ಅಥವಾ

ಒಟ್ಟು 50 ಕಡೆಗಳಲ್ಲಿ , 19 ವಚನಕಾರರು , 34 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಿಳಿಯ ಗರ್ಭದಲ್ಲಿ ಮಾರ್ಜಾಲ ಹುಟ್ಟಿ ಹಾವಿನ ತಲೆಯ ಮುಟ್ಟಲು ಹೆಡೆಯನೆಗೆದು ಮಾಣಿಕವ ಕಚ್ಚಿ ಎರಡುದಾರಿಯ ಕಟ್ಟಿ ಆಡಲು ಪುರದ ಜನರು ಭೀತಿಗೊಂಡು ನೋಡುವ ಸಮಯದಲ್ಲಿ ಮಾಣಿಕ ಹಾವ ನುಂಗಿ ಜನರ ಹೊಯ್ದು ಒಯ್ಯಲು, ಗಿಳಿ ಸತ್ತು ಗುರುನಿರಂಜನ ಚನ್ನಬಸವಲಿಂಗ ತಾನೆಯಾಯಿತು.
--------------
ದೇಶಿಕೇಂದ್ರ ಸಂಗನಬಸವಯ್ಯ
ಪ್ರಥಮದೀಕ್ಷೆ, ಪರಬ್ರಹ್ಮದೀಕ್ಷೆ, ಅಂಗಲಿಂಗದೀಕ್ಷೆ, ಪುನರ್ದೀಕ್ಷೆ: ಇಂತೀ ದೀಕ್ಷೆಗಳಲ್ಲಿ ತಿಳಿಯಬೇಕು. ಪ್ರಥಮದೀಕ್ಷೆಯ ಮಾಡುವಲ್ಲಿ ಬ್ರಹ್ಮನ ಪಾಶವ ಹರಿಯಬೇಕು. ಪರಬ್ರಹ್ಮದೀಕ್ಷೆಯ ಮಾಡುವಲ್ಲಿ ವಿಷ್ಣುವಿನ ಪಾಶವ ಹರಿಯಬೇಕು; ಅಂಗಲಿಂಗದೀಕ್ಷೆಯ ಮಾಡುವಲ್ಲಿ ರುದ್ರನ ಪಾಶವ ಹರಿಯಬೇಕು; ಪುನರ್ದೀಕ್ಷೆಯ ಮಾಡುವಲ್ಲಿ ಆ ಘಟದಲ್ಲಿದ್ದ ಆತ್ಮನ ಕಳೆದು ಪುನರಪಿಯ ಮಾಡಿ ಪುನರ್ದೀಕ್ಷೆಯ ಮಾಡಬೇಕು. ಅದೆಂತೆಂದಡೆ, ಅದಕ್ಕೆ ದೃಷ್ಟ: ದ್ವಿಜರ ಗರ್ಭದಲ್ಲಿ ಜನಿಸಿದ ಪಿಂಡಕ್ಕೆ ಮಂತ್ರೋಚ್ಚರಣೆ ಮುಂಜಿಯಿಂದಲ್ಲದೆ ಭೂಸುರಕುಲವಿಲ್ಲ. ಇದನರಿತು ವಿಚಾರವ ಮಾಡಿ ಕೇಳಿ ಕಂಡು ಉಪದೇಶ ಗುರುವಾಗಬೇಕು. ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಅಯ್ಯಾ, ತನ್ನ ತಾನರಿಯದೆ, ತನ್ನ ಇಷ್ಟಲಿಂಗದ ಹೊಲಬು ತಿಳಿಯದೆ, ಕಾಮವ ತೊರೆಯದೆ, ಹೇಮವ ಜರೆಯದೆ, ನಾವು ಹರ ಗುರು ಚರ ಷಟ್‍ಸ್ಥಲದ ವಿರಕ್ತರೆಂದು ಚೆನ್ನಾಗಿ ನುಡಿದುಕೊಂಡು, ಕಾವಿ ಕಾಷಾಯಾಂಬರವ ಹೊದ್ದು, ಶಂಖ ಗಿಳಿಲು ದಂಡಾಗ್ರವ ಹೊತ್ತು, ಕೂಳಿಗಾಗಿ ನಾನಾ ದೇಶವ ತಿರುಗಿ, ಕಾಂಚನಕ್ಕೆ ಕೈಯೊಡ್ಡುವ ಪಂಚಮಹಾಪಾತಕರನು ಕಾಗೆಯ ಗರ್ಭದಲ್ಲಿ ಹುಟ್ಟಿಸಿ ಕಾಕಾ ಎಂದು ಕೂಗಿಸುತಿರ್ಪ[ನು] ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಪೃಥ್ವಿ ಅಪ್ಪುವಿನ ಸಂಗದಲ್ಲಿ, ಅನಲ ಅನಿಲವೆಂಬ ಪುತ್ಥಳಿ ಹುಟ್ಟಿತ್ತು. ಆ ಪುತ್ಥಳಿಯ ಗರ್ಭದಲ್ಲಿ, ಆಕಾಶ ಮಹದಾಕಾಶವೆಂಬ ಕುರುಹುದೋರಿತ್ತು. ಅದು ನಾದಪೀಠ ಬಿಂದುಲಿಂಗ ಕಳೆ ವಸ್ತುವಾಗಿ, ಹೊಳಹುದೋರುತ್ತದೆ. ಆ ಹೊಳಹು ಆರುಮೂರಾದ ಭೇದವ ತಿಳಿದು, ಮೂರು ಏಕವಾದಲ್ಲಿ, ಐಕ್ಯವನರಿತಲ್ಲಿ, ನಾದಬಿಂದುಕಳೆಭೇದವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಶಿವನು ಗುರುಭಕ್ತರ ಮನವ ನೋಡುವುದಕ್ಕೆ ಕಂಟಕವನೊಡ್ಡುವನು, ಅಪರಾಧಗೊಡುವನು, ಭಾಗ್ಯವೆಲ್ಲ ಬಯಲುಮಾಡುವನು. ಬಂಧುಗಳೆಲ್ಲರ ವೈರಿಗಳ ಮಾಡುವನು, ದೇಶತ್ಯಾಗವÀ ಮಾಡಿಸುವನು, ಭಯಬ್ಥೀತಿಯನೊಡ್ಡುವನು, ಮನಕ್ಕೆ ಅಧೈರ್ಯವÀ ತೋರುವನು. ಸಾಕ್ಷಿ: 'ಪುಣ್ಯಮೇಕೋ ಮಹಾಬಂಧುಃ ಪಾಪಮೇಕೋ ಮಹಾರಿಪುಃ | ಅಸಂತೋಷೋ ಮಹಾವ್ಯಾದ್ಥಿಃ ಧೈರ್ಯಂ ಸರ್ವತ್ರಸಾಧನಂ || '' ಎಂದುದಾಗಿ, ''ಅಪರಾಧ್ಯೋರ್ಥನಾಶಂ ಚ ವಿರೋಧೋ ಬಾಂಧವೇಷು ಚ | ದೇಶತ್ಯಾಗೋ ಮಹಾವ್ಯಾದ್ಥಿಃ ಮದ್ಭಕ್ತಸ್ಯ ಸುಲಕ್ಷಣಂ || '' ಇಂತೀ ದುಃಖವೆಲ್ಲವು ಶಿವನ ಅನುಜ್ಞೆಯಿಂದ ಬಂದವೆಂದು ತಿಳಿದು, ಗುರುಲಿಂಗಜಂಗಮಕ್ಕೆ ಬಲಗೊಂಡು ನೀವೇ ಗತಿಯೆಂದು ನೀವೇ ಮತಿಯೆಂದು, ನೀವು ಹಾಲಲದ್ದಿರಿ ನೀರಲದ್ದಿರಿ ಎಂಬ ಭಾವದಲ್ಲಿದ್ದಡೆ ಅವರ ಶಿವನು ತನ್ನ ಗರ್ಭದಲ್ಲಿ ಇಂಬಿಟ್ಟುಕೊಂಬನು. ನಮ್ಮ ಶಾಂತಕೂಡಲಸಂಗಮದೇವ ತನ್ನ ನಂಬಿದವರ ಹೃದಯದಲ್ಲಿಪ್ಪನು.
--------------
ಗಣದಾಸಿ ವೀರಣ್ಣ
ಗರ್ಭದಲ್ಲಿ ಶಿಶು ಬಲಿದು, ಹಸಿದೆನೆಂದು ಅತ್ತುದುಂಟೆ ಅಯ್ಯಾ ? ಬೆಸನಾಗಿ ಪ್ರತಿರೂಪಿಂಗೆ ಕುಚಕ್ಷೀರವಲ್ಲದೆ ಘಟದಿಂದಡಗಿದಲ್ಲಿ, ಸುಖ ತಾಯ ಇರವಿನಲ್ಲಿ ನಿಂದಂತೆ, ಉಭಯಭೇದ, ಇಷ್ಟಲಿಂಗಸಂಬಂಧಯೋಗ. ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ ಇದಿರಿಟ್ಟ ಭೇದ.
