ಅಥವಾ

ಒಟ್ಟು 153 ಕಡೆಗಳಲ್ಲಿ , 45 ವಚನಕಾರರು , 137 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರೂಪು ಕುರೂಪುಗಳನು, ಲಿಂಗ ನೋಡಿದಡೆ ನೋಡುವನು, ಲಿಂಗ ನೂಕಿದಡೆ ತಾ ನೂಕುವನು. ಶಬ್ದಾಪಶಬ್ದಂಗಳನು ಲಿಂಗ ಕೇಳಿದಡೆ ಕೇಳುವನು, ಲಿಂಗ ತಾ ನೂಕಿದಡೆ ನೂಕುವನು. ಸುರಸ ಕುರಸಂಗಳನು ಲಿಂಗ ಸವಿದಡೆ ಸವಿವನು, ಲಿಂಗ ನೂಕಿದಡೆ ತಾ ನೂಕುವನು. ಗಂಧ ದುರ್ಗಂಧಗಳನು ಲಿಂಗ ವಾಸಿಸಿದಡೆ ವಾಸಿಸುವ, ಲಿಂಗ ನೂಕಿದಡೆ ತಾ ನೂಕುವನು. ಮೃದು ಕಠಿಣ ಶೀತೋಷ್ಣಂಗಳನು ಲಿಂಗ ಸೋಂಕಿದಡೆ ಸೋಂಕುವನು. ಲಿಂಗ ನೂಕಿದಡೆ ತಾ ನೂಕುವನು. ಲಿಂಗಮಧ್ಯಪ್ರಸಾದಿಯಾದ ಕಾರಣ ಲಿಂಗದೊಡನೆ ಕೂಡಿ ಅರಿದು ಭೋಗಿಸಿ ಸುಖಿಸುವನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಪ್ರಸಾದಿ.
--------------
ಸ್ವತಂತ್ರ ಸಿದ್ಧಲಿಂಗ
ಜಂಗಮದ ಮುಂದಿಟ್ಟು ಕೊಟ್ಟು ಕೊಂಡೆಹೆನೆಂಬ ಸರ್ವಸಮಯಾಚಾರ ಸಂಪತ್ತಿನಿರವು: ಮಜ್ಜನ ಭೋಜನ ಅಂದಳ ಛತ್ರ ಚಾಮರ ಕರಿ ತುರಗ ದರ್ಪಣ ಹಲುಕಡ್ಡಿ ನಖಚಣ ಪರಿಮಳ ಗಂಧ ಮೆಟ್ಟಡಿ ತಾಂಬೂಲ ರತ್ನಾಭರಣ ಮೆತ್ತೆ ಶಯನ ಸ್ತ್ರೀಸಂಸರ್ಗ ಒಡೆಯಂಗೆ ಆಯಿತ್ತೆಂಬುದ ಕೇಳಿ, ಆ ಒಡೆಯನ ವಾಚಾಪ್ರಸಾದದಿಂದ ಮಹಾಪ್ರಸಾದವೆಂದು ತನ್ನ ಸ್ವಸ್ತ್ರೀಗೆ ಕೂಟಸ್ಥನಾಗಬೇಕು. ಇಂತೀ ಭಾವ ಸರ್ವಸಮಯಾಚಾರ. ಈ ವರ್ತಕದಂಗ ನಿಂದಾತನ ಸಂಗ, ಏಲೇಶ್ವರದಂಗ ಉಮೇಶ್ವರಲಿಂಗವು ಆ ಭಕ್ತನಂಗ.
