ಅಥವಾ

ಒಟ್ಟು 58 ಕಡೆಗಳಲ್ಲಿ , 24 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ನಿತ್ಯಲಿಂಗಾರ್ಚನೆಯ ಮಾಡದೆ ಒಡಲ ಹೊರೆವನೆ ಹೊಲೆಯ. ಹತ್ತು ನುಡಿದಡೇ[ನು] ಒಂದೂ ನಿಜವಿಲ್ಲದವನೆ ಹೊಲೆಯ. ಅರ್ಥದಾಸೆಗೆ ಪ್ರಾಣವ ಹತವ ಮಾಡುವನೆ ಹೊಲೆಯ. ಸತ್ಯ ಸದ್ಗುಣ ನಿತ್ಯಾಚಾರ ಧರ್ಮವಿಲ್ಲವೆಂಬವನೆ ಹೊಲೆಯ. ಭಕ್ತಿ ಮುಕ್ತಿಯ ಪಥವ ಹುಸಿಯೆಂಬವನೆ ಹೊಲೆಯ. ನಿತ್ಯ ಗುರುಲಿಂಗಜಂಗಮ ಪಾದತೀರ್ಥ ಪ್ರಸಾದವಿಲ್ಲವೆಂಬವನೆ ಹೊಲೆಯ. ಮತ್ತೆ ಪಶುಘಾತಕವ ಮಾಡುವನೆ ಹೊಲೆಯ. ಇಂತೀ ಏಳುಹೊಲೆಯ ಹಿಂಗಿಸದೆ, ತನ್ನ ಕುಲದ ಹೆಮ್ಮೆಯ ಮೆರೆವ ಕುನ್ನಿಗಳ ನುಡಿಯ ಕೇಳಲಾಗದೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಅಯ್ಯ, ಸತ್ತುಚಿತ್ತಾನಂದ ನಿತ್ಯ ಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪ ಪರಮಾರಾಧ್ಯ ವೀರಶೈವಾಚಾರ ಷಟ್ಸ್ಥಲ ಪ್ರತಿಪಾದಕ ಶ್ರೀಗುರುಲಿಂಗಜಂಗಮದ ಕರುಣಕಟಾಕ್ಷೆಯಿಂದ ಅಂಗ-ಮನ-ಭಾವಗಳೆಲ್ಲ ಶುದ್ಧಸಿದ್ಧಪ್ರಸಿದ್ಧಪ್ರಸಾದದ ಸ್ವರೂಪವಾದ ಇಷ್ಟ ಪ್ರಾಣ ಭಾವಲಿಂಗವಾದ ಮೇಲೆ ಭೃಂಗ ಕೀಡಿಯೋಪಾದಿಯಲ್ಲಿ ಗುರುಲಿಂಗಜಂಗಮ ಬೇರೆ, ನಾ ಬೇರೆಂಬ ಬ್ಥಿನ್ನಭೇದವನಳಿದು ಗುರುಮಾರ್ಗಾಚಾರದಲ್ಲಿ ಪ್ರೇಮವುಳ್ಳಾತನಾಗಿ ಜ್ಞಾತೃ-ಜ್ಞಾನ-ಜ್ಞೇಯವೆಂಬ ಅಷ್ಟಾಂಗಯೋಗಭ್ರಮಿತರ ಜಡಕರ್ಮ ಶೈವಮಾರ್ಗದಲ್ಲಿ ಸಾಕ್ಷಾತ್ ಶಿವನೆ ಇಷ್ಟಲಿಂಗಧಾರಕನಾಗಿ, ಗುರುರೂಪ ಧರಿಸಿ, ಶಿವಭಕ್ತಮಾರ್ಗವ ತೋರದೆ ಇಚ್ಛೆಯ ನುಡಿದು, ಉದರವ ಹೊರೆವ ವೇಷವ ಕಂಡು, ಶರಣೆಂದು ಮನ್ನಣೆಯ ಕೊಡದೆ, ಭೂತಸೋಂಕಿದ ಮನುಜನೋಪಾದಿಯಲ್ಲಿ ತನ್ನ ಪವಿತ್ರ ಸ್ವರೂಪ ಪರತತ್ವಮೂರ್ತಿಧ್ಯಾನದಿಂದ ಚಿದ್ಘನಲಿಂಗದೊಳಗೆ ತಾನಾಗಿ, ತನ್ನೊಳಗೆ ಚಿದ್ಘನಲಿಂಗವಾಗಿ, ಸಪ್ತಧಾತು, ಸಪ್ತವ್ಯಸನಂಗಳಲ್ಲಿ ಕೂಡದೆ ಲಿಂಗವೆ ತಾನಾದ ಸ್ವಸ್ವರೂಪು ನಿಲುಕಡೆಯ ಲಿಂಗನಿಷ್ಠದೀಕ್ಷೆ. ಇಂತುಟೆಂದು ಶ್ರೀಗುರುಲಿಂಗಜಂಗಮಸ್ವರೂಪ ನಿಷ್ಕಳಂಕಮೂರ್ತಿ ಚನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಜಗತ್ತಿನ ಹೊಲೆಯನೆಲ್ಲವನು ಉದಕ ಕೊಳುವುದು, ಆ ಉದಕದ ಹೊಲೆಯ ಕಳೆದಲ್ಲದೆ ಲಿಂಗಕ್ಕೆ ಮಜ್ಜನಕ್ಕೆರೆವ ಲಿಂಗದ್ರೋಹಿಗಳ ಮಾತಕೇಳಲಾಗದು. ಮೇಘಬಿಂದುವಿನಿಂದಾದ ಉದಕ, ಸೂರ್ಯನ ಮುಖದಿಂದಾಗಿ ದ್ರವ್ಯ, ಅಗ್ನಿಯ ಮುಖದಿಂದಾದ ಪಾಕ_ಇಂತಿವರ ಪೂರ್ವಾಶ್ರಯವ ಕಳೆದಲ್ಲದೆ ಭಕ್ತ ಮಾಹೇಶ್ವರರೂ ಶೀಲಪರರೂ ಮೊದಲಾದ ನಾನಾ ವ್ರತಿಗಳು ಲಿಂಗಕ್ಕೆ ಮಜ್ಜನವ ಮಾಡಲಾಗದು, ಅರ್ಪಿಸಲಾಗದು, ಅದೆಂತೆಂದಡೆ: ಉದಕದ ಪೂರ್ವಾಶ್ರಯವನು, ದ್ರವ್ಯದ ಪೂರ್ವಾಶ್ರಯವನು, ಕಳೆದಲ್ಲದೆ ಲಿಂಗಕ್ಕೆ ಅರ್ಪಿಸಬಾರದು. ಇಂತೀ ತ್ರಿವಿಧದ ಪೂರ್ವಾಶ್ರಯವ ಕಳೆವ ಪರಿಯೆಂತೆಂದಡೆ: ಉದಕದ ಪೂರ್ವಾಶ್ರಯವ ಮಂತ್ರಯುಕ್ತವಾಗಿ ಜಂಗಮದ ಪಾದೋದಕದಿಂದ ಕಳೆದು ಪಾಕಪ್ರಯತ್ನವ ಮಾಡುವುದು. ದ್ರವ್ಯದ ಪೂರ್ವಾಶ್ರಯ ಜಂಗಮದ ಹಸ್ತ ಪರುಷದಿಂದ ಹೋದುದಾಗಿ ಅಗ್ನಿಯಲಾದ ಪಾಕದ ಪೂರ್ವಾಶ್ರಯವು ಜಂಗಮದ ಪ್ರಸಾದದಿಂದ ಹೋಯಿತ್ತು. ಈ ಶಿವನ ವಾಕ್ಯಗಳನರಿದು, ಮತ್ತೆ ಜಂಗಮದ ಪಾದೋದಕದಿಂದ ಪಾಕಪ್ರಯತ್ನವ ಮಾಡಲಾಗದು, ಲಿಂಗಕ್ಕೆ ಮಜ್ಜನಕ್ಕೆರೆಯಲಾಗದೆಂಬ ಶೈವ ಬೌದ್ಧ ಚಾರ್ವಾಕ ಚಾಂಡಾಲ ಶಿವದ್ರೋಹಿಯ ಮಾತಕೇಳಿ, ಬಿಟ್ಟನಾದರೆ,_ಅವ ವ್ರತಭ್ರಷ್ಟ ಅವನ ಮುಖವ ನೋಡಲಾಗದು. ಸಾಕ್ಷಿ:``ಸರ್ವಾಚಾರಪರಿಭ್ರಷ್ಟಃ ಶಿವಾಚಾರೇನ ಶುಧ್ಯತಿ ಶಿವಾಚಾರ ಪರಿಭ್ರಷ್ಟಃ ರೌರವಂ ನರಕಂ ವ್ರಜೇತ್''_ ಇಂತೆಂದುದಾಗಿ, ಸಮಸ್ತವಾದ ವ್ರತಂಗಳಲ್ಲಿ ಭ್ರಷ್ಟರಾದವರ ಶಿವಾಚಾರದಲ್ಲಿ ಶುದ್ಧನ ಮಾಡಬಹುದು, ಶಿವಾಚಾರದಲ್ಲಿ ಭ್ರಷ್ಟರಾದವರಿಗೆ ರೌರವ ನರಕ ತಪ್ಪದು. ಅವಗೆ ಪ್ರಾಯಶ್ಚಿತ್ತವಿಲ್ಲಾಗಿ ಅವನ ಮುಖವ ನೋಡಲಾಗದು, ಮತ್ತಂ ``ವ್ರತಭ್ರಷ್ಟಮುಖಂ ದೃಷ್ಟ್ವಾಶ್ವಾನಸೂಕರವಾಯಸಂ ಅಶುದ್ಧಸ್ಯ ತಥಾದೃಷ್ಟಂ ದೂರತಃ ಪರಿವರ್ಜಯೇತ್''_ಇಂತೆಂದುದಾಗಿ, ವ್ರತಶೀಲಗಳಲ್ಲಿ ನಿರುತನಾದ ಶಿವಶರಣನು ಪಥದಲ್ಲಿ ಆಚಾರಭ್ರಷ್ಟನ ಕಂಡಡೆ ಮುಖವ ನೋಡಿದಡೆ ನಾಯ ಕಂಡಂತೆ ಸೂತಕನ ಕಂಡಂತೆ ಕಾಗೆಯ ಕಂಡಂತೆ ಹೇಸಿಗೆಯ ಕಂಡಂತೆ ತೊಲಗುವುದು. ಆ ವ್ರತವ ಬಿಡಿಸಿದವನು, ಅವನ ಮಾತ ಕೇಳಿ ಬಿಟ್ಟವನು ಇಬ್ಬರಿಗೂ ಗುರುಲಿಂಗಜಂಗಮ ಪಾದೋದಕ ಪ್ರಸಾದಕ್ಕೆ ಹೊರಗಾಗಿ ಅನಂತಕಾಲ ನರಕವನೈದುವರು. ಆ ಪಾಪಿಗಳ ಮುಖವ ನೋಡಲಾಗದು, ನುಡಿಸಲಾಗದು ವ್ರತನಿಷ್ಠೆಯುಳ್ಳವರು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ || ಗುರೂಣಾ ದತ್ತಲಿಂಗಂಚ ನಾಸ್ತಿ ದೈವಂ ಮಹೀತಲೇ' ಇತಿ ಭಾವಾನುಸಂಧಾನೋ ಲಿಂಗಾಚಾರಸ್ಸಮುಚ್ಯತೇ || ಧರ್ಮಾರ್ಜಿತವಿತ್ತೇನ ತೃಪ್ತಿಶ್ಚ ಕ್ರಿಯತೇ ಸದಾ ಗುರುಜಂಗಮಲಿಂಗಾನಾಂ ಸದಾಚಾರಃ ಪ್ರಕೀರ್ತಿತಃ || ಅವಿಚಾರೇಷು ಭಕ್ತೇಷು ಜಾತಿಧರ್ಮಾದಿ ಸೂತಕಾನ್ ೀ ತದ್ಗøಹೇಷ್ವನ್ನಪಾನಾದಿ ಭೋಜನಂ ಕ್ರಿಯತೇ ಸದಾ || ತಚ್ಫಿವಾಚಾರಮಿತ್ಯಾಹುರ್ವೀರಶೈವಪರಾಯಣಾ ಶಿವಭಕ್ತಜನಾ ಸರ್ವೇ ವರಿಷ್ಠಾಃ ಪೃಥಿವೀತಲೇ || ತೇಷಾಂ ಭೃತ್ಯೋಹಮಿತ್ಯೇತದ್ಭೃತ್ಯಾಚಾರಸ್ಸ ಉಚ್ಯತೇ ೀ ಗುರುಲಿಂಗ ಜಂಗಮಶ್ಚೈವ ಪಾದತೀರ್ಥಃ ಪ್ರಸಾದತಃ ೀ ಇತಿ ಪಂಚಸ್ವರೂಪೋ[s]ಯಹಂ ಗಣಾಚಾರಃ ಪ್ರಕೀರ್ತಿತಃ ||ú ಎಂದುದಾಗಿ, ಇಂತಪ್ಪ ಶಿವಾಚಾರದ ಆಚಾರವನರಿಯದೆ ನಾ ಶಿವಭಕ್ತ ನಾ ಶಿವಭಕ್ತೆ ನಾ ಶಿವಾಚಾರಿ ಎಂದು ಕೊಂಬ ಶೀಲವಂತರ ನೋಡಿ ಎನ್ನ ಮನ ನಾಚಿ ನಿಮ್ಮಡಿಮುಖವಾಯಿತ್ತಯ್ಯ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಯ್ಯ.
--------------
ಅಕ್ಕಮಹಾದೇವಿ
ಮಾಡುವ ಭಕ್ತನ ವಿವರ: ತ್ರಾಸಿನ ನಾಲಗೆಯಂತೆ ಹೆಚ್ಚು ಕುಂದನೊಳಕೊಳ್ಳದೆ, ಗುರುಲಿಂಗಜಂಗಮ ತ್ರಿವಿಧಮುಖವು ಒಂದೆಯೆಂದು ಪ್ರಮಾಳಿಸಿ, ಮಾಡುವ ದ್ರವ್ಯ ಕೇಡಿಲ್ಲದಂತೆ ಮಾಡುವುದು ಸದ್ಭಕ್ತಿಸ್ಥಲ. ಹೀಗಲ್ಲದೆ ಗುರುವಿನ ಆಢ್ಯಕ್ಕಂಜಿ, ಜಂಗಮದ ಸಮೂಹದ ವೆಗ್ಗಳವ ಕಂಡು ಅಂಜಿ ಮಾಡಿದಡೆ, ಭಕ್ತಿಗೂಣೆಯ, ದ್ರವ್ಯದ ಕೇಡು, ಸತ್ಯಕ್ಕೆ ಹೊರಗು ಸದಾಶಿವಮೂರ್ತಿಲಿಂಗಕ್ಕೆ ದೂರ.
--------------
ಅರಿವಿನ ಮಾರಿತಂದೆ
ಪ್ರಕೃತಿವಿಡಿದಿಹುದು ಪ್ರಾಣ, ಪ್ರಾಣವಿಡಿದಿಹುದು ಜ್ಞಾನ, ಜ್ಞಾನವಿಡಿದಿಹುದು ಗುರುಲಿಂಗಜಂಗಮ. ಇಂತಿವರ ಪ್ರಸಾದ ಸಗುಣವೆಂದು ಹಿಡಿದು, ನಿರ್ಗುಣವೆಂದು ಬಿಡುವ ವ್ರತಗೇಡಿಗಳ ತೋರದಿರು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರುವೇ ಪರಶಿವಲಿಂಗ, ಪರಶಿವಲಿಂಗವೇ ಜಂಗಮ, ಜಂಗಮವೇ ಪರಶಿವಲಿಂಗ. ಗುರು ಲಿಂಗ ಜಂಗಮ ತ್ರಿವಿಧವೂ ಪರಶಿವಲಿಂಗವೆಂದರಿದು ಮನೋವಾಕ್ಕಾಯವನೊಂದು ಮಾಡಿ ತನು ಮನ ಧನವನೊಂದು ಮಾಡಿ ಆ ಒಂದುಮಾಡಿದ ಮನವನೂ, ಆ ತ್ರಿವಿಧವನೊಂದುಮಾಡಿದ ಪರಶಿವಲಿಂಗದಲ್ಲಿ ಅರ್ಪಿಸಲು ಆ ಲಿಂಗಪ್ರಸನ್ನವೇ ಪ್ರಸಾದ, ಆ ಪ್ರಸಾದವೇ ಪರಶಿವಲಿಂಗ. ಇಂತು ಬೀಜ-ವೃಕ್ಷ, ಪುಷ್ಪ-ಫಲ ಒಂದೇ. ಪರಶಿವನು ಭಕ್ತಜನಂಗಳ ರಕ್ಷಿಸಲೋಸುಗ[ರ] ದೇವದಾನವ ಮಾನವರಿಗೆ ಕೃಪೆಮಾಡಿ ದೀಕ್ಷೆಯ ಮಾಡಲೋಸುಗರ, ಬಹುವಿಧದಲ್ಲಿ ಶ್ರೀಗುರುರೂಪಾದನು. ಆದರೆ ಶ್ರೀಗುರು ಒಂದೇ ವಸ್ತು, ಪರಶಿವನು. `ಸ್ಥಾವರಂ ಜಂಗಮಾಧಾರಂ' ಎಂದುದಾಗಿ, ಪರಶಿವನು ಶಕ್ತಿವಿನೋದಕಾರಣ ಸದ್ಭಕ್ತಜನಂಗಳಿಗೆ ಪ್ರಸನ್ನವಾಗಲೋಸುಗರ, ದೇವ ದಾನವ ಮಾನವರಲ್ಲಿ ವಿನೋದಿಸಿ ಉತ್ಪತ್ತಿಸ್ಥಿತಿಲಯವ ಮಾಡಲೋಸುಗರ, ಅನೇಕತತ್ತ್ವರೂಪಾದನು ಸರ್ವತತ್ತ್ವರೂಪು ಪರಶಿವನೊಂದೇ ವಸ್ತು, `ತತ್ತ್ವಂ ವಸ್ತುಕಂ' ಎಂದುದಾಗಿ, `ನಾನಾರೂಪಧರಂ ದೇವಂ' ಎಂದುದಾಗಿ, ಪರಶಿವನೊಂದೇ ವಸ್ತು. ಸರ್ವಲೋಕವ ರಕ್ಷಿಸಲೋಸುಗರ, ತನು ಮನ ಧನವನೂ ತನ್ನಲ್ಲಿಗೆ ತೆಗೆದುಕೊಂಡು ಪಾದೋದಕ ಪ್ರಸಾದವನಿತ್ತು ರಕ್ಷಿಸಲೋಸುಗರ, ನಾನಾರೂಪು ಬಹುವಿಧಶೀಲದಿಂ ಜಂಗಮರೂಪಾದನು. `ದಂಡಕ್ಷೀರದ್ವಯಂ ಹಸ್ತೇ' ಎಂದುದಾಗಿ, ಪರಶಿವನೊಂದೇ ವಸ್ತು. `ಯೇ ರುದ್ರಲೋಕಾದವತೀರ್ಯ ರುದ್ರಾ ಎಂದುದಾಗಿ, ಜಂಗಮ ಪರಶಿವನೂ ಒಂದೇ ವಸ್ತು. ಪರಶಿವನ ಪ್ರಸನ್ನವೇ ಪ್ರಸಾದ, ಗುರುಲಿಂಗಜಂಗಮ ತ್ರಿವಿಧಲಿಂಗದಲ್ಲಿ ತನು ಮನ ಧನವನೂ ಸರ್ವಪದಾರ್ಥ ಸರ್ವದ್ರವ್ಯವನೂ ನೇತ್ರದ ಕೈಯಲೂ ಘ್ರಾಣದ ಕೈಯಲೂ ಜಿಹ್ವೆಯ ಕೈಯಲೂ ಪರುಷಭಾವ ಮನವಾಕ್ಕಿನ ಕೈಯಲೂ ಈ ಪ್ರಕರದಿಂದೆಲ್ಲಾ ತೆರದಲ್ಲಿ ಸಕಲನಿಷ್ಕಲವನೆಲ್ಲವನೂ ಅರ್ಪಿಸಿದಲ್ಲಿ ಆ ಪರಶಿವನು ಅನೇಕ ವಿಧದಲ್ಲಿ, ಅನೇಕ ಮುಖದಲ್ಲಿ, ಅರ್ಪಿತವ ಕೈಕೊಂಡು ಪ್ರಸನ್ನವಾಗಲು, ಸದ್ಬಕ್ತಂಗೆ ಬಹುವಿಧ: ಗುರುಮುಖದಲ್ಲಿ ಶುದ್ಧಪ್ರಸಾದ, ಲಿಂಗಮುಖದಲ್ಲಿ ಸಿದ್ಧಪ್ರಸಾದ, ಜಂಗಮಮುಖದಲ್ಲಿ ಪ್ರಸಿದ್ಧಪ್ರಸಾದ. ಗುರುಮುಖದಲ್ಲಿ ನೇತ್ರ ಪ್ರಸಾದ, ಶ್ರೋತ್ರ ಪ್ರಸಾದ, ಘ್ರಾಣ ಪ್ರಸಾದ, ಜಿಹ್ವೆ ಪ್ರಸಾದ, ಪರುಶನ ಪ್ರಸಾದ, ಭಾವ ಪ್ರಸಾದ, ಮನ ಪ್ರಸಾದ ವಾಕ್ ಪ್ರಸಾದ, ಕಾಯ ಪ್ರಸಾದ ಇವುವಿಡಿದು ನಡೆವುವು ತ್ರಿವಿಧಸಂಪತ್ತುಗಳು. ಭಕ್ತ ಮಹೇಶ್ವರ ಪ್ರಸಾದಿ ಮನವಿಡಿದು ನಡೆವುವು ತ್ರಿವಿಧಸಂಪತ್ತುಗಳು. ಪ್ರಾಣಲಿಂಗಿ ಶರಣನೈಕ್ಯವಾಗಿ ನಡೆದರಯ್ಯಾ ಕ್ರಿಯಾನುಭಾವವಿಡಿದು. ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ ಈ ಭೇದವನು ಭೇದಿಸಬಲ್ಲಡೆ ಇಂದೇ ಇಹವಿಲ್ಲ ಪರವಿಲ್ಲ. ಈ ಒಂದೇ ನಾನಾವಿಧಪ್ರಸಾದ ಅನೇಕದಿನದಿಂ ಪ್ರಸನ್ನನಾಗಲು ಪ್ರಸಾದ ಒಂದೇ ವಸ್ತು ಪರಶಿವನು. ಇದು ಕಾರಣ, ಶ್ರೀಗುರು ಪರಶಿವನು ಜಂಗಮವು ಪ್ರಸಾದವು ಒಂದೇ ಕಾಣಿರಣ್ಣಾ. ಚತುಷ್ಟವನು ವೇದ ಶಾಸ್ತ್ರ ಆಗಮ ಪುರಾಣದಿಂ ವಿಚಾರಿಸಲು ಒಂದೇ ವಸ್ತು. ಆ ವಿಚಾರವ ನಂಬದೇ ಕೆಡಬೇಡ. ಜಂಗಮವೆಯಿದು `ಸ ಭಗವಾನ್ ಯಸ್ಯ ಸರ್ವೇ' ಎಂದುದಾಗಿ `ಸರ್ವಕಾರಣಕಾರಣಾತ್' ಎಂದು ಪರಶಿವಲಿಂಗವಲ್ಲದೆ ಇಲ್ಲ. ಆತನ ಪ್ರಸನ್ನವೇ ಪ್ರಸಾದ, ಆ ಪ್ರಸಾದವೇ ಮುಕ್ತಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ದಿವಾಕರನ ದಿನಕರ್ಮದೊಳಗೆ ನಿಮಿಷಾರ್ಧ ಲಫ್ಸುಜಡತ್ವವಿಲ್ಲದೆ ಕಾರ್ಯನಾಗಿ ಕಾರಣಾನುಕೂಲಿಯಾದಂತೆ, ನಿಶಾಕರನು ಮಾಸದ್ವಂದ್ವಕರ್ಮಾದಿ ರಾಹುಬಾಧೆಯೊಳು ಲಘುಜಡತ್ವವಿಲ್ಲದೆ ಕಾರ್ಯನಾಗಿ ಕಾರಣಾನುಕೂಲಿಯಾದಂತೆ, ಅಂತಜ್ರ್ಞಾನ ಬಾಹ್ಯ ಶಾಂತಾನ್ವಿತ ಶರಣನು ತನ್ನ ನಿತ್ಯ ಜ್ಞಾನ ಕ್ರಿಯಾವರ್ತನದೊಳಗೆ ಗುರುಲಿಂಗಜಂಗಮ ಭಕ್ತಿ ವಿಭವ ವಿನಯವೆಂಬ ವಿಮಲತ್ವವನು ಜರೆಮರಣಾದಿ ದ್ವಂದ್ವಕರ್ಮ ಮಾಯಾ ಶಂಕಾ ವಿಷಮಬಾಧೆಯನೊಗೆದು ಲಫ್ಸುಜಡತ್ವವಿಲ್ಲದೆ ಕಾರ್ಯನಾಗಿ ಕಾರಣಾನುಕೂಲಿಯಾಗಿ ಮೆರೆವ ಮಹಿಮಾತಿಶಯವನುಳ್ಳ ಭಕ್ತನೆ ಸಾಕ್ಷಾತನೆಂಬೆ. ಚೆಲುವಾತ್ಮಾಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗನಲ್ಲದೆ ಬೇರಿಲ್ಲ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ನುಡಿಯಲ್ಲಿ ಎರಡು ನುಡಿಯನು; ನಡೆಯಲ್ಲಿ ಎರಡು ನಡೆಯನು; ನುಡಿಯಂತೆ ನಡೆ ವಿಸ್ತರಿಸುವ; ನಡೆಯಂತೆ ನುಡಿ ವಿಸ್ತರಿಸುವ ; ಹಿಡಿವನು ಗುರುಲಿಂಗಜಂಗಮ ದಾಸೋಹವ. ಬಿಡುವನು ಹೊನ್ನು ಹೆಣ್ಣು ಮಣ್ಣೆಂಬ ತ್ರಿಮಲದಾಸೆಯ. ಇಂತಪ್ಪ ವೀರಮಾಹೇಶ್ವರನನೇನೆಂಬೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಯೋಗಾಂಗ ಭೋಗಾಂಗ ಜ್ಞಾನಾಂಗ ಈ ತ್ರಿವಿಧವನು ಮರೆದು, ಭಕ್ತಿಯೋಗದ ಮೇಲೆ ನಿಂದು, ವೈರಾಗ್ಯಯೋಗದ ಮೇಲೆ ನಿಂದು, ನಡೆದು ನುಡಿದು ತೋರುವರು ಎಮ್ಮೆ ಶರಣರು, ಗುರುಲಿಂಗಜಂಗಮ ಈ ತ್ರಿವಿಧವನು. ಸುಖ ದುಃಖ ಚಿಂತೆ ಸಂತೋಷವೆಂಬುವಂ ಕಳೆದು, ಉತ್ಪತ್ತಿಸ್ಥಿತಿಲಯವೆಂಬುವ ಸುಟ್ಟು, ದೃಕ್ಕು, [ದರ್ಶನ], ದೃಶ್ಯವೆಂಬ ತ್ರಿಕರಣವ ಏಕವಮಾಡಿ, ಪಿಂಡಾಂಡವಾ ಬ್ರಹ್ಮಾಂಡವೊಂದೆಂಬುದ ಅರಿದು, ಸಂದ ಹರಿದು, ನಿಂದ ನಿಜಾನಂದದಲ್ಲಿ ಹಿಂದುಮುಂದೆಂಬುದನರಿಯದೆ, ನಿಮ್ಮೊಳೊಂದಾದ ಲಿಂಗೈಕ್ಯಂಗೆ ವಂದಿಸಿ ವಂದಿಸಿ ಎನ್ನ ಬಂಧನ ಹರಿಯಿತ್ತು, ನಾನು ಬಟ್ಟಬಯಲಾದೆನಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಸದ್ಭಕ್ತಂಗೆಯೂ ಜಂಗಮಕ್ಕೆಯೂ ಭಾಜನ ಬೇರೆಂಬ ಶಾಸ್ತ್ರದ ಸದಗರು ನೀವು ಕೇಳಿರೋ. ಭಕ್ತದೇಹಿಕ ದೇವನೆಂದು ಶ್ರುತಿ ಸಾರುತ್ತಿವೆ, ಅರಿದು ಮರೆಯದಿರಿ, ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ, ಮರವೆಯಿಂದ ದಕ್ಷ ಶಿರವ ನೀಗಿ ಕುರಿದಲೆಯಾದುದನರಿಯಿರೆ ಮರೆಯದೆ ವಿಚಾರಿಸಿ ನೋಡಿ, ಭಕ್ತಂಗೂ ಲಿಂಗಕ್ಕೂ ಭಿನ್ನವಿಲ್ಲ. ಇನ್ನು ಆ ಭಕ್ತಂಗೆಯೂ ಆ ಜಂಗಮಕ್ಕೆಯೂ ಭೇದವಿಲ್ಲ. ಬೇರ್ಪಡಿಸಿ ನುಡಿಯಲುಂಟೆ ಇನ್ನು ಆ ಗುರುವಿಂಗೆಯೂ ಆ ಭಕ್ತಂಗೆಯೂ ಸಂಕಲ್ಪವಿಲ್ಲ. ಅದೆಂತೆಂದಡೆ; ಮೆಟ್ಟುವ ರಕ್ಷೆ, ಮುಟ್ಟುವ ಯೋನಿ, ಅಶನ, ಶಯನ, ಸಂಯೋಗ, ಮಜ್ಜನ, ಭೋಜನ ಇಂತಿವನು ಗುರುಲಿಂಗಜಂಗಮ ಸಹಿತವಾಗಿ ಭೋಗಿಸುವ ಸದ್ಭಕ್ತಂಗೆ ನಾನು ನಮೋ ನಮೋ ಎಂಬೆನು. ಅದೆಂತೆಂದಡೆ; ಅರ್ಥಪ್ರಾಣಾಭಿಮಾನಂ ಚ ಗುgõ್ಞ ಲಿಂಗೇ ಚ ಜಂಗಮೇ± ತಲ್ಲಿಂಗಜಂಗಮಪ್ರಾಣಂ ಭಕ್ತಸ್ಥಲಮುದಾಹೃತಮ್ ಎಂದುದಾಗಿ, ಇದನರಿದು ಅರ್ಥವನೂ ಪ್ರಾಣವನೂ ಅಭಿನವನೂ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ಆ ಗುರುಲಿಂಗಜಂಗಮವೆ ಪ್ರಾಣವಾಗಿಹ ಸದ್ಭಕ್ತಂಗೆಯೂ ಆ ಗುರುಲಿಂಗಜಂಗಮಕ್ಕೆಯೂ ಏಕಭಾಜನವಲ್ಲದೆ ಏಕಭೋಜನವಲ್ಲದೆ, ಭಿನ್ನಭಾಜನ ಭಿನ್ನಭೋಜನವುಂಟೆ _ಇಲ್ಲವಾಗಿ, ಅದೇನು ಕಾರಣವೆಂದಡೆ; ಆ ಸದ್ಭಕ್ತನ ಅಂಗವೆಂಬ ಗೃಹದಲ್ಲಿ ಜಂಗಮವಿಪ್ಪನಾಗಿ ಇದನರಿದು ಬೇರೆ ಮಾಡಿ ನುಡಿಯಲಾಗದು. ಚೆನ್ನಯ್ಯನೊಡನುಂಬುದು ಆವ ಶಾಸ್ತ್ರ ಕಣ್ಣಪ್ಪ ಸವಿದುದ ಸವಿವುದಾವ ಶಾಸ್ತ್ರ ಭಕ್ತದೇಹಿಕ ದೇವನಾದ ಕಾರಣ. ಅದೆಂತೆಂದಡೆ; ಭಕ್ತಜಿಹ್ವಾಗ್ರತೋ ಲಿಂಗಂ ಲಿಂಗಜಿಹ್ವಾಗ್ರತೋ ರುಚಿಃ ರುಚ್ಯಗ್ರೇ ತು ಪ್ರಸಾದೋಸ್ತು ಪ್ರಸಾದಃ ಪರಮಂ ಪದಂ ಇಂತೆಂಬ ಪುರಾಣವಾಕ್ಯವನರಿದು ಸದ್ಭಕ್ತನೂ ಗುರುಲಿಂಗಜಂಗಮವೂ ಈ ನಾಲ್ವರೂ ಒಂದೆ ಭಾಜನದಲ್ಲಿ ಸಹಭೋಜನಮಾಡುವರಿಂಗೆ ಇನ್ನೆಲ್ಲಿಯ ಸಂಕಲ್ಪವೊ, ಇನ್ನೆಲ್ಲಿಯ ಸೂತಕವೋ, ಇನ್ನೆಲ್ಲಿಯ ಪಾತಕವೋ ಕೂಡಲಸಂಗಮದೇವಾ.
