ಕೇಳು ಕೇಳಾ, ಎಲೆ ಅಯ್ಯಾ,
ಬಸವಣ್ಣನು ಅನಿಮಿಷಂಗೆ ಲಿಂಗವ ಕೊಟ್ಟ ಕಾರಣ ಮತ್ರ್ಯಕ್ಕೆ
ಬಂದೆನೆಂಬರು.
ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ
ಜೈನ ಚಾರ್ವಾಕ ಕಾಳಾಮುಖ ಎನಿಸುವ ಷಡ್ದರ್ಶನಾಗಳು ಹೆಚ್ಚಿ,
ವಿಭೂತಿ ರುದ್ರಾಕ್ಷಿ ಪಂಚಾಕ್ಷರವನರಿಯದೆ
ನರಕಕ್ಕೆ ಭಾಜನವಾಗಿ ಪೋಪರೆಂದು,
ದೇವರು ನಂದಿಕೇಶ್ವರನ ಮುಖವ ನೋಡಲು,
ಆ ಪ್ರಶ್ನೆಯಿಂದ ಬಂದನಯ್ಯಾ ಬಸವಣ್ಣ ಪರಹಿತಾರ್ಥನಾಗಿ.
ದೇವರು ದೇವಿಯರಿಗೆ ಪ್ರಣವಾರ್ಥವ ಬೋಧಿಸುವಾಗ
ದೇವಿಯರ ಮುಡಿಯಲ್ಲಿ ಹೊನ್ನ ತುಂಬಿಯಾಗಿ
ಷಣ್ಮುಖ ಕೇಳಿದ ಪ್ರಶ್ನೆಯಿಂದ ಬಂದನೆಂಬರಯ್ಯಾ, ಚೆನ್ನಬಸವಣ್ಣನು.
ಸಟೆ ಸಟೆ! ಆ ನುಡಿಯ ಕೇಳಲಾಗದು. ಅದೇನು ಕಾರಣವೆಂದಡೆ:
ಷಡ್ವಿಧಸ್ಥಲಕ್ಕೆ ಸ್ಥಾಪನಾಚಾರ್ಯನಾಗಿ
ಸಕಲ ಪ್ರಮರ್ಥರ್ಗೆ ವೀರಶೈವವ ಪ್ರತಿಷೆ*ಯ ಮಾಡಲೋಸ್ಕರ
ಬಂದನಯ್ಯಾ ಚೆನ್ನಬಸವಣ್ಣನು.
ದೇವರ ಸಭೆಯಲ್ಲಿ ನಿರಂಜನನೆಂಬ ಗಣೇಶ್ವರನು
ಮಾಯಾಕೋಳಾಹಳನೆಂದು ಹೊಗಳಿಸಿಕೊಂಡು ಬರಲಾಗಿ
ಆ ಸಮಯದಲ್ಲಿ ದೇವಿಯರು ದೇವರ
ಮಾಯಾಕೋಳಾಹಳನಾದ ಪರಿಯಾವುದೆಂದು ಬೆಸಗೊಳಲು,
ಆ ಪ್ರಶ್ನೆಯಿಂದ ಪ್ರಭುದೇವರು ಮತ್ರ್ಯಕ್ಕೆ ಬಂದರೆಂಬರಯ್ಯಾ.
ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ:
ಸುಜ್ಞಾನಿ ನಿರಹಂಕಾರರ ಭಕ್ತಿಗೋಸ್ಕರ ಪ್ರತ್ಯಕ್ಷವಾಗಿ
ಬಸವಾದಿ ಪ್ರಮಥರ್ಗೆ ಬೋಧಿಸಿ,
ತನ್ನ ನಿಜಪದವ ತೋರಬಂದರಯ್ಯಾ ಪ್ರಭುದೇವರು.
ದಕ್ಷಸಂಹಾರದಿಂದ ಬರುವಾಗ ಗುಪ್ತಗಣೇಶ್ವರನ ನಿರಿ ಸೋಂಕಲು,
ಆ ಪ್ರಶ್ನೆಯಿಂದ ಬಂದನೆಂಬರಯ್ಯಾ ಮಡಿವಾಳನು.
ಸಟೆ ಸಟೆ! ಆ ನುಡಿಯ ಕೇಳಲಾಗದು,
ಅದೇನು ಕಾರಣವೆಂದಡೆ:
ಬಿಜ್ಜಳ ಪರವಾದಿಗಳ ಸಂಹರಿಸಲೋಸ್ಕರ
ಬಸವಣ್ಣನ ನಿಮಿತ್ತವಾಗಿ ಬಂದನಯ್ಯಾ ಮಡಿವಾಳ ಮಾಚಯ್ಯಗಳು.
ಇಂತಿವರು ಮುಖ್ಯವಾದ ಏಳುನೂರು ಎಪ್ಪತ್ತು ಅಮರಗಣಂಗಳಿಗೆ
ವಾಸನಾಧರ್ಮವೆಂದಡೆ ಅಘೋರ ನರಕ ತಪ್ಪದಯ್ಯಾ.
ಇವರು ಮುಖ್ಯವಾದ ಪ್ರಮಥ ಗಣಂಗಳಿಗೆ ಶಾಪವೆಂದು ಕಲ್ಪಸಿದಡೆ,
ನಾಯಕ ನರಕ ತಪ್ಪದು, ಎಲೆ ಶಿವನೆ
ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮಾಣೆ