ಅಥವಾ

ಒಟ್ಟು 57 ಕಡೆಗಳಲ್ಲಿ , 19 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಕ್ಕೆವಿಂಡುಗಳೆಂಬವರು ಮುಕ್ಕಣ್ಣಾ, ನಿಮ್ಮ ಗಣಂಗಳು. ಬತ್ತಿದ ಕೆರೆ ಬಾಯಬಿಟ್ಟಂತೆ ಮೊರೆಯಿಟ್ಟು ಬರಲು, ಹೊತ್ತಿದ ಅಂಗಾಲ ಕಿಚ್ಚು ನ್ಕ್ತೆಯ ಮುಟ್ಟಿದಡೆ, ಚಕ್ಕನೆ ಕಪಿಲಸಿದ್ಧಮಲ್ಲಿನಾಥ ನೊಸಲಕಣ್ಣ ತೆಗೆದನು.
--------------
ಸಿದ್ಧರಾಮೇಶ್ವರ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುಹಸ್ತದಲ್ಲಿ ಉತ್ಪತ್ಯವಾಗಿ, ಜಂಗಮಾನುಭವ ಶರಣರ ಸಂಗದಲ್ಲಿ ಬೆಳೆದು, ನಿಜಲಿಂಗದಲ್ಲಿ ಲೀಯವಾದ ಗುರುಚರ ಭಕ್ತರು ತಮ್ಮ ಸ್ಥೂಲಕಾಯವೆಂಬ ನರಕಂಥೆಯ ಕಳೆದರೆ, ಭಕ್ತ ಬಂಧುಗಳಾದ ಆಪ್ತ ಗಣಂಗಳು ಬಂದು ಸಮಾಧಿಯಂ ತೆಗೆದು, ಆ ಕಾಯವೆಂಬ ಕಂಥೆಯ ನಿಕ್ಷೇಪವಂ ಮಾಡುವುದೆ ಸದಾಚಾರ. ಇಂತಲ್ಲದೆ ಮೃತವಾದನೆಂದು ಗೂಟವಂ ಬಲಿದು, ಗುಂಟಿಕೆಯನಿಕ್ಕಿ, ಶೋಕಂಗೆಯ್ದು, ಪ್ರೇತಸೂತಕ ಕರ್ಮವಿಡಿದು, ತದ್ದಿನವಂ ಮಾಡುವದನಾಚಾರ, ಪಂಚಮಹಾಪಾತಕ. ಅವಂಗೆ ಗುರು ಲಿಂಗ ಜಂಗಮ ಪ್ರಸಾದವಿಲ್ಲ ಅದೆಂತೆಂದೊಡೆ: ``ಯೋ ಗುರುಂ ಮೃತಭಾವೇನ ತದ್ದಿನಂ ಯಸ್ಯ ಶೋಚ್ಯತೇ ಗುರುಲಿಂಗಪ್ರಸಾದಂ ಚ ನಾಸ್ತಿ ನಾಸ್ತಿ ವರಾನನೇ ಎಂದುದಾಗಿ, ಪ್ರೇತಸೂತಕದ ಪಾತಕರಿಗೆ ಅಘೋರನರಕ ತಪ್ಪದು. ಇಂತಪ್ಪ ಅಘೋರನರಕಿಗಳ ಮುಖವ ನೋಡಲಾಗದು ಕಾಣಾ ಕೂಡಲಚೆನ್ನಸಂಗಯ್ಯ.
--------------
ಚನ್ನಬಸವಣ್ಣ
ಶ್ರೀಗುರು ಶಿವಗಣಂಗಳ ಮಧ್ಯದಲ್ಲಿ ಎನಗೆ ಉಪದೇಶಿಸುವಲ್ಲಿ ಪರಮೇಶ್ವರನ ಪಂಚಮುಖವನೆ ಪಂಚಕಳಶವಾಗಿ ಮೂರ್ತಿಗೊಳಿಸಿ, ಗಣಂಗಳು ಸಾಕ್ಷಿಯಾಗಿ ಕರಸ್ಥಲಕ್ಕೆ ಶಿವಲಿಂಗವ ಕೊಟ್ಟು `ಈ ಲಿಂಗವೆ ಗಂಡ, ನೀನೇ ಹೆಂಡತಿ'ಯೆಂದು ಹೇಳಿ, ಲಲಾಟದಲ್ಲಿ ವಿಭೂತಿಯ ಪಟ್ಟವ ಕಟ್ಟಿ ಹಸ್ತದಲ್ಲಿ ಕಂಕಣವ ಕಟ್ಟಿ, ಪಾದೋದಕ ಪ್ರಸಾದವನಿತ್ತು ಎಂದೆಂದಿಗೂ ಸತಿಪತಿಭಾವ ತಪ್ಪದಿರಲಿಯೆಂದು ನಿರೂಪಿಸಿದದನಯ್ಯ ಶ್ರೀಗುರು. ಆ ನಿರೂಪವ ಮಹಾಪ್ರಸಾದವೆಂದು ಕೈಕೊಂಡೆನಯ್ಯ. ಇದು ಕಾರಣ, ಎನ್ನ ಪತಿಯಲ್ಲದೆ ಅನ್ಯವನರಿಯೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದೇವ ದೇವ ಮಹಾಪ್ರಸಾದ. ತನ್ನ ರೂಪವ ತಿಳಿದು ನೋಡಬೇಕೆಂದು ಕನ್ನಡಿಯನುಪಾಸ್ತಿ ಮಾಡಲು ಆ ಕನ್ನಡಿ ಬೇಕು ಬೇಡೆಂಬುದೆ ಅಯ್ಯಾ ? ಪತಿಯಾಜ್ಞೆಯಂತೆ ಸತಿಪತಿಭಾವವ ಧರಿಸಿದಡೆ ಸಂಯೋಗಕಾಲದಲ್ಲಿ ಅಲ್ಲವೆಂದೆನಬಹುದೆ ? ನೀವೆ ಮಾಡಿದಡೆ ನೀವೆ ಮಾಡಿದುದು ನಾನೆ ಮಹಾಪ್ರಸಾದವೆಂದು ಸ್ವೀಕರಿಸಿದಡೂ ನೀವೆ ಮಾಡಿದುದು. ಅಂಗೈಯ ಲಿಂಗದ ಲಕ್ಷಣವ ನೋಡಿ ಎಂದು ಕೈಯಲ್ಲಿ ಕೊಟ್ಟಡೆ, ಲಿಂಗದಲ್ಲಿ ಲಕ್ಷಣವನರಸಲಾಗದೆಂದು ಚೆನ್ನಸಂಗಮನಾಥನ `ಕೋ' ಎಂದು ಕೊಟ್ಟಡೆ ಮಹಾಪ್ರಸಾದವೆಂದು ಕೈಕೊಂಡೆನು ಗುರುವೆ. ಬೆದರಿ ಅಂಜಿದಡೆ ಮನವ ಸಂತೈಸಿ ಏಕಾರ್ಥದ ಭೇದದ ತೋರಿ ಬಿನ್ನಹವ ಮಾಡಿದೆನು. ಕೂಡಲಚೆನ್ನಸಂಗಮದೇವರ ಮಹಾಮನೆಯ ಗಣಂಗಳು ಮೆಚ್ಚಲು, ಸಂಗನಬಸವಣ್ಣನ ಕರುಣದ ಶಿಶುವೆಂಬುದ ಮೂರುಲೋಕವೆಲ್ಲವು ಅಂದು ಜಯ ಜಯ ಎನುತಿರ್ದುದು.
--------------
ಚನ್ನಬಸವಣ್ಣ
ಅಷ್ಟಾವರಣಗಳು ಯಾರಿಗೆ ಸಾಧ್ಯವಾಯಿತ್ತೆಂದಡೆ ಹೇಳಿಹೆ ಕೇಳಿರಣ್ಣ : ಗುರು ಸಾಧ್ಯವಾಯಿತ್ತು ಗುರುಭಕ್ತಂಗೆ ; ಲಿಂಗ ಸಾಧ್ಯವಾಯಿತ್ತು ನೀಲಲೋಚನೆತಾಯಿಗೆ ; ಜಂಗಮವು ಸಾಧ್ಯವಾಯಿತ್ತು ಬಸವೇಶ್ವರದೇವರಿಗೆ ; ಪಾದೋದಕ ಸಾಧ್ಯವಾಯಿತ್ತು ವೇಮನಾರಾಧ್ಯಂಗೆ ; ಪ್ರಸಾದ ಸಾಧ್ಯವಾಯಿತ್ತು ಬಿಬ್ಬಿಬಾಚಯ್ಯಂಗೆ ; ವಿಭೂತಿ ಸಾಧ್ಯವಾಯಿತ್ತು ಓಹಿಲಯ್ಯಗಳಿಗೆ ; ರುದ್ರಾಕ್ಷಿ ಸಾಧ್ಯವಾಯಿತ್ತು ಚೇರಮರಾಯಗೆ ; ಪಂಚಾಕ್ಷರಿ ಸಾಧ್ಯವಾಯಿತ್ತು ಅಜಗಣ್ಣಂಗೆ. ಇನ್ನು ಷಟ್‍ಸ್ಥಲದ ನಿರ್ಣಯವ ಕೇಳಿ : ಭಕ್ತಸ್ಥಲ ಬಸವಣ್ಣಂಗಾಯಿತ್ತು ; ಮಾಹೇಶ್ವರಸ್ಥಲ ಮಡಿವಾಳಯ್ಯಂಗಾಯಿತ್ತು ; ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು ; ಪ್ರಾಣಲಿಂಗಿಸ್ಥಲ ಸಿದ್ಭರಾಮಯ್ಯಂಗಾಯಿತ್ತು ; ಶರಣಸ್ಥಲ ಪ್ರಭುದೇವರಿಗಾಯಿತ್ತು; ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಇನ್ನು ಷಡುಸ್ಥಲದ ವಿವರವಂ ಪೇಳ್ವೆನು.- ಭಕ್ತಸ್ಥಲದ ವಿವರವು : ಗುರುಲಿಂಗಜಂಗಮವು ಒಂದೆಯೆಂದು ಕಂಡು ಸದಾಚಾರದಲ್ಲಿ ನಡೆವನು, ತ್ರಿಕಾಲ ಮಜ್ಜನವ ನೀಡುವನು, ಲಾಂಛನಧಾರಿಗಳ ಕಂಡಡೆ ವಂದನೆಯ ಮಾಡುವನು, ಆಪ್ಯಾಯನಕ್ಕೆ ಅನ್ನವ ನೀಡುವನು, ಜಂಗಮಕ್ಕೆ ಪ್ರತಿ ಉತ್ತರವ ಕೊಡನು. ಪೃಥ್ವಿ ಅಂಗವಾಗಿಪ್ಪುದೆ ಭಕ್ತಿಸ್ಥಲವು. ಸಾಕ್ಷಿ : 'ಮಜ್ಜನಂ ತು ತ್ರಿಕಾಲೇಷು ಶುಚಿಪಾಕಸಮರ್ಪಿತಂ | ಭವಿಸಂಗಪರಿತ್ಯಾಗಂ ಇತ್ಯೇತೇ ಭಕ್ತಿಕಾರಣಂ || ಸದಾಚಾರೇ ಶಿವಭಕ್ತಿಃ ಲಿಂಗಜಂಗಮೇಕಾದ್ಥಿಕಂ | ಲಾಂಛನೇನ ಶರಣ್ಯಂ ಚ ಭಕ್ತಿಸ್ಥಲಂ ಮಹೋತ್ತಮಂ ||' ಇನ್ನು ಮಾಹೇಶ್ವರಸ್ಥಲದ ವಿವರವು : ಪರಸ್ತ್ರೀ ಪರನಿಂದೆ ಪರದ್ರವ್ಯ ಪರಹಿಂಸೆ ಅನೃತ ಇವು ಪಂಚಮಹಾಪಾತಕವು, ಇವ ಬಿಟ್ಟು ಲಿಂಗನಿಷ್ಠೆಯಲ್ಲಿ ಇರ್ದು ಜಲವೆ ಅಂಗವಾಗಿಪ್ಪುದೆ ಮಾಹೇಶ್ವರಸ್ಥಲವು. ಸಾಕ್ಷಿ : 'ಪರಸ್ತ್ರೀಯಂ ಪರಾರ್ಥಂ ಚ ವರ್ಜಿತೋ ಭಾವಶುದ್ಧಿಮಾನ್ | ಲಿಂಗನಿಸ್ಸಂಗಿಯುಕ್ತಾತ್ಮಾ ಮಹೇಶಸ್ಥಲಮುತ್ತಮಂ ||' ಇನ್ನು ಪ್ರಸಾದಿಸ್ಥಲದ ವಿವರ : ಲಿಂಗಕ್ಕೆ ಅರ್ಪಿಸಿದುದ ಲಿಂಗನೆನಹಿನಿಂದೆ ಸ್ವೀಕರಿಸುವುದು, ಅನರ್ಪಿತವ ವರ್ಜಿಸುವುದು, ಲಿಂಗದೊಡನೆ ಉಂಬುವುದು, ಅಗ್ನಿಯೆ ಅಂಗವಾಗಿಪ್ಪುದೆ ಪ್ರಸಾದಿಸ್ಥಲ. ಇನ್ನು ಪ್ರಾಣಲಿಂಗಿಸ್ಥಲದ ವಿವರವು : ಸುಗುಣ ದುರ್ಗುಣ ಉಭಯವನತಿಗಳೆದು ಸುಖ ದುಃಖ ಸ್ತುತಿ ನಿಂದೆ ಶತ್ರು ಮಿತ್ರಾದಿಗಳೆಲ್ಲರಂ ಸಮಾನಂಗಂಡು ವಾಯುವೆ ಅಂಗವಾಗಿಪ್ಪುದೆ ಪ್ರಾಣಲಿಂಗಿಸ್ಥಲ. ಇನ್ನು ಶರಣಸ್ಥಲದ ವಿವರವು : ಸತಿಪತಿಭಾವ ಅಂಗಲಿಂಗವಾಗಿಪ್ಪುದು, ಪಂಚೇಂದ್ರಿಯಸುಖ ನಾಸ್ತಿಯಾಗಿಪ್ಪುದು, ಆಕಾಶವೆ ಅಂಗವಾಗಿಪ್ಪುದು, ಇದು ಶರಣಸ್ಥಲವು. ಸಾಕ್ಷಿ : 'ಪತಿರ್ಲಿಂಗಂ ಸತೀ ಚಾsಹಂ ಇತಿ ಯುಕ್ತಂ ಸನಾತನಃ | ಪಂಚೇಂದ್ರಿಯಸುಖಂ ನಾಸ್ತಿ ಶರಣಸ್ಥಲಮುತ್ತಮಂ ||' ಇನ್ನು ಐಕ್ಯಸ್ಥಲದ ವಿವರವು : ಅರಿಷಡ್ವರ್ಗಂಗಳಿಲ್ಲದಿಹರು, ನಿರ್ಭಾವದಲ್ಲಿಹರು, ಷಡೂರ್ಮಿಗಳಿಲ್ಲದಿಹರು, ಅಷ್ಟವಿಧಾರ್ಚನೆ ಇಲ್ಲದಿಹರು, ಉರಿಯುಂಡ ಕರ್ಪುರದ ಹಾಗೆ ಇಹರು, ಆತ್ಮನೆ ಅಂಗವಾಗಿಪ್ಪುದು ಐಕ್ಯಸ್ಥಲವು. ಸಾಕ್ಷಿ : 'ಷಡೂರ್ಮಿಯೋಗಷಡ್ವರ್ಗಂ ನಾಸ್ತಿ ಚಾಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಸಯೋಗವತ್||' ಹೀಗೆ ಗಣಂಗಳು ನಡೆದ ಮಾರ್ಗದಲ್ಲಿ ನಡೆದಡೆ ಅಂದೇನೊ ಇಂದೇನೊ ? ಇಂತೀ ಅಷ್ಟಾವರಣಗಳ, ಷಡುಸ್ಥಲದ ಮಾರ್ಗವನು ಎನ್ನೊಳು ಅರುಹಿದಾತ, ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಯ್ಯ! ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿಗಳೆಂದು ಒಪ್ಪವಿಟ್ಟು ನಿಚ್ಚ ನಿಚ್ಚ ನುಡಿವ ಅಣ್ಣಗಳಿರ! ನೀವು ಅಚ್ಚಪ್ರಸಾದ, ನಿಚ್ಚಪ್ರಸಾದ, ಸಮಯಪ್ರಸಾದವಾದ ವಿಚಾರವ ಹೇಳಿರಣ್ಣ! ಅರಿಯದಿರ್ದಡೆ ಕೇಳಿರಣ್ಣ! ಸಮಸ್ತಪದಾರ್ಥವ ಗುರುಲಿಂಗಜಂಗಮದಿಂದ ಪವಿತ್ರವ ಮಾಡಿ ಅವರವರ ಪದಾರ್ಥವ ಅವರವರಿಗೆ ವಂಚಿಸದೆ ನಿರ್ವಂಚಕತ್ವದಿಂದ ಸಮರ್ಪಿಸುವದೆ ತ್ರಿವಿಧಪ್ರಸಾದಸ್ವರೂಪು ನೋಡ! ಕ್ರಿಯಾಮುಖದಲ್ಲಿ ಇಷ್ಟಲಿಂಗಕ್ಕೆ ಸಮರ್ಪಿಸುವ ಪೃಥ್ವಿಸಂಬಂಧವಾದ, ಅಷ್ಟತನುಗಳಿಂದುದಯವಾದ, ಗಂಧರಸರೂಪುಸ್ಪರ್ಶನಶಬ್ದ ಮೊದಲಾದ ಸಮಸ್ತಪದಾರ್ಥಂಗಳ ಆ ಕ್ರಿಯಾಗುರುಲಿಂಗಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುಮಿಕ್ಕ ರೂಪುರುಚಿತೃಪ್ತಿಪ್ರಸಾದವ ಭೋಗಿಸುವಾತನೆ ತ್ರಿವಿಧಪ್ರಸಾದಿ ನೋಡ! ಜ್ಞಾನಮುಖದಲ್ಲಿ ಪ್ರಾಣಲಿಂಗಕ್ಕೆ ಸಮರ್ಪಿಸುವ ಮನಸಂಬಂಧವಾದ ಸ್ತ್ರೀಯಳೆಂಬ ರೂಪುರುಚಿತೃಪ್ತಿ ಮೊದಲಾದ ಪದಾರ್ಥಂಗಳ ಸತ್ಕ್ರೀಯಾಗುರುಲಿಂಗಜಂಗಮವನೆ ಜ್ಞಾನಗುರುಲಿಂಗಜಂಗಮವೆಂದು ಭಾವಿಸಿ ತನ್ನ ವಿವಾಹಸಮಯದಲ್ಲಿ ಗುರುಲಿಂಗಜಂಗಮಕ್ಕೆ ಭಕ್ತಗಣಸಾಕ್ಷಿಯಾಗಿ ತನ್ನ ಕೂಟದ ಶಕ್ತಿಯ ಗುರುಲಿಂಗಜಂಗಮಕ್ಕೆ ಕೊಡುವ ಭಕ್ತಿ ಮೊದಲಾಗಿ, ಆ ಶಕ್ತಿಯರ ಅಂತರಂಗದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗವ ಬಹಿಷ್ಕರಿಸಿ ಸದ್ಗುರುಮುಖದಿಂ ಹಸ್ತಮಸ್ತಕಸಂಯೋಗವ ಮಾಡಿಸಿ, ಆ ಲಿಂಗಾಂಗಕ್ಕೆ ಪಾಣಿಗ್ರಹಣವ ಮಾಡಿಸಿ, ಮಂತ್ರದೀಕ್ಷೆಯ ಬೋದ್ಥಿಸಿ, ಪಾದೋದಕಪ್ರಸಾದವ ಕೊಡಿಸಿ, ಸದಾಚಾರ-ಸದ್ಭಕ್ತಿ-ಸತ್ಕ್ರೀಯಾ-ಸಮ್ಯಜ್ಞಾನವ ಬೋಧಿಸಿ, ಶಕ್ತಿಭಾರವಳಿದು ಕ್ರಿಯಾಶಕ್ತಿಯರೆಂದು ಭಾವಿಸಿ, ಪ್ರಥಮದಲ್ಲಿ ಗುರುಲಿಂಗಜಂಗಮಕ್ಕೆ ಆ ಕ್ರಿಯಾಶಕ್ತಿಯ ಭಕ್ತಗಣಸಾಕ್ಷಿಯಾಗಿ ಪ್ರಮಾಣದಿಂದ ಕಂಕಣವ ಕಟ್ಟಿ, ಶರಣಾರ್ಥಿಯೆಂದು ಒಪ್ಪದಿಂದ ಒಪ್ಪಿಸಿ, ಅದರಿಂ ಮೇಲೆ, ಆ ಗುರುಲಿಂಗಜಂಗಮದ ಕರುಣವ ಹಡೆದು, ಆ ಕ್ರಿಯಾಶಕ್ತಿಯ ಭಕ್ತಗಣಮಧ್ಯದಲ್ಲಿ ಕೂಡಿ, ಸೆರಗ ಹಿಡಿದು ಗಣಪದಕ್ಕೆ ಶರಣೆಂದು ವಂದಿಸಿ ಅವರ ಕರುಣವ ಹಾರೈಸಿ ನಿಜಭಕ್ತಿಜ್ಞಾನವೈರಾಗ್ಯವ ಬೆಸಗೊಂಡು ಸಚ್ಚಿದಾನಂದಲಿಂಗನಿಷ್ಠಾಪರತ್ವದಿಂದ ಗುರುಲಿಂಗಜಂಗಮಶಕ್ತಿ ಮೊದಲಾಗಿ ಗುರುಭಕ್ತಿಯಿಂದ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಮಹಾಜ್ಞಾನಮುಖದಲ್ಲಿ ಭಾವಲಿಂಗಕ್ಕೆ ಸಮರ್ಪಿಸುವ ಧನಸಂಬಂಧವಾದ ದ್ರವ್ಯವನ್ನು ಆ ಕ್ರಿಯಾಜ್ಞಾನಯುಕ್ತವಾದ ಗುರುಲಿಂಗಜಂಗಮವನೆ ಮಹಾಜ್ಞಾನಗುರುಲಿಂಗಜಂಗಮವೆಂದು ಭಾವಿಸಿ, ತಾ ಧರಿಸುವಂಥ ವಸ್ತ್ರಾಭರಣರಕ್ಷೆ ಮೊದಲಾಗಿ ಪ್ರತಿಪದಾರ್ಥವ ವಿಚಾರಮುಖದಲ್ಲಿ ಪಾತ್ರಾಪಾತ್ರವ ತಿಳಿದು ಸಮರ್ಪಿಸಿ, ನಿಜನೈಷ್ಠೆಯಿಂದ, ಪರದ್ರವ್ಯವ ತಂದು ಗುರುಲಿಂಗಜಂಗಮವ ಒಡಗೂಡಿ ಋಣಭಾರಕ್ಕೊಳಗಾಗದೆ ನಡೆ ನುಡಿ ಒಂದಾಗಿ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಈ ವಿಚಾರವ ಸದ್ಗುರುಮುಖದಿಂದ ಬೆಸಗೊಂಡು ಆಚರಿಸುವರೆ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ ನೋಡ! ಈ ವಿಚಾರವನರಿಯದೆ, ಶ್ರುತಿ-ಗುರು-ಸ್ವಾನುಭಾವವ ತಿಳಿಯದೆ, ವಾಚಾಳಕತ್ವದಿಂದ ನುಡಿದು, [ತಾವು] ಗುರುಲಿಂಗಜಂಗಮಪ್ರಸಾದಿಗಳೆಂಬ ಮೂಳರ ಬಾಯ ಮೇಲೆ ಗಣಂಗಳು ಮೆಟ್ಟಿದ ಚಮ್ಮಾವಿಗೆಯ ತೆಗೆದುಕೊಂಡು ಪಟಪಟನೆ ಹೊಡೆಯೆಂದಾತನಂಬಿಗರ ಚೌಡಯ್ಯನು ನೋಡ, ಸಂಗನ ಬಸವೇಶ್ವರ.
--------------
ಅಂಬಿಗರ ಚೌಡಯ್ಯ
ಲಿಂಗವೆ ನಿಮ್ಮ ನೆನೆವ ಮನಕ್ಕೆ ಹೊನ್ನ ತೋರಿ, ನಿಮ್ಮ ನೋಡುವ ನೋಟಕ್ಕೆ ಹೆಣ್ಣ ತೋರಿ, ನಿಮ್ಮ ಪೂಜಿಸುವ ಕೈಗೆ ಮಣ್ಣ ತೋರಿ, ಮತ್ತೆ ಗಣಂಗಳ ಸಾಕ್ಷಿಯಾಗಿದ್ದುದ ತಿಳಿದು ಅವರಿಗೆ ಅಂಜಿ ಮನದ ಕೊನೆಯಲ್ಲಿ ಮಂತ್ರರೂಪಾಗಿ ನಿಂದ ಕಾರಣ ಹೊನ್ನಿನ ನೆನಹು ಕೆಟ್ಟಿತ್ತು ನೋಡಾ ! ಪರಶಿವಮೂರ್ತಿಯ ಮುದ್ದುಮೊಗದ ತುಟಿಯಲ್ಲಿ ಹುಟ್ಟಿದ ಓಂಕಾರನಾದಾಮೃತವ ಚುಂಬನವ ಮಾಡಲಿಕ್ಕೆ ಹೆಣ್ಣಿನ ನೋಟ ಕೆಟ್ಟಿತ್ತು. ಕರಕಮಲ ಗದ್ದುಗೆಯ ಮಾಡಿದ ಕಾರಣ ಮಣ್ಣಿನ ಧಾವತಿ ಬಿಟ್ಟುಹೋಯಿತ್ತು. ಇಂತು ಮಾಡಿದಿರಿ ಲಿಂಗವೆ, ಮತ್ತೆ ನಿಮ್ಮ ಬೇಡಿದಡೆ ಅಷ್ಟೈಶ್ವರ್ಯ ಚತುರ್ವಿಧಪದಗಳನು ಕೊಡುವಿರಿ. ಇವೆಲ್ಲ ಅಲ್ಪಸುಖ, ತಾಮಸಕಿಕ್ಕುವವು. ಮತ್ತೆ ನಮ್ಮ ಗಣಂಗಳ ಮನೆಯಲ್ಲಿ ಕೇಡಿಲ್ಲದಂತಹ ನಿತ್ಯವಾದ ವಸ್ತು ಅಷ್ಟೈಶ್ವರ್ಯಗಳುಂಟು, ನಿದ್ಥಿ ನಿಧಾನಗಳುಂಟು, ಇದಕ್ಕೆ ನಾವು ನೀವು ಬೇಡಿಕೊಂಬುವ ಬನ್ನಿರಿ. ಅವರಿರುವ ಸ್ಥಲವ ತೋರಿಕೊಡಿ ಎಲೆ ಲಿಂಗವೆ. ಅವರು ಎಲ್ಲಿ ಐದಾರೆಯೆಂದಡೆ : ಏಳುಪ್ಪರಿಗೆಯೊಳಗಿಪ್ಪರು. ಅವರ ನಾಮವ ಪೇಳ್ವೆನು - ಪಶ್ಚಿಮಚಕ್ರದಲ್ಲಿ ನಿರಂಜನ ಜಂಗಮವು, ಗುರು-ಹಿರಿಯರು ಅಸಂಖ್ಯಾತ ಮಹಾಗಣಂಗಳು ಸಹವಾಗಿಪ್ಪರು. ಅವರ ಮಧ್ಯದಲ್ಲಿ ನೀವೆ ನಾವಾಗಿ ಬೇಡಿಕೊಂಬೆವು. ಬೇಡಿಕೊಂಡ ಮೇಲೆ ಅವರು ಕೊಟ್ಟ ವಸ್ತುವ ಹೇಳಿಹೆನು ಕೇಳಿರೆ ಲಿಂಗವೆ. ಅವು ಯಾವುವೆಂದಡೆ : ಜೀವಾತ್ಮ ಅಂತರಾತ್ಮ ಪರಮಾತ್ಮರೆಂಬ ಆತ್ಮತ್ರಯರು, ಹೇಮಾದ್ರಿ ರಜತಾದ್ರಿ ಮಂದರಾದ್ರಿಯೆಂಬ ಮೇರುಗಳ ಸೆಜ್ಜೆಯ ಮಾಡಿ, ವಾಯುವನೆ ಶಿವದಾರವ ಮಾಡಿ, ತನುತ್ರಯವನೆ ವಸ್ತ್ರವ ಮಾಡಿ, ಇವುಗಳನೆ ಅವರು ನಮಗೆ ಕೊಟ್ಟರು. ಅಲ್ಲದೆ ಪರಸ್ತ್ರೀಯರ ಅಪ್ಪದ ಹಾಗೆ ನಿಃಕಾಮವೆಂಬ ಉಡುಗೊರೆಯ ಮಾಡಿ ಕಟ್ಟಿನಲ್ಲಿಟ್ಟರು. ಕುಶಬ್ದವ ಕೇಳದ ಹಾಗೆ ಬಲದ ಕರ್ಣದಲ್ಲಿ ಷಡಕ್ಷರವೆಂಬ ವಸ್ತುವ ಮಾಡಿಯಿಟ್ಟರು. ಪಂಚಾಂಗುಲಿಗೆ ಪಂಚಾಕ್ಷರವೆ ಐದುಂಗುರವ ಮಾಡಿಯಿಟ್ಟರು. ನೂರೆಂಟು ನಾಮ ಹರಗÀಣ ಕೊರಳಲಿ ಹಾಕಿದರು. ಆಪತ್ತಿಗೆ ಅಂಜಬೇಡೆಂದು ವಿಭೂತಿಧೂಳನ ಧಾರಣವಮಾಡಿ ಜೋಡಂಗಿಯ ಮಾಡಿ ತೊಡಿಸಿದರು. ಗಣಂಗಳು ಹೋದ ಹಾದಿಯನೆ ಮುಂಡಾಸವ ಮಾಡಿ ತಲೆಗೆ ಸುತ್ತಿದರು. ಆವ ಕಂಟಕವು ಬಾರದ ಹಾಗೆ ಗಣಂಗಳ ಪಾದಧೂಳನವ ಸೆಲ್ಲೆಯ ಮಾಡಿ ಹೊದಿಸಿದರು. ಭಕ್ತಿಯೆಂಬ ನಿಧಾನವ ಕೊಟ್ಟು, ಭಾವದಲ್ಲಿ ಬಚ್ಚಿಟ್ಟುಕೊಳ್ಳಿರಿ ಎಂದರು. ಅಷ್ಟಾವರಣವೆ ನಿದ್ಥಿನಿಧಾನವೆಂದು ಹೇಳಿದರು. ಇವೆಲ್ಲ ವಸ್ತುಗಳ ನಿಮ್ಮ ನೋಡಿ ಕೊಟ್ಟರಲ್ಲದೆ ಬೇರಿಲ್ಲ. ನಿಮ್ಮ ದಾಸಾನುದಾಸಯೆಂದು ನಿಮ್ಮೊಡವೆಯ ನಿಮಗೊಪ್ಪಿಸು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಎನ್ನ ಕಕ್ಷೆಯಲ್ಲಿ ಸ್ವಾಯತವಾದನಯ್ಯಾ ಶಂಕರದಾಸಿಮಯ್ಯನು. ಎನ್ನ ಕರಸ್ಥಲದಲ್ಲಿ ಸ್ವಾಯತವಾದನಯ್ಯಾ ಉರಿಲಿಂಗಪೆದ್ದಯ್ಯನು. ಎನ್ನ ಉರಸೆಜ್ಜೆಯಲ್ಲಿ ಸ್ವಾಯತವಾದನಯ್ಯ ಘಟ್ಟಿವಾಳ ಮದ್ದಯ್ಯನು. ಎನ್ನ ಅಮಳೋಕ್ಯದಲ್ಲಿ ಸ್ವಾಯತವಾದನಯ್ಯಾ ಅಜಗಣಯ್ಯನು. ಎನ್ನ ಮುಖಸೆಜ್ಜೆಯಲ್ಲಿ ಸ್ವಾಯತವಾದನಯ್ಯಾ ನಿಜಗುಣದೇವರು. ಎನ್ನ ಶಿಖೆಯಲ್ಲಿ ಸ್ವಾಯತವಾದನಯ್ಯಾ ಅನಿಮಿಷದೇವರು. ಎನ್ನ ಘ್ರಾಣದಲ್ಲಿ ಸ್ವಾಯತವಾದನಯ್ಯಾ ಏಕೋರಾಮಿತಂದೆಗಳು. ಎನ್ನ ಜಿಹ್ವೆಯಲ್ಲಿ ಸ್ವಾಯತವಾದನಯ್ಯಾ ಪಂಡಿತಾರಾಧ್ಯರು. ಎನ್ನ ನೇತ್ರದಲ್ಲಿ ಸ್ವಾಯತವಾದನಯ್ಯಾ ರೇವಣಸಿದ್ದೇಶ್ವರದೇವರು. ಎನ್ನ ತ್ವಕ್ಕಿನಲ್ಲಿ ಸ್ವಾಯತವಾದನಯ್ಯಾ ಸಿದ್ಧರಾಮೇಶ್ವರದೇರು. ಎನ್ನ ಶ್ರೋತ್ರದಲ್ಲಿ ಸ್ವಾಯತವಾದನಯ್ಯಾ ಮರುಳಸಿದ್ಧೇಶ್ವರದೇವರು. ಎನ್ನ ಹೃದಯದಲ್ಲಿ ಸ್ವಾಯತವಾದನಯ್ಯಾ ಪ್ರಭುದೇವರು. ಎನ್ನ ಭ್ರೂಮಧ್ಯದಲ್ಲಿ ಸ್ವಾಯತವಾದನಯ್ಯಾ ಚೆನ್ನಬಸವಣ್ಣನು. ಎನ್ನ ಬ್ರಹ್ಮರಂಧ್ರದಲ್ಲಿ ಸ್ವಾಯತವಾದನಯ್ಯಾ ಸಂಗನಬಸವಣ್ಣನು. ಎನ್ನ ಉತ್ತಮಾಂಗದಲ್ಲಿ ಸ್ವಾಯತವಾದನಯ್ಯಾ ಮಡಿವಾಳಯ್ಯನು. ಎನ್ನ ಲಲಾಟದಲ್ಲಿ ಸ್ವಾಯತವಾದನಯ್ಯಾ ಸೊಡ್ಡಳ ಬಾಚರಸರು. ಎನ್ನ ಪಶ್ಚಿಮದಲ್ಲಿ ಸ್ವಾಯತವಾದನಯ್ಯಾ ಕಿನ್ನರ ಬ್ರಹ್ಮಯ್ಯನು. ಎನ್ನ ಸರ್ವಾಂಗದಲ್ಲಿ ಸ್ವಾಯತವಾದನಯ್ಯಾ ಗಣಂಗಳು. ಮಹಾಲಿಂಗ ಕಲ್ಲೇಶ್ವರಾ, ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಹಾವಿನಹಾಳ ಕಲ್ಲಯ್ಯ
ಲಿಂಗವ ಪೂಜಿಸಿ ಅಂಗವ ಬೇಡಬಾರದಯ್ಯಾ. ಅದೇಕೆಂದಡೆ ಶಿವನು ದೀನನು. ಅದು ಹೇಗೆಂದಡೆ: ದ್ರವ್ಯವೆಲ್ಲವು ಕುಬೇರನ ವಾಸಮಾಡಿ ದೀನವಾಯಿತು. ಹದಿನಾಲ್ಕು ಲೋಕಗೋಸ್ಕರವಾಗಿ ಆ ದ್ರವ್ಯವಿದ್ದು, ಹದಿನಾಲ್ಕು ಲೋಕಕ್ಕೆ ಹೇಗೆ ಮಾಡಲಿ ಎಂದು ಚಿಂತಿಸಿ ಒಂದು ಕೌಪವ ತಂದು ನಮ್ಮ ಗಣಂಗಳ ಮನೆಯಲಿಟ್ಟು ಮಾಯವಾಗಿ, ನ್ಯಾಯಕಿಕ್ಕಿ, ಅಮರನೀತಿಗಳ ಮನೆಯ ಭಂಡಾರವೆಲ್ಲವ ಅವರು ಸಹಜವಾಗಿ ಒಯ್ದರು. ಅದು ಸಾಲದೆ, ನಮ್ಮ ಗಜಪತಿರಾಯನ ಮನೆಯ ಕನ್ನವನಿಕ್ಕಿ ಒಯ್ದು, ಈರೇಳು ಲೋಕವನೆ ಪ್ರತಿಪಾಲನೆಯ ಮಾಡಿ, ಅವರೆಲ್ಲ ಉಂಡ ಮೇಲೆ ನೀವು ಉಂಬಿರಿ. ದಿನದಿನಕ್ಕೆ ಇದೇ ಚಿಂತೆ ನಿಮಗೆ. ನಮ್ಮ ಗಣಂಗಳು ನಿಶ್ಚಿಂತೆಯಲ್ಲಿಪ್ಪರು. ಅದು ಹೇಗೆಂದಡೆ: ದಿನದಿನದ ಈ ಕಾಯಕವ ದಿನದಿನಕೆ ಸರಿಮಾಡಿ ಇಂದಿನ ಕಾಸು ಉದಯಕ್ಕೆ ತಂಗಳೆಂಬರು. ನಾಳಿನ ಚಿಂತೆ ನನಗೇಕೆಂಬರು. ನೀವು ನಾಳಿಗೆ ಬೇಕೆಂದು ಇಟ್ಟುಕೊಂಡು, ನಮ್ಮ ಕರಿಕಾಲಚೋಳನ ಮನೆಯಲ್ಲಿ ಅಡಿಗೆಯ ಮಾಡಿಸಿ ಉಂಡು, ಅದು ಸಾಲದೆ ? ನಮ್ಮ ಮಾದಾರ ಚೆನ್ನಯ್ಯನ ಮನೆಯಲ್ಲಿ ಅಂಬಲಿಯನುಂಡಿರಿ, ಆಗ ಈರೇಳು ಲೋಕಕ್ಕೆ ತೃಪ್ತಿಯಾಯಿತ್ತು. ಇಂತಪ್ಪ ನಮ್ಮ ಗಣಂಗಳ ಉದಾರತ್ವ ಹೇಳಲಿಕ್ಕೆ ಅಸಾಧ್ಯವು. ಇದ ನೀವು ಬಲ್ಲಿರಿಯಾಗಿ, ನಮ್ಮ ಗಣಂಗಳ ಹೃದಯದಲ್ಲಿ ಮನೆಯ ಮಾಡಿಕೊಂಡಿಪ್ಪಿರಿ ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಕರ್ತರು ನಿಮ್ಮ ಗಣಂಗಳು ಎನ್ನ ತೊತ್ತುಮಾಡಿ ಸಲಹಿದ ಸುಖವು ಸಾಲೋಕ್ಯ, ಸಾಮಿಪ್ಯ, ಸಾರೂಪ್ಯ, ಸಾಯುಜ್ಯದಂತುಟಲ್ಲ_ ಕೇಳಯ್ಯಾ, ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹಿದ ಸುಖವು. 475
--------------
ಬಸವಣ್ಣ
ಆ ಪೃಥ್ವಿ ಅಪ್ಪು ತೇಜ ವಾಯುವಾಕಾಶವೆಂಬ ಪಂಚಭೂತ ಬ್ರಹ್ಮಾಂಡಕಪಾಲದೊಳು ಚತುರ್ದಶಭುವನಂಗಳು, ಸಪ್ತಸಮುದ್ರಂಗಳು, ಸಪ್ತದ್ವೀಪಂಗಳು, ಸಪ್ತಕುಲಪರ್ವತಂಗಳು, ಸಮಸ್ತ ಗ್ರಹರಾಶಿ ತಾರಾಪಥಂಗಳಿಹ ಕ್ರಮವೆಂತೆಂದಡೆ : ಆ ಭೂತಬ್ರಹ್ಮಾಂಡಕಪಾಲದಲ್ಲಿ ಅತಳಲೋಕವಿಹುದು. ಆ ಅತಳಲೋಕದಿಂದ ಮೇಲೆ ವಿತಳಲೋಕವಿಹುದು. ಆ ವಿತಳಲೋಕದಿಂದ ಮೇಲೆ ಸುತಳಲೋಕವಿಹುದು. ಆ ಸುತಳಲೋಕದಿಂದ ಮೇಲೆ ತಳಾತಳಲೋಕವಿಹುದು. ಆ ತಳಾತಳಲೋಕದಿಂದ ಮೇಲೆ ರಸಾತಳಲೋಕವಿಹುದು. ಆ ರಸಾತಳಲೋಕದಿಂದ ಮೇಲೆ ಮಹಾತಳಲೋಕವಿಹುದು. ಆ ಮಹಾತಳಲೋಕದಿಂದ ಮೇಲೆ ಪಾತಾಳಲೋಕವಿಹುದು. ಆ ಪಾತಾಳಲೋಕದಿಂದ ಮೇಲೆ ಜಲಪ್ರಳಯವಿಹುದು. ಆ ಜಲಪ್ರಳಯದ ಮೇಲೆ ಮಹಾಕಮಠನಿಹುದು. ಆ ಮಹಾಕಮಠನ ಮೇಲೆ ಮಹಾವಾಸುಗಿ ಇಹುದು. ಆ ಮಹಾವಾಸುಗಿಯ ಸುತ್ತುವಳಯಾಕೃತವಾಗಿ ಅಷ್ಟದಿಕ್‍ಮಹಾಗಜಂಗಳಿಹವು. ಆ ಅಷ್ಟದಿಕ್‍ಮಹಾಗಜಂಗಳ ಮೇಲೆ ಭೂಲೋಕವಿಹುದು. ಆ ಭೂಲೋಕದಲ್ಲಿ ಸಪ್ತಸಮುದ್ರಂಗಳು, ಸಪ್ತದ್ವೀಪಂಗಳು, ಸಪ್ತಕುಲಪರ್ವತಂಗಳಿಹವು. ಆ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಸಪ್ತಕುಲಪರ್ವತಂಗಳ ಸುತ್ತುವಳಯಾಕೃತವಾಗಿ ಸಮಸ್ತ ಲೋಕಾಲೋಕ ಪರ್ವತವಿಹುದು. ಆ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಸಪ್ತಕುಲಪರ್ವತಂಗಳ ವಿಸ್ತೀರ್ಣವೆಂತೆಂದಡೆ : ಪಂಚಾಶತಕೋಟಿ ವಿಸ್ತೀರ್ಣದ ಮಧ್ಯಭೂಮಿ. ಆ ಮಧ್ಯಭೂಮಿ ಮಂಡಲವಳಯದಲ್ಲಿ ಮಹಾಮೇರುಪರ್ವತದ ವಿಸ್ತೀರ್ಣವೆಂತೆಂದಡೆ : ಒಂದುಕೋಟಿಯು ಇಪ್ಪತ್ತಾರುಲಕ್ಷದ ಮೇಲೆ ಎಂಬತ್ತೈದುಸಾವಿರ ಯೋಜನಪ್ರಮಾಣು. ಆ ಮೇರುಮಂದಿರದ ಶಿರದ ಮೇಲೆ ಮೂವತ್ತುಮೂರುಕೋಟಿ ದೇವರ್ಕಳು, ನಾಲ್ವತ್ತೆಂಟುಸಾವಿರ ಮುನಿಗಳು, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ನಂದಿವಾಹ ಗಣಂಗಳು, ದ್ವಾದಶಾದಿತ್ಯರು, ನಾರದಮುನಿ ಯೋಗೀಶ್ವರರು, ಅಷ್ಟದಿಕ್ಪಾಲರು, ಏಕಾದಶರುದ್ರರು ಮುಖ್ಯವಾದ ಅಸಂಖ್ಯಾತ ಮಹಾಗಣಂಗಳು ಶಿವಸುಖ ಸಂಗೀತ ವಿನೋದದಿಂದ ರಾಜ್ಯಂಗೆಯ್ಯುತ್ತಿರಲು, ಆ ಮೇರುಮಂದಿರದ ಶಿಖರದ ಕೆಳಗೆ ಜಂಬೂದ್ವೀಪವಿಹುದು. ಆ ಜಂಬೂದ್ವೀಪವು ಒಂದು ಲಕ್ಷದ ಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. ಒಂದುಲಕ್ಷದ ಮೇಲೆ ಇಪ್ಪತ್ತೈದುಸಾವಿರ ಯೋಜನದಗಲವಾಗಿ ಲವಣಸಮುದ್ರವು ಆ ಜಂಬೂದ್ವೀಪಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎರಡು ಲಕ್ಷದ ಮೇಲೆ ಐವತ್ತುಸಾವಿರ ಯೋಜನ ಪ್ರಮಾಣದಲ್ಲಿ ಇಕ್ಷುಸಮುದ್ರವು ಆ ಪ್ಲಕ್ಷದ್ವೀಪಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಮೂರುಲಕ್ಷದ ಮೇಲೆ ಎಪ್ಪತ್ತುಸಾವಿರದಯಿನೂರು ಯೋಜನಪ್ರಮಾಣದಗಲವಾಗಿ ಕುಶದ್ವೀಪವಂ ಆ ಇಕ್ಷುಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ನಾಲ್ಕುಲಕ್ಷದ ಮೇಲೆ ಮೂರುಸಾವಿರ ಯೋಜನಪ್ರಮಾಣದಗಲವಾಗಿ ಸುರೆಯ ಸಮುದ್ರವು ಆ ಕುಶದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಐದುಲಕ್ಷ ಯೋಜನಪ್ರಮಾಣದಗಲವಾಗಿ ಶಾಕದ್ವೀಪವು ಆ ಸುರೆಯ ಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಹದಿನಾಲ್ಕುಲಕ್ಷ ಯೋಜನಪ್ರಮಾಣದಗಲವಾಗಿ ಘೃತಸಮುದ್ರವು ಆ ಶಾಕದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಇಪ್ಪತ್ತುಲಕ್ಷ ಯೋಜನಪ್ರಮಾಣದಗಲವಾಗಿ ಶಾಲ್ಮಲೀದ್ವೀಪ ಆ ಘೃತಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಇಪ್ಪತ್ತು ಲಕ್ಷ ಯೋಜನಪ್ರಮಾಣದಗಲವಾಗಿ ದಧಿಸಮುದ್ರವು ಆ ಶಾಲ್ಮಲೀದ್ವೀಪವಂ ವಳಯಾಕೃತವಾದಿ ಸುತ್ತಿಕೊಂಡಿಹುದು. ನಾಲ್ವತ್ತುಲಕ್ಷ ಯೋಜನಪ್ರಮಾಣದಗಲವಾಗಿ ಪುಷ್ಕರದ್ವೀಪ ಆ ದಧಿಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ನಾಲ್ವತ್ತುಲಕ್ಷ ಯೋಜನಪ್ರಮಾಣದಗಲವಾಗಿ ಕ್ಷೀರಸಮುದ್ರವು ಆ ಪುಷ್ಕರದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎಂಬತ್ತುಲಕ್ಷ ಯೋಜನಪ್ರಮಾಣದಗಲವಾಗಿ ಕ್ರೌಂಚದ್ವೀಪವು ಆ ಕ್ಷೀರಸಮುದ್ರಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎಂಬತ್ತುಲಕ್ಷ ಯೋಜನಪ್ರಮಾಣದಗಲವಾಗಿ ಸ್ವಾದೋದಕಸಮುದ್ರವು ಆ ಕ್ರೌಂಚದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಸಪ್ತದ್ವೀಪಂಗಳ ಸುತ್ತುವಳಯಾಕೃತವಾಗಿ ಲೋಕಾಲೋಕ ಪರ್ವಂತಗಳಿಹವು. ಆ ಲೋಕಾಲೋಕ ಪರ್ವತಂಗಳ ಸುತ್ತುವಳಯಾಕೃತವಾಗಿ ಚಕ್ರವಾಳಗಿರಿ ಇಹುದು. ಆ ಚಕ್ರವಾಳಗಿರಿಗತ್ತತ್ತ ಭೂಮಿ ಪರ್ವತಾಕಾರವಾಗಿಹುದು. ಆ ಭೂಮಿಯಿಂದಂ ಮೇಲೆ ಮೇಘಮಂಡಲಂಗಳಿಹವು. ಆ ಮೇಘಮಂಡಲಂಗಳ ಮೇಲೆ ಭುವರ್ಲೋಕವಿಹುದು. ಆ ಭುವರ್ಲೋಕದಿಂದ ಮೇಲೆ ಸ್ವರ್ಗಲೋಕವಿಹುದು. ಆ ಸ್ವರ್ಗಲೋಕದಿಂದ ಮೇಲೆ ನಕ್ಷತ್ರಾದಿಮಂಡಲವಿಹುದು. ಆ ನಕ್ಷತ್ರಾದಿ ಮಂಡಲಂಗಳಿಂದತ್ತ ಮೇಲೆ ಮಹರ್ಲೋಕವಿಹುದು. ಆ ಮಹರ್ಲೋಕದಿಂದತ್ತ ಮೇಲೆ ಜನರ್ಲೋಕವಿಹುದು. ಆ ಜನರ್ಲೋಕದಿಂದತ್ತ ಮೇಲೆ ತಪರ್ಲೋಕವಿಹುದು. ಆ ತಪರ್ಲೋಕದಿಂದತ್ತ ಮೇಲೆ ಸತ್ಯರ್ಲೋಕವಿಹುದು. ಆ ಸತ್ಯರ್ಲೋಕದಿಂದತ್ತ ಮೇಲೆ ತ್ರಿಲಕ್ಷಕೋಟಿಯೋಜನ ಪರಿಪ್ರಮಾಣದುದ್ದದಲ್ಲಿ ಮಹಾಪ್ರಳಯಜಲವಿಹುದು. ಆ ಮಹಾಪ್ರಳಯಜಲದಿಂದತ್ತ ಮೇಲೆ ಶಿವಾಂಡ ಚಿದ್ಬ್ರಹ್ಮಾಂಡವಿಹುದು. ಇಂಥ ಅನಂತಕೋಟಿ ಚಿದ್ಬ್ರಹ್ಮಾಂಡಗಳು, ಅನಂತಕೋಟಿ ಲೋಕಾಲೋಕಂಗಳೆಲ್ಲ ಒಂದರಲ್ಲೊಂದಡಗಿ ಅಪ್ರಮಾಣ ಕೂಡಲಸಂಗಯ್ಯನು ತನ್ನ ಲೀಲಾವಿನೋದದಿಂದ ನಿಂದರಾಗಿ ನಿಲುವುದು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಯ್ಯಾಎನ್ನ ಗುರು ಎನಗೆ ಉಪದೇಶವ ಮಾಡಿದ ಭೇದವ ಎಲ್ಲ ಗಣಂಗಳು ಕೇಳಿ. ಮಲತ್ರಯಂಗಳ ಹರಿದು, ಕರ್ಮೇಂದ್ರಿಯಂಗಳ ಜ್ಞಾನೇಂದ್ರಿಯ ಮಾಡಿ, ಕಾಯ ಜೀವ ಪ್ರಾಣ ಈ ತ್ರಿವಿಧವರತು ಭೇದವನರುಹಿಸಿದ. ಉರಸ್ಥಲದ ಪರಂಜ್ಯೋತಿಲಿಂಗವ ಎನ್ನ ಕರಸ್ಥಲಕ್ಕೆ ಕೊಟ್ಟರು. ಆ ಗುರು ಕೊಟ್ಟ ಲಿಂಗವೆಂಬ ದರ್ಪಣವ ನೋಡಿ, ಎನ್ನ ಮನೆವೆಂಬ ಸರ್ಪ ಆ ದರ್ಪಣದಲ್ಲಿ ಲೀಯವಾಯಿತ್ತು. ಇದು ಕಾರಣ, ಎನ್ನ ರೂಪೆಲ್ಲ ಉರಿಯುಂಡ ಕರ್ಪುರದಂತಾಯಿತ್ತು, ಆಲಿ ನುಂಗಿದ ನೋಟದಂತಾಯಿತ್ತು. ಪುಷ್ಪ ನುಂಗಿದ ಪರಿಮಳದಂತೆ ಬಯಲು ನುಂಗಿದ ಬ್ರಹ್ಮಾಂಡದಂತೆ, ಅಂಗಲಿಂಗ ಸಂಗಸಂಯೋಗವಾದ ಭೇದ. ಇದ ಹಿಂಗದೆ ಶರಣ ಸಂಗವ ಮಾಡಿದವರಂಘ್ರಿಯಲ್ಲಿ ಐಕ್ಯವಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ, ಇದನು ಕಂಗಳ ಪಟಲ ಹರಿದ ಲಿಂಗೈಕ್ಯರೇ ಬಲ್ಲರು.
--------------
ಹಡಪದ ಅಪ್ಪಣ್ಣ
ಸಕಲ ಗಣಂಗಳು ತಮ್ಮ ವಚನಾನುಭಾವವೆಂಬ ಪರಮಾಮೃತವನು ಎನ್ನ ಕರ್ಣವೆಂಬ ಕುರುಹ ಕಟ್ಟಿ ಎರಕವೆರೆಯಲು, ಅದು ಮನದಲ್ಲಿ ಮೂರ್ತಿಯಾಗಿ ಒಳಗೆ ಪ್ರಾಣಲಿಂಗವಾಯಿತ್ತು ; ಹೊರಗೆ ಇಷ್ಟಲಿಂಗವಾಯಿತ್ತು. ಎನ್ನೊಳಹೊರಗೆ ಭರಿತವಾದ ಅಖಂಡೇಶ್ವರನೆಂಬ ಪರಶಿವನು ನುಡಿಸಿದಂತೆ ನುಡಿದೆನಲ್ಲದೆ ಎನ್ನ ಮನಕ್ಕೆಬಂದಂತೆ ನುಡಿಯಲಿಲ್ಲ ಕೇಳಿರೆ.
--------------
ಷಣ್ಮುಖಸ್ವಾಮಿ
ನಮ್ಮ ಗಣಂಗಳ ಸಹವಾಸದಿಂದೆ ಏನೇನು ಫಲಪದವಿಯಾಯಿತ್ತೆಂದಡೆ, ಅಷ್ಟಾವರಣಂಗಳು ಸಾಧ್ಯವಾದವು. ಸಾಧ್ಯವಾದ ಕಾರಣ, ಶ್ರೀಗುರುವು ಎನ್ನ ಕರಸ್ಥಲಕ್ಕೆ ಲಿಂಗವ ಕೊಟ್ಟ, ಎಂದೆಂದಿಗೂ ಸತಿ-ಪತಿ ಭಾವ ತಪ್ಪಬೇಡವೆಂದು ಗಣಂಗಳ ಸಾಕ್ಷಿಯ ಮಾಡಿ, ನೀನು ಅಂಗವಾಗಿ ಲಿಂಗವೇ ಪ್ರಾಣವಾಗಿರಿಯೆಂದು ಇಬ್ಬರಿಗೂ ಆಜ್ಞೆಯ ಮಾಡಿದ ಕಾರಣ ಎನ್ನಂಗವೇ ನಿನ್ನಂಗ, ಎನ್ನ ಪ್ರಾಣವೇ ನಿನ್ನ ಪ್ರಾಣ. ನಿನ್ನ ಪ್ರಾಣವೇ ಎನ್ನ ಪ್ರಾಣವಾದ ಮೇಲೆ ಎನ್ನ ಮಾನಾಪಮಾನ ನಿಮ್ಮದಯ್ಯಾ, ಎನ್ನ ಹಾನಿ ವೃದ್ಧಿ ನಿಮ್ಮದಯ್ಯಾ. ನೀವು ಈರೇಳು ಲೋಕದ ಒಡೆಯರೆಂಬುದ ನಾನು ಬಲ್ಲೆನಯ್ಯಾ. ಬಲ್ಲೆನಾಗಿ, ಪುರುಷರ ದೊರೆತನ ಹೆಂಡರಿಗಲ್ಲದೆ ಬೇರುಂಟೆ? ಎನ್ನ ಸುಖದುಃಖವೆ ನಿನ್ನದಯ್ಯ, ನಿನ್ನ ಸುಖದುಃಖವೆ ಎನ್ನದಯ್ಯ, ಅದಕ್ಕೆ ಎನ್ನ ತನುಮನಧನವ ಸೂಸಲೀಯದೆ ನಿಮ್ಮೊಡವೆ ನೀವು ಜೋಕೆಯ ಮಾಡಿಕೊಳ್ಳಿರಿ. ಜೋಕೆಯ ಮಾಡದಿದ್ದಡೆ ಗಣಂಗಳಿಗೆ ಹೇಳುವೆ, ಏಕೆಂದರೆ ಗಣಂಗಳು ಸಾಕ್ಷಿಯಾಗಿದ್ದ ಕಾರಣ. ಆಗ ಆ[ಣೆ]ಯ ಮಾತು ಹೇಳಬಹುದೆಯೆಂದಡೆ ಆಗ ಎನಗೆ ಪ್ರತ್ಯುತ್ತರವಿಲ್ಲ ಸ್ವಾಮಿ. ನಿಮ್ಮ ಒಡವೆ ನಿಮಗೆ ಒಪ್ಪಿಸುವೆನೆಂದರುಹಿದನು ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಇನ್ನಷ್ಟು ... -->