ಅಥವಾ

ಒಟ್ಟು 146 ಕಡೆಗಳಲ್ಲಿ , 43 ವಚನಕಾರರು , 124 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕರತರ್ಕದ ಪ್ರಸ್ತಾವನ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜಾÕನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಸಮಶೀಲ ನೇಮ ಒಂದಾದಲ್ಲಿ ಉಡುವ ತೊಡುವ ಕೊಡುವ ಕೊಂಬ ಅಡಿಯೆಡೆ ಮುಂತಾಗಿ ಸಕ್ಕರೆಯ ಬುಡಶಾಖೆಯಂತೆ ಮಧುರಕ್ಕೆ ಹೆಚ್ಚು ಕುಂದಿಲ್ಲದೆ ಇಪ್ಪ ನೇಮ ಕಟ್ಟಾಚಾರ ನಿಶ್ಚಯವಾದವಂಗೆ, ಅಂಗ ಹಲವಲ್ಲದೆ ಕುಂದಣ ಒಂದೆ ಭೇದ. ನೇಮ ಹಲವಲ್ಲದೆ ಜ್ಞಾನವೊಂದೆ ಭೇದ. ಭೂಮಿ ಹಲವಲ್ಲದೆ ಅಪ್ಪುವೊಂದೆ ಭೇದ, ಬಂದ ಯೋನಿ ಒಂದೆ. ತಾ ಮುಂದಿಕ್ಕುವ ಯೋನಿ ಒಂದಾದ ಕಾರಣ. ಹಿಟ್ಟು ಹಲವಾದಡೆ ಅಪ್ಪದಕಲ್ಲು ಒಂದೆಯಾದಂತೆ. ಇದು ತಪ್ಪದ ಆಚಾರ, ಇದಕ್ಕೆ ಮಿಥ್ಯತಥ್ಯವಿಲ್ಲ, ತಪ್ಪದು ನಿಮ್ಮಾಣೆ. ಆಚಾರಕ್ಕರ್ಹನಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.
--------------
ಅಕ್ಕಮ್ಮ
ಪರಮಚೈತನ್ಯ ಜಂಗಮವ ನೆರೆಯರಿದು ಇರವಿನೊಳು ಹಿರಿದು ಹೆಚ್ಚಿ ನಿತ್ಯಕಾಲದಿಂದಿತ್ತು ಕೊಂಬ ಪರಿಣಾಮಿಯ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆವಾವ ದ್ರವ್ಯಪದಾರ್ಥಂಗಳನು ಶಿವಲಿಂಗಕ್ಕರ್ಪಿಸಿ ಪ್ರಸಾದವಾದಲ್ಲದೆ ಕೊಳ್ಳೆವೆಂಬ ಪ್ರಸಾದಿಗಳಿರಾ ನೀವು ಅರ್ಪಿಸಿದ ಪರಿಯೆಂತು ? ಪ್ರಸಾದವ ಕೊಂಡ ಪರಿಯೆಂತು ಹೇಳಿರೆ ? ರೂಪಾರ್ಪಿತವಾಯಿತ್ತು ನೇತ್ರದಿಂದ, ಮೃದು, ಕಠಿಣ, ಶೀತೋಷ್ಣಂಗಳು ಅರ್ಪಿತವಾದವು ಸ್ಪರ್ಶನದಿಂದ. ನೇತ್ರ ಹಸ್ತವೆರಡಿಂದ್ರಿಯಂಗಳಿಂದವೂ ರೂಪು ಸ್ಪರ್ಶನವೆಂಬೆರಡೆ ವಿಷಯಂಗಳರ್ಪಿತವಾದವು. ನೀವಾಗಳೇ ಪ್ರಸಾದವಾಯಿತ್ತೆಂದು ಭೋಗಿಸತೊಡಗಿದಿರಿ. ಇಂತು ದ್ರವ್ಯಂಗಳ ರಸವನೂ, ಗಂಧವನೂ, ಶಬ್ದವನೂ, ಶ್ರೋತೃ, ಘ್ರಾಣ, ಜಿಹ್ವೆಗಳಿಂದ ಮೂರು ವಿಷಯಂಗಳನೂ ಅರ್ಪಿಸದ ಮುನ್ನ ಪ್ರಸಾದವಾದ ಪರಿ ಎಂತೊ ? ಅರ್ಪಿತವೆಂದನರ್ಪಿತವ ಕೊಂಬ ಪರಿ ಎಂತೊ ? ಪ್ರಸಾದಿಗಳಾದ ಪರಿ ಎಂತೊ ಶಿವ ಶಿವಾ. ಪಂಚೇಂದ್ರಿಯಂಗಳಿಂದವೂ, ಶಿವಲಿಂಗಪಂಚೇಂದ್ರಿಯ ಮುಖಕ್ಕೆ ಪಂಚವಿಷಯಂಗಳನೂ ಅರ್ಪಿಸಬೇಕು. ಅರ್ಪಿಸಿ ಪ್ರಸಾದವ ಕೊಂಡಡೆ ಪ್ರಸಾದಿ. ಅಲ್ಲದಿರ್ದಡೆ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯೆ ಅಲ್ಲ. ಪ್ರಸಾದಿಯಲ್ಲ, ಭಕ್ತಿಯ ಪರಿಯೂ ಅಲ್ಲ. ಪೂಜಕರೆಂಬೆನೆ ಪೂಜೆಯ ಒಪ್ಪವಲ್ಲ. ಸಾಧಾರಣ ಪೂಜಕರಪ್ಪರು ಕೇಳಿರಣ್ಣಾ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಸಾವಧಾನಾರ್ಪಿತದಲ್ಲಿ ಸ್ವಯವಾಗರಯ್ಯ.
--------------
ಉರಿಲಿಂಗಪೆದ್ದಿ
ಶಂಕರದಾಸಿಮಯ್ಯಗೆ ಸುಂಕದಬಂಕಯ್ಯಗೆ ಶಿವಲೆಂಕಮಂಚಣ್ಣಗೆ ಶಿವರಾತ್ರಿಯಯ್ಯಗಳಿಗೆ ಸಿದ್ಧರಾಮಯ್ಯಗಳಿಗೆ ಚಿಮ್ಮುಲಿಗೆಯ ಚಂದಯ್ಯ ಚಿಕ್ಕಯ್ಯ ಡೋಹರ ಕಕ್ಕಯ್ಯ ಒಕ್ಕುಮಿಕ್ಕ ಪ್ರಸಾದವಯಿಕ್ಕೆಯ್ಯಲ್ಲಿ ಕೊಂಬ ಅಕ್ಕನಾಗಾಯಿಗೆ ಹರಳಯ್ಯ ಮಧುವಯ್ಯ ಬಳ್ಳೇಶ್ವರಯ್ಯಗಳಿಗೆ ಹಾವಿನಾಳ ಕಲ್ಲಯ್ಯಗಳಿಗೆ ಸರವೂರ ಬಂಕಯ್ಯಗೆ ಸುರಗಿಯ ಚೌಡಯ್ಯಗೆ ಪರಿಪರಿಯ ಶರಣರಿಗೆ ಶರಣು ಶರಣಾರ್ಥಿ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಪ್ರಸಾದವ ಪಡೆದವರೆಂದು ಅಗಲತುಂಬ ಒಟ್ಟಿಸಿಕೊಂಡು ಮಿಗೆ ಸೂಸಿ ಜಿಹ್ವೆಲಂಪಟವಿಷಯದೊಳ್ಮುಳುಗಿ, ನೆಗೆನೆಗೆದು ಕೊಂಬ ಭಗಜನಿತ ಬಟ್ಟೆಹರಕರಿಗೆ ಅಪ್ರತಿಮಪ್ರಸಾದ ಸಾಧ್ಯವಹುದೆ ಅನಿಮಿಷಪ್ರಕಾಶ ಆನಂದಮಯಪ್ರಸಾದಿಗಲ್ಲದೆ? ಅನಿಷ್ಟಬದ್ಧರಂತಿರಲಿ; ಗುರುನಿರಂಜನ ಚನ್ನಬಸವಲಿಂಗಕ್ಕೆ ಸಾವಧಾನಭಾವಿಯೇ ಪ್ರಸಾದಿ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹೃದಯಕಮಲ ಮಧ್ಯದ ಶುದ್ಧಾತ್ಮನನು ಸಿದ್ಧ ವಿದ್ಯಾಧರ ನಿರ್ದೇಹಿಗಳು ಬಲ್ಲರೆ ? ಕಾಯದ ಕೈಯಲಿ ಕೊಟ್ಟುದು ಮಾಯಾಮುಖದರ್ಪಿತ. ಇದಾವ ಮುಖವೆಂದರಿಯದೆ ಭ್ರಮೆ [ಗೊಂಡು]ಹೋದರು. ಕೊಂಬ ಕೊಡುವ ಎಡೆಯನಿಂಬಿನ ಗ್ರಾಹಕ ಬಲ್ಲ. ಕೂಡಲಚೆನ್ನಸಂಗನಲ್ಲಿ ಬಸವಣ್ಣಪ್ರಭು ಬಲ್ಲ.
