ಅಥವಾ

ಒಟ್ಟು 137 ಕಡೆಗಳಲ್ಲಿ , 41 ವಚನಕಾರರು , 127 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನಾತ್ಮನದೊಂದು ಅರಸುತನದ ಅನ್ಯಾಯವ ಕೇಳಯ್ಯ ಗುರುವೆ. ಪಂಚಭಕ್ಷ ್ಯ ಪರಮಾಮೃತವ ಸದಾ ದಣಿಯಲುಂಡು ಒಂದು ದಿನ ಸವಿಯೂಟ ತಪ್ಪಿದರೆ ಹಲವ ಹಂಬಲಿಸಿ ಹಲುಗಿರಿದು, ಎನ್ನ ಕೊಂದು ಕೂಗುತ್ತಿದೆ ನೋಡಾ. ಶ್ವಪಚನನುತ್ತಮನ ಕೂಡೆ ಸಂಕಲೆಯನಿಕ್ಕುವರೆ ಅಯ್ಯ?. ಕಲಸಿ ಕಲಸಿ ಕೈಬೆರಲು ಮೊಂಡಾದವು. ಅಗಿದಗಿದು ಹಲ್ಲುಚಪ್ಪಟನಾದವು. ಉಂಡುಂಡು ಬಾಯಿ ಜಡ್ಡಾಯಿತು. ಹೇತು ಹೇತು ಮುಕುಳಿ ಮುರುಟುಗಟ್ಟಿತ್ತು. ಸ್ತ್ರೀಯರ ಕೂಡಿಕೂಡಿ ಶಿಶ್ನ ಸವೆದು ಹೋಯಿತ್ತು. ತನುಹಳದಾಗಿ ಅಲ್ಲಲ್ಲಿಗೆ ಕಣ್ಣು ಪಟ್ಟಿತ್ತು. ಮನ ಹೊಸದಾಗಿ ಹನ್ನೆರಡುವರ್ಷದ ರಾಜಕುಮಾರನಾದೆನು. ಇನ್ನೇವೆನಿನ್ನೇವೆನಯ್ಯ ಎನ್ನ ಕೇಡಿಂಗೆ ಕಡೆಯಿಲ್ಲ. ಕಾಯವಿಕಾರವೆಂಬ ಕತ್ತಲೆ ಕವಿಯಿತು. ಮನೋವಿಕಾರವೆಂಬ ಮಾಯೆ ಸೆರೆವಿಡಿದಳು. ಇಂದ್ರಿಯವಿಕಾರವೆಂಬ ಹುಚ್ಚುನಾಯಿಗಳು ಕಚ್ಚಿ ಕಚ್ಚಿ ಒದರುತ್ತಿವೆ. ಕಾಮ ವಿಕಾರವೆಂಬ ಕಾಳರಕ್ಕಸಿ ಅಗಿದಗಿದು ನುಂಗುತಿಹಳು. ಕಾಯಾಲಾಗದೆ ದೇವ?. ಸಾವನ್ನಬರ ಸರಸವುಂಟೆ ಲಿಂಗಯ್ಯ?. ಅನ್ಯಸಮಯದ ಗುಮ್ಮಟನ ಕೈವಿಡಿದೆತ್ತಿಕೊಂಡೆ. ನಿನ್ನ ಸಮಯದ ಶಿಶು ಬಾವಿಯಲ್ಲಿ ಬೀಳ್ವುದ ನೋಡುತ್ತಿಪ್ಪರೆ ಕರುಣಿ?. ಮುಕ್ತಿಗಿದೇ ಪಯಣವೋ ತಂದೆ?. ನೀನಿಕ್ಕಿದ ಮಾಯಾಸೂತ್ರಮಂ ಹರಿದು, ದಶೇಂದ್ರಿಯಂಗಳ ಗುಣವ ನಿವೃತ್ತಿಯಂ ಮಾಡಿ, ಅಂಗಭೋಗ-ಆತ್ಮಭೋಗಂಗಳನಡಗಿಸಿ, ಲಿಂಗದೊಳು ಮನವ ನೆಲೆಗೊಳಿಸಿ, ಎನ್ನ ಪಟದೊಳಗಣ ಚಿತ್ರದಂತೆ ಮಾಡಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಲಿಂಗಭಾಜನದಲ್ಲಿ ಸಹಭೋಜನವ ಮಾಡಿಹೆವೆಂದೆಂಬರು, ಲಿಂಗಭಾಜನದಲ್ಲಿ ಸಹಭೋಜನವ ಮಾಡುವವರ ನೋಡಿರೇ. ಲಿಂಗವಂತರೆಲ್ಲಾ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಆಸೆವುಳ್ಳನ್ನಕ್ಕ ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ? ಹಸಿವು ತೃಷೆ ನಿದ್ರೆ ಆಲಸ್ಯ ವ್ಯಸನವುಳ್ಳನ್ನಕ್ಕ, (ಲಿಂಗಭಾಜನದಲ್ಲಿ ಸಹಭೋಜನವ ಮಾಡುವ ಪರಿಯೆಂತೊ ?) ಗುರುಲಿಂಗಜಂಗಮತ್ರಿವಿಧಸಂಪನ್ನತೆವುಳ್ಳನ್ನಕ್ಕ, ಲಿಂಗಭಾಜನದಲ್ಲಿ ಸಹಭೋಜನವ ಮಾಡುವಜಾÕನಿಗಳು ತಾವೇ ಲಿಂಗವೆಂಬರು, ಲಿಂಗವೇ ತಾವೆಂಬರು. ತಾವೆ ಲಿಂಗವಾದರೆ ಜನನ ಮರಣ ರುಜೆ ತಾಗು ನಿರೋಧವಿಲ್ಲದಿರಬೇಡಾ? ಮಹಾಜಾÕನವ ಬಲ್ಲೆವೆಂದು ತಮ್ಮ ಭಾಜನದಲ್ಲಿ ಲಿಂಗಕ್ಕೆ ನೀಡುವ ಪಾತಕರ ತೋರದಿರು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪರಮಗುರು ಲಿಂಗಜಂಗಮವ ನಿಜವಿಶ್ವಾಸ ನೈಷ್ಠೆಯೊಳ್ ಮೂರ್ತಿಗೊಳಿಸಿ ಅರ್ಚಿಸುವ ಸುಚಿತ್ತಕಮಲದಳಂಗಳೆಲ್ಲ ಒಂದೊಡಲಾಗಿ, ಭಕ್ತನ ಕರಕಮಲ, ಜಂಗಮದ ಚರಣಕಮಲ, ಈ ನಾಲ್ಕರಲ್ಲಿ ಸಂಬಂಧವಾದ ಪ್ರಣಮದೊಳ್ ಕೂಡಿದ ನೇತ್ರಕಮಲ ಒಂದಾದ, ಸಮರಸೈಕ್ಯವಾಗಿ ಕೂಡಿದ ತ್ರಿಕೂಟಸಂಗಮಸ್ಥಾನವಿದೆ. ಅಷ್ಟಾಷಷ್ಟಿವರಕೋಟಿ ತೀರ್ಥಸ್ಥಾನವಿದೆ. ದೇವಗಂಗೆ ನೀಲಗಂಗೆ ಶಿವಗಂಗಾ ಸರಸ್ವತಿ ಯಮುನಾಸ್ಥಾನವಿದೆ. ಚಿತ್ಸೂರ್ಯ ಚಂದ್ರಾಗ್ನಿಮಂಡಲವಿದೆ. ಜ್ಯೋತಿರ್ಮಂಡಲ ಅಖಂಡಜ್ಯೋತಿರ್ಮಂಡಲ ಅಖಂಡಮಹಾಪರಿಪೂರ್ಣಜ್ಯೋತಿರ್ಮಂಡಲ ಸ್ಥಾನವಿದೆ. ರೋಷವೆಂಬ ಕಾಲರತಿಕ್ರೀಡಾಭ್ರಾಂತೆಂಬ ಕಾಮ ಆಸೆ ಆಮಿಷ ಲೋಭ ಮೋಹ ಮದ ಮತ್ಸರವೆಂಬ ಮಾಯಾ ಸಂಸಾರಸಂಕಲ್ಪ ವಿಕಲ್ಪಂಗಳ ಹಿಂದುಳಿದು, ಆದ್ಯರು ಭೇದ್ಯರು ವೇದ್ಯರು ಸಾಧ್ಯರುಯೆಂದವತರಿಸಿ, ಜಿಹ್ವಾತುರ ಗುಹ್ಯಾತುರ ಅರ್ಥಾತುರ ತ್ಯಾಗಾತುರ ಭೋಗಾತುರ ಯೋಗಾತುರ ಕಡೆಯಾದ ಅನಂತ ಆತುರಗಳೆಂಬ ಷಡಿಂದ್ರೀಕರಣ ವಿಷಯವ್ಯಾಪಾರಂಗಳ ಜೊಳ್ಳುಮಾಡಿ ತೂರಿ, ಜಗದಾದಿ ಗಟ್ಟಿಬೀಜವಾಗಿ, ನಿಂದ ನಿಲುಕಡೆಯ ಉಳಿದ ಉಳುವೆಯ ಮಹಾಘನದುನ್ಮನಿಸ್ಥಾನವಿದೆ. ಎನ್ನ ಭಕ್ತಿ-ಜಾÕನ-ವೈರಾಗ್ಯ-ಕ್ರಿಯಾಚಾರ ಸತ್ಯಶುದ್ಧ ನಿಜನಡೆನುಡಿಗಳ ಕರುಣಿಸಿ, ಅಂಗ-ಮನ-ಪ್ರಾಣ-ಭಾವ-ಕರಣೇಂದ್ರಿಗಳ ಪಾವನವೆನಿಸಿ ಸಲಹಿದ ಪರಮಾಮೃತಸುಧೆಯಿದೆ. ಭಕ್ತಸ್ಥಲ ವಿರಕ್ತಸ್ಥಲ ಪ್ರಸಾದಿಸ್ಥಲ ಪ್ರಾಣಲಿಂಗಿಸ್ಥಲ ಶರಣಸ್ಥಲ ಐಕ್ಯಸ್ಥಲ ನಿಃಕಳಂಕಸ್ಥಲ ನಿರ್ಮಾಯಸ್ಥಲ ನಿರಾಲಂಬಸ್ಥಲ ನಿಃಪ್ರಪಂಚಸ್ಥಲ ನಿಜಾನಂದಸ್ಥಲ ನಿರೂಪಾದ್ಥಿಕಸ್ಥಲ ನಿರ್ನಾಮಕಸ್ಥಲ ನಿರ್ಗುಣಸ್ಥಲ ಸಗುಣಸ್ಥಲ ನಿತ್ಯತೃಪ್ತಸ್ಥಲ ಕಾಯಾರ್ಪಣಸ್ಥಲ ಕರಣಾರ್ಪಣಸ್ಥಲ ಭಾವಾರ್ಪಣಸ್ಥಲ ಪರಿಪೂರ್ಣಾರ್ಪಣಸ್ಥಲ ನಿರವಯಸ್ಥಲವೆ ಕಡೆಯಾದ ಏಕವಿಂಶತಿ ದೀಕ್ಷಾನುಭಾವ ಏಕವಿಂಶತಿ ಯುಗಂಗಳನೊಳಗೊಂಡು ಅಣುವಿಂಗೆ ಪರಮಾಣುವಾಗಿ, ಮಹತ್ತಿಂಗೆ ಘನಮಹತ್ತಾಗಿ, ಸೃಷ್ಟಿ ಸ್ಥಿತಿಲಯಂಗಳಿಗೆ ಕಾರಣಾರ್ಥ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಪರಮಾನಂದ ಪಂಚಪರುಷದ ಖಣಿಯಿದೆಯೆಂದು ಪೂರ್ಣಾನುಭಾವಭರಿತವಾದ ನಿರ್ದೇಹಿಗಳೆ ನಿರವಯಪ್ರಭು ಮಹಾಂತಘನವೆಂಬೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಕ್ಷುತ್ಪಿಪಾಸೆ ಶೋಕ ಮೋಹ ಜನನ ಮರಣ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಂ ಬಿಟ್ಟು ಅಷ್ಟವಿಧಾರ್ಚನೆ, ಷೋಡಶೋಪಚಾರವಿಲ್ಲದಿರುವ ಕ್ಷೀರದೊಳಗಣ ಘೃತದಂತೆ, ತಿಲದೊಳಗಣ ತೈಲದಂತೆ, ಪುಷ್ಪದೊಳಗಣ ಪರಿಮಳದಂತೆ, ಉಪ್ಪು ಉದಕವ ಕೂಡಿದಂತೆ, ವಾರಿಕಲ್ಲು ವಾರಿಯ ಕೂಡಿದಂತೆ, ಕರ್ಪುರವು ಜ್ಯೋತಿಯ ಕೂಡಿದಂತೆ, ಮನ ಲಿಂಗದಲ್ಲಿ ಲೀಯವಾಗಿಹುದೀಗ ಐಕ್ಯಸ್ಥಲ ನೋಡಾ, ಇದಕ್ಕೆ ಈಶ್ವರ್ದೋವಾಚ : ``ಷಡೂರ್ಮಯಶ್ಚ ಷಡ್ವರ್ಗೋ ನಾಸ್ತಿ ಅಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಯೋಗವತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಜಂಗಮವೆ ಗುರು, ಜಂಗಮವೆ ಲಿಂಗ, ಜಂಗಮವೆ ಪ್ರಾಣವೆಂದಡೆ, ಇಲ್ಲವೆಂಬ ಅಂಗಹೀನರಿರಾ, ನೀವು ಕೇಳಿರೊ. ಜಂಗಮವು ಗುರುವಲ್ಲದಿದ್ದಡೆ, ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವ ಹಿಂಗಿಸುವನೆ ? ಜಂಗಮವು ಲಿಂಗವಲ್ಲದಿದ್ದಡೆ, ಪ್ರಾಣಲಿಂಗವ ತೋರುವನೆ ? ಜಂಗಮವು ಪ್ರಾಣವಲ್ಲದಿದ್ದಡೆ, ಪ್ರಾಣಕ್ಕೆ ಪ್ರಸಾದವನೂಡುವನೆ ? ಇದ ಕಂಡು ಕಾಣೆನೆಂಬ ಭಂಗಿತರ ನುಡಿಯ ಮೆಚ್ಚರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಶ್ರೀಗುರು ಲಿಂಗ ಜಂಗಮ ಪ್ರಸಾದ ಒಂದೇ ಪರಶಿವಮೂರ್ತಿ ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿಸಿ, ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಈ ಚತುರ್ವಿಧ ಪದವಿಯನೂ ಕೂಡುವರೆ, ಗುರು ಲಿಂಗ ಜಂಗಮ ಪ್ರಸಾದವ ನಂಬುವುದು. ಇದು ಸತ್ಯ, ಶಿವನಾಣೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ಉಭಯ ಕಾಮ, ಉಭಯ ಶಕ್ತಿ, ಉಭಯ ಆಶ್ರಮವು_ ಅನಾಶ್ರಮವು, ಉಭಯ ತಾನೆ ಪ್ರಸಾದಿ ಉಭಯನಾಮದ ಮೇಲೆ ನಾಮವಾದುದನು ಲಿಂಗದೇಹಿಯೆಂಬಾತಂಗರಿಯಬಾರದು. ಇದು ಕಾರಣ, ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿಗಲ್ಲದೆ ಅರಿಯಬಾರದು.
--------------
ಚನ್ನಬಸವಣ್ಣ
ಸಂಸಾರ ಸಂಸಾರ, ಕಾಳಗತ್ತಲೆ ಕಾಳಗತ್ತಲೆ. ಕರ ಹಿರಿದು ಕರ ಹಿರಿದು, ಎಚ್ಚತ್ತಿರು ಎಚ್ಚತ್ತಿರು ಜ್ಞಾನಧನಕ್ಕೆ. ಎಚ್ಚತ್ತಿರು ಎಚ್ಚತ್ತಿರು ಇಂದ್ರಿಯಗಳ್ಳರಿಗೆ. ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ. ಜನ್ಮ ದುಃಖಂ ಜರಾ ದುಃಖಂ ನಿತ್ಯಂ ದುಃಖಂ ಪುನಃ ಪುನಃ | ಸಂಸಾರಸಾಗರೋ ದುಃಖಂ ತಸ್ಮಾತ್ ಜಾಗ್ರತ ಜಾಗ್ರತ || ಎಂದುದಾಗಿ, ಸಲೆ ಜೀವಿತಗೊಂಡ ಸೊಡ್ಡಳ ಆಳು ಭಲಾ ಭಲಾ ಎನ್ನುತ್ತಿರಾ.
