ಅಥವಾ

ಒಟ್ಟು 16 ಕಡೆಗಳಲ್ಲಿ , 13 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂರ್ವಚಿಂತನೆಯಿಂದ ಕಂಡು, ಉತ್ತರಚಿಂತನೆಯಿಂದ ಖಂಡಿಸಿ, ಲಕ್ಷಾಲಕ್ಷವೆಂಬ ಬೀಜಾಕ್ಷರದ ಪ್ರಣವದ ಮೂಲಾಕ್ಷರದ ಚತುರ್ಭೇದವನರಿದು, ಪಂಚಾಕ್ಷರಿ ಮುಂತಾದ ಷಡಕ್ಷರಿಯೊಳಗಾದ, ಐವತ್ತೊಂದನೆಯ ಅಕ್ಷರದಲ್ಲಿ ನಿರ್ವಾಹವೇದ ಮುಂತಾದ ಶಾಸ್ತ್ರದೊಳಗಾದ, ಪುರಾಣಾಗಮಂಗಳೆಲ್ಲವೂ ನಾನಾರೆಂಬುದ ತಿಳಿವುದಕಿಕ್ಕಿದ ಬ್ಥಿತ್ತಿ. ತನ್ನ ತಾನರಿದ ಮತ್ತೆ ಮಿಕ್ಕಾದ ಉಳುಮೆ ತನಗನ್ಯಬ್ಥಿನ್ನವಿಲ್ಲ. ಲಲಾಮಬ್ಥೀಮಸಂಗಮೇಶ್ವರಲಿಂಗವಲ್ಲದಿದೆರೆಡೆಯಲ್ಲ.
--------------
ವೇದಮೂರ್ತಿ ಸಂಗಣ್ಣ
ಹುಟ್ಟಿದ ಮನುಜರೆಲ್ಲಾ ಬಂದ ಬಟ್ಟೆಯ ನೋಡಿ ಭ್ರಮೆಗೊಂಡು ಬಳಲುತ್ತೈದಾರೆ. ಇದನರಿದು ಬಂದ ಬಟ್ಟೆಯ ಮೆಚ್ಚಿ, ಕಾಣದ ಹಾದಿಯ ಕಂಡು, ಹೋಗದ ಹಾದಿಯ ಹೋಗುತ್ತಿರಲು, ಕಾಲ ಕಾಮಾದಿಗಳು ಬಂದು ಮುಂದೆ ನಿಂದರು. ಅಷ್ಟಮದಂಗಳು ಬಂದು ಅಡ್ಡಗಟ್ಟಿದವು. ದಶವಾಯು ಬಂದು ಮುಸುಕುತಿವೆ. ಸಪ್ತವ್ಯಸನ ಬಂದು ಒತ್ತರಿಸುತಿವೆ. ಷಡುವರ್ಗ ಬಂದು ಸಮರಸವ ಮಾಡುತಿವೆ. ಕರಣಂಗಳು ಬೆಂದು ಉರಿವುತಿವೆ. ಮರವೆ ಎಂಬ ಮಾಯೆ ಬಂದು ಕಾಡುತಿವಳೆ. ತೋರುವ ತೋರಿಕೆಯೆಲ್ಲವೂ ಸುತ್ತಮೊತ್ತವಾಗಿವೆ. ಇವ ಕಂಡು ಅಂಜಿ ಅಳುಕಿ ಅಂಜನದಿಂದ ನೋಡುತ್ತಿರಲು ತನ್ನಿಂದ ತಾನಾದೆನೆಂಬ ಬಿನ್ನಾಣವ ತಿಳಿದು, ಮುನ್ನೇತರಿಂದಲಾಯಿತು, ಆಗದಂತೆ ಆಯಿತೆಂಬ ಆದಿಯನರಿದು, ಹಾದಿಯ ಹತ್ತಿ ಹೋಗಿ ಕಾಲ ಕಾಮಾದಿಗಳ ಕಡಿದು ಖಂಡಿಸಿ, ಅಷ್ಟಮದಂಗಳ ಹಿಟ್ಟುಗುಟ್ಟಿ, ದಶವಾಯುಗಳ ಹೆಸರುಗೆಡಿಸಿ, ಸಪ್ತವ್ಯಸನವ ತೊತ್ತಳದುಳಿದು, ಷಡ್ವರ್ಗವ ಸಂಹರಿಸಿ, ಕರಣಂಗಳ ಸುಟ್ಟುರುಹಿ, ಮರವೆಯೆಂಬ ಮಾಯೆಯ ಮರ್ಧಿಸಿ, ನಿರ್ಧರವಾಗಿ ನಿಂದು ಸುತ್ತ ಮೊತ್ತವಾಗಿರುವವನೆಲ್ಲ ಕಿತ್ತು ಕೆದರಿ, ಮನ ಬತ್ತಲೆಯಾಗಿ, ಭಾವವಳಿದು ನಿರ್ಭಾವದಲ್ಲಿ ಆಡುವ ಶರಣ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಂಡಮಂಡಲ ರಣಭೂಮಿಯಲ್ಲಿ ಅಖಂಡಿತಮಯರು ಕಡಿದಾಡಿ, ಹಿಡಿಖಂಡದ ಕರುಳ ಖಂಡಿಸಿ, ಶಿರ ತಂಡತಂಡದಲ್ಲಿ ದಿಂಡುರುಳಿತ್ತು. ಅಖಂಡಿತನ ಮನ ಖಂಡೆಹದ ಬೆಂಬಳಿಯ ಗಾಯದಲ್ಲಿ ಸುಖಿತನು. ರಣಭೂಮಿಯಲ್ಲಿ ಅಖಂಡಿತ ಗೆದ್ದ. ಸಗರದ ಬೊಮ್ಮನೊಡೆಯ ತನುಮನ ಕೂಡಿ ಸಂಗದ ಸಂಗಸುಖಿಯಾದ.
--------------
ಸಗರದ ಬೊಮ್ಮಣ್ಣ
ವಿಭೂತಿ ರುದ್ರಾಕ್ಷಿಯ ಧರಿಸಿ ಷಡಕ್ಷರಿಯಂ ಜಪಿಸಿ ಗುರು ಲಿಂಗ ಜಂಗಮದ ಆದ್ಯಂತವನರಿಯದೆ ಏನೆಂದು ಪೂಜಿಸುವಿರಿ, ಆರಾಧಿಸುವಿರಿ? ಅದೆಂತೆಂದಡೆ: ನೆಲದ ಮೇಲಣ ಶಿಲೆಯ ಕಲ್ಲುಕುಟಿಕ ಕಡಿದು ಖಂಡಿಸಿ ಹರದನ ಕೈಯಲ್ಲಿ ಕೊಟ್ಟು ಮಾರಿಸಿಕೊಂಡುದು ಲಿಂಗವಾದ ಪರಿ ಹೇಂಗೆ? ಸಕಲ ವ್ಯಾಪಾರ ಅಳುವಿಂಗೆ ಒಳಗಾಗಿ ತೊಡಿಸಿ ಬರೆಸಿಕೊಂಡುದು ಮಂತ್ರವಾದ ಪರಿ ಹೇಂಗೆ? ಅಜ್ಞಾನಿ ಮೃಗ ಪಶುವಿನ ಸಗಣಿಯ ಸುಟ್ಟುದು ವಿಭೂತಿಯಾದ ಪರಿ ಹೇಂಗೆ? ಪಂಚಭೂತಿಕದಿಂದ ಜನಿಸಿದ ವೃಕ್ಷದ ಫಲ ರುದ್ರಾಕ್ಷಿಯಾದ ಪರಿ ಹೇಂಗೆ? ಸಕಲ ಜೀವವೆರಸಿ ಕರಗಿದ ಆಸಿಯ ಜಲ ತೀರ್ಥವಾದ ಪರಿ ಹೇಂಗೆ? ಸಕಲ ಪ್ರಾಣಿಗಳಾಹಾರ ಹದಿನೆಂಟು ಧಾನ್ಯ ಕ್ಷುಧಾಗ್ನಿಯಲ್ಲಿ ಜನಿಸಿ ಪಚನವಾದುದು ಪ್ರಸಾದವಾದ ಪರಿ ಹೇಂಗೆ? ಅದೆಂತೆಂಡೆ: ನಿಗಮ ಶಾಸ್ತ್ರಕ್ಕೆ ಅಗಣಿತವಾದ ನಾದಬಿಂದುವಿಗೆ ನಿಲುಕದ ನಿತ್ಯತೃಪ್ತ ಪರಂಜ್ಯೋತಿಲಿಂಗದ ವೈಭವಕ್ಕೆ ಅಂಗವಾದುದು ಈ ಗುರುವಲ್ಲಾ ಎಂದು ಅರಿದು ಆ ಲಿಂಗದ ಚೈತನ್ಯ ಈ ಲಿಂಗವಲ್ಲಾ ಎಂದು ಅರಿದು ಮಾಡೂದು ತನು ಮನ ಧನ ವಂಚನೆಯಳಿದು. ಗುರುಭಕ್ತಿ ಸನ್ನಿಹಿತವಾಗಿ ಆ ಲಿಂಗದ ವದನ ಈ ಜಂಗಮವಲಾ ಎಂದರಿದು ಮಾಡೂದು ಆ ತನು ಮನ ಧನ ವಂಚನೆಯಳಿದು. ಜಂಗಮಭಕ್ತಿ ಸನ್ನಿಹಿತವಾಗಿ ಆ ಲಿಂಗದ ಕಾಯಕಾಂತಿಯ ಬೆಳಗಿನ ಐಶ್ವರಿಯಲ್ಲ ಎಂದರಿದು ಧರಿಸೂದು ಶ್ರೀ ವಿಭೂತಿಯ. ಆ ಲಿಂಗದ ಶೃಂಗಾರದ ಹರಭರಣವಲಾ ಎಂದರಿದು ಅಳವಡಿಸೂದು ರುದ್ರಾಕ್ಷಿಯನು. ಆ ಲಿಂಗದ ಉತ್ತುಂಗ ಕಿರಣಚರಣಾಂಬುಜವಲಾ ಎಂದು ಧರಿಸೂದು, ಕೊಂಬುದು ಪಾದೋದಕವನು. ಆ ಲಿಂಗದ ನಿತ್ಯಪದ ಸಂಯೋಗ ಶೇಷವ ತಾ ಎಂದರಿದು ಕೊಂಬುದು ಪ್ರಸಾದವನು. ಇಂತಿವೆಲ್ಲವನರಿದುದಕ್ಕೆ ಸಂತೋಷವಾಗಿ ಚರಿಸುವಾತನೆ ಸದ್ಭಕ್ತ. ಆತನ ಕಾಯ ಕರಣ ಪ್ರಾಣ ಭಾವಾದಿಗಳು ಸೋಂಕಿದೆಲ್ಲವೂ ಲಿಂಗದ ಸೋಂಕು, ಲಿಂಗದ ಕ್ರೀ, ಲಿಂಗದ ದಾಸೋಹ. ಇಂತೀ ತ್ರಿವಿಧವ ಸವೆದು ಅಳಿದುಳಿದ ಸದ್ಭಕ್ತನ ಶ್ರೀಪಾದಕ್ಕೆ ನಮೋ ನಮೋ ಎಂಬೆನು ಕಾಣಾ, ಬಸವಣ್ಣಪ್ರಿಯ ನಿಃಕಳಂಕ ಸೋಮೇಶ್ವರನೆ.
