ಜಂಗಮಭಕ್ತನು, ಚಿನ್ನದಂತೆ ಕಬ್ಬಿನಂತೆ ಶ್ರೀಗಂಧದಂತೆ ಇರಬೇಕು.
ಅದು ಹೇಂಗೆ ?
ಆ ಚಿನ್ನವ ಕಾಸಿದಡೆ ಕರಗಿಸಿದಡೆ ಕಡಿದಡೆ ನಿಗುಚಿದಡೆ
ಬಣ್ಣ ಅಧಿಕವಲ್ಲದೆ ಕಿರಿದಾಗದು, ಇವರು ನನ್ನನೇಕೆ ಘಾಸಿ ಮಾಡಿದರೆನ್ನದು.
ಆ ಕಬ್ಬ ಕಡಿದಡೆ ಖಂಡಿಸಿದಡೆ ಗಾಣದಲಿಕ್ಕಿ ಹಿಂಡಿ, ಹಿಳಿದು,
ಬಂದ ರಸವನಟ್ಟಡೆ,
ನಾನಾ ಪ್ರಕಾರದಲ್ಲಿ ಸಾಯಸಗೊಳಿಸಿದಡೆಯೂ
ಮಿಗೆ ಮಿಗೆ ಮಧುರವಾಗಿಪ್ಪುದಲ್ಲದೆ ವಿಷವಾಗದು,
ನನ್ನನೇಕೆ ನೋಯಿಸಿದರೆಂದೆನ್ನದು.
ಆ ಶ್ರೀಗಂಧವು ಕೊರೆದಡೆ ತೇದಡೆ ಹೂಸಿದಡೆ ಬೆಂಕಿಯೊಳಗೆ ಹಾಯಿಕಿದಡೆ
ಪರಿಮಳ ಘನವಾಯಿತ್ತಲ್ಲದೆ ದುರ್ಗಂಧವಾಗದು, ತನ್ನಲ್ಲಿ
ದುಃಖಗೊಳ್ಳದು.
ಈ ತ್ರಿವಿಧದ ಗುಣದ ಪರಿಯಲ್ಲಿ;
ಭಕ್ತನು ತನ್ನ ಸುಗುಣವ ಬಿಡದ ಕಾರಣ
ಸದ್ಭಕ್ತನಹ ಮಾಹೇಶ್ವರನಹ ಪ್ರಸಾದಿಯಹ
ಪ್ರಾಣಲಿಂಗಿಯಹ ಶರಣನಹ ಐಕ್ಯನಹ.
ಇಂತು ಷಟ್ಸ್ಥಲದಲ್ಲಿ ಸಂಪನ್ನನಹಡೆ
ಇಂತಪ್ಪ ಜಂಗಮಭಕ್ತಿಯೆ ಮೂಲವಯ್ಯ
ಕೂಡಲಚೆನ್ನಸಂಗಮದೇವಾ