--------------
ಚನ್ನಬಸವಣ್ಣ
ಹೊಟ್ಟೆಯ ಹೊರೆಯಲಾರದೆ ಕಟ್ಟು ಸಂಸಾರವ ಕಡೆಗಿಟ್ಟು ನೆಟ್ಟನೆ ಜಂಗಮವೇಷವ ಹೊತ್ತು, ಬಟ್ಟೆಯ ಬೆಳಗನರಿಯದೆ ಕಟ್ಟು ಕ್ರಿಯಾರಾಧನೆಯ ತೋರಿ, ಪಡೆದುಂಬ ಭಕ್ತರನರಸಿ, ಕುಟಿಲವೈರಾಗ್ಯದಿಂದವರ ದ್ರವ್ಯವ ಸೆಳೆದುಕೊಂಡು ಮಾಡಿ ನೀಡಿ ಕೊಂಬ ದಾಸೋಹಿಜಂಗಮವೆನಿಸಿ ನಡೆವವರನೆಂತು ಜಂಗಮಲಿಂಗವೆನ್ನಬಹುದು? ಕೆಟ್ಟೊಡಲ ನಷ್ಟಜಂಗುಳಿಗಳ ಎನ್ನತ್ತ ತೋರದಿರಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗಸಂಬಂದ್ಥಿಗಳೆಂದು ಹೇಳಿಕೊಂಬ ಹೆಂಗಳೆ ಹೇಮಲೋಷ್ಠ್ರ ರತಿಸಂಯುಕ್ತ ಮತಿನಾಶ ಮಲಭುಂಜಕರು, ಅತೀತಪ್ರಸಾದವನರಿದರ್ಪಿಸಿಕೊಂಬ ಭೇದವನರಿಯದೆ ಹಸುವಿನೊಡಲಿಗೆ ಹವಣವರಿಯದೆ ಜಿನುಗುವ ಜಿಹ್ವೆಲಂಪಟಗೂಡ್ಥಿ ಕೈದುಡುಕಿಗಳಿಂದೆ ನೆಗೆನೆಗೆದು ಕೊಂಬ ಅಘಬಂಧರೆತ್ತ? ಅಪ್ರತಿಮನೆತ್ತ? ಸಲೆ ತತ್ವವೆತ್ತ? ಗುರುನಿರಂಜನ ಚನ್ನಬಸವಲಿಂಗಕ್ಕಂಗವಾಗಿರ್ದ ಅನುಪಮ ಪ್ರಸಾದಿಯೇ ನಿತ್ಯ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ನಿಂದಿಸಿ ಕೊಂಬ ಪ್ರಸಾದ ಕುನ್ನಿಯಪ್ರಸಾದ. ಅವರು ತ್ರಿವಿಧಕ್ಕೆ ಇಚ್ಫಿಸರು. ಅಲ್ಲಿ ನಿಂದಿಸಿ ಅವರ ಬಿಟ್ಟಲ್ಲಿ, ಅವರ ಹಿಂದೆ ಕೊಂಡುದು ಅವರ ಮಲಮೂತ್ರ; ಮುಂದೆ ಹುಳುಗೊಂಡವಯ್ಯಾ, ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಒಪ್ಪದ ಕಪ್ಪೆ ಸರ್ಪನ ನುಂಗಿತ್ತ ಕಂಡೆ. ತುಪ್ಪುಳು ಬಾರದ ಮರಿ ಹೆತ್ತ ತಾಯ ನುಂಗಿತ್ತ ಕಂಡೆ. ಕೊಂಬಿನ ಮೇಲಣ ಕೋಡಗ ಕೊಂಬ ನುಂಗಿತ್ತ ನೋಡಾ. ಬೀಸಿದ ಬಲೆಯ ಮತ್ಸ್ಯ ಗ್ರಾಸವ ಕೊಂಡಿತ್ತು ನೋಡಾ. ಅರಿದೆಹೆನೆಂಬ ಅರಿವ, ಮರೆದೆಹೆನೆಂಬ ಮರವೆಯ ಕಳೆದುಳಿದ ಪರಿಯಿನ್ನೆಂತೊ ? ಅರಿವುದೆ ಮರವೆ, ಮರೆವುದೆ ಅರಿವು. ಅರಿವು ಮರವೆ ಉಳ್ಳನ್ನಕ್ಕ ಕುರಿತು ಮಾಡುವುದೇನು ? ಕುರುಹಿಂಗೆ ನಷ್ಟ, ಆ ಕುರುಹಿನಲ್ಲಿ ಅರಿದೆಹೆನೆಂಬ ಅರಿವು ತಾನೆ ಭ್ರಮೆ. ಆರೆಂಬುದ ತಿಳಿದಲ್ಲಿ, ಕೂಡಿದ ಕೂಟಕ್ಕೆ ಒಳಗಲ್ಲ ಹೊರಗಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪ್ರಸಾದ ಪ್ರಸಾದವೆಂದು ಒಪ್ಪಕ್ಕೆ ಕೊಂಬ ಬೊಪ್ಪಗಳು ನೀವು ಕೇಳಿರೊ. ಕಾಯಪ್ರಸಾದವನರಿದು, ಕರಣಪ್ರಸಾದವನರಿದು, ಜೀವಪ್ರಸಾದವನರಿದು, ನಿಜಪ್ರಸಾದವನರಿದು ಕೊಳಬಲ್ಲರೆ ಪ್ರಸಾದಿ. ಕೊಂಬವರ ಕಂಡು ಪ್ರಸಾದವ ಕೈಕೊಂಡರೆ ಕಂಡವರ ಕಂಡು ಕೌದಿಯ ಹೊಲಿಯ ಹೋದರೆ ಕುಂಟೆಳೆ ಬಿದ್ದಂತೆ. ನವಿಲು ಕುಣಿಯಿತ್ತೆಂದು ಶಾಬಕ ಕುಣಿದು ಪುಚ್ಚವ ಕಳಕೊಂಡಂತೆ. ಸಿಂಹ ಲೆಂಘಣಿಸಿತ್ತೆಂದು ಸೀಳನಾಯಿ [ಲೆಂಘಣಿಸಿ] ಸೊಂಟವ ಕಳಕೊಂಡಂತೆ. ಸದ್ಭಕ್ತರ ಕಂಡು ನಾನು ಸದ್ಭಕ್ತನೆಂದು ಓಗರವ ನೀಡಿಸಿಕೊಂಡು ಅಯ್ಯಾ, ಹಸಾದ, ಮಹಾಪ್ರಸಾದವ ಪಾಲಿಸಿರೆಂದು ತನ್ನಾದಿ ಕ್ರಿಯಾದೀಕ್ಷೆ, ತನ್ನ ಮಧ್ಯೆ ಜ್ಞಾನದೀಕ್ಷೆ, ತನ್ನವಸಾನ ಮಹಾಜ್ಞಾನ ದೀಕ್ಷೆಯ ತಿಳಿಯದೆ ತನ್ನ ಪೂರ್ವಾಪರ, ತನ್ನ ಉದಯಾಸ್ತಮಾನವರಿಯದೆ, ಅರ್ಪಿತಾವಧಾನಭಕ್ತಿಯನರಿಯದೆ, ಗುರು ಲಿಂಗ ಜಂಗಮದ ನಿಲುಕಡೆಯನರಿಯದೆ, ಕಾಂಚನವ ಕೊಟ್ಟು, ಕೈಯಾಂತು ಪಡಕೊಂಬ ಭಕ್ತನ ಅಂಗವಿಕಾರವು ಮುನ್ನಿನಂತೆ. ಆ ಭಕ್ತನ ಆಚಾರ ವಿಚಾರ ನಡೆ ನುಡಿ ದೀಕ್ಷಾತ್ರಯಂಗಳ ವಿಚಾರಿಸದೆ ಪ್ರಸಾದವ ಕೊಟ್ಟ ಗುರುವಿನ ವಿಚಾರವು ಮುನ್ನಿನಂತೆ. ಈ ಉಭಯತರು, ಬಟ್ಟೆಗುರುಡನ ಕೈಯ ಬಟ್ಟೆಗುರುಡ ಹಿಡಿದು ಹಳ್ಳವ ಬಿದ್ದಂತೆ ಕಾಣಾ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಒಂದಂಗಕ್ಕೆ ಮೂರು ಯುಕ್ತಿ ಬ್ಥಿನ್ನವಾದಂತೆ, ಬ್ಥಿನ್ನವೊಂದಂಗದಲ್ಲಿ ಕೂಡಿ ಚಕ್ಷುವಿನಲ್ಲಿ ಕಂಡು ನಡೆವಂತೆ, ಅದೆಂತೆಂದಡೆ: ನಡೆವ ಚರಣ ಗುರುಮಾರ್ಗವಾಗಿ, ಕೊಡುವ ಕರ ಚರಮಾರ್ಗವಾಗಿ, ಕೊಂಬ ಜಿಹ್ವೆ ಲಿಂಗದ ಒಡಲಾಗಿ, ನೋಡುವ ಚಕ್ಷು ತ್ರಿವಿಧವ ಕೂಡಿದ ಪರಮಪ್ರಕಾಶವಾಗಿ, ಇಂತಿವನೊಡಗೂಡಿ ಕಾಬ ಸದ್ಭಕ್ತನಂಗ ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->