--------------
ನಿಃಕಳಂಕ ಚೆನ್ನಸೋಮೇಶ್ವರ
ಗಂಡಸು ಹೆಂಗಸು ಕಂಡು ಕಾಣದ ಬಂಟಾಟಬಗೆಯ ಖಂಡಿಸಿ ನಡೆವ ಮಹಿಮನು. ನಾದ ಬಿಂದು ಕಳೆಯ ಸಡಗರವ ಸುಟ್ಟು ಉರಿಯ ಬೆಳಗಕೂಡಿ, ಹಿಂದಮುಂದನುಣ್ಣದೆ ಪುಣ್ಯ ಪಾಪವ ನೋಡಿ ಸುಖಿಸುವ ಗುರುನಿರಂಜನ ಚನ್ನಬಸವಲಿಂಗಸನ್ನಿಹಿತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಬ್ರಾಹ್ಮಣದೈವವೆಂದು ಆರಾಧಿಸಿದ [ಕಾರಣ] ಗೌತಮಗೆ ಗೋವಧೆಯಾಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ಕರ್ಣನ ಕವಚ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಬಲಿಗೆ ಬಂಧನವಾಯಿತ್ತು. ವಿಷ್ಣುದೈವವೆಂದು ಆರಾಧಿಸಿದ ಕಾರಣ ಪಾಂಡವರಿಗೆ ದೇಶಾಂತರ ಯೋಗವಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಪರಶುರಾಮ ಸಮುದ್ರಕ್ಕೆ ಗುರಿಯಾದ. ವಿಷ್ಣುದೈವವೆಂದು ಆರಾಧಿಸಲು ವ್ಯಾಸನ ತೋಳು ಆಕಾಶಕ್ಕೆ ಹೋಯಿತ್ತು. ಈ ದೃಷ್ಟವಿದ್ದು, ಮಾಯಿರಾಣಿಯ ದೈವವೆಂದು ಆರಾಧಿಸಿದ ಕಾರಣ ತಲೆಯಲ್ಲಿ ಕೆರವ ಕಟ್ಟಿ, ಕೊರಳಲ್ಲಿ ಕವಡೆಯ ಕಟ್ಟಿ, ಬೇವನುಟ್ಟು, ಜಾವಡಿ ಅರಿಯ ಲಜ್ಜೆ ಹೋಯಿತ್ತು. ಮುಂದೆ ಭೈರವ ದೇವರೆಂದು ಆರಾಧಿಸಿದ ಕಾರಣ ಕರುಳ ಬೆರಳ ಖಂಡಿಸಿ ತುತ್ತು ತುತ್ತಿಗೆ ಅಂತರಂಗ ಬಹಿರಂಗವಾಯಿತ್ತು. ಮುಂದೆ ಜಿನನ ದೈವವೆಂದು ಆರಾಧಿಸಿದ ಕಾರಣ ಜೈನ ಮಾಡಿದ ಕರ್ಮ ನಿಷ್ಕರ್ಮವಾದುದಾಗಿ ನರರ ಹಾಡಿದಡೆ ಗತಿಯಿಲ್ಲ, ಕೇಳಿದರೆ ಗತಿಯಿಲ್ಲ ಹರ ನಿಮ್ಮ ಶರಣರ ಶ್ರೀಪಾದವೆ ಗತಿಯಾಗಿದ್ದೆ ನೋಡಾ. ಹರ ನಿಮ್ಮ ಶರಣರ ಒಲವಿಂದ ತುತ್ತು ಬುತ್ತಿಗೆ ಬೆನ್ನುಹತ್ತುವ ಮಾರಿ ಮಸಣಿ ಮೈಲಾರ ಹೊನ್ನ ಲಕ್ಷ್ಮಿಗಳು ಅರ್ಥ ಅಯುಷ್ಯವ ಕೊಡಬಲ್ಲವೆ ? ಒಡೆಯನಿಲ್ಲದ ಮನೆಯ ತುಡುಗುಣಿನಾಯಿ ಹೊಗುವಂತೆ, ಜಡದೇಹಿಗಳ ತನುವ ಕಾಡುತಿಹವೆಂದಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಮತ್ರ್ಯದ ಬೀಜವ ಬಿತ್ತಿ ಕುಡಿಯೊಡೆಯದ ಮುನ್ನ ಕತ್ತಲೆ ಬೆಳಗು ವಿಸ್ತರಿಸಿ ತೋರ್ಪುದರತ್ತಲೆ ನಿನ್ನ ಚಿದಂಶಿಕನಪ್ಪ ಶರಣಂಗೆ ಭೂತಳದ ಭೋಗವನೋತು ಬಳಸೆಂದು ಪ್ರೀತಿಯಿಂದ ಕಲ್ಪಿಸಿಕೊಡುವರೆ ಅಯ್ಯ? ರಾಜಹಂಸನಿಗೆ ಅಮೃತಾಹಾರವನಿಕ್ಕಬೇಕಲ್ಲದೆ ಗರುತ್ಮನ ಆಹಾರವನಿಕ್ಕುವರೆ ಅಯ್ಯ? ಅದೆಂತೆನಲು ಅವನಿಯ ಭೋಗಕ್ಕೆ ಅತಿಮಿಗಿಲೆನಿಸಿಕೊಂಬುದು ಮಜ್ಜನ ಭೋಜನ ಅನುಲೇಪನ ಆಭರಣ ವಸ್ತ್ರ ತಾಂಬೂಲವಯ್ಯ. ಇದಕ್ಕೆ ನೂರ್ಮಡಿ ಮಿಗಿಲೆನಿಸಿಕೊಂಬುದು ಸುದತಿಯರ ಮೃದುನುಡಿ ತೆಕ್ಕೆ ಚುಂಬನ ಸುರತಸಂಭ್ರಮದ ಲೀಲಾವಿನೋದವಯ್ಯ. ಆ ಸರಸ ಲೀಲಾವಿನೋದದ ಬಗೆಯ ಹೇಳಲಂಜುವೆನಯ್ಯ. ಹೇಳುವೆ- ನೀನು ಮಾಂಕೊಳದಿರಯ್ಯ. ಹೇಲಕುಳಿಯೊತ್ತಿನ ಉಚ್ಚೆಯ ಬಚ್ಚಲು. ಹಡುಕುನಾರುವ ಕೀವು ತುಂಬಿದ ಹಳೆಯ ಗಾಯ. ಕೋಲುಕುಕ್ಕುವ ತೊಗಲು ಪಡುಗ. ಆ ಪಡುಗದ ಸೊಗಸು ಮಾನವರ ತಲೆಗೇರಿ ಮುಂದಲ ಕಾಲಿನಲಿ ಅಮರ್ದಪ್ಪಿ ಪಿಡಿದು ಹೆಣ್ಣುನಾಯ ಬಾಯಲೋಳೆಯ ಗಂಡುನಾಯಿ ಚಪ್ಪರಿದು ನೆಕ್ಕಿಕೊಳುತ್ತ ಬಾಯೊಳಗೆ ಕಿಸುಕುಳದ ಬಾಯನಿಕ್ಕಿ ಒಡೆಯನೊಂದಾಗಿ ಬಂದ ಹೊಸ ಮನುಷ್ಯರ ಕಂಡ ನಾಯಂತೆ ಕರುಗಳ ಹಾಕುವ ಕಾಮದೈನ್ಯರ ಕರ್ಮಭೋಗಮಂ ಕಂಡು ಹರಣ ಹಾರಿ ಮನ ನಾಚಿ ಹೇಸಿ ಹೇಡಿಗೊಂಡು ಹೊನ್ನು ಹೆಣ್ಣು ಮಣ್ಣೆಂಬ ಮೂರು ಸಂಕಲೆಯ ಕೀಲ ಜ್ಞಾನಚೀರಣದಿಂದ ಕಡಿಗಡಿದು ವಿರಕ್ತನಾಗಿ ನಿರ್ವಾಣ ಪದಕ್ಕೆ ಕಾಮಿತನಾಗಿ ಸ್ವಾನುಭಾವದಲ್ಲಿ ಆಚರಿಸುವ ಆಚರಣೆಯಾವುದೆಂದರೆ- ಅಂಗದ ಮೇಲೆ ಲಿಂಗವುಳ್ಳ ಪಟ್ಟದರಾಣಿ ಅರಸುವೆಣ್ಣು ಅನಾದಿನಾಯಕಿ ಜಾರೆ ಪತಿವ್ರತೆ ಪುಂಡುವೆಣ್ಣು ಕೆಂಪಿ ಕರಿಕಿ ದಾಸಿ ವೇಶಿ ಮೊಂಡಿ ಮೂಕೊರತಿ ಕುಂಟಿ ಕುರುಡಿ ಇವರೆಲ್ಲರ ಭಕ್ತಿಯಿಂ ಸಮಾನಂಗಂಡು ಇವರೆಲ್ಲರಂ ಗುರುವಿನ ರಾಣಿವಾಸಕ್ಕೆ ಸರಿಯೆಂದು ನಿರ್ಧರಿಸಿ ಊರ್ವಶಿ ರಂಭೆ ತಿಲೋತ್ತಮೆಯರಿಗೆ ಸರಿಯಾದ ಶಂಖಿನಿ ಪದ್ಮಿನಿಗೆಣೆಯಾದ ರತಿಯ ಲಾವಣ್ಯಕ್ಕೆ ಸರಿಮಿಗಿಲೆನಿಪ ಚಿಲುವೆಣ್ಣುಗಳ ಗೋಮಾಂಸ ಸುರೆಗೆ ಸರಿಯೆಂದು- ಭಾವಿಸಿದೆನಯ್ಯ ನೀ ಸಾಕ್ಷಿಯಾಗಿ. ಕಬ್ಬುವಿಲ್ಲನಂ ಖಂಡಿಸಿ ಕಾಸೆಯನಳಿದು ಸೀರೆಯನುಟ್ಟು ಗಂಡು ಹೆಣ್ಣಾಗಿ ನಿನಗೆ ವಧುವಾದೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ತಿಲದ ಮರೆಯ ತೈಲವ ಅರೆದು ಕಾಬಂತೆ ಚಂದನದ ಮರೆಯ ಗಂಧವ ಬಂಧಿಸಿ ಕಾಬಂತೆ [ಶೃಂ]ಗಿಯ ನಾದವ ಖಂಡಿಸಿ ಅರಿವಂತೆ ಇಷ್ಟಜ್ಞಾನವನರಿವುದಕ್ಕೆ ಇದೇ ದೃಷ್ಟ. ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಪ್ರಾಣಲಿಂಗಿಯ ಸ್ಥಲ.
