ಅಥವಾ

ಒಟ್ಟು 75 ಕಡೆಗಳಲ್ಲಿ , 21 ವಚನಕಾರರು , 73 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರಿಯೆಯದು ಚೆನ್ನಬಸವಣ್ಣನ ಎಡಪಾದ, ಜಾÕನವದು ಚೆನ್ನಬಸವಣ್ಣನ ಬಲಪಾದ, ನಾನವರ ಚಮ್ಮಾವುಗೆ, ನೀನವರ ಮನೆದಾಸ, ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಬಸವಣ್ಣನ ಪ್ರಸಾದದಿಂದ ಭಕ್ತಿಜ್ಞಾನ ವೈರಾಗ್ಯ ಸಂಪನ್ನನಾದೆನಯ್ಯ. ಚೆನ್ನಬಸವಣ್ಣನ ಪ್ರಸಾದದಿಂದ ಷಟ್‍ಸ್ಥಲಜ್ಞಾನಸಂಪನ್ನನಾದೆನಯ್ಯ. ಪ್ರಭುದೇವರ ಪ್ರಸಾದದಿಂದ ಪರಶಿವತತ್ವಸ್ವರೂಪವೇ ಎನ್ನ ಸ್ವರೂಪವೆಂದರಿದು ಸಮಸ್ತ ಸಂಸಾರಪ್ರಪಂಚ ಕೊಡಹಿದೆನು ನೋಡಾ. ನೀಲಲೋಚನೆಯಮ್ಮನ ಪ್ರಸಾದದಿಂದ ನಿಜಲಿಂಗೈಕ್ಯನಾದೆನಯ್ಯ. ಮಹಾದೇವಿಯಕ್ಕಗಳ ಪ್ರಸಾದದಿಂದ ಸುತ್ತಿದ ಮಾಯಾಪಾಶವ ಹರಿದು ನಿರ್ಮಾಯನಾಗಿ ನಿರ್ವಾಣಪದದಲ್ಲಿ ನಿಂದೆನಯ್ಯ. ಸಿದ್ಧರಾಮಯ್ಯನ ಪ್ರಸಾದದಿಂದ ಶುದ್ಧ ಶಿವತತ್ವವ ಹಡೆದೆನಯ್ಯ. ಮೋಳಿಗೆಯ ಮಾರಿತಂದೆಗಳ ಪ್ರಸಾದದಿಂದ ಕಾಯದ ಕಳವಳನಳಿದು ಕರ್ಮನಿರ್ಮಲನಾಗಿ ವೀರಮಾಹೇಶ್ವರನಾದೆನು ನೋಡಾ. ಇವರು ಮುಖ್ಯವಾದ ಏಳುನೂರೆಪ್ಪತ್ತುಮರಗಣಂಗಳ ಪರಮಪ್ರಸಾದದಿಂದ ಎನ್ನ ಕರಣಂಗಳೆಲ್ಲವು ಲಿಂಗಕರಣಂಗಳಾಗಿ ಕರಣೇಂದ್ರಿಯಂಗಳ ಕಳೆದುಳಿದು ಇಂದ್ರಿಯಂಗಳಿಗೆ ನಿಲುಕದ ಸ್ಥಾನದಲ್ಲಿರ್ದು ಪರಮಾನಂದ ಪ್ರಭಾಮಯನಾಗಿರ್ದೆನು ನೋಡಾ. ನಿಮ್ಮ ಶರಣರ ಪ್ರಸಾದದಿಂದ ನಾನು ಪ್ರಸಾದಿಯಾಗಿರ್ದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ, ಎನ್ನ ಮನದಲ್ಲಿ ತನ್ನ ನಿಲವ ತೋರಿದ, ಎನ್ನ ಅರಿವಿನಲ್ಲಿ ನಿಮ್ಮ ತೋರಿದ, ಇಂತೀ ತ್ರಿವಿಧಸ್ವಾಯತವನು ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ. ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.
--------------
ಬಸವಣ್ಣ
ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನ್ನ ಅರಿವು ಸ್ವಯವಾಯಿತ್ತು. ಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.
--------------
ಅಕ್ಕಮಹಾದೇವಿ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಅತಿಶಯವನತಿಗಳೆದು ನಿರತಿಶಯ ಸುಖದೊಳಗೆ ಪರಮಸುಖಿಯಾಗಿಪ್ಪವರಾರು ಹೇಳಾ ? ನಿಜದ ನಿರ್ಣಯವನರಿದು ಭಜನೆ ಭಾವನೆಯಳಿದು ತ್ರಿಜಗಪತಿಯಾಗಿಪ್ಪವರಾರು ಹೇಳಾ ? ಕೋಡಗದ ಮನದೊಳಗೆ ಮನವಿರಹಿತನಾಗಿ ಗಮನಗೆಡದಿಪ್ಪರಿನ್ನಾರು ಹೇಳಾ ? ಹಗೆಯಲ್ಲಿ ಹೊಕ್ಕು ಹಗೆಯಳಿದು ಸುಖಿಯಾಗಿ ತನಗೆ ತಾ ಕೆಳೆಯಾಗಿಪ್ಪರಾರು ಹೇಳಾ ? ಒಳಹೊರಗೆ ಸರ್ವಾಂಗ ಲಿಂಗವೆ ತಾನಾಗಿ ಇರಬಲ್ಲ ಪರಮಾರ್ಥರಾರು ಹೇಳಾ ? ಕಲಿದೇವಾ, ನಿಮ್ಮ ಶರಣ ಚೆನ್ನಬಸವಣ್ಣನ ನಿಲವನರಿದು, ಶರಣೆಂದು ನಾನು ಸುಖಿಯಾದೆನು.
--------------
ಮಡಿವಾಳ ಮಾಚಿದೇವ
ಅಯ್ಯ ತತ್ತ್ವ ವಿತತ್ತ್ವಗಳಿಲ್ಲದಂದು, ಪ್ರಕೃತಿ ಪುರುಷರಿಲ್ಲದಂದು, ಜೀವ_ಪರಮರೆಂಬ ಭಾವ ತಲೆದೋರದಂದು, ಏನೂ ಏನೂ ಇಲ್ಲದಂದು ಬಯಲು ಬಲಿದು ಒಂದು ಬಿಂದುವಾಯಿತ್ತು ನೋಡಾ. ಆ ಬಿಂದು ಅಕ್ಷರತ್ರಯದ ಗದ್ದುಗೆಯಲ್ಲಿ ಕುಳ್ಳಿರಲು ಓಂಕಾರ ಉತ್ಪತ್ತಿಯಾಯಿತ್ತು. ಆ [ಓಂಕಾರದ] ನಾದದಲ್ಲಿ ಮೂರ್ತಿಗೊಂಡನೊಬ್ಬ ಶರಣ. ಆ ಶರಣನಿಂದಾಯಿತ್ತು ಪ್ರಕೃತಿ, ಆ ಪ್ರಕೃತಿಯಿಂದಾಯಿತ್ತು ಲೋಕ. ಈ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ, ಗುಹೇಶ್ವರನ ಶರಣ ಚೆನ್ನಬಸವಣ್ಣನ ಘನವನು ಬಸವಣ್ಣನ ಕೃಪೆಯಿಂದಲರಿದು ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಜಪವೆಂಬುದು ಪಾಪಕ್ಕೆ ಬಹು ತಾಪ ನೋಡಯ್ಯಾ. ಜಪವೆಂಬುದು ಪುಣ್ಯದ ನಾಣ್ಯ ನೋಡಯ್ಯಾ. ಜಪವೆಂಬುದು ಚೆನ್ನಬಸವಣ್ಣನ ಪಾದದಲ್ಲಿಯೆ ಐಕ್ಯ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಅಯ್ಯ, ಇಂತು ಕಲ್ಯಾಣಪಟ್ಟಣದ ಅನುಭಾವಮಂಟಪದ ಶೂನ್ಯಸಿಂಹಾಸನದಲ್ಲಿ ಪ್ರಭುಸ್ವಾಮಿಗಳು ಬಸವರಾಜೇಂದ್ರ ಮುಖ್ಯವಾದ ಸಕಲಪ್ರಮಥಗಣಂಗಳು ಕೂಡಿ, ಚಿಕ್ಕದಂಡನಾಯಕ ಮುಖವಚನದಿಂದೆ ಶಿವಯೋಗಿ ಸಿದ್ಧರಾಮೇಶ್ವರನ ಉಪದೇಶಕಾರಣಾರ್ಥವಾಗಿ, ನವರತ್ನ ಖಚಿತ ಮಂಟಪವ ರಚಿಸಿ, ಶುಚಿ, ರುಚಿ, ಪರುಷ, ನಿಜ, ಸದ್ಭಕ್ತಿ, ಜ್ಞಾನ, ವೈರಾಗ್ಯ, ಸತ್ಕ್ರಿಯಾಚಾರ ಷಟ್ಸ್ಥಲಮಾರ್ಗವ ಚೆನ್ನಬಸವಣ್ಣನ ಮುಖವಚನದಿಂದೆ ಸಿದ್ಧರಾಮದೇಶಿಕೇಂದ್ರನಿಗೆ ಬೋದ್ಥಿಸಿದ ನಿಲುಕಡೆಯ ಸೂತ್ರವದೆಂತೆಂದಡೆ : ಅಯ್ಯ, ಮೂವತ್ತಾರು ತತ್ವಂಗಳಲ್ಲಿ ಸಂಬಂಧವಾದ ಅಷ್ಟಾವರಣಂಗಳ ಕೂಡಿ ನಾಲ್ವತ್ತುನಾಲ್ಕು ಚಿದಂಗತತ್ವಂಗಳೆಂದೆನಿಸಿ, ಅಯ್ಯ, ಇಷ್ಟಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಪ್ರಾಣಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಭಾವಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು ಕೂಡಲಾಗಿ ಐವತ್ತೇಳು ಮಹಾಪ್ರಣಮಂಗಳೆ ಚಿದ್ಛನಲಿಂಗಸ್ಥಲಂಗಳಾಗಿ ಶೋಬ್ಥಿಸುವಂಥ ಚಿದಂಗ-ಚಿದ್ಘನಲಿಂಗವ ಉಭಯಭಾವವಳಿದು ನೂರೊಂದುಸ್ಥಲವ ಸಂಬಂಧವಮಾಡಿ, ಮಾರ್ಗಾಚರಣೆಯ ಕುರುಹ ತೋರಿ, ಅಂತರಂಗದಲ್ಲಿ ಶೋಬ್ಥಿಸುವ ಲೋಮವಿಲೋಮದಳಂಗಳೆ ನೂರೆಂಟು ತೆರದ ಚಿದಂಗಂಗಳಾಗಿ, ಆ ದಳಂಗಳಲ್ಲಿ ಝಗಝಗಾಯಮಾನವಾಗಿ ಪ್ರಕಾಶಿಸುವ ಪ್ರಣಮಂಗಳೆ ನೂರೆಂಟು ತೆರದ ಚಿದ್ಘನಲಿಂಗಂಗಳಾಗಿ, ಒಳಗು-ಹೊರಗು ಎಂಬ ಉಭಯ ನಾಮ ರೂಪು ಕ್ರಿಯವನಳಿದು ಇನ್ನೂರ ಹದಿನಾರು ಸ್ಥಲವ ಸಂಬಂಧವ ಮಾಡಿ ಮೀರಿದ ಕ್ರಿಯಾಚರಣೆಯ ಕುರುಹ ತೋರಿ ಅನಾದ್ಥಿಗುರು ಬಸವರಾಜೇಂದ್ರನ ಪ್ರಸಿದ್ಧಪ್ರಸಾದನೆ ಮಾರ್ಗಕ್ರಿಯಾರೂಪವಾದ ನೂರೊಂದು ಸ್ಥಲಂಗಳಾಗಿ, ಅನಾದಿಜಂಗಮ ಪ್ರಭುರಾಜೇಂದ್ರನ ಶುದ್ಧಪ್ರಸಾದವೆ ಮೀರಿದ ಕ್ರಿಯಾರೂಪವಾದ ಇನ್ನೂರ ಹದಿನಾರುಸ್ಥಲಂಗಳಾಗಿ, ಇವರಿಬ್ಬರ ಮಹಾಪ್ರಸಾದವೆ ಘಟ್ಟಿಗೊಂಡು ಅನಾದಿಶರಣರೂಪವ ತಾಳಿ ಚೆನ್ನಬಸವಣ್ಣನೆಂಬಬ್ಥಿಧಾನದಿಂದ ಮಾರ್ಗಕ್ರಿಯಾಸ್ವರೂಪ ನೂರೊಂದುಸ್ಥಲವೆ ಆಚರಣೆಯಾಗಿ ಮೀರಿದ ಕ್ರಿಯಾಸ್ವರೂಪ ಇನ್ನೂರ ಹದಿನಾರುಸ್ಥಲವೆ ಸಂಬಂಧವಾಗಿ ಅನಾದಿಪರಶಿವರೂಪ ಶಿವಯೋಗಿಸಿದ್ಧರಾಮನ ಕರ-ಮನ-ಭಾವಂಗಳಲ್ಲಿ ಮಿಶ್ರಾಮಿಶ್ರಂಗಳೊಡನೆ ಅಗಣಿತ ಸೂರ್ಯಚಂದ್ರಾಗ್ನಿ ಪ್ರಕಾಶಕ್ಕೆ ಮಿಗಿಲಾಗಿ ತ್ಯಾಗ-ಭೋಗ-ಯೋಗಾನುಸಂಧಾನದಿಂದ ಸಿದ್ಧರಾಮನ ಕರಸ್ಥಲದಲ್ಲಿ ಶುದ್ಧಪ್ರಸಾದ-ಇಷ್ಟಲಿಂಗವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಮನಸ್ಥಲದಲ್ಲಿ ಸಿದ್ಧಪ್ರಸಾದ-ಪ್ರಾಣಲಿಂಗವಾಗಿ ಮಂತ್ರ-ಧ್ಯಾನ-ಜಪ-ಸ್ತೋತ್ರಂಗಳ ಕೈಕೊಂಡು ಒಪ್ಪುತ್ತಿರ್ಪರು ನೋಡ. ಭಾವಸ್ಥಲದಲ್ಲಿ ಪ್ರಸಿದ್ಧಪ್ರಸಾದ-ಭಾವಲಿಂಗವಾಗಿ ಮನೋರ್ಲಯ ನಿರಂಜನ ಪೂಜಾಕ್ರಿಯಾನಂದ ಕೂಟವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಇಂತು ಸಂಬಂಧಾಚರಣೆಯ ಸ್ಥಲಕುಳಂಗಳ ಚಿದ್ಬೆಳಗಿನಲ್ಲಿ ಶೋಬ್ಥಿಸುವ ಬಸವಣ್ಣ, ಚೆನ್ನಬಸವಣ್ಣ, ಪ್ರಭು, ಸಿದ್ಧರಾಮ ಪ್ರಮಥಗಣಂಗಳ ಮಹಾಪ್ರಸಾದ ಬೆಳಗಿಗೆ ಯೋಗ್ಯರಾಗಿ ದಗ್ಧಪಟನ್ಯಾಯ, ಉರಿವುಂಡ ಕರ್ಪೂರದಂತಾದೆವು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯಾ, ಏನೂ ಇಲ್ಲದ ಬಯಲ ದೇಹಕ್ಕೆ ತಾಮಸವ ಮುಂದುಮಾಡಿ, ಹೀಗೆ ಕೆಟ್ಟಿತ್ತಲ್ಲಾ ಜಗವೆಲ್ಲ. ಅದೇನು ಕಾರಣವೆಂದಡೆ, ಸುಖದ ಮುಖ ಕಂಡಿತ್ತು; ಜಗದ ರಚನೆಯ ನೋಡಿತ್ತು; ಇಚ್ಫೆಯ ಮೆಚ್ಚಿತ್ತು; ಮನವ ನಿಶ್ಚಯವ ಮಾಡದು; ಅಂಗಸುಖವ ಬಯಸಿತ್ತು; ಕಂಗಳ ಕಾಮವನೆ ಮುಂದುಮಾಡಿತ್ತು ಇದರಿಂದ ಲಿಂಗವ ಮರೆಯಿತ್ತು; ಜಂಗಮವ ತೊರೆಯಿತ್ತು. ಇದು ಕಾರಣದಿಂದ ಜಗದ ಮನುಜರು ಭವಬಂಧನಕ್ಕೊಳಗಾದರು. ಇವೆಲ್ಲವನು ಹಿಂಗಿಸಿ, ನಮ್ಮ ಶಿವಶರಣರು ಲಿಂಗದಲ್ಲಿಯೆ ಬೆರೆದರು. ಜಂಗಮಪ್ರಾಣವೆಂದು ಪಾದೋದಕ ಪ್ರಸಾದವ ಕೊಂಡು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಜನ್ಮಕ್ಕೊಮ್ಮೆ ಬಂದು `ಶಿವಾಯ ನಮಃ' ಎಂದಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು `ಹರಾಯ ನಮಃ' ಎಂದಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು ಬಸವನ ಪ್ರಸಾದವ ತೆಗೆದುಕೊಂಡಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು ಚೆನ್ನಬಸವಣ್ಣನ ಪಾದೋದಕ[ವ] ತೆಗೆದುಕೊಂಡಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು ಪ್ರಭುವಿನ ಪಾದಕ್ಕೆ ವಂದಿಸಿದಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು ಮಡಿವಾಳಣ್ಣನ ಅನುಭವದಲ್ಲಿದ್ದಡೆ ಸಾಲದೆ? ಜನ್ಮಕ್ಕೊಮ್ಮೆ ಬಂದು ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿದಡೆ ಸಾಲದೇನೋ ಕಲ್ಲಯ್ಯಾ
--------------
ಸಿದ್ಧರಾಮೇಶ್ವರ
ಹೃದಯಕಮಲದ ಅಷ್ಟದಳದ ದ್ವಾತ್ರಿಂಶತ್‍ಕುಸುಮ ಮಧ್ಯದಲ್ಲಿಪ್ಪನಾ ಸೂರ್ಯ. ಆ ಸೂರ್ಯನ ಮಧ್ಯದಲ್ಲಿಪ್ಪನಾ ಚಂದ್ರ ಆ ಚಂದ್ರನ ಮಧ್ಯದಲ್ಲಿಪ್ಪನಾ ಅಗ್ನಿ ಆ ಅಗ್ನಿಯ ಮಧ್ಯದಲ್ಲಿಪ್ಪುದಾ ಕಾಂ್ಕ. ಆ ಕಾಂ್ಕಯ ಮಧ್ಯದಲ್ಲಿಪ್ಪುದಾ ಸುಜ್ಞಾನ. ಆ ಸುಜ್ಞಾನದ ಮಧ್ಯದಲ್ಲಿಪ್ಪುದಾ ಚಿದಾತ್ಮ. ಆ ಚಿದಾತ್ಮನ ಮಧ್ಯದಲ್ಲಿಪ್ಪನಾ ಚಿತ್ಪ್ರಕಾಶರೂಪನಪ್ಪ ಪರಶಿವನು. ಇಂತಪ್ಪ ಪರಶಿವನ- ಎನ್ನ ಸುಜ್ಞಾನಕಾಯದ ಮಸ್ತಕದ ಮೇಲೆ ಹಸ್ತವನಿರಿಸಿ, ಮನ ಭಾವ ಕರಣೇಂದ್ರಿಯಂಗಳಂ ಸ್ವರೂಪೀಕರಿಸಿ, ದೃಷ್ಟಿಗೆ ತೋರಿ, ಕೈಯಲ್ಲಿ ಲಿಂಗವ ಕೊಟ್ಟ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನಯ್ಯಾ ಪ್ರಭುವೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಎನ್ನ ಭವದ ಬಳ್ಳಿಯ ಬೇರು ಹರಿಯಿತ್ತಯ್ಯಾ ಸಂಗನಬಸವಣ್ಣನ ಒಕ್ಕುದ ಕೊಂಡೆನಾಗಿ. ಎನ್ನ ಮನದ ಕಪಟ ಹಿಂಗಿತ್ತಯ್ಯಾ ಚೆನ್ನಬಸವಣ್ಣನ ಕರುಣವ ಪಡೆದೆನಾಗಿ. ಎನ್ನಂತರಂಗದ ಸಂದುಸಂಶಯ ತೊಲಗಿತ್ತಿಂದು ಬಸವಣ್ಣಪ್ರಿಯ ಚೆನ್ನಸಂಗಯ್ಯನಲ್ಲಿ ಎನ್ನ ಪರಮಗುರು ಅಲ್ಲಮಪ್ರಭುದೇವರ ಶ್ರೀ ಚರಣವ ಕಂಡೆನಾಗಿ.
--------------
ನಾಗಲಾಂಬಿಕೆ
ಅರ್ತಿಯಲ್ಲಿ ಮುತ್ತೈದೆ ಆರತಿವಿಡಿದು ಬಂದು ನಿಂದೈದಾಳೆಯಯ್ಯಾ ನಿಮ್ಮ ಮುಂದೆ. ನಿಜಶುದ್ಧ ಸಾರಸನ್ಮತವಾದ ಮುಖವಂತೆ, ಕಪಿಲಸಿದ್ಧಮ್ಲನಾಥಯ್ಯಾ, ನಿಮ್ಮ ಮುಖವಂತೆ ನಿಯತವ ಕಂಡಳು ಚೆನ್ನಬಸವಣ್ಣನ ಧರ್ಮದಿಂದೆ.
--------------
ಸಿದ್ಧರಾಮೇಶ್ವರ
ಇನ್ನು ಜನಕವು ಇಲ್ಲ ಮುನ್ನವೆ ಸಂದಳಿದೆ ಕಳುಹಿದಂತೆ ಉನ್ನತೋನ್ನತನಾದೆ ಚೆನ್ನಬಸವಣ್ಣನ ಕರುಣದಿಂದೆ ನಿನ್ನ ರೂಪಾದೆ ಇನ್ನೆನಗೆ ಅರಿವುವುಂಟೆ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->