--------------
ಮೆರೆಮಿಂಡಯ್ಯ
ಆದಿ ಅನಾದಿಗಳೇನೂ ಇಲ್ಲದ ನಿರುಪಮಲಿಂಗದಲ್ಲಿ ಅನುಪಮಭಕ್ತಿ ಜನಿಸಿತ್ತು ನೋಡ. ಆ ಭಕ್ತಿಯ ಗರ್ಭದಲ್ಲಿ ಸತ್ಯಶರಣನುದಯಿಸಿದನು. ಇದು ಕಾರಣ, ಅನಾದಿ ಕೇವಲ ಮುಕ್ತನೇ ಶರಣನೆಂಬ ವಾಕ್ಯ ಸತ್ಯ ಕಂಡಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹಾಲಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗದ ಪಾದತೀರ್ಥ ಪ್ರಸಾದವ ಕೊಂಡು ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ? ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ. ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ 'ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ ೀ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್' ||ú ಎಂದುದಾಗಿ, ಇದನರಿದು ಗುರು ಕೊಟ್ಟ ಲಿಂಗದಲ್ಲಿಯೆ ಎಲ್ಲಾ ತೀರ್ಥಂಗಳೂ ಎಲ್ಲಾ ಕ್ಷೇತ್ರಂಗಳೂ ಇದ್ದಾವೆಂದು ಭಾವಿಸಿ ಮುಕ್ತರಪ್ಪುದಯ್ಯಾ. ಇಂತಲ್ಲದೆ ಗುರು ಕೊಟ್ಟ ಲಿಂಗವ ಕಿರಿದುಮಾಡಿ, ತೀರ್ಥಲಿಂಗವ ಹಿರಿದುಮಾಡಿ ಹೋದಾತಂಗೆ ಅಘೋರ ನರಕ ತಪ್ಪದು ಕಾಣಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಕತ್ತಲಿಪುರದಲ್ಲಿ ಎತ್ತೆಮ್ಮೆ ಮೈಥುನ ಮಾಡುವದ ಕಂಡೆ. ಆ ಎಮ್ಮೆಯ ಗರ್ಭದಲ್ಲಿ ಎಂಬತ್ತುನಾಲ್ಕುಲಕ್ಷ ಎತ್ತು ಪುಟ್ಟುವದ ಕಂಡೆ. ಹಾಳೂರ ಕೋಳಿ ಕೂಗಲು ಕತ್ತಲಿಪುರÀ ಬೆಳಕುದೋರಿತ್ತ ಕಂಡೆ. ಆ ಬೆಳಗಿನೊಳಗೆ ಎತ್ತೆಮ್ಮಿ ಸತ್ತು ಎಂಬತ್ತುನಾಲ್ಕುಲಕ್ಷ ಎತ್ತೆತ್ತ ಹೋದವೆಂದರಿಯೆ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನು ಆದಿಮೂಲ ಅನಾದಿಮೂಲಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತೀತ ಮೂಲಸ್ವಾಮಿಗತ್ತತ್ತವಾಗಿಹ ಆ ಅಖಂಡ ಮೂಲಸ್ವಾಮಿಯ ರೂಪು, ಲಾವಣ್ಯ, ಸೌಂದರ್ಯ, ಅಂಗ-ಪ್ರತ್ಯಂಗಸ್ವರೂಪ ಸ್ವಭಾವಗಳೆಂತೆಂದಡೆ : ಸಹಜ ನಿರಾಲಂಬವಾಗಿಹ, ಮಹಾಘನಕ್ಕೆ ಘನವಹ, ಮಹಾಘನವಾಗಿಹ ಪ್ರಣವವೆ ಅಖಂಡಮೂಲಸ್ವಾಮಿಯ ಶಿರಸ್ಸು ನೋಡಾ. ದಿವ್ಯಾನಂದಪ್ರಣವ ದಿವ್ಯಜ್ಞಾನ ಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಚಕ್ಷು. ನಿರಾಕಾರಪ್ರಣವ, ನಿರಾಳಪ್ರಣವವೆ ಆ ಅಖಂಡ ಮೂಲಸ್ವಾಮಿಯ ಪುರ್ಬು. ಅಚಲಾತೀತ ಪ್ರಣವವೆ ಆ ಅಖಂಡ ಮೂಲಸ್ವಾಮಿಯ ಹಣೆ ನೋಡಾ. ಸಹಜ ನಿರಾಲಂಬಪ್ರಣವವೆ ಆ ಅಖಂಡ ಮೂಲಸ್ವಾಮಿಯ ನಾಸಿಕ. ನಿರಾಲಂಬಾತೀತ ಪ್ರಣವವೆ ಆ ಅಖಂಡ ಮೂಲಸ್ವಾಮಿಯ ಉಶ್ವಾಸ-ನಿಶ್ವಾಸಂಗಳು ನೋಡಾ. ನಿರಾಮಯಪ್ರಣವ ನಿರಾಮಯಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಕರ್ಣ. ನಿರ್ವಯಲಪ್ರಣವ ನಿರ್ವಯಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗಲ್ಲ ನೋಡಾ. ಅಮಲಪ್ರಣವ ಅಮಲಾನಂದಪ್ರಣವ ಅಮಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗಡ್ಡ ಮೀಸೆ ಕೋರೆದಾಡೆ ನೋಡಾ. ನಾದ ಬಿಂದು ಕಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ತಾಳೋಷ*ಸಂಪುಟ ನೋಡಾ. ಸಹಜಪ್ರಣವ, ಸಹಜಾನಂದಪ್ರಣವ, ಸಹಜಜ್ಯೋತಿಪ್ರಣವ, ಅನಂತಪ್ರಣವ, ಆನಂದಪ್ರಣವ, ಆನಂದಜ್ಯೋತಿಪ್ರಣವ, ಅಖಂಡಪ್ರಣವ, ಅಖಂಡ ಜ್ಯೋತಿಪ್ರಣವ, ಅಖಂಡಾನಂದ ಮಹಾಜ್ಯೋತಿಪ್ರಣವ, ಚಿತ್ಪ್ರಣವ, ಚಿದಾನಂದಜ್ಯೋತಿಪ್ರಣವ, ಚಿದ್ವ್ಯೋಮಪ್ರಣವ, ನಿತ್ಯನಿಜಾನಂದಪ್ರಣವ, ಸಚ್ಚಿದಾನಂದಪ್ರಣವ, ನಿತ್ಯನಿರಾಕಾರಪ್ರಣವ, ಸಕಲ ನಿಃಕಲಾತೀತಪ್ರಣವವೆಂಬ ಷೋಡಶಪ್ರಣವಂಗಳೆ ಆ ಅಖಂಡ ಮಹಾಮೂಲಸ್ವಾಮಿಯ ಷೋಡಶದಂತಂಗಳು ನೋಡಾ. ಆ ಒಂದೊಂದು ದಂತಂಗಳ ಕಾಂತಿಯೆ ಅನಂತಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ಕುಳವಿಲ್ಲದ ನಿರಾಕುಳಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಕೊರಳು. ಅಪ್ರಮಾಣ ಅಗೋಚರಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಭುಜಂಗಳು ನೋಡಾ. ಪರಮಪ್ರಣವ, ಪರಮಾನಂದಪ್ರಣವ, ಶಿವಪ್ರಣವ, ಶಿವಜ್ಯೋತಿಪ್ರಣವ,ಅಚಲಪ್ರಣವ, ಅಚಲಾನಂದಪ್ರಣವಂಗಳೆ ಆ ಅಖಂಡ ಮಹಾಮೂಲಸ್ವಾಮಿಯ ಹಸ್ತಾಂಗುಲಿ ನಖಂಗಳು ನೋಡಾ. ಪರಬ್ರಹ್ಮಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಎದೆ. ನಿರಂಜನ ಜ್ಯೋತಿಪ್ರಣವ ನಿರಂಜನಾನಂದವೆಂಬಪ್ರಣವವೆ ಆ ಅಖಂಡ ಮೂಲಸ್ವಾಮಿಯ ಸಣ್ಣ ಕುಚಗಳು ನೋಡಾ. ನಿರುಪಮಪ್ರಣವ, ನಿರುಪಮಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ದಕ್ಷಿಣ ವಾಮ ಪಾಶ್ರ್ವಂಗಳು. ಅನಿರ್ವಾಚ್ಯಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಬೆನ್ನು. ಮಹದಾನಂದಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಬೆನ್ನಿನೆಲುವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾರಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗರ್ಭ ನೋಡಾ. ಆ ಗರ್ಭ ಅನಂತಕೋಟಿ ಮಹಾಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಪ್ರಣವಂಗಳು, ಅನೇಕಕೋಟಿ ತತ್ವಂಗಳು, ಅನೇಕಕೋಟಿ ಅಕ್ಷರಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿಪತಿಗಳು, ಅನೇಕಕೋಟಿ ಅನಾದಿಪಶುಗಳು, ಅನೇಕಕೋಟಿ ಅನಾದಿಪಾಶಂಗಳೆಂಬ ಅನಾದಿಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಆದಿಪತಿಗಳು, ಅನೇಕಕೋಟಿ ಆದಿಪಶುಗಳು, ಅನೇಕಕೋಟಿ ಆದಿಪಾಶಂಗಳೆಂಬ ಆದಿಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಪತಿಗಳು, ಅನೇಕಕೋಟಿ ಪಶುಗಳು, ಅನೇಕಕೋಟಿ ಪಾಶಂಗಳೆಂಬ ಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿ ತತ್‍ಪದ, ಅನೇಕಕೋಟಿ ಅನಾದಿ ತ್ವಂಪದ, ಅನೇಕಕೋಟಿ ಅನಾದಿ ಅಸಿಪದಂಗಳೆಂಬ ಅನಾದಿ ವೇದಾಂತಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಆದಿ ತತ್‍ಪದ, ಅನೇಕಕೋಟಿ ಆದಿ ತ್ವಂಪದ, ಅನೇಕಕೋಟಿ ಆದಿ ಅಸಿಪದಂಗಳೆಂಬ ಆದಿ ವೇದಾಂತಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ತ್ವಂಪದಂಗಳು, ಅನೇಕಕೋಟಿ ತತ್ಪದಂಗಳು, ಅನೇಕಕೋಟಿ ಅಸಿಪದಂಗಳೆಂಬ ವೇದಾಂತ ಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿ ಸದಾಶಿವರು, ಅನೇಕಕೋಟಿ ಅನಾದಿ ಈಶ್ವರರು, ಅನೇಕಕೋಟಿ ಅನಾದಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿಸದಾಶಿವರು, ಅನೇಕಕೋಟಿ ಅನಾದಿ ಈಶ್ವರರು, ಅನೇಕಕೋಟಿ ಅನಾದಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿ ಈಶ್ವರರು, ಅನೇಕಕೋಟಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಆದಿಬ್ರಹ್ಮರು, ಅನೇಕಕೋಟಿ ನಾರಾಯಣರು, ಅನೇಕಕೋಟಿ ಆದಿನಾರಾಯಣರು, ಅನೇಕಕೋಟಿ ರುದ್ರರು, ಅನೇಕಕೋಟಿ ಆದಿರುದ್ರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಋಷಿಗಳು, ಅನೇಕಕೋಟಿ ಆದಿಋಷಿಗಳು, ಅನೇಕಕೋಟಿ ಭಾನು, ಅನೇಕಕೋಟಿ ಆದಿಭಾನು, ಅನೇಕಕೋಟಿ ಚಂದ್ರರು, ಅನೇಕಕೋಟಿ ಆದಿಚಂದ್ರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ಆದಿಮಹೇಂದ್ರರು, ಅನೇಕಕೋಟಿ ದೇವರ್ಕಳು, ಅನೇಕಕೋಟಿ ಆದಿದೇವರ್ಕಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮಾಂಡಂಗಳು, ಅನೇಕಕೋಟಿ ಮಹಾಬ್ರಹ್ಮಾಂಡಂಗಳು, ಅನೇಕಕೋಟಿ ಆದಿಮಹಾಬ್ರಹ್ಮಾಂಡಂಗಳು ಅಡಗಿಹವು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ನಡುವೇ ವ್ಯೋಮಾತೀತಪ್ರಣವವು. ಆ ಅಖಂಡ ಮಹಾಮೂಲಸ್ವಾಮಿಯ ಕಟಿಸ್ಥಾನವೇ ಚಿತ್ಕಲಾತೀತಪ್ರಣವ. ಆ ಅಖಂಡ ಮಹಾಮೂಲಸ್ವಾಮಿಯ ಪಚ್ಚಳವೇ ಅನಾದಿಪ್ರಣವ ಆದಿಪ್ರಣವ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಉಪಸ್ಥವೇ ಅನೇಕಕೋಟಿ ಬ್ರಹ್ಮ-ವಿಷ್ಣು-ರುದ್ರ-ಈಶ್ವರ-ಸದಾಶಿವ ಮೊದಲಾದ ಅನೇಕಕೋಟಿ ದೇವರ್ಕಳಿಗೂ ಜನನಸ್ಥಲವಾಗಿಹ ನಿರ್ವಾಣಪ್ರಣವ ನೋಡಾ. ಕಲಾನಂದಪ್ರಣವ ಬ್ರಹ್ಮಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಒಳದೊಡೆ ನೋಡಾ. ಚಿಜ್ಜ್ಯೋತಿಪ್ರಣವ, ಪರಂಜ್ಯೋತಿಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಒಳಪಾದ ಕಂಭಂಗಳು ನೋಡಾ. ನಿಶ್ಶಬ್ದಪ್ರಣವ, ನಿಶ್ಶಬ್ದಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಹರಡು ನೋಡಾ. ಓಂಕಾರಪ್ರಣವ ಮಹದೋಂಕಾರಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಪಾದಂಗಳು ನೋಡಾ. ಆ ಓಂಕಾರ ಪ್ರಣವದ ತಾರಕಸ್ವರೂಪ ದಂಡಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪವೆಂಬ ಪ್ರಣವದತ್ತತ್ತ ಸ್ಥಾನಂಗಳೇ ಆ ಅಖಂಡ ಮಹಾಮೂಲಸ್ವಾಮಿಯ ಪದಾಂಗುಲಿಗಳು ನೋಡಾ. ಆ ಓಂಕಾರಪ್ರಣವದ ಮಹದೋಂಕಾರಪ್ರಣವದ ಮಹಾಪ್ರಕಾಶವೇ ಆ ಅಖಂಡ ಮಹಾಮೂಲಸ್ವಾಮಿಯ ಪಾದಾಂಗುಷಾ*ಂಗುಲಿಗಳು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಸರವೇ ಪರಾತೀತಪ್ರಣವ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಮಾತೇ ಮಹಾಜ್ಯೋತಿ ಪ್ರಣವಕತ್ತತ್ತವಾಗಿಹ ಅತಿಮಹಾಜ್ಯೋತಿಪ್ರಣವ ನೋಡಾ. ಶೂನ್ಯ-ನಿಃಶೂನ್ಯ ಆ ಮಹಾಶೂನ್ಯಕತ್ತತ್ತವಾದ ಮಹದಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ವಪೆ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯಲ್ಲಿ ಅನಂತಕೋಟಿ ನಿರಾಳಸ್ವಯಂಭುಲಿಂಗ ಅಡಗಿಹವಾಗಿ ಆ ನಿರಾಳಸ್ವಯಂಭುಲಿಂಗಂಗಳೇ ಸ್ಥಾನದಲ್ಲಿ ಧರಿಸಿಹ ಭೂಷಣಂಗಳು ನೋಡಾ. ಜ್ಞಾನಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ತುರುಬು ನೋಡಾ. ಆನಂತಕೋಟಿ ಪ್ರಣವಂಗಳನೊಳಕೊಂಡಿಹ ಮಹಾಭೂತಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಶೃಂಗಾರ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸಕಲ ಲೋಕಾದಿಲೋಕಂಗಳು ಉದಯ, ಮಧ್ಯಾಹ್ನ, ಸಾಯಂಕಾಲ ಪರಿಯಂತರವು ಒಡಲೋಪಾಧಿಯ ಚಿಂತೆಯಿಂದ ತಾಪತ್ರಯಾಗ್ನಿಯಲ್ಲಿ ಬೇಯುತ್ತಿರ್ಪರು ನೋಡಾ. ಅದೆಂತೆಂದೊಡೆ: ಉದಯಕಾಲಕ್ಕೆ ಹೋರಾಟದ ಚಿಂತೆ, ಮಧ್ಯಾಹ್ನಕಾಲಕ್ಕೆ ಅಶನದ ಚಿಂತೆ, ಸಾಯಂಕಾಲಕ್ಕೆ ವ್ಯಸನದ ಚಿಂತೆ, ಇಂತೀ ತ್ರಿವಿಧ ವ್ಯಸನದಲ್ಲಿ ಮನಮಗ್ನವಾದ ಪ್ರಾಣಿಗಳಿಗೆ ಶಿವಜ್ಞಾನವೆಲ್ಲಿಯದಯ್ಯಾ? ಇಂದಿನ ಚಿಂತೆಯ ಮಾಡುವರೆಲ್ಲ ಹಂದಿಗಳು. ನಾಳಿನ ಚಿಂತೆಯ ಮಾಡುವರೆಲ್ಲ ನಾಯಿಗಳು. ಅದೆಂತೆಂದೊಡೆ: ನೀ ಹುಟ್ಟದ ಮುನ್ನವೆ ತಾಯಿಗರ್ಭದಲ್ಲಿ ನವಮಾಸ ಪರಿಯಂತರವು ನಿನಗೆ ಆಹಾರವ ಕೊಟ್ಟವರಾರು ಹೇಳಾ ಮರುಳೆ? ಅಖಂಡತಂಡ ಶಿಲೆಯೊಳಗಿನ ಮಂಡೂಕಕ್ಕೆ ಆಹಾರವ ಕೊಟ್ಟು ಸಲಹಿದವರಾರು ಹೇಳಾ ಮರುಳೆ? ಕಟ್ಟಿಗಿಯೊಳಗಿನ ಭೃಂಗಕ್ಕೆ ಮಲೆಗಳ ಕೊಟ್ಟು ಸಲಹಿದವರಾರು ಹೇಳಾ ಮರುಳೆ? ಇರುವೆ ಮೊದಲು ಆನೆ ಕಡೆ ಎಂಬತ್ತು ನಾಲ್ಕುಲಕ್ಷ ಜೀವರಾಶಿಯ ಗರ್ಭದಲ್ಲಿ ಹುಟ್ಟಿ ಹುಟ್ಟಿ ಬರುವಲ್ಲಿ ನಿನಗೆ ಆಹಾರವ ಕೊಟ್ಟು ರಕ್ಷಣವ ಮಾಡಿದವರಾರು ಹೇಳಾ ಮರುಳೆ? ಇಂತೀ ಸರ್ವಲೋಕಾದಿಲೋಕಂಗಳಿಗೆ ಶಿವನೇ ಕರ್ತನೆಂದು ತಿಳಿದು ನೋಡಾ ಮರುಳೆ! ಇಂತಪ್ಪ ಯುಕ್ತಿವಿಚಾರದ ಸುಜ್ಞಾನವಿಲ್ಲದೆ ಬರಿಯ ಒಡಲ ಚಿಂತೆಯಲ್ಲಿ ಹೊತ್ತುಗಳೆದು ಸತ್ತು ಹೋಗುವ ಹೇಸಿ ಮೂಳರ ಕಂಡು ನಾಚಿದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ||4