--------------
ಬಿಬ್ಬಿ ಬಾಚಯ್ಯ
ಇತ್ತಲಾಗಿ,ಅದೇ ನಿರಾಕಾರಪರಿಪೂರ್ಣ ಪರಶಿವಮೂರ್ತಿಯೆ ನಿಜಗುರುಲಿಂಗಜಂಗಮಲೀಲೆಯ ಧರಿಸಿ, ಪಾವನಾರ್ಥವಾಗಿ ಪಂಚಮಹಾಪಾತಕಸೂತಕಂಗಳ ಬಾಹ್ಯಾಂತರಂಗಳಲ್ಲಿ ಮಹಾಜ್ಞಾನ ಕ್ರಿಯಾಚರಣದಿಂದ ಕಡಿದು ಕಂಡರಿಸಿ, ಬಿಡುಗಡೆಯನುಳ್ಳ ಹರಗಣಂಗಳಿಗೆ ನಿಜೇಷ*ಲಿಂಗ ಭಸಿತ ರುದ್ರಾಕ್ಷಿಗಳ ಕಾಯವೆನಿಸಿ, ಸತ್ಕ್ರಿಯಾಚಾರ ಭಕ್ತಿ ಸಾಧನೆಯ ನಿರ್ವಾಣಪದವಿತ್ತರು ನೋಡಾ. ಅಲ್ಲಿಂದ ಚಿತ್ಪಾದೋದಕ ಪ್ರಸಾದ ಮಂತ್ರವೆ ಪ್ರಾಣವೆನಿಸಿ, ಶಿವಯೋಗಾನುಸಂಧಾನದಿಂದ ಮಹಾಜ್ಞಾನದ ಚಿದ್ಬೆಳಗನಿತ್ತರು ನೋಡಾ. ಆ ಬೆಳಗೆ ತಾವಾದ ಶರಣಗಣಾರಾಧ್ಯ ಭಕ್ತಮಹೇಶ್ವರರು, ಅನ್ಯಮಣಿಮಾಲೆಗಳ ಧರಿಸಿ, ಅನ್ಯಜಪಕ್ರಿಯೆಗಳ ಮಾಡಲಾಗದು. ಅದೇನು ಕಾರಣವೆಂದಡೆ : ಹಿಂದೆ ಕಲ್ಯಾಣಪಟ್ಟಣದಲ್ಲಿ ಚೆನ್ನಮಲ್ಲಿಕಾರ್ಜುನಾರಾಧ್ಯರು, ಉಡುತಡಿ ಮಹಾದೇವಿಗಳು ಪುರುಷನ ಬಿಡುಗಡೆಯ ಮಾಡಿ, ವೈರಾಗ್ಯದೊಳ್ ಅಲ್ಲಮಪ್ರಭುವಿದ್ದೆಡೆಗೆ ಬಂದು ಶರಣಾಗತರಾಗಲು, ಆ ಪ್ರಭುಸ್ವಾಮಿಗಳು ಅವರೀರ್ವರ ಭಕ್ತಿಜ್ಞಾನವೈರಾಗ್ಯ ಸದಾಚಾರಕ್ರಿಯಾವರ್ತನೆಯ ನೋಡಿ ಸಂತೋಷಗೊಂಡು, ಇಂತಪ್ಪ ಸದ್ಧರ್ಮಿಗಳಂ ದಂಡನಾಥ ಮೊದಲಾಗಿ ಅಕ್ಕನಾಗಾಂಬಿಕೆಯು ಮೊದಲಾದ ಪ್ರಮಥಗಣಾದ್ಯರಿಗೆ ದರುಶನ ಸ್ಪರುಶನ ಸಂಭಾಷಣೆ ಪಾದೋದಕ ಪ್ರಸಾದಾನುಭಾವವೆಂಬ ಷಡ್ರಸಾಮೃತವ ಕೊಡಿಸಬೇಕೆಂದು, ತಮ್ಮ ಭಾವದ ಕೊನೆಯಲ್ಲಿ ಅಚ್ಚೊತ್ತಿ , ಹರುಷಾನಂದ ಹೊರಚೆಲ್ಲಿ , ಆಗವರೀರ್ವರಂ ಕೈವಿಡಿದು ಕಲ್ಯಾಣಪಟ್ಟಣಕ್ಕೆ ಹೋಗಿ, ಅನಾದಿ ಪ್ರಮಥಗಣಾಧೀಶ್ವರರ ಸಂದರ್ಶನವಾಗಬೇಕೆಂದು ಕರೆದಲ್ಲಿ , ಆಗ ಮಹಾದೇವಿಯಮ್ಮನು ಸಂತೋಷಂಗೊಂಡು, ಹರಹರಾ ಸ್ವಾಮಿ ಅವರಲ್ಲಿ ಸನ್ಮಾರ್ಗ ನಡೆನುಡಿಗಳೇನೆಂದು ಬೆಸಗೊಳಲು, ಅವರು ಕೇವಲ ಪರಿಪೂರ್ಣಜ್ಯೋತಿರ್ಮಯ ಲಿಂಗಜಂಗಮದಲ್ಲಿ ಕೂಟಸ್ಥರಾಗಿ, ಬಾಹ್ಯಾಂತರಂಗದೊಳ್ ಪರಮಪಾತಕ ಸೂತಕ ಅನಾಚಾರ ಅಜ್ಞಾನ ಅಪಶೈವ ಅಸತ್ಯವಿರಹಿತರಾಗಿ, ನಿರ್ವಂಚಕ ನಿಃಪ್ರಪಂಚ ನಿರ್ವಾಣ ನಿಃಕಾಮ ಸತ್ಯಶುದ್ಧಕಾಯಕ ಸದಾಚಾರ ಕ್ರಿಯಾಜ್ಞಾನಾನಂದ ನಡೆನುಡಿಯುಳ್ಳ ಸದ್ಧರ್ಮ ಅಪಾತ್ರ ಸತ್ಪಾತ್ರವರಿದ ಶಿವಸನ್ಮಾನಿತರು, ನಿಜಾನಂದಯೋಗತೂರ್ಯರು, ಕೇವಲ ಪರಶಿವನಪ್ಪಣೆವಿಡಿದು ಚಿಚ್ಛಕ್ತಿಗಳೊಡಗೂಡಿ ಪಾವನಾರ್ಥ ಅಷ್ಟಾವರಣ ನಿಜವೀರಶೈವಮತೋದ್ಧಾರಕ ಮಹಿಮರ ಚರಣದ ದರುಶನಮಾತ್ರದಿಂದಿವೆ ಜ್ಯೋತಿರ್ಮಯ ಕೈವಲ್ಯಪದವಪ್ಪುದು ತಪ್ಪದುಯೆಂದು ಅಲ್ಲಮನುಸುರಲು, ಆಗ ಸಮ್ಯಕ್‍ಜ್ಞಾನಿ ಮಹಾದೇವಿಯರು ಸತ್ಕ್ರಿಯಾಮೂರ್ತಿ ಚೆನ್ನಮಲ್ಲಿಕಾರ್ಜುನಗುರುವರನು ಸಂತೋಷಗೊಂಡು, ತ್ರಿವಿಧರು ಕಲ್ಯಾಣಕ್ಕೆ ಅಭಿಮುಖವಾಗಲು, ಆ ಪ್ರಶ್ನೆಯು ಹಿರಿಯ ದಂಡನಾಥಂಗೆ ಲಿಂಗದಲ್ಲಿ ಪ್ರಸನ್ನವಾಗಲು, ಆಗ ಸಮಸ್ತಪ್ರಮಥರೊಡಗೂಡಿ, ಆ ಅಲ್ಲಮರು ಸಹಿತ ತ್ರಿವಿಧರು ಬರುವ ಮಾರ್ಗಪಥದಲ್ಲಿ ಅಡಿಯಿಡುವುದರೊಳಗೆ, ಇಳೆಯಾಳ ಬ್ರಹ್ಮಯ್ಯನೆಂಬ ಶಿವಶರಣನು ಈ ತ್ರಿವಿಧರಿಗೆ ಲಿಂಗಾರ್ಚನಾರ್ಪಣಕ್ಕೆ ಶರಣಾಗತನಾಗಿರಲು, ಅವರು ಅರ್ಚನಾರ್ಪಣಕ್ಕೆ ಬಪ್ಪದೆ ಇರ್ಪಷ್ಟರೊಳಗೆ ಹಿರಿದಂಡನಾಥ ಪ್ರಮಥರೊಡಗೂಡಿ, ಅಲ್ಲಮ ಮೊದಲಾದ ತ್ರಿವಿಧರಿಗೆ ವಂದಿಸಿ, ಲಿಂಗಾರ್ಚನಾರ್ಪಣಕ್ಕೆ ಶರಣುಶರಣಾರ್ಥಿಯೆನಲು, ಆಗ ಮಹಾದೇವಿಯಮ್ಮನವರು ಒಂದು ಕಡೆಗೆ ಕೇಶಾಂಬರವ ಹೊದೆದು, ಶರಣುಶರಣಾರ್ಥಿ ನಿಜವೀರಶೈವ ಸದ್ಧರ್ಮ ದಂಡನಾಥ ಮೊದಲಾದ ಸಮಸ್ತ ಗಣಾರಾಧ್ಯರುಗಳ ಶ್ರೀಪಾದಪದ್ಮಂಗಳಿಗೆಯೆಂದು ಸ್ತುತಿಸುವ ದನಿಯ ಕೇಳಿ, ಸಮಸ್ತ ಗಣಸಮ್ಮೇಳವೆಲ್ಲ ಒಪ್ಪಿ ಸಂತೋಷಗೊಂಡು, ಶರಣೆಗೆ ಶರಣೆಂದು ಬಿನ್ನಹವೆನಲು, ನಿಮಗಿಂದ ಮೊದಲೆ ಶರಣುಹೊಕ್ಕ ಶಿವಶರಣೆಗೆ ಏನಪ್ಪಣೆ ಸ್ವಾಮಿಯೆನಲು, ಆಗ ಆ ಬ್ರಹ್ಮಯ್ಯನು ಅಲ್ಲಮಪ್ರಭು ಚನ್ನಮಲ್ಲಿಕಾರ್ಜುನ ದಂಡನಾಥ ಮೊದಲಾದ ಸಮಸ್ತಪ್ರಮಥಗಣ ಸಮ್ಮೇಳಕ್ಕೆ ಶರಣುಶರಣಾರ್ಥಿ, ಈ ತನು-ಮನ-ಧನವು ನಿಮಗೆ ಸಮರ್ಪಣೆಯಾಗಬೇಕೆಂದು ಅಭಿವಂದಿಸಲು, ಆಗ ಕಲಿಗಣನಾಥ ಕಲಕೇತಯ್ಯಗಳು ನೀವು ನಿಮ್ಮ ಪ್ರಮಥರು ಅರೆಭಕ್ತಿಯಲ್ಲಾಚರಿಸುತ್ತಿಪ್ಪಿರಿ, ನಿಮ್ಮ ಗೃಹಕ್ಕೆ ನಿರಾಭಾರಿವೀರಶೈವಸಂಪನ್ನೆ ಮಹಾದೇವಿಯಮ್ಮನವರು ಬರೋದುಯೆಂಥಾದ್ದೊ ನೀವೆ ಬಲ್ಲಿರಿ. ಆ ಮಾತ ನೀವೆ ವಿಚಾರಿಸಬೇಕೆಂದು ನುಡಿಯಲು, ಆಗ ಬ್ರಹ್ಮಯ್ಯಗಳು ತಮ್ಮ ಕರ್ತನಾದ ಕಿನ್ನರಿಯ ಬ್ರಹ್ಮಯ್ಯನ ಕಡೆಗೆ ದೃಷ್ಟಿಯಿಟ್ಟು ನೋಡಲು, ಆ ಕಿನ್ನರಿಯ ಬ್ರಹ್ಮಯ್ಯನು ಹರಹರಾ, ಶರಣುಶರಣಾರ್ಥಿ, ನಮಗೆ ತಿಳಿಯದು, ನಿಮ್ಮ ಕೃಪೆಯಾದಲ್ಲಿ ನಮ್ಮ ಅರೆಭಕ್ತಿಸ್ಥಲವನಳಿದುಳಿದು, ನಿಮ್ಮ ಸದ್ಧರ್ಮ ನಿಜಭಕ್ತಿಮಾರ್ಗವ ಕರುಣಿಸಿ, ದಯವಿಟ್ಟು ಪ್ರತಿಪಾಲರ ಮಾಡಿ ರಕ್ಷಿಸಬೇಕಯ್ಯಸ್ವಾಮಿಯೆಂದು ಅಭಿವಂದಿಸಲು, ಅಯ್ಯಾ, ನಿಮ್ಮಿಬ್ಬರಿಂದಲೇನಾಯ್ತು ? ಇನ್ನೂ ಅನೇಕರುಂಟುಯೆಂದು ಕಲಿಗಣ ಕಲಕೇತರು ನುಡಿಯಲು, ಹರಹರಾ, ಪ್ರಭುಸ್ವಾಮಿಗಳೆ ನಿಮ್ಮಲ್ಲಿ ನುಡಿ ಎರಡಾಯಿತ್ತು , ಅದೇನು ಕಾರಣವೆಂದು ಮಹಾದೇವಿಯಮ್ಮನವರು ಪ್ರಭುವಿನೊಡನೆ ನುಡಿಯಲು, ಆಗ ಆ ಪ್ರಭುಸ್ವಾಮಿಗಳು ಅಹುದಹುದು ತಾಯಿ ನಾವು ನುಡಿದ ನುಡಿ ದಿಟ ದಿಟವು. ನಿಮ್ಮಂಶವಲ್ಲವಾದಡೆ ನಿಮಗಡಿಯಿಡಲಂಜೆಯೆಂದು ನುಡಿಯಲು, ಹರಹರಾ, ಹಾಗಾದೊಡೆ ಅವರ ಬಿನ್ನಹಂಗಳ ಕೈಕೊಂಡು ಅವರಲ್ಲಿರುವ ಅಸತ್ಯಾಚಾರದವಗುಣಗಳ ನಡೆನುಡಿಗಳ ಪರಿಹರಿಸಬೇಕು. ಮುಸುಂಕೇತಕೆ ಸ್ವಾಮಿಯೆಂದು ಮಹಾದೇವಮ್ಮನವರು ನುಡಿಯಲು, ಆಗ ಹಿರಿದಂಡನಾಥನು ಹರಹರಾ ನಮೋ ನಮೋಯೆಂದು ಕಲಿಗಣನಾಥ ಕಲಕೇತರೆ ನಮ್ಮವಗುಣಂಗಳ ಪರಿಹರಿಸಿ, ನಿಮ್ಮ ಕವಳಿಗೆಗೆ ಯೋಗ್ಯರಾಗುವಂತೆ ಪ್ರತಿಜ್ಞೆಯ ಮಾಡಿ, ನಮ್ಮ ಬಿನ್ನಪವನವಧರಿಸಿ ಲಿಂಗಾರ್ಚನಾರ್ಪಣಗಳ ಮಾಡಬೇಕು ಗುರುಗಳಿರಾಯೆಂದು ಅಭಿವಂದಿಸಲು, ಆ ನುಡಿಗೆ ಸಮಸ್ತಗಣ ಪ್ರಮಥಗಣಾರಾಧ್ಯರೆಲ್ಲ ಅಭಿವಂದಿಸಿ, ನಮ್ಮರೆಭಕ್ತಿ ನಿಲುಕಡೆಯೇನೆಂದು ಹಸ್ತಾಂಜುಲಿತರಾಗಿ ಇದಿರಿಗೆ ನಿಲಲು, ಆಗ ಆ ಕಲಿಗಣನಾಥ ಕಲಕೇತಯ್ಯಗಳು ನುಡಿದ ಪ್ರತ್ಯುತ್ತರವು ಅದೆಂತೆಂದೊಡೆ: ಅಯ್ಯಾ, ಕೈಲಾಸದಿಂದ ಪರಶಿವಮೂರ್ತಿ ನಿಮಗೆ ಅಷ್ಟಾವರಣ ಪಂಚಾಚಾರ ಸತ್ಯಶುದ್ಧ ನಡೆನುಡಿ ವೀರಶೈವಮತ ಸದ್ಭಕ್ತಿ ಮಾರ್ಗವ ಮತ್ರ್ಯಲೋಕದ ಮಹಾಗಣಗಳಿಗೆ ತೋರಿ, ಎಚ್ಚರವೆಚ್ಚರವೆಂದು ಬೆನ್ನಮೇಲೆ ಚಪ್ಪರಿಸಿ, ನಿಮ್ಮ ತನುಮನಧನವ ಶ್ರೀಗುರುಲಿಂಗಜಂಗಮಕ್ಕೆ ಸಮರ್ಪಿಸಿ, ವರಗುರುಲಿಂಗಜಂಗಮದ ಮಹಾಬೆಳಗಿನೊಳಗೆ ಬನ್ನಿರೆಂದು ಪ್ರತಿಜ್ಞೆಯ ಮಾಡಿ, ಪಂಚಪರುಷವ ಕೊಟ್ಟು, ಆ ಜಡಶಕ್ತಿಸಮ್ಮೇಳನೆನಿಸಿ ಕಳುಹಿಕೊಟ್ಟಲ್ಲಿ, ನೀವು ಬಂದು, ಎರಡುತೆರದಭಕ್ತಿಗೆ ನಿಂದುದೆ ಅರೆಭಕ್ತಿಸ್ಥಲವೆಂದು ನುಡಿಯಲು, ಆ ಎರಡುತೆರದ ಭಕ್ತಿ ವಿಚಾರವೆಂತೆಂದಡೆ : ಒಮ್ಮೆ ನಿಮ್ಮ ತನು-ಮನ-ಧನ, ನಿಮ್ಮ ಸತಿಸುತರ ತನುಮನಧನಂಗಳು ಶೈವಮತದವರ ಭೂಪ್ರತಿಷಾ*ದಿಗಳಿಗೆ ನೈವೇದ್ಯವಾಗಿರ್ಪವು. ಆ ನೈವೇದ್ಯವ ತಂದು ಶ್ರೀಗುರುಲಿಂಗಜಂಗಮಕ್ಕೆ ನಮ್ಮ ತನುಮನಧನವರ್ಪಿತವೆಂದು ಹುಸಿ ನುಡಿಯ ನುಡಿದು, ಎರಡು ಕಡೆಗೆ ತನುಮನಧನಂಗಳ ಚೆಲ್ಲಾಡಿ, ಅಶುದ್ಧವೆನಿಸಿ ಶುದ್ಧಸಿದ್ಧಪ್ರಸಿದ್ಧಪ್ರಸಾದ ನಮ್ಮ ತನುಮನಧನಂಗಳೆಂದು, ಕಾಯಾರ್ಪಣ ಕರಣಾರ್ಪಣ ಭಾವಾರ್ಪಣವೆಂದು ಒಪ್ಪವಿಟ್ಟು