ಅಥವಾ

ಒಟ್ಟು 40 ಕಡೆಗಳಲ್ಲಿ , 21 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಾಳಿ ಗಂಧವನಪ್ಪಿದಂತೆ, ಬಯಲು ಬಯಲನಪ್ಪಿದಂತೆ, ಬೆಳಗು ಬೆಳಗವಪ್ಪಿ ಮಹಾ ಬೆಳಗಾದಂತೆ, ಶರಣ ಲಿಂಗವನಪ್ಪಿ, ಮಹಾಲಿಂಗವೇ ತಾನು ತಾನಾಗಿ, ನಿರ್ವಯಲಾದನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮಂಗಳ ಮಣ್ಣ ಬೆರಸದಂತೆ, ಬಯಲು ಮೂರ್ತಿಯಾಗದಂತೆ, ಬಿಸಿಲು ಮಳೆಯಲ್ಲಿ ನಾಂದದಂತೆ, ಗಾಳಿ ಧೂಳ ಹತ್ತದಂತೆ, ಸಿದ್ಧಸೋಮನಾಥಲಿಂಗಾ ನಿಮ್ಮ ಶರಣ ಬಳಸಿ ಬೇರಿಪ್ಪ.
--------------
ಅಮುಗಿದೇವಯ್ಯ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮಡುವಿನೊಳು ನಿಂದು ಹರಿವ ನೀರ ಮುಟ್ಟಿ ಬೇರೊಬ್ಬನ ಕೂಡ ಹಾದರವ ಮಾಡುವಳ ಕಂಡು, ಬಯಲೊಳಗೆ ನಿಂದು ಎಲ್ಲಗಳು ಅಹುದೆಂದು ಕೆಟ್ಟ ಕಣ್ಣಿನಿಂದ ಜರಿಯುತಿರ್ದನೊಬ್ಬ ಸುಳ್ಳ. ಗಾಳಿ ಮೊಟ್ಟೆಯ ಕಟ್ಟಿ ಕಾಳೋರಗನ ಹೆಡೆಯನೆತ್ತಿ ಮನೆ ಮನೆ ತಿರಿದುಂಡು ಹೋಗಿ ಬರುವನೊಬ್ಬ ಭ್ರಾಂತ. ಹೆಂಗಸು ಗಂಡಸು ಕಷ್ಟಿಗನು ಇವರ ಕಂಡು ನಗುತ ಮಾಡಿಕೊಂಡಿರ್ದ ಗುರುನಿರಂಜನ ಚನ್ನಬಸವಲಿಂಗದಲ್ಲಿ ಅಬ್ಥಿನ್ನ ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಳವಳದ ಮನ ತಲೆಕೆಳಗಾದುದವ್ವಾ ; ಸುಳಿದು ಬೀಸುವ ಗಾಳಿ ಉರಿಯಾದುದವ್ವಾ ; ಬೆಳುದಿಂಗಳು ಬಿಸಿಯಾಯಿತ್ತು ಕೆಳದಿ. ಹೊಳಲ ಸುಂಕಿಗನಂತೆ ತೊಳಲುತ್ತಿದ್ದೆನವ್ವಾ ; ತಿಳುಹಾ, ಬುದ್ಧಿಯ ಹೇಳಿ ಕರೆತಾರೆಲಗವ್ವಾ ; ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವಾ.