--------------
ಕಾಡಸಿದ್ಧೇಶ್ವರ
ಇಚ್ಛಾಶಕ್ತಿ ತನ್ನ ಗರ್ಭದಲ್ಲಿ ಈರೇಳುಲೋಕವ ಹೆತ್ತಳು ನೋಡಾ. ಆ ಲೋಕಾಧಿಲೋಕಂಗಳೊಳಗೆ ತಾನೇಕಾಕಿಯಾಗಿ ಆ ಲೋಕದ ಉತ್ಪತ್ತಿ ಸ್ಥಿತಿ ಪ್ರಳಯಕ್ಕೊಳಗಾಗದೆ ನಿತ್ಯಳಾಗಿಪ್ಪಳು ನೋಡಾ. ಆ ಇಚ್ಛಾಶಕ್ತಿ ನಿಶ್ಚಿಂತನ ನೆರೆದು ನಿರಾಳವಾದುದು ತಾನೆಂದು ಕಂಡಾತನ[ನು] ಸರ್ವಜ್ಞ ಶರಣೆನೆಂಬೆನು. ಆತನ ಅಲ್ಲಮಪ್ರಭುವೆಂಬೆನು. ಆ ಪರಮ ನಿರಂಜನಪ್ರಭುವಿಗೆ ನಮೋ ನಮೋಯೆಂದು ಬದುಕಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅವಸ್ಥಾತ್ರಯಮಂ ಬಿಟ್ಟು ಇಷ್ಟಲಿಂಗದ ಗರ್ಭದಲ್ಲಿ ಕಾಯವ ನಿಕ್ಷೇಪವಂ ಮಾಡಿದ ಬಳಿಕ ಕಾಲನ ಭಯವಿಲ್ಲ. ನೇತ್ರದಲ್ಲಿರ್ದ ಪ್ರಾಣಲಿಂಗದ ಮೇಲೆ ಮನವ ನಿಲಿಸಿದ ಬಳಿಕ ಕಾಮನ ಭಯವಿಲ್ಲ. ಏಕಾಂತ ಸ್ಥಾನವಾಗಿ, ಅಂತರಂಗದ ಭಾವ ಜ್ಯೋತಿರ್ಲಿಂಗದಲ್ಲಿ ಅರಿವು ಸಂಧಾನದಿಂ ಸಮರಸವಾಗಲು, ಕರ್ಮದ ಭಯವಿಲ್ಲ. ಈ ತ್ರಿಲಿಂಗ ಸಂಬಂಧದಿಂದ ಕಾಲಕಾಮಕರ್ಮವನೊತ್ತಿ ಮೆಟ್ಟಿ ನಿಲ್ಲದೆ, ವಿಷಯಸುಖಕ್ಕೆ ಮೆಚ್ಚಿ ಆ ಮೂವರ ಕಾಲ ಕೆಳಗೆ ಬಿದ್ದು, ಮಹಾದುಃಖಕ್ಕೊಳಗಾದರು, ನರರು. ಈ ವಿಷಯಗಾಳಿ ಸೋಂಕಲು ಹರಿ ಹತ್ತು ಭವವೆತ್ತಿದ. ಅಜ 21 ಭವವೆತ್ತಿ ಶಿರ ಕಳಕೊಂಡ. ಇಂದ್ರನ ಮೈ ಕೆಟ್ಟಿತ್ತು, ಚಂದ್ರ ಕ್ಷಯ ರೋಗಿಯಾದ. ದಿವಸೇಂದ್ರ ಕಿರಣ ನಷ್ಟವಾದ. ಮುನೀಂದ್ರರ್ನಷ್ಟವಾಗಿ ಮಡಿದರು. ಮನು ಮಾಂಧಾತರು ಮಂದಮತಿಗಳಾದರು. ದೇವ ದಾನವ ಮಾನವರು ಮಡಿದರು. ಇದ ನೋಡಿ ನಮ್ಮ ಶರಣರು, ವಿಷಯಗಾಳಿ ತಮ್ಮ ಸೋಕೀತೆಂದು ಶಾಂಭವಪುರದಲ್ಲಿಯೆ ನಿಂದು, ನಿರ್ವಿಷಯಾಸ್ತ್ರದಲ್ಲಿ ವಿಷಯಗಾಳಿಯ ಛೇದಿಸಿ ಜಯಿಸಿ ಅಕ್ಷಯ ಸುಖಿಗಳಾದರು ನೋಡಾ ಗುಹೇಶ್ವರಲಿಂಗದಲ್ಲಿ.
--------------
ಅಲ್ಲಮಪ್ರಭುದೇವರು
ಆದಿ, ಅನಾದಿ, ಅನಾಗತ, ಅನಂತ, ಅದ್ಭುತ, ತಮಂಧ, ತಾರಜ, ತಂಡಜ, ಬಿಂದುಜ, ಭಿನ್ನಾಯುಕ್ತ, ಅವ್ಯಕ್ತ, ಆಮದಾಯುಕ್ತ, ಮಣಿರಣ, ಮಾನ್ಯರಣ, ವಿಶ್ವರಣ, ವಿಶ್ವವಸು, ಅಲಂಕೃತ, ಕೃತಯುಗ, ತ್ರೇತಾಯುಗ, ದ್ವಾಪರ[ಯುಗ], ಕಲಿಯುಗ- ಇಂತೀ ಇಪ್ಪತ್ತೊಂದು ಯುಗಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಪ್ರಥಮ ಯುಗದಲ್ಲಿ ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶಂಗಳಿಲ್ಲದಂದು ಆರೂ ಆರೂ ಇಲ್ಲದಂದು, ನಾಮವಿಲ್ಲದಂದು, ಅಂದು ನಿಃಶೂನ್ಯವಾಗಿದ್ದ ಕಾಣ ನಮ್ಮ ಬಸವಣ್ಣ. ಅಂದು ನಿಮ್ಮ ನಾಭಿಕಮಲದಲ್ಲಿ ಜಲಪ್ರಳಯ ಪುಟ್ಟಿತ್ತು. ಆ ಜಲಪ್ರಳಯದಲ್ಲಿ ಒಂದುಗುಳ್ಳೆ ಲಿಂಗಾಕಾರವಾಗಿ ಪುಟ್ಟಿತ್ತು. ಆ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣನು. ಇಪ್ಪತ್ತನೆಯ ಯುಗದಲ್ಲಿ ಓಂಕಾರವೆಂಬ ಮೇವ ಮೇದು, ಮೆಲುಕಿರಿದು, ಪರಮಾರ್ಥವೆಂಬ ಹೆಂಡಿಯನ್ನಿಕ್ಕಿ ನೊಸಲ ಕಣ್ಣತೆರೆದು ನೋಡಲಾಗಿ ಆ ಹೆಂಡಿ ಭಸ್ಮವಾಯಿತ್ತು. ಆ ಭಸ್ಮವನೆ ತೆಗೆದು ತಳಿಯಲಾಗಿ ಭೂಮಂಡಲ ಹೆಪ್ಪಾಯಿತ್ತು ಹೆಪ್ಪಾಗಲಿಕ್ಕಾಗಿ ತೊಡೆಯ ಮೇಲಿದ್ದ ಲಿಂಗವ ತಕ್ಕೊಂಡು ಸ್ಥಾಪ್ಯವಿಟ್ಟಾತ ನಮ್ಮ ಬಸವಣ್ಣ. ಹತ್ತೊಂಬತ್ತನೆಯ ಯುಗದಲ್ಲಿ ಏಕಪಾದದ ಮಾಹೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿನೆಂಟನೆಯ ಯುಗದಲ್ಲಿ ಕತ್ತಲೆಯ ಕಾಳೋದರನೆಂಬ ರುದ್ರನ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನೇಳನೆಯ ಯುಗದಲ್ಲಿ ವೇದಪುರಾಣಾಗಮಶಾಸ್ತ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ ಹದಿನಾರನೆಯ ಯುಗದಲ್ಲಿ....... ಹದಿನೈದನೆಯ ಯುಗದಲ್ಲಿ ಅಮೃತಮಥನವ ಮಾಡಿದಾತ ನಮ್ಮ ಬಸವಣ್ಣ. ಹದಿನಾಲ್ಕನೆಯ ಯುಗದಲ್ಲಿ ತೆತ್ತೀಸಕೋಟಿ ದೇವರ್ಕಳ ನಿರ್ಮಿಸಿದಾತ ನಮ್ಮ ಬಸವಣ್ಣ. ಹದಿಮೂರನೆಯ ಯುಗದಲ್ಲಿ ಸೌರಾಷ್ಟ್ರ ಸೋಮೇಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೆರಡನೆಯ ಯುಗದಲ್ಲಿ ಪಾರ್ವತಿಪರಮೇಶ್ವರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹನ್ನೊಂದನೆಯ ಯುಗದಲ್ಲಿ ಏಕಾದಶ ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಹತ್ತನೆಯ ಯುಗದಲ್ಲಿ ದಶವಿಷ್ಣುಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂಬತ್ತನೆಯ ಯುಗದಲ್ಲಿ ನವಬ್ರಹ್ಮರ ನಿರ್ಮಿಸಿದಾತ ನಮ್ಮ ಬಸವಣ್ಣ. ಎಂಟನೆಯ ಯುಗದಲ್ಲಿ ಅಷ್ಟದಿಕ್ಪಾಲರ ನಿರ್ಮಿಸಿದಾತ ನಮ್ಮ ಬಸವಣ್ಣ. ಏಳನೆಯ ಯುಗದಲ್ಲಿ ಸಪ್ತ ಸಮುದ್ರಂಗಳ ನಿರ್ಮಿಸಿದಾತ ನಮ್ಮ ಬಸವಣ್ಣ. ಆರನೆಯ ಯುಗದಲ್ಲಿ ಷಣ್ಮುಖದೇವರ ನಿರ್ಮಿಸಿದಾತ ನಮ್ಮ ಬಸವಣ್ಣ. ಐದನೆಯ ಯುಗದಲ್ಲಿ ಪಂಚಮುಖದೀಶ್ವರನ ನಿರ್ಮಿಸಿದಾತ ನಮ್ಮ ಬಸವಣ್ಣ. ನಾಲ್ಕನೆಯ ಯುಗದಲ್ಲಿ ಚತುರ್ಮುಖದ ಬ್ರಹ್ಮನ ನಿರ್ಮಿಸಿದಾತ ನಮ್ಮ ಬಸವಣ್ಣ. ಮೂರನೆಯ ಯುಗದಲ್ಲಿ ಬ್ರಹ್ಮ, ವಿಷ್ಣು, ರುದ್ರರ ನಿರ್ಮಿಸಿದಾತ ನಮ್ಮ ಬಸವಣ್ಣ. ಎರಡನೆಯ ಯುಗದಲ್ಲಿ ಸಂಗಯ್ಯನ ನಿರ್ಮಿಸಿದಾತ ನಮ್ಮ ಬಸವಣ್ಣ. ಒಂದನೆಯ ಯುಗದಲ್ಲಿ ಪ್ರಭುವೆಂಬ ಜಂಗಮವ ನಿರ್ಮಿಸಿದಾತ ನಮ್ಮ ಬಸವಣ್ಣ. ಇಂತೀ ಇಪ್ಪತ್ತೊಂದು ಯುಗಂಗಳಲ್ಲಿ ಬಸವಣ್ಣನು ತಮ್ಮ ಕರಕಮಲವೆಂಬ ಗರ್ಭದಲ್ಲಿ ಜನಿಸಿದನೆಂದು. ಕಕ್ಕಯ್ಯಗಳು ತಮ್ಮ ಮೋಹದ ಮಗನೆಂದು ಒಕ್ಕುದನಿಕ್ಕಿ ಸಲಹಿದರು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸೂತಕ ತಡೆದಲ್ಲಿ ಮಕ್ಕಳಾದಹರೆಂದು ಮಚ್ಚಿಪ್ಪುದು ಜಗ. ಸೂತಕವೇತರಿಂದೊದಗೂದು. ಜಗದ ಉತ್ಪತ್ಯ, ಈ ಕಾಯದ ಆಶೆಯ ಸೂತಕ ತಡೆದು, ನಿರಾಶೆಯ ಮಾತೆಯ ಗರ್ಭದಲ್ಲಿ, ನಿರ್ಜಾತನು ಬೆಸಲಾದ. ಭಾವವೆಂಬ ಯೋನಿಯಲ್ಲಿ , ಬಂಕೇಶ್ವರಲಿಂಗ ಅಂತುಕ ಕುಮಾರನಾದ.
--------------
ಸುಂಕದ ಬಂಕಣ್ಣ
ಇನ್ನಷ್ಟು ... -->