--------------
ಬಸವಣ್ಣ
ಶಿವಶರಣಗಣಾರಾಧ್ಯರು ನಿರಾಕಾರ ಚಿತ್ಪಾದೋದಕದಾಚರಣೆಯ ಮಾರ್ಗಕ್ರಿಯೆ ಮುಗಿದ ಮೇಲೆ, ಸಾಕಾರಚಿತ್ಪ್ರಸಾದವ ಆ ಪಾದತೀರ್ಥದಾಚರಣೆಯಂತೆ ತಟ್ಟಿ, ಬಟ್ಟಲಗಳೊಳ್ ಪರಿಪೂರ್ಣತೃಪ್ತಿಯನೈದುವುದು. ಆ ನಿಲುಕಡೆಯೆಂತೆಂದೊಡೆ : ನಿರಾಭಾರಿವೀರಶೈವಸಂಪನ್ನ ಸದ್ಭಕ್ತ ಜಂಗಮಮೂರ್ತಿಗಳು ಪಾದೋದಕದಿಂದ ಅವರ ಭಾಂಡಕ್ಕೆ ಹಸ್ತಸ್ಪರಿಶನವ ಮಾಡುವುದು. ಉಳಿದ ವಿಶೇಷ ವೀರಶೈವಸನ್ಮಾರ್ಗಿ ಭಕ್ತಜಂಗಮವು ತಮ್ಮ ತಮ್ಮ ತಂಬಿಗೆ ತಟ್ಟೆ ಬಟ್ಟಲಿಗೆ ಪಾದೋದಕ ಹಸ್ತಸ್ಪರಿಶನವ ಮಾಡಿ, ಕೇವಲಪರಮಾನಂದದ ಚಿದ್ಗರ್ಭೋದಯ ಶುದ್ಧಪ್ರಸಾದವೆಂದು ಭಾವಿಸಿ, ಅತಿವಿಶೇಷ ಮಹಾಸುಯ್ದಾನದಿಂದ ಸಮಸ್ತ ಜಂಗಮ ಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂತಿಣಿಯ ಪೂರ್ಣಾನಂದದ ನಿಜದೃಷ್ಟಿಯಿಂ ನೋಡಿ, ನಿರೀಕ್ಷಿಸಿ, ಶರಣಾರ್ಥಿ ಸ್ವಾಮಿ, ನಿಮ್ಮ ದಯದಿಂದುದಯವಾದ ಪರಿಪೂರ್ಣರಸಾಮೃತವ ಮಹಾಲಿಂಗಾರ್ಪಣವ ಮಾಡಬೇಕೆಂದು ಅಭಿವಂದಿಸಿ, ಪರಮಪತಿವ್ರತತ್ವದಿಂದ ಗುರುಚರವರಸ್ಥಲಕ್ಕೆ ತನುಮನಧನಂಗಳ ಸಮರ್ಪಿಸುವಲ್ಲಿ ನಿರ್ವಂಚಕವಾಗಿ, ಭಕ್ತಲಿಂಗಜಂಗಮವೆಂದು ಉಭಯ ನಾಮರೂಪ ಕ್ರಿಯಾಕಾಯವಳಿದು, ಕ್ಷೀರ ಕ್ಷೀರವ ಕೂಡಿದಂತೆ ಪರುಷ ಮುಟ್ಟಿ ಪರುಷವಾದಂತೆ, ಪರಮಾನಂದಾಬ್ಧಿ ಚಿದ್ರಸಾಮೃತ ಅಷ್ಟಾವರಣದ ಸತ್ಕ್ರಿಯಾಜ್ಞಾನಾಚಾರಂಗಳ ಅನುಭಾವದೊಳ್ ಕೂಟಸ್ಥದಿಂದೊಡಲಾಗಿ, ನಿರಾಕಾರ ನಿಃಶಬ್ದಲೀಲೆಪರ್ಯಂತರವು ಆ ಗುರುಲಿಂಗಜಂಗಮ ಚಿತ್ಪ್ರಭಾಂಗ ಭಸ್ಮಮಂತ್ರಾದಿಗಳೆ ಮುಂದಾಗಿ, ಸತ್ಯಶುದ್ಧ ನಡೆನುಡಿ ಕ್ರಿಯಾಜ್ಞಾನಾನುಭಾವ ಪಾದೋದಕ ಪ್ರಸಾದಸೇವನೆಯೆ ಹಿಂದಾಗಿ, ಸಮಸ್ತ ಕಾರಣಕ್ಕೂ ಸಾವಧಾನ ಸಪ್ತವಿಧ ಸದ್ಭಕ್ತಿಗಳಿಂದ ಮಾರ್ಗಾಚಾರವುಳ್ಳ ಕ್ರಿಯಾರ್ಪಣ, ದ್ರವ್ಯಮೀರಿದಾಚಾರವುಳ್ಳ ಜ್ಞಾನಾರ್ಪಣದ್ರವ್ಯಂಗಳಂ ಪರಿಪೂರ್ಣಾನುಭಾವದಿಂದ ನಿಜನೈಷಾ*ನುಭಾವಸಂಬಂಧಿಗಳೆ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಚಿತ್ಕಲಾಪ್ರಸಾದಿ ಸೇವಿತಕ್ಕೆ ಯೋಗ್ಯರಾದ ಘನಕ್ಕೆ ಘನವೆಂದವರಾಳಿನಾಳಾಗಿರ್ಪೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಶ್ರೀಗುರುಕರುಣಕಟಾಕ್ಷೆಯಿಂದ ತಮ್ಮ ತಾವರಿದ ನಿತ್ಯಮುಕ್ತ ನಿಜೋತ್ತಮ ಸದ್ಭಕ್ತ ಮಹೇಶ್ವರರು, ಹಿಂದೆ ಹೇಳಿದ ಬಹಿರಂಗ ಪಂಚಪಾತಕಮಂ ನಿರಸನಂಗೈದು ಮಾರ್ಗಕ್ರಿಯೆ ಶುದ್ಧರೆನಿಸಿ, ಅಂತರಂಗದ ಗುಪ್ತಪಾತಕಮಂ ನಿರಸನಗೈವ ವಚನಸೂತ್ರವದೆಂತೆಂದೊಡೆ : ತನಗುಳ್ಳ ಗಂಧ ರಸ ಮೊದಲಾದ ಸುಪದಾರ್ಥದ್ರವ್ಯಗಳ ಗುರು ಚರ ಪರ ಸ್ಥಿರ ತಂದೆ ತಾಯಿ ಘನಲಿಂಗ ಸಮ್ಮೇಳಕ್ಕೆ ಮಾಡದೆ ನಿರವಯಪರಿಪೂರ್ಣ ನಿರಂಜನ ಗುರುಲಿಂಗಜಂಗಮ ಪ್ರಸನ್ನೋದಯವಾದ ಚಿತ್ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಮಂತ್ರ ಮಹಾಮಂತ್ರ ಕೊನೆಮೊನೆಯಲ್ಲುದಯವಾದ ಮಹದರಿವು ಮಹಾಜ್ಞಾನ ಮಹಾನುಭಾವಾಚಾರ ಸಂಬಂಧದಾಚರಣೆಗಳೆ ಕೇವಲ ಎನ್ನ ಜನನಾಂಕುರದ ಮುಕ್ತಿದ್ವಾರವಾಗಿರುವ ಸ್ಥಿತಿಯ ಗೊತ್ತಿನ ಹಕ್ಕೆ, ನಾ ನಿರವಯಲಾಗುವ ಲಯಸ್ಥಾನದ ಉಳುವೆಯ ಮಹಾಮನೆಯೆಂದು ಭಾವಭರಿತವಾಗಿ ಹಿಂದುಮುಂದಣ ಫಲಪದದ ಭೋಗಮೋಕ್ಷದಾಪೇಕ್ಷೆಗಳಂ ನೆರೆನೀಗಿ, ಬಯಲಬ್ರಹ್ಮದಿರವ ಹೊದ್ದಲೊಲ್ಲದೆ ಪಾಪದಪುಂಜ, ಕರ್ಮದೋಕುಳಿ, ಮಲದಾಗರ, ಅನಾಚಾರದಕ್ರಿಯೆ, ಅಜ್ಞಾನ ವಿಷಯಾತುರದ ಭವಜೀವಿಗಳಾಗಿರುವ ಪರಮಪಾತಕರ ಮೋಹವಿಟ್ಟು, ನನ್ನ ಪೂರ್ವಾಶ್ರಯವೆಂದು, ಅತಿ ಪ್ರೇಮದಿಂದ ತನುಮನಧನವ ಸವೆದು, ಅವರೊಡಗೂಡಿ ತೀರ್ಥಯಾತ್ರೆಗಳಂ ಮಾಡಿ, ತಾ ಸ್ವೀಕರಿಸಿದ ಪ್ರಸಿದ್ಧಪ್ರಸಾದ ಪಾದೋದಕಪ್ರಸಾದಮಂ ಆ ತ್ರಿವಿಧ ದೀಕ್ಷಾಚಾರಹೀನವಾದ ಭೂಪ್ರತಿಷಾ*ದಿಗಳಿಗೆ ಕೊಟ್ಟು ಕೊಂಬುವ ಭ್ರಷ್ಟ ನಡಾವಳಿಯೆ ಅಂತರಂಗದ ಪ್ರಥಮಪಾತಕ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಆಯುಷ್ಯವ ಹಿರಿದಾಗಿ ಕೊಟ್ಟಡೆ, ಲಿಂಗ ಒಲಿದುದಲ್ಲ. ಭಾಷೆಯ ಹಿರಿದಾಗಿ ಕೊಟ್ಟಡೆ, ಲಿಂಗ ಒಲಿದುದಲ್ಲ. ಅಷ್ಟಮಹದೈಶ್ವರ್ಯವ ಹಿರಿದಾಗಿ ಕೊಟ್ಟಡೆ ಲಿಂಗ ಒಲಿದುದಕ್ಕೆ ಕುರುಹಲ್ಲ. ಕಾಯ ಬೆರಸಿ ಕೈಲಾಸಕ್ಕೆ ಕೊಂಡು ಹೋದರೂ ಲಿಂಗ ಒಲಿದುದಲ್ಲ. ಇವೆಲ್ಲಾ ಪೂಜಾ ಫಲಂಗಳು, ಕೈಕೂಲಿಕಾರತನವೈಸೆ. ಲಿಂಗ ಒಲಿದ ಪರಿ: ಗುರುಲಿಂಗಜಂಗಮ ಒಂದೆಂದು ಅರಿದು ನಿಶ್ಚಯ ಭಾವದಿಂ ತನು ಮನ ಧನವಲ್ಲಿಯೇ ಅರ್ಪಿಸುವುದು ಲಿಂಗ ಒಲಿದುದು. ಕಾಯಭಾವವಳಿದು ಲಿಂಗವೆಂದು ಭಾವಿಸಿ ಭಾವಸಿದ್ಧಿಯಾದುದು ಲಿಂಗ ಒಲಿದುದು. ಲಿಂಗವಲ್ಲದೆ ಇನ್ನಾವುದು ಘನ ? ಎದರಿದುವೆ ಲಿಂಗ ಒಲಿದುದು. ಲಿಂಗವಂತನೆ ಲಿಂಗವೆಂದರಿದುದು ಲಿಂಗ ಒಲಿದುದು. ಸದಾಚಾರ ಲಿಂಗ ಒಲಿದುದು. ನಿರ್ವಂಚನೆ ಲಿಂಗ ಒಲಿದುದು. ಸರ್ವಭೋಗವನು ಲಿಂಗವಂತರಿಗೆ ಭೋಗಿಸಲಿತ್ತು ಸಮಭೋಗವಲ್ಲದೆ ಲಿಂಗವಂತಗೆ ವಿಶೇಷ ಭೋಗ ತಾತ್ಪರ್ಯ ಮೋಹವಾಗದಡೆ ಲಿಂಗ ಒಲಿದುದು. ಪರಧನ ಪರಸ್ತ್ರೀ ಪರದ್ರವ್ಯ ಪರದೈವದಲ್ಲಿ ವರ್ತಿಸದಿದ್ದಡೆ ಲಿಂಗ ಒಲಿದುದು. ಲಿಂಗದಲ್ಲಿ ಭಕ್ತನಲ್ಲಿ ಅವಿನಾಭಾವವಳವಟ್ಟು ಭಾವಶುದ್ಧವಾಗಿ ಸರ್ವಕ್ರೀ ಲಿಂಗಕ್ರೀಯಾದಡೆ ಲಿಂಗ ಒಲಿದುದು ದೃಷ್ಟವಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->