--------------
ಸೊಡ್ಡಳ ಬಾಚರಸ
ವೇಷವ ಹೊತ್ತು , ಆಶೆ ರೋಷವ ಬಿಡದೆ, ದೇಶವ ತಿರುಗಿ, ಹೊರವೇಷದ ವಿಭೂತಿ ರುದ್ರಾಕ್ಷಿ ಕಾವಿ ಕಾಷಾಯಾಂಬರವ ಧರಿಸಿ ಫಲವೇನು? ಕಾಮ ಕೆಡದು, ಕ್ರೋಧ ಬಿಡದು, ಲೋಭ ಹಿಂಗದು, ಮೋಹ ನಿಲ್ಲದು, ಮದ ಹೆರೆಸಾರದು, ಮತ್ಸರ ಬೆಂದುಹೋಗದು. ಇವೆಲ್ಲ ಸಹಿತ ಜಂಗಮಭಕ್ತರೆಂದು ಸುಳಿವವರ ಕಂಡು ನಾಚಿತ್ತು ಎನ್ನ ಮನ. ಭಕ್ತಜಂಗಮ ಘನವನೇನೆಂದು ಉಪಮಿಸುವೆ ? ರೂಪಿನ ಹಾಗೆ, ನೆಳಲಿನ ಹಾಗೆ, ದೇಹದ ಹಾಗೆ, ಪ್ರಾಣದ ಹಾಗೆ, ಭಾವದ ಹಾಗೆ, ನಿರ್ಭಾವದ ಹಾಗೆ, ಉರಿಯ ಹಾಗೆ, ಕರ್ಪುರದ ಹಾಗೆ, ಆವಿಯ ಹಾಗೆ, ನೀರ ಹಾಗೆ, ಎರಡೊಂದಾದರೆ ತೆರಹಿಲ್ಲ. ಆ ನಿಲುವಿಂಗೆ ನಮೋ ನಮೋ ಎನುತಿರ್ದೆ ಕಾಣಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಪಂಚೇಂದ್ರಿಯ ಸಪ್ತಧಾತುವನತಿಗಳೆದಲ್ಲಿ ಫಲವೇನೊ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ_ ವಿಷಯವನತಿಗಳೆದಲ್ಲಿ ಫಲವೇನೊ ? ಇವೆಲ್ಲವ ಕೊಂದ ಪಾಪ ನಿಮ್ಮ ತಾಗುವುದು_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಭಕ್ತನೆದ್ದು ಭವಿಯ ಮುಖವ ಕಂಡರೆ, gõ್ಞರವ ನರಕವೆಂಬರು. ಭಕ್ತನಾವನು ? ಭವಿಯಾವನು ? ಬಲ್ಲರೆ ಹೇಳಿ, ಅರಿಯದಿದ್ದರೆ ಕೇಳಿ. ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧ ಭವಿಯ ತಮ್ಮೆದೆಯೊಳಗೆ ಇಂಬಿಟ್ಟುಕೊಂಡು, `ನಾನು ಭವಿಯ ಮೋರೆಯ ಕಾಣಬಾರದು, ಎಂದು ಮುಖದ ಮೇಲೆ ವಸ್ತ್ರವ ಬಾಸಣಿಸಿಕೊಂಡು ತಿರುಗುವ ಕುನ್ನಿಗಳ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?
--------------
ಚನ್ನಬಸವಣ್ಣ
ಅಯ್ಯಾ, ಕಾಮ ಕಾಡಿತ್ತು ಕ್ರೋಧ ಕೊಂದಿತ್ತು ಆಮಿಷ ತಾಮಸಂಗಳೆಳವುತ್ತಿವೆ. ಕರುಣಮಾಡಾ ಹರಹರಾ ಮಹಾದೇವ ಕರುಣಮಾಡಾ ಶಿವಶಿವ ಮಹಾದೇವ ಕರುಣಮಾಡಾ ದೆಸೆಗೆಟ್ಟ ಪಶುವಿಂಗೊಮ್ಮೆ ಕರುಣಮಾಡಾ ವಶವಲ್ಲದ ಪಶುವಿಂಗೊಮ್ಮೆ ಕರುಣಮಾಡಾ ನೀವಲ್ಲದೆ ಬಲ್ಲವರಿಲ್ಲ ಕರುಣಮಾಡಾ ಅನ್ಯವ ನಾನರಿಯೆ ನಿಮ್ಮ ಪಾದವನುರೆ ಮಚ್ಚಿದೆ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನಯ್ಯ ತಂದೆ.
--------------
ಸಿದ್ಧರಾಮೇಶ್ವರ
ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ. ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ. ಎಲೆ ಅವ್ವಾ, ನೀನು ಕೇಳಾ ತಾಯೆ. ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ. ಎಲೆ ಅವ್ವಾ ನೀನು ಕೇಳಾ ತಾಯೆ. ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ. ತ್ರಿಪುರದ ಕೋಟೆ ಬಲ್ಲಿತ್ತೆಂದಡೆ ನೊಸಲಕಂಗಳಲುರುಹಿದನವ್ವಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ, ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.
--------------
ಅಕ್ಕಮಹಾದೇವಿ
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->