ಅಥವಾ

ಒಟ್ಟು 775 ಕಡೆಗಳಲ್ಲಿ , 64 ವಚನಕಾರರು , 442 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಈರೇಳುಭುವನವನು ಒಡಲೊ?ಗೆ ಇಂಬಿಟ್ಟುಕೊಂಡು ಲಿಂಗರೂಪನಾಗಿ ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಡಿತ್ತು ನೋಡಾ ! ಅಂತಹ ಅಗಮ್ಯ ಅಗೋಚರ ಲಿಂಗವೆಂದರಿದು ಭಕ್ತನು ತಾನು ಹಿಂದೆ ನಡೆದ ಜೂಜು ಬೇಂಟೆ ಚದುರಂಗ ಲೆತ್ತ ಪಗಡೆಯಾಟಂಗಳಂ ಪರಿಹಾಸಕರ ಕೂಡಿಕೊಂಡು ಕೆಲೆದಾಡುವದಂ ಬಿಟ್ಟು ಬಂಧುವ ತೊರೆದು ಮುಂದೆ ಶಿವಪಥದಲ್ಲಿ ನಡೆಯಬಲ್ಲಾತನೇ ಸದ್ಭಕ್ತನಲ್ಲದೆ, ಹಣದಾಸೆಗೆ ಹಂಗಿಗನಾಗಿ ಗುಣದಾಸೆಗೆ ಅಮೇಧ್ಯವ ತಿಂದು ಬಂಧುಗಳ ಬಿಟ್ಟು ಭಕ್ತಿಯಿಲ್ಲವೇ ಉಂಟೇ ಎಂಬ ಪಂಚಮಹಾಪಾತಕರ ಮುಖವ ನೋಡಲಾಗದು ಅವರ ಮಾತ ಕೇಳಲಾಗದು, ಅದೆಂತೆಂದಡೆ; ಕತ್ತೆ ಭಕ್ತನಾದರೆ ಕಿಸುಕುಳವ ತಿಂಬುದ ಮಾಂಬುದೆ ? ಬೆಕ್ಕು ಭಕ್ತನಾದರೆ ಇಲಿಯ ತಿಂಬುದ ಮಾಂಬುದೆ ? ಹಂದಿ ಭಕ್ತನಾದರೆ ಹಡಿಕೆಯ ತಿಂಬುದ ಮಾಂಬುದೆ ? ಶುನಕ ಭಕ್ತನಾದರೆ ಮೂಳೆ ಮಾಂಸವ ತಿಂಬುದ ಮಾಂಬುದೆ ? ಕೋಳಿಯ ತಂದು ಪಂಜರವ ಕೂಡಿ ಅಮೃತಾನ್ನವನಿಕ್ಕಿ ಸಲಹಿದರೆ ಅದು ತಾನೆ ಮತ್ತೆ ತಿಂಬ ಹಡುವಿಂಗೆ ಚಿತ್ತವನಿಕ್ಕುದುಂ ಮಾಂಬುದೆ ? ಇಂತೀ ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಅನಾಚಾರವ ಬಿಟ್ಟು ಸದಾಚಾರದಲ್ಲಿ ನಡೆಯಬೇಕು. ಗುರುವಾದಡೂ ಆಗಲಿ ಭಕ್ತನಾದಡೂ ಆಗಲಿ ತಾನು ಹಿಂದೆ ಭವಿಯಾಗಿದ್ದಾಗ ಭುಂಜಿಸುತ್ತಿದ್ದ ಸುರೆ ಮಾಂಸ ಭಂಗಿ ಭವಿಸಂಗ ಭವಿಪಾಕ ಇಂತಿವ ಬಿಡದಿರ್ದವರುಗಳು ಆ ಕತ್ತೆ ಬೆಕ್ಕು ಸೂಕರ ಸೊಣಗ ಕೋಳಿಗಿಂದತ್ತತ್ತ ಕಡೆ ನೋಡಿರೇ. ಚಿನ್ನದ ಬೆಟ್ಟವನೇರಿದವನು ಕಣ್ಣುಕಾಣದಿಪ್ಪಂತೆ ಗಣೆಯನೇರಿದ ಡೊಂಬ ಮೈ ಮರೆದಿಪ್ಪಂತೆ ನಡುನೀರಿಗೆ ಹೋದ ಹರಿಗೋಲು ತಲೆ ಕೆಳಗಾದಂತೆ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇಂದ್ರಿಯದ ಬಾಗಿಲಲ್ಲಿ ಮನವಿಪ್ಪುದು. ಮನದ ಮುಂಬಾಗಿಲಲ್ಲೇ ಭೋಗಲಿಂಗವಿದ್ದು, ಅದ್ಥಿಕಾರ ಲಯಹೊದ್ದದೆ ಸಕಲಭೋಗಂಗಳ ಭೋಗಿಸಿ ಪ್ರಸಾದವ ಕರಣಂಗಳಿಗೆ ಕೊಟ್ಟು ಅರುಹಿ ಎನ್ನ ಮನವ ತನ್ನತ್ತ ಸೆಳೆದು ಮರಹ ಮಾಣಿಸಿ ಕುರುಹಳಿದು ತೆರಹುಗೊಡದ ಸೌರಾಷ್ಟ್ರ ಸೋಮೇಶ್ವರಲಿಂಗವ ಕಂಡೆ.