--------------
ಅಕ್ಕಮಹಾದೇವಿ
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಪಿಂಡವಾಯಿತ್ತು ನಾದಬಿಂದು ಕಳೆಗಳ ಕೂಡಿ ಕೊಂಡು ಸ್ವರೂಪ ತತ್ವವಿಡಿದು ಚೆನ್ನಾಗಿ ಧರೆಯಿಂದಲೆದು ಕರ್ಮೇಂದ್ರಿಯಂಗಳ ಜನನ ಸರಸದಿಂದ ಪಂಚವಿಷಯಂಗಳುತ್ಪತ್ಯ ಮೇಣ್ ಉರಿಯಿಂದ ಬುದ್ಧೀಂದ್ರಿಯಂಗಳಾದವು ನೋಡಿರೆ. ಮರುತನಿಂದೈದು ಪ್ರಾಣವಾಯುಗಳ ಜನನ ಹಿರಿದಪ್ಪ ಗಗನದಲ್ಲಿ ಚತುರ ಕರಣವು ಆತ್ಮ ನೆರೆ ಕೂಡಿ ಪಂಚವಿಂಶತಿತತ್ವವಿಡಿದು. | 1 | ಆರೂರ್ಮೆ ಏಳುಧಾತೈದುವಿಂಶತಿ ಅಂಶ ಈ ಮೂರು ತನುಗುಣವು ಇಪ್ಪತ್ತೈದು ಎರಡಂಗ ಆರು ಚಕ್ರವು ಕಮಲದೈವತ್ತೊಂದರಕ್ಷರಗಳಿಂ ವಾರಿಜ ದಾಕ್ಷಾಯಣಿ ಹರಿ ರುದ್ರ ಈಶ್ವರ ಮೀರಿದ ಸದಾಶಿವನದ್ಥಿದೈವಂಗಳು, ನವದ್ವಾರ ಚೆನ್ನಾಗಿ ಸಕಲಾರಂಭತತ್ವವಿಡಿದು. | 2 | ಮೂರು ಕರ್ಮಗಳು ಏಳ್ನೂರು ಎಪ್ಪುತ್ತು ಲೊ ಓರಣದ ಕರಣದ ಕರಣ ಅರುವತ್ತಾರು ಕೋಟಿಯಂ ಮೂ [ರಾ]ರು ಗುಣ ಅಂತರಂಗದಷ್ಟವೇದವು ಸಹಿತದ ಮೂರು ಮಲ ದಶವಾಯು ಅಂಗದೊಳು ಚರಿಸುತಿಹ ಮಾರುತ ಮನ ಮಂತ್ರಿ ಪ್ರಾಣ ನಾಯಕನರಸು ಶ ರೀರ ಜಗದೊಳುತ್ಪತ್ಯವಾಗಿದೆ ದೇವ. | 3 | ನೆಲ ನೀರು ಶಿಲೆಯಿಂದ ಬಿತ್ತಿಗಟ್ಟಿಯೆ ಅದನು ಸಲೆ ಗೋಮಯದಿ ಶುದ್ಧಮಾಡಿ ಸಾರಿಸುವಂತೆ ಎಲು ಚರ್ಮ ನರ ತೊಗಲು ಮಾಂಸ ಮಜ್ಜೆಯ ಕೂಡಿಯೆ ಚೆಲುವಾಗಿ ಈ ಕಾಯ ಗಾಳಿ ತುಂಬಿ ವೃಕ್ಷ ಉಲಿವಂತೆ ಶಿವಬೀಜವ ಚೈತನ್ಯದಿಂದಲಿ ಇಳೆಗೆ ತೋರುತಿರೆ ನೋಡಿದ ತಿಳಿಯಿರಣ್ಣ. | 4 | ಆದಿ ಮಧ್ಯ ಅಂತ್ಯ ಭಾಂಡದೊಳು ಶಿವ ತಾನೆ ಆದಿಯಾಗಿಯೆ ನೆಲದ ಮರೆಯಲ್ಲಿಹ ಧನದಂತೆ ಭೇದಿಸದೆಯಿಪ್ಪ ಭೇದವನಾರು ಅರಿಯರಲ್ಲ ಅಭೇದ್ಯಗುರು ಪಡುವಿಡಿ ಸಿದ್ಧಮಲ್ಲಿನಾಥನ ಪಾದವಿಡಿದ ತನುವು ಸುಕೃತದೇಹಿಯಾಗಿ ಮೇದಿನಿಗೆ ತೋರುತಿದೆ ಶಿವಶರಣರಿದ ತಿಳಿಯರೆ. | 5 |
--------------
ಹೇಮಗಲ್ಲ ಹಂಪ
ಗಾಳಿ ಬೀಸುವ ವೇಳೆಯಲ್ಲಿ ತೂರಿಕೊಳ್ಳಿರೋ ಬೇಗ ಬೇಗ ! ಗಾಳಿ ನಿಮ್ಮಿಚ್ಛೆಯಲ್ಲ ಕೇಳಿರೋ ಜಾಳಮನುಜರಿರಾ. ಅಂಗಕ್ಕೆ ಅಳಿವು ಬರುವುದು ದೂರವಿಲ್ಲ ನೋಡಿರೋ. ``ತ್ವರಿತಂ ಜೀವಿತಂ ಯಾತಿ ತ್ವರಿತಂ ಯಾತಿ ಯೌವನಮ್ | ತ್ವರಿತಂ ಯಾತಿ ಪ್ರಖ್ಯಾತಿಃ ತಸ್ಮಾತ್ಪೂಜಯ ಶಂಕರಮ್ ||'' ಇದನರಿದು ಬೇಗ ಬೇಗ ಲಿಂಗವ ಪೂಜಿಸಿರೊ ! ಬೇಗ ಬೇಗ ಜಂಗಮವನೊಲಿಸಿರೋ ! ಅರುವುಳ್ಳ ಕಾಲಕ್ಕೆ ಬೇಗ ಬೇಗ ನಮ್ಮ ಅಖಂಡೇಶ್ವರಲಿಂಗವ ಕೂಡಿರೋ.
--------------
ಷಣ್ಮುಖಸ್ವಾಮಿ
ಶ್ರೀಶೈಲ ಸಿಂಹಾಸನದ ಮೇಲೆ ಕುಳ್ಳಿರ್ದು, ಪುರದ ಬಾಗಿಲೊಳು ಕದಳಿಯ ನಿರ್ಮಿಸಿದರು, ನರರು ಸುರರು ಮುನಿಗಳಿಗೆ ಮರಹೆಂಬ ಕದವನಿಕ್ಕಿ ತರಗೊಳಿಸಿದರು ತ್ರಿವಿಧ ದುರ್ಗಂಗಳ. ಆ ಗಿರಿಯ ಸುತ್ತಲು ಗಾಳಿ ದೆಸೆದೆಸೆಗೆ ಬೀಸುತ್ತಿರೆ, ಕೆರಳಿ ಗಜ ಎಂಟೆಡೆಗೆ ಗಮಿಸುತ್ತಿರಲು ಪರಿವಾರ ತಮ್ಮೊಳಗೆ ಅತಿಮಥನದಿಂ ಕೆರಳೆ ಪುರದ ನಾಲ್ಕು ಕೇರಿಯನೆ ಬಲಿದರು. ಆ ನರನೆಂಬ ಹೆಸರಳಿದು, ಗುರುಮಾರ್ಗದಿಂದ ಮರಹೆಂಬ ಕದವ ಮುರಿದು ಒಳಹೊಕ್ಕು ಪುರದ ಮರ್ಮವನರಿದು, ಭರದಿಂದ ತ್ರಿಸ್ಥಾನವನುರುಹಿ ಪರಿವಾರವನು ವಶಕ್ಕೆ ತಂದು, ಗಿರಿಶಿಖರವನೇರಿ ಪುರವ ಸೂರೆಯಂಗೊಂಡು, ಪುರಕ್ಕೊಡೆಯನಾಗಿ ಪರಿಣಾಮದಿಂದ ಕೂಡಲಚೆನ್ನಸಂಗಯ್ಯನಲ್ಲಿ ಶರಣಾದವಂಗೆ ನಮೋ ನಮೋ ಎಂಬೆ
--------------
ಚನ್ನಬಸವಣ್ಣ
ಸಂಸಾರವೆಂಬ ಸಾಗರವ ದಾಂಟುವಡೆ, ಅರಿವೆಂಬ ಹರುಗೋಲನಿಕ್ಕಿ ಜ್ಞಾನವೆಂಬ ಅಂಬಿಗ ಹರುಗೋಲದಲ್ಲಿ ಕುಳ್ಳಿರ್ದು, ಸುಜ್ಞಾನವೆಂಬ ಘಾತದ ಗಳೆಯ ಪಿಡಿದು, ನಾನೀ ಹೊಳೆಯ ಕಂಡು, ಅಂಬಿಗನು ಕೇಳಿದಡೆ, ನಾನು ಹಾಸಿಕೊಟ್ಟೆಹೆನೆಂದನು. ನಾನು ನಿನ್ನ ನಂಬಿ ಹರುಗೋಲನೇರಿದೆನು ಕಾಣಾ, ಅಂಬಿಗರಣ್ಣಾಯೆಂದು ನಾನು ಹರುಗೋಲದಲ್ಲಿ ಕುಳ್ಳಿರ್ದು ಹೊಳೆಯೊಳಗೆ ಹೋಗಲಿಕೆ, ಕಾಮವೆಂಬ ಕೊರಡು ಅಡ್ಡಬಿದ್ದಿತ್ತು. ಕ್ರೋಧವೆಂಬ ಸುಳುಹಿನೊಳಗೆ ಅಹಂಕಾರವೆಂಬ ಮೀನು ಬಂದು ನಿಂದಿತ್ತು. ಮಾಯೆಯೆಂಬ ಮೊಸಳೆ ಬಂದು ಬಾಯಬಿಡುತ್ತಿದ್ದಿತ್ತು. ಮೋಹವೆಂಬ ನೊರೆತೆರೆಗಳು ಹೆಚ್ಚಿ ಬರುತ್ತಿದ್ದಿತ್ತು. ಲೋಭವೆಂಬ ಕಾಳ್ಗಡಲು ಎಳೆದೊಯ್ವುತ್ತಿದ್ದಿತ್ತು. ಮರವೆಂಬ ಮೊರಹು ನೂಕುತ್ತಲಿದ್ದಿತ್ತು. ಮತ್ಸರವೆಂಬ ಗಾಳಿ ತಲೆಕೆಳಗು ಮಾಡುತ್ತಿದ್ದಿತ್ತು. ಇವೆಲ್ಲವನೂ ಪರಿಹರಿಸಿ, ಎನ್ನ ಹೊಳೆಯ ದಾಂಟಿಸಿದನು ಅಂಬಿಗರಣ್ಣನು. ಈ ಹೊಳೆಯ ದಾಂಟಿಸಿದ ಕೂಲಿಯ ನನ್ನ ಬೇಡಿದಡೆ, ಕೂಲಿಯ ಕೊಡುವಡೇನೂ ಇಲ್ಲೆಂದಡೆ, ಕೈಸೆರೆಯಾಗಿ ಎನ್ನನೆಳದೊಯ್ದನಯ್ಯಾ. ಅರುವೆಯ ಕೊಟ್ಟ ಕೂಲಿಗೆ ತನ್ನ ಕರುವ ಕಾಯಿಸಿಕೊಂಡನಯ್ಯಾ. ಅರಿಯದೆ ಹರುಗೋಲವ ನೆರೆತೊರೆಯ ದಾಂಟಿಸಿದ ಕೂಲಿಗೆ ಕರುವ ಕಾಯಿದೆನು ಕಾಣಾ, ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಲಿಂಗನಿಷೆ*ಯುಳ್ಳ ವೀರಶೈವ ಮಹೇಶ್ವರರು ಸಕಲಪದಾರ್ಥವ ಲಿಂಗಕ್ಕೆ ಕೊಡದೆ, ಎನ್ನಂಗಕ್ಕೆ ಕೊಂಡಡೆ ವ್ರತಕ್ಕೆ ಭಂಗವೆಂದೆಂಬಿರಯ್ಯಾ ಉದಯಕಾಲದಲ್ಲಿ ಶೌಚಾಚಮನವ ಮಾಡಿ ಅಗ್ಗಣಿಯ ಬಳಸುವಿರಿ, ಆವಾಗ ಅವ ಲಿಂಗಕ್ಕೆ ಕೊಡುವಿರಿ. ಆ ಮೇಲೆ ಹಳ್ಳ ಕೊಳ್ಳ ಕೆರೆ ಬಾವಿ ನದಿಗಳಿಗೆ ಹೋಗಿ, ಮೃತ್ತಿಕಾದಿಂದ ಹಸ್ತಪಾದಕ್ಕೆ ಮೂರು ವೇಳೆ ಪೂಸಿ ಮೂರು ವೇಳೆ ತೊಳೆವಿರಿ. ಆವಾಗ ಅವ ಲಿಂಗಕ್ಕೆ ಕೊಡುವಿರಿ. ಆ ಮೇಲೆ ಶೌಚಕ್ಕೆ ಒಯ್ದ ಪಾತ್ರೆಯ ಮೃತ್ತಿಕಾದಿಂದ ತೊಳೆದು, ತಾ ಉಟ್ಟು ತೊಟ್ಟ ಪಾವಡಪಂಕಿಗಳ ನೀರಿನಲ್ಲಿ ಸೆಳೆದು ಗಾಳಿ ಬಿಸಲಾಗ ಹಾಕುವಿರಿ. ಆವಾಗ ಅವ ಲಿಂಗಕ್ಕೆ ಕೊಡುವಿರಿ. ಇಂತೀ ಎಲ್ಲವನು ಶುಚಿ ಮಾಡಿ ಜ್ಯಾಲಿ ಬೊಬ್ಬಲಿ ಉತ್ರಾಣಿಕಡ್ಡಿ ಮೊದಲಾದ ಕಡ್ಡಿಗಳ ತಂದು ಆವಾಗ ತಮ್ಮ ಅಂಗದ ಮೇಲಣ ಲಿಂಗವ ತೆಗೆದು ಅಂಗೈಯಲ್ಲಿ ಪಿಡಿದು, ಆ ಲಿಂಗಕ್ಕೆ ಮಜ್ಜನ ಮಾಡಿ, ಮರಳಿ ತಾ ಮುಖಮಜ್ಜನವ ಮಾಡಿ, ಆ ಮೇಲೆ ತಮ್ಮ ಅಂಗೈಯೊಳಗಿನ ಇಷ್ಟಲಿಂಗಕ್ಕೆ ಆ ಕಡ್ಡಿಯ ತೋರಿ, ತೋರಿದಂಥ ಧಾವನೆಯ ಮಾಡುವರು. ಲಿಂಗದ ಗೊತ್ತು ತಮಗಿ¯್ಲ ; ತಮ್ಮ ಅಂಗದ ಗೊತ್ತು ಲಿಂಗಕ್ಕಿಲ್ಲ . ಇಂತಪ್ಪ ಭಿನ್ನವಿಚಾರವನುಳ್ಳ ಮಂಗಮನುಜರಿಗೆ ಲಿಂಗನೈಷೆ*ಯುಳ್ಳ ವೀರಮಹೇಶ್ವರರೆಂದಡೆ ನಿಮ್ಮ ಶಿವಶರಣರು ಮುಖವೆತ್ತಿ ನೋಡರು. ಮನದೆರೆದು ಮಾತನಾಡರು, ತಮ್ಮೊಳಗೆ ತಾವೇ ಮುಗುಳುನಗೆಯ ನಕ್ಕು ಸುಮ್ಮನಿರುವರು ನೋಡಾ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಘಟಪಟನಾದಾ, ಓ ಎಂಬಾತ ಲಿಂಗ. ತರಗೆಲೆಗಳಿಗೊಂದೆ ಗಾಳಿ; ಹಾರುತ್ತಿಪ್ಪವು. ಒಂದೆ ಅನಿಲ, ನಿಂದ ದೇಹಪಟ್ಟೆಗಳೊಳಗೆಲ್ಲ. ಕರೆದಡೆ, ಓ ಎಂಬಾತನೆ ಬಿಡಾಡಿ.
--------------
ಬೊಂತಾದೇವಿ
ಇಂತಪ್ಪ ಲಿಂಗೈಕ್ಯವಹ ಭೇದವ ತಿಳಿಯದೆ ಮೂಢಮತಿಯಿಂದ ಕಾಡಲಿಂಗವ ಕೈಯಲ್ಲಿ ಪಿಡಿದು, ಮೈಯಲ್ಲಿ ಬೂದಿಯ ಧರಿಸಿ, ಗುಡ್ಡಗಂಹರ ಗುಹೆಗಳಲ್ಲಿ ಕಲ್ಲಪಡಿಯಲ್ಲಿ ಪರ್ಣಶಾಲೆಯ ಬಂಧಿಸಿ, ಅನ್ನ ಉದಕ ನಿದ್ರೆಯ ತೊರೆದು, ಪರ್ಣಾಹಾರವ ಭಕ್ಷಿಸಿ, ತನುವನೊಣಗಿಸಿ, ಮನವ ಬಳಲಿಸಿ, ಆತ್ಮನ ಸತ್ವಗುಂದಿ, ಚಳಿ ಮಳಿ ಗಾಳಿ ಬಿಸಿಲುಗಳಿಂದ, ಕಲ್ಲುಮರದಂತೆ ಕಷ್ಟಬಟ್ಟರೆ, ಇಂತಪ್ಪವರು ಲಿಂಗೈಕ್ಯವಾಗಲರಿಯರು ; ಕಡೆಯಲ್ಲಿ ಭವಭಾರಿಗಳು. ಮತ್ತೆಂತೆಂದಡೆ : ತಮ್ಮ ನಿಲವ ತಾವರಿಯದೆ ಎಲ್ಲಿ ಕುಳಿತರೂ ಇಲ್ಲ ; ಎಲ್ಲಿ ಹೋದಡೆಯೂ ಇಲ್ಲ. ಏನು ಮಾಡಿದಡೆಯು ವ್ಯರ್ಥವಲ್ಲದೆ ಸ್ವಾರ್ಥವಿಲ್ಲ. ಅದೇನು ಕಾರಣವೆಂದಡೆ : ಸುಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಪಡೆದು ಲಿಂಗಾಂಗಸಂಬಂಧಿಯಾಗಿ ಸರ್ವಾಂಗಲಿಂಗಮಯ ತಾನೆಂದು ತಿಳಿದು, ಆ ಘನಮಹಾ ಇಷ್ಟಬ್ರಹ್ಮದಲ್ಲಿ ಬೇರೆಯಲ್ಲದೆ ಕೂಡಬಲ್ಲರೆ ಅದೇ ಲಿಂಗೈಕ್ಯ ಎಂದನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗಾಳಿ ಬೀಸುವಲ್ಲಿ ಕೇಳೆಲವೊ ಬೀಸಣಿಗೆಯ ಉಸುರೆಂತು ಮೆರೆವುದು ಹೇಳಾ ಮರುಳೆ! ನಿಸ್ಸಾಳ ಬಾರಿಸುವಲ್ಲಿ ಢವುಡೆ ತಂಬಟದ ದನಿ ಎಂತು ಮೆರೆವುದು ಹೇಳಾ ಮರುಳೆ! ಸಿಮ್ಮಲಿಗೆಯ ಚೆನ್ನರಾಮನೆಂಬ ಸೀಮೆಯಿಲ್ಲದ ನಿಸ್ಸೀಮಂಗೆ ಲಿಂಗ ಸಂಸಾರಿ ಸರಿಯಲ್ಲ ಹೇಳಾ ಮರುಳೆ!
--------------
ಚಂದಿಮರಸ
ಗಳಿಗೆಯ ಮೇಲೆ ಗಾಳಿ ಹರಿಯದ ಮುನ್ನ ಕೊಳಗ ರಾಶಿಯ ನುಂಗುವುದ ಕಂಡೆ. ಮುಂಡವೆದ್ದು ಭೂಮಂಡಲವ ನುಂಗಿ ಆಲಿಯ ಮರೆಗೊಂಬುದ ಕಂಡೆನು. ಹಗಲೆಗತ್ತಲೆಯಾಗಿ ಆಗ ಗಿಡಿಯ ಮಂಜಿನ ಹೊಗೆಯ ದಾಳಿಯ ಕಂಡೆನು. ಅಂಬುಧಿಯೊಳು ಮುಳುಗಿ ಲೋಕ ತೇಲಾಡುವುದ ಕಂಡೆನು. ಇದೇನು ಚೋದ್ಯ ಹೇಳಾ ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->