ನುಡಿವಲ್ಲಿ, ನೀವು ವೀರಶೈವಸಂಪನ್ನರೆಂತಾದಿರಿ ? ನಿಮ್ಮಲ್ಲಿ ಲಿಂಗಾರ್ಚನಾರ್ಪಣವೆಂತಾಗಬೇಕು ? ಹೇಳಿರಯ್ಯ ಪ್ರಮಥರೆಯೆಂದು ನುಡಿಯಲು, ಆಗ್ಯೆ ಏಳುನೂರಾಯೆಪ್ಪತ್ತು ಅಮರಗಣಂಗಳೆಲ್ಲ ಬೆರಗಾಗಿ, ಆ ಹರಹರಾ ಅಹುದಹುದೆಂದು ಬಂದ ನುಡಿ ತಪ್ಪಿ ನಡೆದೆವೆಂದು ಒಪ್ಪಿ ಒಡಂಬಟ್ಟು, ಅರೆಭಕ್ತಿ ಮಾಡುವವರ ವಿಚಾರಿಸಿ, ಕಡೆಗೆ ತೆಗೆದು ಗಣಿತವ ಮಾಡಿದಲ್ಲಿ, ಮುನ್ನೂರರವತ್ತು ಗಣಂಗಳಿರ್ಪರು. ಆ ಗಣಂಗಳ ಸಮ್ಮೇಳವ ಕೂಡಿಸಿ ಒಂದೊಡಲಮಾಡಿ, ನಿಮ್ಮೊಳಗಣ ಪ್ರೀತಿಯೇನೆಂದು ಮಹಾದೇವಮ್ಮನವರು ನುಡಿದು ಹಸ್ತಾಂಜುಲಿತರಾಗಿ ಬೆಸಗೊಳಲು, ಆಗ ಮುನ್ನೂರರವತ್ತು ಗಣಂಗಳು ನುಡಿವ ಪ್ರತ್ಯುತ್ತರ ಅದೆಂತೆಂದಡೆ : ಹರಹರಾ, ನಾವು ಬಂದ ಬಟ್ಟೆ ಅಹುದಹುದು, ಇಲ್ಲಿ ನಿಂದ ನಡೆ ಅಹುದಹುದು. ನಾವು ಕ್ರಿಯಾಮಾರ್ಗವ ಬಿಟ್ಟು ಮಹಾಜ್ಞಾನಮಾರ್ಗವ ಭಾವಿಸಿದೆವು, ಎಡವಿಬಿದ್ದೆವು, ತಪ್ಪನೋಡದೆ, ಒಪ್ಪವಿಟ್ಟು ಉಳುಹಿಕೊಳ್ಳಿರಯ್ಯ. ನಡೆಪರುಷ, ನುಡಿಪರುಷ, ನೋಟಪರುಷ, ಹಸ್ತಪರುಷ, ಭಾವಪರುಷರೆ ತ್ರಾಹಿ ತ್ರಾಹಿ, ನಮೋ ನಮೋಯೆಂದು ಅಭಿವಂದಿಸಲು, ಆಗ ಚೆನ್ನಮಲ್ಲಾರಾಧ್ಯರು, ನೀವು ತಪ್ಪಿದ ತಪ್ಪಿಗೆ ಆಜ್ಞೆಯೇನೆಂದು ನುಡಿಯಲು, ಆಗ್ಯೆ ಮುನ್ನೂರರವತ್ತು ಗಣಂಗಳು ನುಡಿದ ಪ್ರತ್ಯುತ್ತರವದೆಂತೆಂದೊಡೆ : ಅಯ್ಯಾ, ನಾವು ತಪ್ಪಿದ ತಪ್ಪಿಂಗೆ ಕ್ರಿಯಾಲೀಲೆಸಮಾಪ್ತಪರ್ಯಂತರವು ನಾವು ಮುನ್ನೂರರವತ್ತು ಕೂಡಿ, ನಿತ್ಯದಲ್ಲು ನಿಮಗೆ ಗುರುಲಿಂಗಜಂಗಮಕ್ಕೆ ಆರಾಧನೆಯ ಮಾಡಿ, ಕೌಪ ಕಟಿಸೂತ್ರ ಹುದುಗು ಶಿವದಾರ ವಿಭೂತಿ ವಸ್ತ್ರ ಪಾವುಡ ರಕ್ಷೆ ಪಾವುಗೆಗಳ ಪರುಷಕೊಂದು ಬಿನ್ನಹಗಳ ಸತ್ಯಶುದ್ಧ ಕಾಯಕವ ಮಾಡಿ, ಋಣಪಾತಕರಾಗದೆ, ನಿಮ್ಮ ತೊತ್ತಿನ ಪಡಿದೊತ್ತೆನಿಸಿರಯ್ಯಯೆಂದು ಅಭಿವಂದಿಸಲು, ಆಗ ಅಲ್ಲಮಪ್ರಭು ಮೊದಲಾದ ಘನಗಂಭೀರರೆಲ್ಲ ಒಪ್ಪಿ, ಶೈವಾರಾಧನೆಗಳಂ ಖಂಡಿಸಿ, ವೀರಶೈವ ಗುರುಲಿಂಗಜಂಗಮ ಭಕ್ತರೆ ಘನಕ್ಕೆ ಮಹಾಘನವೆಂದು ನುಡಿ ನಡೆ ಒಂದಾಗಿ, ಚೆನ್ನಮಲ್ಲಾರಾಧ್ಯರ ನಿರೂಪದಿಂದ ದಂಡನಾಥನ ಭಕ್ತಿಪ್ರಿಯರಾದ ಲಕ್ಷದಮೇಲೆ ತೊಂಬತ್ತಾರುಸಾವಿರ ಘನದೊಳಗೆ ಮಾರ್ಗಕ್ರಿಯೆ ಮೀರಿದ ಕ್ರಿಯಾಚರಣೆಸಂಬಂಧ ಸ್ವಸ್ವರೂಪ ಜ್ಞಾನಾಚಾರ ನಡೆನುಡಿ ಅಚ್ಚಪ್ರಸಾದ ನಿಚ್ಚಪ್ರಸಾದ ಸಮಯಪ್ರಸಾದವೆ ತಮಗೆ ಅಂಗ ಮನ ಪ್ರಾಣವಾಗಿ, ಮೊದಲಾದ ಚಿತ್ಕಲಾಪ್ರಸಾದ ಸಲ್ಲದ ಗಣಂಗಳ ಕಲಿಗಣನಾಥ ಕಲಕೇತರು ಖಂಡಿಸಿ ಆ ಹನ್ನೆರಡುಸಾವಿರಮಂ ತೆಗೆದು ಚೆನ್ನಮಲ್ಲಾರಾಧ್ಯರಿಗೆ ತೋರಲು, ಅವರು ಗಣಸಮೂಹಂಗಳೆಲ್ಲ ಸಂತೋಷದಿಂದ ಸನ್ಮತಂಬಟ್ಟು ಒಪ್ಪಿದ ತದನಂತರದೊಳು, ಪ್ರಭುಸ್ವಾಮಿಗಳು ಅಯ್ಯಾ, ದಂಡನಾಥ ಮೊದಲಾದ ಅಸಂಖ್ಯಾತ ಪ್ರಮಥಗಣಂಗಳೆ ಇನ್ನು ಹಿಂದಣ ಅರೆಭಕ್ತಿಸ್ಥಲವ ಮೆಟ್ಟಿದ ಪುತ್ರ ಮಿತ್ರ ಕಳತ್ರರ ಒಡಗೂಡಿ ಬಳಸಿದೊಡೆ, ಅಷ್ಟಾವರಣ ಪಂಚಾಚಾರಕ್ಕೆ ಹೊರಗೆಂದು ನಿಮ್ಮ ಗಣ ಮೆಟ್ಟಿಗೆಯಲಿ ಪಾವುಡವ ಕೊರಳಿಗೆ ಸುತ್ತಿ, ಭವದತ್ತ ನೂಂಕಿ, ಕಾಮಕಾಲರ ಪಾಶಕ್ಕೆ ಕೊಟ್ಟೆವೆಂದು ನುಡಿಯಲು, ಆ ಮಾತಿಗೆ ದಂಡನಾಥ ಮೊದಲಾದ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಚಿತ್ಕಲಾಪ್ರಸಾದಿಗಣಂಗಳೆಲ್ಲ ಎದ್ದು , ಹಸ್ತಾಂಜುಲಿತರಾಗಿ, ಹಸಾದ ಹಸಾದವೆಂದು ಕೈಕೊಂಡು, ಪರಮಪಾತಕಸೂತಕನಾಚರಂಗಳಂ ವಿಡಂಬಿಸಿ, ಶಿವಲಿಂಗಲಾಂಛನಯುಕ್ತರಾದ ಶಿವಜಂಗಮದ ಭಿಕ್ಷಾನ್ನದ ಶಬ್ದಮಂ ಕೇಳಿ, ಕ್ಷುಧೆಗೆ ಭಿಕ್ಷೆ, ಸೀತಕ್ಕೆ ವಸನಮಂ ಸಮರ್ಪಿಸಿ ಹಿರಿಕಿರಿದಿನ ನೂನಕೂನಂಗಳಂ ನೋಡದೆ ಶಿವರೂಪವೆಂದು