನವರು, ವ್ಯಾಸಋಷಿಯರುಗಳು, ದಕ್ಷಾಧ್ವರಕ್ಕೆ ಬಂದ ಋಷಿಗಳನೇಕರು ವೇದಶಾಸ್ತ್ರ ಪುರಾಣ ಆಗಮಾದಿಯಾದ ಅಷ್ಟಾದಶ ವಿದ್ಯಂಗಳನೂ ಓದಿ ಕೇಳಿ ತಮ್ಮನು ಕೇಳಿದವರಿಗೆಯೂ ಹೇಳಿ, ಸರ್ವಜ್ಞರೆನಿಸಿಕೊಂಡರು. ಮಹದೈಶ್ವರ್ಯಸಂಪನ್ನರಾಗಿ ಮದಂಗಳು ಹೆಚ್ಚಿ ಶಿವನನು ಮರೆದರು. `ಅಹಂ ಬ್ರಹ್ಮ' ಎಂದು ಪರಧನ ಪರಸ್ತ್ರೀಯರಿಗೆ ಅಳುಪಿದರು. ಶಿವಮಾಹೇಶ್ವರನಿಂದೆಯಂ ಮಾಡಿದರು. ಈ ಪರಿಯಲೂ ತಪ್ಪಿ ನಡೆದು, ತಪ್ಪಿ ನುಡಿದು ಹಸ್ತಚ್ಛೇದನ ಶಿರಚ್ಛೇದನವ ಮಾಡಿಕೊಂಡು ಹೋದರು. ಅನೇಕ ಪರಿಯಲೂ ಭಂಗಿತರಾದರು. ಮಾನಹಾನಿ ಹೊಂದಿದರು, ಕಷ್ಟಜನ್ಮಂಗಳಲ್ಲಿ ಜನಿಸಿದರು. ಮರಳಿ ಮತ್ತೆ ಅರಿದು ಶಿವಾರಾಧನೆಯ ಮಾಡಿ, ಶಿವಸ್ತೋತ್ರಮಂ ಮಾಡಿ ಮಾಹೇಶ್ವರರ ಪೂಜಿಸಿ, ಮರಳಿ ನಿಜಪದಂಗಳ ಹಡೆದರು. ಈ ಪರಿಯ, ಅರಿವು ಮರವೆಯುಳ್ಳ ದ್ವಂದ್ವಗ್ರಸ್ತರು ಬಲ್ಲರೆ ? ಮಾಹೇಶ್ವರರ ಮಹಾತ್ಮೆಯ ನಮ್ಮ ಸದ್ಭಕ್ತರೇ ಬಲ್ಲರು. ಅದೆಂತೆಂದಡೆ ಕೇಳಿರೆ: ವೇದಾದಿ ಅಷ್ಟದಶವಿದ್ಯಾಪರಿಚಿತರು, ಅಂತಾಗಿ ಎಮ್ಮ ಮಾಹೇಶ್ವರರೇ ಬಲ್ಲರು. ಉಳಿದ ದೇವ ದಾನವ ಮಾನವರುಗಳಿಗೆಯೂ ಅರಿಯಬಾರದು. ಅಂತಪ್ಪವರಿಗೆ ಆ ವಿಧಿ. ಇನ್ನು ಅಲ್ಪಾಯುಷ್ಯರಪ್ಪ ಮನುಷ್ಯರುಗಳಿಗೆ ವೇದಶಾಸ್ತ್ರ ಪುರಾಣಂಗಳ ಬಹಳ ಓದಲಿಕೆ ತೆರಹಿಲ್ಲ. ಕಿಂಚಿತ್ತೋದಿದರೂ ಕೇಳಿದರೂ ಇಲ್ಲ, ಮಹಾಜ್ಞಾನಿಗಳ ಸಂಗವಿಲ್ಲ. ಅಹಂಕಾರಿಗಳು ಮದಾಂಧರು ಶಾಪಹತರು ಜಡಜೀವಿಗಳು ಎಂತರಿಯಬಹುದಯ್ಯಾ. ಶಿವಮಾಹೇಶ್ವರರ ಮಹಿಮೆಯನರಿಯದ ದೋಷಿಗಳ ಕೂಡೆ ಸಂವಾದಿಸಲುಂಟೆ ? ಅವರುಗಳ ಮನದನುವರಿತು, ಅರಿವಿನ ಹವಣಿಂದರಿದು, ಅವಾಚಕವಾಗಿಪ್ಪುದಲ್ಲದೆ ಆ ಪಾಪಿಗಳ ನೋಡಲಾಗದು. ನುಡಿಸಲಾಗದು, ಸಮಾನದಲ್ಲಿ ಕುಳ್ಳಿರ್ದು ತರ್ಕಿಸಲಾಗದು. ಶಿವಜ್ಞಾನವಿಲ್ಲದವರ ಕೂಡೆ ನುಡಿಯಲು ತೆರಹುಂಟೆ ಶಿವಮಾಹೇಶ್ವರಂಗೆ ? [ಅವರು] ಶಿವಲಿಂಗಾರ್ಚನೆಯಂ ಮಾಡಿ ಮಹಾನುಭಾವರ ಸಂಗದಲ್ಲಿ ಅನುಭಾವಸಂಗದಲ್ಲಿಹರಲ್ಲದೆ ಕೇಳಿರಣ್ಣಾ, ದೇವದಾನವ ಮಾನವರ ಪರಿಯಲ್ಲ. ಎಮ್ಮ ಮಾಹೇಶ್ವರರು ಸರ್ವಾಚಾರಸಂಪನ್ನರು ಸರ್ವವಿದ್ಯಾಪರೀಕ್ಷಿತರು, ತಾತ್ಪರ್ಯಕಳಾಗ್ರಾಹಿಗಳು, ವಿಶ್ವಾಧಿಕರು, ಎಮ್ಮ ಮಾಹೇಶ್ವರರು ಪರಧನ ಪರಸ್ತ್ರೀಯನೊಲ್ಲರು, ಸತ್ಯರು ನಿತ್ಯರು ನಿರುಪಾಧಿಕರು, ನಿರಾಶಾಸಂಪೂರ್ಣರು ಪರಿಣಾಮಿಗಳು. ಅವರ ಸಂಗದಿಂದ ಗುರುಸಿದ್ಧಿ ಲಿಂಗಸಿದ್ಧಿ ಜಂಗಮಸಿದ್ಧಿ ಪರಸಿದ್ಧಿ ಪದಸಿದ್ಧಿ ಸರ್ವಸಿದ್ಧಿ ಮಹಾಸಿದ್ಧಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->