--------------
ಆದಯ್ಯ
ಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ ! ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು. ಕುಡಿಯ ಬಂದ ಮೃಗವು ಆ ನೀರೊಳಗೆ ಮುಳಿಗಿದಡೆ ಉರಿಯ ಬಾಣದಲೆಚ್ಚು ತೆಗೆದೆ ನೋಡಾ ! ಒಂದೆ ಬಾಣದಲ್ಲಿ ಸತ್ತ ಮೃಗವು, ಮುಂದಣ ಹೆಜ್ಜೆಯನಿಕ್ಕಿತ್ತ ಕಂಡೆ ! ಅಂಗೈಯೊಳಗೊಂದು ಕಂಗಳು ಮೂಡಿ, ಸಂಗದ ಸುಖವು ದಿಟವಾಯಿತ್ತು ! ಲಿಂಗಪ್ರಾಣವೆಂಬುದರ ನಿರ್ಣಯವನು ಇಂದು ಕಂಡೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ನೀರ ನೆಳಲ ಮಧ್ಯದಲ್ಲಿ ಹಾರುವ ಭ್ರಮರನ ಗರಿಯ ಗಾಳಿಯಲ್ಲಿ ಮೂರುಲೋಕವೆಲ್ಲ ತಲೆಕೆಳಗಾದುದ ಕಂಡೆ. ನೀರನೆಳಲಂ ಕಡಿದು ಹಾರುವ ಭ್ರಮರನ ಗರಿಯ ಮುರಿದಲ್ಲದೆ ನಿರ್ಮನ ನಿರ್ಮಳ ನಿಶ್ಚಿಂತ ನಿಃಶಂಕ ನಿಃಕಳಂಕ ಶರಣನಲ್ಲ ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ, ಮೊಳಕಾಲಲ್ಲಿ ಕಿವಿಯೋಲೆಯ ಕಂಡೆ. ಹರವಸದ ಉಡಿಗೆ ! ಕಾಂತದಲ್ಲಿ ಮುಖವ ಕಂಡು ಕಾಣದೆ ಚೆನ್ನಮಲ್ಲಿಕಾರ್ಜುನನ ನೆರೆವ ಪರಿಕರ ಹೊಸತು.
--------------
ಅಕ್ಕಮಹಾದೇವಿ
ಶುದ್ಧಪ್ರಸಾದಿಯಾದಡೆ ತನು ಸತ್ಕ್ರಿಯಾ ಸನ್ನಿಹಿತನಾಗಿ, ಅಣುಮಾತ್ರ ದ್ವೈತಿಯಾಗದೆ ಚರಿಸಬೇಕು. ಸಿದ್ಧಪ್ರಸಾದಿಯಾದಡೆ ಮನ ಜ್ಞಾನಸನ್ನಿಹಿತನಾಗಿ, ಕಿಂಚಿತ್ತು ಮಲವಿಷಯಕ್ಕೆ ಜಿನುಗದೆ ಚರಿಸಬೇಕು. ಪ್ರಸಿದ್ಧಪ್ರಸಾದಿಯಾದಡೆ ಭಾವ ಮಹಾನುಭಾವಸನ್ನಿಹಿತನಾಗಿ, ಒಂದಿನಿತು ಭ್ರಾಂತನಾಗದೆ ಚರಿಸಬೇಕು. ಈ ಭೇದವನರಿಯದೆ ಅವರವರಂತೆ, ಇವರಿವರಂತೆ, ತಾನು ತನ್ನಂತೆ ನಡೆನುಡಿ ಕೊಡುಕೊಳ್ಳಿಯುಳ್ಳರೆ ಕಡೆ ಮೊದಲಿಲ್ಲದೆ ನರಕವನೈಯ್ದುವ ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಭಾವಿಸಿ ದೃಷ್ಟಿನಟ್ಟು ಸೈವೆರಗಾಗಿದ್ದುದ ಕಂಡೆ, ಕಲ್ಪಿಸಿ ದೃಷ್ಟಿನಟ್ಟು ಸೈವೆರಗಾಯಿತ್ತಯ್ಯಾ. ಗುಹೇಶ್ವರಾ, ನಿಮ್ಮಲ್ಲಿ ಸರ್ವನಿರ್ವಾಣಿ ಸಂಗನಬಸವಣ್ಣ. ಎನ್ನ ಪ್ರಾಣಲಿಂಗವೆಂದರಿದು ಕಂಡೆನಿಂದು.