--------------
ಏಲೇಶ್ವರ ಕೇತಯ್ಯ
ಅಂಗಲಿಂಗ ಸಹವಾಗಿ, ಆತ್ಮನರಿವು ಸಹವಾಗಿ, ಇಷ್ಟಪದಾರ್ಥವ ಇಷ್ಟ ಲಿಂಗಸಹವಾಗಿ, ರುಚಿಪದಾರ್ಥವ ಆತ್ಮಲಿಂಗಸಹವಾಗಿ, ರಸ ಗಂಧ ರೂಪ ಶಬ್ದ ಸ್ಪರ್ಶ ಪಂಚೇಂದ್ರಿಯಗಳಲ್ಲಿ ದೃಷ್ಟಪದಾರ್ಥವ ಇಷ್ಟಲಿಂಗಸಹವಾಗಿ, ಸ್ಥೂಲ ಸೂಕ್ಷ್ಮ ಕಾರಣದಲ್ಲಿ ಒಳಗು ಹೊರಗು ಸಹವಾಗಿ, ಅಳಿವು ಉಳಿವು ಸಹವಾಗಿ, ಕಾಬುದು ಕಾಣಿಸಿಕೊಂಬುದು ಸಹವಾಗಿ, ರಸವ ಕೊಂಡವನಂತೆ,ಅಸಿಯ ಮೊನೆ ಹರಿದಲ್ಲಿ ರಸ ಬಂದು ನಿಂತಂತೆ, ಎಲ್ಲಿ ಅರ್ಪಿತಕ್ಕೆ ಅಲ್ಲಿ ವಸ್ತು ಸಹವಾಗಿ ಎಲ್ಲಾ ಎಡೆಯಲ್ಲಿ ಪರಿಪೂರ್ಣ ಸಹವಾಗಿ, ಇಪ್ಪುದು ಸಹಭೋಜನಸ್ಥಲ. ಹೀಗಲ್ಲದೆ ಓಗರ ಮೇಲೋಗರವ ಲಾಗುಲಾಗಿಗೆ ತೋರುತ್ತ ಸಕಲಸಂಸಾರದ ಸಾಗರದಲ್ಲಿ ಮುಳುಗುತ್ತ, ಮರವೆ ಅಜ್ಞಾನದಲ್ಲಿ ಮರಳಿ ತಿರುಗುತ್ತ ನಾನಾವಿಕಾರತ್ರಯಗಳಿಂದ ಹುಟ್ಟುತ್ತ ಸಾವುತ್ತ, ಮತ್ತೆ ಸಾವಧಾನ ಸಹಭೋಜನವೆಂದಡೆ ನಾಚಿತ್ತು ಎನ್ನ ಮನ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಉಭಯವನಳಿದು ಏಕವಾದುದು ಸಹಭೋಜನಸ್ಥಲ.
--------------
ಅಕ್ಕಮ್ಮ
ರಸ ಉಂಬಲ್ಲಿ, ಗಂಧ ವಾಸಿಸುವಲ್ಲಿ, ರೂಪು ನಿರೀಕ್ಷಣೆಯಲ್ಲಿ, ಶಬ್ದ ಗೋಚರದಲ್ಲಿ, ಸ್ಪರ್ಶ ತ್ವಕ್ಕಿನಲ್ಲಿ, ಪಂಚಪುಟ ಭೇದಂಗಳಲ್ಲಿ, ಅಷ್ಟಗುಣ ಮದಂಗಳ ಪಟ್ಟಣದ, ಷೋಡಶದ ರೂಡ್ಥಿಯ ಷಡ್ಚಕ್ರದ ಆಧಾರದ, ಪಂಚವಿಂಶತಿಯ ನಿಳೆಯದ ಸಂಚಾರದ, ನವಕವಾಟದ, ತ್ರಿಶಕ್ತಿ ಸಂಪದದ, ತ್ರಿಗುಣಾತ್ಮನ ತ್ರಿಗುಣ ಓಹರಿಯಲ್ಲಿ ಬಳಸಿಪ್ಪ ಬಂಧದಲ್ಲಿ ಮಗ್ನವಾಗದೆ, ಜಾಗ್ರ [ಸ್ವಪ್ನ] ಸುಷುಪ್ತಿ ತ್ರಿವಿಧ ಘಟಪಟಲ ತತ್ವನಿರಸನ ನಿರ್ವಿಕಾರನಾಗಿ, ಇಂತಿವರಲ್ಲಿ ಅವಘಾನವಾಗಿ ಮುಳುಗದೆ, ನೀರನಿರಿದ ಕೈದಿನಂತೆ ಕಲೆದೋರದೆ, ಆವ ಸುಖಂಗಳಲ್ಲಿ ಅಬ್ಥಿನ್ನವಾಗಿ, ಜಲದೊಳಗಣ ಶಿಲೆ, ಶಿಲೆಯೊಳಗಣ ವಹ್ನಿ ಸುಳುಹುದೋರದ ತೆರ, ಮಥನಕ್ಕೆ ಕಂಡು, ಕಾಣದಡಗಿಪ್ಪ ತೆರ, ಲಿಂಗಾಂಗಿಯ ಇರವು. ಇದು ಸಿದ್ಧವಾಗಬೇಕು, ಶರೀರದ ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ. ಇದೇ ಅಂಜನಸಿದ್ಧಿ.
--------------
ಮನುಮುನಿ ಗುಮ್ಮಟದೇವ
ಅನ್ಯರು ಮಾಡಿದುದ ಮುಟ್ಟದೆ ತನ್ನ ತಾ ಮಾಡಿಕೊಂಡು ನಡೆವುದು ಸೌಕರಿಯವಲ್ಲದೆ, ವ್ರತಕ್ಕೆ ಸಂಬಂಧವಲ್ಲ. ಅದೆಂತೆಂದಡೆ ರಸ ಗಂಧ ರೂಪು ಶಬ್ದ ಸ್ಪರ್ಶವೆಂಬ ಪಂಚೇಂದ್ರಿಯವ ಶುದ್ಧತೆಯ ಮಾಡಿ ಪಂಚಾಚಾರವೆಂಬುದನರಿತು, ರಸವ ರುಚಿಸುವಲ್ಲಿ ಬಹುದಕ್ಕೆ ಮುನ್ನವೆ ಭೇದವನರಿತು, ನಾಸಿಕ ವಾಸನೆಯ ಕೊಂಬಲ್ಲಿ ಸೋಂಕುವುದಕ್ಕೆ ಮುನ್ನವೆ ಸುಗುಣ ದುರ್ಗುಣವನರಿತು, ಕಾಂಬುದಕ್ಕೆ ಮುನ್ನವೆ ರೂಪ ನಿರೂಪೆಂಬುದನರಿತು, ನುಡಿಯುವುದಕ್ಕೆ ಮುನ್ನವೆ ಮೃದು ಕoಣವೆಂಬುದನರಿತು, ಇಂತೀ ಭೇದಂಗಳಲ್ಲಿ ಅರ್ಪಿತದ ಲಕ್ಷಣವ ಕಂಡು, ದೃಷ್ಟದಿಂದ ಕಟ್ಟುಮಾಡುವುದೆ ವ್ರತ ; ಆ ಗುಣ ತಪ್ಪದೆ ನಡೆವುದೆ ಆಚಾರ. ಇಂತೀ ವ್ರತಾಚಾರಂಗಳಲ್ಲಿ ಸರ್ವಶೀಲಸನ್ನದ್ಧನಾಗಿ, ಸರ್ವಮುಖ ಲಿಂಗಾವಧಾನಿಯಾಗಿ ಇಪ್ಪ ಅಂಗವೆ, ಆಚಾರವೆ ಪ್ರಾಣವಾಗಿಪ್ಪ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಮಲಯಜದ ಮಧ್ಯದಲ್ಲಿ ವಂಶ ಪುದಿದಿರೆ ಮುಟ್ಟದು ಗಂಧ ಅದೇಕೆ? ಮಧ್ಯದ ದ್ವಾರದ ಲಕ್ಷಣದಿಂದ, ಪಾದಪದ ಜಾತಿಬ್ಥಿನ್ನದಿಂದ. ಆ ತೆರನನರಿದಲ್ಲಿ ಇದಿರಿಟ್ಟು ಕುರುಹು ಬ್ಥಿನ್ನವಾಯಿತ್ತು. ಆತ್ಮಂಗೆ ಅರಿವು ಸೂಜಿಯ ಮೊನೆಯಂತೆ ಕುರುಹು ಹಿಂಗಿದ ದ್ವಾರದಂತೆ ಉಭಯವ ಭೇದಿಸಿ ಆ ದ್ವಾರದಲ್ಲಿ ಎಯ್ದುವ ನೂಲು ಮುಂದಳ ಹರಿಯ ಮುಚ್ಚುವಂತೆ ಕರುಹಿನ ಬ್ಥಿನ್ನ ನಾಮನಷ್ಟವಾಗುತ್ತದೆ, ನಿಜತತ್ವದ ಬೆಳಗು ತೋರುತ್ತದೆ ಸದಾಶಿವಮೂರ್ತಿಲಿಂಗದಲ್ಲಿ,
--------------
ಅರಿವಿನ ಮಾರಿತಂದೆ
ಅನಲನ ತಾಹಲ್ಲಿ, ಅನಿಲನ ಗಂಧ ಒಡಗೂಡಿ ಸೋಂಕುವಲ್ಲಿ, ಅಲ್ಲಿ ವ್ರತದಾಯತದ ಲಕ್ಷಣವನರಿಯಬೇಕು; ಮಿಕ್ಕಾದ ತಿಲ, ತೈಲ, ಫ್ಸೃತ, ಕ್ಷೀರ, ದದ್ಥಿ, ಮಧುರ, ಇಕ್ಷುದಂಡ, ಕ್ರಮುಕ, ಪರ್ಣ, ಚೂರ್ಣ, ರಸ, ದ್ರವ್ಯ ಮುಂತಾದವಿಂತು ಮಿಕ್ಕಾದ ಫಲ ಕುಸುಮ ವಿದಳ ಬಹುಧಾನ್ಯ ಮುಂತಾದ ಸಕಲಸುಯಿಧಾನಂಗಳಲ್ಲಿ ಲಿಂಗವ್ಯವಧಾನದಲ್ಲಿ ತಂದು ಸತ್ಕ್ರೀ ತಪ್ಪದೆ, ವ್ರತಕ್ಕೆ ಭಂಗವಿಲ್ಲದೆ, ನಾಣ್ಣುಡಿಗೆ ಇದಿರೆಡೆಯಾಗದೆ, ವಿಶ್ವಲಕ್ಷಣ ಶಸ್ತ್ರ ಅಭ್ಯಾಸಿಯಂತೆ, ಆವೆಡೆಯಲ್ಲಿ ಇದಿರಿಂಗೆ ತೆರಪಿಲ್ಲದೆ, ತಾ ಮುಟ್ಟುವಲ್ಲಿ ಒಳಗೆ ಕೊಂಡಂತೆ ಇರಬೇಕು. ಇಷ್ಟನರಿತು ಆಚರಣೆಯಲ್ಲಿ ಆದರಿಸಿ ನುಡಿವುದೆ ಸದ್ಭಕ್ತನ ಸ್ಥಲ. ಆತ ಸರ್ವಶೀಲಸಂಪನ್ನ ಸರ್ವಾಂಗಲಿಂಗ ಸನ್ನದ್ಧ ಆತ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಸುಜ್ಞಾನವೆಂಬ ಭಾವವು ಗುರುವಿನಲ್ಲಿ ಸಾಹಿತ್ಯವು. ಜ್ಞಾನವೆಂಬ ಭಾವವು ಶಿಷ್ಯನಲ್ಲಿ ಸಾಹಿತ್ಯವು. ಮನವೆಂಬ ಭಾವವು ಲಿಂಗದಲ್ಲಿ ಸಾಹಿತ್ಯವು. ಲಿಂಗಕ್ಕೆ ಮಜ್ಜನ ಮಾಡಲಾಗದು, ಅದೇನು ಕಾರಣ ? ಮನವೆಂಬ ಲಿಂಗವು ಭಾವದಲ್ಲಿ ಸಾಹಿತ್ಯವಾದ ಕಾರಣ. ಲಿಂಗಕ್ಕೆ ಗಂಧ ಧೂಪ ನಿವಾಳಿಯ ಕುಡಲಾಗದು, ಅದೇನು ಕಾರಣ ?
--------------
ಚನ್ನಬಸವಣ್ಣ
ಜ್ಞಾನಚಕ್ರ: ಪರಮ ತತ್ವ ಪರಮಜ್ಞಾನ ಪರಮಾರ್ಥ ಪರಾಪರ ವಾಙ್ಮನಕ್ಕಗೋಚರ ಶಬ್ದಗಂಭೀರ ಉಪಮಾತೀತ, ಉನ್ನತ ಪರಶಿವ, ಜ್ಞಾನಜ್ಯೋತಿ ಸುಜ್ಞಾನದ ಪ್ರಭೆಯ ಬೆಳಗಿನೊಳಗೆ ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ, ಶಿವಜ್ಞಾನವೆ ಶೃಂಗಾರ, ಮಹಾಬೆಳಗೆ ವಿಭೂತಿ, ಪಂಚಬ್ರಹ್ಮವೆ ದರ್ಶನ ಗಗನಸ್ಥಾನವೆ ಕಂಥೆ, ಆಕಾಶವೆ ಟೊಪ್ಪರ, ಅಜಾಂಡ_ಬ್ರಹ್ಮಾಂಡವೆ ಕರ್ಣಕುಂಡಲ, ಆದಿ ಆಧಾರವೆ ಕಕ್ಷಪಾಳ ಅನಾಹತವೆ ಒಡ್ಯಾಣ, ಅದ್ವೈತವೆ ಯೋಗವಟ್ಟಿಗೆ, ಅಗಮ್ಯವೆ ಯೋಗವಾವುಗೆ, ಅಚಳಿತವೆ ಖರ್ಪರ, ಅಪ್ರಾಮಣವೆ ಲಾಕುಳ, ಅವಿಚಾರವೆ ಸುಳುಹು, ಅಕಲ್ಪಿತವೆ ಭಿಕ್ಷೆ, ಕೊಂಡುದೆ ಗಮನ, ನಿಂದುದೆ ನಿವಾಸ,_ ನಿಶ್ಚಿಂತವೆಂಬ ಆಶ್ರಮದಲ್ಲಿ ನಿರಾಕುಳವೆಂಬ ಸಿಂಹಾಸನವನಿಕ್ಕಿ; ಗಗನಗಂಭೀರದ ಬಾವಿಯೊಳಗೆ ಅಗೋಚರದ ಅಗ್ಘಣಿಯ ತಂದು ಮಹಾಘನಪ್ರಾಣಲಿಂಗಕ್ಕೆ ಮಂಗಳದ ಬೆಳಗಿನಲ್ಲಿ ಮಜ್ಜನಕ್ಕೆರೆದು; ಬಿಂದ್ವಾಕಾಶವೆ ಗಂಧ, ಮಹದಾಕಾಶವೆ ಅಕ್ಷತೆ, ಪರಾಪರವೆ ಪತ್ರೆಪುಷ್ಪ, ನಿರ್ಮಳವೆ ಲಿಂಗಾರ್ಚನೆ, ಮಹಾಪ್ರಕಾಶವೆ ಪೂಜೆ, ನಿತ್ಯನಿರಂಜನವೆ ಧೂಪದೀಪಾರತಿ, ಸಕಲ ಭುವನಾದಿಭುವನಂಗಳೆ ಸಯದಾನ, ಆಚಾರವೆ ಅರ್ಪಿತ, ಮಹತ್ವವೆ ಸಿತಾಳ, ಅಖಂಡಿತವೆ ಅಡಕೆ, ಏಕೋಭಾವವೆ ಎಲೆ, ಶುದ್ಧಶಿವಾಚಾರವೆ ಸುಣ್ಣ_ ವಿವೇಕ ವಿಚಾರದಿಂದ ವೀಳೆಯವನವಧರಿಸೂದು. ಮಹಾಲಿಂಗದ ಪರಿಣಾಮವೆ ಪ್ರಸಾದ, ಸಮ್ಯಕ್ ಜ್ಞಾನವೆ ಸಂತೋಷ. ಸಹಜ ನಿರಾಭಾರಿಗಳ ಮೇಳದಿಂದ, ನಿಸ್ಸೀಮದ ನಿಭ್ರಾಂತಿನ ಸುಸಂಗದಲ್ಲಿ_ ನಿರಾಶಾಪದವೆ ಅನುಕೂಲ, ನಿಶ್ಶಬ್ದವೆ ಅನುಭಾವ, ಅನುಪಮದ ನಿಶ್ಶೂನ್ಯವೆ ವಿಶ್ರಾಮ, ನಿರಾಕಾರವೆ ಗಮನ. ನಿರಂತರ ಪಾತಾಳ ಊಧ್ರ್ವದ ಪವನ;_ತ್ರಿಭುವನಗಿರಿಯೆಂಬ ಪರ್ವತವನೇರಿ, ಕಾಯವೆಂಬ ಕದಳಿಯ ಹೊಕ್ಕು ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ; ಇಹಲೋಕವೇನು ? ಪರಲೋಕವೇನು ?_ ಅಲ್ಲಿಂದತ್ತ ಆಗಮ್ಯ ನಿರಾಳ ಪರಮಜ್ಞಾನದ ಸಿದ್ಧಿ ಮಹಾಲಿಂಗದ ಬೆಳಗು, ಗುಹೇಶ್ವರಾ, ನಿಮ್ಮ ನಿಜವನರಿದ ಮಹಾಮಹಿಮ ಶರಣಂಗೆ, ನಮೋ ನಮೋ ಎಂಬೆನು.
--------------
ಅಲ್ಲಮಪ್ರಭುದೇವರು
ರಸ ಗಂಧ ರೂಪು ಶಬ್ದ ಸ್ಪರ್ಶ ಪಂಚೇಂದ್ರಿಯಂಗಳಲ್ಲಿ ಅರ್ಪಿಸುವನ್ನಕ್ಕ ಭಕ್ತ. ರೂಪು ರುಚಿಯ ಕಂಡರ್ಪಿಸುವನ್ನಕ್ಕ ಮಾಹೇಶ್ವರ. ಇಚ್ಫೆಯನರಿತು ಸಾಕು ಬೇಕೆಂಬನ್ನಕ್ಕ ಪ್ರಸಾದಿ. ಕಂಡಲ್ಲಿ ಮುಟ್ಟದೆ ಕಾಣಿಸಿಕೊಂಡು ಮುಟ್ಟಿಹೆನೆಂಬಲ್ಲಿ ಪ್ರಾಣಲಿಂಗಿ. ವಂದನೆ ನಿಂದೆಗೆ ಒಳಗಹನ್ನಕ್ಕ ಶರಣ. ಮುಟ್ಟುವ ತಟ್ಟುವ ತಾಗುವ ಸೋಂಕುವ ಸುಖವನರಿದು ಕೂಡಬೇಕೆಂಬನ್ನಕ್ಕ ಐಕ್ಯ. ಆ ಗುಣ ಪರುಷವ ಸೋಂಕಿದ ಲೋಹದಂತಾದುದು ಷಟ್‍ಸ್ಥಲ. ಇಂತೀ ಆರನವಗವಿಸಿ ಬೇರೊಂದು ತೋರದಿಪ್ಪುದು ಐಕ್ಯಸ್ಥಲಲೇಪಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಲಿಂಗವೇ ಪ್ರಾಣ, ಪ್ರಾಣವೇ ಲಿಂಗವಾದ ಪ್ರಾಣಲಿಂಗಿಯ ಪ್ರಾಣಲಿಂಗಕ್ಕೆ, ಧ್ಯಾನಾಮೃತ ಪಂಚಾಕ್ಷರಂಗಳ ಪಂಚಾಮೃತದಿಂ ಮಜ್ಜನಕ್ಕೆರೆದು, ಆ ಲಿಂಗಕ್ಕೆ ಮನವೇ ಪುಷ್ಪ, ಬುದ್ಧಿಯೆ ಗಂಧ, ಚಿತ್ತವೇ ನೈವೇದ್ಯ. ಅಹಂಕಾರವಳಿದ ನಿರಹಂಕಾರದ ಆರೋಗಣೆಯ ಮಾಡಿಸಿ, ಪರಿಣಾಮದ ವೀಳ್ಯವನಿತ್ತು, ಸ್ನೇಹದಿಂದ ವಂದನೆಯಂ ಮಾಡಿ, ಆ ಪ್ರಾಣಲಿಂಗಕ್ಕೆ ಬಹಿರಂಗದ ಪೂಜೆಯ ಪರಿಯಲಿ ಅಂತರಂಗದ ಪೂಜೆಯ ಮಾಡುವುದು. ಬಹಿರಂಗದ ಪೂಜೆಯ ಪ್ರಾಣಲಿಂಗಕ್ಕೆ ಅಂತರಂಗದ ವಸ್ತುಗಳೆಲ್ಲವನ್ನು ತಂದು, ಬಹಿರಂಗದ ವಸ್ತುವಿನಲ್ಲಿ ಕೂಡಿ, ಅಂತರ್ಬಹಿರುಭಯ ಲಿಂಗಾರ್ಚನೆಯ ಮಾಡಲು, ಅಂತರಂಗ ಬಹಿರಂಗ ಭರಿತನಾಗಿಪ್ಪನಾ ಶಿವನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಅಯ್ಯಾ ಆಚಾರವುಳ್ಳಕಾಂಚೀಪಟ್ಟಣದಲ್ಲಿ ಒಂದು ಗಂಡುಕತ್ತೆಯು ಸತ್ತುಬಿದ್ದಿರಲು, ಕತ್ತೆಯಂ ಕೈಲಾಸದ ಪಾಲುಮಾಡಬೇಕೆಂದಿದ್ದರಯ್ಯಾ, ಯಾರ್ಯಾರು ಎಂದರೆ: ಶೆಟ್ಟಿಗಾದರಿ, ಪೃಥ್ವಿಶೆಟ್ಟಿ, ಕೋರಿಶೆಟ್ಟಿ, ಬಳೇಶೆಟ್ಟಿ, ನಾಡನಾಲಗೆ, [ಮಿಂಡ]ಗುದ್ದಲಿ, ಬಡವ, ಬೋವಿಯಂತಪ್ಪ ಎಂಟು ಕಟ್ಟೆಯವರು ಕೂಡಿಕೊಂಡು ಆ ಕತ್ತೆಯಂ ಮಂಚದ ಮೇಲೆ ಇಟ್ಟುಕೊಂಡು ಕಮ್ಮೆಣ್ಣೆ, ಕಸ್ತೂರಿ, ಗಂಧ, ಪುನುಗು, ಜವ್ವಾಜಿ, ಬುಕ್ಕಹಿಟ್ಟು, ಊದಿನಕಡ್ಡಿ - ಇಂತಪ್ಪ ಅಷ್ಟಗಂಧದಿಂದ ಮೇಳ ಭಜಂತ್ರಿಯಿಂದ ಒಯ್ದು, ನರಿ ಪಾಲು ಮಾಡಿ ಬಂದರಯ್ಯಾ. ಛೇ, ಛೇ ಎಂದು ಕಣ್ಣಯ್ಯಗಳ ಎಡದ ಪಾದರಕ್ಷೆಯಂ ತೆಗೆದುಕೊಂಡು ಅವರ ಮುದ್ದುಮುಖದ ಮೇಲೆ ಕುಟ್ಟಿದಾತನೆ ನಮ್ಮ ಅಂಬಿಗರ ಚೌಡಯ್ಯನೆಂಬೊ ಶಿವಶರಣನು.
--------------
ಅಂಬಿಗರ ಚೌಡಯ್ಯ
ಸುಗಂಧದ ಮೂಲದ ಬೇರಿನ ಗಂಧ ಎಲೆ ಬಳ್ಳಿಯನೇತಕ್ಕೆ ವೇಧಿಸದು ? ಕುಸುಮದ ಸುವಾಸನೆ ತನ್ನಯ ತೊಟ್ಟು ಎಲೆ ಕೊನರು ಬೇರುವನೇಕೆ ವೇಧಿಸದು ? ಇದು ಇಷ್ಟ ಪ್ರಾಣಯೋಗದ ಭೇದ. ಗಿಡುಗಿಡುವಿಗೆ ಕುರುಹಲ್ಲದೆ ಗಂಧ ಗಂಧ ಕೂಡಿದಲ್ಲಿ ದ್ವಂದ್ವವಾಗಿ ಬೆರೆದಲ್ಲಿ, ಕದಂಬಗಂಧವಲ್ಲದೆ ಒಂದರ ಗಂಧವೆಂದು ಸಂಧಿಸಿ ತೆಗೆಯಲಿಲ್ಲ. ಅವರು ನಿಂದ ನಿಂದ ಸ್ಥಲಕ್ಕೆ ಸಂಬಂಧವಾಗಿಪ್ಪರು. ಇದು ದೃಷ್ಟಾನುಭಾವಸಿದ್ಧಿ, ಸರ್ವಸ್ಥಲಭೇದ, ವಿಶ್ವತೋಮುಖರೂಪು. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನು ತತ್ವಭಿತ್ತಿಸ್ವರೂಪನು.
--------------
ಮೋಳಿಗೆ ಮಹಾದೇವಿ
ಗಂಧ ಪುಷ್ಪದಂತೆ, ಚಂದನ ಲೀಲೆಯಂತೆ ಕಂಜ ಕಿರಣದಂತೆ, ಬಿಂದು ಸಸಿಯಂತೆ ಹಿಂಗದಿರಬೇಕು ಅಂಗಲಿಂಗಸಂಬಂಧ, ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಪ್ರಾಣಲಿಂಗಿಗಳೆಂದು ನುಡಿವುತಿಪ್ಪ ಅಣ್ಣಗಳು ನೀವು ಕೇಳಿರೆ. ಲಿಂಗಕ್ಕೆ ಪ್ರಾಣ ಮೊದಲೋ? ಪ್ರಾಣಕ್ಕೆ ಲಿಂಗ ಮೊದಲೋ? ಈ ಉಭಯವ ವಿಚಾರಿಸಿಕೊಂಡು ನುಡಿಯಿರಣ್ಣಾ. ವಾಯು ಗಂಧವ ಸೋಂಕಿತೊ? ಗಂಧ ವಾಯುವ ಸೋಂಕಿತೊ? ಲಿಂಗವ ಮನವರಿಯಿತೊ? ಮನವ ಲಿಂಗವರಿಯಿತೊ? ಕಾಯದಿಂದ ಸೋಂಕಿದ ಸುಖವ ಮನದಿಂದರಿದವರಾರೊ? ಮನದಲ್ಲಿ ಮುಟ್ಟಿದ ಗುಣವ ತನುವಿನಿಂದರಿದವರಾರೊ? ಇಂತೀ ಉಭಯವನರಿದಡೆ ಪ್ರಾಣಲಿಂಗಿಗಳೆಂಬೆ. ಉರಿ ಸೋಂಕಿದ ಕರ್ಪುರಕ್ಕೆ ನಿಲುವುದಕ್ಕೆ ನೆಲೆವನೆಯಿನ್ನಾವುದೊ? ಭ್ರಮರ ಸೋಂಕಿದ ಸುವಾಸನೆಗೆ ಕಡೆ ನಡು ಮೊದಲಾವುದೊ? ಧೂಳು ಕೊಂಡ ಜಲಕ್ಕೆ ನೆಲೆಯಿನ್ನಾವುದೊ? ಲಿಂಗ ಸೋಂಕಿದ ಮನಕ್ಕೆ, ಲಿಂಗನವರಿವುದಕ್ಕೆ ನೆಲೆಗೊಂಬ ಠಾವಿನ್ನಾವುದೊ? ಇಂತೀ ಗುಣಂಗ[ಳೆಲ್ಲ] ಕಳೆದುಳಿದ ಮಹಾತ್ಮಂಗೆ ನಮೋ ನಮೋ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->