ಭಕ್ತರ ಮನೆಯೊಳಗೆ ಮನೆಕಟ್ಟಿಕೊಂಡಿಪ್ಪ ಜಂಗಮದ ಇಂಗಿತಾಕಾರವೆಂತೆಂದಡೆ
ಆ ಭಕ್ತನ ತನುಮನದೆಡೆಯಲ್ಲಿ ಮೋಹಿತನಾಗದೆ,
ಹೋಹ, ಬಾಹ, ಭಕ್ತ ಜಂಗಮಕ್ಕೆ ಮಾಡುವ ದಾಸೋಹ ನೋಡಿ,
ಅವರಿಗೆ ಮಾಡುವಡೆ ಎನಗೆ ಮಾಡುವ ಭಕ್ತಿಯೆಂದು ಇದ್ದ ಪರಿಯಲ್ಲಿ ಸುಖಿಸಿ,
ಬಂದ ಪರಿಯಲ್ಲಿ ಪರಿಣಾಮಿಸಿ,
ನಿಷ್ಕಾಮ್ಯ, ನಿಸ್ಪೃಹ, ನಿರ್ದೋಷಿಯಾಗಿ,
ಕೋಪ ತಾಪವಿಲ್ಲದೆ ಭಕ್ತಿ ಜ್ಞಾನಯುಕ್ತನಾಗಿ
ಆ ಭಕ್ತನ ನಡೆ ನುಡಿಯಲ್ಲಿ ಜಡ ಹುಟ್ಟಿದರೆ ಅದಲ್ಲವೆಂದು ಕಳೆದು,
ಸತ್ಯದ ಬುದ್ಧಿಗಲಿಸಿ ಸಂತೈಸಿಕೊಂಡು ಇಹುದೆ ಜಂಗಮಲಕ್ಷಣ.
ಅಂಥ ಜಂಗಮನೆ ಪ್ರಾಣವಾಗಿ,
ಅದರಾಜ್ಞೆಯ ಮೀರದೆ
ಮನವಚನಕಾಯದಲ್ಲಿ ಉದಾಸೀನವಿಲ್ಲದೆ,
ಅವರ ಕೂಡಿಕೊಂಡು ದಾಸೋಹವ ಮಾಡುವುದೆ ಭಕ್ತನ ಲಕ್ಷಣವು.
ಈ ಎರಡಕ್ಕೂ ಭವಂ ನಾಸ್ತಿಯಹುದು.
ಇಂತಪ್ಪ ಭಕ್ತ ಜಂಗಮದ ಸಕೀಲಸಂಬಂಧವ
ಬಸವಣ್ಣ ಮೆಚ್ಚುವನು ಕಾಣಾ ಗುಹೇಶ್ವರಾ.