--------------
ಅಲ್ಲಮಪ್ರಭುದೇವರು
ಮಹಾರಾಣುವೆಯ ಬಿಟ್ಟು ಬಂದು, ಮತ್ತೆ ಒಡೆಯರು ಭಕ್ತರಲ್ಲಿ ರಾಣಿವಾಸವೆಂದು ಕಟ್ಟು ಮೆಟ್ಟುಂಟೆ ? ಖಂಡಿತ ಕಾಯವನಂಗೀಕರಿಸಿದ ಭಕ್ತಂಗೆ, ಮತ್ತೆ ಹೆಂಡತಿ ಮಕ್ಕಳು ಬಂಧುಗಳೆಂದು ಜಂಗಮಕ್ಕೆ ತಂದ ದ್ರವ್ಯವನ್ಯರಿಗಿಕ್ಕಿ, ತಾನುಂಡನಾದಡೆ, ತಿಂಗಳು ಸತ್ತ ಹುಳಿತನಾಯ ಕಾಗೆ ತಿಂದು, ಆ ಕಾಗೆಯ ಕೊಂದು ತಿಂದ ಭಂಡಂಗೆ ಕಡೆ. ನಿಃಕಳಂಕ ಮಲ್ಲಿಕಾರ್ಜುನಲಿಂಗವೆ, ನೀವೆ ಬಲ್ಲಿರಿ.
--------------
ಮೋಳಿಗೆ ಮಾರಯ್ಯ
ಅಲೆಯ ಮನೆಯೊಳಗಣ ಕಿಚ್ಚು ಅಲೆದಾಡದ ಮುನ್ನ, ಊರ ಮುಂದೆ ನಾಲ್ವರು ಸತ್ತು ಒಳಗೆ ಬೇವುದ ಕಂಡೆ. ಊರು ಬೆಂದು, ಕಿಚ್ಚಿನ ಊನ್ಯವ ಕೇಳಬಂದ ರಕ್ಷಿ, ಹುಲಿಯನೇರಿಕೊಂಡು ಕಳೆದುಳಿದುದಕ್ಕೆ ತಾನೊಡತಿಯಾಗಿ ಊರುಂಬಳಿಯನುಂಬುದ ಕಂಡೆ. ಅತ್ತುದೊಂದಲ್ಲದೆ ಹೆಣ ಬಂದು ಕಚ್ಚದಿದೇನು ಚೋದ್ಯದ ದುಃಖ ಹೇಳಾ ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ವಿಷ್ಣುವ ಪೂಜಿಸಿ ಮುಡುಹ ಸುಡಿಸಿಕೊಂಬುದ ಕಂಡೆ, ಜಿನನ ಪೂಜಿಸಿ ಬತ್ತಲೆಯಿಪ್ಪುದ ಕಂಡೆ, ಮೈಲಾರನ ಪೂಜಿಸಿ ನಾಯಾಗಿ ಬಗಳುವುದ ಕಂಡೆ, ನಮ್ಮ ಕೂಡಲಸಂಗನ ಪೂಜಿಸಿ ದೇವಾ, ಭಕ್ತರೆನಿಸಿಕೂಂಬುದ ಕಂಡೆ.
--------------
ಬಸವಣ್ಣ
ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ. ಅಯ್ಯಾ ಎನ್ನೊಳಗೆ ಇನಿತಿರ್ದು ಮೈದೋರದ ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಓಗರವಿಲ್ಲದಿರ್ದಡೆ ಓಂ ನಮಃ ಶಿವಾಯ ಎಂಬ ನುಡಿಯಿಲ್ಲ. ಕಾಮವಿಲ್ಲದಿರ್ದಡೆ ಪ್ರೇಮವಿಲ್ಲ. ಭೂಮಿಯಿಲ್ಲದಿರ್ದಡೆ ಜೀವನಿಗೆ ಜನ್ಮವಿಲ್ಲ. ಇದ ಮಹಾಮಹಿಮರು ಬಲ್ಲರಲ್ಲದೆ ಮಹಿಮರರಿಯರು. ಕಾಮಧೂಮ ಧೂಳೇಶ್ವರಲಿಂಗದ ಶರಣರ ಕಂಡೆ, ಬಲ್ಲೆನೆಂಬವರಂತಿರಲಿ.
--------------
ಮಾದಾರ ಧೂಳಯ್ಯ
ಕಾಡಾರಣ್ಯದೊಳಗೆ ಒಬ್ಬ ಸೂಳೆ ಕರೆದು ಐವರಿಗೆ ಒತ್ತೆಯಕೊಡುವುದ ಕಂಡೆನಯ್ಯ ! ಊರೊಳಗಣ ಗೊಲ್ಲತಿ ಐವರ ಒಪ್ಪಿಸಿಕೊಟ್ಟು ಸೂಳೆ ಗೊಲ್ಲತಿ ಒಂದಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನಷ್ಟು ... -->