ಭಾವಿಸಿ, ಅಲ್ಲಿ ಚೆನ್ನಮಲ್ಲಿಕಾರ್ಜುನಾರಾಧ್ಯ ಕಲಿಗಣನಾಥ ಕಲಕೇತರು ಖಂಡಿಸಿದ ಹನ್ನೆರಡುಸಾವಿರ ಪರಶಿವಜಂಗಮದೊಡನೆ ತೀರ್ಥಪ್ರಸಾದಾನುಭಾವ ಸಮರಸದಾಚರಣೆಯಂ ಬಳಸಿ ಬ್ರಹ್ಮಾನಂದರಾಗಿ, ಚಿತ್ಕಲಾಪ್ರಸಾದಿ ಜಂಗಮದೊಡವೆರೆದು, ಅಚ್ಚಪ್ರಸಾದಿಗಳು ಅಚ್ಚಪ್ರಸಾದಿಗಳೊಡವೆರೆದು, ನಿಚ್ಚಪ್ರಸಾದಿ ನಿಚ್ಚಪ್ರಸಾದಿಗಳೊಡವೆರೆದು, ಸಮಯಪ್ರಸಾದಿ ಸಮಯಪ್ರಸಾದಿಗಳೊಡವೆರೆದು ಒಂದೊಡಲಾಗಿ, ಚಿತ್ಕಲಾಪ್ರಸಾದಿಗಳು ತಮ್ಮಾನಂದದಿಂದ ಅಚ್ಚಪ್ರಸಾದಿಸ್ಥಲವನಾಚರಿಸಿದೊಡೆ ಬಹುಲೇಸು, ನಿಚ್ಚಪ್ರಸಾದಿ ಸಮಯಪ್ರಸಾದಿಗಳು ಅಚ್ಚಪ್ರಸಾದಿಸ್ಥಲವನಾಚರಿಸಿದೊಡೆ ಉತ್ತಮಕ್ಕುತ್ತಮ, ಅಚ್ಚಪ್ರಸಾದಿ ನಿಚ್ಚಪ್ರಸಾದಿಸ್ಥಲಕೆ ನಿಂದಡೆ ಅಯೋಗ್ಯವೆನಿಸುವುದು. ನಿಚ್ಚಪ್ರಸಾದಿ ಸಮಯಪ್ರಸಾದಿಸ್ಥಲಕೆ ನಿಂದೊಡೆ ಅಯೋಗ್ಯರೆನಿಸುವರು. ಈ ವರ್ಮಾದಿವರ್ಮಮಂ ತ್ರಿಕರಣದಲ್ಲಿ ಅರಿದು ಮರೆಯದೆ ಸಾವಧಾನದೆಚ್ಚರದೊಡನೆ ಲಿಂಗಾಂಗಸಮರಸೈಕ್ಯದೊಡನೆ ಕೂಡಿ ಎರಡಳಿದಿರಬಲ್ಲಾತ ನಿರವಯಪ್ರಭು ಮಹಾಂತ ತಾನೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಮನ ಮಂಗಳಾಂಗಿಯೆಂಬ ಹೆಂಗೂಸಿನ ಕೈಯಲ್ಲಿ ತ್ರಿವಿಧ ಬಂಧವೆಂಬ ಗಡಿಗೆಯಿದ್ದಿತ್ತು. ಆ ಗಡಿಗೆಯ ಕೊಂಡು ಹೋಗಿ ಅವಿಗತನೆಂಬ ಬಾವಿಯಲ್ಲಿ ರವಿಶೇಖರನೆಂಬ ನೀರ ತುಂಬಿ ಬ್ರಹ್ಮಂಗೆ ಎರೆಯಲಾಗಿ ಬಾಯ ಮುಚ್ಚಿತ್ತು; ವಿಷ್ಣುವಿನ ಉಂಬ ಕೈಗೆ ಎರೆಯಲಾಗಿ ಕೈ ಖಂಡಿಸಿ ಬಿದ್ದಿತ್ತು; ರುದ್ರನ ಮಂಡೆಗೆ ಮಜ್ಜನವ ಮಾಡಲಾಗಿ ಅಂಗ ಕರಗಿ ಅವಳಂಗೈಯ ಗಡಿಗೆಯಲ್ಲಿ ಅಡಗಿದ. ಎನಗಿನ್ನು ಅಂಗವಳಿದ ಠಾವ ಹೇಳಾ, ನಿರಂಗಮಯ ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಹರಿ ಬ್ರಹ್ಮ ಇಂದ್ರ ಚಂದ್ರ ರವಿ ಕಾಲ ಕಾಮ ದಕ್ಷ ಇವರೊಳಗಾದ ಸಮಸ್ತ ದೇವ ದಾನವ ಮಾನವರೆಲ್ಲರು ಶಿವಲಿಂಗದೇವರನಾರಾಧಿಸಿಹೆವೆಂದು, ಜಪ ಧ್ಯಾನ ಮೌನಾದಿ ತಪ ನಾನಾವ್ರತ ನೇಮಂಗಳಂ ಕೈಕೊಂಡು, ಅರ್ಚನೆ ಪೂಜನೆಯಂ ಮಾಡಿ, ಹಲವು ಪ್ರಕಾರದಿಂದೊಲಿಸಿ ಅನೇಕ ಫಲಪದಮುಕ್ತಿಯಂ ಪಡೆದು ಭೋಗಿಸಿ ಸುಖಿಯಾಗಿರುತಿಹುದಕ್ಕೆ ಸಂಶಯವೇಕೆ ? ಶ್ರುತ ದೃಷ್ಟ ಅನುಮಾನದಿಂ ತಿಳಿದುನೋಡಿ ಅದಕೇನೂ ಸಂದೇಹಂ ಬಡಲಿಲ್ಲಯ್ಯಾ. ಎರಡಿಲ್ಲದೆ ಏಕವಾದ, ಭಿನ್ನದೋರದೆ ಶಿವನಂಗವಾದ ಶಿವಭಕ್ತನು ಇದರಂತೆ ಅಲ್ಲ. ಜಪ ತಪ ಧ್ಯಾನ ಮೌನ ನಾನಾವ್ರತನಿಯಮಂಗಳಂ ಕೈಕೊಂಡು ಅರ್ಚನೆ ಪೂಜನೆಯಂ ಮಾಡಿ, ಹಲವು ಪ್ರಕಾರದಿಂದೊಲಿಸಿ ಅನೇಕ ಫಲಪದಮುಕ್ತಿಯ ಪಡೆದಹೆವೆಂದು ಅಲ್ಪಾಸೆವಿಡಿದು ಭ್ರಮೆಗೊಳಗಾದ ಮರ್ಕಟಮನದ ಪರಿಯ ನೋಡಾ ! ಶಿವಶಿವ ಮಹಾದೇವಾ ಮಹಾವಸ್ತುವಿನಲ್ಲಿ ಭೇದವಿಲ್ಲದಿಪ್ಪ ಅಭೇದ್ಯ ಶರಣಂಗೆ ಜಪದ ನೇಮವೆಲ್ಲಿಯದು ? ಜಪದ ಫಲ ಕೈಸಾರಿದಂಗೆ ಧ್ಯಾನಮೌನವೆಲ್ಲಿಯದು ? ಧ್ಯಾನದೇಹ ಅಳವಟ್ಟು ಅನಂದಿಪಂಗೆ ತಪದ ತಗಹೆಲ್ಲಿಯದು ? ಇಹ-ಪರವೆಂಬ ಇದ್ದೆಸೆಗೆಟ್ಟಂಗೆ ವ್ರತನೇಮದ ನೋಂಪಿಯ ಸೂತಕವೆಲ್ಲಿಯದು ? ಉದ್ಯಾಪನೆಯಂ ಮಾಡಿ ಮಹಾಪುರುಷನಂ ಪಡೆದು ತೆರಹಿಲ್ಲದೆ ಪತಿಭಕ್ತಿಯ ಮಾಡುವ ಸಜ್ಜನ ಸತಿಗೆ ಅರ್ಚನೆ ಪೂಜನೆಯಂ ಮಾಡುವ ದಂದುಗವೆಲ್ಲಿಯದೊ ? ತನು ಮನ ಧನ ಮುಂತಾದುವೆಲ್ಲವು ಶಿವನೊಡವೆಯೆಂದು ಮಾಡುವ ಸದ್ಭಕ್ತಂಗೆ ಆವಾಗಲೂ ಶಿವನ ಸೇವೆಯ ಮಾಡುವ ಕೈಗಳಿಗೆ ಮಣಿಯ ಹಿಡಿದು ತಿರುಹಬೇಕೆಂಬ ಕೋಟಲೆಯೇಕೆ ? ಅನುಶ್ರುತವು ನೆನೆವ ಮನದ ನೆನಹ ಬಿಡಿಸಿ ಎಣಿಕೆಗಿಕ್ಕಿ ಸಂದೇಹಿಸುವ ಸಂಚಲವೇಕೆ ? ಅನಿಮಿಷನಾಗಿ ನೋಡುವ ದೃಷ್ಟಿಗೆ, ಎವೆಯ ಮರೆ ಮಾಡಿಕೊಂಡು ಕಣ್ಣುಮುಚ್ಚಲೇತಕ್ಕೆ ? ಕಣ್ಣು ಮನ ಕೈ (ಈ) ತ್ರಿಸ್ಥಾನದಲ್ಲಿರಿಸಲರಿಯದೆ ಭೇದವ ಮಾಡಿ ಅಗಲಿಸುವ ಜಪ ತಾನೇಕೆ ? ಪರಿಪೂರ್ಣವಾಗಿಹ ಸರ್ವಪದವನೀವ ಸ್ವತಂತ್ರ ಪರಾತ್ಪರವಸ್ತುವನಗಲಿ ದೂರಕಿಕ್ಕಿ, ಎಡೆದೆರಹ ಮಾಡಿ ಖಂಡಿಸಿ (ಕಂಡಹೆ)ನೆಂಬ ಧ್ಯಾನಮನವೇಕೆ ? ಸಮರ್ಥತೆಯನುಳ್ಳ ಮಹಾಪದದೊಳಗಿದ್ದು, ಅಲ್ಪಪದವ ಸಾಧಿಸೇನೆಂದು ಕಾಯವ ದಂಡಿಸಿ ಆತ್ಮನಿಗ್ರಹವ ಮಾಡಿ, ಬಟ್ಟೆಗುತ್ತಗೆತನವ ಹಣ್ಣಿ, ತಗಹಿನಲ್ಲಿ ಕುಳ್ಳಿರ್ದು ಬೇಡಿಕೊಂಬ ತಪ ತಾನೇಕೆ ? ಮುಟ್ಟಿತ್ತೆಲ್ಲ ಪವಿತ್ರ, ನೋಡಿತ್ತೆಲ್ಲ ಪಾವನ, ನಿರ್ಮಾಯನೆಂಬ ನಿರ್ಮಳಾಂಗ ನಿತ್ಯಶುದ್ಧದಾಸೋಹದೊಳಿರುತ ಸೂತಕ ಬಿಡದೆಂದು, ಜಡಕ್ರೀಯಿಂದ ಭಾಷೆಗೊಡಲ ಗುರಿಮಾಡಿ ಮೀಸಲಾಗಿಹ ಪ್ರಾಣವನಿರಿದುಕೊಂಡು ಸಾವ ಸಂಕಲ್ಪ ವ್ರತನೇಮವೇಕೆ ? ಪೂಜೆಯು ಪೂಜ್ಯನು ಪೂಜಿಸುವವ_ ಈ ತ್ರಿವಿಧದೋಜೆಯ ಸೂತ್ರಾತ್ಮಕ ತಾನೆ ಎಂಬ ಹವಣನರಿದು, ಅರಿವಿಂಗಾಶ್ರಯವಾಗಿರಲರಿಯದೆ; ನಾನಾ ಪರಿಯಿಂದ ಒಲಿಸಿ ಮೆಚ್ಚಿಸಿ ಸ್ವರ್ಗಾದಿ ಭೋಗ ಧರ್ಮಕರ್ಮವನುಂಬ ಕೈಕೂಲಿಕಾರಕರ್ಮಿಗಳಂತೆ ಮಾಡುವ ಅರ್ಚನೆ ಪೂಜನೆಯ ಆಯಸವೇಕೆ ? ಜಪದ ಜಾಡ್ಯದ ಜಂಜಡದವನಲ್ಲ, ಧ್ಯಾನಮೌನದಿಂದ ಬಿಗಿದು ಬೆರೆತಿಹ ಬಂಧನದವನಲ್ಲ. ತಪದ ದಂಡನೆಯ ತಗಹಿನವನಲ್ಲ, ವ್ರತನೇಮದ ಸೂತಕಿಯಲ್ಲ, ಅರ್ಚನೆ ಪೂಜನೆಯ ಫಲ[ಗ್ರಾಹ]ಕನಲ್ಲ, ಹರಕೆಗೆ ಹವಣಿಸಿ ಬೆರೆತಹನಲ್ಲ, ನೆವದಿಂದ ತದ್ದಿನವ ಮಾಡಬೇಕೆಂಬ ಉದ್ದೇಶಿಯಲ್ಲ, ವರುಷಕ್ಕೊಂದು ತಿಥಿಯೆಂದು ಕೂಡಿ ಮಾಡುವ ಕೀರ್ತಿವಾರ್ತೆಗೆ ಮುಯ್ಯಾನುವನಲ್ಲ, ಮಿಕ್ಕಾದ ಕಿರುಕುಳ ಬಾಧೆ ಆಧಿವಿಡಿಯದ ಸಹಜಸಂತೋಷಿ, ಸರ್ವಾಂಗದೊಳ್ ತನ್ಮಯನಾಗಿರುತ್ತ, ಭಿನ್ನವೇಕೆ ? ಹಾಲ ಸಾಗರದೊಳಗೋಲಾಡುತಿರ್ದು ಓರೆಯಾವಿನ ಬೆನ್ನ ಹರಿವನಲ್ಲ, ಪರುಷದ ಗಿರಿ ಕೈಸಾರಿರಲು; ನಾಡ ಮಣ್ಣ ಕೂಡಲಿಕ್ಕಿ ತೊಳೆದು ಹಾಗವ ಸಾಧಿಸಬೇಕೆಂಬ ಧಾವತಿಯವನಲ್ಲ, ಅತ್ಯಂತ ಸ್ನೇಹದಿಂದ ನೆನಹಿನಲ್ಲಿ ಮನಕ್ಕೆ ಬಂದು ನೆಲೆಗೊಂಡಿರುತ್ತಿರಲು `ಆಹಾ ಪುಣ್ಯವೆ' ಎಂದು ಕ್ರೀಡಿಸುವ ರತಿಸುಖವಂ ಬಿಟ್ಟು ನೆನಹಿನ ಆಸೆಯಿಂದ ತೊಳಲಿ ಬಳಲುವ ಮರಹಿನವನಲ್ಲ. ಕೆಲವು ಮತದವರಂತೆ ಕಂಡಹೆನೆಂದರಿಸಿ ಆಡುವನಲ್ಲ ಕೆಲವು ಮತದವರಂತೆ ತೆರಪಿಟ್ಟು ಅರಸುವನಲ್ಲ ತಾನಲ್ಲದನ್ಯವಿಲ್ಲವೆಂದು ಅಹಂಕರಿಸಿ ಬೆರೆವವನಲ್ಲ. ಮತ್ತೆ ಉಳಿದಾದ ಕಾಕುಮತದ ಸೊಗಸಿಗೆಳಸನಾಗಿ, ಹೊಲಬುಗೆಡುವನಲ್ಲ. ಹೊತ್ತುದ ಹುಸಿ ಮಾಡಿ ಮತ್ತೆ ಉಂಟೆಂದು ಭೇದವ ಮಾಡುವ ದುಷ್ಟದುಷ್ಕರ್ಮಿಗಳ ಪರಿಯವನಲ್ಲ. ಮಾಡಿಹೆನೆಂಬ ಸಂಸಾರದ ಬಂಧನದವನಲ್ಲ. ಮಾಡಲೊಲ್ಲೆನೆಂಬ ವಿಕಳವಾವರಿಸಿಹ ವೈರಾಗ್ಯದ ಉದಾಸೀನದವನಲ್ಲ. ಋತುವುಳ್ಳ ಸತಿಯ ರತಿಕೂಟದಂತೆ ಮುಂದೆ ಅಗಲಿಸುವ ಕಷ್ಟದ ಸುಖವನೊಲುವನಲ್ಲ. ಋತುವರತ ಸತಿಯ ರತಿಕೂಟದಂತೆ ಅಗಲಿಕೆಯಿಲ್ಲದ ಸುಖದ ಸಂಯೋಗದ ನೆಲೆಯನರಿದಾತಂಗೆ; ಮಾಡುವಾತ ತಾನು ಮಾಡಿಸಿಕೊಂಬಾತ ತಾನು ಸೋಹ ದಾಸೋಹ ತಾನೆಂದು ಬೇರೆನ್ನದೆ ದಾತೃ ಭೋಕ್ತೃ ಶಿವನೊಬ್ಬನಲ್ಲದೆ, ಬೇರೆ ಬೇರೆ ತಮತಮಗೆ ಒಡೆಯರುಂಟೆ ? ಇಲ್ಲ. ಆದಿ ಪರಶಿವ ತಾನೆ ಎಂದು ಮಾಡುವ ಮಾಟ, ಸಟೆಯಿಲ್ಲದೆ ದಿಟ ಘಟಿಸಿ ಸಯವಾಗಿ ನಿಂದು ನಿರಾಶೆಯ ಕುಳ(ನಿರಾಕುಳರಿ)ದ ಅನುವನರಿತು ನಿಜವೆಡೆಗೊಂಡ ನಿಲವ ಪ್ರಮಾಣಿಸಿ ಕಾಬಂತೆ, ಮಾಡಬೇಕೆಂದು ದ್ರವ್ಯವ ಸಂಕಲ್ಪಿಸಿ ಕೊಟ್ಟವರಾರು ? ಮಾಡಬೇಕೆಂಬ ಅರಿವಿನ ಕಣ್ದೆರೆಸಿದವರಾರು ? ಮಾಡುವೆನೆಂದು ನೆನೆವ ಚೇತನದ ಪ್ರಾಣವ ತಂದಿರಿಸಿದವರಾರು ? ಮಾಡಿಹೆನೆಂಬ, ಮಾಡಬೇಕೆಂಬ, ಮಾಡುವ_ ಇವನೆಲ್ಲವ ಅರಿವಡಿಸಿಕೊಂಡಿಹ ಕಾಯವ ರೂಪಿಸಿದರಾರು ? ಆದಿಯಿಂದವೆ ನುಡಿದು ನಡೆದು ರೂಪಾಗಿ ಪ್ರಭಾವಿಸಿ ವ್ಯಾಪಾರಕ್ಕೆ ಸಂದೆವೆಂಬ ಹವಣಗಾರರು ಬರಿಯ ವಳಾವಳಿಯಿಂದ, ನಾ ಮಾಡಿದಹೆನೆಂದು ಪ್ರತಿಜ್ಞೆಯಂ ಕೈಕೊಂಡು, ಇಲ್ಲದುದನುಂಟುಮಾಡಿ, ಪಡೆದು ಸಾಧಿಸೆಹೆನೆಂಬ ಬಯಕೆಯ ಸಂಭ್ರಮದಾಯಸ ತಲೆಗೇರಿ, ಉಬ್ಬಿ ಹರಿದಾಡುವ, ಅವಿಚಾರದ ಮನದ, ಮರವೆ ಬಲಿದ ಇರವಿನ ಪರಿಯ ನೋಡಾ ! ಶಿವ ಮಹಾದೇವಾ. ಶಿವ ತನ್ನ ಲೀಲಾ ವಿನೋದಕ್ಕೆ ಸಕಲವನು ರೂಪಿಸಿ ಆಗುಮಾಡಿಕೊಂಡಿರುತ್ತಿರಲು, ಹುಚ್ಚುಗೊಂಡಂತೆ ಎಲ್ಲವೂ ನನ್ನಿಂದಾಯಿತು, ನಾ ಮಾಡಿದೆನೆಂದು ಉಲಿವ ದೇಹಿಯ ಇನ್ನೇನೆನಬಹುದಯ್ಯ ? ಅವರಿಂದಾದ ಒಡವೆಯ ಅವರಿಗೆ ಈವುದು, ಉಪಚರಿಯವೆ ? ನದಿಯುದಕವ ನದಿಗರ್ಪಿಸುವಂತೆ ಒಡೆಯಂಗೊಡವೆಯನರ್ಪಿಸಿ ತಾ ಶುದ್ಧನಾಗಿ ನಡೆನುಡಿಯಲ್ಲಿ ಕವಲುದೋರದೆ ತನ್ನಲ್ಲಿ ತಾನೆ ತಿಳಿದು, ಘನವೆಡೆಗೊಂಡ ಮಹಾನುಭಾವಿಗಳು; ಎಲ್ಲವನಳವಡಿಸಿಕೊಂಡಿಹ ಕಾಯವ ಗುರುವೆಂದೆ ಸಾಧಿಸಿದ ನೆನೆವ ಚೇತನದ ಪ್ರಾಣವ ಲಿಂಗವೆಂದೆ ಭಾವಿಸಿದ ಅರಿವಿನ ಜ್ಞಾನವ ಜಂಗಮವೆಂದೆ ಅರಿದ ನಮ್ಮ ಕೂಡಲಚೆನ್ನಸಂಗಮದೇವರು.
--------------
ಚನ್ನಬಸವಣ್ಣ
ತನ್ನ ತಾ ಬಂದುದ ಸೋಂಕಿಲ್ಲದುದ ವಿಚಾರಿಸಿ, ತನ್ನನುವಿಂಗೆ ಬಂದುದ ಕೈಕೊಂಬುದು, ಬಾರದ ದ್ರವ್ಯಕ್ಕೆ ಭ್ರಮೆಯಿಲ್ಲದೆ ಚಿತ್ತದೋರದಿಪ್ಪುದು ಭರಿತಾರ್ಪಣ. ಅರ್ಪಿತವ ಮುಟ್ಟಿ ಅನರ್ಪಿತವ ಜಾಗ್ರ ಸ್ವಪ್ನದಲ್ಲಿ ಮುಟ್ಟದಿಪ್ಪುದು ಭರಿತಾರ್ಪಣ. ಲಿಂಗಕ್ಕೆ ಸಲ್ಲದುದ ಇರಿಸದೆ, ಸಲುವಷ್ಟನೆ ಅರ್ಪಿತವ ಮಾಡಿ, ಮುಂದಣ ಸಂದೇಹವ ಮರೆದು, ಹಿಂದಣ ಸೋಂಕನರಿದು, ಉಭಯದ ಖಂಡಿತವ ಖಂಡಿಸಿ ನಿಂದುದು ಭರಿತಾರ್ಪಣ. ಹೀಗಲ್ಲದೆ, ಭಾಷೆಗೂಳಿನ ಭಟರಂತೆ, ಓಗರ ಮೇಲೋಗರದಾಸೆಗೆ ಲೇಸಿನ ದ್ರವ್ಯಕ್ಕೆ ಆಸೆ ಮಾಡಲಿಲ್ಲ. ಬಂದುದ ಕೈಕೊಂಡು ಸಂದನಳಿದು ನಿಂದುದೆ ಭರಿತಾರ್ಪಣ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಕ್ರೀ ಭಾವದ ಭೇದ.
--------------
ಅಕ್ಕಮ್ಮ
ನಾಸಿಕದ ತುದಿಯಲ್ಲಿ ಆಡುವ ಪ್ರಾಣಾವಾಯು ದೇವರೆಂಬರು ; ಅಲ್ಲಲ್ಲ ನೋಡಾ. ಅದೆಂತೆಂದಡೆ : ಆ ಪ್ರಾಣವಾಯು ನಾಸಿಕದಿಂದ ಹನ್ನೆರಡಂಗುಲಪ್ರಮಾಣ, ಹೊರಹೊಂಟು ಎಂಟಂಗುಲ ಪ್ರಮಾಣ, ತಿರುಗಿ ನಾಲ್ಕಂಗುಲ ಪ್ರಮಾಣ ಖಂಡಿಸುವುದು ನೋಡಾ. ಇಂತು ದಿನವೊಂದಕ್ಕೆ ಇಪ್ಪತ್ತೊಂದು ಸಾವಿರದ ಆರುನೂರು ಶ್ವಾಸಂಗಳು ಹೊರಹೊಂಟು, ಹದಿನಾಲ್ಕುಸಾವಿರದ ನಾನೂರು ಶ್ವಾಸಂಗಳು ತಿರುಗಿ, ಏಳುಸಾವಿರದ ಇನ್ನೂರು ಶ್ವಾಸಂಗಳು ಖಂಡಿಸಿ ಮೃತವಾಗಿ ಹೋಹ ಪ್ರಾಣವಾಯುವ ದೇವರೆಂಬ ಶಿವದ್ರೋಹಿಗಳ ಎನಗೊಮ್ಮೆ ತೋರದಿರಯ್ಯಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಘಟವೃಕ್ಷದ ಕುಕ್ಷಿಯಲ್ಲಿ ಮೂರುಸರ್ಪನ ಹೇಳಿಗೆ. ಸರ್ಪ ಸತ್ತು ಹೇಳಿಗೆಯ ಮುಳ್ಳು ತೆಗೆಯಬಾರದು. ಆ ಖಂಡಿಯಲ್ಲಿ ಖಂಡಿಸಿ ಹೊಯಿತ್ತು, ಸರ್ಪನ ಶುಕ್ಲ ಶ್ರೋಣಿತ. ಹೇಳಿಗೆಯ ಒಪ್ಪವಿನ್ನಿಲ್ಲ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.
--------------
ಸಗರದ ಬೊಮ್ಮಣ್ಣ
ಕಾಲತ್ರಯದ ಕೀಲನರಿದು ಖಂಡಿಸಿ ಕಾಲತ್ರಯ ಲೋಲಮಯನಾದ ಮಹಿಮನು ಕಾಲಕಲ್ಪಿತಭಾವಿಯಲ್ಲ. ಮತ್ತೆ ಕಾಲತ್ರಯದ ಕರ್ಮವನುಳಿದು ಕಾಲತ್ರಯರೂಪ ಕಂಡಯ್ಯಾ. ಇಹಪರವರಿಯದ ಇಹಪರ ಭೋಗಿ ತಾನೇ ಕಂಡಯ್ಯಾ. ನಿರಂತರ ಗುರುನಿರಂಜನ ಚನ್ನಬಸವಲಿಂಗವಾಗಿ ಸತಿಪತಿಭಾವ ಸವೆಯದನ್ನಕ್ಕರ.
--------------
ದೇಶಿಕೇಂದ್ರ ಸಂಗನಬಸವಯ್ಯ
-->